Friday, October 15, 2021

ಅ.೧೬ರಂದು ಕಾಗದನಗರ ಆಂಗ್ಲಶಾಲೆಯಲ್ಲಿ ಹಳೇಯ ವಿದ್ಯಾರ್ಥಿಗಳಿಂದ ವಿಶಿಷ್ಟ ಕಾರ್ಯಕ್ರಮ



    ಭದ್ರಾವತಿ, ಅ. ೧೫:ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಒಂದಾಗಿರುವ ಎಂಪಿಎಂ ಶಿಕ್ಷಣ ಸಂಸ್ಥೆಯ ಕಾಗದನಗರ ಆಂಗ್ಲ ಶಾಲೆ ೪೦ ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ಶಾಲೆಯ ಹಳೇಯ ವಿದ್ಯಾರ್ಥಿಗಳು ಒಂದೆಡೆ ಸಂಘಟಿತರಾಗಿ ಶಾಲೆಯ ಭವ್ಯ ಪರಂಪರೆಯನ್ನು ಅನಾವರಣಗೊಳಿಸುವ ನಿಟ್ಟಿನಲ್ಲಿ ಮುಂದಾಗಿದ್ದಾರೆ.
    ಈ ನಿಟ್ಟಿನಲ್ಲಿ ಅ.೧೬ರಂದು     UDHYATHA ಎಂಬ ಬೃಹತ್ ಕಾರ್ಯಕ್ರಮವನ್ನು ೧೯೮೮ ರಿಂದ ೨೦೨೦ರ ವರೆಗೆ ಶಾಲೆಯಲ್ಲಿ ವ್ಯಾಸಂಗ ಮಾಡಿರುವ ಸುಮಾರು ೬೦೦ ರಿಂದ ೭೦೦ ಮಂದಿ ಹಳೇಯ ವಿದ್ಯಾರ್ಥಿಗಳು ಸಂಘಟಿತರಾಗಿ ಆಯೋಜಿಸಿದ್ದು, ಇದೊಂದು ವಿಶಿಷ್ಟ ಕಾರ್ಯಕ್ರಮವಾಗಿದೆ. ಒಂದೆಡೆ ಶಾಲೆಯ ೪೦ ವರ್ಷಗಳ ಇತಿಹಾಸವನ್ನು ಇಂದಿನ ಜನರಿಗೆ ಅನಾವರಣಗೊಳಿಸುವ ನಿಟ್ಟಿನಲ್ಲಿ ಪ್ರಯತ್ನಿಸುತ್ತಿದ್ದು, ಮತ್ತೊಂದೆಡೆ ತಮಗೆ ಪಾಠ ಕಲಿಸಿಕೊಟ್ಟ ಶಿಕ್ಷಕರನ್ನು ಒಂದೇ ವೇದಿಕೆಯಲ್ಲಿ ಕರೆ ತರುವ ಪ್ರಯತ್ನ ಇದಾಗಿದ್ದು, ಇನ್ನೊಂದೆಡೆ ಹಳೇಯ ವಿದ್ಯಾರ್ಥಿಗಳು ಸಂಘಟಿತರಾಗಿ ತಮ್ಮ ಸ್ವಂತ ಹಣದಲ್ಲಿ ಶಾಲೆಯನ್ನು ನವೀಕರಣಗೊಳಿಸಿರುವ ಸಂಭ್ರಮ ಕ್ಷಣ ಸಹ ಇದಾಗಿದೆ. ಇವೆಲ್ಲದರ ಉದ್ದೇಶ ಪ್ರಸ್ತುತ ಎಂಪಿಎಂ ಕಾರ್ಖಾನೆ ಸಂಪೂರ್ಣವಾಗಿ ಮುಚ್ಚಿಹೋಗಿದ್ದು, ಕಾರ್ಮಿಕರು, ಕುಟುಂಬ ವರ್ಗದವರಿಲ್ಲದೆ ಬಿಕೋ ಎನ್ನುತ್ತಿರುವ ಕಾಗದನಗರದಲ್ಲಿ ಈ ಶಾಲೆಗೆ ಪುನಃ ಮರುಜೀವ ತುಂಬುವುದಾಗಿದೆ. ಒಟ್ಟಾರೆ ಈ ಕಾರ್ಯಕ್ರಮ ಆಯೋಜನೆಗಾಗಿ ಕಳೆದ ೩-೪ ತಿಂಗಳುಗಳಿಂದ ಹಳೇಯ ವಿದ್ಯಾರ್ಥಿಗಳು ಶ್ರಮಿಸುತ್ತಿದ್ದಾರೆ.
    ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಸಹ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮ ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೬ ಗಂಟೆವರೆಗೆ ನಡೆಯಲಿದ್ದು, ಯಶಸ್ವಿಗೊಳಿಸುವಂತೆ ಅರುಣ್, ವಿನೂತನ್, ಪ್ರೀತಮ್ ಮತ್ತು ಎಚ್.ಆರ್ ಮಮತ ಸೇರಿದಂತೆ ಹಳೇಯ ವಿದ್ಯಾರ್ಥಿಗಳು ಕೋರಿದ್ದಾರೆ.


ವೈಭವಯುತವಾಗಿ ಜರುಗಿದ ನಾಡಹಬ್ಬ ದಸರಾ ಮೆರವಣಿಗೆ

ಬನ್ನಿ ಮುಡಿದ ತಹಸೀಲ್ದಾರ್ ಆರ್. ಪ್ರದೀಪ್


ಭದ್ರಾವತಿಯಲ್ಲಿ ನಾಡಹಬ್ಬ ದಸರಾ ಮೆರವಣಿಗೆಗೆ ಚಾಲನೆ ನೀಡಿದ ಶಾಸಕ ಬಿ.ಕೆ ಸಂಗಮೇಶ್ವರ್ ಹಾಗು ನಗರಸಭೆ ಆಡಳಿತಾಧಿಕಾರಿ ಟಿ.ವಿ ಪ್ರಕಾಶ್ ಸೇರಿದಂತೆ ಇನ್ನಿತರರು ನಗರದ ಹಿರಿಯ ಕುಸ್ತಿಗಳನ್ನು ಸನ್ಮಾನಿಸಿ ಗೌರವಿಸಿದರು.
    ಭದ್ರಾವತಿ, ಅ. ೧೫: ನಗರಸಭೆ ವತಿಯಿಂದ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ನಾಡಹಬ್ಬ ದಸರಾ ಮೆರವಣಿಗೆ ಕೋವಿಡ್-೧೯ರ ನಡುವೆಯೂ ವೈಭವಯುತವಾಗಿ ನಡೆಯಿತು.
    ನಗರದ ಬಿ.ಎಚ್ ರಸ್ತೆ, ಲೋಯರ್‌ಹುತ್ತಾ ಶ್ರೀ ತಿರುಮಲ ದೇವಸ್ಥಾನದ ಬಳಿ ಶಾಸಕ ಬಿ.ಕೆ ಸಂಗಮೇಶ್ವರ್ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿ ಹಾಗು ನಂದಿಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.


ಭದ್ರಾವತಿಯಲ್ಲಿ ನಗರಸಭೆ ವತಿಯಿಂದ ನಾಡಹಬ್ಬ ದಸರಾ ಹಿನ್ನಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಮೆರವಣಿಗೆಯಲ್ಲಿ ನಗರದ ವಿವಿಧೆಡೆಗಳಿಂದ ಅಲಂಕೃತಗೊಂಡ ದೇವಾನುದೇವತೆಗಳು ಪಾಲ್ಗೊಂಡಿರುವುದು.
    ಮೆರವಣಿಗೆಯಲ್ಲಿ ಲಕ್ಷ್ಮೀನರಸಿಂಹಸ್ವಾಮಿ, ಕೆರೆಕೋಡಮ್ಮ, ಅಂತರಘಟ್ಟಮ್ಮ, ಕಾಳಿಕಾಂಬ, ವಿಶ್ವಸ್ವರೂಪಿಣಿ ಮಾರಿಯಮ್ಮ, ಏಳುಕೋಟಿ ಮೈಲಾರಲಿಂಗೇಶ್ವರ, ಸಿಗಂದೂರು ಚೌಡೇಶ್ವರಿ, ಸವದತ್ತಿ ಯಲ್ಲಮ್ಮ, ದುರ್ಗಾ ಪರಮೇಶ್ವರಿ, ಎಲ್ಲಮ್ಮ ದೇವಿ. ಕುಕ್ಕುವಾಡೇಶ್ವರಿ ಸೇರಿದಂತೆ ನಗರದ ವಿವಿಧೆಡೆಗಳಿಂದ ಅಲಂಕೃತಗೊಂಡ ದೇವಾನುದೇವತೆಗಳು ಹಾಗು ತಾಲೂಕು ಆರೋಗ್ಯ ಇಲಾಖೆ ಮತ್ತು ನಗರಸಭೆ ವತಿಯಿಂದ ಕೊರೋನಾ ಸೋಂಕು ಜಾಗೃತಿ ಹಾಗು ಸ್ವಚ್ಚತೆ ಅರಿವು ಮೂಡಿಸುವ ಸ್ತಬ್ದ ಚಿತ್ರ, ನ್ಯೂಟೌನ್ ಶ್ರೀ ಸತ್ಯಸಾಯಿಬಾಬಾ ಸಮಗ್ರ ಶಿಕ್ಷಣ ಸಂಸ್ಥೆವತಿಯಿಂದ ಆಕರ್ಷಕವಾದ ಮಹಿಷಾಸುರ ಮರ್ದಿನಿ ಸ್ತಬ್ದ ಚಿತ್ರ, ಡೊಳ್ಳುಕುಣಿತ, ವೀರಗಾಸೆ, ಕೋಲಾಟ, ಗೊಂಬೆಗಳು, ಲಂಬಾಣಿ ನೃತ್ಯ, ಕೀಲು ಕುದುರೆ, ಯಕ್ಷಗಾನ ಗೊಂಬೆಗಳ ತಂಡಗಳು ನೋಡುಗರ ಕಣ್ಮನ ಸೆಳೆದವು. ಮೆರವಣಿಗೆ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತ, ಹಾಲಪ್ಪವೃತ್ತ, ಮಾಧವಚಾರ್ ವೃತ್ತ ಮತ್ತು ರಂಗಪ್ಪ ವೃತ್ತ ಮೂಲಕ ಕನಕ ಮಂಟಪ ಮೈದಾನ ತಲುಪಿತು.
    ಹಳೇನಗರದ ಕನಕಮಂಟಪ ಮೈದಾನದಲ್ಲಿ ತಾಲೂಕು ದಂಡಾಧಿಕಾರಿ, ತಹಸೀಲ್ದಾರ್ ಆರ್. ಪ್ರದೀಪ್ ಧಾರ್ಮಿಕ ಆಚರಣೆಗಳೊಂದಿಗೆ ಬನ್ನಿ ಮುಡಿಯುವ ಮೂಲಕ ದಸರಾ ನಾಡಹಬ್ಬಕ್ಕೆ ತೆರೆ ಎಳೆದರು. ಕೊನೆಯಲ್ಲಿ ಪಟಾಕಿ ಸಿಡಿಮದ್ದುಗಳ ಮೂಲಕ ರಾವಣನ ಸಂಹಾರ ನಡೆಯಿತು. ಹಳೇನಗರದ  ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕ ವೇದಬ್ರಹ್ಮ ಶ್ರೀ ರಂಗನಾಥಶರ್ಮ ನೇತೃತ್ವದಲ್ಲಿ ಧಾರ್ಮಿಕ ಪೂಜಾ ವಿಧಿವಿಧಾನಗಳು ಜರುಗಿದವು.



ಭದ್ರಾವತಿಯಲ್ಲಿ ನಗರಸಭೆ ವತಿಯಿಂದ ನಾಡಹಬ್ಬ ದಸರಾ ಹಿನ್ನಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳು ಪಾಲ್ಗೊಂಡಿರುವುದು.

    ನಗರಸಭೆ ಆಡಳಿತಾಧಿಕಾರಿ, ಉಪವಿಭಾಗಾಧಿಕಾರಿ  ಟಿ.ವಿ ಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ಪೌರಾಯುಕ್ತ ಕೆ. ಪರಮೇಶ್, ಕಂದಾಯಾಧಿಕಾರಿ ರಾಜ್‌ಕುಮಾರ್, ಪರಿಸರ ಅಭಿಯಂತರ ಪ್ರಭಾಕರ್, ಸಮುದಾಯ ಸಂಘಟನಾ ಅಧಿಕಾರಿ ಸುಹಾಸಿನಿ, ಪೌರಸೇವಾ ನೌಕರರ ಸೇವಾ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು ಪೌರಕಾರ್ಮಿಕರು, ನಗರಸಭೆ ನೂತನ ಸದಸ್ಯರು, ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಆಶೋಕ್, ಕಂದಾಯಾಧಿಕಾರಿ ಪ್ರಶಾಂತ್, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರಾದ ಹಾ. ರಾಮಪ್ಪ, ನರಸಿಂಹಚಾರ್, ರಮಾಕಾಂತ್, ಆರ್. ಕರುಣಾಮೂರ್ತಿ, ಬದರಿನಾರಾಯಣ, ಆಂಜನಪ್ಪ, ವಿಶಾಲಾಕ್ಷಿ ಸೇರಿದಂತೆ ನಗರದ ವಿವಿಧೆಡೆಗಳಿಂದ ನೂರಾರು ಮಂದಿ ಪಾಲೊಂಡಿದ್ದರು. ಈ ಬಾರಿ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಅವರ ಪತ್ನಿ ಶಾರದ ಅಪ್ಪಾಜಿ ಶ್ರೀ ಚಾಮುಂಡೇಶ್ವರಿ ದೇವಿಗೆ ಮಾಲಾರ್ಪಣೆ ಮಾಡಿ ಮೆರವಣಿಗೆಯಲ್ಲಿ ಹೆಜ್ಜೆ ಹಾಕುವ ಮೂಲಕ ಗಮನ ಸೆಳೆದರು.

ಸುಮಾರು ಎರಡೂವರೆ ವರ್ಷಗಳ ನಂತರ ಅಸ್ತಿತ್ವಕ್ಕೆ ಬರುತ್ತಿದೆ ಜನಪ್ರತಿನಿಧಿಗಳ ಆಡಳಿತ

ಅ.೧೬ರಂದು ಭದ್ರಾವತಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ

ಭದ್ರಾವತಿ ನಗರಸಭೆ
   
    ಭದ್ರಾವತಿ, ಅ. ೧೫: ಸುಮಾರು ಎರಡೂವರೆ ವರ್ಷಗಳ ನಂತರ ನಗರಸಭೆಯಲ್ಲಿ ಜನಪ್ರತಿನಿಧಿಗಳ ಆಡಳಿತ ಅಸ್ತಿತ್ವಕ್ಕೆ ಬರುತ್ತಿದ್ದು, ಈ ಬಾರಿ ಅತಿಹೆಚ್ಚು ಸ್ಥಾನಗಳನ್ನು ಹೊಂದಿರುವ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯಲು ಮುಂದಾಗಿದೆ. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಚುನಾವಣೆ ಅ.೧೬ರಂದು ನಡೆಯುತ್ತಿದೆ.
    ಒಟ್ಟು ೩೫ ಸ್ಥಾನಗಳನ್ನು ಹೊಂದಿರುವ ನಗರಸಭೆಯಲ್ಲಿ ಕಾಂಗ್ರೆಸ್-೧೮, ಜೆಡಿಎಸ್-೧೨, ಬಿಜೆಪಿ-೪ ಹಾಗು ೧-ಪಕ್ಷೇತರ ಸದಸ್ಯರಿದ್ದು, ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಿದ್ದು, ಉಪಾಧ್ಯಕ್ಷ ಸ್ಥಾನ ಎಸ್‌ಸಿ ಮೀಸಲಾತಿ ಹೊಂದಿದೆ.
    ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನಲ್ಲಿ ಒಟ್ಟು ೪ ಮಹಿಳೆಯರು ಪೈಪೋಟಿಗೆ ಮುಂದಾಗಿದ್ದು, ವಾರ್ಡ್ ನಂ.೨ರ ಗೀತಾ ರಾಜ್‌ಕುಮಾರ್, ವಾರ್ಡ್ ನಂ.೧೩ರ ಅನುಸುಧಾ ಮೋಹನ್, ವಾರ್ಡ್ ನಂ.೩೪ರ ಲತಾ ಚಂದ್ರಶೇಖರ್ ಮತ್ತು ವಾರ್ಡ್ ನಂ.೩೫ರ ಶೃತಿ ವಸಂತಕುಮಾರ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಅರ್ಹರಾಗಿದ್ದು, ಈ ನಾಲ್ವರು ಮೊದಲ ಬಾರಿಗೆ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಈ ಪೈಕಿ ಮೊದಲು ಯಾರಿಗೆ ಅವಕಾಶ ನೀಡಲಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ. ಈ ಸಂಬಂಧ ಶನಿವಾರ ಬೆಳಿಗ್ಗೆ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆಯಲ್ಲಿ ಮಾತಕತೆ ನಡೆಯಲಿದೆ ಎನ್ನಲಾಗಿದೆ.
    ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನಲ್ಲಿ ಒಟ್ಟು ೩ ಮಂದಿ ಅರ್ಹರಿದ್ದು, ಈ ಪೈಕಿ ವಾರ್ಡ್ ನಂ.೯ರ ಚನ್ನಪ್ಪ ಉಪಾಧ್ಯಕ್ಷರಾಗುವುದು ಬಹುತೇಕ ಖಚಿತವಾಗಿದೆ. ಉಳಿದಂತೆ ವಾರ್ಡ್ ನಂ.೧೪ರ ಸದಸ್ಯ ಬಿ.ಟಿ ನಾಗರಾಜ್ ಮತ್ತು ವಾರ್ಡ್ ನಂ.೨೬ರ ಸದಸ್ಯೆ ಸರ್ವಮಂಗಳ ಭೈರಪ್ಪ ಸಹ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬಹುದಾಗಿದೆ. ಈಗಾಗಲೇ ಹಿರಿಯ ಸದಸ್ಯ ಬಿ.ಟಿ ನಾಗರಾಜ್ ಈ ಹಿಂದೆ ನಗರಸಭೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಈ ಹಿನ್ನಲೆಯಲ್ಲಿ ಉಪಾಧ್ಯಕ್ಷ ಸ್ಥಾನದ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎನ್ನಲಾಗಿದೆ. ಉಳಿದಂತೆ ಅಧ್ಯಕ್ಷ ಸ್ಥಾನ ಮಹಿಳೆಯರಿಗೆ ಮೀಸಲಾಗಿರುವ ಹಿನ್ನಲೆಯಲ್ಲಿ ಉಪಾಧ್ಯಕ್ಷ ಸ್ಥಾನ ಪುರುಷರಿಗೆ ಬಿಟ್ಟುಕೊಡುವ ಸಾಧ್ಯತೆ ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ಮೊದಲ ಬಾರಿಗೆ ಆಯ್ಕೆಯಾಗಿರುವ ಸರ್ವಮಂಗಳ ಭೈರಪ್ಪ ಅವರ ಸ್ಪರ್ಧೆಗೆ ಅವಕಾಶ ಸಿಗದಿರಬಹುದು ಎನ್ನಲಾಗಿದೆ.  
       ನಾಲ್ವರು ಮಹಿಳೆಯರಿಗೂ ಸಮಾನ ಅವಕಾಶ :
   ವಾರ್ಡ್ ನಂ.೨೨ರ ಸದಸ್ಯ, ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಪತ್ರಿಕೆಯೊಂದಿಗೆ ಮಾತನಾಡಿ, ಅಧ್ಯಕ್ಷ ಸ್ಥಾನಕ್ಕೆ ಅರ್ಹರಾಗಿರುವ ನಾಲ್ವರು ಮಹಿಳೆಯರಿಗೂ ಅವಕಾಶ ಕಲ್ಪಿಸಿಕೊಡಲಾಗುವುದು. ಯಾವುದೇ ರೀತಿ ತಾರತಮ್ಯ ಮಾಡದೆ ಅಧಿಕಾರವನ್ನು ಯಶಸ್ವಿಯಾಗಿ ನಡೆಸಿಕೊಂಡು ಹೋಗುವ ನಿಟ್ಟಿನಲ್ಲಿ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗುವುದು. ಉಳಿದಂತೆ ಉಪಾಧ್ಯಕ್ಷ ಸ್ಥಾನಕ್ಕೆ ಯಾವುದೇ ಸಮಸ್ಯೆ ಎದುರಾಗಿಲ್ಲ. ಒಂದು ವೇಳೆ ಸಮಸ್ಯೆ ಕಂಡು ಬಂದಲ್ಲಿ ಸ್ಥಾಯಿ ಸಮಿತಿ ಚುನಾವಣೆಯಲ್ಲಿ ಸರಿಪಡಿಸಿಕೊಳ್ಳಲಾಗುವುದು. ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಬೇಕೆಂಬುದು ನಮ್ಮ ಆಶಯವಾಗಿದೆ ಎಂದರು.
      ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನೋಟಿಸ್ :
    ನಗರಸಭೆ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ೯ನೇ ಅವಧಿಗೆ ಮೀಸಲಾತಿ ನಿಗದಿಪಡಿಸಲಾಗಿದ್ದು, ಈ ಸಂಬಂಧ ಅ.೧೬ರಂದು ಸಾಮಾನ್ಯ ಮಹಿಳೆಯರಿಗೆ ಮೀಸಲಾಗಿರುವ ಅಧ್ಯಕ್ಷ ಸ್ಥಾನಕ್ಕೆ ಹಾಗು ಪರಿಜಾತಿ ಮೀಸಲಾಗಿರುವ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವುದಾಗಿ ಚುನಾವಣಾಧಿಕಾರಿಯಾಗಿರುವ ಉಪವಿಭಾಗಾಧಿಕಾರಿ ಟಿ.ವಿ ಪ್ರಕಾಶ್ ನೋಟಿಸ್ ಹೊರಡಿಸಿದ್ದಾರೆ.
ಅದರಂತೆ ಬೆಳಿಗ್ಗೆ ೧೦ ಗಂಟೆಯಿಂದ ನಾಮಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆ ನಂತರ ನಾಮಪತ್ರಗಳ ಪರಿಶೀಲನೆ, ಹಿಂಪಡೆಯುವಿಕೆ ನಡೆಯದೆ. ಮಧ್ಯಾಹ್ನ ೧ ಗಂಟೆಗೆ ಸಭೆ ನಡೆಯಲಿದ್ದು,  ಅಗತ್ಯವಿದ್ದಲ್ಲಿ ಚುನಾವಣೆ ನಡೆಯಲಿದೆ.

ಗಿರಿಯಮ್ಮ ನಿಧನ

ಗಿರಿಯಮ್ಮ
    ಭದ್ರಾವತಿ, ಅ. ೧೫: ನಗರಸಭೆ ವಾರ್ಡ್ ನಂ.೧೯ರ ನಗರಸಭಾ ಸದಸ್ಯ, ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ ಬಸವರಾಜ ಬಿ. ಆನೇಕೊಪ್ಪ ಅವರ ತಾಯಿ ಗಿರಿಯಮ್ಮ(೭೫) ಶುಕ್ರವಾರ ಬೆಳಿಗ್ಗೆ ನಿಧನ ಹೊಂದಿದರು.
    ಪುತ್ರ ಬಸವರಾಜ್ ಹಾಗು ಸೊಸೆ ಮತ್ತು ಮೊಮ್ಮಕ್ಕಳನ್ನು ಹೊಂದಿದ್ದರು. ಗಿರಿಯಮ್ಮ ಅವರು ಎಂಪಿಎಂ ಬಡಾವಣೆಯ ಆನೇಕೊಪ್ಪದಲ್ಲಿರುವ ತೋಟದ ಮನೆಯಲ್ಲಿ ವಾಸವಾಗಿದ್ದರು. ಇವರ ಅಂತ್ಯಕ್ರಿಯೆ ಮಧ್ಯಾಹ್ನ ತೋಟದಲ್ಲಿ ನೆರವೇರಿಸಲಾಯಿತು. ಇವರ ನಿಧನಕ್ಕೆ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ನಗರಸಭಾ ಸದಸ್ಯರು ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

Wednesday, October 13, 2021

ಕರಾವೇ ಮಹಿಳಾ ಘಟಕಕ್ಕೆ ನೂತನ ಅಧ್ಯಕ್ಷರುಗಳ ನೇಮಕ

ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಘಟಕ ಸಂಘಟನಾತ್ಮಕವಾಗಿ ಹೆಚ್ಚು ಬಲಗೊಳ್ಳುತ್ತಿದ್ದು, ಹೆಚ್ಚಿನ ಜವಾಬ್ದಾರಿ ಹಿನ್ನಲೆಯಲ್ಲಿ ನೂತನ ಅಧ್ಯಕ್ಷರುಗಳನ್ನು ಜಿಲ್ಲಾಧ್ಯಕ್ಷೆ ಜ್ಯೋತಿ ಸೋಮಶೇಖರ್ ನೇತೃತ್ವದಲ್ಲಿ ನೇಮಕ ಮಾಡಲಾಯಿತು.
    ಭದ್ರಾವತಿ, ಅ. ೧೩: ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಘಟಕದ ಶಿವಮೊಗ್ಗ ತಾಲೂಕು ಅಧ್ಯಕ್ಷರಾಗಿ ಗಂಗಾವತಿ ನೇಮಕಗೊಂಡಿದ್ದಾರೆ.
    ಮಹಿಳಾ ಘಟಕ ಸಂಘಟನಾತ್ಮಕವಾಗಿ ಹೆಚ್ಚು ಬಲಗೊಳ್ಳುತ್ತಿದ್ದು, ಹೆಚ್ಚಿನ ಜವಾಬ್ದಾರಿ ಹಿನ್ನಲೆಯಲ್ಲಿ ನೂತನ ಅಧ್ಯಕ್ಷರುಗಳನ್ನು ಜಿಲ್ಲಾಧ್ಯಕ್ಷೆ ಜ್ಯೋತಿ ಸೋಮಶೇಖರ್ ನೇತೃತ್ವದಲ್ಲಿ ನೇಮಕ ಮಾಡಲಾಗಿದೆ.
    ಶಿವಮೊಗ್ಗ ತಾಲೂಕು ನೂತನ ಅಧ್ಯಕ್ಷರಾಗಿ ಗಂಗಾವತಿ, ಶಿವಮೊಗ್ಗ ನಗರ ಘಟಕದ ನೂತನ ಅಧ್ಯಕ್ಷರಾಗಿ ಜ್ಯೋತಿ ರಂಗನಾಥ್ ಹಾಗು ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ವೇದಾ ಅವರನ್ನು ನೇಮಕಗೊಳಿಸಿದ್ದು, ಸಂಘಟನೆಯ ತತ್ವ, ಸಿದ್ದಾಂತಗಳಿಗೆ ಬದ್ಧರಾಗಿ ಕಾರ್ಯ ನಿರ್ವಹಿಸುವಂತೆ ಜಿಲ್ಲಾಧ್ಯಕ್ಷೆ ಜ್ಯೋತಿ ಸೋಮಶೇಖರ್ ಸೂಚಿಸಿದ್ದಾರೆ.
    ನೂತನ ಅಧ್ಯಕ್ಷರುಗಳನ್ನು ಜಿಲ್ಲಾ ಘಟಕದ ವತಿಯಿಂದ ಅಭಿನಂದಿಸಲಾಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾರದಾ. ಭದ್ರಾವತಿ ತಾಲೂಕು ಅಧ್ಯಕ್ಷೆ ಮಹೇಶ್ವರಿ, ಉಪಾಧ್ಯಕ್ಷೆ ಗೌರಮ್ಮ, ಸಂಘಟನಾ ಕಾರ್ಯದರ್ಶಿ ನಾಗರತ್ನ. ಜಿಲ್ಲಾ ಕಾರ್ಯದರ್ಶಿ ಪವಿತ್ರ, ರೂಪ, ಸುಮತಿ, ರುಕ್ಮಿಣಿ, ರೇಣುಕಾ, ಯಾಸ್ಮಿನ್, ರೇಖಾ, ಸುಧಾ, ನಳಿನಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ದಲಿತ ಬಾಲಕಿ ಮೇಲೆ ದೌರ್ಜನ್ಯ, ಅತ್ಯಾಚಾರ ಘಟನೆ : ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ಆಗ್ರಹ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಚೌಡೇಶ್ವರಿ ಹಾಳ ಗ್ರಾಮದ ದಲಿತ ಬಾಲಕಿಯ ಮೇಲೆ ನಡೆದ ದೌರ್ಜನ್ಯ ಮತ್ತು ಅತ್ಯಾಚಾರ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಭದ್ರಾವತಿಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ಅ. ೧೩: ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಚೌಡೇಶ್ವರಿ ಹಾಳ ಗ್ರಾಮದ ದಲಿತ ಬಾಲಕಿಯ ಮೇಲೆ ನಡೆದ ದೌರ್ಜನ್ಯ ಮತ್ತು ಅತ್ಯಾಚಾರ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಮುಖಂಡರು ಆಗ್ರಹಿಸಿದರು.
    ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದ ಮುಖಂಡರು, ದಲಿತ ಬಾಲಕಿಯರ ಮೇಲಿನ ದೌರ್ಜನ್ಯ ಹಾಗು ಅತ್ಯಾಚಾರ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ದಲಿತ ಕುಟುಂಬದ ಹೆಣ್ಣು ಮಕ್ಕಳಿಗೆ ಸೂಕ್ತ ರಕ್ಷಣೆ ಇಲ್ಲದಂತಾಗಿದೆ. ದೌರ್ಜನ್ಯ ಹಾಗು ಅತ್ಯಾಚಾರ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು. ಈ ನಿಟ್ಟಿನಲ್ಲಿ ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
    ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ರಾಜ್ಯ ಸಂಘಟನಾ ಸಂಚಾಲಕ ಶಿವಬಸಪ್ಪನವರು, ತಾಲೂಕು ಸಂಚಾಲಕ ಆರ್. ರವಿನಾಯ್ಕ ಪ್ರತಿಭಟನೆ ನೇತೃತ್ವ ವಹಿಸಿದ್ದರು. ನಗರ ಸಂಚಾಲಕ ಆರ್. ತಮ್ಮಯ್ಯ, ಶಿಕ್ಷಕ ಮಹಾದೇವಪ್ಪ ಮತ್ತು ಸಂಘಟನಾ  ಸಂಚಾಲಕ ಶಿವನಾಯ್ಕ, ನಾಗೇಶ್, ಸೋನಿ ಮೆಲೋಡಿ ಮಾಲೀಕ ಅರ್ ಹರೀಶ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಪಾರಂಪರಿಕ ಸ್ಥಳಗಳು, ಪ್ರವಾಸಿ ತಾಣಗಳು, ವನ್ಯ ಜೀವಿ ನೆಲೆಗಳು ಇಲ್ಲಿ ಅನಾವರಣ

ಮೈಸೂರು ದಸರಾ ನಾಡಹಬ್ಬ ಗೊಂಬೆ ಪ್ರದರ್ಶನದ ಮೂಲಕ ಗಮನ ಸೆಳೆಯುತ್ತಿರುವ ದಂಪತಿ

ಭದ್ರಾವತಿ ನ್ಯೂಕಾಲೋನಿ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ ಸಮೀಪದ ವಿಐಎಸ್‌ಎಲ್ ವಸತಿ ಗೃಹದಲ್ಲಿ ವಾಸವಾಗಿರುವ ಉಮೇಶ್ ಹಾಗು ಕುಸುಮ ದಂಪತಿ ಈ ಬಾರಿ ಕೈಗೊಂಡಿರುವ ದಸರಾ ಗೊಂಬೆ ಪ್ರದರ್ಶನ ಎಲ್ಲರನ್ನು ಆಕರ್ಷಿಸುತ್ತಿದೆ.

     * ಅನಂತಕುಮಾರ್
     ಭದ್ರಾವತಿ: ವೈಭವದ ಮೈಸೂರು ದಸರಾ ನಾಡಹಬ್ಬ ಪರಂಪರೆ ಕೇವಲ ಗೊಂಬೆ ಪ್ರದರ್ಶನಕ್ಕೆ ಮಾತ್ರ ಸೀಮಿತವಾಗದೆ. ನಮ್ಮ ಸುತ್ತಮುತ್ತಲಿನ ಪಾರಂಪರಿಕ ಸ್ಥಳಗಳು, ಪ್ರವಾಸಿ ತಾಣಗಳು, ವನ್ಯ ಜೀವಿ ನೆಲೆಗಳನ್ನು ಸಹ ಅನಾವರಣಗೊಳಿಸುವ ಮೂಲಕ ನಗರದ ನಿವಾಸಿಗಳಾದ ಉಮೇಶ್ ಮತ್ತು ಕುಸುಮ ದಂಪತಿ ಜನರ ಗಮನ ಸೆಳೆಯುತ್ತಿದ್ದಾರೆ.
    ನಗರದ ನ್ಯೂಕಾಲೋನಿ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ ಸಮೀಪದ ವಿಐಎಸ್‌ಎಲ್ ವಸತಿ ಗೃಹದಲ್ಲಿ ವಾಸವಾಗಿರುವ ವೆಸ್ಟೀಜ್ ಹೆಲ್ತ್‌ಕೇರ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಉಮೇಶ್ ಹಾಗು ನ್ಯಾಯಾಂಗ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕುಸುಮ ದಂಪತಿ ಕಳೆದ ೨೦ ವರ್ಷಗಳಿಂದ ಮೈಸೂರು ದಸರಾ ನಾಡಹಬ್ಬ ಪರಂಪರೆಯನ್ನು ಗೊಂಬೆ ಪ್ರದರ್ಶನದ ಮೂಲಕ ಉಕ್ಕಿನ ನಗರದ ಜನತೆಗೆ ಪರಿಚಯಿಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.

ನಮ್ಮ ನಾಡಿನ ಭವ್ಯ ಪರಂಪರೆ ಮುಂದಿನ ಪೀಳಿಗೆಗೂ ಉಳಿಯಬೇಕೆಂಬ ಆಶಯ ನಮ್ಮದಾಗಿದೆ. ಅದರಲ್ಲೂ ಉಕ್ಕಿನ ನಗರದ ಜನತೆಗೆ ಈ ಪರಂಪರೆಯನ್ನು ಪರಿಚಯಿಸುವ ಮೂಲಕ ಸಮಾಜದ ಎಲ್ಲರೂ ಜಾತಿ, ಧರ್ಮ, ಭೇದಭಾವ ಮರೆತು ಒಗ್ಗಟ್ಟಾಗಿ ಆಚರಿಸುವಂತಾಗಬೇಕು. ಈ ನಿಟ್ಟಿನಲ್ಲಿ ನಮ್ಮ ಕಾರ್ಯ ನಡೆಸಿಕೊಂಡು ಬರಲಾಗುತ್ತಿದೆ.
                                                                                                                  - ಉಮೇಶ್, ಭದ್ರಾವತಿ




    ವಿಶೇಷ ಎಂದರೆ ವನ್ಯ ಜೀವಿ ತಾಣಗಳಾದ ಶಿವಮೊಗ್ಗ ತಾವರೆಕೊಪ್ಪ ಹುಲಿ ಮತ್ತು ಸಿಂಹ ಧಾಮ, ಸಕ್ರೆಬೈಲು ಆನೆ ಬಿಡಾರ, ಭದ್ರಾ ಅಭಯಾರಣ್ಯ, ಗುಡವಿ ಪಕ್ಷಿ ಧಾಮ, ಮತ್ಸ್ಯ ಧಾಮ ಹಾಗು ವಿಜಯ ನಗರ, ಚಾಮುಂಡಿ ಬೆಟ್ಟ, ಶ್ರೀ ಕ್ಷೇತ್ರ ಧರ್ಮಸ್ಥಳ, ಇಡಗುಂಜಿ, ಗಾಣಗಾಪುರ, ಗೋಕರ್ಣ ಸೇರಿದಂತೆ ಹಲವು ಪ್ರವಾಸಿ ತಾಣಗಳು ಹಾಗು ಧಾರ್ಮಿಕ ಕ್ಷೇತ್ರಗಳನ್ನು ಆಕರ್ಷಕವಾಗಿ ಅನಾವರಣಗೊಳಿಸಲಾಗಿದೆ. ಇದರ ಜೊತೆಗೆ ಆಧುನಿಕ ಶೈಲಿಯ ಅಡುಗೆ ಮನೆ ಹಾಗು ಪ್ರಾಚಿನ ಕಾಲದ ಅಡುಗೆ ಮನೆ ಮತ್ತು ನಗರದ ಪದ್ಮನಿಲಯ ಹೋಟೆಲ್ ಸಹ ಇಲ್ಲಿ ತೆರೆದುಕೊಂಡಿವೆ.

ತಾಯಿ ಮನೆಯಿಂದ ರೂಢಿಸಿಕೊಂಡು ಬಂದ ಭವ್ಯಪರಂಪರೆಯ ಈ ಆಚರಣೆಯನ್ನು ಅತ್ತೆಯ ಮನೆಯಲ್ಲೂ ಮುಂದುವರೆಸಿಕೊಂಡು ಹೋಗುತ್ತಿದ್ದೇನೆ. ಪ್ರತಿ ವರ್ಷ ವಿಭಿನ್ನತೆ ಕಾಯ್ದುಕೊಂಡು ಬರಲಾಗುತ್ತಿದೆ. ಈ ಗೊಂಬೆ ಪ್ರದರ್ಶನವನ್ನು ವೀಕ್ಷಿಸಲು ಪ್ರತಿ ವರ್ಷ ನೂರಾರು ಮಂದಿ ಆಗಮಿಸುತ್ತಿದ್ದು, ಮತ್ತಷ್ಟು ಸ್ಪೂರ್ತಿಯನ್ನುಂಟು ಮಾಡುತ್ತಿದೆ.
                                                                                                                 - ಕುಸುಮ, ಭದ್ರಾವತಿ

    ಉಳಿದಂತೆ ತಾಯಿ ಶ್ರೀ ಚಾಮುಂಡೇಶ್ವರಿ ದೇವಿಯನ್ನೊಳಗೊಂಡಂತೆ ನವದುರ್ಗಿಯರು, ಶೃಂಗೇರಿ ಶಾರದಾಂಬೆ, ಆಚಾರ್ಯತ್ರಯರು, ದಶವತಾರ, ವಿಶ್ವರೂಪ, ಶ್ರೀ ತಿರುಪತಿ ವೆಂಕಟೇಶ್ವರ, ಸಪ್ತಋಷಿ, ಸಂಗೀತ ವಾದ್ಯಗಳು, ಬೆಣ್ಣೆಕೃಷ್ಣ, ಲಲಿತಾದೇವಿ ಅಷ್ಟ ಲಕ್ಷ್ಮಿಯರು, ತ್ರಿಶಕ್ತಿ ಅನಂತಪದ್ಮನಾಭ, ರುಕ್ಮಿಣಿ ಪಾಂಡುರಂಗ ಜೊತೆಗೆ ವಿಶೇಷವಾಗಿ ಸುಮಾರು ೧೫೦ ವರ್ಷ ಹಳೆಯದಾದ ಪಟ್ಟದ ಗೊಂಬೆ ಸಹ ಇದ್ದು ಇವುಗಳನ್ನು ನೋಡಿ ಆನಂದಿಸುವ ಜೊತೆಗೆ ಕಣ್ತುಂಬಿ ಕೊಳ್ಳಬಹುದಾಗಿದೆ. ಇವುಗಳ ನಡುವೆ ದೇಶದ ಬೆನ್ನೆಲುಬು ರೈತನನ್ನು ಈ ದಂಪತಿ ಸ್ಮರಿಸಿರುವುದು ಈ ದಂಪತಿಯ ಮತ್ತೊಂದು ವಿಶೇಷವಾಗಿದೆ.
    ಉಮೇಶ್ ಅವರ ತಾಯಿ ನಾಗರತ್ನ ಅವರ ಮಾರ್ಗದರ್ಶನದಲ್ಲಿ ಮಕ್ಕಳಾದ ಸ್ಕಂದ ಭಾರದ್ವಾಜ್ ಮತ್ತು ಸ್ತುತಿ ಭಾರದ್ವಾಜ್ ಅವರ ಸಹಕಾರದೊಂದಿಗೆ ಈ ದಂಪತಿ ಬಿಡುವಿಲ್ಲದ ಕರ್ತವ್ಯದ ನಡುವೆಯೂ ಯಶಸ್ವಿಯಾಗಿ ಈ ಕಾರ್ಯವನ್ನು ಮುನ್ನೆಡೆಸಿಕೊಂಡು ಬರುತ್ತಿದ್ದಾರೆ. ಅಲ್ಲದೆ ಸುತ್ತಮುತ್ತಲಿನ ನಿವಾಸಿಗಳು ಪ್ರತಿ ವರ್ಷ ಇವರ ಮನೆಗೆ ಭೇಟಿ ನೀಡಿ ಗೊಂಬೆ ಪ್ರದರ್ಶನ ವೀಕ್ಷಿಸಿ ಕಣ್ತುಂಬಿಕೊಳ್ಳುತ್ತಿದ್ದಾರೆ.