Sunday, April 11, 2021

ಕೋವಿಡ್ ೨ನೇ ಅಲೆ ನಡುವೆಯೂ ಮಕ್ಕಳ ಶಿಕ್ಷಣ ಮುಂದುವರಿಕೆಗೆ ವಿನೋತನ ಪ್ರಯತ್ನ

ಸರ್ಕಾರಿ ಶಾಲೆ ಮುಖ್ಯ ಶಿಕ್ಷಕರೊಬ್ಬರಿಂದ ಪೋಷಕರಿಗೆ ಮನವಿ ವಿಡಿಯೋ ಬಿಡುಗಡೆ

ಭದ್ರಾವತಿ ತಾಲೂಕಿನ ಕಲ್ಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ವಿ. ಹಿರೇಮಠ್, ದ್ವಿಪಾತ್ರದ ಮೂಲಕ ಕೋವಿಡ್-೧೯ರ ಸಂದರ್ಭದಲ್ಲಿ ಮಕ್ಕಳ ಶಿಕ್ಷಣಕ್ಕೆ ಪೋಷಕರು ನೆರವಾಗುವಂತೆ ಕೋರಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವ್ಯಾಪಕವಾಗಿ ಪ್ರಚಾರಗೊಳ್ಳುತ್ತಿದೆ.
    ಭದ್ರಾವತಿ, ಏ. ೧೧: ಕೋವಿಡ್-೧೯ರ ಪರಿಣಾಮ ಕಳೆದ ಸುಮಾರು ೧೫ ತಿಂಗಳಿನಿಂದ ಮಕ್ಕಳ ಶಿಕ್ಷಣಕ್ಕೆ ಸಾಕಷ್ಟು ತೊಂದರೆಯಾಗುತ್ತಿದ್ದು, ಈ ನಡುವೆಯೂ  ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗೆ ಹಲವು ರೀತಿಯಲ್ಲಿ ಕಲಿಕೆಯನ್ನು ಮುಂದುವರೆಸಿಕೊಂಡು ಹೋಗುತ್ತಿದೆ. ಅಲ್ಲದೆ ಒಂದು ಹಂತದ ಶೈಕ್ಷಣಿಕ ಅವಧಿಯನ್ನೂ ಸಹ ಯಶಸ್ವಿಯಾಗಿ ಮುಕ್ತಾಯಗೊಳಿಸಿದೆ. ಇದೀಗ ಕೋವಿಡ್-೧೯ರ ೨ನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು, ಸರ್ಕಾರ ಪುನಃ ಶಾಲಾ-ಕಾಲೇಜುಗಳನ್ನು ಸಂಪೂರ್ಣವಾಗಿ ಬಂದ್ ಮಾಡುವಂತೆ ಸೂಚಿಸಿದೆ.
    ಶಾಲಾ-ಕಾಲೇಜುಗಳನ್ನು ಸಂಪೂರ್ಣವಾಗಿ ಬಂದ್ ಮಾಡಿರುವ ಹಿನ್ನಲೆಯಲ್ಲಿ ಉಂಟಾಗಿರುವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ರಂಗ ಕಲಾವಿದರಾಗಿರುವ ಮುಖ್ಯ ಶಿಕ್ಷಕರೊಬ್ಬರು ವಿನೂತನ ಪ್ರಯತ್ನಕ್ಕೆ  ಮುಂದಾಗಿದ್ದು, ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿನೂತನ ವಿಡಿಯೋ ಇದೀಗ ವ್ಯಾಪಕವಾಗಿ ಪ್ರಚಾರಗೊಳ್ಳುತ್ತಿದೆ.
    ತಾಲೂಕಿನ ಕಲ್ಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ವಿ. ಹಿರೇಮಠ್, ದ್ವಿಪಾತ್ರದ ಮೂಲಕ ಕೋವಿಡ್-೧೯ರ ಸಂದರ್ಭದಲ್ಲಿ ಮಕ್ಕಳ ಶಿಕ್ಷಣಕ್ಕೆ ಪೋಷಕರು ನೆರವಾಗುವಂತೆ ಕೋರಿದ್ದಾರೆ. ಸರ್ಕಾರದ ಆದೇಶದಂತೆ ಮಕ್ಕಳು ಶಾಲೆಗಳಿಗೆ ಬರುವ ಆಗಿಲ್ಲ. ಈ ಹಿನ್ನಲೆಯಲ್ಲಿ ಮಕ್ಕಳು ಮನೆಯಲ್ಲಿಯೇ ಇದ್ದು ಕಲಿಕೆಯನ್ನು ಮುಂದುವರೆಸಿಕೊಂಡು ಹೋಗುವಂತೆ ನೋಡಿಕೊಳ್ಳುವ ಜವಾಬ್ದಾರಿ ಪೋಷಕರದ್ದಾಗಿದ್ದು, ಮಕ್ಕಳಿಗೆ ಶಾಲೆಯ ಶಿಕ್ಷಕರು ನೀಡುವ ಹೋಮ್ ವರ್ಕ್ ಹಾಗು ಕಲಿಕೆಯ ವಿಧಾನಗಳನ್ನು ಪುಸ್ತಕಗಳಲ್ಲಿ ದಾಖಲಿಸಿ ಕೊಡಲಾಗುವುದು. ಹೋಮ್ ವರ್ಕ್ ಪುಸ್ತಕಗಳನ್ನು ಮಕ್ಕಳ ಬದಲಿಗೆ ಪೋಷಕರು ತಮ್ಮ ಬಿಡುವಿನ ಸಮಯದಲ್ಲಿ ಶಾಲಾ ಅವಧಿಯಲ್ಲಿ ಶಾಲೆಗೆ ಬಂದು ಪಡೆದುಕೊಂಡು ಹೋಗಬಹುದಾಗಿದೆ. ಈ ರೀತಿಯ ವಿಧಾನದಿಂದ ಮಕ್ಕಳಿಗೆ ಯಾವುದೇ ರೀತಿ ಸಮಸ್ಯೆ ಎದುರಾಗುವುದಿಲ್ಲ. ಈ ಹಿನ್ನಲೆಯಲ್ಲಿ ಪೋಷಕರು ಸಹಕರಿಸುವಂತೆ ಮನವಿ ಮಾಡಿದ್ದಾರೆ.
     ದ್ವಿಪಾತ್ರದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಪ್ರಚಾರಗೊಳ್ಳುತ್ತಿದ್ದು, ವಿನೂತನ ಪ್ರಯತ್ನಕ್ಕೆ ಯಶಸ್ಸು ಸಿಗಲಿ ಎಂಬುದು ಪ್ರಜ್ಞಾವಂತ ನಾಗರೀಕರ ಆಶಯವಾಗಿದೆ.

ಕೊರೋನಾ ಲಸಿಕೆ ಪಡೆದು ಜಾಗೃತಿ ಮೂಡಿಸಿದ ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್

ಭದ್ರಾವತಿ ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್ ಜನ್ನಾಪುರ ನಗರ ಆರೋಗ್ಯ ಕೇಂದ್ರದಲ್ಲಿ ಭಾನುವಾರ ಕೊರೋನಾ ಲಸಿಕೆ ಪಡೆಯುವ ಮೂಲಕ ಜಾಗೃತಿ ಮೂಡಿಸಿದರು.
   ಭದ್ರಾವತಿ, ಏ. ೧೧: ಕೊರೋನಾ ಸೋಂಕು ೨ನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು, ಈ ನಡುವೆ ಲಸಿಕೆ ಪಡೆಯುವವರ ಸಂಖ್ಯೆ ಸಹ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ, ಹೋರಾಟಗಾರ ಆರ್. ವೇಣುಗೋಪಾಲ್ ಭಾನುವಾರ ಲಸಿಕೆ ಪಡೆಯುವ ಮೂಲಕ ಇತರರಿಗೆ ಜಾಗೃತಿ ಮೂಡಿಸಿದರು.
    ಸರ್ಕಾರ ೪೫ ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೋನಾ ಲಸಿಕೆ ಉಚಿತವಾಗಿ ನೀಡುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳುವ ಮೂಲಕ ಸೋಂಕು ಹರಡದಂತೆ ಮುನ್ನಚ್ಚರಿಕೆ ಕ್ರಮಗಳನ್ನು ವಹಿಸಬೇಕೆಂದರು.
   ಜನ್ನಾಪುರ ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಆರ್. ಕವಿತಾ , ಕಿರಣ್ ಕುಮಾರ್, ದೇವರಾಜ್, ಮಂಗಳ, ಉಷಾ ಹಾಗೂ ಆಶಾ ಕಾರ್ಯಕರ್ತೆಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಗೊಂದಿ ಸಾಧಕ ಆಶ್ರಮದ ಶ್ರೀಗಳು ನಿಧನ

ಶ್ರೀ ನಾಮದೇವಾನಂದ ಭಾರತಿ ಸ್ವಾಮೀಜಿ
    ಭದ್ರಾವತಿ, ಏ. ೧೧: ತಾಲೂಕಿನ ಗೊಂದಿ ಸಾಧಕ ಆಶ್ರಮದ ಶ್ರೀ ನಾಮದೇವಾನಂದ ಭಾರತಿ ಸ್ವಾಮೀಜಿ(೭೪) ಭಾನುವಾರ ಬೆಳಿಗ್ಗೆ ನಿಧನ ಹೊಂದಿದರು.
   ಹುಬ್ಬಳ್ಳಿಯಲ್ಲಿ ಕಾರ್ಯಕ್ರಮ ಒಂದರಲ್ಲಿ ಪಾಲ್ಗೊಳ್ಳಲು ತೆರಳಿದ್ದ ಸ್ವಾಮೀಜಿಯವರು ಅನಾರೋಗ್ಯಕ್ಕೆ ಒಳಗಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿದಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.  ಸ್ವಾಮೀಜಿಯವರ ಪಾರ್ಥಿವ ಶರೀರವನ್ನು ಮಧ್ಯಾಹ್ನ ಗೊಂದಿ ಸಾಧಕ ಆಶ್ರಮಕ್ಕೆ ತರಲಾಯಿತು.
   ೧೯೮೮ರಲ್ಲಿ ಶಿವಮೊಗ್ಗ ಚಿಕ್ಕದಾಳು ಸಿದ್ದಾರೂಢ ಆಶ್ರಮದ ಶ್ರೀ ಬಸವರಾಜ ದೇಶಿಕೇಂದ್ರ ಸ್ವಾಮೀಜಿಯವರಿಂದ ದೀಕ್ಷೆ ಪಡೆದುಕೊಂಡಿದ್ದರು. ಪಂಡರಿ ಸಂಪ್ರದಾಯ ರೂಢಿಸಿಕೊಂಡಿದ್ದ ಶ್ರೀಗಳು ನಂತರ ತಾಲೂಕಿನ ಗೊಂದಿ ಗ್ರಾಮಕ್ಕೆ ಆಗಮಿಸಿ ಸಾಧಕ ಆಶ್ರಮ ಸ್ಥಾಪಿಸುವಲ್ಲಿ ಯಶಸ್ವಿಯಾಗಿದ್ದರು.  ಶ್ರೀಗಳು ಹಿರಿಯ ಆಧ್ಯಾತ್ಮಿಕ ಮಾರ್ಗದರ್ಶಕರು, ಚಿಂತಕರು, ಧ್ಯಾನ್ಯಾಸಕ್ತರಾಗಿದ್ದರು. ತಮ್ಮದೇ ಆದ ಭಕ್ತರ ವೃಂದವನ್ನು ಹೊಂದಿದ್ದರು.
    ಆಶ್ರಮದ ಪೀಠಾಧ್ಯಕ್ಷರಾದ ನಂತರ ಹಲವಾರು ಸಾಮಾಜಿಕ ಹಾಗು ಆಧ್ಯಾತ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಗಮನ ಸೆಳೆದಿದ್ದರು. ಶ್ರೀಗಳ ನಿಧನಕ್ಕೆ ವಿವಿಧ ಮಠಾಧೀಶರು, ಗಣ್ಯರು, ಜನಪ್ರತಿನಿಧಿಗಳು ಸಂತಾಪ ಸೂಚಿಸಿದ್ದಾರೆ.

Saturday, April 10, 2021

ನಗರಸಭೆ ಚುನಾವಣೆ : ಪ್ರಮುಖ ರಾಜಕೀಯ ಪಕ್ಷಗಳಲ್ಲಿ ಹೆಚ್ಚಿದ ಆಕಾಂಕ್ಷಿಗಳ ಪೈಪೋಟಿ

ಕಾಂಗ್ರೆಸ್-ಜೆಡಿಎಸ್‌ನಲ್ಲಿ ವಿಳಂಬ ಧೋರಣೆ, ಬಿಜೆಪಿಯಲ್ಲಿ ಕಾದು ನೋಡುವ ತಂತ್ರ


    ಭದ್ರಾವತಿ, ಏ. ೧೦: ನಗರಸಭೆ ಚುನಾವಣೆ ಪ್ರಕ್ರಿಯೆಗಳು ಏ.೮ ರಿಂದ ಚುರುಕಿನಿಂದ ನಡೆಯುತ್ತಿದ್ದು, ಈ ನಡುವೆ ಬಿಜೆಪಿ ಹೊರತುಪಡಿಸಿ ಉಳಿದ ರಾಜಕೀಯ ಪಕ್ಷಗಳು ಅಧಿಕೃತ ಅಭ್ಯರ್ಥಿಗಳ ಘೋಷಣೆಯಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿವೆ.
    ಈಗಾಗಲೇ ನಗರಸಭೆ ೩೫ ವಾರ್ಡ್‌ಗಳ ಪೈಕಿ ೨೧ ವಾರ್ಡ್‌ಗಳಿಗೆ ಬಿಜೆಪಿ ಅಧಿಕೃತ ಅಭ್ಯರ್ಥಿಗಳನ್ನು ಘೋಷಿಸಿದ್ದು, ಇನ್ನೂ ೧೪ ವಾರ್ಡ್‌ಗಳು ಬಾಕಿ ಉಳಿದಿವೆ. ಉಳಿದಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಇದುವರೆಗೂ ಅಧಿಕೃತ ಅಭ್ಯರ್ಥಿಗಳನ್ನು ಘೋಷಿಸಿಲ್ಲ. ಈ ನಡುವೆ ಆಮ್ ಆದ್ಮಿ ಪಾರ್ಟಿ ಹಾಗು ಜನತಾದಳ(ಸಂಯುಕ್ತ) ಕರ್ನಾಟಕ ಮತ್ತು ವೆಲ್‌ಫೇರ್ ಪಾರ್ಟಿ ಇಂಡಿಯಾ ಪಕ್ಷದ ಅಭ್ಯರ್ಥಿಗಳು ಸಹ ಈ ಬಾರಿ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ದಿನ ಕಳೆದಂತೆ ಚುನಾವಣೆ ಕುತೂಹಲ ಪಡೆದುಕೊಳ್ಳುತ್ತಿದೆ.
     ಮತ್ತೊಂದೆಡೆ ಚುನಾವಣೆಗೆ ಸ್ಪರ್ಧಿಸಲು ಆಕಾಂಕ್ಷಿಗಳ ಪೈಪೋಟಿ ಹೆಚ್ಚಾಗುತ್ತಿದೆ.  ಮಾತೃಪಕ್ಷದಲ್ಲಿ ಸ್ಪರ್ಧೆಗೆ ಕೈತಪ್ಪುವ ಆತಂಕ ಹೆಚ್ಚಾಗುತ್ತಿದ್ದು, ಅಸಮಾಧಾನಗೊಂಡವರನ್ನು ಸೆಳೆಯಲು ಎಲ್ಲಾ ರಾಜಕೀಯ ಪಕ್ಷಗಳು ಕಸರತ್ತು ನಡೆಸುತ್ತಿವೆ. ಏ.೧೫ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿರುವ ಹಿನ್ನಲೆಯಲ್ಲಿ ಬಹುತೇಕ ಪಕ್ಷಗಳು ಸೋಮವಾರದ ನಂತರ ಅಧಿಕೃತ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸುವ ಸಾಧ್ಯತೆ ಹೆಚ್ಚಾಗಿದೆ.
      ಜೆಡಿಎಸ್‌ನಲ್ಲಿ ಆತಂಕ :
    ರಾಜಕೀಯ ಅಸ್ತಿತ್ವಕ್ಕಾಗಿ ಹೆಣಗಾಡುತ್ತಿರುವ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್ ಕೆಲವು ದಿನಗಳ ಹಿಂದೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆ ವೇಳೆ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಬೆಂಬಲ ವ್ಯಕ್ತಪಡಿಸುವ ಜೊತೆಗೆ ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಮುಂದಾಗಿದ್ದರು. ಆದರೆ ಕ್ಷೇತ್ರದಲ್ಲಿ ಕಬಡ್ಡಿ ಪಂದ್ಯಾವಳಿ ವೇಳೆ ನಡೆದ ಅಹಿತಕರ ಘಟನೆಗಳ ಹಿನ್ನಲೆಯಲ್ಲಿ ಉಂಟಾದ ರಾಜಕೀಯ ಬೆಳವಣಿಗೆಗಳ ಪರಿಣಾಮ  ಜೆಡಿಎಸ್ ಪಕ್ಷದಲ್ಲಿಯೇ ಉಳಿದುಕೊಂಡಿದ್ದು, ಇದರ ಪರಿಣಾಮ ಇದೀಗ ಪಕ್ಷದಲ್ಲಿ ಅಸಮಾಧಾನಿತರ ಸಂಖ್ಯೆ ಹೆಚ್ಚಾಗುತ್ತಿದೆ. ಚುನಾವಣೆಗೆ ಸ್ಪರ್ಧಿಸಲು ಹಲವು ತಿಂಗಳುಗಳಿಂದ  ಸಿದ್ದತೆ ನಡೆಸಿಕೊಂಡು ಬಂದಿದ್ದ ಪಕ್ಷದ ನಿಷ್ಠಾವಂತ ಕಾರ್ಯಕರ್ತರು, ಮುಖಂಡರು ಸ್ಪರ್ಧೆಗೆ ಅವಕಾಶ ಸಿಗದಿರುವುದು ಮನದಟ್ಟು ಆಗುತ್ತಿದ್ದಂತೆ ಇದೀಗ  ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ಇದರಿಂದಾಗಿ ಜೆಡಿಎಸ್ ಪಕ್ಷಕ್ಕೆ ಒಂದೆಡೆ ಆತಂಕ ಎದುರಾಗಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.
       ಬಿಜೆಪಿ ಕಾದು ನೋಡುವ ತಂತ್ರಕ್ಕೆ ಮೊರೆ :
    ಎಲ್ಲಾ ಪಕ್ಷಗಳಿಗಿಂತ ಮೊದಲೇ ೨೧ ವಾರ್ಡ್‌ಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿರುವ ಭಾರತೀಯ ಜನತಾ ಪಕ್ಷ ಉಳಿದಿರುವ ಪ್ರಮುಖ ೧೪ ವಾರ್ಡ್‌ಗಳ ಅಭ್ಯರ್ಥಿಗಳ ಆಯ್ಕೆಯಲ್ಲಿ ಕಾದು ನೋಡುವ ತಂತ್ರಕ್ಕೆ ಮೊರೆಹೋಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಅಧಿಕೃತ ಅಭ್ಯರ್ಥಿಗಳ ಘೋಷಣೆ ನಂತರ ಈ ವಾರ್ಡ್‌ಗಳಿಗೆ ಅಭ್ಯರ್ಥಿಗಳ ಘೋಷಣೆ ನಡೆಯುವ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗಿದೆ.  

ಅಪಘಾತ : ಬೈಕ್ ಸವಾರ ಸಾವು

ಭದ್ರಾವತಿ, ಏ. ೧೦: ಬೈಕ್ ಸವಾರನೋರ್ವ ಅಪಘಾತದಲ್ಲಿ ಮೃತಪಟ್ಟಿರುವ  ಘಟನೆ ಶುಕ್ರವಾರ ರಾತ್ರಿ ಹೊಸಮನೆ ಹನುಮಂತ ನಗರ ವ್ಯಾಪ್ತಿಯಲ್ಲಿ ನಡೆದಿದೆ.
  ಹೊಸಮನೆ ವಿಜಯನಗರ ನಿವಾಸಿ ಪ್ರಶಾಂತ(೪೧) ಎಂಬಾತ ಮೃತಪಟ್ಟಿದ್ದು, ಇವರು ಬೈಕ್‌ನಲ್ಲಿ ಬರುವಾಗ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತ ನಡೆದ ತಕ್ಷಣ ಕಾರು ಚಾಲಕ ಸ್ಥಳದಲ್ಲಿಯೇ ಕಾರು ಬಿಟ್ಟು ಪರಾರಿಯಾಗಿದ್ದು, ಕಾರು ಕೂಡ್ಲಿಗೆರೆ ವ್ಯಾಪ್ತಿಯ ಅರಳಿಹಳ್ಳಿ ಗ್ರಾಮದ ನಿವಾಸಿಯೊಬ್ಬರಿಗೆ ಸೇರಿದೆ ಎನ್ನಲಾಗಿದೆ. ಕಾರಿನ ಒಳಭಾಗದಲ್ಲಿ ಕಾರು ಮಾಲೀಕನ ಪುತ್ರ ನಿದ್ರೆಗೆ ಜಾರಿದಾಗ ಈ ಘಟನೆ ನಡೆದಿದೆ. ಆದರೆ ಅಪಘಾತ ನಡೆದಿರುವ ಘಟನೆ ಆತನ ಅರಿವಿಗೆ ಬಾರದೆ ಕಾರಿನಲ್ಲಿಯೇ ಉಳಿದುಕೊಂಡಿದ್ದು, ಸಂಚಾರಿ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.  ಈ ನಡುವೆ ಅಪಘಾತಕ್ಕೆ ಕಾರು ಚಾಲಕನ ನಿರ್ಲಕ್ಷ್ಯತನ ಕಾರಣ ಎಂದು ಸ್ಥಳೀಯರು ದೂರಿದ್ದಾರೆ.  

ರಮೇಶ್ ಶಂಕರಘಟ್ಟ ಕಾಂಗ್ರೆಸ್ ಸೇರ್ಪಡೆ ಪಕ್ಷಕ್ಕೆ ಬಲ ತಂದಿದೆ - ಶಾಸಕ ಬಿ.ಕೆ.ಸಂಗಮೇಶ್

ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡ ಶಂಕರಘಟ್ಟದ ರಮೇಶ್‌ರನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಶನಿವಾರ ತಮ್ಮ ನಿವಾಸದಲ್ಲಿ ಅಭಿನಂದಿಸಿದರು.
     ಭದ್ರಾವತಿ, ಏ. ೧೦: ಸಹಕಾರಿ ಧುರೀಣ ಆರ್.ಎಂ ಮಂಜುನಾಥ್ ಗೌಡ ಹಾಗೂ ತಾಲ್ಲೂಕಿನ ರಮೇಶ್ ಶಂಕರಘಟ್ಟರವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವುದರಿಂದ ಜಿಲ್ಲೆಯಲ್ಲಿ ಪಕ್ಷದ ಬಲ ಮತ್ತಷ್ಟು ಹೆಚ್ಚಾಗಿದೆ ಎಂದು ಶಾಸಕ ಬಿ.ಕೆ ಸಂಗಮೇಶ್ ಹೇಳಿದರು.
    ಅವರು ಶನಿವಾರ ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡ ಶಂಕರಘಟ್ಟದ ರಮೇಶ್‌ರನ್ನು ತಮ್ಮ ನಿವಾಸದಲ್ಲಿ ಅಭಿನಂದಿಸಿ ಮಾತನಾಡಿದರು.
ರಮೇಶ್‌ರವರು ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿ ಉತ್ತಮ ಸ್ಫರ್ಧೆ ನೀಡಿದ್ದರು.  ಅಲ್ಲದೆ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ  ಉತ್ತಮ ಅಧಿಕಾರಿಯಾಗಿ ಹೆಸರು ಮಾಡಿದ್ದಾರೆ.  ಶಿಕ್ಷಣ ಹಾಗೂ ಪತ್ರಿಕಾ ಕ್ಷೇತ್ರದಲ್ಲಿನ  ಇವರ ಅನುಭವ ಪಕ್ಷ ಸಂಘಟನೆಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎಸ್ ಸುಂದರೇಶ್, ನಗರ ಕಾಂಗ್ರೆಸ್ ಅಧ್ಯಕ್ಷ ಟಿ. ಚಂದ್ರೇಗೌಡ, ಮುಖಂಡರಾದ ಸಿ.ಎಂ ಖಾದರ್, ತಾವರಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹೇಶ್ವರಪ್ಪ, ಸಿಂಗನಮನೆ ಗ್ರಾಮ ಪಂಚಾಯತಿ ಸದಸ್ಯರಾದ ಅವಿನಾಶ್, ಶಿವಶಂಕರ್, ಮಾಜಿ ಸದಸ್ಯರಾದ ಶಶಿಕುಮಾರ್, ರುದ್ರೇಶ್, ಶ್ರೀಕಾಂತ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Friday, April 9, 2021

ಸಾಹಿತ್ಯ ಚಟುವಟಿಕೆಗಳಲ್ಲಿ ಪಾರದರ್ಶಕತೆ ಮುಖ್ಯ : ಡಿ.ಬಿ ಶಂಕರಪ್ಪ

ಭದ್ರಾವತಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶುಕ್ರವಾರ ನಗರದ ಪದ್ಮನಿಲಯ ಹೋಟೆಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ೯ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಲೆಕ್ಕಪತ್ರ ಮಂಡನೆ ಹಾಗು ಅಭಿನಂದನಾ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ಡಿ.ಬಿ ಶಂಕರಪ್ಪ ಮಾತನಾಡಿದರು.
   ಭದ್ರಾವತಿ, ಏ. ೯: ಸಾಹಿತ್ಯ ಚಟುವಟಿಕೆಗಳಲ್ಲಿ ಪಾರದರ್ಶಕತೆ ಮುಖ್ಯ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ.ಬಿ ಶಂಕರಪ್ಪ ಹೇಳಿದರು.
   ಅವರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶುಕ್ರವಾರ ನಗರದ ಪದ್ಮನಿಲಯ ಹೋಟೆಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ೯ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಲೆಕ್ಕಪತ್ರ ಮಂಡನೆ ಹಾಗು ಅಭಿನಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
     ಯಾವುದೇ ಸಾಹಿತ್ಯ ಚಟುವಟಿಕೆಗಳು ಸಹ ಪಾರದರ್ಶಕವಾಗಿರಬೇಕೆಂಬುದು ನಮ್ಮ ಆಶಯವಾಗಿದೆ. ಈ ನಿಟ್ಟಿನಲ್ಲಿ ನಮ್ಮ ಪ್ರತಿಯೊಂದು ಚಟುವಟಿಕೆಗಳನ್ನು ಮುಕ್ತವಾಗಿರಸಲಾಗಿದೆ. ಪರಿಷತ್ ಕಾರ್ಯ ವೈಖರಿಗಳ ಬಗ್ಗೆ ಎಲ್ಲರಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಮುಂದಿನ ದಿನಗಳಲ್ಲೂ ಇದೆ ರೀತಿಯ ಪಾರದರ್ಶಕತೆ ಕಾಯ್ದುಕೊಳ್ಳಬೇಕೆಂದರು.
   ಪರಿಷತ್ ಜಿಲ್ಲಾ ಉಪಾಧ್ಯಕ್ಷ ಎಚ್.ಎನ್ ಮಹಾರುದ್ರಾ, ತಾಲೂಕು ಪರಿಷತ್ ಅಧ್ಯಕ್ಷ ಅಪೇಕ್ಷಾ ಮಂಜುನಾಥ್, ಉಪಾಧ್ಯಕ್ಷ ಡಾ. ಬಿ.ಎಂ ನಾಸಿರ್‌ಖಾನ್ ಸೇರಿದಂತೆ ಇನ್ನಿತರರು ಮಾತನಾಡಿದರು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಪ್ರಸ್ತುತ ತನ್ನತನವನ್ನು ಕಾಯ್ದುಕೊಳ್ಳುವ ಮೂಲಕ ರಾಜ್ಯಕ್ಕೆ ಮಾದರಿಯಾಗಿದೆ. ಜಿಲ್ಲಾ ಘಟಕದ ಪ್ರತಿಯೊಂದು ಕಾರ್ಯಚಟುವಟಿಕೆಗಳು ಇಂದು ಮುಕ್ತವಾಗಿವೆ. ಇದಕ್ಕೆ ಪರಿಷತ್‌ನ ಅಧ್ಯಕ್ಷರಾದ ಡಿ.ಬಿ ಶಂಕರಪ್ಪನವರ ಪರಿಶ್ರಮ ಕಾರಣವಾಗಿದೆ ಎಂದರು.
   ನಗರಸಭೆ ಪೌರಾಯುಕ್ತ ಮನೋಹರ್, ಹಿರಿಯ ಅಧಿಕಾರಿ ಕೆ.ಜೆ ತಮ್ಮಣ್ಣಗೌಡ, ಪರಿಷತ್ ಕಾರ್ಯದರ್ಶಿಗಳಾದ ಸಿ. ಚನ್ನಪ್ಪ, ವೈ.ಕೆ ಹನುಮಂತಯ್ಯ, ಖಜಾಂಚಿ ಸತ್ಯಮೂರ್ತಿ, ಎ. ತಿಪ್ಪೇಸ್ವಾಮಿ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
   ಉದ್ಯಮಿ ಎ. ಮಾಧುಸ್ವಾಮಿ, ಪ್ರಮುಖರಾದ ಸಿದ್ದಲಿಂಗಯ್ಯ, ಆಂಜನೇಯ, ಎನ್. ಮಂಜುನಾಥ್, ದಿವಾಕರ್, ಜೆ.ಎನ್ ಬಸವರಾಜಪ್ಪ, ಕತ್ತಲಗೆರೆ ತಿಮ್ಮಪ್ಪ, ಅರಳೇಹಳ್ಳಿ ಅಣ್ಣಪ್ಪ, ರಾಮಾಚಾರಿ, ಮಂಜುನಾಥ್, ಕಾಂತಪ್ಪ, ಮಹಿಳಾ ಸದಸ್ಯರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.