Thursday, February 25, 2021

ಮಹಿಳೆಯರಿಗೆ ಮಾನಸಿಕ ಆರೋಗ್ಯ ಸಹ ಬಹಳ ಮುಖ್ಯ : ಡಾ. ಎಂ.ವಿ ಅಶೋಕ್

ಭದ್ರಾವತಿ ಜನ್ನಾಪುರ ಎನ್‌ಟಿಬಿ ಕಛೇರಿ ರಸ್ತೆಯಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ವತಿಯಿಂದ ನೆಹರೂ ಯುವಕ ಕೇಂದ್ರದ ಪ್ರತಿನಿಧಿಗಳಿಗೆ ಆರೋಗ್ಯ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
    ಭದ್ರಾವತಿ, ಫೆ. ೨೫: ಮಹಿಳೆಯರಿಗೆ ಕೇವಲ ದೈಹಿಕ ಆರೋಗ್ಯ ಮಾತ್ರವಲ್ಲದೆ ಮಾನಸಿಕ ಆರೋಗ್ಯ ಸಹ ಬಹಳ ಮುಖ್ಯ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ತಿಳಿಸಿದರು.
ಅವರು ಗುರುವಾರ ಜನ್ನಾಪುರ ಎನ್‌ಟಿಬಿ ಕಛೇರಿ ರಸ್ತೆಯಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ವತಿಯಿಂದ ನೆಹರೂ ಯುವಕ ಕೇಂದ್ರದ ಪ್ರತಿನಿಧಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಆರೋಗ್ಯ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ಮಹಿಳೆಯರು ಕುಟುಂಬದ ಆಧಾರಸ್ತಂಭಗಳಾಗಿದ್ದು, ವೈಯಕ್ತಿಕ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಹೆಚ್ಚಿನ ಮಹಿಳೆಯರು ಮಾನಸಿಕ ಒತ್ತಡಕ್ಕೆ ಒಳಗಾಗಿ ಹಲವಾರು ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಗಮನ ಹರಿಸುವುದು ಅಗತ್ಯವಾಗಿದೆ ಎಂದರು.
   ಶಿವಮೊಗ್ಗ ನೆಹರೂ ಯುವ ಕೇಂದ್ರದ ಜಲ್ಲಾ ಯುವ ಅಧಿಕಾರಿ ಉಲ್ಲಾಸ್ ಮಾತನಾಡಿ, ಯುವ ಸಮುದಾಯಗಳ ಎಲ್ಲಾ ಚಟುವಟಿಕೆಗಳಿಗೆ ಯುವ ಕೇಂದ್ರ ಪೂರಕವಾಗಿ ಸ್ಪಂದಿಸಲಿದೆ. ಎಲ್ಲಾ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳುವ ಜೊತೆಗೆ ಸಮುದಾಯದ ಸಂಘಟನೆಯಲ್ಲಿ ಪಾಲ್ಗೊಳ್ಳುವಿಕೆ ಹೆಚ್ಚಿಸಬೇಕೆಂದು ಕರೆ ನೀಡಿದರು.
    ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ರಾಜೇಗೌಡ, ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಹಿರಿಯ ಮಹಿಳಾ ಆರೋಗ್ಯ ಸಹಾಯಕಿ ರೇವತಿ, ಆಶಾ ಮೇಲ್ವಿಚಾರಕಿ ವಸಂತ ಸೇರಿದಂತೆ ಇನ್ನಿತರರು ಮಹಿಳೆಯರ ಆರೋಗ್ಯ ಕಾಳಜಿ ಕುರಿತು ಮಾಹಿತಿ ನೀಡಿದರು.
ಸ್ನೇಹ ಮಿಲನ ಮಹಿಳಾ ತಂಡದ ಅಧ್ಯಕ್ಷೆ ಕವಿತಾ ಸುರೇಶ್, ಪಿರಾಮಿಡ್ ಧ್ಯಾನಮಾಸ್ಟರ್ ಶುಭಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
     ಡಾ. ಬಿ.ಆರ್ ಅಂಬೇಡ್ಕರ್ ಜಾನಪದ ಕಲಾ ಸಂಘದ ಅಧ್ಯಕ್ಷ ತಮಟೆ ಜಗದೀಶ್ ಕಾರ್ಯಕ್ರಮ ನಿರ್ವಹಿಸಿದರು. ಯೋಗ ಶಿಕ್ಷಕಿ ಭಾರತಿ ಜಯರಾಮ್ ನಿರೂಪಿಸಿದರು. ಜನಪದ ಕಲಾವಿದ ದಿವಾಕರ್, ರಂಗಭೂಮಿ ಕಲಾವಿದ ಜಿ. ರವಿಕುಮಾರ್ ತಂಡದಿಂದ ಜಾನಪದ ಗೀತೆ ಗಾಯನ ನಡೆಯಿತು.
    ಹಿರಿಯ ಆರೋಗ್ಯ ಸಹಾಯಕ ಆನಂದಮೂರ್ತಿ, ವಿಪುಲರಾವ್, ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ ಬಸವರಾಜ ಜಿ. ಆನೆಕೊಪ್ಪ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. ಬಾಂಧ್ಯವ ಸ್ವಸಹಾಯ ಸಂಘದ ಧನಲಕ್ಷ್ಮಿ ಹಾಗು ನೆಹರೂ ಯುವ ಕೇಂದ್ರದ ಪ್ರತಿನಿಧಿಗಳು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಚಿಕ್ಕಬಳ್ಳಾಪುರ ಕಲ್ಲು ಗಣಿಗಾರಿಕೆ ಸ್ಪೋಟ ಪ್ರಕರಣ : ಜಯ ಕರ್ನಾಟಕ ಜನಪರ ವೇದಿಕೆ ಖಂಡನೆ

ಸ್ಪೋಟದಲ್ಲಿ ಮೃತಪಟ್ಟ ಬಡ ಕಾರ್ಮಿಕರ ಕುಟುಂಬಗಳಿಗೆ ತಲಾ ೨೦ ಲಕ್ಷ ರು. ಪರಿಹಾರ ನೀಡಿ

ಜಯ ಕರ್ನಾಟಕ ಜನಪರ ವೇದಿಕೆವತಿಯಿಂದ ಭದ್ರಾವತಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಕಲ್ಲು ಗಣಿಗಾರಿಕೆಯೊಂದರಲ್ಲಿ ನಡೆದಿರುವ ಸ್ಪೋಟ ಪ್ರಕರಣವನ್ನು ಖಂಡಿಸುವ ಜೊತೆಗೆ ಮೃತಪಟ್ಟಿರುವ ಬಡ ಕುಟುಂಬಗಳಿಗೆ ತಲಾ ೨೦ ಲಕ್ಷ ರು. ಪರಿಹಾರ ನೀಡುವಂತೆ ಆಗ್ರಹಿಸಿ ಗುರುವಾರ ಮುಖ್ಯಮಂತ್ರಿಗಳಿಗೆ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ಮೂಲಕ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ಫೆ. ೨೫: ಜಯ ಕರ್ನಾಟಕ ಜನಪರ ವೇದಿಕೆವತಿಯಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಕಲ್ಲು ಗಣಿಗಾರಿಕೆಯೊಂದರಲ್ಲಿ ನಡೆದಿರುವ ಸ್ಪೋಟ ಪ್ರಕರಣವನ್ನು ಖಂಡಿಸುವ ಜೊತೆಗೆ ಮೃತಪಟ್ಟಿರುವ ಬಡ ಕುಟುಂಬಗಳಿಗೆ ತಲಾ ೨೦ ಲಕ್ಷ ರು. ಪರಿಹಾರ ನೀಡುವಂತೆ ಆಗ್ರಹಿಸಿ ಗುರುವಾರ ಮುಖ್ಯಮಂತ್ರಿಗಳಿಗೆ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ಮೂಲಕ ಮನವಿ ಸಲ್ಲಿಸಲಾಯಿತು.  
    ಸಂಘಟನೆಯ ಪ್ರಮುಖರು ಮಾತನಾಡಿ, ಇತ್ತೀಚೆಗೆ ಶಿವಮೊಗ್ಗ ಜಿಲ್ಲೆ ಹುಣಸೋಡು ಬಳಿ ಕಲ್ಲು ಗಣಿಗಾರಿಕೆಯಲ್ಲಿ ಜಿಲೆಟಿನ್ ತುಂಬಿದ್ದ ಲಾರಿ ಸ್ಪೋಟಗೊಂಡ ಪರಿಣಾಮ ಒಟ್ಟು ೮ ಜನ ಮೃತಪಟ್ಟರು. ಆದರೂ ಸಹ ಸರ್ಕಾರ ಇನ್ನೂ ಎಚ್ಚೆತ್ತುಕೊಂಡಿಲ್ಲ. ಅಕ್ರಮ ಗಣಿಗಾರಿಕೆಯೇ ಸ್ಪೋಟಕ್ಕೆ ಮುಖ್ಯ ಕಾರಣವಾಗಿದ್ದು, ಅಕ್ರಮ ಗಣಿಗಾರಿಕೆ ತಡೆಯುವಲ್ಲಿ ಸರ್ಕಾರ ಹಾಗು ಅಧಿಕಾರಿಗಳು ವಿಫಲರಾಗಿದ್ದಾರೆಂದು ಆರೋಪಿಸಿದರು.
   ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಗೆ ಬಡ ಕೂಲಿ ಕಾರ್ಮಿಕರು ಬಲಿಯಾಗುತ್ತಿದ್ದು,  ಸ್ಪೋಟ ಪ್ರಕರಣದಲ್ಲಿ ಮೃತಪಟ್ಟಿರುವ ಕುಟುಂಬಗಳಿಗೆ ಸರ್ಕಾರ ಕೇವಲ ತಲಾ ರು. ೫ ಲಕ್ಷ ಪರಿಹಾರ ನೀಡುತ್ತಿರುವುದು ಸರಿಯಲ್ಲ. Pರು. ೫ ಲಕ್ಷ ಪರಿಹಾರದಿಂದ ಬಡಕುಟುಂಬಗಳು ನೆಮ್ಮದಿ ಕಾಣಲು ಸಾಧ್ಯವಿಲ್ಲ. ಈ ಹಿನ್ನಲೆಯಲ್ಲಿ ತಲಾ ೨೦ ಲಕ್ಷ ಪರಿಹಾರ ನೀಡುವಂತೆ ಹಾಗು ಶಿವಮೊಗ್ಗ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ನಡೆದಿರುವ ಸ್ಪೋಟ ಪ್ರಕರಣಗಳನ್ನು ಉನ್ನತಮಟ್ಟದ ತನಿಖೆಗೆ ಒಳಪಡಿಸಿ ಅಕ್ರಮ ಗಣಿಗಾರಿಕೆ ತಡೆಯುವಲ್ಲಿ ವಿಫಲರಾಗಿರುವ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಯಿತು.
   ವೇದಿಕೆ ತಾಲೂಕು ಅಧ್ಯಕ್ಷ ಎಸ್.ಎಸ್ ಭೈರಪ್ಪ ನೇತೃತ್ವ ವಹಿಸಿದ್ದರು. ಜಿಲ್ಲಾ ಕಾರ್ಯಾಧ್ಯಕ್ಷ ಕೆ. ಸುದೀಪ್ ಕುಮಾರ್, ಜಿಲ್ಲಾ ಕಾರ್ಯದರ್ಶಿ ಜಾರ್ಜ್, ತಾಲೂಕು ಪ್ರಧಾನ ಕಾರ್ಯದರ್ಶಿ ಡಿ. ನರಸಿಂಹಮೂರ್ತಿ, ಮಹಿಳಾ ಘಟಕದ ಅಧ್ಯಕ್ಷೆ ರೂಪ, ಪ್ರಮುಖರಾದ ಪ್ರಾನ್ಸಿಸ್, ಎಚ್.ಎಂ ಮಹಾದೇವಯ್ಯ, ಮುಕುಂದಯ್ಯ, ಜೆಬಿಟಿ ಬಾಬು, ಮುಸ್ವೀರ್ ಬಾಷಾ, ಶೋಭಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Wednesday, February 24, 2021

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ : ಮನವಿ

ಪೆಟ್ರೋಲ್, ಡೀಸೆಲ್ ಹಾಗು ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಭದ್ರಾವತಿಯಲ್ಲಿ ಬುಧವಾರ ಭಾರತ ಕಮ್ಯುನಿಷ್ಟ್ ಪಕ್ಷ(ಮಾರ್ಕ್ಸ್‌ವಾದಿ) ಶಿವಮೊಗ್ಗ ಜಿಲ್ಲಾ ಸಮಿತಿ ವತಿಯಿಂದ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ಪ್ರಧಾನಮಂತ್ರಿಗಳಿಗೆ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ಫೆ. ೨೪: ಪೆಟ್ರೋಲ್, ಡೀಸೆಲ್ ಹಾಗು ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬುಧವಾರ ಭಾರತ ಕಮ್ಯುನಿಷ್ಟ್ ಪಕ್ಷ(ಮಾರ್ಕ್ಸ್‌ವಾದಿ) ಶಿವಮೊಗ್ಗ ಜಿಲ್ಲಾ ಸಮಿತಿ ವತಿಯಿಂದ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ಪ್ರಧಾನಮಂತ್ರಿಗಳಿಗೆ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.
    ಪೆಟ್ರೋಲ್, ಡೀಸೆಲ್ ಹಾಗು ಅಡುಗೆ ಅನಿಲ ಬೆಲೆ ಏರಿಕೆಯಿಂದಾಗಿ ಇತರೆ ಅಗತ್ಯ ವಸ್ತುಗಳ ಬೆಲೆ ಸಹ ಹೆಚ್ಚಳವಾಗಿದೆ. ಇದರಿಂದಾಗಿ ಬಡ, ಮಧ್ಯಮ ಶ್ರೀಸಾಮಾನ್ಯರ ಬದುಕು ಇನ್ನಷ್ಟು ಸಂಕಷ್ಟಕ್ಕೆ ತಳ್ಳಿದೆ ಎಂದು ಅಳಲು ವ್ಯಕ್ತಪಡಿಸಲಾಯಿತು.
   ೨೦೧೪ರಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಪೆಟ್ರೋಲ್ ದರ ರು.೭೨ ಅಸುಪಾಸಿನಲ್ಲಿದ್ದು, ಅಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಛಾತೈಲದ ಬೆಲೆ ಒಂದು ಬ್ಯಾರಲ್‌ಗೆ ೧೧೦ ಡಾಲರ್‌ಗಳ ಆಸುಪಾಸಿನಲ್ಲಿತ್ತು. ಪ್ರಸ್ತುತ ಕಚ್ಛಾತೈಲದ ಬೆಲೆ ೫೬ ಡಾಲರ್‌ಗಳಿಗೆ ಇಳಿದಿದೆ. ಶೇ.೫೦ರಷ್ಟು ಬೆಲೆ ಕಡಿಮೆಯಾಗಿದ್ದು, ಈ ಪ್ರಕಾರ ಪ್ರಸ್ತುತ ಪೆಟ್ರೋಲ್ ಬೆಲೆ ರು.೩೬ ಗಳಾಗಬೇಕಿತ್ತು. ಆದರೆ ಹೆಚ್ಚುವರಿಯಾಗಿ ಸುಮಾರು ರು.೫೪ ಪಡೆಯಲಾಗುತ್ತಿದೆ. ಇದರಿಂದಾಗಿ ರು.೧೦೦ರ ಗಡಿ ದಾಡುತ್ತಿರುವುದು ವಿಪರ್ಯಾಸದ ಸಂಗತಿಯಾಗಿದ್ದು, ಹೆಚ್ಚುವರಿಯಾಗಿ ಪಡೆಯುತ್ತಿರುವ ಹಣ ಎಲ್ಲಿಗೆ ಹೋಗುತ್ತಿದೆ ಎಂದು ಪ್ರಶ್ನಿಸಲಾಯಿತು.
   ಕೇಂದ್ರ ಸರ್ಕಾರ ಕಾರ್ಪೋರೇಟ್ ಕಂಪನಿಗಳು, ಶ್ರೀಮಂತರು ಹಾಗು ಬೆಂಬಲಿಗರ ಪರವಾಗಿದ್ದು, ಇದರಿಂದಾಗಿ ಬಡ, ಮಧ್ಯಮ ಶ್ರೀಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈಗಾಲೇ ಕೊರೋನಾ ಮಹಾಸೋಂಕು ಮತ್ತು ಆರ್ಥಿಕ ಹಿಂಜರಿತದಿಂದಾಗಿ ಬದುಕು ಮೂರಾಬಟ್ಟೆಯಾಗಿದೆ. ಈ ನಡುವೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ನರಕಯಾತನೆ ಅನುಭವಿಸುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಯಿತು.
    ಕೇಂದ್ರ ಸರ್ಕಾರ ತಕ್ಷಣ ಬಲೆ ಏರಿಕೆಗೆ ಕಡಿವಾಣ ಹಾಕಬೇಕು. ಬಡ, ಮಧ್ಯಮ ಶ್ರೀಸಾಮಾನ್ಯರ ಬದುಕಿನೊಂದಿಗೆ ಚೆಲ್ಲಾಟ ಆಡುವುದನ್ನು ಕೈಬಿಡಬೇಕೆಂದು ಆಗ್ರಹಿಸಲಾಯಿತು.
  ಪ್ರಧಾನ ಕಾರ್ಯದರ್ಶಿ ಎಂ. ನಾರಾಯಣ, ಹನುಮಮ್ಮ, ಕೆ. ಮಂಜಣ್ಣ, ಸೋಮಣ್ಣ, ಕೃಷ್ಣೋಜಿರಾವ್ ಸೇರಿದಂತೆ ಇನ್ನಿತರು ಪ್ರತಿಭಟನೆ ನೇತೃತ್ವ ವಹಿಸಿದ್ದರು. ಪಕ್ಷದ ಮಹಿಳಾ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

ಪುನಃ ಕಬಡ್ಡಿ ಕ್ರೀಡೆ ವೈಭವ ಮರಳಲಿ, ಯುವ ಕ್ರೀಡಾಪಟುಗಳು ಪ್ರಜ್ವಲಿಸಲಿ : ಬಿ.ಕೆ ಸಂಗಮೇಶ್ವರ್

ಫೆ.೨೭, ೨೮ ಎರಡು ದಿನಗಳ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ

ಭದ್ರಾವತಿ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿದರು.
   ಭದ್ರಾವತಿ, ಫೆ. ೨೪: ರಾಜ್ಯದಲ್ಲಿ ತನ್ನದೇ ಆದ ವೈಭವದ ಪರಂಪರೆಯನ್ನು ಹೊಂದಿರುವ ಕಬಡ್ಡಿ ಕ್ರೀಡೆಗೆ ಉಕ್ಕಿನ ನಗರವೂ ಸಹ ತವರೂರಾಗಿದ್ದು, ಪುನಃ ವೈಭವದ ಇತಿಹಾಸ ಮರಳಬೇಕು ಹಾಗು ಯುವ ಕ್ರೀಡಾಪಟುಗಳಿಗೆ ಪೋತ್ಸಾಹ ನೀಡಬೇಕೆಂಬ ಉದ್ದೇಶದೊಂದಿಗೆ ತಾಲೂಕು ಮಟ್ಟದ ಎರಡು ದಿನಗಳ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ಬಿ.ವೈ.ಕೆ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಆಯೋಜಿಸಲಾಗಿದೆ ಎಂದು ಕ್ಲಬ್ ಗೌರವಾಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ತಿಳಿಸಿದರು.
   ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹಿರಿಯರ ಮಾರ್ಗದರ್ಶನದಲ್ಲಿ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕಬಡ್ಡಿ ಕ್ರೀಡಾಪಟುಗಳು ಹಾಗು ತರಬೇತಿದಾರರ ಸಹಕಾರದೊಂದಿಗೆ ಹಳೇನಗರದ ಕನಕಮಂಟಪ ಮೈದಾನದಲ್ಲಿ ಫೆ.೨೭ ಮತ್ತು ೨೮ರಂದು ಎರಡು ದಿನಗಳ ತಾಲೂಕು ಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ನಡೆಯಲಿದೆ.
   ವಿಜೇತ ತಂಡಗಳಿಗೆ ಮೊದಲ ಬಹುಮಾನ ರು. ೨೫ ಸಾವಿರ, ಎರಡನೇ ಬಹುಮಾನ ರು. ೧೫ ಸಾವಿರ,  ಮೂರನೇ ಬಹುಮಾನ ರು. ೧೦ ಸಾವಿರ ಮತ್ತು ಉತ್ತಮ ದಾಳಿಗಾರ, ಹಿಡಿತಗಾರ ಹಾಗು ಆಲ್‌ರೌಂಡರ್ ಆಟಗಾರರಿಗೂ ಸೂಕ್ತ ಬಹುಮಾನಗಳನ್ನು ನೀಡಲಾಗುವುದು ಎಂದರು.
   ಹಿರಿಯ ಅಂತರಾಷ್ಟ್ರೀಯ ಕಬಡ್ಡಿ ಆಟಗಾರ, ಕ್ಲಬ್ ಅಧ್ಯಕ್ಷ ಎಚ್.ಎನ್ ಕೃಷ್ಣೇಗೌಡ ಮಾತನಾಡಿ, ಪ್ರಪಥಮ ಬಾರಿಗೆ ನಗರದಲ್ಲಿ ಮ್ಯಾಟ್ ಒಳಗೊಂಡ ಪ್ರೊ ಕಬಡ್ಡಿ ಪಂದ್ಯಾವಳಿ ನಡೆಯುತ್ತಿದೆ. ಪಂದ್ಯಾವಳಿ ೮ ಕಬಡ್ಡಿಗಳನ್ನು ಆಯ್ಕೆ ಮಾಡುವ ಜೊತೆಗೆ ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಷನ್ ಅನುಮೋದನೆ ಸಹ ಪಡೆಯಲಾಗಿದೆ. ಪ್ರತಿ ತಂಡದ ಖರೀದಿ ಸಹ ನಡೆದಿದ್ದು, ಮಾಲೀಕರ ನೇತೃತ್ವದಲ್ಲಿ ಆಟಗಾರರಿಗೆ ಪ್ರತಿದಿನ ತರಬೇತಿ ನೀಡಿ ಸಜ್ಜುಗೊಳಿಸಲಾಗಿದೆ ಎಂದರು.
    ಮಾಜಿ ನಗರಸಭಾ ಸದಸ್ಯ ಬಾಲಕೃಷ್ಣ-ತುಂಗಾ ಟ್ಯಾಕರ್‍ಸ್, ಮಾರುತಿ ಮೆಡಿಕಲ್ಸ್ ಆನಂದ್-ಮಾರುತಿ ಟೈಗರ್‍ಸ್, ಮಾಜಿ ನಗರಸಭಾ ಸದಸ್ಯ ಮಣಿ ಎಎನ್‌ಎಸ್-ಜೋಗ್ ಜಾಗ್ವರ್‍ಸ್, ನ್ಯಾಯವಾದಿ ಮಂಗೋಟೆ ರುದ್ರೇಶ್-ಭದ್ರಾ ಬುಲ್ಸ್, ಪೊಲೀಸ್ ಉಮೇಶ್-ಮಲೆನಾಡು ವಾರಿಯರ್‍ಸ್, ಲೆಕ್ಕ ಪರಿಶೋಧಕ ಜಿ. ಧರ್ಮಪ್ರಸಾದ್-ಸ್ಟೀಲ್‌ಟೌನ್, ತಾಲೂಕು ವಕೀಲರ ಸಂಘದ ಅಧ್ಯಕ್ಷ ವೆಂಕಟೇಶ್-ಎಂಪಿಎಂ ಬುಲ್ಡೇಜರ್‍ಸ್ ಮತ್ತು ಶ್ರೀ ಕಾಲಭೈರವೇಶ್ವರ ಚಾರಿಟಬಲ್ ಟ್ರಸ್-ನ್ಯೂಟೌನ್ ಅಟ್ಯಾಕರ್‍ಸ್ ತಂಡಗಳ ಮಾಲೀಕರಾಗಿದ್ದು, ಇವರೆಲ್ಲರ ಸಹಕಾರದಿಂದ ಪಂದ್ಯಾವಳಿ ಇನ್ನಷ್ಟು ಮೆರಗು ಪಡೆದುಕೊಂಡಿದೆ ಎಂದರು.
   ಕಬ್ಲ್ ಪ್ರಧಾನ ಕಾರ್ಯದರ್ಶಿ ಎಚ್.ಆರ್ ರಂಗನಾಥ್, ಕಾರ್ಯದರ್ಶಿ ಮಾರ್ಕಂಡಯ್ಯ, ಖಜಾಂಚಿ ಎಸ್. ವಿಶ್ವನಾಥ್, ಉಪಾಧ್ಯಕ್ಷರಾದ ಚನ್ನಪ್ಪ, ಸಂಚಾಲಕರಾದ ಎಸ್.ಎನ್ ಸಿದ್ದಯ್ಯ, ವೈ. ವಸಂತಕುಮಾರ್, ಜಯರಾಮ್, ಮಾರುತಿ ಮೆಡಿಕಲ್ ಆನಂದ್, ಬಾಲಕೃಷ್ಣ, ನಟರಾಜ್, ಯೋಗೀಶ್, ಧನುಷ್ ಬೋಸ್ಲೆ ಸೇರಿದಂತೆ ಇನ್ನಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.  

೨೮ನೇ ವರ್ಷದ ಜತ್ರಾ ವಾರ್ಷಿಕೋತ್ಸವ

ಭದ್ರಾವತಿ ಹೊಸಮನೆ ಮುಖ್ಯ ರಸ್ತೆ ಪಶು ಆಸ್ಪತ್ರೆ ಮುಂಭಾಗದಲ್ಲಿರುವ ಶ್ರೀ ಶನೈಶ್ವರ ದೇವಸ್ಥಾನದ ೨೮ನೇ ವರ್ಷದ ಜಾತ್ರಾ ವಾರ್ಷಿಕೋತ್ಸವ ಅಂಗವಾಗಿ ಸ್ವಾಮಿಗೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು.
    ಭದ್ರಾವತಿ, ಫೆ. ೨೪: ಹೊಸಮನೆ ಮುಖ್ಯ ರಸ್ತೆ ಪಶು ಆಸ್ಪತ್ರೆ ಮುಂಭಾಗದಲ್ಲಿರುವ ಶ್ರೀ ಶನೈಶ್ವರ ದೇವಸ್ಥಾನದ ೨೮ನೇ ವರ್ಷದ ಜಾತ್ರಾ ವಾರ್ಷಿಕೋತ್ಸವ ೩ ದಿನ ಕಾಲ ಅದ್ದೂರಿಯಾಗಿ ಜರುಗಿತು.
    ಬುಧವಾರ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ, ಸಾಮೂಹಿಕ ಸತ್ಯನಾರಾಯಣ ಸ್ವಾಮಿ ಪೂಜೆ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಮಧ್ಯಾಹ್ನ ಅನ್ನಸಂತರ್ಪಣೆ ನೆರವೇರಿತು.
ಅಣ್ಣಾನಗರ, ಭೋವಿಕಾಲೋನಿ, ಎನ್‌ಎಂಸಿ, ಹೊಸಮನೆ, ಭೂತನಗುಡಿ ಮತ್ತು ಹಳೇನಗರ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳ ಭಕ್ತಾಧಿಗಳು ಹಾಗು ದೇವಸ್ಥಾನ ದೇವಾ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
    ದೇವಸ್ಥಾನದ ಪ್ರಧಾನ ಅರ್ಚಕರಾದ ಸಂತೋಷ್ ಭಟ್ ಮತ್ತು ಶ್ರೀನಿವಾಸ್ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು.

ಪೊಗರು ಚಿತ್ರದಲ್ಲಿ ಬ್ರಾಹಣ ಸಮುದಾಯದ ಅವಹೇಳನ

ತಾಲೂಕು ಬ್ರಾಹ್ಮಣ ಸಭಾ ಖಂಡನೆ


ಎಂ.ಎಸ್ ಜನಾರ್ಧನ ಅಯ್ಯಂಗಾರ್
   ಭದ್ರಾವತಿ, ಫೆ. ೨೪: ಇತ್ತೀಚೆಗೆ ಬಿಡುಗಡೆಯಾದ ಪೊಗರು ಕನ್ನಡ ಚಲನಚಿತ್ರದಲ್ಲಿ ಬ್ರಾಹ್ಮಣ ಸಮುದಾಯವನ್ನು ಅತ್ಯಂತ ಅವಮಾನವೀಯವಾಗಿ ಚಿತ್ರಿಸಿ, ಬ್ರಾಹ್ಮಣ ಸಮಾಜಕ್ಕೆ ಹಾಗು ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ. ಇದನ್ನು ತಾಲೂಕು ಬ್ರಾಹ್ಮಣ ಸಭಾ ಖಂಡಿಸುತ್ತದೆ ಎಂದು ಸಭಾ ಅಧ್ಯಕ್ಷ ಎಂ.ಎಸ್ ಜನಾರ್ಧನ ಅಯ್ಯಂಗಾರ್ ತಿಳಿಸಿದ್ದಾರೆ.
   ಈ ಸಂಬಂಧ ಸಭಾ ಕಛೇರಿಯಲ್ಲಿ ಸಭೆ ನಡೆಸಲಾಗಿದ್ದು,  ಬ್ರಾಹ್ಮಣರು ಪ್ರತಿಭಟಿಸುವುದಿಲ್ಲ ಹಾಗು ಅವರಲ್ಲಿ ಐಕ್ಯತೆ ಇಲ್ಲ ಎಂಬ ಭಾವನೆಯಿಂದ ಪೊಗರು ಚಿತ್ರದಲ್ಲಿ ಅವಮಾನವೀಯವಾಗಿ ಚಿತ್ರಿಸಿ ಕ್ರೌರ ಮೆರೆಯಲಾಗಿದೆ. ಚಲನಚಿತ್ರಗಳು ಮನೋರಂಜನೆಯೊಂದಿಗೆ ಜನರಲ್ಲಿ ಸಾಮಾಜಿಕ ಹಾಗು ಧಾರ್ಮಿಕ ಅರಿವು ಮೂಡಿಸಬೇಕೇ ಹೊರತು ಧಾರ್ಮಿಕ ಮತ್ತು ಜಾತಿ ನಿಂದನೆ ಮಾಡುವುದು, ಅವಮಾನಿಸುವುದು ಸರಿಯಲ್ಲ. ಈ ಹಿನ್ನಲೆಯಲ್ಲಿ ತಕ್ಷಣ ಚಿತ್ರದ ನಿರ್ಮಾಪಕರು, ನಿರ್ದೇಶಕರು ಚಿತ್ರದಲ್ಲಿರುವ ಅವಮಾನವೀಯ ಭಾಗವನ್ನು ತೆಗೆದು ಹಾಕಬೇಕು. ಇದೆ ರೀತಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬ್ರಾಹ್ಮಣ ಅರ್ಚಕ ಸಮುದಾಯದವರನ್ನು ಅವಮಾನಿಸಿದ್ದು, ಈ ಹಿನ್ನಲೆಯಲ್ಲಿ ಅವರು ತಕ್ಷಣ ಬಹಿರಂಗವಾಗಿ ಸಮುದಾಯದ ಕ್ಷಮೆಯಾಚಿಸಬೇಕೆಂದು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
    ಸಭೆಯಲ್ಲಿ ಉಪಾಧ್ಯಕ್ಷ ರಮಾಕಾಂತ್, ಕಾರ್ಯದರ್ಶಿ ಜಿ. ರಮೇಶ್, ಖಜಾಂಚಿ ಮಂಜುನಾಥ್, ಇಂದ್ರಸೇನ್, ಪ್ರಭಾಕರ್ ಜೋಯ್ಸ್, ನರಸಿಂಹಸ್ವಾಮಿ, ನೀಲಕಂಠ ಜೋಯ್ಸ್, ರಾಜಶೇಖರ್, ಎನ್. ಕೃಷ್ಣಮೂರ್ತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರೆಂದು ಅಯ್ಯಂಗಾರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಫೆ.೨೫ರಂದು ‘ಸ್ವರ್ಣ ಬಿಂದು ಪ್ರಾಶನ’

   ಭದ್ರಾವತಿ, ಫೆ. ೨೪: ನಗರದ ತರೀಕೆರೆ ರಸ್ತೆಯಲ್ಲಿರುವ ಬಿ.ಜಿ.ಎಂ ಆಯುರ್ವೇದ ಮತ್ತು ಸಿದ್ದ ಚಿಕಿತ್ಸಾಲಯ ಹಾಗು ಶ್ರೀ ಶಿವಸುಬ್ರಮಣ್ಯ ಸ್ವಾಮಿ ಆಶ್ರಮದ ವತಿಯಿಂದ ಮಕ್ಕಳ ಆರೋಗ್ಯದ ಹಿತದೃಷ್ಟಿಯಲ್ಲಿ ಆರ್ಯುರ್ವೇದದ ಪ್ರತಿರಕ್ಷಣೆ ವಿಧಾನವಾದ 'ಸ್ವರ್ಣ ಬಿಂದು ಪ್ರಾಶನ' ಕಾರ್ಯಕ್ರಮ ಫೆ.೨೫ರಂದು ಹಮ್ಮಿಕೊಳ್ಳಲಾಗಿದೆ.
   ಬೆಳಿಗ್ಗೆ ೧೦ ಗಂಟೆಯಿಂದ ಮಧ್ಯಾಹ್ನ ೨ ಗಂಟೆವರೆಗೆ ಹಾಗು ಸಂಜೆ ೬ ಗಂಟೆಯಿಂದ ರಾತ್ರಿ ೮ ಗಂಟೆವರೆಗೆ ಕಾರ್ಯಕ್ರಮ ನಡೆಯಲಿದ್ದು, ೧೬ ವರ್ಷದೊಳಗಿನ ಎಲ್ಲಾ ಮಕ್ಕಳು ಪ್ರತಿ ತಿಂಗಳು ಸ್ವರ್ಣ ಬಿಂದು ಪ್ರಾಶನ ಹಾಕಿಸಿಕೊಳ್ಳುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುವ ಜೊತೆಗೆ ಉತ್ತಮವಾದ ದೈಹಿಕ ಹಾಗು ಮಾನಸಿಕ ಬೆಳವಣಿಗೆ ಸಾಧ್ಯವಾಗಲಿದೆ. ಈ ಹಿನ್ನಲೆಯಲ್ಲಿ ಇದರ ಸದುಪಯೋಗಪಡೆದುಕೊಳ್ಳುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಡಾ. ವಿಕ್ರಮ್ ಮೊ: ೯೭೪೧೭೩೫೩೫೯ಸಂಖ್ಯೆಗೆ ಕರೆ ಮಾಡಬಹುದಾಗಿದೆ.