Tuesday, July 20, 2021

ವರ್ಗಾವಣೆಗೊಂಡ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್‌ಗೆ ಅಭಿನಂದನೆ

ಸುಮಾರು ೯ ತಿಂಗಳ ಕಾಲ ಭದ್ರಾವತಿ ತಾಲೂಕಿನ ದಂಡಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ಅವರನ್ನು ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
ಭದ್ರಾವತಿ, ಜು. ೨೦: ಸುಮಾರು ೯ ತಿಂಗಳ ಕಾಲ ತಾಲೂಕಿನ ದಂಡಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ಅವರನ್ನು ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
ಸಮಿತಿ ಹೋರಾಟಕ್ಕೆ ಸ್ಪಂದಿಸಿದ ತಹಸೀಲ್ದಾರ್‌ಗೆ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ನೇತೃತ್ವದಲ್ಲಿ ಅಭಿನಂದಿಸುವ ಜೊತೆಗೆ ಇನ್ನೂ ಉನ್ನತ ಹುದ್ದೆ ಲಭಿಸಲಿ ಎಂದು ಹಾರೈಸಲಾಯಿತು.
ತಹಸೀಲ್ದಾರ್ ಗ್ರೇಡ್-೨ ರಂಗಮ್ಮ, ಸಮಿತಿಯ ಪ್ರಮುಖರಾದ ಸುಬ್ಬೇಗೌಡ, ಎರೇಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಶಿವರಾಮ್, ಎನ್. ಮಂಜುನಾಥ್, ಯುವ ಕಾಂಗ್ರೆಸ್ ಗ್ರಾಮಾಂತರ ಘಟಕದ ಉಪಾಧ್ಯಕ್ಷ ತಬ್ರೆಸ್‌ಖಾನ್, ಕಾರ್ಯದರ್ಶಿ ಶಂಕರ್, ಕಿರಣ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಭದ್ರಾವತಿಯಲ್ಲಿ ೧೩ ಕೊರೋನಾ ಸೋಂಕು

ಭದ್ರಾವತಿ, ಜು. ೨೦: ತಾಲೂಕಿನಲ್ಲಿ ಕೊರೋನಾ ಸೋಂಕಿನ ಪ್ರಮಾಣದಲ್ಲಿ ಕಳೆದ ೩-೪ ದಿನಗಳಿಂದ ೧೦ರ ಗಡಿ ದಾಟಿದ್ದು, ಮಂಗಳವಾರ ೧೩ ಪ್ರಕರಣಗಳು ಪತ್ತೆಯಾಗಿವೆ.
    ಒಟ್ಟು ೬೭೨ ಮಂದಿಯ ಮಾದರಿ ಸಂಗ್ರಹಿಸಲಾಗಿದ್ದು, ೧೩ ಜನರಲ್ಲಿ ಸೋಂಕು ದೃಢಪಟ್ಟಿದೆ. ೭ ಜನ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಇದುವರೆಗೂ ತಾಲೂಕಿನಲ್ಲಿ ಒಟ್ಟು ೭೫೧೪ ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ೭೪೬೦ ಜನರು ಗುಣಮುಖರಾಗಿದ್ದಾರೆ. ೫೪ ಸಕ್ರಿಯ ಪ್ರಕರಣಗಳು ಬಾಕಿ ಉಳಿದಿದ್ದು, ಇದುವರೆಗೂ ಸೋಂಕಿಗೆ ೧೫೫ ಜನ ಬಲಿಯಾಗಿದ್ದಾರೆ. ನಗರ ವ್ಯಾಪ್ತಿಯಲ್ಲಿ ೨ ಕಂಟೈನ್‌ಮೆಂಟ್ ಜೋನ್‌ಗಳು ಸಕ್ರಿಯವಾಗಿದ್ದು, ಇದುವರೆಗೂ ೧೭೦ ಜೋನ್‌ಗಳನ್ನು ತೆರವುಗೊಳಿಸಲಾಗಿದೆ.

ಲಿಡ್ಕರ್‌ಗೆ ಎರವಲು ಸೇವೆಗೆ ನಿಯೋಜನೆಗೊಂಡ ಉದ್ಯೋಗಿ ರಮೇಶ್‌ಗೆ ಬೀಳ್ಕೊಡುಗೆ

ರಾಜ್ಯ ಸರ್ಕಾರಿ ಸ್ವಾಮ್ಯದ ಭದ್ರಾವತಿ ಮೈಸೂರು ಕಾಗದ ಕಾರ್ಖಾನೆಯ ನಗರಾಡಳಿತ ವಿಭಾಗದ ಉದ್ಯೋಗಿ ರಮೇಶ್ ಕರ್ನಾಟಕ ಲೆದರ್ ಇಂಡಸ್ಟ್ರೀಸ್ ಡೆವಲಪ್‌ಮೆಂಟ್ ಕಾರ್ಪೋರೇಷನ್ ಲಿಮಿಟೆಡ್(ಲಿಡ್ಕರ್)ಗೆ ಎರವಲು ಉದ್ಯೋಗಿಯಾಗಿ ಸೇರ್ಪಡೆಗೊಂಡ ಹಿನ್ನಲೆಯಲ್ಲಿ ಅವರನ್ನು ಮಂಗಳವಾರ ನಗರಾಡಳಿತ ವಿಭಾಗದಿಂದ ಸನ್ಮಾನಿಸಿ ಬೀಳ್ಕೊಡುಗೆ ನೀಡಲಾಯಿತು.
   ಭದ್ರಾವತಿ, ಜು. ೨೦: ರಾಜ್ಯ ಸರ್ಕಾರಿ ಸ್ವಾಮ್ಯದ ನಗರದ ಮೈಸೂರು ಕಾಗದ ಕಾರ್ಖಾನೆಯ ನಗರಾಡಳಿತ ವಿಭಾಗದ ಉದ್ಯೋಗಿ ರಮೇಶ್ ಕರ್ನಾಟಕ ಲೆದರ್ ಇಂಡಸ್ಟ್ರೀಸ್ ಡೆವಲಪ್‌ಮೆಂಟ್ ಕಾರ್ಪೋರೇಷನ್ ಲಿಮಿಟೆಡ್(ಲಿಡ್ಕರ್)ಗೆ ಎರವಲು ಉದ್ಯೋಗಿಯಾಗಿ ಸೇರ್ಪಡೆಗೊಂಡ ಹಿನ್ನಲೆಯಲ್ಲಿ ಅವರನ್ನು ಮಂಗಳವಾರ ನಗರಾಡಳಿತ ವಿಭಾಗದಿಂದ ಸನ್ಮಾನಿಸಿ ಬೀಳ್ಕೊಡುಗೆ ನೀಡಲಾಯಿತು.
    ಎಂಪಿಎಂ ಕಾರ್ಖಾನೆ ಸಂಪೂರ್ಣವಾಗಿ ಸ್ಥಗಿತಗೊಂಡಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಕಾಯಂ ನೌಕರರನ್ನು ವಿವಿಧ ನಿಗಮ-ಮಂಡಳಿಗಳಲ್ಲಿ ಎರವಲು ಸೇವೆಗೆ ನಿಯೋಜನೆಗೊಳಿಸಲು ಆದೇಶಿಸಿದ್ದು, ಈಗಾಗಲೇ ಬಹುತೇಕ ಉದ್ಯೋಗಿಗಳು ವಿವಿಧ ನಿಗಮ ಮಂಡಳಿಗಳಲ್ಲಿ ಎರವಲು ಸೇವೆಗೆ ನಿಯೋಜನೆಗೊಂಡಿದ್ದಾರೆ.
   ನಗರಾಡಳಿತ ವಿಭಾಗದಲ್ಲಿ ಉದ್ಯೋಗಿಯಾಗಿರುವ ರಮೇಶ್‌ರವರು ಲಿಡ್ಕರ್ ಬೆಳಗಾವಿ ಶಾಖೆಯಲ್ಲಿ ಎರವಲು ಸೇವೆಗೆ ನಿಯೋಜನೆಗೊಂಡಿದ್ದಾರೆ. ಇವರನ್ನು ನಗರಾಡಳಿತಾಧಿಕಾರಿ ಸತೀಶ್, ನಗರಸಭೆ ಸದಸ್ಯ ಬಸವರಾಜ ಬಿ. ಆನೇಕೊಪ್ಪ, ಸಹದ್ಯೋಗಿ ಎಪಿಪಿ ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್ ಸೇರಿದಂತೆ ಇನ್ನಿತರರು ಸನ್ಮಾನಿಸಿ ಬೀಳ್ಕೊಡುಗೆ ನೀಡಿದರು.

Monday, July 19, 2021

ಯಶಸ್ವಿವಾಗಿ ನಡೆದ ಮೊದಲ ದಿನದ ಎಸ್‌ಎಸ್‌ಎಲ್‌ಸಿ ಪರೀಕ್ಷೆ : ೪,೫೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರು

ಭದ್ರಾವತಿ ನ್ಯೂಟೌನ್ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಸೋಮವಾರ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗಿ ಹಿಂದಿಗುತ್ತಿರುವ ವಿದ್ಯಾರ್ಥಿಗಳು.
    ಭದ್ರಾವತಿ, ಜು. ೧೯: ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸೋಮವಾರ ನಡೆಸಿದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ತಾಲೂಕಿನಾದ್ಯಂತ ಯಶಸ್ವಿಯಾಗಿದ್ದು, ಸುಮಾರು ೪೫೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವ ಮೂಲಕ ಗಮನ ಸೆಳೆದರು.
   ಮೊದಲ ಬಾರಿಗೆ ಪರೀಕ್ಷಾ ಮಂಡಳಿ ನಡೆಸಿದ ಓ.ಎಂ.ಆರ್ ಗುರುತು ಮಾಡುವ ಹೊಸ ಮಾದರಿ ಪರೀಕ್ಷೆಗೆ ಪೂರಕ ಸ್ಪಂದನೆ ವ್ಯಕ್ತವಾಗಿದ್ದು, ವಿಷಯ-೧ಕ್ಕೆ ೪,೫೧೮, ವಿಷಯ-೨ಕ್ಕೆ ೪,೩೯೧ ಮತ್ತು ವಿಷಯ-೩ಕ್ಕೆ ೪,೨೬೧ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು, ಈ ಪೈಕಿ ವಿಷಯ-೧ಕ್ಕೆ ೧೮, ವಿಷಯ-೨ಕ್ಕೆ ೧೪ ಹಾಗು ವಿಷಯ-೩ಕ್ಕೆ ೧೨ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
    ಅನಾರೋಗ್ಯದಿಂದ ಓರ್ವ ವಿದ್ಯಾರ್ಥಿ ವಿಶೇಷ ಕೊಠಡಿಯಲ್ಲಿ ಹಾಗು ಕೊರೋನಾ ಸೋಂಕಿಗೆ ಒಳಗಾದ ಓರ್ವ ವಿದ್ಯಾರ್ಥಿ ಕೋವಿಡ್ ಆರೈಕೆ ಕೇಂದ್ರದಲ್ಲಿ ಪರೀಕ್ಷೆ ಪರೀಕ್ಷೆ ಬರೆದಿದ್ದು, ವಸತಿ ನಿಲಯಗಳ ೨೦ ವಿದ್ಯಾರ್ಥಿಗಳು ಹಾಗು ೬೧ ವಲಸೆ ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸಿದ್ದಾರೆ.
   ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಮುಂಜಾಗ್ರತೆ ವಹಿಸಲಾಯಿತು.

ಭದ್ರಾವತಿಯಲ್ಲಿ ೧೨ ಸೋಂಕು ಪತ್ತೆ

ಭದ್ರಾವತಿ, ಜು. ೧೯: ತಾಲೂಕಿನಲ್ಲಿ ಕೊರೋನಾ ಸೋಂಕಿನ ಪ್ರಮಾಣ ಇಳಿಕೆಯಾಗಿದ್ದು, ಆದರೂ ಸಹ ಆತಂಕ ಎದುರಾಗಿದೆ. ಸೋಮವಾರ ೧೨ ಸೋಂಕು ದೃಢಪಟ್ಟಿದ್ದು, ಒಬ್ಬರು ಬಲಿಯಾಗಿದ್ದಾರೆ.
      ಒಟ್ಟು ೭೮೨ ಮಾದರಿ ಸಂಗ್ರಹಿಸಲಾಗಿದ್ದು, ಗ್ರಾಮಾಂತರ ಭಾಗದಲ್ಲಿ ೩ ಹಾಗು ನಗರ ಭಾಗದಲ್ಲಿ ೯ ಸೇರಿದಂತೆ ಒಟ್ಟು ೧೨ ಜನರಲ್ಲಿ ಸೋಂಕು ಪತ್ತೆಯಾಗಿದೆ. ೪ ಜನ ಆಸ್ಪತ್ರೆಗಳಿಂದ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ತಾಲೂಕಿನಲ್ಲಿ ಇದುವರೆಗೂ ಒಟ್ಟು ೭೫೦೧ ಜನರಿಗೆ ಸೋಂಕು ತಗುಲಿದ್ದು, ಈ ಪೈಕಿ ೭೪೫೩ ಜನರು ಗುಣಮುಖರಾಗಿದ್ದಾರೆ. ಒಟ್ಟು ೪೮ ಸಕ್ರಿಯ ಪ್ರಕರಣಗಳಿದ್ದು, ನಗರ ಭಾಗದಲ್ಲಿ ಒಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.
    ಇದುವರೆಗೂ ಸೋಂಕಿಗೆ ೧೫೫ ಜನರು ಬಲಿಯಾಗಿದ್ದಾರೆ. ನಗರ ಭಾಗದಲ್ಲಿ ೨ ಕಂಟೈನ್‌ಮೆಂಟ್ ಜೋನ್‌ಗಳು ಸಕ್ರಿಯವಾಗಿದ್ದು, ಇದುವರೆಗೂ ೧೨೦ ಜೋನ್‌ಗಳನ್ನು ತೆರವುಗೊಳಿಸಲಾಗಿದೆ.

ಅರಣ್ಯನಾಶಕ್ಕೆ ಕಡಿವಾಣ ಹಾಕಿ, ಪರಿಸರ ಮಾಲಿನ್ಯ ತಡೆಗಟ್ಟಿ : ಅನಂತ ಹೆಗಡೆ ಆಶೀಸರ

ಭದ್ರಾವತಿ ನಗರಸಭೆ ವ್ಯಾಪ್ತಿ ವಾರ್ಡ್ ನಂ.೨೯ರ ಸಿದ್ದಾಪುರ ಎನ್‌ಟಿಬಿ ಲೇ ಔಟ್ ಉದ್ಯಾನವನದಲ್ಲಿ ಹಮ್ಮಿಕೊಳ್ಳಲಾಗಿದ್ದ 'ಜೀವ ವೈವಿಧ್ಯ ಜಾಗೃತಿ ಅಭಿಯಾನ'ದಡಿ ವೃಕ್ಷಾರೋಪಣ ಕಾರ್ಯಕ್ರಮಕ್ಕೆ ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಆಶೀಸರ ಚಾಲನೆ ನೀಡಿದರು.  
    ಭದ್ರಾವತಿ, ಜು. ೧೯: ಹೆಚ್ಚುತ್ತಿರುವ ಅರಣ್ಯನಾಶಕ್ಕೆ ಕಡಿವಾಣ ಹಾಕುವ ಜೊತೆಗೆ ಪರಿಸರ ಮಾಲಿನ್ಯ ತಡೆಗಟ್ಟಲು ಮುಂದಾಗುವಂತೆ ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಆಶೀಸರ ಮನವಿ ಮಾಡಿದರು.
    ಅವರು ಸೋಮವಾರ ನಗರಸಭೆ ವ್ಯಾಪ್ತಿ ವಾರ್ಡ್ ನಂ.೨೯ರ ಸಿದ್ದಾಪುರ ಎನ್‌ಟಿಬಿ ಲೇ ಔಟ್ ಉದ್ಯಾನವನದಲ್ಲಿ ಹಮ್ಮಿಕೊಳ್ಳಲಾಗಿದ್ದ 'ಜೀವ ವೈವಿಧ್ಯ ಜಾಗೃತಿ ಅಭಿಯಾನ'ದಡಿ ವೃಕ್ಷಾರೋಪಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
    ಅರಣ್ಯ ನಾಶ ತಡೆಗಟ್ಟುವ ನಿಟ್ಟಿನಲ್ಲಿ ಹಲವಾರು ಕಾಯ್ದೆಗಳನ್ನು ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಜಾರಿಗೊಳಿಸಿವೆ. ಆದರೂ ಸಹ ಅರಣ್ಯ ನಾಶಕ್ಕೆ ಕಡಿವಾಣ ಹಾಕಲು ಸಾಧ್ಯವಾಗುತ್ತಿಲ್ಲ. ಅದರಲ್ಲೂ ಭದ್ರಾವತಿ ತಾಲೂಕಿನಲ್ಲಿ ಅರಣ್ಯನಾಶ ಹೆಚ್ಚಿನ ಪ್ರಮಾಣದಲ್ಲಿದ್ದು, ಪ್ರಸ್ತುತ ಅಸ್ತಿತ್ವದಲ್ಲಿರುವ ಅರಣ್ಯವನ್ನಾದರೂ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನಿಸಬೇಕಾಗಿದೆ. ಈ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಹಾಗು ಸ್ಥಳೀಯ ಸಂಸ್ಥೆಗಳು ಜನರ ಸಹಕಾರ ಪಡೆದುಕೊಳ್ಳುವುದು ಅಗತ್ಯವಾಗಿದೆ ಎಂದರು.
    ಭದ್ರಾವತಿ ನಗರದಲ್ಲಿ ಪರಿಸರ ಮಾಲಿನ್ಯ ಸಹ ಹೆಚ್ಚಿನ ಪ್ರಮಾಣದಲ್ಲಿದ್ದು, ತ್ಯಾಜ್ಯ ನಿರ್ವಹಣೆಯನ್ನು ಸಮರ್ಪಕವಾಗಿ ಕೈಗೊಳ್ಳಬೇಕು. ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯುವುದನ್ನು ನಿಯಂತ್ರಿಸಬೇಕು. ಜೊತೆಗೆ ಭದ್ರಾ ನದಿ ಕಲ್ಮಶಗೊಳ್ಳದಂತೆ ಎಚ್ಚರ ವಹಿಸಬೇಕು.  ಈ ನಿಟ್ಟಿನಲ್ಲಿ ಸ್ಥಳೀಯ ನಗರಸಭೆ ಆಡಳಿತ ಹೆಚ್ಚಿನ ಜಾಗೃತಿ ವಹಿಸಬೇಕೆಂದು ಸೂಚಿಸಿದರು.
    ನಗರಸಭೆ ವ್ಯಾಪ್ತಿಯ ಎಲ್ಲಾ ಉದ್ಯಾನವನಗಳಲ್ಲೂ ಸಸಿಗಳನ್ನು ನೆಡುವ ಮೂಲಕ ಅವುಗಳನ್ನು ಪೋಷಿಸಬೇಕು. ಜೊತೆಗೆ ಖಾಲಿ ಇರುವ ಜಾಗಗಳನ್ನು ಗುರುತಿಸಿ ಅಲ್ಲಿಯೂ ಸಸಿಗಳನ್ನು ನೆಡುವ ಕಾರ್ಯಯೋಜನೆ ರೂಪಿಸಿಕೊಳ್ಳಬೇಕು. ಕೆರೆ-ಕಟ್ಟೆಗಳನ್ನು ಗುರುತಿಸಿ ಅವುಗಳ ಸ್ವಚ್ಛತೆ ಕೈಗೊಳ್ಳುವ ಜೊತೆಗೆ ಅಭಿವೃದ್ಧಿಗೊಳಿಸಬೇಕೆಂದು ಸಲಹೆ ನೀಡಿದರು.
     ನಗರಸಭೆ ಆಡಳಿತಾಧಿಕಾರಿಯಾಗಿರುವ ಉಪವಿಭಾಗಾಧಿಕಾರಿ ಟಿ.ವಿ ಪ್ರಕಾಶ್ ಮಾತನಾಡಿ, ನಗರಸಭೆ ವ್ಯಾಪ್ತಿಯಲ್ಲಿ ಪರಿಸರ ಸಂರಕ್ಷಣೆಗೆ ಹೆಚ್ಚಿನ ಗಮನ ಹರಿಸುವುದಾಗಿ ಭರವಸೆ ನೀಡಿದರು.  
    ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ(ಎಸಿಎಫ್) ಸುಬ್ರಮಣ್ಯ ಮಾತನಾಡಿ, ಜೀವ ವೈವಿಧ್ಯ ಮಂಡಳಿ ಕೈಗೊಳ್ಳುತ್ತಿರುವ ಕಾರ್ಯಕ್ಕೆ ಅರಣ್ಯ ಇಲಾಖೆ ಹೆಚ್ಚಿನ ಸಹಕಾರ ನೀಡಲಿದೆ ಎಂದರು.
   ನಗರದ ಸ್ತ್ರೀರೋಗ ತಜ್ಞೆ ಡಾ. ವೀಣಾ ಎಸ್ ಭಟ್ ಮಾತನಾಡಿದರು. ನಗರಸಭೆ ಪೌರಾಯುಕ್ತ ಮನೋಹರ್, ಮಾಜಿ ಸೈನಿಕರ ಸಂಘದ ಕಾರ್ಯದರ್ಶಿ ವೆಂಕಟಗಿರಿ, ವಲಯ ಅರಣ್ಯಾಧಿಕಾರಿ ಮಂಜುನಾಥ್, ಉಪ ವಲಯ ಅರಣ್ಯಾಧಿಕಾರಿ ಬಿ.ಆರ್ ದಿನೇಶ್‌ಕುಮಾರ್,ನಗರಸಭೆ ಕಂದಾಯಾಧಿಕಾರಿ ರಾಜ್‌ಕುಮಾರ್, ಪರಿಸರ ಅಭಿಯಂತರ ಪ್ರಭಾಕರ್, ಹಿರಿಯ ಆರೋಗ್ಯ ನಿರೀಕ್ಷಕಿ ಆಶಾಲತಾ, ಕಿರಿಯ ಆರೋಗ್ಯ ನಿರೀಕ್ಷಕಿ ಶೃತಿ, ಗೋವಿಂದ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


Sunday, July 18, 2021

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಕಲ ಸಿದ್ದತೆ : ಈ ಬಾರಿ ಪರೀಕ್ಷೆಗೆ ೪೪೮೮ ವಿದ್ಯಾರ್ಥಿಗಳು

ಒಟ್ಟು ೨೫ ಪರೀಕ್ಷಾ ಕೇಂದ್ರಗಳು, ಒಂದು ಕೊಠಡಿಯಲ್ಲಿ ೧೦ ರಿಂದ ೧೨ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ


ಭದ್ರಾವತಿ ತಾಲೂಕಿನಲ್ಲಿ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ನೆರವಾಗುವಂತೆ ರೋಟರಿ ಕ್ಲಬ್ ವತಿಯಿಂದ ಸುಮಾರು ೨೦೦೦ ಎನ್ ೯೫ ಮಾಸ್ಕ್‌ಗಳನ್ನು ಉಚಿತವಾಗಿ ಶಿಕ್ಷಣ ಇಲಾಖೆಗೆ ನೀಡಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ, ರೋಟರ್ ಕ್ಲಬ್ ಅಧ್ಯಕ್ಷ ಎಚ್.ವಿ ಆದರ್ಶ, ಕಾರ್ಯದರ್ಶಿ ರಾಘವೇಂದ್ರ ಉಪಾಧ್ಯಾಯ, ಅಡವೀಶಯ್ಯ, ಡಾ. ಕೆ. ನಾಗರಾಜ್, ಉದಯಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
   ಭದ್ರಾವತಿ, ಜು. ೧೮: ತಾಲೂಕಿನಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಕೈಗೊಂಡಿದ್ದು, ಈ ಬಾರಿ ಒಟ್ಟು ೪೪೮೮ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸುತ್ತಿದ್ದಾರೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ ತಿಳಿಸಿದರು.
    ಅವರು ಪತ್ರಿಕೆಯೊಂದಿಗೆ ಮಾತನಾಡಿ, ಜು.೧೯ ಮತ್ತು ೨೨ರಂದು ಎರಡು ದಿನ ಮಾತ್ರ ಈ ಬಾರಿ ಪರೀಕ್ಷೆ ನಡೆಯಲಿದೆ. ತಾಲೂಕಿನಾದ್ಯಂತ ಒಟ್ಟು ೨೫ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಪುನರಾವರ್ತಿತ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು ೪೪೮೮ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಎದುರಿಸುತ್ತಿದ್ದಾರೆ. ಕೊರೋನಾ ಹಿನ್ನಲೆಯಲ್ಲಿ ಹೆಚ್ಚಿನ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಕೊರೋನಾ ಸೋಂಕಿಗೆ ಒಳಗಾದ ವಿದ್ಯಾರ್ಥಿಗಳಿಗೆ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆಯಲ್ಲಿ ಪ್ರತ್ಯೇಕ ಪರೀಕ್ಷಾ ಕೇಂದ್ರ ತೆರೆಯಲಾಗಿದೆ. ಈ ಬಾರಿ ೧೨೪ ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸುತ್ತಿದ್ದು, ಈ ವಿದ್ಯಾರ್ಥಿಗಳಿಗೆ ಬಿ.ಎಚ್ ರಸ್ತೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ ಸಮೀಪದಲ್ಲಿರುವ ಪೂರ್ಣಪ್ರಜ್ಞಾ ಶಾಲೆಯಲ್ಲಿ ಪರೀಕ್ಷಾ ಕೇಂದ್ರ ತೆರೆಯಲಾಗಿದೆ. ವಲಸೆ ವಿದ್ಯಾರ್ಥಿಗಳಿಗೆ ವಾಸಸ್ಥಳದ ಸಮೀಪದಲ್ಲಿರುವ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ ಎಂದರು.
   ಮುನ್ನಚ್ಚರಿಕೆ ಕ್ರಮವಾಗಿ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಅನುಕೂಲವಾಗುವಂತೆ ಒಂದು ಕೊಠಡಿಯಲ್ಲಿ ಕೇವಲ ೧೦ ರಿಂದ ೧೨ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವಿದ್ದು, ಅದರಂತೆ ಒಂದು ಬೆಂಚಿಗೆ ಒಬ್ಬ ವಿದ್ಯಾರ್ಥಿಗೆ ಮಾತ್ರ ಆಸನ ವ್ಯವಸ್ಥೆ ಕಲ್ಪಿಸಲಾಗಿದೆ. ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳಿಗೂ ಇಲಾಖೆ ವತಿಯಿಂದ ಎನ್-೯೫ ಮಾಸ್ಕ್ ವಿತರಿಸಲಾಗುವುದು ಎಂದರು.
ಹೊಸ ಮಾದರಿ ಪರೀಕ್ಷೆ:
    ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ಈ ಬಾರಿ ಓ.ಎಂ.ಆರ್ ಗುರುತು ಮಾಡುವ ಹೊಸ ಮಾದರಿ ಪರೀಕ್ಷೆಯನ್ನು ನಡೆಸುತ್ತಿದ್ದು,  ಒಂದೇ ದಿನ ೩ ವಿಷಯಗಳಿಗೆ ತಲಾ ೧ ಗಂಟೆಯಂತೆ ಒಟ್ಟು ೩ ಗಂಟೆ ಪರೀಕ್ಷೆ ನಡೆಯಲಿದೆ. ಒಂದೊಂದು ವಿಷಯಕ್ಕೂ ತಲಾ ೪೦ ಅಂಕ ನಿಗದಿಪಡಿಸಲಾಗಿದ್ದು, ಒಟ್ಟು ೧೨೦ ಅಂಕಗಳನ್ನು ಪ್ರಶ್ನೆ ಪತ್ರಿಕೆ ಒಳಗೊಂಡಿರುತ್ತದೆ.
    ಜು.೧೯ರಂದು ಕೋರ್ ವಿಷಯಗಳಿಗೆ ಹಾಗು ೨೨ರಂದು ಭಾಷಾ ವಿಷಯಗಳಿಗೆ ಪರೀಕ್ಷೆ ನಡೆಯಲಿದ್ದು, ಈ ಬಾರಿ ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲಾಗುವುದು. ಫಲಿತಾಂಶವನ್ನು ಗ್ರೇಡ್ ಮಾದರಿಯಲ್ಲಿ ನೀಡಲಾಗುವುದು. ಈಗಾಗಲೇ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಅಭ್ಯಾಸದ ಉದ್ದೇಶದಿಂದ ಪ್ರತಿ ವಿಷಯವಾರು ಮಾದರಿ ಪ್ರಶ್ನೆ ಪ್ರತಿಕೆಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗಿದ್ದು, ಪರೀಕ್ಷೆ ಬರೆಯುವ ವಿಧಾನಗಳನ್ನು ಸಹ ತಿಳಿಸಿಕೊಡಲಾಗಿದೆ ಎಂದರು.