Sunday, December 12, 2021

ಇಬ್ಬರು ಯುವಕರ ಮೇಲೆ ಗುಂಪೊಂದು ಗಾಂಜಾ ಅಮಲಿನಲ್ಲಿ ಹಲ್ಲೆ ಆರೋಪ : ಪ್ರತಿಭಟನೆ

ನ್ಯೂಟೌನ್ ಪೊಲೀಸರಿಂದ ಕಠಿಣ ಕ್ರಮ ಕೈಗೊಳ್ಳುವ ಭರವಸೆ


ಭದ್ರಾವತಿ ಗರದ ಬೈಪಾಸ್ ರಸ್ತೆಯ ನಗರಸಭೆ ವ್ಯಾಪ್ತಿಯ ಹೊಸಸಿದ್ದಾಪುರ ಗ್ರಾಮದಲ್ಲಿ ಭಾನುವಾರ ರಾತ್ರಿ ಯುವಕರ ಗುಂಪೊಂದು ಏಕಾಏಕಿ ಇಬ್ಬರು ಯುವಕರ ಮೇಲೆ ಹಲ್ಲೆ ನಡೆಸಿದ್ದು, ಹಲ್ಲೆಗೆ ಗಾಂಜಾ ಅಮಲು ಕಾರಣವಾಗಿದೆ. ತಕ್ಷಣ ಹಲ್ಲೆ ನಡೆಸಿರುವವರನ್ನು ಬಂಧಿಸುವಂತೆ ಒತ್ತಾಯಿಸಿ ನಗರಸಭೆ ಮಾಜಿ ಸದಸ್ಯ ಅನಿಲ್‌ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
    ಭದ್ರಾವತಿ, ಡಿ. ೧೨:  ನಗರದ ಬೈಪಾಸ್ ರಸ್ತೆಯ ನಗರಸಭೆ ವ್ಯಾಪ್ತಿಯ ಹೊಸಸಿದ್ದಾಪುರ ಗ್ರಾಮದಲ್ಲಿ ಭಾನುವಾರ ರಾತ್ರಿ ಯುವಕರ ಗುಂಪೊಂದು ಏಕಾಏಕಿ ಇಬ್ಬರು ಯುವಕರ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
    ಹಳೇನಂಜಾಪುರ ಗ್ರಾಮದ ನಿವಾಸಿಗಳಾದ ವಿನೋದ್ ಮತ್ತು ರಾಜೇಶ್ ಗಂಭೀರವಾಗಿ ಹಲ್ಲೆಗೊಳಗಾಗಿದ್ದು, ಈ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿನೋದ್ ಮತ್ತು ರಾಜೇಶ್ ಹೊಸಸಿದ್ದಾಪುರದ ಕಟಿಂಗ್‌ಶಾಪ್ ಬಳಿ ನಿಂತುಕೊಂಡಿದ್ದಾಗ ಯುವಕರ ಗುಂಪೊಂದು ಏಕಾಏಕಿ ಹಲ್ಲೆ ನಡೆಸಿದ್ದು, ಈ ಸಂದರ್ಭದಲ್ಲಿ ಹಲ್ಲೆ ತಪ್ಪಿಸಲು ಹೋದ ನಗರಸಭಾ ಮಾಜಿ ಸದಸ್ಯ ಅನಿಲ್‌ಕುಮಾರ್‌ರವರ ತಂದೆಯ ಮೇಲೆ ಸಹ ಹಲ್ಲೆ ನಡೆಸಲಾಗಿದೆ. ಗಾಂಜಾ ಅಮಲಿನಲ್ಲಿ ಹಲ್ಲೆ ನಡೆಸಲಾಗಿದೆ ಎನ್ನಲಾಗಿದ್ದು, ಇದರಿಂದಾಗಿ ಗ್ರಾಮಸ್ಥರು ಆಕ್ರೋಶಗೊಂಡಿದ್ದಾರೆ.
        ರಸ್ತೆ ತಡೆ ನಡೆಸಿ ಪ್ರತಿಭಟನೆ :
   ಈ ಭಾಗದಲ್ಲಿ ಗಾಂಜಾ ಸೇರಿದಂತೆ ಮಾದಕ ವಸ್ತುಗಳ ಸೇವನೆ ಹೆಚ್ಚಾಗುತ್ತಿದ್ದು, ಇದಕ್ಕೆ ಯುವ ಸಮುದಾಯ ಬಲಿಯಾಗುತ್ತಿದೆ. ಇದನ್ನು ಪ್ರಶ್ನಿಸಲು ಮುಂದಾದವರ ಮೇಲೆ ಹಲ್ಲೆ ನಡೆಸಲಾಗುತ್ತಿದೆ. ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ತೇಜೋವಧೆ ಮಾಡಲಾಗುತ್ತಿದೆ. ಪುಂಡ ಪೋಕರಿಗಳ ಹಾವಳಿ ಹೆಚ್ಚಾಗಿದೆ. ಗ್ರಾಮಸ್ಥರು ಪ್ರತಿ ದಿನ ಆತಂಕದಲ್ಲಿ ಕಾಲ ಕಳೆಯುವಂತಾಗಿದೆ. ಪೊಲೀಸರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆಂದು ಆರೋಪಿಸಿ ಸ್ಥಳೀಯರು ನಗರಸಭೆ ಮಾಜಿ ಸದಸ್ಯ ಅನಿಲ್‌ಕುಮಾರ್ ನೇತೃತ್ವದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
    ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ನ್ಯೂಟೌನ್ ಠಾಣೆ ಪೊಲೀಸರು ಹಲ್ಲೆ ನಡೆಸಿರುವ ಯುವಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.


ಅನುಭವಿ ಕಲಾವಿದರಿಂದ ಮಾತ್ರ ಬೀದಿ ನಾಟಕ ಯಶಸ್ವಿಗೊಳಿಸಲು ಸಾಧ್ಯ : ಹೊನ್ನಾಳಿ ಚಂದ್ರಶೇಖರ್


ಭದ್ರಾವತಿ ಹಳೇನಗರದ ಬಸವೇಶ್ವರ ವೃತ್ತದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ಸಹಯೋಗದೊಂದಿಗೆ ನಗರದ ಜನ್ನಾಪುರ ಅಪರಂಜಿ ಅಭಿನಯ ಶಾಲೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ  'ಬಾರಿಸು ಕನ್ನಡ ಡಿಂಡಿಮವ' ವಿಶೇಷ ಬೀದಿ ನಾಟಕಕ್ಕೆ ಹಿರಿಯ ಪತ್ರಕರ್ತ ಹೊನ್ನಾಳಿ ಚಂದ್ರಶೇಖರ್ ಚಾಲನೆ ನೀಡಿದರು.
    ಭದ್ರಾವತಿ, ಡಿ. ೧೨: ಬೀದಿನಾಟಕಗಳ ಮೂಲಕ ಜನರನ್ನು ಆಕರ್ಷಿಸುವುದು ಸವಾಲಿನ ಕೆಲಸವಾಗಿದ್ದು, ಅನುಭವಿ ಕಲಾವಿದರಿಂದ ಮಾತ್ರ ಬೀದಿ ನಾಟಕಗಳನ್ನು ಯಶಸ್ವಿಗೊಳಿಸಲು ಸಾಧ್ಯ ಎಂದು ಹಿರಿಯ ಪತ್ರಕರ್ತ ಹೊನ್ನಾಳಿ ಚಂದ್ರಶೇಖರ್ ಹೇಳಿದರು.
    ಅವರು ಭಾನುವಾರ ಹಳೇನಗರದ ಬಸವೇಶ್ವರ ವೃತ್ತದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ಸಹಯೋಗದೊಂದಿಗೆ ನಗರದ ಜನ್ನಾಪುರ ಅಪರಂಜಿ ಅಭಿನಯ ಶಾಲೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ  'ಬಾರಿಸು ಕನ್ನಡ ಡಿಂಡಿಮವ' ವಿಶೇಷ ಬೀದಿ ನಾಟಕಕ್ಕೆ ಚಾಲನೆ ನೀಡಿ ಮಾತನಾಡಿದರು.
    ವಿಭಿನ್ನ ಮನಸ್ಥಿತಿಯ ಜನರ ಗಮನವನ್ನು ಒಂದೆಡೆ ಸೆಳೆದು ಆ ನಂತರ ನಾಟಕದಲ್ಲಿನ ವಿಚಾರಧಾರೆಗಳನ್ನು ತಿಳಿಸುವ ಕೆಲಸ ನಿಜಕ್ಕೂ ಸವಾಲಾಗಿದೆ. ಬೀದಿ ನಾಟಕಗಳು ತನ್ನದೇ ವಿಶಿಷ್ಟತೆಯನ್ನು ಹೊಂದಿವೆ. ಬೀದಿ ನಾಟಕಗಳು ಜನರನ್ನು ಹೋರಾಟಗಳಲ್ಲಿ, ಚಳುವಳಿಗಳಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆ ನೀಡುವ ಜೊತೆಗೆ ಸಾಮಾಜಿಕ ಕಾಳಜಿ, ಜಾಗೃತಿ ಮೂಡಿಸಲು ಸಹಕಾರಿಯಾಗಿವೆ. ಇಂತಹ ಬೀದಿ ನಾಟಕಗಳು ಇಂದಿನ ಸಮಾಜಕ್ಕೆ ಅವಶ್ಯಕವಾಗಿವೆ. ಬೀದಿ ನಾಟಕ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಈ ರೀತಿಯ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯುವಂತಾಗಬೇಕೆಂದರು.
    ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎನ್ ಶ್ರೀಹರ್ಷ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.
    ರಂಗಕರ್ಮಿ, ಕಿರುತೆರೆ ನಟ ಅಪರಂಜಿ ಶಿವರಾಜ್ ರಚನೆ, ನಿರ್ದೇಶನದ 'ಬಾರಿಸು ಕನ್ನಡ ಡಿಂಡಿಮವ' ವಿಶೇಷ ಬೀದಿ ನಾಟಕ ಪ್ರದರ್ಶನ ಅಪರಂಜಿ ಅಭಿನಯ ಶಾಲೆಯ ಕಲಾವಿದರು ನಡೆಸಿಕೊಟ್ಟರು.  

ಅಬ್ಬರದಿಂದ ನಡೆದ ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆ


ಭದ್ರಾವತಿ ನ್ಯೂಟೌನ್ ಎಸ್‌ಎವಿ ಶಾಲೆಯಲ್ಲಿ ಭಾನುವಾರ ನಡೆದ ಒಕ್ಕಲಿಗರ ಸಂಘದ ನಿರ್ದೇಶಕ ಸ್ಥಾನದ ಚುನಾವಣೆಯ ಮತದಾನದಲ್ಲಿ ಅಭ್ಯರ್ಥಿ ಎಸ್. ಕುಮಾರ್ ಪರವಾಗಿ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಟಿ ರವಿ ಹಾಗು ಪದಾಧಿಕಾರಿಗಳು ಮತಯಾಚನೆ ನಡೆಸಿದರು.
    ಭದ್ರಾವತಿ, ಡಿ. ೧೨: ರಾಜ್ಯ ಒಕ್ಕಲಿಗರ ಸಂಘ ಶಿವಮೊಗ್ಗ-ಉತ್ತರ ಕನ್ನಡ ನಿರ್ದೇಶಕ ಸ್ಥಾನದ ಚುನಾವಣೆಯ ಮತದಾನ ಭಾನುವಾರ ಯಶಸ್ವಿಯಾಗಿ ನಡೆದಿದ್ದು,  ಸಾರ್ವತ್ರಿಕ ಚುನಾವಣೆಗಳನ್ನು ಮೀರಿಸುವಂತಹ ವಾತಾವರಣ ಕಂಡು ಬಂದಿತು.


ಭದ್ರಾವತಿ ನ್ಯೂಟೌನ್ ಎಸ್‌ಎವಿ ಶಾಲೆಯಲ್ಲಿ ಭಾನುವಾರ ನಡೆದ ಒಕ್ಕಲಿಗರ ಸಂಘದ ನಿರ್ದೇಶಕ ಸ್ಥಾನದ ಚುನಾವಣೆಯ ಮತದಾನದಲ್ಲಿ ಅಭ್ಯರ್ಥಿ ಧರ್ಮೇಶ್ ಸಿರಿಬೈಲು ಪರವಾಗಿ ಬೆಂಬಲಿಗರು ಮತಯಾಚನೆ ನಡೆಸಿದರು.
    ನ್ಯೂಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ ಆಂಗ್ಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳಿಗ್ಗೆ ೭ ಗಂಟೆಯಿಂದ ಆರಂಭಗೊಂಡ ಮತದಾನ ಮಧ್ಯಾಹ್ನ ೨ ಗಂಟೆವರೆಗೆ ಬಿರುಸಿನಿಂದ ನಡೆದಿದ್ದು, ಶೇ.೭೦ರಷ್ಟು ಮತದಾನ ನಡೆಯಿತು. ಒಟ್ಟು ೯ ಅಭ್ಯರ್ಥಿಗಳು ಕಣದಲ್ಲಿದ್ದು, ೧೩,೪೩೬ ಮಂದಿ ಮತದಾನದ ಹಕ್ಕು ಹೊಂದಿದ್ದು, ಈ ಪೈಕಿ  ತೀರ್ಥಹಳ್ಳಿ ಮತ್ತು ಭದ್ರಾವತಿ ತಾಲೂಕುಗಳಲ್ಲಿ ಮತದಾರರ ಸಂಖ್ಯೆ ಅಧಿಕವಾಗಿದೆ. ಭದ್ರಾವತಿಯಲ್ಲಿ ಒಟ್ಟು ೪೦೫೪ ಮಂದಿ ಮತದಾನದ ಹಕ್ಕು ಹೊಂದಿದ್ದು,  ಸಂಜೆ ೪ರ ವೇಳೆಗೆ ಬಹುತೇಕ ಮಂದಿ ಮತಚಲಾಯಿಸಿದರು. ಅಭ್ಯರ್ಥಿಗಳ ಫಲಿತಾಂಶದಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ.
    ಈ ಬಾರಿ ಚುನಾವಣೆಯಲ್ಲಿ ತಾಲೂಕು ಒಕ್ಕಲಿಗರ ಸಂಘ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್‌ರವರನ್ನು ಒಮ್ಮತದ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದ ಪರಿಣಾಮ ತೀವ್ರ ಪೈಪೋಟಿ ಕಂಡು ಬಂದಿತು. ಕುಮಾರ್ ಪರವಾಗಿ ಸಂಘದ ಪದಾಧಿಕಾರಿಗಳು, ಬೆಂಬಲಿಗರು, ಹಿತೈಷಿಗಳು ಮತಗಟ್ಟೆ ಬಳಿ ಅಬ್ಬರದ ಮತಯಾಚನೆ ನಡೆಸಿದರು.
    ಈ ನಡುವೆ ತಾಲೂಕು ಒಕ್ಕಲಿಗರ ಸಂಘಕ್ಕೆ ಸೆಡ್ಡು ಹೊಡೆದು ಕಣಕ್ಕಿಳಿದಿದ್ದ  ಅಭ್ಯರ್ಥಿಗಳು ತಮಗೆ ಮತ ಹಾಕುವಂತೆ ಮನವಿ ಮಾಡಿದರು. ಮತ್ತೊಂದೆಡೆ ಬೇರೆ ತಾಲೂಕಿನ ಅಭ್ಯರ್ಥಿಯನ್ನು ಬೆಂಬಲಿಸಲು ಕೆಲವರು ಮುಂದಾಗಿರುವುದು ಕಂಡು ಬಂದಿತು. ತೀರ್ಥಹಳ್ಳಿಯ ಧರ್ಮೇಶ್ ಸಿರಿಬೈಲು ಪರವಾಗಿ ವ್ಯಾಪಕವಾಗಿ ಮತಯಾಚನೆ ನಡೆಸುತ್ತಿರುವುದು ಕಂಡು ಬಂದಿತು.


ಭದ್ರಾವತಿ ನ್ಯೂಟೌನ್ ಎಸ್‌ಎವಿ ಶಾಲೆಯಲ್ಲಿ ಭಾನುವಾರ ನಡೆದ ಒಕ್ಕಲಿಗರ ಸಂಘದ ನಿರ್ದೇಶಕ ಸ್ಥಾನದ ಚುನಾವಣೆಯಲ್ಲಿ ಜೆಡಿಎಸ್ ಮುಖಂಡರಾದ ಶಾರದ ಅಪ್ಪಾಜಿ ಕುಟುಂಬ ಸದಸ್ಯರೊಂದಿಗೆ ಆಗಮಿಸಿ ಮತ ಚಲಾಯಿಸಿದರು.
    ಮತದಾರರನ್ನು ಸೆಳೆಯಲು ಅಭ್ಯರ್ಥಿಗಳಿಂದ ಹಲವು ರೀತಿಯ ಕಸರತ್ತುಗಳು ನಡೆದಿರುವುದು ಕಂಡು ಬಂದಿದ್ದು, ಅಲ್ಲದೆ ಹಣ, ಹೆಂಡ ಸೇರಿದಂತೆ ಇನ್ನಿತರ ಅಮಿಷಗಳ ಮೂಲಕ ಮತದಾರರನ್ನು ಸೆಳೆದಿರುವುದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಮತಗಟ್ಟೆ ಬಳಿ ಬೆಳಿಗ್ಗೆ ಉಪಹಾರ ವ್ಯವಸ್ಥೆ ಮತ್ತು ಮಧ್ಯಾಹ್ನ ಊಟದ ವ್ಯವಸ್ಥೆ ಅದರಲ್ಲೂ ಬಾಡೂಟ ವ್ಯವಸ್ಥೆ ಕೈಗೊಳ್ಳಲಾಗಿತ್ತು. ಮತಗಟ್ಟೆ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.
    ಪತ್ರಿಕೆ ಜೊತೆ ಮಾತನಾಡಿದ ಅಭ್ಯರ್ಥಿ ಧರ್ಮೇಶ್ ಸಿರಿಬೈಲು, ಈ ಬಾರಿ ಚುನಾವಣೆ ಯಶಸ್ವಿಯಾಗಿ ನಡೆಯುವ ಮೂಲಕ ಎಲ್ಲಾ ಮತಗಟ್ಟೆಗಳಲ್ಲೂ ಮಧ್ಯಾಹ್ನದ ವೇಳೆಗೆ ಹೆಚ್ಚಿನ ಮತದಾನವಾಗಿದೆ. ಈ ಮೂಲಕ ತಮ್ಮ ನೆಚ್ಚಿನ ನಿರ್ದೇಶಕನ ಆಯ್ಕೆಯಲ್ಲಿ ಸಮುದಾಯದವರು ಒಲವು ತೋರಿಸಿರುವುದು ಹೆಮ್ಮೆಯ ವಿಚಾರವಾಗಿದ್ದು, ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

Saturday, December 11, 2021

ಹುಟ್ಟುಹಬ್ಬದ ಮೂಲಕ ಸಂಘಟನೆಗೆ ಮುಂದಾದ ಕರಾವೇ ಜಿಲ್ಲಾಧ್ಯಕ್ಷೆ ಜ್ಯೋತಿ ಸೋಮಶೇಖರ್

ಪ್ರತಿವರ್ಷ ವಿಕಲಚೇತನರು, ವಯೋವೃದ್ಧರು, ಅನಾಥರು, ಅಶಕ್ತರೊಂದಿಗೆ ಹುಟ್ಟುಹಬ್ಬ ಆಚರಣೆ


ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಜ್ಯೋತಿ ಸೋಮಶೇಖರ್ ತಮ್ಮ ಹುಟ್ಟುಹಬ್ಬವನ್ನು ಭದ್ರಾವತಿಯಲ್ಲಿ ಕಾರುಣ್ಯ ಚಾರಿಟಬಲ್ ಟ್ರಸ್ಟ್‌ನ ಹಿರಿಯ ನಾಗರೀಕರ ಆರೈಕೆ ಕೇಂದ್ರದಲ್ಲಿ ವಿಶಿಷ್ಟವಾಗಿ ಆಚರಿಸಿಕೊಂಡರು.
    ಭದ್ರಾವತಿ, ಡಿ. ೧೧: ಹುಟ್ಟುಹಬ್ಬದ ಆಚರಣೆ ಮೂಲಕ ಸಂಘಟನೆ ಬಲಪಡಿಸುವ ವಿನೂತನ ಪ್ರಯತ್ನಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಮುಂದಾಗಿದ್ದು, ಈ ನಿಟ್ಟಿನಲ್ಲಿ ವೇದಿಕೆಯ ಜಿಲ್ಲಾಧ್ಯಕ್ಷರು ತಮ್ಮ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿಕೊಂಡು ಬರುತ್ತಿದ್ದಾರೆ.
    ಪ್ರತಿ ವರ್ಷ ವೇದಿಕೆಯ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಜ್ಯೋತಿ ಸೋಮಶೇಖರ್ ನ್ಯೂಟೌನ್ ಸಿದ್ದಾರ್ಥ ಅಂಧರ ಕೇಂದ್ರದ ವಿಕಲಚೇತನರು ಹಾಗು ಅನಾಥರು, ವಯೋವೃದ್ಧರು ಮತ್ತು ಅಶಕ್ತರೊಂದಿಗೆ ಸಂಘಟನೆಯ ಪದಾಧಿಕಾರಿಗಳು, ಕಾರ್ಯಕರ್ತರ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡು ಬರುತ್ತಿದ್ದಾರೆ.
    ಈ ಬಾರಿ ಸಹ ಕಾರುಣ್ಯ ಚಾರಿಟಬಲ್ ಟ್ರಸ್ಟ್‌ನ ಹಿರಿಯ ನಾಗರೀಕರ ಆರೈಕೆ ಕೇಂದ್ರದಲ್ಲಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿಕೊಂಡರು. ಅಲ್ಲದೆ ತಮ್ಮ ಹುಟ್ಟುಹಬ್ಬದ ಸಂಭ್ರಮವನ್ನು ವೇದಿಕೆ ಜಿಲ್ಲಾಧ್ಯಕ್ಷ ಪಿ. ಪ್ರಶಾಂತ್‌ರವರ ಹುಟ್ಟುಹಬ್ಬದ ಜೊತೆ ಹಂಚಿಕೊಂಡರು. ಇದು ವೇದಿಕೆಯ ಪದಾಧಿಕಾರಿಗಳು ಹಾಗು ಕಾರ್ಯಕರ್ತರನ್ನು ಮತ್ತಷ್ಟು ಸಂಘಟಿಸಲು ಕಾರಣವಾಗಿದೆ. ಎಲ್ಲರ ಹುಟ್ಟುಹಬ್ಬ ಸಹ ಈ ನಿಟ್ಟಿನಲ್ಲಿಯೇ ಸಾಗಬೇಕೆಂಬ ಆಶಯ ವೇದಿಕೆ ಹೊಂದಿದೆ ಎಂಬ ಸಂದೇಶ ಜ್ಯೋತಿ ಸೋಮಶೇಖರ್ ತೋರಿಸಿ ಕೊಟ್ಟಿದ್ದಾರೆ.
    ವೇದಿಕೆ ಗೌರವಾಧ್ಯಕ್ಷ ನಾಗೇಂದ್ರ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥಗೌಡ, ಶಿವಾಮೋಗ್ಗ ಯುವಘಟಕ ಅದ್ಯಕ್ಷ ಶಾಜಿದ್ ಅಹಮದ್, ಜಿಲ್ಲಾ ಕಾರ್ಯದರ್ಶಿ ಶಶಾಂಕ್,  ಜಿಲ್ಲಾ ಮಹಿಳಾ ಉಪಾಧ್ಯಕ್ಷೆ ಜಯಂತಿ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾರದಾ, ಪ್ರೀತಿ ಪ್ರಶಾಂತ್, ಐಶ್ವರ್ಯ, ಪ್ರಶಾಂತ್, ಶಿವಮೊಗ್ಗ ತಾಲೂಕು ಮಹಿಳಾ ಅಧ್ಯಕ್ಷೆ ಗಂಗಾವತಿ, ಭದ್ರಾವತಿ ತಾಲೂಕು ಮಹಿಳಾ ಅಧ್ಯಕ್ಷೆ ಮಹೇಶ್ವರಿ. ನಾಗರತ್ನ, ಕಾಂತಾ, ಮಂಜುಳಾ, ಸುಮಿತ್ರಾ, ಗೀತಾ, ವಾಣಿ, ಯಾಸ್ಮಿನ್, ಪ್ರೇಮ ಮತ್ತು  ಶ್ರಾವ್ಯ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಡಿ.೧೭ರಿಂದ ರಾಜ್ಯಮಟ್ಟದ ಓಂ ಕಪ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ

    ಭದ್ರಾವತಿ, ಡಿ. ೧೧: ಶಾಸಕ ಬಿ.ಕೆ ಸಂಗಮೇಶ್ವರ್ ಸಹಕಾರದೊಂದಿಗೆ ನಗರದ ಓಂ ಕ್ರಿಕೇಟರ್‍ಸ್ ವತಿಯಿಂದ ಯುವ ಮುಖಂಡ ಕೆ.ಪಿ ಗಿರೀಶ್ ನೇತೃತ್ವದಲ್ಲಿ ಡಿ.೧೭ ರಿಂದ ೧೯ರವರೆಗೆ ಮೊಟ್ಟ ಮೊದಲ ಬಾರಿಗೆ ರಾಜ್ಯಮಟ್ಟದ ಓಂ ಕಪ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಹಮ್ಮಿಕೊಳ್ಳಲಾಗಿದೆ.
    ಪಂದ್ಯಾವಳಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ನಡೆಯಲಿದ್ದು, ಪ್ರವೇಶ ಶುಲ್ಕ ೧೫,೦೦೦ ರು. ನಿಗದಿಪಡಿಸಲಾಗಿದೆ. ವಿಜೇತ ತಂಡಗಳಿಗೆ ಮೊದಲ ಬಹುಮಾನ ೧,೫೦,೦೦೦ ರು. ನಗದು ಹಾಗು ಪಾರಿತೋಷಕ, ದ್ವಿತೀಯ ಬಹುಮಾನ ೭೫,೦೦೦ ರು. ನಗದು ಹಾಗು ಪಾರಿತೋಷಕ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ಮೊ: ೯೮೮೦೧೦೦೯೬೨ ಸಂಖ್ಯೆಗೆ ಕರೆ ಮಾಡಬಹುದಾಗಿದೆ.

ಒಕ್ಕಲಿಗರ ಸಂಘದ ನಿರ್ದೇಶಕ ಸ್ಥಾನಕ್ಕೆ ಚುನಾವಣೆ : ಡಿ.೧೨ರಂದು ಮತದಾನ

    ಭದ್ರಾವತಿ, ಡಿ. ೧೧: ರಾಜ್ಯ ಒಕ್ಕಲಿಗರ ಸಂಘದ ಚುನಾವಣೆ ಶಿವಮೊಗ್ಗ-ಉತ್ತರ ಕನ್ನಡ ನಿರ್ದೇಶಕ ಸ್ಥಾನಕ್ಕೆ ಈ ಬಾರಿ ತೀವ್ರ ಪೈಪೋಟಿ ಕಂಡು ಬರುತ್ತಿದ್ದು, ಡಿ.೧೨ರಂದು ಮತದಾನ ನಡೆಯಲಿದೆ.
    ಯಾವುದೇ ಚುನಾವಣೆಗೂ ಕಡಿಮೆ ಇಲ್ಲದಂತೆ ಈ ಚುನಾವಣೆ ಸಹ ನಡೆಯುತ್ತಿದ್ದು, ಸಮಾಜದ ಮುಖ್ಯ ವಾಹಿನಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಒಕ್ಕಲಿಗ ಸಮುದಾಯದ ಪ್ರಮುಖರು ತೀವ್ರ ಪೈಪೋಟಿಗೆ ಮುಂದಾಗಿರುವುದು ಹೆಚ್ಚಿನ ಗಮನ ಸೆಳೆಯುತ್ತಿದೆ. ವಿಧಾನಸಭೆ, ವಿಧಾನ ಪರಿಷತ್ ಚುನಾವಣೆಯಂತೆ ಮತದಾರರನ್ನು ಸೆಳೆಯಲು ಅಭ್ಯರ್ಥಿಗಳಿಂದ ಹಲವು ರೀತಿಯ ಕಸರತ್ತುಗಳನ್ನು ನಡೆಸಲಾಗಿದ್ದು, ಅಭ್ಯರ್ಥಿಗಳ ಪರವಾಗಿ ಬೆಂಬಲಿಗರು ಮನೆ ಮನೆಗೆ ತೆರಳಿ ಮತಯಾಚಿಸಿದ್ದಾರೆ.
    ಈ ಬಾರಿ ನಿರ್ದೇಶಕ ಸ್ಥಾನ ತನ್ನದಾಗಿಸಿಕೊಳ್ಳಬೇಕೆಂಬ ಉದ್ದೇಶದೊಂದಿಗೆ ಇಲ್ಲಿನ ತಾಲೂಕು ಒಕ್ಕಲಿಗರ ಸಂಘ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್‌ರನ್ನು ಒಮ್ಮತದ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. ಈ ನಡುವೆ ಕೆಲವರು ಸಂಘಕ್ಕೆ ಸೆಡ್ಡು ಹೊಡೆದು ಕಣಕ್ಕಿಳಿದಿದ್ದು, ಈ ನಡುವೆಯೂ ಬೇರೆ ತಾಲೂಕಿನ ಅಭ್ಯರ್ಥಿಯನ್ನು ಬೆಂಬಲಿಸಲು ಕೆಲವರು ಮುಂದಾಗಿದ್ದು, ಈ ಹಿನ್ನಲೆಯಲ್ಲಿ ತಾಲೂಕು ಒಕ್ಕಲಿಗರ ಸಂಘದ ಪ್ರತಿಷ್ಠೆ ಎತ್ತಿ ಹಿಡಿಯುವ ಅನಿವಾರ್ಯತೆ ಎದುರಾಗಿದೆ.
    ಮತದಾನ ಬೆಳಿಗ್ಗೆ ೭ ಗಂಟೆಯಿಂದ ಸಂಜೆ ೫ ಗಂಟೆವರೆಗೆ ನಗರದ ನ್ಯೂಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ ಆಂಗ್ಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.

ಪ್ರಪಂಚಕ್ಕೆ ಮಾನವ ಹಕ್ಕುಗಳ ಪರಿಕಲ್ಪನೆ ತಿಳಿಸಿಕೊಟ್ಟವರು ಬಾಬಾ ಸಾಹೇಬ್ ಅಂಬೇಡ್ಕರ್ : ಡಾ. ಧನಂಜಯ


ಡಾ. ಬಿ.ಆರ್ ಅಂಬೇಡ್ಕರ್ ಜಾನಪದ ಕಲಾ ಸಂಘ ಮತ್ತು ಹಳೇ ಸೀಗೆಬಾಗಿ ರಾಜೀವ್ ಗಾಂಧಿ ಶಿಕ್ಷಣ ಮಹಾವಿದ್ಯಾಲಯ ಮತ್ತು ಶಿವಮೊಗ್ಗ ನೆಹರು ಯುವ ಕೇಂದ್ರ ಇವರ ಸಹಯೋಗದೊಂದಿಗೆ ಜನ್ನಾಪುರ ಎನ್‌ಟಿಬಿ ರಸ್ತೆಯಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಡಾ. ಧನಂಜಯ, ಎಂ. ಶಿವಕುಮಾರ್, ಉಲ್ಲಾಸ್ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.
    ಭದ್ರಾವತಿ, ಡಿ. ೧೧: ಪ್ರಪಂಚಕ್ಕೆ ಮಾನವ ಹಕ್ಕುಗಳ ಪರಿಕಲ್ಪನೆ ಪರಿಚಯಿಸಿ ಕೊಟ್ಟವರು ಬಾಬಾ ಸಾಹೇಬ್ ಅಂಬೇಡ್ಕರ್ ಎಂಬುದನ್ನು ಯಾರು ಸಹ ಮರೆಯಬಾರದು. ಮಾನವ ಹಕ್ಕುಗಳು ವಿಶಿಷ್ಟತೆಯಿಂದ ಕೂಡಿದ್ದು, ಪ್ರಸ್ತುತ ಇವುಗಳ ಕುರಿತು ಇಂದಿನ ಯುವ ಪೀಳಿಗೆ ತಿಳಿದುಕೊಳ್ಳುವ ಅಗತ್ಯವಿದೆ ಎಂದು ನಗರದ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಧನಂಜಯ ಹೇಳಿದರು.
    ಅವರು ನಗರದ ಡಾ. ಬಿ.ಆರ್ ಅಂಬೇಡ್ಕರ್ ಜಾನಪದ ಕಲಾ ಸಂಘ ಮತ್ತು ಹಳೇ ಸೀಗೆಬಾಗಿ ರಾಜೀವ್ ಗಾಂಧಿ ಶಿಕ್ಷಣ ಮಹಾವಿದ್ಯಾಲಯ ಮತ್ತು ಶಿವಮೊಗ್ಗ ನೆಹರು ಯುವ ಕೇಂದ್ರ ಇವರ ಸಹಯೋಗದೊಂದಿಗೆ ಜನ್ನಾಪುರ ಎನ್‌ಟಿಬಿ ರಸ್ತೆಯಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಪ್ರತಿಯೊಂದು ದಿನಾಚರಣೆಗೂ ಒಂದೊಂದು ವಿಶಿಷ್ಟತೆ ಇದೆ. ಇವುಗಳಲ್ಲಿ ಮಾನವ ಹಕ್ಕುಗಳ ದಿನಾಚರಣೆ ಪ್ರಮುಖವಾಗಿದೆ. ಸಮಾನತೆಯೊಂದಿಗೆ ಪ್ರತಿಯೊಬ್ಬರು ತಮ್ಮದೇ ಆದ ಹಕ್ಕು ಹೊಂದಿದ್ದಾರೆ ಎಂಬುದನ್ನು ಅಂಬೇಡ್ಕರ್‌ರವರು ಪ್ರತಿಪಾದಿಸುವ ಮೂಲಕ ಈ ನಿಟ್ಟಿನಲ್ಲಿ ಈ ಹಿಂದೆ ಬಹಳಷ್ಟು ರಾಷ್ಟ್ರಗಳು ಹೊಂದಿದ್ದ ಪರಿಕಲ್ಪನೆಗಳು ಬದಲಾವಣೆಗೊಂಡವು. ಮಾನವ ಹಕ್ಕುಗಳ ಕುರಿತು ತಿಳಿದುಕೊಳ್ಳುವುದು ಬಹಳಷ್ಟಿದೆ. ಈ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಹೆಚ್ಚು ಸಹಕಾರಿಯಾಗಿವೆ ಎಂದರು.
    ನ್ಯಾಯವಾದಿ ಎಂ. ಶಿವಕುಮಾರ್ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದರು. ನೆಹರು ಯುವ ಕೇಂದ್ರದ ಸಮನ್ವಯಾಧಿಕಾರಿ ಉಲ್ಲಾಸ್, ರಾಜೀವ್ ಗಾಂಧಿ ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕ ಮಂಜುನಾಥ್ ಉಪಸ್ಥಿತರಿದ್ದರು. ಎಂಪಿಎಂ ನಿವೃತ್ತ ಕಾರ್ಮಿಕ ಎ.ಕೆ ಮಂಜಪ್ಪ ಅಧ್ಯಕ್ಷತೆ ವಹಿಸಿದ್ದರು. ಜಾನಪದ ಕಲಾವಿದ ತಮಟೆ ಜಗದೀಶ್ ಕಾರ್ಯಕ್ರಮ ನಿರೂಪಿಸಿದರು. ಆರಂಭದಲ್ಲಿ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಸೇನಾಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹಾಗು ವೀರಮರಣ ಹೊಂದಿದ ಯೋಧರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು.