Sunday, November 14, 2021

ಅಪೇಕ್ಷ ಮಂಜುನಾಥ್‌ಗೆ ಕನ್ನಡ ಗಾರುಡಿಗ ಸೇವಾರತ್ನ ರಾಜ್ಯ ಪ್ರಶಸ್ತಿ

ಹೊಸದುರ್ಗದ ಕರ್ನಾಟಕ ರಾಜ್ಯ ವಿಸ್ಮಯ ಜಾದೂ ಪವಾಡ ಹಾಗು ಮೋಡಿ ಸಂಶೋಧನಾ ವೇದಿಕೆ ವತಿಯಿಂದ ಭದ್ರಾವತಿ ತಾಲೂಕು ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಗೌರವಾಧ್ಯಕ್ಷ, ಜ್ಯೂನಿಯರ್ ವಿಷ್ಣುವರ್ಧನ್ ಅಪೇಕ್ಷ ಮಂಜುನಾಥ್ ಅವರಿಗೆ ಕನ್ನಡ ಗಾರುಡಿಗ ಸೇವಾರತ್ನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
    ಭದ್ರಾವತಿ, ನ. ೧೪: ತಾಲೂಕು ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಗೌರವಾಧ್ಯಕ್ಷ, ಜ್ಯೂನಿಯರ್ ವಿಷ್ಣುವರ್ಧನ್ ಅಪೇಕ್ಷ ಮಂಜುನಾಥ್ ಅವರಿಗೆ ಕನ್ನಡ ಗಾರುಡಿಗ ಸೇವಾರತ್ನ ರಾಜ್ಯ ಪ್ರಶಸ್ತಿ ಲಭಿಸಿದೆ.
    ಹೊಸದುರ್ಗದ ಕರ್ನಾಟಕ ರಾಜ್ಯ ವಿಸ್ಮಯ ಜಾದೂ ಪವಾಡ ಹಾಗು ಮೋಡಿ ಸಂಶೋಧನಾ ವೇದಿಕೆ ವತಿಯಿಂದ ಚಿತ್ರದುರ್ಗದ ತ.ರಾ.ಸು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ೧೫ನೇ ವರ್ಷದ ಸಾಧಕರ ಸಮ್ಮೇಳನ, ೬೬ನೇ ಕನ್ನಡ ರಾಜ್ಯೋತ್ಸವ ಹಾಗು ರಾಷ್ಟ್ರ, ರಾಜ್ಯಮಟ್ಟದ ಸಾಧಕರಿಗೆ ಸನ್ಮಾನ ಮತ್ತು ಪ್ರಶಸ್ತಿ ವಿತರಣೆ ಕಾರ್ಯಕ್ರಮದಲ್ಲಿ ಅಪೇಕ್ಷ ಮಂಜುನಾಥ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
    ಮಾದಾರ ಚನ್ನಯ್ಯ ಗುರು ಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಸೇರಿದಂತೆ ಶಾಖಾ ಮಠದ ಸ್ವಾಮೀಜಿಗಳು, ವೇದಿಕೆ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Saturday, November 13, 2021

ಇಲ್ಲೊಂದು ಡಾ.ರಾಜ್ ಅಭಿಮಾನಿಯ ದೇವರ ಮಂಡಿ

ಸದಾ ಕಾಲ ದೇವರಂತೆ ಸ್ಮರಿಸುವ ಮಂಜುನಾಥ್ ಕುಟುಂಬ ವರ್ಗ

ಮಂಜುನಾಥ್ ಅವರ ಬಾಳೆಕಾಯಿ ಮಂಡಿಯಲ್ಲಿರುವ ಡಾ. ರಾಜ್‌ಕುಮಾರ್ ಅವರ ಪೋಟೋಗಳು.

* ಅನಂತಕುಮಾರ್
ಭದ್ರಾವತಿ, ನ. ೧೩: ನಗರದ ಚಾಮೇಗೌಡ ಏರಿಯಾ ವ್ಯಾಪ್ತಿಯಲ್ಲಿ ಕರ್ನಾಟಕ ರತ್ನ, ವರನಟ ಡಾ. ರಾಜ್‌ಕುಮಾರ್ ಅಭಿಮಾನಿಗಳು ಹೆಚ್ಚಾಗಿದ್ದು, ಸುಮಾರು ೫ ದಶಕಗಳಿಗೂ ಹೆಚ್ಚು ಕಾಲದಿಂದಲೂ ಡಾ. ರಾಜ್‌ಕುಮಾರ್ ಅಭಿಮಾನಿಗಳ ಸಂಘ ಇಲ್ಲಿ ಅಸ್ತಿತ್ವದಲ್ಲಿದೆ. ಇಂದಿಗೂ ಡಾ. ರಾಜ್‌ಕುಮಾರ್ ಕುಟುಂಬದ ಮೇಲಿನ ಅಭಿಮಾನ ಸ್ವಲ್ಪವೂ ಕಡಿಮೆಯಾಗಿಲ್ಲ. ಅದರಲ್ಲೂ ಇಲ್ಲೊಬ್ಬರು ವಿಶೇಷವಾಗಿ ರಾಜ್‌ಕುಮಾರ್ ಕುಟುಂಬವನ್ನು ಸದಾ ಕಾಲ ಸ್ಮರಿಸುತ್ತಾ ದೇವರಂತೆ ಆರಾಧಿಸಿಕೊಂಡು ಬರುವ ಮೂಲಕ ಗಮನ ಸೆಳೆಯುತ್ತಿದ್ದಾರೆ.
ಬಿ.ಎಚ್ ರಸ್ತೆ ರೈಲ್ವೆ ನಿಲ್ದಾಣದ ಮುಂಭಾಗದಲ್ಲಿ  ಸುಮಾರು ೪ ದಶಕಗಳಿಗೂ ಹೆಚ್ಚು ಕಾಲದಿಂದಲೂ ಬಾಳೆಕಾಯಿ ಮಂಡಿ ಮುನ್ನಡೆಸಿಕೊಂಡು ಬರುತ್ತಿರುವ ಮಂಜುನಾಥ್ ಹಾಗು ಕುಟುಂಬದವರು ರಾಜ್‌ಕುಮಾರ್ ಅವರನ್ನು ಸದಾ ಸ್ಮರಿಸುವ ಜೊತೆಗೆ ಪ್ರತಿವರ್ಷ ಅವರ ಹುಟ್ಟುಹಬ್ಬ ಹಾಗು ಪುಣ್ಯಸ್ಮರಣೆ ದಿನಗಳನ್ನು ಡಾ. ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಜೊತೆಗೆ ವಿಶೇಷವಾಗಿ ಆಚರಿಸಿಕೊಂಡು ಬರುತ್ತಿದ್ದಾರೆ.


ಮಂಜುನಾಥ್ ಅವರ ಬಾಳೆಕಾಯಿ ಮಂಡಿಯಲ್ಲಿರುವ ಡಾ. ರಾಜ್‌ಕುಮಾರ್ ಅವರ ಪೋಟೋಗಳು.

    ಮಂಡಿ ತುಂಬಾ ರಾಜ್‌ಕುಮಾರ್ ಪೋಟೋಗಳು:
    ಇವರ ಮಂಡಿಯಲ್ಲಿ ದೇವರ ಪೋಟೋಗಳು ಒಂದೋ ಎರಡೋ ಉಳಿದೆಲ್ಲವೂ ರಾಜ್‌ಕುಮಾರ್ ಹಾಗು ಅವರ ಕುಟುಂಬದವರ ಪೋಟೋಗಳೇ. ಒಂದು ಕ್ಷಣ ರಾಜ್‌ಕುಮಾರ್ ಭವ್ಯ ಪರಂಪರೆ ಇಲ್ಲಿ ತೆರೆದುಕೊಳ್ಳುತ್ತದೆ. ವಿಶೇಷ ಎಂದರೆ ರಾಜ್‌ಕುಮಾರ್ ಮೇಲಿನ ಅಭಿಮಾನಕ್ಕೆ ಪುತ್ರ ಟಿ.ಎಂ ಅರ್ಪಿತ್‌ಕುಮಾರ್‌ಗೆ ಅಪ್ಪು ಎಂಬ ಹೆಸರನ್ನು ನಾಮಕರಣಗೊಳಿಸಿದ್ದಾರೆ. ಅಪ್ಪು ಸಹ ರಾಜ್‌ಕುಮಾರ್ ಕುಟುಂಬದ ಅಭಿಮಾನಿಯಾಗಿದ್ದಾರೆ.
    ಡಾ.ರಾಜ್, ಪುನೀತ್ ಪುತ್ಥಳಿ ನಿರ್ಮಾಣ ಮಾಡುವ ಬಯಕೆ:
    ಕಳೆದ ೩ ದಿನಗಳ ಹಿಂದೆ ಡಾ. ರಾಜ್‌ಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪುನೀತ್ ರಾಜ್‌ಕುಮಾರ್ ಅವರ ೧೩ನೇ ದಿನದ ಪುಣ್ಯಸ್ಮರಣೆದಂದು ತನ್ನ ಅನಿಸಿಕೆ ವ್ಯಕ್ತಪಡಿಸಿದ ಅರ್ಪಿತ್‌ಕುಮಾರ್(ಅಪ್ಪು) ಪುನೀತ್ ರಾಜ್‌ಕುಮಾರ್ ಅವರ ಅಕಾಲಿಕ ನಿಧನ ಮನಸ್ಸಿಗೆ ತುಂಬಾ ನೋವುಂಟು ಮಾಡಿದೆ. ಇವರ ಸ್ಮರಣೆ ಸದಾ ಕಾಲ ಉಳಿಯುವಂತೆ ಮಾಡಬೇಕಾಗಿದೆ. ಜನಪ್ರತಿನಿಧಿಗಳು, ಸ್ಥಳೀಯರು ಹಾಗು ಅಭಿಮಾನಿಗಳು ಸೇರಿದಂತೆ ಎಲ್ಲರ ಸಹಕಾರದಿಂದ ಮುಂದಿನ ದಿನಗಳಲ್ಲಿ ಡಾ. ರಾಜ್‌ಕುಮಾರ್ ಹಾಗು ಪುನೀತ್ ರಾಜ್‌ಕುಮಾರ್ ಅವರ ಪುತ್ಥಳಿಗಳನ್ನು ನಿರ್ಮಾಣ ಮಾಡಬೇಕೆಂಬ ಬಯಕೆ ಹೊಂದಿದ್ದೇನೆ ಎಂದರು.  
    ಈ ನಡುವೆ ಅರ್ಪಿತ್‌ಕುಮಾರ್ ಅವರ ಬಯಕೆ ಈಡೇರಿಕೆಗೆ ಚಾಮೇಗೌಡ ಏರಿಯಾದಲ್ಲಿರುವ ಡಾ. ರಾಜ್‌ಕುಮಾರ್ ಅಭಿಮಾನಿಗಳೆಲ್ಲರೂ ಒಮ್ಮತ ವ್ಯಕ್ತಪಡಿಸಿರುವುದು ವಿಶೇಷವಾಗಿದೆ.


ಮಂಜುನಾಥ್ ಅವರ ಪುತ್ರ ಅರ್ಪಿತ್‌ಕುಮಾರ್ ಮತ್ತು ಡಾ. ರಾಜ್ ಅಭಿಮಾನಿ ಸ್ನೇಹಿತರು.

ಬಸವೇಶ್ವರ ವೃತ್ತದಲ್ಲಿ ಕನ್ನಡ ರಾಜ್ಯೋತ್ಸವ, ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ

ಭದ್ರಾವತಿ ಹಳೇನಗರದ ಬಸವೇಶ್ವರ ವೃತ್ತದಲ್ಲಿ ಆಟೋ ಚಾಲಕರ ಸಂಘ, ಡಾ. ರಾಜ್‌ಕುಮಾರ್ ಅಭಿಮಾನಿಗಳ ಬಳಗ, ರಸ್ತೆ ಬದಿ ವ್ಯಾಪಾರಿಗಳು, ವರ್ತಕರ ವತಿಯಿಂದ ಶನಿವಾರ ೬೬ನೇ ಕನ್ನಡ ರಾಜ್ಯೋತ್ಸವ ಹಾಗು ಪುನೀತ್‌ರಾಜ್‌ಕುಮಾರ್ ಪುಣ್ಯಸ್ಮರಣೆ ಹಮ್ಮಿಕೊಳ್ಳಲಾಗಿತ್ತು.
    ಭದ್ರಾವತಿ, ನ. ೧೩: ಹಳೇನಗರದ ಬಸವೇಶ್ವರ ವೃತ್ತದಲ್ಲಿ ಆಟೋ ಚಾಲಕರ ಸಂಘ, ಡಾ. ರಾಜ್‌ಕುಮಾರ್ ಅಭಿಮಾನಿಗಳ ಬಳಗ, ರಸ್ತೆ ಬದಿ ವ್ಯಾಪಾರಿಗಳು, ವರ್ತಕರ ವತಿಯಿಂದ ಶನಿವಾರ ೬೬ನೇ ಕನ್ನಡ ರಾಜ್ಯೋತ್ಸವ ಹಾಗು ಪುನೀತ್‌ರಾಜ್‌ಕುಮಾರ್ ಪುಣ್ಯಸ್ಮರಣೆ ಹಮ್ಮಿಕೊಳ್ಳಲಾಗಿತ್ತು.
    ಕಾಗದನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಇ.ಓ ಮಂಜುನಾಥ್ ಹಾಗು ನಗರಸಭಾ ಸದಸ್ಯೆ ಅನುಪಮ ಚನ್ನೇಶ್ ಧ್ವಜಾರೋಹಣ ನೆರವೇರಿಸಿದರು. ಸುಮಾರು ೩ ಸಾವಿರಕ್ಕೂ ಹೆಚ್ಚು ಮಂದಿಗೆ ಅನ್ನಸಂತರ್ಪಣೆ ನೆರವೇರಿಸಲಾಯಿತು.
ಶ್ರೀ ಬಸವೇಶ್ವರ ಆಟೋ ಚಾಲಕರ ಸಂಘದ ಅಧ್ಯಕ್ಷ ಕುಮಾರ್, ಜಗದೀಶ್, ಶೇಖರ್, ಪ್ರದೀಪ್, ಮೋಹನ್, ಸೆಲ್ವರಾಜ್, ರವೀಶ್, ಪ್ರಕಾಶ್, ಬಿ.ಎಸ್ ಮಂಜುನಾಥ್, ಶ್ರೀನಿವಾಸ್, ರಾಮು ಎನ್. ಮಂಜುನಾಥ್, ರಾಘವೇಂದ್ರ, ಮಂಡಕ್ಕಿ ಮಲ್ಲಿಕಾರ್ಜುನ, ಬಸವೇಶ್ವರ ವೃತ್ತದ ವ್ಯಾಪಾರಸ್ಥರು, ವರ್ತಕರು, ಶಾಲಾ ಮಕ್ಕಳು, ಸ್ಥಳೀಯರು ಪಾಲ್ಗೊಂಡಿದ್ದರು.


ಭದ್ರಾವತಿ ಹಳೇನಗರದ ಬಸವೇಶ್ವರ ವೃತ್ತದಲ್ಲಿ ಆಟೋ ಚಾಲಕರ ಸಂಘ, ಡಾ. ರಾಜ್‌ಕುಮಾರ್ ಅಭಿಮಾನಿಗಳ ಬಳಗ, ರಸ್ತೆ ಬದಿ ವ್ಯಾಪಾರಿಗಳು, ವರ್ತಕರ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ ೬೬ನೇ ಕನ್ನಡ ರಾಜ್ಯೋತ್ಸವ ಹಾಗು ಪುನೀತ್‌ರಾಜ್‌ಕುಮಾರ್ ಪುಣ್ಯಸ್ಮರಣೆಯಲ್ಲಿ ಸಾವಿರಾರು ಮಂದಿಗೆ ಅನ್ನಸಂತರ್ಪಣೆ ನೆರವೇರಿಸಲಾಯಿತು.

ನ.15ರಂದು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಚಟುವಟಿಕೆಗಳು


    
ಭದ್ರಾವತಿ, ನ. ೧೩: ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ 2021-22ನೇ ಸಾಲಿನ ಪ್ರೌಢಶಾಲಾ ಹಂತದ ವಿದ್ಯಾರ್ಥಿಗಳಿಗೆ ರಾಷ್ಟೀಯ ಮತದಾರರ ದಿನಾಚರಣೆ(ಎನ್‌ವಿಡಿ) ಪ್ರಯುಕ್ತ ತಾಲೂಕು ಮಟ್ಟದ ಸ್ಪರ್ಧಾತ್ಮಕ ಚಟುವಟಿಕೆಗಳನ್ನು ನ. 15ರಂದು ಬೆಳಿಗ್ಗೆ 10.30ಕ್ಕೆ ನಗರದ ಹೊಸ ಸೇತುವೆ ರಸ್ತೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಯ್ಯ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಲಾಗಿದೆ.
    ಭವಿಷ್ಯದ ಯುವ ಮತದಾರರಲ್ಲಿ ಚುನಾವಣೆ ಮತ್ತು ಮತದಾನ ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸ್ಪರ್ಧಾತ್ಮಕ ಚಟುವಟಿಕೆಗಳನ್ನು ಆಯೋಜಿಸಲಾಗಿದ್ದು, ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಪ್ರಬಂಧ ಸ್ಪರ್ಧೆ ಮತ್ತು ಭಿತ್ತಿ ಚಿತ್ರ ಹಾಗು ರಸಪ್ರಶ್ನೆ ಸ್ಪರ್ಧೆಗಳು ನಡೆಯಲಿವೆ. ಆಯಾ ಶಾಲೆಗಳಲ್ಲಿ ಪ್ರಬಂಧ ಹಾಗು ಭಿತ್ತಿಚಿತ್ರ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಓರ್ವ ವಿದ್ಯಾರ್ಥಿ ಮತ್ತು ರಸಪ್ರಶ್ನೆ ಸ್ಪರ್ಧೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್‌ ಸೋಮಶೇಖರಯ್ಯ ತಿಳಿಸಿದ್ದಾರೆ.  ಹೆಚ್ಚಿನ ಮಾಹಿತಿಗೆ ಸಾಕ್ಷರತಾ ಸಂಘಗಳ ತಾಲೂಕು ನೋಡಲ್ ಅಧಿಕಾರಿ ನವೀದ್ ಪರ್ವೀಜ್ ಅಹಮದ್ ಮೊ: ೯೮೮೬೨೧೪೧೬೦ ಸಂಖ್ಯೆಗೆ ಕರೆ ಮಾಡಬಹುದಾಗಿದೆ.

Friday, November 12, 2021

ಮಿತಿ ಮೀರಿದ ಮಾದಕ ವಸ್ತುಗಳ ಮಾರಾಟ, ಸೇವನೆ : ಸೂಕ್ತ ಕ್ರಮ ಕೈಗೊಳ್ಳಿ

ಗ್ರಾಮಾಂತರ ಯುವ ಕಾಂಗ್ರೆಸ್ ವತಿಯಿಂದ ಪೊಲೀಸ್ ಉಪಾಧೀಕ್ಷಕರಿಗೆ ಮನವಿ


ಭದ್ರಾವತಿ ತಾಲೂಕಿನಾದ್ಯಂತ ಮಾದಕ ವಸ್ತುಗಳ ಮಾರಾಟ ಹಾಗು ಸೇವನೆ ಹೆಚ್ಚಾಗುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಗ್ರಾಮಾಂತರ ಯುವ ಕಾಂಗ್ರೆಸ್ ವತಿಯಿಂದ ಪೊಲೀಸ್ ಉಪಾಧೀಕ್ಷಕರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ನ. ೧೨: ತಾಲೂಕಿನಾದ್ಯಂತ ಮಾದಕ ವಸ್ತುಗಳ ಮಾರಾಟ ಹಾಗು ಸೇವನೆ ಹೆಚ್ಚಾಗುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಗ್ರಾಮಾಂತರ ಯುವ ಕಾಂಗ್ರೆಸ್ ವತಿಯಿಂದ ಪೊಲೀಸ್ ಉಪಾಧೀಕ್ಷಕರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.
    ತಾಲೂಕಿನಾದ್ಯಂತ ಮಾದಕ ವಸ್ತುಗಳ ಮಾರಾಟ ಹಾಗು ಸೇವನೆ ಹೆಚ್ಚಾಗುತ್ತಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಹ ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ.  ಯುವ ಸಮುದಾಯದವರು ದಾರಿ ತಪ್ಪುತ್ತಿದ್ದು, ಮಾದಕ ವಸ್ತುಗಳನ್ನು ಮಾರಾಟ ಮಾಡುವವರನ್ನು ಯಾರು ಸಹ ಪ್ರಶ್ನಿಸದಂತಹ ವಾತಾವರಣ ನಿರ್ಮಾಣವಾಗುತ್ತಿದೆ. ಜೊತೆಗೆ ಮಾರಾಕಾಸ್ತ್ರಗಳ ಬಳಕೆ ಸಹ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ತಕ್ಷಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.
    ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ ಎನ್. ಅಫ್ತಾಬ್ ಅಹಮದ್, ಉಪಾಧ್ಯಕ್ಷ ತಬ್ರೇಜ್ ಖಾನ್, ಪ್ರಧಾನ ಕಾರ್ಯದರ್ಶಿ ಸಜ್ಜಾದ್, ಅಮೋಸ್, ಜಬಿವುಲ್ಲಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ತ್ರಿಪುರಾ ಸರ್ಕಾರ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದವರಿಗೆ ರಕ್ಷಣೆ ನೀಡಲಿ : ತಹಸೀಲ್ದಾರ್ ಮೂಲಕ ಮನವಿ

ತ್ರಿಪುರಾ ರಾಜ್ಯದಲ್ಲಿ ಅಲ್ಪ ಸಂಖ್ಯಾತ ಮುಸ್ಲಿಂ ಸಮುದಾಯದವರ ಮೇಲೆ ನಡೆಯುತ್ತಿರುವ ದಾಳಿಯನ್ನು ಅಲ್ಲಿನ ಸರ್ಕಾರ ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಶುಕ್ರವಾರ ಭದ್ರಾವತಿಯಲ್ಲಿ ದಾರುಲ್ ಉಲೂಮ್ ಹಜ್‌ರತ್ ಸೈಯದ್ ಸಾದತ್ ವತಿಯಿಂದ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ನ. ೧೨: ತ್ರಿಪುರಾ ರಾಜ್ಯದಲ್ಲಿ ಅಲ್ಪ ಸಂಖ್ಯಾತ ಮುಸ್ಲಿಂ ಸಮುದಾಯದವರ ಮೇಲೆ ನಡೆಯುತ್ತಿರುವ ದಾಳಿಯನ್ನು ಅಲ್ಲಿನ ಸರ್ಕಾರ ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಶುಕ್ರವಾರ ದಾರುಲ್ ಉಲೂಮ್ ಹಜ್‌ರತ್ ಸೈಯದ್ ಸಾದತ್ ವತಿಯಿಂದ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.
    ಈ ಸಂದರ್ಭದಲ್ಲಿ ಮಾತನಾಡಿದ ಪ್ರಮುಖರು, ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯದ ಮೇಲಿನ ದಾಳಿಗೆ ಪ್ರತಿಕಾರವಾಗಿ ಈಶಾನ್ಯ ರಾಜ್ಯದಲ್ಲಿ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದವರನ್ನು ಗುರಿಯಾಗಿಸಿಕೊಂಡು ನಡೆಸಲಾಗುತ್ತಿರುವ ದಾಳಿಯ ವಿಚಾರದಲ್ಲಿ ಬಿಜೆಪಿಯೇತರ ಪಕ್ಷಗಳು ದಿವ್ಯ ಮೌನಕ್ಕೆ ಒಳಗಾಗಿರುವುದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಾಯಕಾರಿ ಬೆಳವಣಿಗೆಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
    ಭಾರತ ಜಾತ್ಯಾತೀತ ರಾಷ್ಟ್ರವಾಗಿದ್ದು, ಎಲ್ಲರೂ ಸಮಾನತೆಯಿಂದ ಬದುಕುತ್ತಿದ್ದಾರೆ. ಈ ನಡುವೆ ಮುಸ್ಲಿಂ ಸಮುದಾಯದವರನ್ನು ಕೇವಲ ಮತ ಬ್ಯಾಂಕ್ ಆಗಿ ಬಳಸಿಕೊಳ್ಳುತ್ತಿರುವುದು ವಿಷಾದನೀಯ ಸಂಗತಿಯಾಗಿದೆ. ಸಂಘ ಪರಿವಾರ ಪ್ರೇರಿತ ಫ್ಯಾಶಿಸ್ಟ್ ದಾಳಿ ಶೋಚನೀಯವಾಗಿದ್ದು, ಇದರ ವಿರುದ್ಧ ಧ್ವನಿ ಎತ್ತಬೇಕಾದ ದೇಶದ ಮುಖ್ಯವಾಹಿನಿಗಳಾಗಿರುವ ಜಾತ್ಯಾತೀತ ಪಕ್ಷಗಳ ಮೌನ ಅಘಾತಕಾರಿ ಬೆಳವಣಿಗೆಯಾಗಿದೆ ಎಂದು ಅಸಮಾಧಾನ ತೋರ್ಪಡಿಸಿದರು.
    ತ್ರಿಪುರಾ ಸರ್ಕಾರ ಮುಸ್ಲಿಂ ಸಮುದಾಯದವರ ಮೇಲಿನ ದಾಳಿಯನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕೈಗೊಳ್ಳಬೇಕು. ಆ ಮೂಲಕ ಅಲ್ಪ ಸಂಖ್ಯಾತ ಮುಸ್ಲಿಂ ಸಮುದಾಯಕ್ಕೆ ರಕ್ಷಣೆ ನೀಡಬೇಕೆಂದು ಆಗ್ರಹಿಸಿದರು.

ನ.೧೩ರಂದು ವಿದ್ಯುತ್ ವ್ಯತ್ಯಯ

    ಭದ್ರಾವತಿ, ನ. ೧೨: ನಗರದ ಜೆಪಿಎಸ್ ಕಾಲೋನಿಯಲ್ಲಿರುವ ಮೆಸ್ಕಾಂ ೧೧೦/೩೩/೧೧ ಕೆವಿ ಮತ್ತು ಮಾಚೇನಹಳ್ಳಿಯ ೧೧೦/೧೧ ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ನ.೧೩ರ ಶನಿವಾರ ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೬ ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
    ನ್ಯೂಟೌನ್, ನ್ಯೂಕಾಲೋನಿ, ಐಟಿಐ, ಆಕಾಶವಾಣಿ, ಕಾಗದನಗರ, ಸುರಗಿತೋಪು, ಆನೇಕೊಪ್ಪ, ಉಜ್ಜನಿಪುರ, ಬುಳ್ಳಾಪುರ, ಹುಡ್ಕೋ ಕಾಲೋನಿ, ಬೊಮ್ಮನಕಟ್ಟೆ, ಹೊಸಸಿದ್ದಾಪುರ, ಹಳೇಸಿದ್ದಾಪುರ, ಹೊಸೂರು ತಾಂಡ್ಯ, ಹುತ್ತಾ ಕಾಲೋನಿ, ಜನ್ನಾಪುರ, ಬಿ.ಎಚ್ ರಸ್ತೆ, ಅಪ್ಪರ್ ಹುತ್ತಾ, ಲೋಯರ್ ಹುತ್ತಾ, ಜಿಂಕ್‌ಲೈನ್, ಸಿರಿಯೂರು, ತರೀಕೆರೆ ರಸ್ತೆ, ಸಾದತ್ ಕಾಲೋನಿ, ನೆಹರು ನಗರ, ಸುಣ್ಣದಹಳ್ಳಿ, ಬಸವನಗುಡಿ, ಶಿವನಿ ವೃತ್ತ, ಹಿರಿಯೂರು, ಹೊಳೆ ಗಂಗೂರು, ಕಾರೇಹಳ್ಳಿ, ಕಂಬದಾಳ್ ಹೊಸೂರು, ಹೊನ್ನಹಟ್ಟಿ ಹೊಸೂರು, ಹುಣಸೇಕಟ್ಟೆ, ಕಾಳನಕಟ್ಟೆ, ಹೊಳೆ ನೇರಳೇಕೆರೆ, ಅಂತರಗಂಗೆ, ದೊಣಬಘಟ್ಟ, ಬಾರಂದೂರು, ಕಲ್ಲಹಳ್ಳಿ, ಯರೇಹಳ್ಳಿ, ಮಾವಿನಕೆರೆ, ದೊಡ್ಡೇರಿ, ತಡಸ, ಬಿಳಿಕಿ, ಕೆಂಪೇಗೌಡನಗರ, ಬೊಮ್ಮನಹಳ್ಳಿ, ಕುಂಬಾರ ಗುಂಡಿ, ಹಳೇ ಬಾರಂದೂರು, ಹಳ್ಳಿಕೆರೆ, ಅಪ್ಪಾಜಿ ಬಡಾವಣೆ, ಉಕ್ಕುಂದ, ರತ್ನಾಪುರ, ಕೆಂಚೇನಹಳ್ಳಿ, ಗಂಗೂರು, ಬಿಸಿಲುಮನೆ, ದೇವರನರಸೀಪುರ, ಶಿವಪುರ, ಅಡ್ಲಘಟ್ಟ, ಅಂಬುದಹಳ್ಳಿ, ಅರಳಿಕೊಪ್ಪ, ಮಾಚೇನಹಳ್ಳಿ ಕೈಗಾರಿಕಾ ಪ್ರದೇಶ, ಜೇಡಿಕಟ್ಟೆ, ಹಳೇಜೇಡಿಕಟ್ಟೆ, ಡೈರಿ ವೃತ್ತ, ಮಲವಗೊಪ್ಪ, ನಿದಿಗೆ, ಹೊನ್ನವಿಲೆ, ಮಜ್ಜಿಗೇನಹಳ್ಳಿ, ಕಲ್ಲಹಳ್ಳಿ ಗ್ರಾ.ಪಂ. ವ್ಯಾಪ್ತಿ, ಹಾಗಲಮನೆ, ವೀರಾಪುರ, ಸಿರಿಯೂರು ತಾಂಡ, ಸಿರಿಯೂರು, ಶಿವರಾಮನಗರ, ವಿಶ್ವೇಶ್ವರಯ್ಯನಗರ, ಶಂಕಲೀಪುರ, ಹುಲಿರಾಮನಕೊಪ್ಪ, ಹಾಗಲಮನೆ, ಮತಿಘಟ್ಟ ಮತ್ತು ಹಾತಿಕಟ್ಟೆ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಗ್ರಾಹಕರು ಸಹಕರಿಸುವಂತೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.