Sunday, April 18, 2021

ಏ.೧೯ ನಾಮಪತ್ರ ಹಿಂಪಡೆಯಲು ಕೊನೆಯ ದಿನ

     ಭದ್ರಾವತಿ, ಏ. ೧೮: ನಗರಸಭೆ ೩೫ ವಾರ್ಡ್‌ಗಳ ಚುನಾವಣೆ ಸಂಬಂಧ ನಾಮಪತ್ರ ಹಿಂಪಡೆಯಲು ಏ.೧೯ ಕೊನೆಯ ದಿನವಾಗಿದ್ದು, ನಾಮಪತ್ರ ಪರಿಶೀಲನೆ ನಂತರ ೧೯೫ ನಾಮಪತ್ರಗಳು ಕ್ರಮ ಬದ್ದವಾಗಿವೆ. ಸೋಮವಾರ ಸಂಜೆ ವೇಳೆಗೆ ಅಂತಿಮ ಕಣದಲ್ಲಿರುವವರ ಮಾಹಿತಿ ತಿಳಿದು ಬರಲಿದೆ.
     ಈಗಾಗಲೇ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಮೂರು ಪಕ್ಷಗಳು ೩೫ ವಾರ್ಡ್‌ಗಳಿಗೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಉಳಿದಂತೆ ೯೦ ಅಭ್ಯರ್ಥಿಗಳ ಪೈಕಿ ಎಎಪಿ-೭, ವೆಲ್‌ಫೇರ್ ಪಾರ್ಟಿ ಆಫ್ ಇಂಡಿಯಾ-೨, ಎಐಎಂಐಎಂ-೨, ಎಸ್‌ಡಿಪಿಐ-೩ ಮತ್ತು ಪಕ್ಷೇತರ-೭೬ ಅಭ್ಯರ್ಥಿಗಳು ಇದ್ದು, ಪಕ್ಷೇತರ ಅಭ್ಯರ್ಥಿಗಳ ಪೈಕಿ ಬಹಳಷ್ಟು ಮಂದಿ ನಾಮಪತ್ರ ಹಿಂಪಡೆಯುವ ಸಾಧ್ಯತೆ ಹೆಚ್ಚಾಗಿದ್ದು, ಈ ನಡುವೆ ಪ್ರತಿ ಬಾರಿ ೨ ರಿಂದ ೩ ಪಕ್ಷೇತರ ಅಭ್ಯರ್ಥಿಗಳು ಆಯ್ಕೆಯಾಗುತ್ತಿರುವುದು ಗಮನಾರ್ಹ ಸಂಗತಿಯಾಗಿದೆ.

ರಂಜಾನ್ ಮಾಸ : ದೀನದಲಿತರಿಗೆ ಆಹಾರ ಸಾಮಾಗ್ರಿ ವಿತರಣೆ

ರಂಜಾನ್ ಮಾಸದ ಹಿನ್ನಲೆಯಲ್ಲಿ ಭದ್ರಾವತಿ ಸಫಾ ಬೈತುಲ್ ಮಾಲ್ ರಿಲಿಜನ್ ಅಂಡ್ ವೆಲ್ಫೇರ್ ಟ್ರಸ್ಟ್ ವತಿಯಿಂದ ದೀನದಲಿತರಿಗೆ ಆಹಾರ ಸಾಮಗ್ರಿಗಳನ್ನು ವಿತರಿಸಲಾಯಿತು.
    ಭದ್ರಾವತಿ, ಏ. ೧೮: ರಂಜಾನ್ ಮಾಸದ ಹಿನ್ನಲೆಯಲ್ಲಿ ನಗರದ ಸಫಾ ಬೈತುಲ್ ಮಾಲ್ ರಿಲಿಜನ್ ಅಂಡ್ ವೆಲ್ಫೇರ್ ಟ್ರಸ್ಟ್ ವತಿಯಿಂದ ದೀನದಲಿತರಿಗೆ ಆಹಾರ ಸಾಮಗ್ರಿಗಳನ್ನು ವಿತರಿಸಲಾಯಿತು.
    ಟ್ರಸ್ಟ್ ವತಿಯಿಂದ ಪ್ರತಿ ವರ್ಷ ರಂಜಾನ ಮಾಸದಲ್ಲಿ ಆಹಾರ ಸಾಮಗ್ರಿಗಳನ್ನು ದೀನದಲಿತರಿಗೆ ವಿತರಿಸಿಕೊಂಡು ಬರಲಾಗುತ್ತಿದೆ. ಅಲ್ಲದೆ ದೀನದಲಿತರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಟ್ರಸ್ಟ್ ಅಧ್ಯಕ್ಷ ಮೌಲಾನ ಅಸ್ಲಂ ಸಾಬ್ ಅಧ್ಯಕ್ಷತೆ ವಹಿಸಿದ್ದರು. ನಜೀರ್ ಅಹಮದ್,  ಸನಾವುಲ್ಲಾ ಸಾಬ್, ಮೌಲಾನ ಸಗೀರ್ ಸಾಬ್. ಅಫೀಸ್ ಉಲ್ಲಾ ಸಾಬ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  ಮುಸ್ತಿ ಸಾಧಿಕ್ ಸಾಬ್ ಪ್ರಾರ್ಥಿಸಿದರು. ಸಾಧಿಕ್ ಮೌಲಾನ ವಂದಿಸಿದರು.

ಏ.೧೯ರಿಂದ ಚುನಾವಣಾ ಜಾಗೃತಿ ಕಾರ್ಯಕ್ರಮ

ಭದ್ರಾವತಿ, ಏ. ೧೮: ನಗರಸಭೆ ಚುನಾವಣೆ ಹಿನ್ನಲೆಯಲ್ಲಿ ನಗರದ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಏ.೧೯ ರಿಂದ ೨೬ರ ವರೆಗೆ ಭಿತ್ತಿಪತ್ರದ ಮೂಲಕ ನಗರಸಭೆ ೩೫ ವಾರ್ಡ್‌ಗಳಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
    ಆಟೋ ಮೂಲಕ ಬೆಳಿಗ್ಗೆ ೮ ರಿಂದ ಸಂಜೆ ೫ ಗಂಟೆವರೆಗೆ ಪ್ರಚಾರ ನಡೆಯಲಿದ್ದು, ಮಾನವ ಹಕ್ಕುಗಳನ್ನು ಎತ್ತಿ ಹಿಡಿಯುವ, ಪ್ರಾಮಾಣಿಕ ಹಾಗು ಸಮರ್ಥ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಂತೆ ಹಾಗು ಹಣ, ಹೆಂಡ ಸೇರಿದಂತೆ ಇನ್ನಿತರ ಅಮಿಷಗಳಿಗೆ ಬಲಿಯಾಗದಂತೆ ಜಾಗೃತಿ ಮೂಡಿಸಲಾಗುವುದು.
ಕಾರ್ಯಕ್ರಮಕ್ಕೆ ಏ.೧೯ರಂದು ಬೆಳಿಗ್ಗೆ ೧೧ ಗಂಟೆಗೆ ನಗರಸಭೆ ಮುಂಭಾಗ ಪೌರಾಯುಕ್ತ ಮನೋಹರ್ ಚಾಲನೆ ನೀಡಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಕೋರಿದ್ದಾರೆ.

ಹೊಸ ಸೇತುವೆ ಕಾಮಗಾರಿ ಶೇ.೮೦ರಷ್ಟು ಪೂರ್ಣ

ಸುಮಾರು ೧೫೦ ವರ್ಷಗಳಿಗೂ ಅಧಿಕ, ಹಳೇಯದಾದ ಭದ್ರಾವತಿ ನಗರದ ಹೃದಯ ಭಾಗದಲ್ಲಿರುವ ಭದ್ರಾ ಸೇತುವೆ ಪಕ್ಕದಲ್ಲಿ ಹೊಸ ಸೇತುವೆ ನಿರ್ಮಾಣಗೊಳ್ಳುತ್ತಿದ್ದು, ಇದೀಗ ಶೇ.೮೦ರಷ್ಟು ಕಾಮಗಾರಿ ಮುಕ್ತಾಯಗೊಂಡಿದೆ.

   ಭದ್ರಾವತಿ, ಏ. ೧೮: ಸುಮಾರು ೧೫೦ ವರ್ಷಗಳಿಗೂ ಅಧಿಕ, ಹಳೇಯದಾದ ನಗರದ ಹೃದಯ ಭಾಗದಲ್ಲಿರುವ ಭದ್ರಾ ಸೇತುವೆ ಪಕ್ಕದಲ್ಲಿ ಹೊಸ ಸೇತುವೆ ನಿರ್ಮಾಣಗೊಳ್ಳುತ್ತಿದ್ದು, ಇದೀಗ ಶೇ.೮೦ರಷ್ಟು ಕಾಮಗಾರಿ ಮುಕ್ತಾಯಗೊಂಡಿದೆ.
  ಸೇತುವೆಯನ್ನು ಸಂಪೂರ್ಣವಾಗಿ ಕಾಂಕ್ರಿಟ್‌ನಿಂದ ನಿರ್ಮಿಸಲಾಗುತ್ತಿದ್ದು, ಎರಡು ಬದಿ ಆಕರ್ಷಕವಾಗಿ ಕಮಾನು ಮಾದರಿಯಲ್ಲಿ ಸೇತುವೆ ನಿರ್ಮಾಣಗೊಳ್ಳುತ್ತಿದೆ. ಭಾನುವಾರ ಬೆಳಿಗ್ಗೆ ಸೇತುವೆ ಎರಡನೇ ಕಮಾನು ಅಳವಡಿಸುವ ಕಾರ್ಯ ನಡೆಯಿತು. ಇದರಿಂದಾಗಿ ಬೆಳಿಗ್ಗೆ ಸುಮಾರು ೨ ತಾಸು ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.
    ಭದ್ರಾ ಸೇತುವೆ ಶಿಥಿಲಗೊಂಡ ಪರಿಣಾಮ ಹೊಸ ಸೇತುವೆ ನಿರ್ಮಿಸುವಂತೆ ಹಲವಾರು ವರ್ಷಗಳಿಂದ ಸರ್ಕಾರಕ್ಕೆ ಒತ್ತಾಯಿಸಿಕೊಂಡು ಬರಲಾಗುತ್ತಿತ್ತು. ಇದರ ಪರಿಣಾಮ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಲೋಕೋಪಯೋಗಿ ಇಲಾಖೆ ಸಚಿವರಾಗಿದ್ದ ಡಾ. ಎಚ್.ಸಿ ಮಹಾದೇವಪ್ಪ ಸೇತುವೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ್ದರು. ಸುಮಾರು ೧೮ ತಿಂಗಳ ಅವಧಿಯಲ್ಲಿ ಮುಕ್ತಾಯಗೊಳ್ಳಬೇಕಾದ ಕಾಮಗಾರಿ ಹಲವಾರು ಕಾರಣಗಳಿಂದ ವಿಳಂಬವಾಗಿದ್ದು, ಇದೀಗ ಶೇ.೮೦ರಷ್ಟು ಕಾಮಗಾರಿ ನಡೆದಿದೆ. ಮುಂದಿನ ೨-೩ ತಿಂಗಳಲ್ಲಿ ಸೇತುವೆ ಕಾಮಗಾರಿ ಸಂಪೂರ್ಣವಾಗಿ ಮುಕ್ತಾಯಗೊಳ್ಳುವ ಸಾಧ್ಯತೆ ಕಂಡು ಬರುತ್ತಿದೆ.

Saturday, April 17, 2021

ಏ.೧೮ರಂದು ವಿಐಎಸ್‌ಎಲ್ ಆಸ್ಪತ್ರೆಯಲ್ಲಿ ಕೊರೋನಾ ಲಸಿಕೆ ಲಭ್ಯ

ಭದ್ರಾವತಿ, ಏ. ೧೭: ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆಯಲ್ಲಿ ಏ.೧೮ರಂದು ಬೆಳಿಗ್ಗೆ ೧೦.೩೦ ರಿಂದ ಸಂಜೆ ೪ ಗಂಟೆವರೆಗೆ ಕೊರೋನಾ ಲಸಿಕೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
   ೪೫ ವರ್ಷ ಮೇಲ್ಪಟ್ಟವರು ಲಸಿಕೆ ಪಡೆಯಬಹುದಾಗಿದ್ದು, ಲಸಿಕೆ ಹಾಕಿಸಿಕೊಳ್ಳುವವರು ತಪ್ಪದೇ ಆಧಾರ್ ಕಾರ್ಡ್ ತರುವುದು. ಜೊತೆಗೆ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಕಡ್ಡಾಯವಾಗಿದೆ. ಹೆಚ್ಚಿನ ಮಾಹಿತಿಗೆ ಹಿರಿಯ ಆರೋಗ್ಯ ಅಧಿಕಾರಿ ಡಾ. ಗಿರಿಧರ್ ಅವರನ್ನು ಸಂಪರ್ಕಿಸಬಹುದಾಗಿದೆ.

ಕೊರೋನಾ ಲಸಿಕೆ ಪಡೆದು ಜಾಗೃತಿ ಮೂಡಿಸಿದ ಶಾಸಕ ಬಿ.ಕೆ ಸಂಗಮೇಶ್ವರ್

ಕೊರೋನಾ ೨ನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು, ಈ ನಡುವೆ ಶಾಸಕ ಬಿ.ಕೆ ಸಂಗಮೇಶ್ವರ್ ಶನಿವಾರ ಭದ್ರಾವತಿ ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಲಸಿಕೆ ಹಾಕಿಸಿಕೊಳ್ಳುವ ಮೂಲಕ ಜಾಗೃತಿ ಮೂಡಿಸಿದರು.
   ಭದ್ರಾವತಿ, ಏ. ೧೭: ಕೊರೋನಾ ೨ನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು, ಈ ನಡುವೆ ಶಾಸಕ ಬಿ.ಕೆ ಸಂಗಮೇಶ್ವರ್ ಶನಿವಾರ ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಲಸಿಕೆ ಹಾಕಿಸಿಕೊಳ್ಳುವ ಮೂಲಕ ಜಾಗೃತಿ ಮೂಡಿಸಿದರು.
   ಕೊರೋನಾ ೨ನೇ ಅಲೆ ಹಿನ್ನಲೆಯಲ್ಲಿ ಸಾರ್ವಜನಿಕರು ಎಚ್ಚರ ವಹಿಸುವ ಜೊತೆಗೆ ಮಾಸ್ಕ್ ಬಳಕೆಯೊಂದಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಸ್ಯಾನಿಟೈಜರ್ ಬಳಸುವ ಜೊತೆಗೆ ವೈಯಕ್ತಿಕ ಸ್ವಚ್ಛತೆಗೆ ಗಮನ ಹರಿಸಬೇಕು.  ಲಸಿಕೆ ಅಗತ್ಯವಿರುವವರು ತಪ್ಪದೇ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಭ್ಯವಿರುವ ಲಸಿಕೆ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು. ಆಸ್ಪತ್ರೆ ಮುಖ್ಯ ವ್ಯದ್ಯಾಧಿಕಾರಿ ಡಾ. ಓ. ಮಲ್ಲಪ್ಪ ಹಾಗು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಯುಗಾದಿ ಜೂಜೂ ತಪ್ಪಿಸಲು ಗ್ರಾಮಸ್ಥರಿಂದ ಹೊಸ ಪ್ರಯೋಗ

ಯುವ ಸಮುದಾಯ ಸೆಳೆಯಲು ಕ್ರಿಕೆಟ್ ಪಂದ್ಯಾವಳಿ ಆಯೋಜನೆ, ಜಾಗೃತಿ


ಭದ್ರಾವತಿ ತಾಲೂಕಿನ ಗೋಣಿಬೀಡು ಗ್ರಾಮದಲ್ಲಿ ಯುಗಾದಿ ಹಬ್ಬದಂದು ಜೂಜೂ ತಪ್ಪಿಸುವ ನಿಟ್ಟಿನಲ್ಲಿ ಗ್ರಾಮಸ್ಥರೆಲ್ಲರೂ ಸೇರಿ ಆಯೋಜಿಸಲಾಗಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ವಿಜೇತರಾದ ತಂಡಗಳಿಗೆ ಗ್ರಾಮದ ಮುಖಂಡ ತ್ಯಾಗರಾಜ್ ಬಹುಮಾನಗಳನ್ನು ವಿತರಿಸಿದರು
    ಭದ್ರಾವತಿ, ಏ. ೧೭: ಯುಗಾದಿ ಎಂದರೆ ಹಿಂದೂಗಳಿಗೆ ವರ್ಷದ ಮೊದಲ ದಿನ, ಬದುಕಿನ ಸಿಹಿ-ಕಹಿಗಳೊಂದಿಗೆ ಸಂಭ್ರಮಿಸುವ ದಿನ. ಈ ನಡುವೆ ಜೂಜೂಗಾರರು ಮತ್ತಷ್ಟು ಸಂಭ್ರಮಿಸುವ ಹಬ್ಬ ದಿನ ಸಹ ಯುಗಾದಿಯಾಗಿದೆ. ಇಂದಿಗೂ ಯುಗಾದಿ ಹಬ್ಬದಂದು ಜೂಜೂ ಆಡುವವರ ಸಂಖ್ಯೆ ಕಡಿಮೆಯಾಗಿಲ್ಲ. ಇತ್ತೀಚಿನ ವರ್ಷಗಳಲ್ಲಿ ನಗರ ಪ್ರದೇಶಗಳಲ್ಲಿ ಈ ಸಂಸ್ಕೃತಿ ಮರೆಯಾಗಿದೆ. ಆದರೆ ಗ್ರಾಮೀಣ ಭಾಗದಲ್ಲಿ ಇಂದಿಗೂ ಉಳಿದುಕೊಂಡಿದೆ. ಸಮಾಜಕ್ಕೆ ಮಾರಕವಾಗಿರುವ ಜೂಜು ಸಂಪೂರ್ಣವಾಗಿ ನಿರ್ಮೂಲನೆಯಾಗಬೇಕು. ಈ ನಿಟ್ಟಿನಲ್ಲಿ ತಾಲೂಕಿನ ಗೋಣಿಬೀಡು ಗ್ರಾಮಸ್ಥರು ಮಾದರಿಯಾಗಿದ್ದಾರೆ.
   ಈ ಬಾರಿ ಯುಗಾದಿ ಹಬ್ಬದಂದು ಗ್ರಾಮದಲ್ಲಿ ಹೇಗಾದರೂ ಮಾಡಿ ಜೂಜು ಆಡುವವರಿಗೆ ಕಡಿವಾಣ ಹಾಕಬೇಕೆಂಬ ಸಂಕಲ್ಪದೊಂದಿಗೆ ಹೊಸ ಪ್ರಯೋಗಕ್ಕೆ ಮುಂದಾಗಿರುವುದು ಇದೀಗ ತಡವಾಗಿ ಬೆಳಕಿಗೆ ಬಂದಿದೆ.
   ಜೂಜು ಆಟದಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳುವ ಯುವ ಸಮುದಾಯವನ್ನು ಸೆಳೆಯಲು ಈ ಬಾರಿ ಗ್ರಾಮಸ್ಥರೆಲ್ಲರೂ ಒಂದಾಗಿ ಯುಗಾದಿ ಹಬ್ಬದಂದು ಕ್ರಿಕೆಟ್ ಪಂದ್ಯಾವಳಿ ಆಯೋಜಿಸುವ  ಮೂಲಕ ಜೂಜು ಆಡುವವರಿಗೆ ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕ್ರಿಕೆಟ್ ಪಂದ್ಯಾವಳಿ ಮೂಲಕ ಜೂಜು ನಿರ್ಮೂಲನೆಯಾಗಬೇಕೆಂಬ ಸಂದೇಶವನ್ನು ಸಾರಿದ್ದಾರೆ.
   ಪಂದ್ಯಾವಳಿಗೆ ಹೆಚ್ಚಿನ ಸಹಕಾರ ನೀಡಿರುವ ಗ್ರಾಮದ ಪ್ರಮುಖರು, ಜಯಕರ್ನಾಟಕ ಸಂಘಟನೆ ಮುಖಂಡರಾದ ತ್ಯಾಗರಾಜ್‌ರವರು ವಿಜೇತ ತಂಡಗಳಿಗೆ ಬಹುಮಾನಗಳನ್ನು ವಿತರಿಸಿ ಅಭಿನಂದಿಸಿದರು. ಗ್ರಾಮದ ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.