Tuesday, June 1, 2021

ಪೆಟ್ರೋಲ್ ಬಂಕ್, ಅಡುಗೆ ಅನಿಲ ವಿತರಣಾ ಸಿಬ್ಬಂದಿಗಳಿಗೆ ಕೊರೋನಾ ಲಸಿಕೆ

ಭದ್ರಾವತಿ ತಾಲೂಕು ಆರೋಗ್ಯ ಇಲಾಖೆ ವತಿಯಿಂದ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ವ್ಯಾಪ್ತಿಯಲ್ಲಿ ಬರುವ ಪೆಟ್ರೋಲ್ ಬಂಕ್ ಸಿಬ್ಬಂದಿಗಳು ಹಾಗು ಅಡುಗೆ ಅನಿಲ ವಿತರಣಾ ಸಿಬ್ಬಂದಿಗಳಿಗೆ ಕೊರೋನಾ ಲಸಿಕೆ ಹಾಕಲಾಯಿತು.
ಭದ್ರಾವತಿ, ಜೂ. ೧:  ತಾಲೂಕು ಆರೋಗ್ಯ ಇಲಾಖೆ ವತಿಯಿಂದ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ವ್ಯಾಪ್ತಿಯಲ್ಲಿ ಬರುವ ಪೆಟ್ರೋಲ್ ಬಂಕ್ ಸಿಬ್ಬಂದಿಗಳು ಹಾಗು ಅಡುಗೆ ಅನಿಲ ವಿತರಣಾ ಸಿಬ್ಬಂದಿಗಳಿಗೆ ಕೊರೋನಾ ಲಸಿಕೆ ಹಾಕಲಾಯಿತು.
ಇಲಾಖೆಯ ಶಿವಮೊಗ್ಗ ಜಂಟಿ ನಿರ್ದೇಶಕರು, ನೋಡಲ್ ಅಧಿಕಾರಿಯಾದ ಮಂಜುನಾಥ್ ಅವರ ಸಹಕಾರದೊಂದಿಗೆ ನಡೆದ ಲಸಿಕಾ ಕಾರ್ಯಕ್ರಮದಲ್ಲಿ ಒಟ್ಟು ೧೮೦ ಮಂದಿಗೆ ಲಸಿಕೆ ಹಾಕಲಾಯಿತು.
ಶಾಸಕ ಬಿ.ಕೆ ಸಂಗಮೇಶ್ವರ್, ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಅಶೋಕ್, ನಗರ ಆಹಾರ ನಿರೀಕ್ಷಕ ಎ.ಟಿ ಬಸವರಾಜ್, ಶಿವಶಂಕರಯ್ಯ ಪೆಟ್ರೋಲ್ ಬಂಕ್ ಮಾಲೀಕ ಶಾಂತು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಭದ್ರಾವತಿ ಪುನಃ ನೂರರ ಗಡಿದಾಟಿದ ಸೋಂಕು

ಭದ್ರಾವತಿ, ಜೂ. ೧: ಕೊರೋನಾ ಸೋಂಕು ತಾಲೂಕಿನಲ್ಲಿ ಪುನಃ ನೂರರ ಗಡಿ ದಾಟಿದ್ದು, ಮಂಗಳವಾರ ೧೧೫ ಸೋಂಕು ಪತ್ತೆಯಾಗಿದೆ.
     ಒಟ್ಟು ೬೦೫ ಮಂದಿಯ ಮಾದರಿ ಸಂಗ್ರಹಿಸಲಾಗಿದ್ದು, ೧೦೫ ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಕೇವಲ ೪೭ ಮಂದಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಒಟ್ಟು ಇದುವರೆಗೂ ೪೯೫೩ ಸೋಂಕು ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ ೪೨೫೬ ಮಂದಿ ಗುಣಮುಖರಾಗಿದ್ದಾರೆ. ಒಟ್ಟು ೩೭೮ ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ನಗರ ವ್ಯಾಪ್ತಿಯಲ್ಲಿ ೮೪ ಹಾಗು ಗ್ರಾಮಾಂತರ ವ್ಯಾಪ್ತಿಯಲ್ಲಿ ೨೮ ಕಂಟೈನ್‌ಮೆಂಟ್ ಜೋನ್‌ಗಳಿವೆ.

ಮಲ ಹೊರುವ ಪದ್ದತಿ ನಿಷೇಧ ಕಾಯ್ದೆ ಜಾರಿಗೊಳಿಸುವಲ್ಲಿ ಇಚ್ಚಾಶಕ್ತಿ ಕೊರತೆ : ಶಿವಣ್ಣ ಎಂ. ಕೋಟೆ ವಿಷಾದ

ಕೋವಿಡ್ ಹಿನ್ನಲೆಯಲ್ಲಿ ಪೌರ ನೌಕರರ ಸಮಸ್ಯೆಗಳನ್ನು ತಕ್ಷಣ ಈಡೇರಿಸಿ


ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ, ಮಾಜಿ ಸಚಿವ ಶಿವಣ್ಣ ಎಂ. ಕೋಟೆ ಭದ್ರಾವತಿ ಹಳೇನಗರದ ಜೈ ಭೀಮಾ ನಗರ ವೀಕ್ಷಣೆ ನಡೆಸಿದರು.
    ಭದ್ರಾವತಿ, ಜೂ. ೧: ರಾಜ್ಯದಲ್ಲಿ ಇಂದಿಗೂ ತಲೆ ಮೇಲೆ ಮಲ ಹೊರುವ ಪದ್ದತಿ ಕಂಡು ಬರುತ್ತಿದ್ದು, ಕಾಯ್ದೆ ಜಾರಿ ನಡುವೆಯೂ ೫,೦೭೦ ಮಂದಿ ಈ ವೃತ್ತಿಯಲ್ಲಿ ತೊಡಗಿರುವುದು ವಿಷಾದನೀಯ ಸಂಗತಿಯಾಗಿದೆ. ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಅಧಿಕಾರಿ ವರ್ಗ ವಿಫಲವಾಗಿದೆ ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ, ಮಾಜಿ ಸಚಿವ ಶಿವಣ್ಣ ಎಂ. ಕೋಟೆ ಆರೋಪಿಸಿದರು.
    ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ೨೦೧೩ರಲ್ಲಿ ಮಲ ಹೊರುವ ಪದ್ದತಿ ನಿಷೇಧಿತ ಕಾಯ್ದೆ ಜಾರಿಗೊಳಿಸಲಾಗಿದೆ. ಆದರೂ ಸಹ ೫,೦೭೦ ಮಂದಿ ಇಂದಿಗೂ ಈ ವೃತ್ತಿಯಲ್ಲಿ ತೊಡಗಿದ್ದಾರೆ. ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಇವರನ್ನು ಗುರುತಿಸಿ ಪುನರ್ವಸತಿ ಕಲ್ಪಿಸಿಕೊಡಬೇಕಾಗಿದೆ. ಈ ನಿಟ್ಟಿನಲ್ಲಿ ಸಂಬಂಧಿತ ಇಲಾಖೆಗಳ ಅಧಿಕಾರಿಗಳ ವರ್ಗ ಇಚ್ಛಾಶಕ್ತಿ ಪ್ರದರ್ಶಿಸಬೇಕಾಗಿದೆ. ಇತ್ತೀಚೆಗೆ ಪಾವಗಡ ತಾಲೂಕಿನ ಸಕ್ಕರೆ ಕಾರ್ಖಾನೆಯೊಂದರಲ್ಲಿ ಮಹಿಳೆಯೊಬ್ಬರನ್ನು ಮಲದ ಗುಂಡಿಗೆ ಉಳಿಸಿ ಸ್ವಚ್ಛಗೊಳಿಸಲಾಗಿದೆ. ಈ ವಿಷಯ ತಿಳಿದು ತಕ್ಷಣ ಕಾರ್ಖಾನೆಗೆ ಭೇಟಿ ನೀಡಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದರು.
      ಗುತ್ತಿಗೆದಾರನಿಂದ ಪೌರ ನೌಕರನಿಗೆ ಅನ್ಯಾಯ:
   ಇತ್ತೀಚೆಗೆ ಜೈ ಭೀಮಾ ನಗರದಲ್ಲಿ ಹತ್ಯೆಯಾಗಿರುವ ಗುತ್ತಿಗೆ ಪೌರ ನೌಕರ ಸುನಿಲ್ ಕುಟುಂಬಕ್ಕೆ ಗುತ್ತಿಗೆದಾರನಿಂದ ಅನ್ಯಾಯವಾಗಿದೆ. ಸುನಿಲ್‌ಗೆ ಜೀವವಿಮೆ ಮಾಡಿಸದಿರುವುದು ಹೆಚ್ಚಿನ ಪರಿಹಾರದ ಮೊತ್ತ ಸಿಗದಿರಲು ಕಾರಣವಾಗಿದೆ. ಇದರಿಂದಾಗಿ ಕುಟುಂಬಸ್ಥರು ತೊಂದರೆ ಅನುಭವಿಸುವಂತಾಗಿದೆ. ಈ  ನಡುವೆಯೂ ಗಂಡನನ್ನು ಕಳೆದುಕೊಂಡಿರುವ ಮಹಿಳೆಗೆ ಸ್ಥಳೀಯ ಸಂಸ್ಥೆಯಲ್ಲಿ ಉದ್ಯೋಗ ಕಲ್ಪಿಸಿಕೊಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಸಮಾಜ ಕಲ್ಯಾಣ ಇಲಾಖೆಯಿಂದ ಬಿಡುಗಡೆಯಾಗಿರುವ ಪರಿಹಾರದ ಮೊತ್ತದಲ್ಲಿ ಸ್ವಲ್ಪ ಮೊತ್ತವನ್ನು ನೀಡಲಾಗಿದೆ ಎಂದರು.
       ಪೌರ ನೌಕರರ ಗುತ್ತಿಗೆ ಪದ್ದತಿ ರದ್ದುಗೊಳಿಸಲು ಚಿಂತನೆ:
  ಗುತ್ತಿಗೆದಾರರಿಂದ ಪೌರ ನೌಕರರಿಗೆ ಅನ್ಯಾಯವಾಗುತ್ತಿದ್ದು, ಕನಿಷ್ಠ ಕೂಲಿ ಸಹ ಪೂರ್ಣ ಪ್ರಮಾಣದಲ್ಲಿ ನೌಕರರ ಕೈ ಸೇರುತ್ತಿಲ್ಲ. ಜೊತೆಗೆ ಇಎಸ್‌ಐ ಮತ್ತು ಪಿ.ಎಫ್ ಯೋಜನೆಗಳಿಗೆ ಗುತ್ತಿಗೆದಾರ ಸರಿಯಾಗಿ ಹಣ ಸಂದಾಯ ಮಾಡುತ್ತಿಲ್ಲ. ಈ ಹಿನ್ನಲೆಯಲ್ಲಿ ಮುಂದಿನ ದಿನಗಳಲ್ಲಿ ಎಲ್ಲಾ ನೌಕರರನ್ನು ಕಾಯಂಗೊಳಿಸಿ ಗುತ್ತಿಗೆ ಪದ್ದತಿಯನ್ನು ರದ್ದುಗೊಳಿಸಲು ಚಿಂತನೆ ಸಹ ನಡೆಸಲಾಗುತ್ತಿದೆ ಎಂದರು.
       ಪೌರ ನೌಕರರಿಗೆ ಸೌಲಭ್ಯಗಳು ಸಮರ್ಪಕವಾಗಿ ಲಭಿಸಲಿ:
   ಕೋವಿಡ್-೧೯ರ ಪರಿಣಾಮ ಪೌರ ನೌಕರರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಈ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ, ಬೆಂಗಳೂರು ಮಹಾನಗರ ಪಾಲಿಕೆ ಹಾಗು ಸ್ಥಳೀಯ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರ ನೌಕರರ ಸಮಸ್ಯೆಗಳನ್ನು ತಕ್ಷಣ ಬಗೆಹರಿಸುವಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಲಾಗುತ್ತಿದೆ ಎಂದರು.
      ಜೈ ಭೀಮಾ ನಗರ ವೀಕ್ಷಣೆ:
   ಪೌರ ಕಾರ್ಮಿಕರು, ದಲಿತರು ಹೆಚ್ಚಾಗಿ ವಾಸಿಸುತ್ತಿರುವ ನಗರದ ಹೃದಯ ಭಾಗದಲ್ಲಿರುವ ಜೈ ಭೀಮಾ ನಗರದಲ್ಲಿ ಶಿವಣ್ಣ ಎಂ. ಕೋಟೆ ವೀಕ್ಷಣೆ ನಡೆಸಿದರು.
   ಸ್ಥಳೀಯರು ಮೂಲ ಸೌಲಭ್ಯಗಳ ಕೊರತೆಯಿಂದ ಅನುಭವಿಸುತ್ತಿರುವ ಸಮಸ್ಯೆಗಳನ್ನು ಕಂಡು ಸ್ಥಳೀಯ ಆಡಳಿತ ವಿರುದ್ಧ ಅಸಮಾಧಾನ ಸಹ ವ್ಯಕ್ತಪಡಿಸಿದರು. ಜೊತೆಗೆ ಪೌರ ನೌಕರರಿಗೆ ಗೃಹ ಭಾಗ್ಯ ಯೋಜನೆಯಡಿ ನಿರ್ಮಾಣಗೊಳ್ಳುತ್ತಿರುವ ವಸತಿ ಸಂಕೀರ್ಣಗಳ ಕಾಮಗಾರಿ ಸಹ ಪರಿಶೀಲನೆ ನಡೆಸಿದರು.
     ಜಿಲ್ಲಾ ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯ, ದಲಿತ ಮುಖಂಡ ಚಿನ್ನಯ್ಯ, ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ಅಧ್ಯಕ್ಷ ಮಂಜುನಾಥ್, ನಗರಸಭೆ ಕಂದಾಯಾಧಿಕಾರಿ ರಾಜ್‌ಕುಮಾರ್, ಪರಿಸರ ಅಭಿಯಂತರ ಪ್ರಭಾಕರ್, ಹಿರಿಯ ಆರೋಗ್ಯ ನಿರೀಕ್ಷ ಆರ್.ಬಿ ಸತೀಶ್, ಸೂಪರ್ ವೈಸರ್ ಗೋವಿಂದ, ಪೊಲೀಸ್ ನಗರ ವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ, ಹಳೇನಗರ ಪೊಲೀಸ್ ಠಾಣೆ ಪ್ರಭಾರಿ ಸಬ್‌ಇನ್ಸ್‌ಪೆಕ್ಟರ್ ಕವಿತಾ, ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.



ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ, ಮಾಜಿ ಸಚಿವ ಶಿವಣ್ಣ ಎಂ. ಕೋಟೆ ಭದ್ರಾವತಿ ಹಳೇನಗರದ ಜೈ ಭೀಮಾ ನಗರ ವೀಕ್ಷಣೆ ಸಂದರ್ಭದಲ್ಲಿ ಕೊಳಕು ಸ್ಥಳದಲ್ಲಿ ಕುಡಿಯುವ ನೀರಿನ ನಲ್ಲಿ ಸಂಪರ್ಕ ಕಲ್ಪಿಸಿರುವುದು ಹಾಗು ಚರಂಡಿಯಲ್ಲಿ ಸ್ವಚ್ಚತೆ ಇಲ್ಲದಿರುವುದನ್ನು ಕಂಡು ಸ್ಥಳೀಯ ಆಡಳಿತದ ವಿರುದ್ಧ ಅಸಮಾಧಾನ ತೋರ್ಪಡಿಸಿದರು.


ಹತ್ಯೆಯಾದ ಗುತ್ತಿಗೆ ಪೌರ ನೌಕರನ ಮನೆಗೆ ಶಿವಣ್ಣ ಎಂ. ಕೋಟೆ ಭೇಟಿ

ಕುಟುಂಬಸ್ಥರಿಗೆ ಸಾಂತ್ವನ, ನಗರಸಭೆಯಿಂದ ೫೦ ಸಾವಿರ ರು. ಪರಿಹಾರ


ಭದ್ರಾವತಿ ಜೈ ಭೀಮಾ ನಗರದಲ್ಲಿ ಇತ್ತೀಚೆಗೆ ಕ್ಷುಲ್ಲಕ ಕಾರಣಕ್ಕೆ ಹತ್ಯೆಯಾದ ಗುತ್ತಿಗೆ ಪೌರ ನೌಕರ ಸುನಿಲ್ ಮನೆಗೆ ಮಂಗಳವಾರ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ, ಮಾಜಿ ಸಚಿವ ಶಿವಣ್ಣ ಎಂ. ಕೋಟೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ನಗರಸಭೆಯಿಂದ ೫೦ ಸಾವಿರ ರು. ಪರಿಹಾರದ ಚೆಕ್ ವಿತರಿಸಿದರು.
    ಭದ್ರಾವತಿ, ಜೂ. ೧: ಇತ್ತೀಚಿಗೆ ಜೈ ಭೀಮಾ ನಗರದಲ್ಲಿ ಹತ್ಯೆಯಾದ ನಗರಸಭೆ ಗುತ್ತಿಗೆ ಪೌರ ನೌಕರನ ಕುಟುಂಬಕ್ಕೆ ನಗರಸಭೆ ವತಿಯಿಂದ ೫೦ ಸಾವಿರ ರು. ಪರಿಹಾರದ ಚೆಕನ್ನು ಮಂಗಳವಾರ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ, ಮಾಜಿ ಸಚಿವ ಶಿವಣ್ಣ ಎಂ. ಕೋಟೆ ಕುಟುಂಬಸ್ಥರಿಗೆ ವಿತರಿಸಿದರು.
    ಆಯೋಗದ ಕಾರ್ಯದರ್ಶಿ ಆರ್. ರಮಾ, ಶಿವಮೊಗ್ಗ ಉಪವಿಭಾಗಾಧಿಕಾರಿ ಟಿ.ವಿ ಪ್ರಕಾಶ್, ಸಮಾಜ ಕಲ್ಯಾಣ ಇಲಾಖೆ ಜಿಲ್ಲಾ ಉಪನಿರ್ದೇಶಕರು, ನಗರಸಭೆ ಪೌರಾಯುಕ್ತ ಪರಮೇಶ್ ಸೇರಿದಂತೆ ಇನ್ನಿತರ ಅಧಿಕಾರಿಗಳ ತಂಡದೊಂದಿಗೆ ಜೈ ಭೀಮಾ ನಗರಕ್ಕೆ ಭೇಟಿ ನೀಡಿದ ಅಧ್ಯಕ್ಷರು, ಹತ್ಯೆಯಾದ ಗುತ್ತಿಗೆ ಪೌರ ನೌಕರ ಸುನಿಲ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಸರ್ಕಾರದಿಂದ ಲಭಿಸುವ ಸೌಲಭ್ಯಗಳನ್ನು ಕಲ್ಪಿಸಿಕೊಡುವುದಾಗಿ ಭರವಸೆ ನೀಡಿದರು.
    ಜಿಲ್ಲಾ ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯ, ದಲಿತ ಮುಖಂಡ ಚಿನ್ನಯ್ಯ, ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ಅಧ್ಯಕ್ಷ ಮಂಜುನಾಥ್, ನಗರಸಭೆ ಕಂದಾಯಾಧಿಕಾರಿ ರಾಜ್‌ಕುಮಾರ್, ಪರಿಸರ ಅಭಿಯಂತರ ಪ್ರಭಾಕರ್, ಹಿರಿಯ ಆರೋಗ್ಯ ನಿರೀಕ್ಷ ಆರ್.ಬಿ ಸತೀಶ್, ಸೂಪರ್ ವೈಸರ್ ಗೋವಿಂದ, ಪೊಲೀಸ್ ನಗರ ವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ, ಹಳೇನಗರ ಪೊಲೀಸ್ ಠಾಣೆ ಪ್ರಭಾರಿ ಸಬ್‌ಇನ್ಸ್‌ಪೆಕ್ಟರ್ ಕವಿತಾ, ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Monday, May 31, 2021

ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎನ್. ಕೃಷ್ಣಪ್ಪರಿಗೆ ಬೀಳ್ಕೊಡುಗೆ


ಭದ್ರಾವತಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸಿ ಸೋಮವಾರ ನಿವೃತ್ತಿ ಹೊಂದಿದ ಎನ್. ಕೃಷ್ಣಪ್ಪ ಅವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಬೀಳ್ಕೊಡುಗೆ ನೀಡಲಾಯಿತು.
   ಭದ್ರಾವತಿ, ಮೇ. ೨೧: ಸಮಾಜ ಕಲ್ಯಾಣ ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸಿ ಸೋಮವಾರ ನಿವೃತ್ತಿ ಹೊಂದಿದ ಎನ್. ಕೃಷ್ಣಪ್ಪ ಅವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಬೀಳ್ಕೊಡುಗೆ ನೀಡಲಾಯಿತು.
    ಎನ್. ಕೃಷ್ಣಪ್ಪ ಸತತವಾಗಿ ೪ ಬಾರಿ ಸಂಘದ ತಾಲೂಕು ಶಾಖೆ ಅಧ್ಯಕ್ಷರಾಗಿ ಹಾಗು ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ತಮ್ಮ ಅವಧಿಯಲ್ಲಿ ಸಂಘವನ್ನು ಸದೃಢವಾಗಿ ಕಟ್ಟಿ ಬೆಳೆಸುವಲ್ಲಿ ಹೆಚ್ಚಿನ ಶ್ರಮವಹಿಸಿದ್ದಾರೆ. ಅಲ್ಲದೆ ಸಮಾಜ ಕಲ್ಯಾಣ ಇಲಾಖೆಯಲ್ಲಿ ವ್ಯವಸ್ಥಾಪಕರಾಗಿ, ಪ್ರಭಾರ ಸಹಾಯಕ ನಿರ್ದೇಶಕರಾಗಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಈ ಹಿನ್ನಲೆಯಲ್ಲಿ ಅವರನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ನೇತೃತ್ವದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.
    ಇದೆ ಸಂದರ್ಭದಲ್ಲಿ ಪ್ರಭಾರಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಹಳೇನಗರದ ಸಂಚಿಯ ಹೊನ್ನಮ್ಮ ಸರ್ಕಾರಿ ಬಾಲಕಿಯರ ಪದವಿ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಹ ಶಿಕ್ಷಕರಾದ ಬಿ. ಸಿದ್ದಬಸಪ್ಪ ಅವರನ್ನು ಸಹ ಸನ್ಮಾನಿಸಿ ಅಭಿನಂದಿಸಲಾಯಿತು.
   ಪ್ರಮುಖರಾದ ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಬಿ.ಎಲ್ ರಂಗಸ್ವಾಮಿ, ಎಂ.ಎಸ್ ಬಸರಾಜ್, ಎಸ್.ಕೆ ಮೋಹನ್, ಸಿ. ಜಯಪ್ಪ, ಉಪನ್ಯಾಸಕ ಡಾ. ಧನಂಜಯ, ರಾಜ್‌ಕುಮಾರ್, ಶ್ರೀಕಾಂತ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಭದ್ರಾವತಿಯಲ್ಲಿ ೮೨ ಸೋಂಕು : ೬ ಬಲಿ

ಭದ್ರಾವತಿ, ಮೇ. ೩೧: ತಾಲೂಕಿನಲ್ಲಿ ಇದೀಗ ಕೊರೋನಾ ಸೋಂಕು ಕಡಿಮೆಯಾಗುವ ಲಕ್ಷಣಗಳು ಕಂಡು ಬರುತ್ತಿದೆ.  ಸೋಮವಾರ ೮೨ ಸೋಂಕು ಪತ್ತೆಯಾಗಿದ್ದು, ಒಂದೇ ದಿನ ೬ ಮಂದಿ ಬಲಿಯಾಗಿದ್ದಾರೆ.
   ಸುಮಾರು ೧೦ ದಿನಗಳಿಂದ ನೂರು, ಇನ್ನೂರರ ಗಡಿಯಾಚೆಯಲ್ಲೇ ಇದ್ದ ಸೋಂಕಿನ ಪ್ರಮಾಣ ಇದೀಗ ಕಡಿಮೆಯಾಗಿದೆ. ಒಟ್ಟು ೪೪೦ ಮಂದಿಯ ಮಾದರಿ ಸಂಗ್ರಹಿಸಲಾಗಿದ್ದು, ೮೨ ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ೭೬ ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಇದುವರೆಗೂ ೪೯೩೦ ಸೋಂಕು ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ ೪೨೮೫ ಮಂದಿ ಗುಣಮುಖರಾಗಿದ್ದಾರೆ. ಉಳಿದಂತೆ ೬೪೫ ಸಕ್ರಿಯ ಪ್ರಕರಣಗಳಿದ್ದು, ಒಂದೇ ದಿನ ೬ ಮಂದಿ ಬಲಿಯಾಗಿದ್ದಾರೆ.
    ತಾಲೂಕಿನಲ್ಲಿ ಇದುವರೆಗೂ ೧೩೨ ಮಂದಿ ಮೃತಪಟ್ಟಿದ್ದು, ೩೮೬ ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಗರ ಭಾಗದಲ್ಲಿ ೮೪ ಹಾಗು ಗ್ರಾಮಾಂತರ ಭಾಗದಲ್ಲಿ ೨೮ ಕಂಟೈನ್‌ಮೆಂಟ್ ಜೋನ್‌ಗಳಿವೆ.

ಕೋವಿಡ್ ಲಸಿಕಾ ಕೇಂದ್ರ ಉದ್ಘಾಟನೆ

ಭದ್ರಾವತಿ ನಗರಸಭೆ ವ್ಯಾಪ್ತಿಯ ಕಾಗದನಗರ ಮತ್ತು ಉಜ್ಜನಿಪುರ ಸುತ್ತಮುತ್ತಲಿನ ನಿವಾಸಿಗಳಿಗೆ ಅನುಕೂಲವಾಗುವಂತೆ ಕಾಗದನಗರದ ಸರ್ಕಾರಿ ಪಶ್ಚಿಮ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೋವಿಡ್ ಲಸಿಕಾ ಕೇಂದ್ರ ತೆರೆಯಲಾಗಿದ್ದು, ಸೋಮವಾರ ನಗರಸಭಾ ಸದಸ್ಯರಾದ ಬಿ.ಕೆ ಮೋಹನ್ ಮತ್ತು ಬಸವರಾಜ ಬಿ. ಆನೇಕೊಪ್ಪ ಉದ್ಘಾಟಿಸಿದರು.
   ಭದ್ರಾವತಿ, ಮೇ. ೩೧: ನಗರಸಭೆ ವ್ಯಾಪ್ತಿಯ ಕಾಗದನಗರ ಮತ್ತು ಉಜ್ಜನಿಪುರ ಸುತ್ತಮುತ್ತಲಿನ ನಿವಾಸಿಗಳಿಗೆ ಅನುಕೂಲವಾಗುವಂತೆ ಕಾಗದನಗರದ ಸರ್ಕಾರಿ ಪಶ್ಚಿಮ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೋವಿಡ್ ಲಸಿಕಾ ಕೇಂದ್ರ ತೆರೆಯಲಾಗಿದ್ದು, ಸೋಮವಾರ ನಗರಸಭಾ ಸದಸ್ಯರಾದ ಬಿ.ಕೆ ಮೋಹನ್ ಮತ್ತು ಬಸವರಾಜ ಬಿ. ಆನೇಕೊಪ್ಪ ಉದ್ಘಾಟಿಸಿದರು.
   ಈ ವ್ಯಾಪ್ತಿಯಲ್ಲಿ ನಗರಸಭೆ ವಾರ್ಡ್ ನಂ.೧೯, ೨೦ ಮತ್ತು ೨೧ ಒಟ್ಟು ೩ ವಾರ್ಡ್‌ಗಳಿದ್ದು, ಈ ವಾರ್ಡ್‌ಗಳ ನಿವಾಸಿಗಳಿಗೆ ಅನುಕೂಲವಾಗುವಂತೆ ಲಸಿಕಾ ಕೇಂದ್ರವನ್ನು ತೆರೆಯಲಾಗಿದೆ. ಶನಿವಾರ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಉಜ್ಜನಿಪುರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನಗರಸಭಾ ಸದಸ್ಯ ಬಸವರಾಜ ಬಿ. ಆನೇಕೊಪ್ಪರವರು ಎಂಪಿಎಂ ಆಸ್ಪತ್ರೆಯಲ್ಲಿ ಹೆಚ್ಚುವರಿ ಕೇಂದ್ರ ತೆರೆಯಲು ಮನವಿ ಮಾಡಿದ್ದರು. ಹೆಚ್ಚುವರಿ ಕೇಂದ್ರದ ಬದಲು ವಿಶಾಲವಾದ ಸ್ಥಳದಲ್ಲಿ ಒಂದೇ ಕಡೆ ಲಸಿಕಾ ಕೇಂದ್ರ ತೆರೆಯುವುದರಿಂದ ಹೆಚ್ಚಿನ ಅನುಕೂಲವಾಗಲಿದೆ ಎಂಬ ಉದ್ದೇಶದೊಂದಿಗೆ ನಗರ ಆರೋಗ್ಯ ಕೇಂದ್ರದಲ್ಲಿ ತೆರೆಯಲಾಗಿದ್ದ ಲಸಿಕಾ ಕೇಂದ್ರವನ್ನು ಇದೀಗ ಪಶ್ಚಿಮ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಸ್ಥಳಾಂತರಿಸಲಾಗಿದೆ.
   ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ವೈದ್ಯ ಡಾ. ಗಿರಿಧರ್, ನಗರಸಭೆ ಮಾಜಿ ಸದಸ್ಯ ವೆಂಕಟಯ್ಯ, ಮುಖಂಡರಾದ ಜಿ. ರಾಜು, ವೆಂಕಟೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.