Tuesday, September 7, 2021

ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ತುರ್ತು ಕಾಳಜಿ ವಹಿಸಿದ ಜಿಲ್ಲಾಧಿಕಾರಿಗಳಿಗೆ ಮೆಚ್ಚುಗೆ ಪತ್ರ

ಭದ್ರಾವತಿ ಹುಣಸೇಕಟ್ಟೆ ಗ್ರಾಮದಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ತುರ್ತು ಕಾಳಜಿ ವಹಿಸಿರುವ ಹಿನ್ನಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಅಪರ ಕಾರ್ಯದರ್ಶಿಗಳು ಬರೆದಿರುವ ಮೆಚ್ಚುಗೆ ಪತ್ರ.
    ಭದ್ರಾವತಿ, ಸೆ. ೭: ತಾಲೂಕಿನ ಹುಣಸೇಕಟ್ಟೆ ಗ್ರಾಮದಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ತುರ್ತು ಕಾಳಜಿ ವಹಿಸಿರುವುದು ತಿಳಿದು ಬಂದಿದ್ದು, ಅಲ್ಲದೆ ಜಿಲ್ಲಾಧಿಕಾರಿಗಳ ಕಾರ್ಯಕ್ಕೆ ಸಮಾಜ ಕಲ್ಯಾಣ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ.ಎನ್. ನಾಗಾಂಬಿಕಾ ದೇವಿಯವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
    ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿಗಳಲ್ಲಿ ಸೆ.೪ರಂದು ಮಂದಗತಿಯ ಶೀತ ಕಾಣಿಸಿಕೊಂಡಿದ್ದು,  ಸ್ಥಳೀಯರು ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಅವರಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಡಾ.ಎನ್. ನಾಗಾಂಬಿಕಾ ದೇವಿಯವರು ಕೋರಿದ ಹಿನ್ನಲೆಯಲ್ಲಿ ತಕ್ಷಣ ಖುದ್ದಾಗಿ ವಸತಿ ಶಾಲೆಗೆ ಭೇಟಿ ನೀಡಿದ ಕೆ.ಬಿ ಶಿವಕುಮಾರ್ ಅವರು ಎಲ್ಲಾ ವಿದ್ಯಾರ್ಥಿಗಳಿಗೆ ಕೋವಿಡ್-೧೯ ಪರೀಕ್ಷೆ ಕ್ಷಿಪ್ರಗತಿಯಲ್ಲಿ ನಡೆಸಿದ್ದು, ವಿದ್ಯಾರ್ಥಿಗಳಲ್ಲಿ ನೆಗಟಿವ್ ವರದಿ ಬಂದಿದೆ. ಈ ನಡುವೆಯೂ ವಿದ್ಯಾರ್ಥಿಗಳೊಂದಿಗೆ ವೈಯಕ್ತಿಕ ಸಮಾಲೋಚನೆ ನಡೆಸುವ ಜೊತೆಗೆ ಆತ್ಮಸ್ಥೈರ್ಯ ತುಂಬುವಲ್ಲಿ ಯಶಸ್ವಿಯಾಗಿದ್ದರು. ಈ ಹಿನ್ನಲೆಯಲ್ಲಿ ಡಾ. ಎನ್. ನಾಗಾಂಬಿಕಾ ಅವರು ಸೆ.೬ರಂದು ಮೆಚ್ಚುಗೆ ಪತ್ರವನ್ನು ಜಿಲ್ಲಾಧಿಕಾರಿಗಳಿಗೆ ಕಳುಹಿಸಿದ್ದಾರೆ. ಈ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಪ್ರಚಾರಕ್ಕೆ ಒಳಪಟ್ಟಿದೆ.
    ಜಿಲ್ಲಾಧಿಕಾರಿಗಳ ಮೆಚ್ಚುಗೆ ಪತ್ರಕ್ಕೆ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರಿ ಸ್ವಾಮ್ಯದ ನಗರದ ಮೈಸೂರು ಕಾಗದ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರಾಗಿರುವ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಅವರು ಕಾರ್ಮಿಕರನ್ನು ಕಡೆ ಗಣಿಸಿದ್ದಾರೆ. ಕಾರ್ಖಾನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಕಳೆದ ಸುಮಾರು ೬ ತಿಂಗಳಿನಿಂದ ವೇತನ ಇಲ್ಲವಾಗಿದೆ. ಈ ಬಗ್ಗೆ ಹಲವಾರು ಮನವಿ ಮಾಡಲಾಗಿದ್ದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ಇಂತಹ ಜಿಲ್ಲಾಧಿಕಾರಿಗಳಿಗೆ ಮೆಚ್ಚುಗೆ ವ್ಯಕ್ತಪಡಿಸುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ನೂರಾರು ನಾಯಿಗಳನ್ನು ಜೀವಂತವಾಗಿ ಹೂತಿಟ್ಟು ಮಾರಾಣ ಹೋಮ

ಗ್ರಾಮಾಂತರ ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ


ಭದ್ರಾವತಿ ಎಂಪಿಎಂ ಅರಣ್ಯ ವ್ಯಾಪ್ತಿಯ ತಮ್ಮಡಿ ಹಳ್ಳಿಯ ಎಸ್‌ಎಲ್ ನಂ.೮೬೩, ೮೬೪, ೮೬೫ ಮತ್ತು ೮೬೬ರ ಭೂಮಿಯಲ್ಲಿ ಸುಮಾರು ೧೫೦ಕ್ಕೂ ಹೆಚ್ಚಿನ ನಾಯಿಗಳನ್ನು ಜೀವಂತವಾಗಿ ಹೂತಿಟ್ಟಿದ್ದು, ಪ್ರಕರಣ ಬೆಳಕಿಗೆ ಬಂದ ಹಿನ್ನಲೆಯಲ್ಲಿ ಹೂತಿಟ್ಟ ನಾಯಿಗಳನ್ನು ಹೊರ ತೆಗೆಯುತ್ತಿರುವುದು.
    ಭದ್ರಾವತಿ, ಸೆ. ೭: ನಾಯಿಗಳನ್ನು ಜೀವಂತವಾಗಿ ಹೂತಿಟ್ಟು ಮಾರಾಣ ಹೋಮಕ್ಕೆ ಕಾರಣವಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
    ತಾಲೂಕಿನ ಸಿಂಗನಮನೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕಂಬದಾಳಲು-ಹೊಸೂರು ಗ್ರಾಮ ಪಂಚಾಯಿತಿಗೆ ಒಳಪಡುವ ರಂಗನಾಥಪುರದಲ್ಲಿ ಕಳೆದ ಸುಮಾರು ೪ ದಿನಗಳ ಹಿಂದೆ ಘಟನೆ ನಡೆದಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ.
    ಎಂಪಿಎಂ ಅರಣ್ಯ ವ್ಯಾಪ್ತಿಯ ತಮ್ಮಡಿ ಹಳ್ಳಿಯ ಎಸ್‌ಎಲ್ ನಂ.೮೬೩, ೮೬೪, ೮೬೫ ಮತ್ತು ೮೬೬ರ ಭೂಮಿಯಲ್ಲಿ ಸುಮಾರು ೧೫೦ಕ್ಕೂ ಹೆಚ್ಚಿನ ನಾಯಿಗಳನ್ನು ಜೀವಂತವಾಗಿ ಹೂತಿಟ್ಟಿದ್ದು, ನಾಯಿಗಳನ್ನು ಹೂತಿಡುವಾಗ ಈ ಭಾಗದಲ್ಲಿ ನಾಯಿಗಳು ಬೊಗಳುವ ಶಬ್ದ ಸ್ಥಳೀಯರಿಗೆ ಕೇಳಿಸಿದೆ. ನಂತರ ಈ ಭಾಗದಲ್ಲಿ ನಿಶಬ್ದ ಕಂಡು ಬಂದಿದ್ದು, ಇದರಿಂದ ಅನುಮಾನಗೊಂಡ ಸ್ಥಳೀಯರು ಮಾಹಿತಿಯನ್ನು ಶಿವಮೊಗ್ಗ ಪ್ರಾಣಿ ದಯಾ ಸಂಘದವರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.
    ಪ್ರಾಣಿ ದಯಾ ಸಂಘದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ನಾಯಿಗಳನ್ನು ಜೀವಂತವಾಗಿ ಹೂತಿಟ್ಟಿರುವುದು ಬೆಳಕಿಗೆ ಬಂದಿದೆ. ಇದೀಗ ಪ್ರಕರಣ ಗ್ರಾಮಾಂತರ ಪೊಲೀಸ್ ಠಾಣೆ ಮೆಟ್ಟಿಲೇರಿದೆ.
    ನಾಯಿಗಳನ್ನು ಜೀವಂತವಾಗಿ ಹೂತಿಡಲು ಕಾರಣವೇನೆಂಬುದು ಇನ್ನೂ ಸ್ಪಷ್ಟವಾಗಿ ತಿಳಿದಿಲ್ಲ. ಇದಕ್ಕೆ ಕಂಬದಾಳಲು-ಹೊಸೂರು ಗ್ರಾಮಚಾಯಿತಿ ಆಡಳಿತ ಸ್ಪಷ್ಟನೆ ನೀಡಬೇಕಾಗಿದೆ.
    ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಈ ಭಾಗದ ಜಿಲ್ಲಾ ಪಂಚಾಯಿತಿ ಸದಸ್ಯ ಜೆ.ಪಿ ಯೋಗೇಶ್ ನಾಯಿಗಳನ್ನು ಹೂತಿಟ್ಟಿರುವ ವಿಚಾರ ನಮ್ಮ ಗಮನಕ್ಕೆ ಬಂದಿಲ್ಲ. ಗ್ರಾಮ ಪಂಚಾಯಿತಿ ಮಾಹಿತಿ ಪ್ರಕಾರ ನಾಯಿಗಳನ್ನು ಜನವಸತಿ ಪ್ರದೇಶಗಳಿಂದ ಹಿಡಿದು ಅರಣ್ಯ ಪ್ರದೇಶಕ್ಕೆ ಬಿಡುವುದು ವಾಡಿಕೆಯಾಗಿದೆ. ಆದರೆ ನಾಯಿಗಳನ್ನು ಕೊಲ್ಲುವ ಬಗ್ಗೆ ಎಲ್ಲೂ ಸೂಚಿಸಲಾಗಿಲ್ಲ ಎಂದರು.
    ಮತ್ತೊಂದೆಡೆ ನಾಯಿಗಳಿಗೆ ಸಂತಾನ ಹರಣ ಶಸ್ತ್ರಚಿಕಿತ್ಸೆ ನಡೆಸಿ ಪುನಃ ಅವುಗಳನ್ನು ವಾಸಿಸುತ್ತಿದ್ದ ಸ್ಥಳದಲ್ಲಿಯೇ ಬಿಡಲಾಗುತ್ತದೆ. ಈ ಸಂಬಂಧ ಗ್ರಾಮ ಪಂಚಾಯಿತಿ ವತಿಯಿಂದ ಟೆಂಡರ್ ಸಹ ನೀಡಲಾಗಿತ್ತು ಎನ್ನಲಾಗುತ್ತಿದೆ. ಟೆಂಡರ್‌ದಾರರು ಶಸ್ತ್ರಚಿಕಿತ್ಸೆ ಹಣ ಉಳಿಸುವ ಉದ್ದೇಶದಿಂದ ಈ ರೀತಿಯ ಕೃತ್ಯ ನಡೆಸಿರಬಹುದೆಂಬ ಆರೋಪ ಸಹ ಸ್ಥಳೀಯರಿಂದ ಕೇಳಿ ಬರುತ್ತಿವೆ. ಯಾವುದಕ್ಕೂ ತನಿಖೆಯಿಂದ ಸತ್ಯಾಂಶ ಹೊರಬರಬೇಕಾಗಿದೆ.

ಸಾಲಗಾರರ ಕಾಟ ಮನನೊಂದು ತಾಯಿ, ಮಗಳು ಆತ್ಮಹತ್ಯೆ

ಸಂಗೀತಾ, ಮಧುಶ್ರೀ
    ಭದ್ರಾವತಿ, ಸೆ. ೭: ಸಾಲಬಾಧೆಯಿಂದ ಬೇಸತ್ತು ತಾಯಿ, ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಹೊಸಮನೆ  ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದಿದೆ.
    ತಾಯಿ ಸಂಗೀತಾ(೩೫), ಮಗಳು ಮಧುಶ್ರೀ(೧೧) ಒಂದೇ ಸೀರೆಯಲ್ಲಿ ಇಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಶಿವಾಜಿ ಸರ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂಗೀತಾ ಅವರ ಪತಿ ಧನಶೇಖರ್ ಹೋಲ್‌ಸೇಲ್ ವ್ಯಾಪಾರಿಯಾಗಿದ್ದು, ಕೋವಿಡ್-೧೯ ಪರಿಣಾಮ ಸುಮಾರು ೨ ವರ್ಷಗಳಿಂದ ವ್ಯಾಪಾರ ವಹಿವಾಟು ಇಲ್ಲದೆ ಆರ್ಥಿಕವಾಗಿ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ನಡುವೆ ಧನಶೇಖರ್ ಸುಮಾರು ೧೬ ಲಕ್ಷ ರು. ಗಳಿಗೂ ಅಧಿಕ ಬ್ಯಾಂಕ್ ಹಾಗು ಕೈ ಸಾಲ ಮಾಡಿಕೊಂಡಿದ್ದು, ಇದರಿಂದಾಗಿ ಸಾಲಗಾರರ ಕಾಟ ಹೆಚ್ಚಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಕೆಎಸ್‌ಆರ್‌ಟಿಸಿ ಚಾಲಕ ಗಂಗಾಧರ್ ಆತ್ಮಹತ್ಯೆ

ಗಂಗಾಧರ್
    ಭದ್ರಾವತಿ, ಸೆ. ೬:  ತಾಲೂಕಿನ ಹೊಸ ಸಿದ್ದಾಪುರ ಗ್ರಾಮದ ನಿವಾಸಿ, ಶಿವಮೊಗ್ಗ ಕೆಎಸ್‌ಆರ್‌ಟಿಸಿ  ಘಟಕದಲ್ಲಿ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಗಂಗಾಧರ್(೪೫) ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
    ಗಂಗಾಧರ್ ಮನೆಯ ಮೇಲಿನ ಮಹಡಿಯ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆ ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಮೃತದೇಹದ ಶವ ಪರೀಕ್ಷೆ ನಡೆಸಲಾಗಿದೆ. ಕಳೆದ ಕೆಲವು ವರ್ಷಗಳಿಂದ ಎದೆ ನೋವಿನಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    ಗಂಗಾಧರ ಸುಮಾರು ೨೦ ವರ್ಷಗಳ ಹಿಂದೆ ಬಿಎಂಟಿಸಿ ಚಾಲಕರಾಗಿ ಕರ್ತವ್ಯಕ್ಕೆ ಸೇರ್ಪಡೆಗೊಂಡಿದ್ದರು. ನಂತರ ಧರ್ಮಸ್ಥಳ ಘಟಕದ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸಿ ನಂತರ ಕಳೆದ ಸುಮಾರು ಒಂದೂವರೆ ವರ್ಷದಿಂದ ಶಿವಮೊಗ್ಗ ಘಟಕದಲ್ಲಿ  ಬೆಂಗಳೂರು ಮತ್ತು ಶಿವಮೊಗ್ಗ ನಡುವೆ ಸಂಚರಿಸುವ ಬಸ್ಸಿನ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

Monday, September 6, 2021

ಗಣೇಶ ಚತುರ್ಥಿ, ಸರಳ, ಶಾಂತಿಯುತ ಆಚರಣೆಗೆ ತಹಸೀಲ್ದಾರ್ ಮನವಿ

ಭದ್ರಾವತಿ ನ್ಯೂಟೌನ್ ಲಯನ್ಸ್ ಕ್ಲಬ್‌ನಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಶಾಂತಿ ಸಭೆಯಲ್ಲಿ ತಹಸೀಲ್ದಾರ್ ಆರ್. ಪ್ರದೀಪ್ ಮಾತನಾಡಿದರು.
    ಭದ್ರಾವತಿ, ಸೆ. ೬: ಕೋವಿಡ್-೧೯ರ ನಡುವೆಯೂ ಈ ಬಾರಿ ಗಣೇಶ ಚತುರ್ಥಿಯನ್ನು ಸಾರ್ವಜನಿಕವಾಗಿ ಆಚರಿಸಲು ಹಲವು ಮಾರ್ಗಸೂಚಿಗಳೊಂದಿಗೆ ಸರ್ಕಾರ ಅನುಮತಿ ನೀಡಿದ್ದು, ಸಾರ್ವಜನಿಕರು ಹೆಚ್ಚಿನ ಮುಂಜಾಗ್ರತೆವಹಿಸಿ ಹಬ್ಬವನ್ನು ಸರಳವಾಗಿ, ಶಾಂತಿಯುತವಾಗಿ ಆಚರಿಸಬೇಕೆಂದು ತಹಸೀಲ್ದಾರ್ ಆರ್. ಪ್ರದೀಪ್ ಕರೆ ನೀಡಿದರು.
    ಅವರು ಸೋಮವಾರ ನಗರದ ನ್ಯೂಟೌನ್ ಲಯನ್ಸ್ ಕ್ಲಬ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಶಾಂತಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಪ್ರತಿಯೊಬ್ಬರು ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ಮಾಡಿಕೊಡಬಾರದು. ಹಬ್ಬದ ಆಚರಣೆಗೆ ತಾಲೂಕು ಆಡಳಿತ, ಪೊಲೀಸ್ ಇಲಾಖೆ ಹಾಗು ಸ್ಥಳೀಯ ನಗರಸಭೆ ಆಡಳಿತಗಳು ಎಲ್ಲಾ ರೀತಿಯ ಸಹಕಾರ ನೀಡಲಿವೆ. ಇದೆ ರೀತಿ ಸಾರ್ವಜನಿಕರು ಸಹ ಪೂರಕವಾಗಿ ಸ್ಪಂದಿಸುವಂತೆ ಮನವಿ ಮಾಡಿದರು.
    ನಗರಸಭೆ ಪೌರಾಯುಕ್ತ ಕೆ. ಪರಮೇಶ್, ಪರಿಸರ ಅಭಿಯಂತರ ಪ್ರಭಾಕರ್, ಕಂದಾಯಾಧಿಕಾರಿ ರಾಜ್‌ಕುಮಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ಪೊಲೀಸ್ ಉಪಾಧೀಕ್ಷಕ ಸಾಹಿಲ್ ಬಾಗ್ಲಾ, ಗ್ರಾಮಾಂತರ ವೃತ್ತ ನಿರೀಕ್ಷಕ ಇ.ಓ ಮಂಜುನಾಥ್, ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣಾಧಿಕಾರಿ ಕೆ.ಎಚ್ ಜಯಪ್ಪ, ಅಗ್ನಿ ಶಾಮಕ ಠಾಣಾಧಿಕಾರಿ ವಸಂತಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ದೇಶದಲ್ಲಿ ಬೆಲೆ ಏರಿಕೆಯಿಂದಾಗಿ ಬಡ, ಮಧ್ಯಮ ವರ್ಗ ಸಂಕಷ್ಟಕ್ಕೆ : ಬಿ.ಕೆ ಸಂಗಮೇಶ್ವರ್

ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಭದ್ರಾವತಿ ಬಿ.ಎಚ್ ರಸ್ತೆ, ಅಂಡರ್‌ಬ್ರಿಡ್ಜ್ ಬಳಿ ಯುವ ಕಾಂಗ್ರೆಸ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಪಾಲ್ಗೊಂಡು ಮಾತನಾಡಿದರು.
    ಭದ್ರಾವತಿ, ಸೆ. ೬: ದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಬಡ ಹಾಗು ಮಧ್ಯಮ ವರ್ಗದವರು ಸಂಕಷ್ಟ ಅನುಭವಿಸುವಂತಾಗಿದೆ. ಬೆಲೆ ಏರಿಕೆ ನಿಯಂತ್ರಿಸುವಲ್ಲಿ ಕೇಂದ್ರ ಹಾಗು ರಾಜ್ಯ ಸರ್ಕಾರಗಳು ವಿಫಲವಾಗಿವೆ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಆರೋಪಿಸಿದರು.
    ಅವರು ಸೋಮವಾರ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ನಗರದ ಬಿ.ಎಚ್ ರಸ್ತೆ, ಅಂಡರ್‌ಬ್ರಿಡ್ಜ್ ಬಳಿ ಯುವ ಕಾಂಗ್ರೆಸ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು.
    ಅಡುಗೆ ಅನಿಲ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಇದರ ಜೊತೆಗೆ ಇತರೆ ಅಗತ್ಯ ವಸ್ತುಗಳ ಬೆಲೆ ಸಹ ಏರಿಕೆಯಾಗುತ್ತಿದೆ. ಮತ್ತೊಂದೆಡೆ ಕಾರ್ಖಾನೆಗಳು ಅಭಿವೃದ್ಧಿಯಾಗದೆ ಕಾರ್ಮಿಕರು ಬೀದಿ ಪಾಲಾಗುತ್ತಿದ್ದಾರೆ. ಕೃಷಿಗೆ ಸಂಬಂಧಿಸಿದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ರೈತರು ಕೃಷಿ ಚಟುವಟಿಕೆಗಳನ್ನು ನಡೆಸಲು ಅಸಾಧ್ಯವಾಗಿದೆ. ಹಲವಾರು ಜನವಿರೋಧಿ ನೀತಿಗಳನ್ನು ಜಾರಿಗೆ ತರುವ ಮೂಲಕ ದೇಶದಲ್ಲಿ ಬಡ ಹಾಗು ಮಧ್ಯಮ ವರ್ಗದವರನ್ನು ಶೋಷಿಸಲಾಗುತ್ತಿದೆ ಎಂದು ಆರೋಪಿಸಿದರು.
    ಯುವ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಜಿ. ವಿನೋದ್‌ಕುಮಾರ್ ಮಾತನಾಡಿ, ದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರ ನಡೆಸಲು ವಿಫಲವಾಗಿದೆ. ಜನವಿರೋಧಿ ನೀತಿಗಳ ಜೊತೆಗೆ ಕೃಷಿ, ಕೈಗಾರಿಕೆ ಸೇರಿದಂತೆ ಎಲ್ಲಾ ವಲಯಗಳನ್ನು ಖಾಸಗೀಕರಣಗೊಳಿಸಲು ಮುಂದಾಗಿದೆ. ಕೋವಿಡ್ ಮಹಾಮಾರಿಯನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ. ಇಂತಹ ಸರ್ಕಾರ ದೇಶದ ಜನರಿಗೆ ಅಗತ್ಯವಿಲ್ಲ. ರಾಷ್ಟ್ರಪತಿಗಳು ತಕ್ಷಣ ಕೇಂದ್ರ ಸರ್ಕಾರವನ್ನು ವಜಾಗೊಳಿಸಬೇಕೆಂದು ಆಗ್ರಹಿಸಿದರು.
    ನಗರಸಭಾ ಸದಸ್ಯರಾದ ಕೆ. ಸುದೀಪ್‌ಕುಮಾರ್, ಆರ್. ಶ್ರೇಯಸ್, ಜಾರ್ಜ್, ಯುವ ಘಟಕದ ನಗರ ಉಪಾಧ್ಯಕ್ಷ ತೇಜಸ್‌ಗೌಡ, ಪ್ರಧಾನ ಕಾರ್ಯದರ್ಶಿ ಭರತ್, ಮಧುಸೂಧನ್, ಶಂಕರ್, ನವೀನ್, ಚೇತನ್, ಕಾರ್ಯದರ್ಶಿಗಳಾದ ನಂದನ್, ಸುನಿಲ್, ಸಚಿನ್, ಮನು, ಸಂಜಯ್, ಸ್ಟೀಫನ್, ರಾಜ್‌ಕ್ರಿಸ್ಟಿ, ಸುನಿಲ್, ಯೋಗೀಶ್, ಸೋಮಣ್ಣ, ರಂಜಿತ್, ಧರ್ಮೇಂದ್ರ, ರಾಜ್‌ವೀರ್, ಗಗನ್, ಶ್ರೀನಿವಾಸ್, ಮುರುಳಿ, ಮಂಜು, ಹರೀಶ್, ಐಸಾಕ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
    ಸೌದೆ ಒಲೆ ಹಚ್ಚುವ ಮೂಲಕ ವಿಶಿಷ್ಟವಾಗಿ ಪ್ರತಿಭಟನೆ ನಡೆಸಲಾಯಿತು. ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರವನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು.


ಹಣ, ಅಧಿಕಾರಕ್ಕೆ ಜನ ಬೆಂಬಲವಿಲ್ಲ : ಶಾರದ ಅಪ್ಪಾಜಿ

ಭದ್ರಾವತಿ ನಗರಸಭೆ ವಾರ್ಡ್ ನಂ.೨೯ರ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಜೆಡಿಎಸ್ ಅಭ್ಯರ್ಥಿ ಆರ್. ನಾಗರತ್ನ ಅನಿಲ್‌ಕುಮಾರ್ ಅವರನ್ನು ವರಿಷ್ಠೆ ಶಾರದ ಅಪ್ಪಾಜಿ ಅಭಿನಂದಿಸಿದರು.
    ಭದ್ರಾವತಿ, ಸೆ. ೬: ಹಣ, ಅಧಿಕಾರಕ್ಕೆ ಜನ ಬೆಲೆ ಕೊಡುವುದಿಲ್ಲ. ಕೆಲಸ ಮಾಡುವವರಿಗೆ ಜನರು ಬೆಂಬಲಿಸುತ್ತಾರೆ ಎಂಬುದು ನಗರಸಭೆ ವಾರ್ಡ್ ನಂ.೨೯ರ ಚುನಾವಣೆ ಮೂಲಕ ಮತ್ತೊಮ್ಮೆ ಸಾಬೀತಾಗಿದೆ ಎಂದು ಜೆಡಿಎಸ್ ವರಿಷ್ಠೆ ಶಾರದ ಅಪ್ಪಾಜಿ ಹೇಳಿದರು.
    ಅವರು ಸೋಮವಾರ ವಾರ್ಡ್ ಚುನಾವಣೆ ಫಲಿತಾಂಶ ಪ್ರಕಟಗೊಂಡ ನಂತರ ಗೆಲುವು ಸಾಧಿಸಿದ ಪಕ್ಷದ ಅಭ್ಯರ್ಥಿ ಆರ್. ನಾಗರತ್ನ ಅನಿಲ್‌ಕುಮಾರ್ ಅವರನ್ನು ಅಭಿನಂದಿಸಿ ಮಾತನಾಡಿದರು.
    ಚುನಾವಣೆಯಲ್ಲಿ ಮತದಾರರು ನಮ್ಮ ಪರವಾಗಿ ನೀಡಿರುವ ತೀರ್ಪನ್ನು ಸ್ವಾಗತಿಸುತ್ತೇನೆ. ಕ್ಷೇತ್ರದ ಮತದಾರರು ಎಂದಿಗೂ ನಮ್ಮೊಂದಿಗಿದ್ದಾರೆ. ಮತದಾರರಿಗೆ ಹಾಗು ಅತಿ ಹೆಚ್ಚಿನ ಅಂತರದ ಗೆಲುವಿಗೆ ಕಾರಣಕರ್ತರಾಗಿರುವ  ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
        ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ:
   ಜೆಡಿಎಸ್ ಅಭ್ಯರ್ಥಿ ಗೆಲುವು ಘೋಷಣೆಯಾಗುತ್ತಿದ್ದಂತೆ ತಾಲೂಕು ಕಛೇರಿ ಮುಂಭಾಗ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳಲು ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ನಡೆಸಿದರು.
ನಂತರ ಮೆರವಣಿಗೆ ಮೂಲಕ ಬಿ.ಎಚ್ ರಸ್ತೆ, ಅಂಡರ್‌ಬ್ರಿಡ್ಜ್ ಬಳಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಮಾಜಿ ಶಾಸಕ ಎಂ.ಜೆ ಅಪ್ಪಾಜಿ ನಿವಾಸಕ್ಕೆ ತೆರಳಿ ಅಪ್ಪಾಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
    ವಾರ್ಡ್ ವ್ಯಾಪ್ತಿ ಬೃಹತ್ ಮೆರವಣಿಗೆ :
ವಾರ್ಡ್ ಪ್ರಮುಖ ವೃತ್ತಗಳಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಲಾಯಿತು. ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಹಾಗು ಗೆಲುವು ಸಾಧಿಸಿದ ಅಭ್ಯರ್ಥಿ ಆರ್. ನಾಗರತ್ನಅನಿಲ್‌ಕುಮಾರ್ ಪರವಾಗಿ ಘೋಷಣೆ ಹಾಕುವ ಮೂಲಕ ಮತದಾರರಿಗೆ ಕೃತಜ್ಞತೆ ಸಲ್ಲಿಸಲಾಯಿತು.
    ಮುಖಂಡರಾದ ಎಸ್. ಕುಮಾರ್, ಎಂ.ಎ ಅಜಿತ್, ಅನಿಲ್ ಕುಮಾರ್, ಕರಿಯಪ್ಪ( ಕಬ್ಬಡಿ), ಕುಮಾರ್ (ಡಿವಿ ಪ್ಲಾಜಾ), ನಂಜುಂಡೇಗೌಡ (ಸೌದೆ), ಎಸ್.ಕೆ ಉಮೇಶ್, ಎಂ. ರಾಜು, ಲಕ್ಷ್ಮೀನಾರಾಯಣ್, ಬದ್ರಿನಾರಾಯಣ್,  ಮೈಲಾರಪ್ಪ, ಸುರೇಶ್(ಕ್ಲಬ್), ಎಸ್.ಬಿ ಮೋಹನ್‌ರಾವ್, ಡಿ.ಟಿ ಶ್ರೀಧರ್, ಲೋಕೇಶ್ವರ ರಾವ್, ಬಳ್ಳಿ ಕೃಷ್ಣಪ್ಪ, ಪಾಪಣ್ಣ, ರಾಜಣ್ಣ, ನಾಗರಾಜ್, ಉದಯಕುಮಾರ್, ಕೋಟೇಶ್ವರರಾವ್, ದಿಲೀಪ್, ನಂಜುಂಡಪ್ಪ, ಮೋಹನ್(ಚಕ್ಲಿ), ಸತೀಶ್ (ಬಸ್), ಪವನ್, ಎಚ್.ಡಿ ನಾಗರಾಜ್, ರಾಮಕೃಷ್ಣ, ಎ.ಟಿ ರವಿ, ಆರ್. ಮೋಹನ್‌ಕುಮಾರ್, ಮಲ್ಲೇಶ್, ಸತೀಶ್(ಟೇಲರ್), ಬಾಬು, ಸುರೇಶ್ ಬಾಬು, ವಾಸು(ಬೆಣ್ಣೆ), ಯತೀಶ್(ಪಿಗ್ಮಿ), ರಮೇಶ್(ಡಾನ್), ಸುಬ್ಬಾರೆಡ್ಡಿ, ಶಂಕರ್, ಗಿರೀಶ್, ರಾಕೇಶ್, ರೂಪೇಶ್, ಹರೀಶ್, ಯಶವಂತ್, ರಮೇಶ್ ನಾಯ್ಕ, ಲೀಲಾವತಿ ಕೃಷ್ಣಪ್ಪ, ಭಾಗ್ಯಮ್ಮ ಮಂಜುನಾಥ್, ಪರಮೇಶ್ವರಿ, ಧನಲಕ್ಷ್ಮಿ ಸೇರಿದಂತೆ ನೂರಾರು ಮಂದಿ ಕಾರ್ಯಕರ್ತರು, ಅಭಿಮಾನಿಗಳು ಪಾಲ್ಗೊಂಡಿದ್ದರು.