Monday, October 25, 2021

ಎರಡೂವರೆ ವರ್ಷಗಳ ನಂತರ ಪುಟಾಣಿ ಮಕ್ಕಳಿಗೆ ಅದ್ದೂರಿ ಸ್ವಾಗತ

೩ನೇ ಅಲೆ ಭೀತಿ ನಡುವೆಯೂ ಶಾಲೆಗಳಿಗೆ ಮಕ್ಕಳನ್ನು ಕಳುಹಿಸಲು ಪೋಷಕರಲ್ಲಿ ಉತ್ಸಾಹ

ಭದ್ರಾವತಿ ನ್ಯೂಟೌನ್ ಶ್ರೀ ಸತ್ಯ ಸಾಯಿ ಬಾಬಾ ಸಮಗ್ರ ಶಿಕ್ಷಣ ಸಂಸ್ಥೆಯಲ್ಲಿ ಸೋಮವಾರ ೧ ರಿಂದ ೫ನೇ ತರಗತಿ ಮಕ್ಕಳನ್ನು ಪೋಷಕರು ಕರೆ ತರುತ್ತಿರುವುದು.
    ಭದ್ರಾವತಿ, ಅ. ೨೫: ಸುಮಾರು ಎರಡೂವರೆ ವರ್ಷಗಳ ನಂತರ ಸರ್ಕಾರ ೧ ರಿಂದ ೫ನೇ ತರಗತಿ ಮಕ್ಕಳಿಗೆ ಶಾಲೆಗಳಲ್ಲಿ ಭೌತಿಕ ತರಗತಿಗಳನ್ನು ಆರಂಭಿಸಲು  ಅನುಮತಿ ನೀಡಿದ ಹಿನ್ನಲೆಯಲ್ಲಿ ತಾಲೂಕಿನ ಸರ್ಕಾರಿ, ಅನುದಾನಿತ ಹಾಗು ಅನುದಾನ ರಹಿತ ಶಾಲೆಗಳಲ್ಲಿ ಸೋಮವಾರ ಹಬ್ಬದ ವಾತಾವರಣ ಕಂಡು ಬಂದಿತು.
    ಮಹಾಮಾರಿ ಕೊರೋನಾ ಸೋಂಕಿನ ಹಿನ್ನಲೆಯಲ್ಲಿ ೧ ಮತ್ತು ೨ನೇ ಅಲೆ ಭೀತಿಯಿಂದ ಸ್ವಲ್ಪಮಟ್ಟಿಗೆ ಹೊರ ಬಂದಿರುವ ಜನರು ಕಳೆದ ೩-೪ ತಿಂಗಳಿನಿಂದ ಮೊದಲಿನಂತೆ ಸಹಜ ಬದುಕಿನ ಕಡೆಗೆ ಹೆಚ್ಚಿನ ಗಮನ ಹರಿಸಿದ್ದು, ಈ ನಡುವೆ ೩ನೇ ಅಲೆ ಮಕ್ಕಳ ಮೇಲೆ ದುಷ್ಪರಿಣಾಮ ಬೀರಲಿದೆ ಎಂಬ ತಜ್ಞರ ಎಚ್ಚರಿಕೆ ನಡುವೆಯೂ ಕಳೆದ ಸುಮಾರು ಎರಡೂವರೆ ವರ್ಷಗಳಿಂದ ಭೌತಿಕ ತರಗತಿಗಳಿಂದ ವಂಚಿತರಾಗಿದ್ದ ೧ ರಿಂದ ೫ನೇ ತರಗತಿವರೆಗಿನ ಮಕ್ಕಳನ್ನು ಶಾಲೆಗಳಿಗೆ ಕಳುಹಿಸುವಲ್ಲಿ ಪೋಷಕರು ಉತ್ಸುಕರಾಗಿವುದು ಕಂಡು ಬಂದಿತು.
    ತಾಲೂಕಿನ ಎಲ್ಲಾ ಸರ್ಕಾರಿ, ಅನುದಾನಿತ ಹಾಗು ಅನುದಾನ ರಹಿತ ಶಾಲೆಗಳಲ್ಲಿ ೧ ರಿಂದ ೫ನೇ ತರಗತಿ ಮಕ್ಕಳನ್ನು ವಿಭಿನ್ನ ರೀತಿಯಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಇದಕ್ಕೆ ಪೂರಕವೆಂಬ ಪೋಷಕರಿಂದ ಮೊದಲ ದಿನವೇ ಉತ್ತಮ ಸ್ಪಂದನೆ ವ್ಯಕ್ತಯಾಗಿದ್ದು, ತಮ್ಮ ತಮ್ಮ ಮಕ್ಕಳನ್ನು ಶಾಲೆಗಳಿಗೆ ಕರೆ ತರುವ ಮೂಲಕ ಆರಂಭದ ಶುಭ ದಿನಕ್ಕೆ ಮುನ್ನುಡಿ ಬರೆದರು.
    ಶಾಲಾ ಆಡಳಿತ ಮಂಡಳಿಗಳು ಸರ್ಕಾರ ಸೂಚಿಸಿರುವ ಕೋವಿಡ್-೧೯ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಹೆಚ್ಚಿನ ಮುಂಜಾಗ್ರತೆ ವಹಿಸಿರುವುದು ಕಂಡು ಬಂದಿತು. ಶಿಕ್ಷಕರು ಮಕ್ಕಳಿಗೆ ಸಿಹಿ ನೀಡುವ ಮೂಲಕ ತರಗತಿಗಳಿಗೆ ಸಡಗರ ಸಂಭ್ರಮದಿಂದ ಬರಮಾಡಿಕೊಂಡು ಮೊದಲ ದಿನದ ಪಾಠ ಪ್ರವಚನ ಆರಂಭಿಸಿದರು.  ವಿದ್ಯಾರ್ಥಿಗಳಿಲ್ಲದೆ ಬಿಕೋ ಎನ್ನುತ್ತಿದ್ದ ಬಹುತೇಕ ಶಾಲೆಗಳಿಗೆ ಮಕ್ಕಳ ಆಗಮನ ಸುಮಾರು ಎರಡೂವರೆ ವರ್ಷಗಳಿಂದ ಕಳೆದು ಹೋಗಿದ್ದ ಮೆರಗು ಮರುಕಳುಹಿಸಿದಂತೆ ಕಂಡು ಬಂದಿತು.


ಭದ್ರಾವತಿ ನಗರಸಭೆ ವ್ಯಾಪ್ತಿಯ ಬೊಮ್ಮನಕಟ್ಟೆ ಸರ್ಕಾರಿ ಶಾಲೆಯಲ್ಲಿ ೧ ರಿಂದ ೫ನೇ ತರಗತಿ ಮಕ್ಕಳ ಕೈಗಳಿಗೆ ಸ್ಯಾನಿಟೈಜರ್ ಹಾಕುವ ಮೂಲಕ ಕೊಠಡಿಗಳಿಗೆ ಪ್ರವೇಶ ನೀಡಲಾಯಿತು.

ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ ನೀಡಿ

ಸರ್ವೋಚ್ಛ ನ್ಯಾಯಾಲಯದ ಆದೇಶದ ಪ್ರಕಾರ ರಾಜ್ಯದಲ್ಲಿ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ ನೀಡುವಂತೆ ಆಗ್ರಹಿಸಿ ಜನತಾದಳ(ಸಂಯುಕ್ತ) ಕರ್ನಾಟಕ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ ಸೋಮವಾರ ಭದ್ರಾವತಿ ತಾಲೂಕು ಕಛೇರಿ ಮಿನಿ ವಿಧಾನಸೌಧದ ಮುಂಭಾಗ ಏಕಾಂಗಿ ಹೋರಾಟ ನಡೆಸಿದರು.
    ಭದ್ರಾವತಿ, ಅ. ೨೫: ಸರ್ವೋಚ್ಛ ನ್ಯಾಯಾಲಯದ ಆದೇಶದ ಪ್ರಕಾರ ರಾಜ್ಯದಲ್ಲಿ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ ನೀಡುವಂತೆ ಆಗ್ರಹಿಸಿ ಜನತಾದಳ(ಸಂಯುಕ್ತ) ಕರ್ನಾಟಕ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ ಸೋಮವಾರ ತಾಲೂಕು ಕಛೇರಿ ಮಿನಿ ವಿಧಾನಸೌಧದ ಮುಂಭಾಗ ಏಕಾಂಗಿ ಹೋರಾಟ ನಡೆಸುವ ಮೂಲಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಿದ್ದಾರೆ.
    ಸರ್ವೋಚ್ಛ ನ್ಯಾಯಾಲಯ ಪಟಾಕಿ ಮಾರಾಟಕ್ಕೆ ಸಂಬಂಧಿಸಿದಂತೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಹಾಗು ಪರಿಸರಕ್ಕೆ ಹಾನಿ ಉಂಟು ಮಾಡುವ ೨೦೧೭ಕ್ಕೂ ಮೊದಲು ತಯಾರಿಸುತ್ತಿದ್ದ ಪಟಾಕಿ ಸಂಪೂರ್ಣವಾಗಿ ನಿಷೇಧಿಸುವಂತೆ ಆದೇಶಿಸಿದೆ. ಆದರೆ ಪಟಾಕಿ ತಯಾರಿಸುವ ಕಂಪನಿಗಳು ಮತ್ತು ಮಾರಾಟಗಾರರು ಆದೇಶವನ್ನು ಪಾಲಿಸುತ್ತಿಲ್ಲ ಎಂದು ಆರೋಪಿಸಿದರು.
    ಹಸಿರು ಪಟಾಕಿಯಿಂದ ಪರಿಸರಕ್ಕೆ ಹೆಚ್ಚಿನ ಹಾನಿ ಉಂಟಾಗುವುದಿಲ್ಲ. ಅಲ್ಲದೆ ಆರೋಗ್ಯದ ಮೇಲೆ ಸಹ ಹೆಚ್ಚಿನ ದುಷ್ಪರಿಣಾಮ ಉಂಟಾಗುವುದಿಲ್ಲ. ಅಲ್ಲದೆ ಕೇಂದ್ರ ಸರ್ಕಾರದ ಮಾಲಿನ್ಯ ನಿಯಂತ್ರಣ ಮಂಡಳಿ ಪಿ.ಇ.ಎಸ್.ಓ ಹಸಿರು ಪಟಾಕಿ ಮಾರಾಟಕ್ಕೆ ಒಪ್ಪಿಗೆ ಸೂಚಿಸಿದೆ. ಈ ಹಿನ್ನಲೆಯಲ್ಲಿ ಮಾರಾಟಗಾರರಿಗೆ ಕೇವಲ ಹಸಿರು ಪಟಾಕಿ ಮಾತ್ರ ಮಾರಾಟ ಮಾಡುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಮೂಲಕ ಸೂಚಿಸಬೇಕೆಂದು ಒತ್ತಾಯಿಸಿದರು.  

ತಾತಮ್ಮ ನಿಧನ

ತಾತಮ್ಮ
    ಭದ್ರಾವತಿ, ಅ. ೨೫: ನಗರದ ಕಡದಕಟ್ಟೆ ರೈಲ್ವೆ ಗೇಟ್ ಸಮೀಪದ ಬಲಭಾಗದ ನಿವಾಸಿ ದಿವಂಗತ ಪಿ. ಯಲ್ಲಯ್ಯನವರ ಪತ್ನಿ ತಾತಮ್ಮ(೮೬) ನಿಧನ ಹೊಂದಿದರು.
    ೫ ಪುತ್ರರು, ೨ ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು, ಮರಿಮೊಮ್ಮಕ್ಕಳನ್ನು ಹೊಂದಿದ್ದರು. ಇವರ ಅಂತ್ಯಕ್ರಿಯೆ ಸೋಮವಾರ ಹುತ್ತಾಕಾಲೋನಿ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು. ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಗಣ್ಯರು ಸಂತಾಪ ಸೂಚಿಸಿದ್ದಾರೆ.


ಅನುದಾನ ಮಂಜೂರಾತಿ ಮಾಡಿಸಿಕೊಟ್ಟಿದ್ದರೂ ಅಭಿವೃದ್ಧಿ ಕಾಮಗಾರಿಗಳು ವಿಳಂಬ

ಕೆಡಿಪಿ ಸಭೆಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಅಸಮಾಧಾನ

ಭದ್ರಾವತಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಪ್ರಥಮ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆಯಲ್ಲಿ ನಡೆಯಿತು.
    ಭದ್ರಾವತಿ, ಅ. ೨೫: ತಾಲೂಕಿನಾದ್ಯಂತ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಬಾಕಿ ಉಕಿದಿದ್ದು, ಸರ್ಕಾರದಿಂದ ಕೋಟ್ಯಾಂತರ ರು. ಅನುದಾನ ಮಂಜೂರಾತಿ ಮಾಡಿಸಿಕೊಟ್ಟಿದ್ದರೂ ಸಹ ಕಾಮಗಾರಿಗಳು ವಿಳಂಬವಾಗಿ ನಡೆಯುತ್ತಿವೆ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿದರು.
    ಅವರು ಸೋಮವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಥಮ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ(ಕೆಡಿಪಿ)ಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ತಾಲೂಕಿನಲ್ಲಿ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳು, ಪ್ರಗತಿಯಲ್ಲಿರುವ ಹಾಗು ಬಾಕಿ ಇರುವ ಕಾಮಗಾರಿಗಳ ಕುರಿತು ಚರ್ಚಿಸಲು ಸಭೆ ಕರೆಯಲಾಗಿದೆ. ಆದರೆ ಸಭೆಗೆ ಇಲಾಖೆಗಳ ಹಿರಿಯ ಅಧಿಕಾರಿಗಳು ಪಾಲ್ಗೊಳ್ಳದಿರುವುದು ವಿಪರ್ಯಾಸದ ಸಂಗತಿಯಾಗಿದ್ದು, ಸಭೆ ಯಾರಿಗಾಗಿ ನಡೆಸಬೇಕಾಗಿದೆ ಎಂಬ ಪ್ರಶ್ನೆ ಎದುರಾಗಿದೆ ಎಂದರು.
    ಪ್ರಮುಖವಾಗಿ ತಾಲೂಕಿನಲ್ಲಿ ಸಾಕಷ್ಟುಗಳು ರಸ್ತೆಗಳು ಹಾಳಾಗಿದ್ದು, ತುರ್ತು ಕಾಮಗಾರಿಗಳಿಗಾಗಿ ಸರ್ಕಾರಿಂದ ೮೦ ಲಕ್ಷ ರು. ಅನುದಾನ ಬಿಡುಗಡೆಯಾಗಿದೆ. ಲೋಕೋಪಯೋಗಿ ಹಾಗು ನೀರಾವರಿ ಇಲಾಖೆಗಳಿಗೆ ಕೋಟ್ಯಾಂತರ ರು. ಅನುದಾನ ಸರ್ಕಾರದಿಂದ ಬಿಡುಗಡೆ ಮಾಡಿಸಿಕೊಡಲಾಗಿದೆ. ಆದರೆ ಬಹಳಷ್ಟು ಕಾಮಗಾರಿಗಳು ಬಾಕಿ ಉಳಿದಿದ್ದು, ಅಲ್ಲದೆ ಕಾಮಗಾರಿಗಳನ್ನು ವಿಳಂಬವಾಗಿ ಕೈಗೆತ್ತಿಕೊಳ್ಳಲಾಗುತ್ತಿದೆ. ಇದಕ್ಕೆ ಕಾರಣಗಳು ತಿಳಿದು ಬರುತ್ತಿಲ್ಲ. ಅಧಿಕಾರಿಗಳು ಜವಾಬ್ದಾರಿಯುತವಾಗಿ ತಮ್ಮ ಕರ್ತವ್ಯಗಳನ್ನು ನಿಭಾಯಿಸಬೇಕು. ಜನರ ಸಂಕಷ್ಟಗಳಿಗೆ ತಕ್ಷಣ ಸ್ಪಂದಿಸಬೇಕೆಂದರು.
    ಸಭೆಯಲ್ಲಿ ಪಾಲ್ಗೊಂಡಿದ್ದ ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ವಿರೂಪಾಕ್ಷಪ್ಪ ಮಾತನಾಡಿ, ಕಂದಾಯ ಇಲಾಖೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿದರು. ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಗಳ ಪ್ರಗತಿ ಮಾಹಿತಿಯನ್ನು ಮಂಡಿಸಿದರು.
    ಸಭೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ಗ್ರಾಮಾಂತರ ವೃತ್ತ ನಿರೀಕ್ಷಕ ಚೈತನ್ಯ ಉಪಸ್ಥಿತರಿದ್ದರು. ಕೆಡಿಪಿ ಸಮಿತಿ ಸದಸ್ಯರಾದ ಸುನೀತಾ ಮೋಹನ್, ನಾಗರಾಜ್‌ರಾವ್ ಅಂಬೋರೆ, ಗಜೇಂದ್ರಜೈನ್ ಮತ್ತು ಚಂದ್ರಪ್ಪ, ನಗರಸಭೆ ಹಿರಿಯ ಸದಸ್ಯ ಬಿ.ಟಿ ನಾಗರಾಜ್, ಆರ್. ಮೋಹನ್‌ಕುಮಾರ್,  ನ್ಯಾಯವಾದಿ ಟಿ. ಚಂದ್ರೇಗೌಡ,  ವಿವಿಧ ಇಲಾಖೆ ಅಧಿಕಾರಿಗಳಾದ ಎಸ್.ಎಸ್.ವೈ ಶಿರಸ್ತೇದಾರ್ ರಾಧಾಕೃಷ್ಣಭಟ್, ಸಹಾಯಕ ಕೃಷಿ ನಿರ್ದೇಶಕ ಶಶಿಧರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗೋಪಿನಾಥ್, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ಕೆಎಸ್‌ಆರ್‌ಟಿಸಿ ಭದ್ರಾವತಿ ಘಟಕದ ವ್ಯವಸ್ಥಾಪಕಿ ಅಂಬಿಕಾ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಕಾಂತರಾಜ್, ನಗರಸಭೆ ಸಹಾಯಕ ಇಂಜಿನಿಯರ್ ಶ್ರೀರಂಗರಾಜ ಪುರೆ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.  

Sunday, October 24, 2021

ಭಾರಿ ಮಳೆ : ಮನೆಗಳಿಗೆ ನುಗ್ಗಿದ ಕೆರೆ ನೀರು

ಭದ್ರಾವತಿ ನಗರಸಭೆ ವಾರ್ಡ್ ನಂ.೨೨ರ ವ್ಯಾಪ್ತಿಯ ಉಜ್ಜನಿಪುರದಲ್ಲಿರುವ ಕೆರೆ ಒತ್ತುವರಿ ಕಾರ್ಯಾಚರಣೆ ಕೈಗೊಳ್ಳದ ಕಾರಣ ಎರಡು ದಿನಗಳಿಂದ ಸಂಜೆ ವೇಳೆ ಸುರಿಯುತ್ತಿರುವ ಭಾರಿ ಮಳೆ ಪರಿಣಾಮ ಕೆರೆ ನೀರು ಸಮೀಪದಲ್ಲಿರುವ ಮನೆಗಳಿಗೆ ನುಗ್ಗುತ್ತಿದ್ದು, ಸ್ಥಳಕ್ಕೆ ಕಂದಾಯಾಧಿಕಾರಿ ಪ್ರಶಾಂತ್, ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕಿ ಆಶಾಲತಾ ಭೇಟಿ ನೀಡಿ ಪರಿಶೀಲನೆ ನಡೆಸಿದರು.
    ಭದ್ರಾವತಿ, ಅ. ೨೪: ನಗರಸಭೆ ವಾರ್ಡ್ ನಂ.೨೨ರ ವ್ಯಾಪ್ತಿಯ ಉಜ್ಜನಿಪುರದಲ್ಲಿರುವ ಕೆರೆ ಒತ್ತುವರಿ ಕಾರ್ಯಾಚರಣೆ ಕೈಗೊಳ್ಳದ ಕಾರಣ ಎರಡು ದಿನಗಳಿಂದ ಸಂಜೆ ವೇಳೆ ಸುರಿಯುತ್ತಿರುವ ಭಾರಿ ಮಳೆ ಪರಿಣಾಮ ಕೆರೆ ನೀರು ಸಮೀಪದಲ್ಲಿರುವ ಮನೆಗಳಿಗೆ ನುಗ್ಗುತ್ತಿದ್ದು, ಇದರಿಂದಾಗಿ ನಿವಾಸಿಗಳು ಆತಂಕಕ್ಕೆ ಒಳಗಾಗಿದ್ದಾರೆ.
    ಉಜ್ಜನಿಪುರ ಸರ್ವೆ ನಂ.೧೩ ಮತ್ತು ೧೫ರ ವ್ಯಾಪ್ತಿಯಲ್ಲಿನ ಕೆರೆ ಒತ್ತುವರಿ ಕಾರ್ಯಾಚರಣೆ ಕೈಗೊಳ್ಳಲು ತಾಲೂಕು ಆಡಳಿತ ಫೆಬ್ರವರಿ ತಿಂಗಳಿನಲ್ಲಿ ಮುಂದಾಗಿತ್ತು. ಈ ಸಂಬಂಧ ತಿಳುವಳಿಕೆ ಪತ್ರ ಸಹ ಹೊರಡಿಸಿತ್ತು. ಆದರೆ ಇದುವರೆಗೂ ಕಾರ್ಯಾಚರಣೆ ಕೈಗೊಂಡಿಲ್ಲ. ಕೆರೆ ನೀರು ಉಜ್ಜನಿಪುರದಲ್ಲಿ ಹಾದು ಹೋಗಿರುವ ಕಾಲುವೆಗೆ ಬಂದು ಸೇರ್ಪಡೆಗೊಳ್ಳುತ್ತಿದೆ. ಒತ್ತುವರಿಯಾಗಿರುವ ಕಾರಣ ನೀರು ಕಾಲುವೆಗೆ ಸರಾಗವಾಗಿ ನೀರು ಬಂದು ಸೇರುತ್ತಿಲ್ಲ. ಇದರಿಂದಾಗಿ ಕೆರೆ ನೀರು ಸಮೀಪದಲ್ಲಿರುವ ೫-೬ ಮನೆಗಳಿಗೆ ನುಗ್ಗುತ್ತಿದ್ದು, ನಿವಾಸಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಮನೆಯಲ್ಲಿ ನೀರು ತುಂಬಿಕೊಳ್ಳುವ ಪರಿಣಾಮ ಇಡೀ ರಾತ್ರಿ ನಿದ್ರೆಯಿಲ್ಲದೆ ಕಾಲ ಕಳೆಯುವಂತಾಗಿದೆ. ಅಲ್ಲದೆ ಮನೆಗಳ ಗೋಡೆಗಳು ಶೀತದಿಂದ ಕುಸಿಯುವ ಭೀತಿ ಎದುರಾಗಿದೆ.
    ಭಾನುವಾರ ಬೆಳಿಗ್ಗೆ ಕಂದಾಯಾಧಿಕಾರಿ ಪ್ರಶಾಂತ್ ಹಾಗು ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕಿ ಆಶಾಲತಾ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ನಗರಸಭೆ ಮಾಜಿ ಸದಸ್ಯ ವೆಂಕಟಯ್ಯ ಉಪಸ್ಥಿತರಿದ್ದರು.

ಎಂಪಿಎಂ ಮುಚ್ಚುವಿಕೆ ಆದೇಶದ ವಿರುದ್ಧ ಸಿಡಿದೆದ್ದ ಕಾರ್ಮಿಕರು, ಕುಟುಂಬ ವರ್ಗದವರು

ಕಾರ್ಮಿಕರಿಗೆ ಉದ್ಯೋಗದ ಭದ್ರತೆ : ಸಂಸದ ಬಿ.ವೈ ರಾಘವೇಂದ್ರ ಭರವಸೆ

ರಾಜ್ಯ ಸರ್ಕಾರಿ ಸ್ವಾಮ್ಯದ ಭದ್ರಾವತಿ ಮೈಸೂರು ಕಾಗದ ಕಾರ್ಖಾನೆಯನ್ನು ಕಾರ್ಮಿಕ ಇಲಾಖೆ ಕಾರ್ಯದರ್ಶಿಗಳು ಸಂಪೂರ್ಣವಾಗಿ ಮುಚ್ಚುವ ಸಂಬಂಧ ಹೊರಡಿಸಿರುವ ಆದೇಶ ಹಾಗು ಕಾರ್ಖಾನೆ ಮುಖ್ಯ ಆಡಳಿತಾಧಿಕಾರಿ ಕಾರ್ಮಿಕರನ್ನು ಕರ್ತವ್ಯಕ್ಕೆ ಹಾಜರಾಗದಂತೆ ಸೂಚಿಸಿರುವ ಪತ್ರದ ವಿರುದ್ಧ ಕಾರ್ಮಿಕರು ಹಾಗು ಕುಟುಂಬ ವರ್ಗದವರು ಸಿಡಿದೆದಿದ್ದು, ಭಾನುವಾರ ಶಿವಮೊಗ್ಗದಲ್ಲಿ ಸಂಸದ ಬಿ.ವೈ ರಾಘವೇಂದ್ರ ಅವರನ್ನು ಭೇಟಿಯಾಗಿ ಚರ್ಚಿಸಿದರು.
    ಭದ್ರಾವತಿ, ಅ. ೨೪: ನಗರದ ರಾಜ್ಯ ಸರ್ಕಾರಿ ಸ್ವಾಮ್ಯದ ಮೈಸೂರು ಕಾಗದ ಕಾರ್ಖಾನೆಯನ್ನು ಕಾರ್ಮಿಕ ಇಲಾಖೆ ಕಾರ್ಯದರ್ಶಿಗಳು ಸಂಪೂರ್ಣವಾಗಿ ಮುಚ್ಚುವ ಸಂಬಂಧ ಹೊರಡಿಸಿರುವ ಆದೇಶ ಹಾಗು ಕಾರ್ಖಾನೆ ಮುಖ್ಯ ಆಡಳಿತಾಧಿಕಾರಿ ಕಾರ್ಮಿಕರನ್ನು ಕರ್ತವ್ಯಕ್ಕೆ ಹಾಜರಾಗದಂತೆ ಸೂಚಿಸಿರುವ ಪತ್ರದ ವಿರುದ್ಧ ಕಾರ್ಮಿಕರು ಹಾಗು ಕುಟುಂಬ ವರ್ಗದವರು ಸಿಡಿದೆದಿದ್ದು, ಭಾನುವಾರ ಶಿವಮೊಗ್ಗದಲ್ಲಿ ಸಂಸದ ಬಿ.ವೈ ರಾಘವೇಂದ್ರ ಅವರನ್ನು ಭೇಟಿಯಾಗಿ ಚರ್ಚಿಸಿದರು.
    ಕಾರ್ಮಿಕ ಇಲಾಖೆ ಕಾರ್ಯದರ್ಶಿಗಳು ಅ.೭ರಂದು ಕಾರ್ಖಾನೆಯನ್ನು ಸಂಪೂರ್ಣವಾಗಿ ಮುಚ್ಚುವ ಸಂಬಂಧ ಆದೇಶ ಹೊರಡಿಸಿದ್ದು, ಇದರಿಂದಾಗಿ ಪ್ರಸ್ತುತ ಕಾರ್ಖಾನೆಯಲ್ಲಿರುವ ೨೧೪ ಕಾರ್ಮಿಕರು ಅತಂತ್ರ ಸ್ಥಿತಿಗೆ ಒಳಗಾಗಿದ್ದಾರೆ. ಯಾವುದೇ ಉದ್ಯೋಗದ ಭದ್ರತೆ ಇಲ್ಲದಂತಾಗಿದೆ. ಸರ್ಕಾರ ೨೧೪ ಕಾರ್ಮಿಕರಿಗೆ ಉದ್ಯೋಗದ ಭರವಸೆ ನೀಡಿದ್ದು, ಈಗಾಗಲೇ ೧೪೨ ಮಂದಿ ವಿವಿಧ ನಿಗಮ ಮಂಡಳಿಗಳಲ್ಲಿ ನಿಯೋಜನೆ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಉಳಿದ ೭೨ ಮಂದಿಗೆ ಯಾವುದೇ ಉದ್ಯೋಗವಿಲ್ಲದಂತಾಗಿದೆ. ಈ ನಡುವೆ ಮುಖ್ಯ ಆಡಳಿತಾಧಿಕಾರಿಗಳು ಕಾರ್ಮಿಕರಿಗೆ ಕರ್ತವ್ಯಕ್ಕೆ ಹಾಜರಾಗದಂತೆ ಸೂಚನೆ ಹೊರಡಿಸಿದ್ದಾರೆ. ಇದರಿಂದಾಗಿ ಕಾರ್ಮಿಕರು ಮತ್ತು ಕುಟುಂಬ ವರ್ಗದವರು ಅತಂತ್ರಕ್ಕೆ ಒಳಗಾಗಿದ್ದಾರೆಂದು ಅಳಲು ವ್ಯಕ್ತಪಡಿಸಿದರು.
    ಇದಕ್ಕೆ ಸ್ಪಂದಿಸಿದ ಸಂಸದ ಬಿ.ವೈ ರಾಘವೇಂದ್ರರವರು, ವಿವಿಧ ನಿಗಮ ಮಂಡಳಿಗಳಲ್ಲಿ ನಿಯೋಜನೆ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿರುವವರು ಅಲ್ಲಿಯೇ ಕರ್ತವ್ಯ ಮುಂದುವರೆಸಲು ಸಂಬಂಧಪಟ್ಟ ನಿಗಮ ಮಂಡಳಿಗಳಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಮೂಲಕ ಆದೇಶ ಹೊರಡಿಸಲು ಕ್ರಮ ಕೈಗೊಳ್ಳಲಾಗುವುದು. ಈ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ಹಾಗು ಯಾವುದೇ ಉದ್ಯೋಗವಿಲ್ಲದೆ ಉಳಿದು ಕೊಂಡಿರುವ ೭೨ ಕಾರ್ಮಿಕರಿಗೆ ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
    ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕರಾದ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್, ಎರಡು ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು, ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಎಂ. ಪ್ರಭಾಕರ್, ಪ್ರಧಾನ ಕಾರ್ಯದರ್ಶಿ ಚನ್ನೇಶ್, ಜಿಲ್ಲಾ ಕಾರ್ಯದರ್ಶಿ ಜಿ. ಧರ್ಮಪ್ರಸಾದ್, ಜಯರಾಂ ಸೇರಿದಂತೆ ಕಾರ್ಮಿಕರು, ಕುಟುಂಬ ವರ್ಗದವರು ಪಾಲ್ಗೊಂಡಿದ್ದರು ಎಂದು ಕಾರ್ಮಿಕ ಮುಖಂಡ ಎಚ್. ತಿಮ್ಮಪ್ಪ ತಿಳಿಸಿದರು.

Saturday, October 23, 2021

ಬಾಂಗ್ಲಾದೇಶದಲ್ಲಿ ಹಿಂದೂಗಳ ನರಮೇಧಕ್ಕೆ ಖಂಡನೆ : ಪಂಜಿನ ಮೆರವಣಿಗೆ

ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ನರಮೇಧ ಖಂಡಿಸಿ ಶನಿವಾರ ಸಂಜೆ ಯುವ ಬ್ರಿಗೇಡ್ ವತಿಯಿಂದ ಪಂಚಿನ ಪಂಜಿನ ಮೆರವಣಿಗೆ ನಡೆಸಲಾಯಿತು.
    ಭದ್ರಾವತಿ, ಸೆ. ೨೩: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ನರಮೇಧ ಖಂಡಿಸಿ ಶನಿವಾರ ಸಂಜೆ ಯುವ ಬ್ರಿಗೇಡ್ ವತಿಯಿಂದ ನಗರದಲ್ಲಿ ಪಂಜಿನ ಮೆರವಣಿಗೆ ನಡೆಸಲಾಯಿತು.
    ಕೆಎಸ್‌ಆರ್‌ಸಿ ಮುಖ್ಯ ಬಸ್ ನಿಲ್ದಾಣದಿಂದ ಅಂಬೇಡ್ಕರ್ ವೃತ್ತದ ವರೆಗೂ ಪಂಜಿನ ಮೆರವಣಿಗೆ ನಡೆಸಿ ಹಿಂದೂಗಳ ನೆರಮೇಧವನ್ನು ತೀವ್ರವಾಗಿ ಖಂಡಿಸಲಾಯಿತು. ಅಲ್ಲದೆ ಮೇಣದ ಬತ್ತಿ ಹಚ್ಚಿ ಬಲಿಯಾಗಿರುವ ಅಮಾಯಕ ಹಿಂದೂಗಳ ಆತ್ಮಕ್ಕೆ ಶಾಂತಿ ಕೋರಲಾಯಿತು.
    ಕರ್ನಾಟಕ ರಾಮ್ ಸೇನಾ ಸಂಘಟನೆ ಜಿಲ್ಲಾಧ್ಯಕ್ಷ ಉಮೇಶ್‌ಗೌಡ, ತಾಲೂಕು ಅಧ್ಯಕ್ಷ ಸಚಿನ್ ಎಂ. ವರ್ಣೇಕರ್, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಧನುಷ್ ಬೋಸ್ಲೆ, ಯುವ ಬ್ರಿಗೇಡ್ ತಾಲೂಕು ಸಂಚಾಲಕ ಮೋಹನ್ ಕುಮಾರ್, ದರ್ಶನ್, ಸಂಜು, ಮಂಜುನಾಥ್, ಶ್ರೇಯಸ್, ಕೃಷ್ಣ, ಜೋಗಿ, ರಮೇಶ್, ಪ್ರಭು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.