Sunday, February 28, 2021

ಸರ್ಕಾರಿ ಶಾಲೆಗಳ ಆಧುನೀಕರಣ, ಗುಣಮಟ್ಟದ ಶಿಕ್ಷಣ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹ

ಜೆಡಿಯು ಯುವ ಘಟಕದ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್. ಗೌಡ ಏಕಾಂಕಿ ಹೋರಾಟ


ಸರ್ಕಾರಿ ಪ್ರಾಥಮಿಕ ಹಾಗು ಪ್ರೌಢ ಶಾಲೆಗಳನ್ನು ಆಧುನೀಕರಣಗೊಳಿಸಿ ಗುಣಮಟ್ಟದ ಶಿಕ್ಷಣ ನೀಡುವಂತೆ ಹಾಗು ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೋಮವಾರ ಸಂಯುಕ್ತ ಜನತಾದಳ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್. ಗೌಡ ಭದ್ರಾವತಿ ತಾಲೂಕು ಕಛೇರಿ ಮುಂಭಾಗ ಏಕಾಂಗಿ ಹೋರಾಟ ನಡೆಸಿದರು.
   ಭದ್ರಾವತಿ, ಮಾ. ೧: ಸರ್ಕಾರಿ ಪ್ರಾಥಮಿಕ ಹಾಗು ಪ್ರೌಢ ಶಾಲೆಗಳನ್ನು ಆಧುನೀಕರಣಗೊಳಿಸಿ ಗುಣಮಟ್ಟದ ಶಿಕ್ಷಣ ನೀಡುವಂತೆ ಹಾಗು ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೋಮವಾರ ಸಂಯುಕ್ತ ಜನತಾದಳ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್. ಗೌಡ ತಾಲೂಕು ಕಛೇರಿ ಮುಂಭಾಗ ಏಕಾಂಗಿ ಹೋರಾಟ ನಡೆಸಿದರು.
    ರಾಜ್ಯಾದ್ಯಂತ ಸುಮಾರು ೫೦ ವರ್ಷಗಳಿಗೂ ಹಳೇಯದಾದ ಸುಮಾರು ೧೪ ಸಾವಿರ ಶಾಲೆಗಳಿದ್ದು, ಈ ಶಾಲೆಗಳನ್ನು ಪುನರ್ ನಿರ್ಮಾಣ ಮಾಡುವುದು. ೨೨ ಸಾವಿರ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇದ್ದು, ತಕ್ಷಣ ಸೌಕರ್ಯಗಳನ್ನು ಕಲ್ಪಿಸಿಕೊಡುವುದು. ೮ ಸಾವಿರ ಶಾಲೆಗಳು ಮುಚ್ಚುವ ಹಂತದಲ್ಲಿದ್ದು, ಈ ಶಾಲೆಗಳನ್ನು ನವೀಕರಣಗೊಳಿಸಿ ಹಾಳಾಗದಂತೆ ನಿರ್ವಹಣೆ ಮಾಡುವುದು. ಪ್ರಾಥಮಿಕ ಹಂತದಿಂದಲೇ ಮಾತೃಭಾಷೆ ಜೊತೆಗೆ ಆಂಗ್ಲಭಾಷೆಯಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದು. ಎಲ್ಲಾ ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಟಿ.ವಿ ವಿತರಿಸುವುದು ಹಾಗು ಅವಶ್ಯಕತೆ ಇರುವ ಕಲಿಕಾ ಮಾಧ್ಯಮದ ಭಾಷೆಯಲ್ಲಿ ಪ್ರಾವಿಣ್ಯತೆ ಹೊಂದಿರುವ ಶಿಕ್ಷಕರನ್ನು ನೇಮಿಸಿಕೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಲಾಯಿತು.
   ಫಲಕಗಳನ್ನು ಹಿಡಿದು ಏಕಾಂಗಿ ಹೋರಾಟ ನಡೆಸಿದ ಶಶಿಕುಮಾರ್ ಎಸ್ ಗೌಡ ಕೊನೆಯಲ್ಲಿ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಜಗತ್ತಿಗೆ ಆನಂದ, ಆತ್ಮತೃಪ್ತಿ ಮಾರ್ಗ ತೋರಿಸಿಕೊಟ್ಟ ದೇಶ ಭಾರತ

'ಅನನ್ಯ' ಪ್ರಾಂತೀಯ ಸಮ್ಮೇಳನದಲ್ಲಿ ವಾಗ್ಮಿ ಚಕ್ರವರ್ತಿ ಸೂಲಿಬೆಲೆ


ಭದ್ರಾವತಿಯಲ್ಲಿ ಭಾನುವಾರ ಲಯನ್ಸ್ ಕ್ಲಬ್ ಶುಗರ್ ಟೌನ್ ತನ್ನ ೩೪ನೇ ವರ್ಷದ ಸವಿ ನೆನಪಿನಲ್ಲಿ ಹಮ್ಮಿಕೊಂಡಿದ್ದ 'ಅನನ್ಯ' ಪ್ರಾಂತೀಯ ಸಮ್ಮೇಳನದಲ್ಲಿ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಪಾಲ್ಗೊಂಡು ಮಾತನಾಡಿದರು.
   ಭದ್ರಾವತಿ, ಫೆ. ೨೮: ಜಗತ್ತಿಗೆ ಆನಂದ, ಆತ್ಮತೃಪ್ತಿ ಮಾರ್ಗ ತೋರಿಸಿಕೊಟ್ಟ ದೇಶ ಭಾರತ ಎಂಬುದನ್ನು ಎಲ್ಲರಿಗೂ ಅರಿತುಕೊಳ್ಳಬೇಕು ಎಂದು ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಹೇಳಿದರು.
    ಅವರು ಭಾನುವಾರ ನಗರದ ಲಯನ್ಸ್ ಕ್ಲಬ್ ಶುಗರ್ ಟೌನ್ ತನ್ನ ೩೪ನೇ ವರ್ಷದ ಸವಿ ನೆನಪಿನಲ್ಲಿ ಹಮ್ಮಿಕೊಂಡಿದ್ದ 'ಅನನ್ಯ' ಪ್ರಾಂತೀಯ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದರು.
ಪ್ರತಿಯೊಬ್ಬರು ತಮ್ಮ ಜೀವನದ ಗುರಿ ಯಾವುದು ಎಂಬುದನ್ನು ಗುರುತಿಸಿಕೊಳ್ಳಬೇಕು. ಬದುಕಿನ ವಿವಿಧ ಹಂತಗಳನ್ನು ಯಶಸ್ವಿಯಾಗಿ ತಲುಪುವುದೇ ಜೀವನದ ಮುಖ್ಯ ಗುರಿಯಲ್ಲ. ನಮಗೆ ಆನಂದ, ಆತ್ಮತೃಪ್ತಿ ಸಿಗುವ ಮಾರ್ಗದಲ್ಲಿ ಸಾಗುವುದೇ ಜೀವನದ ಗುರಿಯಾಗಬೇಕು. ಇದನ್ನು ಸ್ವಾಮಿ ವಿವೇಕಾನಂದರು ಇಡೀ ಜಗತ್ತಿಗೆ ತಿಳಿಸಿಕೊಟ್ಟಿದ್ದಾರೆ.
   ದೇವರು ನಮ್ಮಿಂದ ಯಾವುದನ್ನೂ ಸಹ ಅಪೇಕ್ಷಿಸದೆ ನಮಗೆ ಎಲ್ಲವನ್ನು ಕೊಟ್ಟಿದ್ದಾನೆ. ನಾವು ಆ ದೇವರು ಕೊಟ್ಟಿರುವುದರಲ್ಲಿ ಸ್ವಲ್ಪ ಭಾಗವನ್ನು ಮತ್ತೊಬ್ಬರಿಗೆ ನೀಡುವಲ್ಲಿ ಹಿಂದೆ ಮುಂದೆ ನೋಡುತ್ತಿದ್ದೇವೆ. ನಮ್ಮ ಪರಿಸರದಲ್ಲಿ ಅಕ್ಕಪಕ್ಕದಲ್ಲಿ ಬದುಕುತ್ತಿರುವವರ ಕಷ್ಟಸುಖಗಳಿಗೆ ಸ್ಪಂದಿಸುವ ಮನೋಭಾವನೆ ಬೆಳೆಸಿಕೊಳ್ಳಬೇಕು. ಹಣವಂತರು ಬಡವರಿಗೆ ನೆರವಾಗಬೇಕು. ಅಕ್ಷರಸ್ಥರು ಅನಕ್ಷರಸ್ಥರಿಗೆ ನೆರವಾಗಬೇಕು ಹೀಗೆ ಎಲ್ಲಾ ರೀತಿಯಿಂದಲೂ ನಮ್ಮನ್ನು ತೊಡಗಿಸಿಕೊಂಡು ಆ ಮೂಲಕ ಆನಂದ, ಆತ್ಮತೃಪ್ತಿ ಕಂಡುಕೊಳ್ಳಬೇಕು. ಭಾರತ ದೇಶ ಹಲವು ವೈವಿಧ್ಯತೆಗಳಿಂದಾಗಿ ಜಗತ್ತಿನಲ್ಲಿ ವಿಶಿಷ್ಟ ರಾಷ್ಟ್ರವಾಗಿ ಗುರುತಿಸಿಕೊಂಡಿದೆ. ಇಂತಹ ನೆಲದಲ್ಲಿ ನಮ್ಮ ಬದುಕು ಸಾರ್ಥಕಗೊಳ್ಳಬೇಕು. ಈ ನಿಟ್ಟಿನಲ್ಲಿ ಲಯನ್ಸ್ ಕ್ಲಬ್ ತನ್ನ ಸೇವಾ ಕಾರ್ಯವನ್ನು ಮುನ್ನಡೆಸುತ್ತಿರುವುದು ಶ್ಲಾಘನೀಯ ಎಂದರು.
    ಪ್ರಾಂತೀಯ ಅಧ್ಯಕ್ಷ ಕೆ. ಅನಂತಕೃಷ್ಣನಾಯಕ್ ಸಮ್ಮೇಳನ ಉದ್ಘಾಟಿಸಿದರು. ವಾಗ್ಮಿ ಪ್ರೊ. ಡಾ. ಕೆ.ಪಿ ಪುತ್ತುರಾಯ ಪಿಡಿಜಿ ದಿವಾಕರ್, ವಿಡಿಜಿ-೨ ಕೆ.ಸಿ ವೀರಭದ್ರಪ್ಪ, ಪಾಲಾಕ್ಷಪ್ಪ, ಜಿ.ಎಸ್ ಕುಮಾರ್, ಕ್ಲಬ್ ಅಧ್ಯಕ್ಷ ಬಿ. ನಿತ್ಯಾನಂದ ಪೈ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
   ಕಾನ್ಫರೆನ್ಸ್ ಕಮಿಟಿ ಛೇರ್‌ಮನ್ ಡಾ. ಟಿ. ನರೇಂದ್ರಭಟ್ ಸ್ವಾಗತಿಸಿದರು. ಶುಗರ್ ಟೌನ್, ಸರ್ವೋದಯ ನಗರ, ಯಡೇಹಳ್ಳಿ, ಹೊಳೆಹೊನ್ನೂರು ಮತ್ತು ಸನ್ಯಾಸಿ ಕೋಡಮಗ್ಗೆ ಪ್ರಾಂತೀಯ ವಲಯ-೧ರ ಕ್ಲಬ್‌ಗಳ ಹಾಗು ಶಿವಮೊಗ್ಗ, ಶಿವಮೊಗ್ಗ ಕಾಸ್ಮೊಪೊಲಿಟ್ಯಾನ್, ಬಿ.ಆರ್ ಪ್ರಾಜೆಕ್ಟ್, ತೀರ್ಥಹಳ್ಳಿ, ಭದ್ರಾವತಿ, ಶಿವಮೊಗ್ಗ ಸಹ್ಯಾದ್ರಿ, ಹೊಸನಗರ ಕೊಡಚಾದ್ರಿ ಮತ್ತು ಶಿವಮೊಗ್ಗ ಶಾಂಭವಿ ಪ್ರಾಂತೀಯ ವಲಯ-೨ರ ಕ್ಲಬ್‌ಗಳ ಅಧ್ಯಕ್ಷರು, ಪದಾಧಿಕಾರಿಗಳು, ಪ್ರತಿನಿಧಿಗಳು ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು.

ಕೊರೋನಾ ೩ನೇ ಹಂತದ ಲಸಿಕೆ ಅಭಿಯಾನಕ್ಕೆ ತಾಲೂಕು ಆಸ್ಪತ್ರೆ ಸಿದ್ದತೆ

ಪ್ರತಿ ದಿನ ೨೦೦ ಮಂದಿಗೆ ಲಸಿಕೆ ಹಾಕುವ ಗುರಿ : ಡಾ. ಎಂ.ವಿ ಅಶೋಕ್

ಭದ್ರಾವತಿ, ಫೆ. ೨೮: ಕೊರೋನಾ ಲಸಿಕೆ ೩ನೇ ಹಂತದ ಅಭಿಯಾನಕ್ಕೆ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸಿದ್ದತೆಗಳನ್ನು ಕೈಗೊಂಡಿದ್ದು, ಪ್ರತಿ ದಿನ ೨೦೦ ಮಂದಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ತಿಳಿಸಿದರು.
    ಅವರು ಈ ಕುರಿತು ಪತ್ರಿಕೆಗೆ ಮಾಹಿತಿ ನೀಡಿ, ಒಟ್ಟು ೪ ವಿಭಾಗಗಳಲ್ಲಿ ಲಸಿಕೆ ಹಾಕಲಾಗುತ್ತಿದೆ. ಈ ಬಾರಿ ಮೊದಲ ವಿಭಾಗದಲ್ಲಿ ೪೯ ರಿಂದ ೫೯ ವರ್ಷದೊಳಗಿನ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಲಸಿಕೆ ಹಾಕಲಾಗುವುದು. ಲಸಿಕೆ ಹಾಕಿಸಿಕೊಳ್ಳುವವರು ಕಡ್ಡಾಯವಾಗಿ ವೈದ್ಯರಿಂದ ತಪಾಸಣೆ ದೃಢೀಕರಣ ಪತ್ರ ತರಬೇಕು. ಉಳಿದಂತೆ ೨ನೇ ವಿಭಾಗದಲ್ಲಿ ೬೦ ವರ್ಷ ಮೇಲ್ಪಟ್ಟವರಿಗೆ ಲಸಿಕೆ ಹಾಕಲಾಗುವುದು. ೩ನೇ ವಿಭಾಗದಲ್ಲಿ ಕಂದಾಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಈ ಹಿಂದೆ ಲಸಿಕೆ ಪಡೆಯದವರಿಗೆ ಹಾಗು ೪ನೇ ವಿಭಾಗದಲ್ಲಿ ಇನ್ನಿತರರಿಗೆ ಲಸಿಕೆ ಹಾಕಲು ಸಿದ್ದತೆ ನಡೆಸಲಾಗಿದೆ ಎಂದರು.
    ಲಸಿಕೆ ಹಾಕುವ ಕಾರ್ಯದಲ್ಲಿ ಓರ್ವ ವೈದ್ಯ, ಓರ್ವ ಲಸಿಕೆ ಹಾಕುವವರು, ಸಹಾಯಕರು, ಪರಿಶೀಲನೆ ನಡೆಸುವವರು ಸೇರಿದಂತೆ ಒಟ್ಟು ೧೦ ಮಂದಿ ಕರ್ತವ್ಯ ನಿರ್ವಹಿಸಲಿದ್ದಾರೆ. ತಾಲೂಕು ಆಸ್ಪತ್ರೆಯಲ್ಲಿ ಮಾತ್ರ ಲಸಿಕೆ ಹಾಕಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಲಸಿಕೆ ಹಾಕಲಾಗುವುದು. ಆದರೆ ಈ ಕುರಿತು ಸರ್ಕಾರದಿಂದ ಅಧಿಕೃತ ಆದೇಶ ಬಂದಿಲ್ಲ ಎಂದರು.

ರಾಮ್ ಸೇನಾ ಶ್ರೀ ಲಕ್ಷ್ಮೀನರಸಿಂಹ ಘಟಕ ಉದ್ಘಾಟನೆ

ಸಂಸ್ಥಾಪಕ ಅಧ್ಯಕ್ಷ ಪ್ರಸಾದ್ ಅತ್ತಾವರ್ ಉಪಸ್ಥಿತಿ

ರಾಮ್ ಸೇನಾ ಶ್ರೀ ಲಕ್ಷ್ಮೀನರಸಿಂಹ ಘಟಕದ ಉದ್ಘಾಟನೆ ಭಾನುವಾರ ನಗರದ ಬಿ.ಎಚ್ ರಸ್ತೆ ಕಡದಕಟ್ಟೆ ಐಟಿಐ ಸಮೀಪದ ವಿದ್ಯಾಧಿರಾಜ ಸಭಾಭವನದಲ್ಲಿ ನಡೆಯಿತು. ಈ ಸಂಬಂಧ ನಡೆದ ಸಾಮೂಹಿಕ ಸತ್ಯನಾರಾಯಣ ಪೂಜೆ ಕಾರ್ಯಕ್ರಮದಲ್ಲಿ ರಾಮ್ ಸೇನಾ ಕರ್ನಾಟಕ ಸಂಸ್ಥಾಪಕ ಅಧ್ಯಕ್ಷ ಪ್ರಸಾದ್ ಅತ್ತಾವರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಭದ್ರಾವತಿ, ಫೆ. ೨೮: ರಾಮ್ ಸೇನಾ ಶ್ರೀ ಲಕ್ಷ್ಮೀನರಸಿಂಹ ಘಟಕದ ಉದ್ಘಾಟನೆ ಭಾನುವಾರ ನಗರದ ಬಿ.ಎಚ್ ರಸ್ತೆ ಕಡದಕಟ್ಟೆ ಐಟಿಐ ಸಮೀಪದ ವಿದ್ಯಾಧಿರಾಜ ಸಭಾಭವನದಲ್ಲಿ ನಡೆಯಿತು.
      ಉದ್ಘಾಟನೆ ಅಂಗವಾಗಿ ಸಾಮೂಹಿಕ ಸತ್ಯನಾರಾಯಣ ಪೂಜೆ ನೆರವೇರಿಸಲಾಯಿತು. ಸುಮಾರು ೫೦ ದಂಪತಿಗಳು ಪೂಜಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಮಧ್ಯಾಹ್ನ ಪ್ರಸಾದ ವಿತರಣೆ ನಡೆಯಿತು.
ರಾಮ್ ಸೇನಾ ಕರ್ನಾಟಕ ಸಂಸ್ಥಾಪಕ ಅಧ್ಯಕ್ಷ ಪ್ರಸಾದ್ ಅತ್ತಾವರ್ ಶ್ರೀ ಲಕ್ಷ್ಮೀನರಸಿಂಹ ನೂತನ ಘಟಕ ಉದ್ಘಾಟಿಸಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗು ಕಾರ್ಯಕರ್ತರನ್ನು ಅಭಿನಂದಿಸುವ ಮೂಲಕ ಸಂಘಟನೆಯನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಹೋಗುವಂತೆ ಕರೆ ನೀಡಿದರು.  
    ವಿಶ್ವ ಹಿಂದೂ ಪರಿಷತ್ ದಕ್ಷಿಣ ಪ್ರಾಂತ ಉಪಾಧ್ಯಕ್ಷ ಹಾ.ರಾಮಪ್ಪ, ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್, ರಾಮ್‌ಸೇನಾ ರಾಜ್ಯ ಕಾರ್ಯದರ್ಶಿಗಳಾದ ಮಂಜುನಾಥ ಗುಲ್ಜಾರ್, ಸಂತೋಷ್‌ಶೆಟ್ಟಿ, ಜಿಲ್ಲಾಧ್ಯಕ್ಷ ಉಮೇಶ್‌ಗೌಡ, ಮುಖಂಡ ಬಾಬು ಶಶಿಕುಮಾರ್  ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
           ನೂತನ ಅಧ್ಯಕ್ಷರು ಪದಾಧಿಕಾರಿಗಳು:
  ಅಧ್ಯಕ್ಷರಾಗಿ ಅವಿನಾಶ್, ಉಪಾಧ್ಯಕ್ಷರಾಗಿ ಪ್ರವೀಣ್‌ಕುಮಾರ್, ರಮೇಶ್, ಪ್ರಧಾನ ಕಾರ್ಯದರ್ಶಿಗಳಾಗಿ ಪ್ರಕಾಶ್, ಕಾರ್ತಿಕ್, ಸೋಷಿಯಲ್ ಮೀಡಿಯಾ ಮೇಲ್ವಿಚಾರಕರಾಗಿ ಪವನ್, ವಿದ್ಯಾರ್ಥಿ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ್, ರೋಹಿತ್, ಕಾರ್ಯದರ್ಶಿಗಳಾಗಿ ಸುನಿಲ್, ಸಂಜಯ್, ಪ್ರಭಾಕರ್, ಆನಂದ್, ರಿತೀನ, ಅಭಿ, ಲೋಕೇಶ್ ಮತ್ತು ದರ್ಶನ್ ಪದಗ್ರಹಣ ಸ್ವೀಕರಿಸಿದರು.



Saturday, February 27, 2021

ಕ್ರಿಮಿನಲ್ ಪ್ರಕರಣಗಳಿಗೆ ಜಾಮೀನು ಕೊಡಿಸುತ್ತಿದ್ದ ದಲ್ಲಾಳಿಗೆ ಶಿಕ್ಷೆ

ದಲ್ಲಾಳಿ ಕುಮಾರ
    ಭದ್ರಾವತಿ, ಫೆ. ೨೭: ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಗಳ ಪರವಾಗಿ ನ್ಯಾಯಾಲಯಕ್ಕೆ ಜಾಮೀನುದಾರರನ್ನು ಒದಗಿಸಿಕೊಡುತ್ತಿದ್ದ ದಲ್ಲಾಳಿಯೋರ್ವನಿಗೆ ೫ ತಿಂಗಳು ಸಾದ ಶಿಕ್ಷೆ ವಿಧಿಸಿರುವ ಘಟನೆ ನಡೆದಿದೆ.
   ತಾಲೂಕಿನ ಅಂತರಗಂಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಂಚನಮರಡಿ ನಿವಾಸಿ ಕುಮಾರ ಎಂಬಾತ ಶಿಕ್ಷೆಗೆ ಒಳಗಾಗಿದ್ದಾನೆ. ಈತ ನ್ಯಾಯಾಲಯದ ಆವರಣದಲ್ಲಿ ಕ್ರಿಮಿನಲ್ ಪ್ರಕರಣಗಳ ಆರೋಪಿಗಳಿಗೆ ಜಾಮೀನು ಕೊಡಿಸುವುದನ್ನು ರೂಢಿಗತ ಮಾಡಿಕೊಂಡಿದ್ದು, ಈತನಿಗೆ ೪ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರನ್ಯಾಯಲಯದ ನ್ಯಾಯಾಧೀಶರಾದ ಹೇಮಾವತಿ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.

ತಾಲೂಕು ಮಟ್ಟದ ಎರಡು ದಿನಗಳ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಗೆ

ಮೊದಲ ಪಂದ್ಯ ಎಂಜೆಎ-ಮಾರುತಿ ಟೈಗರ್‍ಸ್ ತಂಡಗಳ ನಡುವೆ ಸೆಣಸಾಟ


ಬಿ.ವೈ.ಕೆ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಭದ್ರಾವತಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿರುವ ತಾಲೂಕು ಮಟ್ಟದ ಎರಡು ದಿನಗಳ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಗೆ ಶನಿವಾರ ಸಂಜೆ ಶಾಸಕ ಬಿ.ಕೆ ಸಂಗಮೇಶ್ವರ್ ಚಾಲನೆ ನೀಡಿದರು. ಮೊದಲ ಪಂದ್ಯ ಎಂಜೆಎ-ಮಾರುತಿ ಟೈಗರ್‍ಸ್ ತಂಡಗಳ ನಡುವೆ ಸೆಣಸಾಟ ನಡೆಯಿತು.
   ಭದ್ರಾವತಿ, ಫೆ. ೨೭: ಬಿ.ವೈ.ಕೆ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಹಳೇನಗರದ ಕನಕಮಂಟಪ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿರುವ ತಾಲೂಕು ಮಟ್ಟದ ಎರಡು ದಿನಗಳ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಗೆ ಶನಿವಾರ ಸಂಜೆ ಶಾಸಕ ಬಿ.ಕೆ ಸಂಗಮೇಶ್ವರ್ ಚಾಲನೆ ನೀಡಿದರು.
   ಪ್ರಪಥಮ ಬಾರಿಗೆ ನಗರದಲ್ಲಿ ನಡೆಯುತ್ತಿರುವ ಮ್ಯಾಟ್ ಒಳಗೊಂಡ ಪ್ರೊ ಕಬಡ್ಡಿ ಪಂದ್ಯಾವಳಿ ಇದಾಗಿದ್ದು, ಮೊದಲ ಪಂದ್ಯ ಮಾರುತಿ ಟೈಗರ್‍ಸ್ ಮತ್ತು ಎಂಜೆಎ ತಂಡಗಳ ನಡುವೆ ಸೆಣಸಾಟ ನಡೆಯಿತು. ಪಂದ್ಯಾವಳಿ ಒಟ್ಟು ೮ ತಂಡಗಳು ಸೆಣಸಾಟ ನಡೆಸಲಿವೆ. ನಗರದ ವಿವಿಧ ಭಾಗಗಳಿಂದ ಪಂದ್ಯಾವಳಿ ವೀಕ್ಷಣೆಗೆ ಕಬಡ್ಡಿ ಅಭಿಮಾನಿಗಳು, ಕ್ರೀಡಾಪಟುಗಳು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ವೀಕ್ಷಣೆಗೆ ಬೃಹತ್ ಎಲ್‌ಸಿಡಿ ವ್ಯವಸ್ಥೆ ಸಹ ಕಲ್ಪಿಸಲಾಗಿದೆ.
   ಉದ್ಘಾಟನಾ ಸಭಾರಂಭದಲ್ಲಿ ವಿವಿಧ ಕಬಡ್ಡಿ ತಂಡಗಳ ಮಾಲೀಕರಾದ ಮಾರುತಿ ಮೆಡಿಕಲ್ ಆನಂದ್, ಬಾಲಕೃಷ್ಣ, ಪೊಲೀಸ್ ಉಮೇಶ್, ಮಂಗೋಟೆ ರುದ್ರೇಶ್, ಮಣಿ ಎಎನ್‌ಎಸ್ ಹಾಗು ಹಿರಿಯ ಅಂತರಾಷ್ಟ್ರೀಯ ಕಬಡ್ಡಿ ಆಟಗಾರ, ಕ್ಲಬ್ ಅಧ್ಯಕ್ಷ ಎಚ್.ಎನ್ ಕೃಷ್ಣೇಗೌಡ, ಕಬ್ಲ್ ಪ್ರಧಾನ ಕಾರ್ಯದರ್ಶಿ ಎಚ್.ಆರ್ ರಂಗನಾಥ್, ಕಾರ್ಯದರ್ಶಿ ಮಾರ್ಕಂಡಯ್ಯ, ಖಜಾಂಚಿ ಎಸ್. ವಿಶ್ವನಾಥ್, ಉಪಾಧ್ಯಕ್ಷರಾದ ಚನ್ನಪ್ಪ, ಸಂಚಾಲಕರಾದ ಎಸ್.ಎನ್ ಸಿದ್ದಯ್ಯ, ವೈ. ವಸಂತಕುಮಾರ್, ಜಯರಾಮ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.



ಲಯನ್ಸ್ ಕ್ಲಬ್ ಶುಗರ್ ಟೌನ್ ೩೪ ವರ್ಷಗಳ ಸಾರ್ಥಕ ಸೇವೆ

ಫೆ.೨೮ರಂದು 'ಅನನ್ಯ' ಪ್ರಾಂತೀಯ ಸಮ್ಮೇಳನ : ಕೆ. ಅನಂತಕೃಷ್ಣನಾಯಕ್

ಭದ್ರಾವತಿಯ ಲಯನ್ಸ್ ಕ್ಲಬ್ ಶುಗರ್‌ಟೌನ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪ್ರಾಂತೀಯ ಅಧ್ಯಕ್ಷ ಕೆ. ಅನಂತಕೃಷ್ಣನಾಯಕ್ ಮಾತನಾಡಿದರು.
    ಭದ್ರಾವತಿ, ಫೆ. ೨೭: ಹಲವು ಸಮಾಜ ಮುಖಿ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ನಗರದ ಲಯನ್ಸ್ ಕ್ಲಬ್ ಶುಗರ್ ಟೌನ್ ತನ್ನ ೩೪ನೇ ವರ್ಷದ ಸವಿ ನೆನಪಿನಲ್ಲಿ ಫೆ.೨೮ರಂದು ಪ್ರಾಂತೀಯ ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಲು ಸಕಲ ಸಿದ್ದತೆಗಳನ್ನು ಕೈಗೊಂಡಿದೆ ಎಂದು ಪ್ರಾಂತೀಯ ಅಧ್ಯಕ್ಷ ಕೆ. ಅನಂತಕೃಷ್ಣನಾಯಕ್ ತಿಳಿಸಿದರು.
  ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ೧೭ ಆಗಸ್ಟ್ ೧೯೮೭ರಲ್ಲಿ ಆರಂಭಗೊಂಡ ಸ್ಥಾಪನೆಗೊಂಡ ಕ್ಲಬ್ ಜನಸೇವೆಯೇ ಜನಾರ್ಧನ ಸೇವೆ ಎಂಬ ಧ್ಯೇಯೋದ್ದೇಶದೊಂದಿಗೆ ಹಲವು ಸೇವಾ ಕಾರ್ಯಗಳೊಂದಿಗೆ ಮುನ್ನಡೆಯುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ವಿಶೇಷವಾಗಿ ಸುಮಾರು ೧೫ ವರ್ಷಗಳ ಕಾಲ ನೇತ್ರ ಚಿಕಿತ್ಸಾ ಶಿಬಿರ ನಡೆಸಿಕೊಂಡು ಬರುವ ಜೊತೆಗೆ ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆ ಹುಟ್ಟುಹಾಕುವಲ್ಲಿ ನಾಂದಿಯಾಗಿದೆ. ಅಲ್ಲದೆ ಲಯನ್ಸ್ ಎಜುಕೇಷನ್ ಟ್ರಸ್ಟ್ ಎಂಬ ಅಂಗಸಂಸ್ಥೆಯನ್ನು ಹುಟ್ಟುಹಾಕುವ ಮೂಲಕ ಸುಮಾರು ೩೨ ವರ್ಷಗಳಿಂದ ವಿಕಲಚೇತನ ಮಕ್ಕಳಿಗಾಗಿ 'ತರಂಗ ಕಿವುಡು, ಮೂಗ ಮಕ್ಕಳ ಶಾಲೆ' ನಡೆಸಿಕೊಂಡು ಬರಲಾಗುತ್ತಿದೆ. ಒಟ್ಟಾರೆ ಕ್ಲಬ್ ಸಮಾಜಕ್ಕೆ ತನ್ನದೇ ಆದ ಸಾರ್ಥಕ ಸೇವೆಯನ್ನು ಸಲ್ಲಿಸುತ್ತಿದೆ ಎಂದರು.
   ತಾವು ಪ್ರಾಂತೀಯ ಅಧ್ಯಕ್ಷರಾದ ನಂತರ ೧೦ ಕ್ಲಬ್‌ಗಳ ಜೊತೆಗೆ ಹೊಸದಾಗಿ ೩ ಕ್ಲಬ್‌ಗಳನ್ನು ರಚಿಸಲಾಗಿದೆ. ಪ್ರಸ್ತುತ ೪೩೫ ಸದಸ್ಯರಿದ್ದು, ಭವಿಷ್ಯದಲ್ಲಿ ಈ ಸದಸ್ಯರು ಮತ್ತಷ್ಟು ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಸ್ಪೂರ್ತಿಯಾಗಬೇಕೆಂಬ ಹಾಗು ಸದಸ್ಯರ ಸಂಖ್ಯೆ ಹೆಚ್ಚಿಸುವ ಉದ್ದೇಶದಿಂದ 'ಅನನ್ಯ' ಹೆಸರಿನಲ್ಲಿ ಪ್ರಾಂತೀಯ ಸಮ್ಮೇಳನ ಫೆ.೨೮ರಂದು ಸಂಜೆ ೪ ಗಂಟೆಗೆ ನಡೆಸಲಾಗುತ್ತಿದೆ.  ಈ ಸಮ್ಮೇಳನದಲ್ಲಿ ವ್ಯಾಗ್ಮಿಗಳಾದ ಚಕ್ರವರ್ತಿ ಸೂಲಿಬೆಲೆ ಹಾಗು ಡಾ.ಕೆ.ಪಿ ಪುತ್ತುರಾಯ ಪಾಲ್ಗೊಳ್ಳಲಿದ್ದಾರೆ. ಪಿಡಿಜಿ ದಿವಾಕರ್, ವಿಡಿಜಿ-೧ ವಿಶ್ವನಾಥಶೆಟ್ಟಿ, ವಿಡಿಜಿ-೨ ಕೆ.ಸಿ ವೀರಭದ್ರಪ್ಪ, ರಿಜಿಯನ್ ಫೈಲಟ್ ಎಂ.ಎಸ್ ಜರ್ನಾಧನ ಅಯ್ಯಂಗಾರ್, ಪಾಲಾಕ್ಷಪ್ಪ, ಜಿ.ಎಸ್ ಕುಮಾರ್, ಕ್ಲಬ್ ಅಧ್ಯಕ್ಷ ಬಿ. ನಿತ್ಯಾನಂದ ಪೈ, ಕಾರ್ಯದರ್ಶಿ ತಮ್ಮೇಗೌಡ ಮತ್ತು ಖಜಾಂಚಿ ಎಂ.ಸಿ ಯೋಗೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. ಸುಮಾರು ೪೫೦ ರಿಂದ ೫೦೦ ಲಯನ್ಸ್ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದರು.
   ಕಾನ್ಫರೆನ್ಸ್ ಕಮಿಟಿ ಛೇರ್‌ಮನ್ ಡಾ. ಟಿ. ನರೇಂದ್ರಭಟ್ ಮಾತನಾಡಿ, ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕೆಂಬ ಸಮಾಜಮುಖಿ ಚಿಂತನೆಗಳು ಪ್ರತಿಯೊಬ್ಬರಲ್ಲೂ ಬೆಳೆಯಬೇಕು. ಈ ನಿಟ್ಟಿನಲ್ಲಿ ಆರಂಭಗೊಂಡ ಕ್ಲಬ್‌ಗೆ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ೧ ಎಕರೆ, ೨೦ ಗುಂಟೆ ಜಾಗವನ್ನು ಲೀಸ್ ಆಧಾರದಲ್ಲಿ ಕ್ಲಬ್‌ಗೆ ನೀಡಿದ್ದು, ೧೯೯೦ರಲ್ಲಿ ತನ್ನದೇ ಆದ ಸ್ವಂತ ಕಟ್ಟಡವನ್ನು ಕ್ಲಬ್ ನಿರ್ಮಿಸಿಕೊಂಡಿತು. ಇದರ ಜೊತೆಗೆ ಸರ್‌ಎಂವಿ ಸ್ಪೂರ್ತಿವನ ಹಾಗು ಕೋಟಾ ಶಿವರಾಮಕಾರಂತ ವನ ಎಂಬ ಎರಡು ವನಗಳನ್ನು ರೂಪಿಸಲಾಗಿದ್ದು, ಇದೀಗ ಕ್ಲಬ್ ಆವರಣದಲ್ಲಿ ಹಸಿರು ಕಂಗೊಳಿಸುತ್ತಿದೆ. ಇದು ಕ್ಲಬ್‌ನ ಮತ್ತೊಂದು ಮಹತ್ವದ ಕಾರ್ಯವಾಗಿದೆ ಎಂದರು.
   ಇತ್ತೀಚೆಗೆ ಸುಮಾರು ೧೮ ಲಕ್ಷ ರು. ವೆಚ್ಚದಲ್ಲಿ ಕ್ಲಬ್‌ನ ಕಟ್ಟಡ ಹಾಗು ತರಂಗ ಶಾಲಾ ಕಟ್ಟಡಗಳನ್ನು ಸಂಪೂರ್ಣವಾಗಿ ನವೀಕರಿಸಲಾಗಿದೆ. ಈ ಕಾರ್ಯಕ್ಕೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
  ಕ್ಲಬ್ ಅಧ್ಯಕ್ಷ ಬಿ. ನಿತ್ಯಾನಂದಪೈ, ಕಾರ್ಯದರ್ಶಿ ತಮ್ಮೇಗೌಡ, ಜಿ.ಎಸ್ ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.