Monday, November 22, 2021

ಜಗತ್ತಿನ ಪ್ರಮುಖ ೨೫ ಭಾಷೆಗಳಲ್ಲಿ ಕನ್ನಡಕ್ಕೆ ಸ್ಥಾನ ಹೆಮ್ಮೆಯ ವಿಚಾರ : ಟಿ. ಮಲ್ಲಿಕಾರ್ಜುನ್

ಭದ್ರಾವತಿಯಲ್ಲಿ ಭೂಮಿಕಾ ವೇದಿಕೆ ವತಿಯಿಂದ ತರೀಕೆರೆ ರಸ್ತೆಯ ನಯನ ಆಸ್ಪತ್ರೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕನ್ನಡ ರಾಜ್ಯೋತ್ಸವ ಮತ್ತು ಜಾನಪದ ಸಂಜೆ ಕಾರ್ಯಕ್ರಮದಲ್ಲಿ  ಶಿವಮೊಗ್ಗ ಜಾವಳ್ಳಿ ಜ್ಞಾನದೀಪ ಎಸ್.ಎಸ್ ಶಾಲೆಯ ಕನ್ನಡ ವಿಭಾಗದ ಮುಖ್ಯಸ್ಥ ಸಾಹಿತಿ, ಗಾಯಕ ಟಿ. ಮಲ್ಲಿಕಾರ್ಜುನ್ ಪಾಲ್ಗೊಂಡು ಮಾತನಾಡಿದರು.
    ಭದ್ರಾವತಿ, ನ. ೨೨: ಕನ್ನಡ ಭಾಷೆಗೆ ಸುಮಾರು ೨೫೦೦ ವರ್ಷಗಳ ಇತಿಹಾಸವಿದ್ದು, ಜಗತ್ತಿನ ಪ್ರಮುಖ ೨೫ ಭಾಷೆಗಳಲ್ಲಿ ಕನ್ನಡ ಸಹ ಒಂದಾಗಿರುವುದು  ಹೆಮ್ಮೆಯ ವಿಚಾರವಾಗಿದೆ ಎಂದು ಶಿವಮೊಗ್ಗ ಜಾವಳ್ಳಿ ಜ್ಞಾನದೀಪ ಎಸ್.ಎಸ್ ಶಾಲೆಯ ಕನ್ನಡ ವಿಭಾಗದ ಮುಖ್ಯಸ್ಥ ಸಾಹಿತಿ, ಗಾಯಕ ಟಿ. ಮಲ್ಲಿಕಾರ್ಜುನ್ ಹೇಳಿದರು.
    ಭೂಮಿಕಾ ವೇದಿಕೆ ವತಿಯಿಂದ ನಗರದ ತರೀಕೆರೆ ರಸ್ತೆಯ ನಯನ ಆಸ್ಪತ್ರೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕನ್ನಡ ರಾಜ್ಯೋತ್ಸವ ಮತ್ತು ಜಾನಪದ ಸಂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ಕನ್ನಡದ ಅತ್ಯಂತ ಪ್ರಾಚೀನ ಗ್ರಂಥವಾಗಿರುವ ಕವಿರಾಜಮಾರ್ಗ, ಗದ್ಯ ಕೃತಿ ವಡ್ಡಾರಾಧನೆ, ಪಂಪ, ರನ್ನರ ಕಾವ್ಯಗಳು ಕನ್ನಡ ಭಾಷೆ, ಸಾಹಿತ್ಯ ಅತ್ಯಂತ ಪ್ರಾಚೀನ ವಾದ್ದದ್ದು ಎಂಬುದಕ್ಕೆ ಸಾಕ್ಷಿಗಳಾಗಿವೆ ಎಂದರು.
    ಈ ನಡುವೆ ೧೨ನೇ ಶತಮಾನದಲ್ಲಿ ಜನರ ಭಾವನೆಯನ್ನು, ಭಕ್ತಿಯನ್ನು ಸರಳವಾಗಿ ಹೇಳುವ ವಚನ ಸಾಹಿತ್ಯ, ಹರಿಹರ, ರಾಘವಾಂಕ, ಕನಕದಾಸ, ಪುರಂದರ ದಾಸರು ಸೇರಿದಂತೆ ದಾಸಾದಿಗಳ ಸಾಹಿತ್ಯ, ಕನ್ನಡದ ಸಾಂಗತ್ಯ ಕವಿಗಳಲ್ಲಿ ಅಗ್ರಗಣ್ಯನಾದ ರತ್ನಾಕರವರ್ಣಿಯವರ ಕೃತಿಗಳು, ಹಳೇಗನ್ನಡ, ಹೊಸಗನ್ನಡ, ನವೋದಯ, ನವ್ಯ, ಪ್ರಗತಿಶೀಲ ಹಾಗು ಜಾನಪದ ಸಾಹಿತ್ಯಗಳು ಕನ್ನಡ ಭಾಷೆ, ಸಾಹಿತ್ಯಕ್ಕೆ ಮತ್ತಷ್ಟು ಮೆರಗು ತಂದುಕೊಟ್ಟಿವೆ ಎಂದರು.
    ವೇದಿಕೆ ಅಧ್ಯಕ್ಷ ಡಾ. ಕೃಷ್ಣ ಎಸ್. ಭಟ್ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಜಾನಪದ ಗಾಯನ, ನೃತ್ಯ ರೂಪಕ, ಒಗಟು, ಕೋಲಾಟ ಸೇರಿದಂತೆ ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
    ಡಾ. ವೀಣಾಭಟ್ ಸ್ವಾಗತಿಸಿ, ಡಾ. ಎಚ್.ವಿ ನಾಗರಾಜ್ ವಂದಿಸಿದರು. ಶಾರದ ಶ್ರೀನಿವಾಸ್ ನಿರೂಪಿಸಿದರು. ವೇದಿಕೆ ಕಾರ್ಯದರ್ಶಿ ಮುನಿರಾಜ್ ಉಪಸ್ಥಿತರಿದ್ದರು. ಇದಕ್ಕೂ ಮೊದಲು ನಾಡಗೀತೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಚಲನಚಿತ್ರ ನಟ, ಸಮಾಜಸೇವಕ ಪುನೀತ್ ರಾಜ್‌ಕುಮಾರ್ ಅವರ ನಿಧನಕ್ಕೆ  ಸಂತಾಪ ಸೂಚಿಸಿ ಗೌರವ ಸಲ್ಲಿಸಲಾಯಿತು.






ಅಪ್ರಾಪ್ತ ಬಾಲಕಿಯೊಂದಿಗೆ ವಿವಾಹ : ೨೦ ಜನರ ವಿರುದ್ಧ ಪ್ರಕರಣ ದಾಖಲು

    ಭದ್ರಾವತಿ, ನ. ೨೨: ತಾಲೂಕಿನ ನಾಗತಿಬೆಳಗಲು ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಯೊಂದಿಗೆ ವಿವಾಹ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
    ಈ ಸಂಬಂಧ ಕಳೆದ ೩ ದಿನಗಳ ಹಿಂದೆ ನ.೧೯ರಂದು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮದುವೆಗೆ ಸಹಕರಿಸಿದ ೨೦ ಜನರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
    ಸೊರಬ ತಾಲೂಕಿನ ಅಪ್ರಾಪ್ತ ಬಾಲಕಿಯೊಂದಿಗೆ ತಾಲೂಕಿನ ಯುವಕನೋರ್ವ ನಾಗತಿಬೆಳಗಲು ಗ್ರಾಮದ ಸಮುದಾಯ ಭವನದಲ್ಲಿ ನ.೧೩ರಂದು ವಿವಾಹವಾಗಿದ್ದು, ಬಾಲ್ಯ ವಿವಾಹ ಎಂಬುದು ಖಚಿತವಾದ ಹಿನ್ನಲೆಯಲ್ಲಿ ಮಕ್ಕಳ ಕಲ್ಯಾಣ ಸಮಿತಿ, ಮಕ್ಕಳ ರಕ್ಷಣಾ ಘಟಕ ಹಾಗು ಪೊಲೀಸರು ಅಪ್ರಾಪ್ತ ಬಾಲಕಿ ರಕ್ಷಣೆಗೆ ಮುಂದ್ದಾಗಿದ್ದರು. ಆದರೆ ಸಂಬಂಧಿಕರು ಯಾವುದೇ ದೂರು ಕೊಡಲು ಮುಂದಾಗದ ಹಿನ್ನಲೆಯಲ್ಲಿ ಅಂತಿಮವಾಗಿ ಪೊಲೀಸರು ಬಾಲಕಿಯ ಹೇಳಿಕೆ ಪಡೆದು ದೂರು ದಾಖಲಿಸಿಕೊಂಡಿದ್ದಾರೆ. ಬಾಲಕಿಯನ್ನು ಶಿವಮೊಗ್ಗ ಸುರಭಿ ಉಜ್ವಲ ಕೇಂದ್ರಕ್ಕೆ ದಾಖಲಿಸಲಾಗಿದೆ.
    ಮದುವೆಗೆ ಸಹಕರಿಸಿದ ಅಪ್ರಾಪ್ತೆ ಬಾಲಕಿ ಹಾಗು ಯುವಕನ ಪೋಷಕರು, ಸಂಬಂಧಕರು,  ಸಮುದಾಯ ಭವನದ ಆಡಳಿತ ಮಂಡಳಿ ಅಧ್ಯಕ್ಷರು, ಖಜಾಂಚಿ ಹಾಗು ವ್ಯವಸ್ಥಾಪಕರು ಮತ್ತು ಮದುವೆ ಶಾಸ್ತ್ರ ನೆರವೇರಿಸಿಕೊಟ್ಟಿರುವ ಅರ್ಚಕರು ಸೇರಿದಂತೆ ಒಟ್ಟು ೨೦ ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎನ್ನಲಾಗಿದೆ.  

ಕನಕದಾಸರ ಸಂದೇಶ ಸಾರ್ಥಕಗೊಳಿಸುವ ಕಾರ್ಯ ಶ್ಲಾಘನೀಯ : ಡಾ. ಶ್ರೀ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ


ಭದ್ರಾವತಿಯಲ್ಲಿ ಸನಾತನ ಹಿಂದೂ ಸಮಾಜ ಪರಿಷತ್ ವತಿಯಿಂದ ಸೋಮವಾರ ನಗರದ ರಂಗಪ್ಪ ವೃತ್ತದಲ್ಲಿ ಎಲ್ಲಾ ಜಾತಿ, ಸಮುದಾಯದವರೊಂದಿಗೆ ಒಗ್ಗೂಡಿ ಹಮ್ಮಿಕೊಳ್ಳಲಾಗಿದ್ದ ಕನಕದಾಸರ ಜಯಂತಿ ಕಾರ್ಯಕ್ರಮವನ್ನು ತಾವರೆಕರೆ ಶ್ರೀಗಳು ಹಾಗೂ ಬಿಳಿಕಿ ಶ್ರೀಗಳು ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.  
    ಭದ್ರಾವತಿ, ನ. ೧೧: ನಾವುಗಳು ಪುಸ್ತಕದಲ್ಲಿ ಓದಿ ತಿಳಿದುಕೊಂಡಿರುವ ಸಮಾಜದಲ್ಲಿ ಯಾವುದೇ ಜಾತಿ ಇಲ್ಲ. ಎಲ್ಲರೂ ಒಂದೇ ಎಂಬ ಕನಕದಾಸರ ಸಂದೇಶವನ್ನು ಉಕ್ಕಿನ ನಗರದಲ್ಲಿ ಇಂದು ಸನಾತನ ಹಿಂದೂ ಸಮಾಜ ಪರಿಷತ್ ಸಾರ್ಥಕಗೊಳಿಸುವ ಕಾರ್ಯ ಕೈಗೊಂಡಿರುವುದು ಶ್ಲಾಘನೀಯ ಎಂದು ತಾವರೆಕರೆ ಶಿಲಾ ಮಠದ ಡಾ. ಶ್ರೀ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
    ಶ್ರೀಗಳು ಸೋಮವಾರ ಸಂಜೆ ಸನಾತನ ಹಿಂದೂ ಸಮಾಜ ಪರಿಷತ್ ವತಿಯಿಂದ ನಗರದ ರಂಗಪ್ಪವೃತ್ತದಲ್ಲಿ ಎಲ್ಲಾ ಜಾತಿ, ಸಮುದಾಯದವರೊಂದಿಗೆ ಒಗ್ಗೂಡಿ ಹಮ್ಮಿಕೊಳ್ಳಲಾಗಿದ್ದ ಕನಕದಾಸರ ಜಯಂತಿ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.
    ಜಗತ್ತಿಗೆ ಸಮಾನತೆ ಪರಿಕಲ್ಪನೆ ಸಾರಿದ ಕನಕದಾಸರು ಎಲ್ಲರಿಗೂ ಬೇಕು. ಭೂಮಿ ಇರುವುದು ಮಾನವ ಜಾತಿ ಮಾತ್ರ. ಮಾನವ ಜಾತಿಯಿಂದ ಮನುಷ್ಯ ಮಹಾದೇವನಾಗಿ ರೂಪುಗೊಳ್ಳಬೇಕು. ಈ ಮೂಲಕ ಸದೃಢ ಸಮಾಜ ನಿರ್ಮಾಣಗೊಳ್ಳಬೇಕು. ಈ ನಿಟ್ಟಿನಲ್ಲಿ ಕೈಗೊಳ್ಳಲಾಗಿರುವ ಕಾರ್ಯ ನಿರಂತರವಾಗಿ ನಡೆಯಬೇಕೆಂದರು.
      ಬಿಳಿಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಹಿಂದೂ ಸಮಾಜದ ಎಲ್ಲಾ ಜಾತಿ ಸಮುದಾಯಗಳನ್ನು ಒಂದು ಗೂಡಿಸುವ ಕಾರ್ಯ ರಾಜ್ಯದಲ್ಲಿಯೇ ಮೊದಲ ಬಾರಿಗೆ ಉಕ್ಕಿನ ನಗರದಿಂದ ಕೈಗೊಂಡಿರುವುದು ಹೆಮ್ಮೆಯವಾಗಿದೆ. ಯಾವುದೇ ಕಾರ್ಯಕ್ಕೂ ಸಂಘಟನೆ ಬಹಳ ಮುಖ್ಯವಾಗಿದೆ. ಸಂಘಟನೆ ಮೂಲಕ ನಮ್ಮ ಗುರಿ ಸಾಧಿಸಲು ಸಾಧ್ಯ. ಈ ನಿಟ್ಟಿನಲ್ಲಿ ಎಲ್ಲರೂ ಮತ್ತಷ್ಟು ಸಂಘಟಿತರಾಗಬೇಕು. ಪ್ರಸ್ತುತ ಹಿಂದೂ ಸಮಾಜದಲ್ಲಿ ಮತಾಂತರ ಹೆಚ್ಚಾಗುತ್ತಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲರೂ ಜಾಗೃತರಾಗಬೇಕೆಂದರು.  
    ಪರಿಷತ್ ತಾಲೂಕು ಸಂಚಲನ ಸಮಿತಿ ಸದಸ್ಯ ಕೆ.ಎನ್ ಶ್ರೀಹರ್ಷ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.
    ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಸಿದ್ದಲಿಂಗಯ್ಯ, ಕುರುಬ ಸಮಾಜದ ಅಧ್ಯಕ್ಷ ಬಿ.ಎಂ ಸತೋಷ್, ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಟಿ ರವಿ, ವಾಲ್ಮೀಕ ನಾಯಕ ಸಮಾಜದ ಬಸವರಾಜ ಬಿ. ಆನೇಕೊಪ್ಪ, ಭೋವಿ ಸಮಾಜದ ಜಿ. ಆನಂದಕುಮಾರ್, ಬ್ರಾಹ್ಮಣ ಸಮಾಜದ ರಮಾಕಾಂತ್, ಬಲಿಜ ಸಮಾಜದ ಅಧ್ಯಕ್ಷ ಸುಬ್ರಮಣ್ಯ, ಛಲವಾದಿ ಸಮಾಜದ ಅಧ್ಯಕ್ಷ ಚನ್ನಪ್ಪ, ದೇವಾಂಗ ಸಮಾಜದ ಅಧ್ಯಕ್ಷ ಎಂ. ಪ್ರಭಾಕರ್, ಪ್ರಮುಖರಾದ ಮಂಗೋಟೆ ರುದ್ರೇಶ್, ನಟರಾಜ್, ಸುಬ್ರಮಣ್ಯ, ಎಚ್. ರವಿಕುಮಾರ್, ಕೋಗಲೂರು ತಿಪ್ಪೇಸ್ವಾಮಿ, ಎಚ್. ತಿಮ್ಮಪ್ಪ, ಸಿ. ಚನ್ನಪ್ಪ, ಶಿವಾಜಿರಾವ್, ಸುಭಾಷ್, ಶ್ರೀನಿವಾಸ್, ಜಿಲ್ಲಾ ಯೂನಿಯನ್ ಬ್ಯಾಂಕ್ ದುಗ್ಗೇಶ್, ನಗರಸಭಾ ಸದಸ್ಯರಾದ ಕಾಂತರಾಜ್, ಶ್ರೇಯಸ್, ಪವನ್‌ಕುಮಾರ್ ಉಡುಪ ಸೇರಿದಂತೆ ಎಲ್ಲಾ ಜಾತಿ, ಸಮುದಾಯಗಳ ಪ್ರಮುಖರು ಪಾಲ್ಗೊಂಡಿದ್ದರು.

ವಿವಿಧೆಡೆ ದಾಸ ಶ್ರೇಷ್ಠ ಕನಕದಾಸರ ಜಯಂತಿ : ರೋಗಿಗಳಿಗೆ ಬ್ರೆಡ್, ಬಿಸ್ಕತ್ ವಿತರಣೆ, ಅನ್ನಸಂತರ್ಪಣೆ


ದಾಸ ಶ್ರೇಷ್ಠ ಕನಕದಾಸರ ಜಯಂತಿ ಅಂಗವಾಗಿ ಭದ್ರಾವತಿ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಬ್ರೆಡ್ ಮತ್ತು ಬಿಸ್ಕತ್ ವಿತರಿಸಲಾಯಿತು.
    ಭದ್ರಾವತಿ, ನ. ೨೨:  ದಾಸ ಶ್ರೇಷ್ಠ ಕನಕದಾಸರ ಜಯಂತಿ ನಗರದ ವಿವಿಧೆಡೆ ಅದ್ದೂರಿಯಾಗಿ ಜರುಗಿತು. ಜಯಂತಿ ಅಂಗವಾಗಿ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಬ್ರೆಡ್ ಮತ್ತು ಬಿಸ್ಕತ್ ವಿತರಿಸಲಾಯಿತು.
    ಕನಕ ಯುವಪಡೆ ಮತ್ತು ಕರ್ನಾಟಕ ಸ್ಟೇಟ್ ಕನ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ತಾಲೂಕು ಶಾಖೆ ವತಿಯಿಂದ ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ರೋಗಿಗಳಿಗೆ ಬ್ರೆಡ್ ಮತ್ತು ಬಿಸ್ಕತ್ ವಿತರಿಸಲಾಯಿತು.
    ಶಾಸಕ ಬಿ.ಕೆ ಸಂಗಮೇಶ್ವರ್, ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಶಂಕರಪ್ಪ, ನಗರಸಭಾ ಸದಸ್ಯರಾದ ಶ್ರೇಯಸ್, ಕಾಂತರಾಜ್, ಅನಿತಾ ಮಲ್ಲೇಶ್, ಸುದೀಪ್‌ಕುಮಾರ್, ಕರ್ನಾಟಕ ಸ್ಟೇಟ್ ಕನ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್ ಬಾಬು, ತಾಲೂಕು ಅಧ್ಯಕ್ಷ ಚಂದ್ರಶೇಖರ್, ಕಾರ್ಯಾಧ್ಯಕ್ಷ ಅಭಿಲಾಷ್, ತಾಂತ್ರಿಕ ಸಲಹೆಗಾರ ಮನೋಹರ್, ಶಿವಣ್ಣಗೌಡ್ರು, ಯುವ ಕಾಂಗ್ರೆಸ್ ಅಧ್ಯಕ್ಷ ವಿನೋದ್‌ಕುಮಾರ್, ಕನಕ ಯುವಪಡೆ ಅಧ್ಯಕ್ಷ ಕುಮಾರ್(ಡೈರಿ) ಗೌರವಾಧ್ಯಕ್ಷ ಮಂಜುನಾಥ್, ಉಪಾಧ್ಯಕ್ಷ ಕೇಶವ, ಕಾರ್ಯದರ್ಶಿ ಲೋಕೇಶ್, ಕಾನೂನು ಸಲಹೆಗಾರ ಹನುಮಂತ, ಸಹ ಕಾರ್ಯದರ್ಶಿ ಮಹಾದೇವ್ ಮತ್ತು  ಕಾರ್ಯದರ್ಶಿ ಶರತ್  ಹಾಗು ಕುರುಬ ಸಮಾಜ ಪ್ರಮುಖರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.


ಭದ್ರಾವತಿ ಅಂಡರ್‌ಬ್ರಿಡ್ಜ್ ಬಳಿ ಅಂಬೇಡ್ಕರ್ ವೃತ್ತದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಜೊತೆಗೆ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು.
    ನಗರದ ಹೊಸ ಸೇತುವೆ ರಸ್ತೆಯಲ್ಲಿರುವ ಕೆಎಸ್‌ಆರ್‌ಟಿಸಿ ಘಟಕ ಸಮೀಪದ ವೃತ್ತದಲ್ಲಿ ಹಾಗು ಅಂಡರ್‌ಬ್ರಿಡ್ಜ್ ಬಳಿ ಅಂಬೇಡ್ಕರ್ ವೃತ್ತದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಜೊತೆಗೆ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ಸಾರ್ವಜನಿಕರಿಗೆ ಅನ್ನಸಂತರ್ಪಣೆ ನೆರವೇರಿಸಲಾಯಿತು.
        ಕನಕ ಆಟೋ ನಿಲ್ದಾಣದಲ್ಲಿ ಕನಕ ಜಯಂತಿ:
    ನಗರದ ತಾಲೂಕು ಪಂಚಾಯಿತಿ ಕಛೇರಿ ಸಮೀಪದಲ್ಲಿರುವ ಕನಕ ಆಟೋ ನಿಲ್ದಾಣದಲ್ಲಿ ಕನಕದಾಸರ ಜಯಂತಿಯನ್ನು ಅದ್ದೂರಿಯಾಗಿ ಅಚರಿಸಲಾಯಿತು. ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನದೊಂದಿಗೆ ಸ್ವರ ಸಂಗೀತ ಹಾಗು ಅನ್ನ ಸಂತರ್ಪಣೆ ಕಾರ್ಯಕ್ರಮಗಳು ಜರುಗಿದವು.



ಭದ್ರಾವತಿ ತಾಲೂಕು ಪಂಚಾಯಿತಿ ಕಛೇರಿ ಸಮೀಪದಲ್ಲಿರುವ ಕನಕ ಆಟೋ ನಿಲ್ದಾಣದಲ್ಲಿ ಕನಕದಾಸರ ಜಯಂತಿಯನ್ನು ಅದ್ದೂರಿಯಾಗಿ ಅಚರಿಸಲಾಯಿತು. ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನದೊಂದಿಗೆ ಸ್ವರ ಸಂಗೀತ ಹಾಗು ಅನ್ನ ಸಂತರ್ಪಣೆ ಕಾರ್ಯಕ್ರಮಗಳು ಜರುಗಿದವು.
    ಕನಕ ಆಟೋ ಚಾಲಕರ ಸಂಘದ ಅಧ್ಯಕ್ಷ ಸುರೇಶ್, ರವಿ, ರಮೇಶ್, ಚೇತನ್, ವೆಂಕಟೇಶ್, ತ್ಯಾಗರಾಜ್, ಮಂಜುನಾಥ್, ರಘು ದೇವರಹಳ್ಳಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
      ತಾಲೂಕು ರಾಷ್ಟ್ರೀಯ ಹಬ್ಬಗಳ ಅಚರಣಾ ಸಮಿತಿ :
    ವಿಧಾನಪರಿಷತ್ ಚುನಾವಣೆ ನೀತಿ ಸಂಹಿತೆ ಹಿನ್ನಲೆಯಲ್ಲಿ ಕನಕದಾಸರ ಜಯಂತಿಯನ್ನು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸರಳವಾಗಿ ಆಚರಿಸಲಾಯಿತು.


ವಿಧಾನಪರಿಷತ್ ಚುನಾವಣೆ ನೀತಿ ಸಂಹಿತೆ ಹಿನ್ನಲೆಯಲ್ಲಿ ಕನಕದಾಸರ ಜಯಂತಿಯನ್ನು ಭದ್ರಾವತಿಯಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸರಳವಾಗಿ ಆಚರಿಸಲಾಯಿತು.

    ತಹಸೀಲ್ದಾರ್ ಆರ್ ಪ್ರದೀಪ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಶಾಸಕ ಬಿ.ಕೆ ಸಂಗಮೇಶ್ವರ್, ನಗರಸಭಾ ಸದಸ್ಯರಾದ ಜಾರ್ಜ್, ಟಿಪ್ಪುಸುಲ್ತಾನ್, ಸುದೀಪ್‌ಕುಮಾರ್, ಮೋಹನ್, ಬಿ. ಗಂಗಾಧರ್, ತಹಸೀಲ್ದಾರ್ ಗ್ರೇಡ್-೨ ರಂಗಮ್ಮ, ಉಪತಹಸೀಲ್ದಾರ್‌ಗಳಾದ ಮಂಜಾನಾಯ್ಕ, ಅರಸು, ರಾಧಕೃಷ್ಣಭಟ್ ಸೇರಿದಂತೆ ಕಛೇರಿ ಸಿಬ್ಬಂದಿಗಳು ಪಾಲ್ಗೊಂಡಿದ್ದರು.  

Sunday, November 21, 2021

ಸದೃಢ ಸಮಾಜ ನಿರ್ಮಾಣಕ್ಕೆ ದಾರ್ಶನಿಕರು, ಮಹಾತ್ಮರು, ಸಂತರನ್ನು ಒಂದೇ ವೇದಿಕೆಯಡಿ ತರುವ ಪ್ರಯತ್ನ

ನ.೨೨ರಂದು ಭದ್ರಾವತಿಯಲ್ಲಿ, ನ.೨೭ರಂದು ಶಿವಮೊಗ್ಗದಲ್ಲಿ ಶ್ರೀ ಕನಕದಾಸರ ಜಯಂತಿ ಆಚರಣೆ : ಕೆ.ಎನ್ ಶ್ರೀಹರ್ಷ


ಸನಾತನ ಹಿಂದೂ ಸಮಾಜ ಪರಿಷತ್ ವತಿಯಿಂದ ಭದ್ರಾವತಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿವಿಧ ಜಾತಿ, ಸಮುದಾಯಗಳ ಪ್ರಮುಖರು ಪಾಲ್ಗೊಂಡಿರುವುದು.  

    ಭದ್ರಾವತಿ, ನ. ೨೧: ಪುಣ್ಯ ಭೂಮಿಯಾದ ನಮ್ಮ ಭಾರತ ದೇಶದಲ್ಲಿ ಅನೇಕ ದಾರ್ಶನಿಕರು, ಮಹಾತ್ಮರು, ಸಂತರು ಮಾನವ ಸಮಾಜಕ್ಕೆ ತಮ್ಮದೇ ಆದ ಕೊಡುಗೆಗಳನ್ನು ನೀಡಿದ್ದು, ಇವರೆಲ್ಲರನ್ನು ಒಂದೇ ವೇದಿಕೆಯಡಿ ತರುವ ಮೂಲಕ ಭವಿಷ್ಯದಲ್ಲಿ ಸದೃಢ ಸಮಾಜ ನಿರ್ಮಾಣ ಮಾಡಬೇಕೆಂಬ ಉದ್ದೇಶದೊಂದಿಗೆ ಜಿಲ್ಲೆಯಲ್ಲಿ ಸನಾತನ ಹಿಂದೂ ಸಮಾಜ ಪರಿಷತ್ ಅಸ್ತಿತ್ವಕ್ಕೆ ಬಂದಿದೆ. ಇದರ ಮೊದಲ ಉದ್ದೇಶ ನಗರದಲ್ಲಿ ನ.೨೨ರಂದು ಶ್ರೀ ಕನಕದಾಸರ ಜಯಂತಿ ಆಚರಣೆಯೊಂದಿಗೆ ಆರಂಭಗೊಳ್ಳಲಿದೆ ಎಂದು ಪರಿಷತ್ ತಾಲೂಕು ಸಂಚಲನಾ ಸಮಿತಿ ಸದಸ್ಯ ಕೆ.ಎನ್ ಶ್ರೀಹರ್ಷ ತಿಳಿಸಿದರು.
    ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಾರ್ಶನಿಕರು, ಮಹಾತ್ಮರು, ಸಂತರನ್ನು ಆಯಾ ಸಮುದಾಯ, ಜಾತಿಗೆ ಸೀಮಿತವಾಗಿರಿಸುತ್ತಿರುವುದು ಸರಿಯಾದ ಸಂಗತಿಯಲ್ಲ. ಇವರು ಇಡೀ ಭಾರತೀಯ ಸಂಸ್ಕೃತಿಗೆ ಮಹತ್ತರವಾದ ಕೊಡುಗೆಯನ್ನು ನೀಡಿದ್ದು,  ಇವರ ಸಂದೇಶಗಳನ್ನು ಸರ್ವವ್ಯಾಪಿಗೊಳಿಸುವ ಮೂಲಕ ಭವಿಷ್ಯದ ಸಮಾಜಕ್ಕೆ ತಿಳಿಸಿಕೊಡಬೇಕಾಗಿರುವುದು ಇಂದು ಅನಿವಾರ್ಯವಾಗಿದೆ. ಈ ಹಿನ್ನಲೆಯಲ್ಲಿ ಪರಿಷತ್ ಎಲ್ಲಾ ಜಾತಿ, ಸಮುದಾಯದವರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಮುಂದಾಗಿದೆ ಎಂದರು.
    ಮುಂದಿನ ದಿನಗಳಲ್ಲಿ ಎಲ್ಲಾ ಜಾತಿ, ಸಮುದಾಯದವರು ಒಗ್ಗೂಡಿ ದಾರ್ಶನಿಕರು, ಮಹಾತ್ಮರು, ಸಂತರ ಜಯಂತಿಗಳನ್ನು ಕಡ್ಡಾಯವಾಗಿ ಆಚರಿಸುವಂತಾಗಬೇಕು. ಈ ಹಿನ್ನಲೆಯಲ್ಲಿ ನ.೨೭ರಂದು ಬೆಳಿಗ್ಗೆ ೧೦.೩೦ಕ್ಕೆ ಶಿವಮೊಗ್ಗ ಕುವೆಂಪು ರಂಗಮಂದಿರದಲ್ಲಿ ಶ್ರೀ ಕನಕದಾಸ ಜಯಂತಿ ಮಹೋತ್ಸವ ಕಾರ್ಯಕ್ರಮವನ್ನು ಪೂಜ್ಯ ಭಾರತ ಎಂಬ ಹೆಸರಿನಡಿ ಆಚರಿಸಲಾಗುತ್ತಿದೆ. ಶಿವಮೊಗ್ಗ ನಗರ ಭಜನಾ ಮಂಡಳಿಗಳ ಒಕ್ಕೂಟದ ಮಾತೆಯರಿಂದ ಕನಕದಾಸರ ಕೃತಿಗಳ ಸಮೂಹ ಗಾಯನ ನಡೆಯಲಿದೆ. ನಂತರ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿಯವರು ದಿವ್ಯ ಸಾನಿಧ್ಯವಹಿಸಲಿದ್ದು, ಶಿವಮೊಗ್ಗ ಬೆಕ್ಕಿನಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಚಿತ್ರದುರ್ಗ ಮಾದಾರ ಚೆನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ, ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ  ಮತ್ತು ಹರಿಹರಪುರ ಶ್ರೀಮಠದ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಉಪಸ್ಥಿತರಿರುವರು ಎಂದರು.
    ಇದೆ ರೀತಿ ನ.೨೨ರಂದು ಸಂಜೆ ೪ ಗಂಟೆಗೆ ನಗರದ ರಂಗಪ್ಪ ವೃತ್ತದಲ್ಲಿ ಕನಕದಾಸರ ಜಯಂತಿ ಆಚರಿಸಲಾಗುವುದು. ಎಲ್ಲಾ ಜಾತಿ, ಸಮುದಾಯವರು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಿದರು.
ಜಿಲ್ಲಾ ಸಂಚಾಲಕ ಡಾ. ಎಸ್. ದಿಲೀಪ್‌ಕುಮಾರ್ ಪಾಂಡೆ, ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಸಿದ್ದಲಿಂಗಯ್ಯ, ಕುರುಬ ಸಮಾಜದ ಅಧ್ಯಕ್ಷ ಬಿ.ಎಂ ಸತೋಷ್, ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಟಿ ರವಿ ಸೇರಿದಂತೆ ಇನ್ನಿತರರು ಮಾತನಾಡಿದರು.
    ವಿವಿಧ ಜಾತಿ, ಸಮುದಾಯಗಳ ಪ್ರಮುಖರಾದ ತೀರ್ಥಯ್ಯ, ಜಿ. ಸುರೇಶ್‌ಕುಮಾರ್, ಬಸವರಾಜ ಬಿ. ಆನೇಕೊಪ್ಪ, ಜಿ. ಆನಂದಕುಮಾರ್, ಸುಬ್ರಮಣ್ಯ, ಬಾಲಾಜಿ, ರಾಘವೇಂದ್ರ ಸರಾಟೆ, ಬಿ.ಎಸ್ ಮಂಜುನಾಥ್, ಲಕ್ಷ್ಮೀಕಾಂತ್, ಶಿವಾಜಿರಾವ್, ಸುಭಾಷ್, ಶ್ರೀನಿವಾಸ್, ಬದರಿನಾರಾಯಣ ಶ್ರೇಷ್ಠಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ನೇತ್ರದಾನ ಶ್ರೇಷ್ಠದಾನ : ನಟ ಪುನೀತ್‌ರಾಜ್‌ಕುಮಾರ್ ಕೊಡುಗೆ ಅಪಾರ

ನೇತ್ರದಾನ ಅಭಿಯಾನ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್


ಭದ್ರಾವತಿಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಸಾರ್ವಜನಿಕ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಭಾನುವಾರ ಚಲನಚಿತ್ರ ನಟ, ಸಮಾಜ ಸೇವಕ, ಪವರ್ ಸ್ಟಾರ್ ಪುನೀತ್‌ರಾಜ್‌ಕುಮಾರ್‌ರವರ ಸ್ಮರಣಾರ್ಥ ನಗರದ ಬಿ.ಎಚ್ ರಸ್ತೆ ಅಂಡರ್‌ಬ್ರಿಡ್ಜ್ ಬಳಿ ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದ್ದ ನೇತ್ರದಾನ ಅಭಿಯಾನ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಪಾಲ್ಗೊಂಡು ಮಾತನಾಡಿದರು.
    ಭದ್ರಾವತಿ, ನ. ೨೧: ಚಲನಚಿತ್ರ ನಟ ಪುನೀತ್‌ರಾಜ್‌ಕುಮಾರ್‌ರವರು ಸಮಾಜಕ್ಕೆ ನೀಡಿರುವ ಕೊಡುಗೆ ಅಪಾರವಾಗಿದ್ದು, ಅವರ ಸೇವಾ ಕಾರ್ಯಗಳು ಶ್ಲಾಘನೀಯ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಮೆಚ್ಚುಗೆ ವ್ಯಕ್ತಪಡಿಸಿದರು.
    ಅವರು ಭಾನುವಾರ ನಾಲ್ವಡಿ ಕೃಷ್ಣರಾಜ ಒಡೆಯರ್ ಸಾರ್ವಜನಿಕ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಚಲನಚಿತ್ರ ನಟ, ಸಮಾಜ ಸೇವಕ, ಪವರ್ ಸ್ಟಾರ್ ಪುನೀತ್‌ರಾಜ್‌ಕುಮಾರ್‌ರವರ ಸ್ಮರಣಾರ್ಥ ನಗರದ ಬಿ.ಎಚ್ ರಸ್ತೆ ಅಂಡರ್‌ಬ್ರಿಡ್ಜ್ ಬಳಿ ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದ್ದ ನೇತ್ರದಾನ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ಪುನೀತ್‌ರಾಜ್‌ಕುಮಾರ್‌ರವರು ಕೇವಲ ನಟರಾಗಿ ಮಾತ್ರವಲ್ಲದೆ ಹಲವಾರು ಸಾಮಾಜಿಕ ಸೇವಾ ಕಾರ್ಯಗಳ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ವರನಟ ರಾಜ್‌ಕುಮಾರ್ ಅವರ ಕುಟುಂಬದವರು ನೇತ್ರದಾನ ಮಾಡುವ ಮೂಲಕ ಇತರರಿಗೆ ಬೆಳಕಾಗಿ ಇಂದಿಗೂ ನಮ್ಮೆಲ್ಲರ ನಡುವೆ ಉಳಿದುಕೊಂಡಿದ್ದಾರೆ. ದಾನಗಳಲ್ಲಿ ನೇತ್ರದಾನ ಶ್ರೇಷ್ಠವಾಗಿದ್ದು, ನಮ್ಮ ಸಾವಿನ ನಂತರ ಮಣ್ಣಲ್ಲಿ ಮಣ್ಣಾಗಿ ಹೋಗುವ ನೇತ್ರಗಳನ್ನು ಇತರರಿಗೆ ದಾನ ಮಾಡಿ ಅವರ ಮೂಲಕ ಜೀವಂತವಾಗಿ ಉಳಿದುಕೊಳ್ಳುವಂತಹ ವ್ಯಕ್ತಿಗಳು ನಾವಾಗಬೇಕು. ನೇತ್ರದಾನ ಅಭಿಯಾನದಂತಹ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯಬೇಕು. ಈ ಮೂಲಕ ಸಮಾಜದಲ್ಲಿ ಅಂಧತ್ವ ನಿವಾರಣೆಯಾಗಬೇಕೆಂದರು.
    ಇದಕ್ಕೂ ಮೊದಲು ಉದ್ಯಮಿ ಬಿ.ಕೆ ಜಗನ್ನಾಥ, ಪ್ರಗತಿಪರ ಸಂಘಟನೆಗಳ ಮುಖಂಡರಾದ ಸುರೇಶ್, ಈ.ಬಿ ಬಸವರಾಜ್, ನ್ಯೂಟೌನ್ ಸಿದ್ದಾರ್ಥ ಅಂಧರ ಕೇಂದ್ರದ ಅಧ್ಯಕ್ಷ ಶಿವಬಸಪ್ಪ,  ಶಿಕ್ಷಕ ಎ. ತಿಪ್ಪೇಸ್ವಾಮಿ ಸೇರಿದಂತೆ ಇನ್ನಿತರರು ಕಾರ್ಯಕ್ರಮ ಉದ್ಘಾಟಿಸಿದರು.
    ನೇತ್ರದಾನ ಅಭಿಯಾನದ ಜೊತೆಗೆ ಸಿದ್ದಾರ್ಥ ಅಂಧರ ಕೇಂದ್ರದ ಕಲಾವಿದರಿಂದ ಪುನೀತ್‌ರಾಜ್‌ಕುಮಾರ್‌ರವರ ಅಭಿನಯದ ಚಲನಚಿತ್ರಗಳ ಸುಮಧುರ ಗೀತೆಗಳೊಂದಿಗೆ ಗೀತಾ ನಮನ, ಹಾಗು ಪುಷ್ಪ ನಮನ ಕಾರ್ಯಕ್ರಮಗಳು ಜರುಗಿದವು.  
    ಮಧ್ಯಾಹ್ನ ಅನ್ನಸಂತರ್ಪಣೆ ನೆರವೇರಿಸಲಾಯಿತು. ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಗಣ್ಯರು ಸೇರಿದಂತೆ ಸಾರ್ವಜನಿಕರು ನೇತ್ರದಾನ ನೋಂದಾಣಿ ಮಾಡಿಸಿಕೊಂಡರು. ಸಂಘದ ಸಂಸ್ಥಾಪಕ ಅಧ್ಯಕ್ಷ ಎಸ್.ಕೆ ಸುಧೀಂದ್ರ ಅಧ್ಯಕ್ಷತೆ ವಹಿಸಿದ್ದರು.

ಕಸಾಪ ಚುನಾವಣೆ : ಶೇ.೫೫ರಷ್ಟು ಮತದಾನ

ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಪ್ರಮುಖರಿಂದ ಹಕ್ಕು ಚಲಾವಣೆ


ಭದ್ರಾವತಿ ತಾಲೂಕು ಕಚೇರಿಯಲ್ಲಿ ಭಾನುವಾರ ನಡೆದ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ತಮ್ಮ ಹಕ್ಕನ್ನು ಚಲಾಯಿಸಿದರು.
    ಭದ್ರಾವತಿ, ನ. ೨೧: ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ ಮತದಾನ ಭಾನುವಾರ ತಾಲೂಕು ಕಛೇರಿ ಮಿನಿ ವಿಧಾನಸೌಧದಲ್ಲಿ ನಡೆಯಿತು. ಶೇ.೫೫ರಷ್ಟು ಮತದಾನ ನಡೆದಿದ್ದು, ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಪ್ರಮುಖರು ಮತದಾನ ಮಾಡಿದರು.


ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ ಮತದಾನ ಭಾನುವಾರ ಭದ್ರಾವತಿ ತಾಲೂಕು ಕಛೇರಿ ಮಿನಿ ವಿಧಾನಸೌಧದಲ್ಲಿ ನಡೆಯಿತು. ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು.
    ತಾಲೂಕಿನಲ್ಲಿ ಒಟ್ಟು ೧೨೦೨ ಮತದಾರರಿದ್ದು, ಈ ಪೈಕಿ ೬೫೭ ಮಂದಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಬೆಳಿಗ್ಗೆ ೮ ಗಂಟೆಯಿಂದ ಆರಂಭವಾದ ಮತದಾನ ಮಧ್ಯಾಹ್ನ ೧ ಗಂಟೆವರೆಗೂ ಬಿರುಸಿನ ನಡೆಯಿತು. ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಪ್ರಮುಖರು ತಮ್ಮ ಹಕ್ಕನ್ನು ಚಲಾಯಿಸುವ ಮೂಲಕ ಗಮನ ಸೆಳೆದರು.
    ಸುಮಾರು ೮೫ ವರ್ಷ ವಯೋಮಾನದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಕೆ. ಶ್ಯಾಮಣ್ಣ ಸಹಾಯಕರೊಂದಿಗೆ ಆಗಮಿಸಿ ಮತಚಲಾಯಿಸಿದರು.


ರಾಜ್ಯಾಧ್ಯಕ್ಷ ಹಾಗು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಅಭ್ಯರ್ಥಿಗಳ ಪರವಾಗಿ ಮಿನಿವಿಧಾನಸೌಧದ ಸಮೀಪ ಬೆಂಬಲಿಗರು ಮತಯಾಚನೆ ನಡೆಸಿದರು.
    ರಾಜ್ಯಾಧ್ಯಕ್ಷ ಹಾಗು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಅಭ್ಯರ್ಥಿಗಳ ಪರವಾಗಿ ಮಿನಿವಿಧಾನಸೌಧದ ಸಮೀಪ ಬೆಂಬಲಿಗರು ಮತಯಾಚನೆ ನಡೆಸಿದರು. ಪರಿಷತ್ ಅಧ್ಯಕ್ಷರಾದ ಡಿ. ಮಂಜುನಾಥ್ ಮತ್ತು ಹಾಲಿ ಅಧ್ಯಕ್ಷ ಡಿ.ಬಿ ಶಂಕರಪ್ಪನವರ ನಡುವೆ ಹೆಚ್ಚಿನ ಪೈಪೋಟಿ ಇರುವುದು ಕಂಡು ಬಂದಿತು.
    ಯಾವುದೇ ಚುನಾವಣೆಗೆ ಕಡಿಮೆ ಇಲ್ಲದಂತೆ ಈ ಚುನಾವಣೆ ಸಹ ಕಂಡು ಬಂದಿದ್ದು, ಮತಗಟ್ಟೆ ಸುತ್ತಮುತ್ತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಮತದಾರರು ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು.

        ಡಿ. ಶಂಕರಪ್ಪಗೆ ಹೆಚ್ಚು ಮತ :
ಕಸಾಪ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪುನರಾಯ್ಕೆ ಬಯಸಿ ಸ್ಪರ್ಧಿಸಿರುವ ಹಾಲಿ ಅಧ್ಯಕ್ಷ ಡಿ. ಶಂಕರಪ್ಪ ಅವರಿಗೆ ೩೭೫ ಮತಗಳು ಲಭಿಸಿದ್ದು, ಮಾಜಿ ಅಧ್ಯಕ್ಷ ಡಿ. ಮಂಜುನಾಥ್‌ಗೆ ೨೫೨ ಮತಗಳು ಲಭಿಸಿವೆ. ಒಟ್ಟು ಚಲಾವಣೆಗೊಂಡಿರುವ ೬೫೭ ಮತಗಳಲ್ಲಿ ೬೨೭ ಮತಗಳು ಈ ಇಬ್ಬರ ಪಾಲಾಗಿದ್ದು, ಉಳಿದ ೩೦ ಮತಗಳು ಇನ್ನಿಬ್ಬರು ಅಭ್ಯರ್ಥಿಗಳ ಪಾಲಾಗಿವೆ.