Sunday, January 9, 2022

ಶಾಲೆಯಿಂದ ಹೊರಗುಳಿದ ಹೆಣ್ಣು ಮಕ್ಕಳಿಗಾಗಿ ಉಚಿತ ಡೇಟಾ ಎಂಟ್ರಿ, ಬ್ಯೂಟಿಷಿಯನ್ ತರಬೇತಿಗೆ ಚಾಲನೆ

ಹೆಣ್ಣು ಮಕ್ಕಳಿಗೆ ಕೌಶಲ್ಯಾಧಾರಿತ ಉಚಿತ ಡೇಟಾ ಎಂಟ್ರಿ ಮತ್ತು ಬ್ಯೂಟಿಷಿಯನ್ ತರಬೇತಿಗೆ ಭದ್ರಾವತಿ ನ್ಯೂಟೌನ್ ಸರ್ಕಾರಿ ಬಾಲಿಕಾ ಪ್ರೌಢಶಾಲೆಯಲ್ಲಿ ಚಾಲನೆ ನೀಡಲಾಯಿತು.
    ಭದ್ರಾವತಿ, ಜ. ೯: ಹೆಣ್ಣು ಮಕ್ಕಳಿಗೆ ಕೌಶಲ್ಯಾಧಾರಿತ ಉಚಿತ ಡೇಟಾ ಎಂಟ್ರಿ ಮತ್ತು ಬ್ಯೂಟಿಷಿಯನ್ ತರಬೇತಿಗೆ ನಗರದ ನ್ಯೂಟೌನ್ ಸರ್ಕಾರಿ ಬಾಲಿಕಾ ಪ್ರೌಢಶಾಲೆಯಲ್ಲಿ ಚಾಲನೆ ನೀಡಲಾಯಿತು.
    ಸರ್ವ ಶಿಕ್ಷಣ ಕರ್ನಾಟಕ(ಎಸ್‌ಎಸ್‌ಕೆ) ಡಿವೈಪಿಸಿಗಳಾದ ಗಣಪತಿ ಮತ್ತು ಉಮಾಮಹೇಶ್ವರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ೧೬ ರಿಂದ ೨೯ ವರ್ಷದೊಳಗಿನ ಶಾಲೆಯಿಂದ ಹೊರಗುಳಿದ ಹಾಗು ಶಿಕ್ಷಣವನ್ನು ಅರ್ಧದಲ್ಲಿಯೇ ಮೊಟಕುಗೊಳಿಸಿರುವ ಹೆಣ್ಣು ಮಕ್ಕಳು ಈ ತರಬೇತಿ ಪಡೆಯಬಹುದಾಗಿದೆ.
    ತರಬೇತಿ ಪೂರ್ಣಗೊಳಿಸಿದವರಿಗೆ ಪ್ರಮಾಣಪತ್ರ ವಿತರಿಸಲಾಗುವುದು. ಇದರಿಂದ ಬ್ಯೂಟಿ ಪಾರ್ಲರ್‌ಗಳಲ್ಲಿ ಮತ್ತು ಐಟಿ ಹಬ್‌ಗಳಲ್ಲಿ ಉದ್ಯೋಗ ಪಡೆಯಲು ಸಾಧ್ಯವಾಗುತ್ತದೆ. ಅಲ್ಲದೆ ಸ್ವಾವಲಂಬಿಗಳಾಗಿ ಬದುಕು ರೂಪಿಸಿಕೊಳ್ಳಲು ಸಹ ಸಹಕಾರಿಯಾಗಲಿದೆ ಎಂದರು.  ಉದ್ಘಾಟಿಸಲಾಯಿತು
    ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ, ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  ಶಾಲೆಯ ಉಪಪ್ರಾಚಾರ್ಯರಾದ ಟಿ.ಎಸ್ ಸುಮನ ಅಧ್ಯಕ್ಷತೆ ವಹಿಸಿದ್ದರು.

ಇಂದಿನ ಯುವ ಜನತೆ ಪದವಿ ಜೊತೆಗೆ ನೈಪುಣ್ಯತೆ ಹಾಗು ಕೌಶಲ್ಯತೆ ಹೊಂದಿರಲಿ : ಡಾ. ಬಿ.ಜಿ ಧನಂಜಯ

ಭದ್ರಾವತಿ ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ ಉದ್ಘಾಟಿಸಿದರು.
    ಭದ್ರಾವತಿ, ಜ. ೯: ಇಂದಿನ ಯುವ ಜನತೆ ಪದವಿ ಜೊತೆಗೆ ನೈಪುಣ್ಯತೆ ಹಾಗು ಕೌಶಲ್ಯತೆ ಹೊಂದಿರಬೇಕು ಎಂದು ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ ಹೇಳಿದರು.
    ಅವರು ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳಿಗೆ ಅಧ್ಯಯನದ ಜೊತೆಗೆ ಉದ್ಯೋಗದ ಬಗ್ಗೆ ಮಾಹಿತಿ ಅಗತ್ಯವಾಗಿದೆ. ಅಲ್ಲದೆ ವಿದ್ಯಾವಂತ ಯುವ ಸಮೂಹಕ್ಕೆ ಆರ್ಥಿಕ ನೆರವಿನ ಅಗತ್ಯವಿದೆ.  ಸ್ವಯಂ ಉದ್ಯೋಗಕ್ಕೆ ಹೆಚ್ಚಿನ ಆದ್ಯತೆ ನೀಡಿ,  ಈ ಮೂಲಕ ಪ್ರಗತಿ ಸಾಧಿಸುವ ನಿಟ್ಟಿನಲ್ಲಿ ಬದ್ಧತೆ ಹಾಗು ಕ್ರಿಯಾಶೀಲತೆ ಬೆಳೆಸಿಕೊಳ್ಳಬೇಕೆಂದರು.
    ಉದ್ಯೋಗ ಅಧಿಕಾರಿ ಮಂಜುನಾಥ್ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾಹಿತಿ ನೀಡಿದರು. ಉಪನ್ಯಾಸಕ ಡಾ. ಬಸವರಾಜ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾಲೇಜಿನ ಬೋಧಕ ಹಾಗು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅವರ ಅಭಿಪ್ರಾಯಗಳನ್ನು ಪಡೆಯಲಾಯಿತು.

ಕಲ್ಯಾಣ ಮಂಟಪ ನಿರ್ಮಾಣ ಕಟ್ಟಡ ಕಾರ್ಮಿಕರಿಗೆ ಪ್ರತಿರಕ್ಷಣಾ ಕಿಟ್ ವಿತರಣೆ

ಭದ್ರಾವತಿ ತರೀಕೆರೆ ರಸ್ತೆಯಲ್ಲಿ ಬೃಹತ್ ಕಲ್ಯಾಣ ಮಂಟಪ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಕಟ್ಟಡ ಕಾರ್ಮಿಕರಿಗೆ ಕರ್ನಾಟಕ ಸ್ಟೇಟ್ ಕನ್‌ಸ್ಟ್ರಕ್ಷನ್ ವರ್ಕರ್ಸ್ ಸೆಂಟ್ರಲ್ ಯೂನಿಯನ್ ವತಿಯಿಂದ ಕಾರ್ಮಿಕ ಇಲಾಖೆವತಿಯಿಂದ ನೀಡಲಾಗುವ ಪ್ರತಿರಕ್ಷಣಾ ಕಿಟ್‌ಗಳನ್ನು ವಿತರಿಸಲಾಯಿತು.  
    ಭದ್ರಾವತಿ, ಜ. ೯: ನಗರದ ತರೀಕೆರೆ ರಸ್ತೆಯಲ್ಲಿ ಬೃಹತ್ ಕಲ್ಯಾಣ ಮಂಟಪ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಕಟ್ಟಡ ಕಾರ್ಮಿಕರಿಗೆ ಕರ್ನಾಟಕ ಸ್ಟೇಟ್ ಕನ್‌ಸ್ಟ್ರಕ್ಷನ್ ವರ್ಕರ್ಸ್ ಸೆಂಟ್ರಲ್ ಯೂನಿಯನ್ ವತಿಯಿಂದ ಕಾರ್ಮಿಕ ಇಲಾಖೆವತಿಯಿಂದ ನೀಡಲಾಗುವ ಪ್ರತಿರಕ್ಷಣಾ ಕಿಟ್‌ಗಳನ್ನು ವಿತರಿಸಲಾಯಿತು.
    ಕಟ್ಟಡ ಕಾರ್ಮಿಕರಿಗೆ ಸರ್ಕಾರದಿಂದ ಸಿಗುವ ಆರೋಗ್ಯ, ಶೈಕ್ಷಣಿಕ ಮತ್ತು ಆರ್ಥಿಕ ಸೌಲಭ್ಯ ಸೇರಿದಂತೆ ವಿವಿಧ ಸೌಲಭ್ಯಗಳ ಕುರಿತು ಸಮಗ್ರ ಮಾಹಿತಿ ನೀಡಲಾಯಿತು. ಕಟ್ಟಡ ಕಾರ್ಮಿಕರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕೆಂದು ಕೋರಲಾಯಿತು.
    ಕಲ್ಯಾಣ ಮಂಟಪ ಮಾಲೀಕರಾದ ಸೈಯದ್ ಹಿಸಾರ್, ಸಿವಿಲ್ ಎಂಜಿನಿಯರ್ ಲಕ್ಷ್ಮಣ್ ಪರುಶುರಾಮ್, ಯೂನಿಯನ್ ತಾಲೂಕು ಅಧ್ಯಕ್ಷ, ಮೇಸ್ತ್ರಿ ಚಂದ್ರಶೇಖರ್, ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್ ಬಾಬು, ತಾಂತ್ರಿಕ ಸಲಹೆಗಾರ ಮನೋಹರ್ ಗೌಡ,  ತಾಲ್ಲೂಕು ಕಾರ್ಯಾಧ್ಯಕ್ಷ ಅಭಿಲಾಷ್, ಉಪಾಧ್ಯಕ್ಷ ನಾಗೇಂದ್ರರೆಡ್ಡಿ, ಸಂಘಟನಾ ಕಾರ್ಯದರ್ಶಿ ಕುಮಾರ್, ತಾಲ್ಲೂಕು ಸಂಚಾಲಕರಾದ ಮಂಜುನಾಥ್, ಸುರೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Saturday, January 8, 2022

ಸೈಬರ್ ಅಪರಾಧ ಕುರಿತು ಶಾಲಾ ಮಕ್ಕಳಿಗೆ ಜಾಗೃತಿ

ಶಿವಮೊಗ್ಗ ಸಿ.ಇ.ಎನ್ ಮತ್ತು ಅಪರಾಧ ಪೊಲೀಸ್ ಠಾಣೆ ವತಿಯಿಂದ ಭದ್ರಾವತಿ ನ್ಯೂಟೌನ್ ಸೇಂಟ್ ಚಾರ್ಲ್ಸ್ ಶಾಲೆಯಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
    ಭದ್ರಾವತಿ, ಜ. ೮: ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧಗಳು ಹೆಚ್ಚಾಗುತ್ತಿದ್ದು, ಶಾಲಾ ಹಂತದಲ್ಲಿಯೇ ಮಕ್ಕಳು ಇದರ ಬಗ್ಗೆ ಜಾಗೃತಿ ಹೊಂದಬೇಕೆಂಬ ಆಶಯದೊಂದಿಗೆ ಶಿವಮೊಗ್ಗ ಸಿ.ಇ.ಎನ್ ಮತ್ತು ಅಪರಾಧ ಪೊಲೀಸ್ ಠಾಣೆ ವತಿಯಿಂದ ನ್ಯೂಟೌನ್ ಸೇಂಟ್ ಚಾರ್ಲ್ಸ್ ಶಾಲೆಯಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
    ಠಾಣೆಯ ಸಿಬ್ಬಂದಿಗಳಾದ ಮೋಹನ್, ನಿರ್ಮಲ ಮತ್ತು ಸೂರ್ಯನಾರಾಯಣ ಮಾತನಾಡಿ, ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಮೂಲಕ ವಂಚಿಸುವ ಅಪರಾಧ ಕೃತ್ಯಗಳ ಬಗ್ಗೆ ವಿವರಿಸುವ ಜೊತೆಗೆ ವಹಿಸಬೇಕಾದ ಮುನ್ನಚ್ಚರಿಕೆ ಕ್ರಮಗಳನ್ನು ವಿವರಿಸಿದರು.
    ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಕೆ.ಟಿ ಗುರುರಾಜ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲರು, ಶಿಕ್ಷಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ನಿಯಮ ಪಾಲಿಸದ ಅಂಗಡಿಮುಂಗಟ್ಟುಗಳ ಮೇಲೆ ತಹಸೀಲ್ದಾರ್ ದಾಳಿ : ಎಚ್ಚರಿಕೆ

ವಾರಾಂತ್ಯ ಕರ್ಪ್ಯೂ ಹಿನ್ನಲೆಯಲ್ಲಿ ತಹಸೀಲ್ದಾರ್ ಆರ್. ಪ್ರದೀಪ್ ನಿಕ್ಕಮ್ ಶನಿವಾರ ರಂಗಪ್ಪ ವೃತ್ತದಲ್ಲಿ ನಿಯಮ ಪಾಲಿಸದ ಅಂಗಡಿಮುಂಗಟ್ಟುಗಳ ಮೇಲೆ ದಾಳಿ ನಡೆಸಿ ಎಚ್ಚರಿಕೆ ನೀಡಿದರು.
    ಭದ್ರಾವತಿ, ಜ. ೮: ವಾರಾಂತ್ಯ ಕರ್ಪ್ಯೂ ಹಿನ್ನಲೆಯಲ್ಲಿ ತಹಸೀಲ್ದಾರ್ ಆರ್. ಪ್ರದೀಪ್ ನಿಕ್ಕಮ್ ಶನಿವಾರ ರಂಗಪ್ಪ ವೃತ್ತದಲ್ಲಿ ನಿಯಮ ಪಾಲಿಸದ ಅಂಗಡಿಮುಂಗಟ್ಟುಗಳ ಮೇಲೆ ದಾಳಿ ನಡೆಸಿ ಎಚ್ಚರಿಕೆ ನೀಡಿದರು.
    ನಗರದ ಪ್ರಮುಖ ಜನಸಂದಣಿ ಸ್ಥಳವಾಗಿರುವ ರಂಗಪ್ಪ ವೃತ್ತದಲ್ಲಿ ಅನಗತ್ಯವಾಗಿ ಸಂಚರಿಸುವ ವಾಹನಗಳು ಹಾಗು ಶಿವಮೊಗ್ಗ-ಭದ್ರಾವತಿ ನಡುವೆ ಸಂಚರಿಸುವ ಟ್ಯಾಕ್ಸಿಗಳ ತಪಾಸಣೆ ನಡೆಸಿ ಮಾಸ್ಕ್ ಧರಿಸದ ಪ್ರಯಾಣಿಕರಿಗೆ ಎಚ್ಚರಿಕೆ ನೀಡಿದರು. ಅಲ್ಲದೆ ಅನಗತ್ಯವಾಗಿ ಸಂಚರಿಸುವವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದರು.


ವಾರಾಂತ್ಯ ಕರ್ಪ್ಯೂ ಹಿನ್ನಲೆಯಲ್ಲಿ ತಹಸೀಲ್ದಾರ್ ಆರ್. ಪ್ರದೀಪ್ ನಿಕ್ಕಮ್ ಶನಿವಾರ ರಂಗಪ್ಪ ವೃತ್ತದಲ್ಲಿ ಶಿವಮೊಗ್ಗ-ಭದ್ರಾವತಿ ನಡುವೆ ಸಂಚರಿಸುವ ಟ್ಯಾಕ್ಸಿಗಳ ತಪಾಸಣೆ ನಡೆಸಿ ಮಾಸ್ಕ್ ಧರಿಸದ ಪ್ರಯಾಣಿಕರಿಗೆ ಎಚ್ಚರಿಕೆ ನೀಡಿದರು.


ಭದ್ರಾವತಿಯಲ್ಲಿ ವಾರಾಂತ್ಯ ಕರ್ಪ್ಯೂಗೆ ಪೂರಕ ಸ್ಪಂದನೆ

ಭದ್ರಾವತಿ ಪ್ರಮುಖ ವಾಣಿಜ್ಯ ರಸ್ತೆಯಾಗಿರುವ ಬಿ.ಎಚ್ ರಸ್ತೆಯಲ್ಲಿ ಶನಿವಾರ ವಾರಾಂತ್ಯ ಕರ್ಪ್ಯೂ ಹಿನ್ನಲೆಯಲ್ಲಿ ಅಂಗಡಿಮುಂಗಟ್ಟು ಬಂದ್ ಮಾಡಿರುವುದು.
    ಭದ್ರಾವತಿ, ಜ. ೮: ಕೋವಿಡ್-೧೯ ಸೋಂಕು ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ವಾರಾಂತ್ಯ ಕರ್ಪ್ಯೂಗೆ ಶನಿವಾರ ನಗರದಲ್ಲಿ ಪೂರಕ ಸ್ಪಂದನೆ ವ್ಯಕ್ತವಾಗಿದೆ.
    ನಗರದ ಬಹುತೇಕ ವಾಣಿಜ್ಯ ರಸ್ತೆಗಳಲ್ಲಿ ಅಂಗಡಿಮುಂಗಟ್ಟುಗಳು ಮುಚ್ಚಲ್ಪಟ್ಟಿದ್ದವು. ದಿನ ಬಳಕೆ ಅಗತ್ಯ ವಸ್ತುಗಳಾದ ದಿನಸಿ ಸಾಮಗ್ರಿ, ಮಾಂಸ, ಹಣ್ಣು-ತರಕಾರಿ, ಹಾಲು, ಔಷಧ, ಗೊಬ್ಬರ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಹೋಟೆಲ್ ಹಾಗು ರೆಸ್ಟೋರೆಂಟ್‌ಗಳಲ್ಲಿ ಕೇವಲ ಪಾರ್ಸಲ್‌ಗೆ ಮಾತ್ರ ಅವಕಾಶ ಕಲ್ಪಿಸಿಕೊಡಲಾಗಿತ್ತು.  ಪ್ರತಿದಿನ ಜನಸಂದಣಿಯಿಂದ ಕೂಡಿರುತ್ತಿದ್ದ ನಗರದ ಪ್ರಮುಖ ಮಾರುಕಟ್ಟೆಗಳು ಜನರಿಲ್ಲದೆ ಬಿಕೋ ಎನ್ನುತ್ತಿದ್ದವು.
    ನಗರದ ಪ್ರಮುಖ ವಾಣಿಜ್ಯ ರಸ್ತೆಗಳಾದ ಬಿ.ಎಚ್ ರಸ್ತೆ, ಹೊಸ ಸೇತುವೆ ರಸ್ತೆ, ಸಿ.ಎನ್ ರಸ್ತೆ, ತರೀಕೆರೆ ರಸ್ತೆ, ಚಿನ್ನಾಬೆಳ್ಳಿ ರಸ್ತೆ ಹಾಗು ಹೊಸಮನೆ ಮುಖ್ಯ ರಸ್ತೆ ಮತ್ತು ತಾಲೂಕು ಕಛೇರಿ ರಸ್ತೆಗಳಲ್ಲಿ ಜನರ ಸಂಚಾರ ವಿರಳವಾಗಿತ್ತು. ಕೆಎಸ್‌ಆರ್‌ಟಿಸಿ ಹಾಗು ಖಾಸಗಿ ಬಸ್‌ಗಳು ಎಂದಿನಂತೆ ಸಂಚರಿಸಿದವು. ಬಸ್‌ಗಳ ಸಂಖ್ಯೆ ಕಡಿತಗೊಳಿಸಿದ್ದರೂ ಸಹ ಪ್ರಯಾಣಿಕರಿಲ್ಲದಿರುವುದು ಕಂಡು ಬಂದಿತು.
    ಉಳಿದಂತೆ ಶಾಲಾ-ಕಾಲೇಜುಗಳು, ಬಹುತೇಕ ಸರ್ಕಾರಿ ಕಛೇರಿಗಳು ರಜೆ ಘೋಷಿಸಿದ್ದವು. ತಾಲೂಕು ಆಡಳಿತ ಸೌಧ, ನಗರಸಭೆ ಕಛೇರಿ, ತಾಲೂಕು ಪಂಚಾಯಿತಿ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಬಳಿ ಜನರಿಲ್ಲದೆ ಬಿಕೋ ಎನ್ನುತ್ತಿದ್ದವು. ಪೆಟ್ರೋಲ್ ಬಂಕ್‌ಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು. ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಮತ್ತು ನಗರಸಭೆ, ಪೊಲೀಸ್ ಹಾಗು ಆರೋಗ್ಯ ಇಲಾಖೆ ಕರ್ಪ್ಯೂ ಹಿನ್ನಲೆಯಲ್ಲಿ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದವು.


ಪ್ರತಿದಿನ ಜನಸಂದಣಿಯಿಂದ ಕೂಡಿರುತ್ತಿದ್ದ ಭದ್ರಾವತಿ ತಾಲೂಕು ಕಛೇರಿ ರಸ್ತೆ ಶನಿವಾರ ವಾರಾಂತ್ಯ ಕರ್ಪ್ಯೂ ಹಿನ್ನಲೆಯಲ್ಲಿ ಜನರಲ್ಲದೆ ಬಿಕೋ ಎನ್ನುತ್ತಿರುವುದು.


Friday, January 7, 2022

ಸಾಮಿಲ್‌ನಲ್ಲಿ ಅಗ್ನಿ ಅವಘಡ : ಹಾನಿಗೊಳಗಾದ ಮಳಿಗೆ, ಮನೆಗಳ ಮಾಲೀಕರಿಗೆ ಪರಿಹಾರದ ಚೆಕ್ ವಿತರಣೆ

ಭದ್ರಾವತಿ ಹೊಸಸೇತುವೆ ರಸ್ತೆಯಲ್ಲಿರುವ ಶ್ರೀ ಮಂಜುನಾಥಸ್ವಾಮಿ ಸಾಮಿಲ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಹಾನಿಯಾದ ವಾಣಿಜ್ಯ ಮಳಿಗೆಗಳ ಹಾಗು ಮನೆಗಳ ಮಾಲೀಕರಿಗೆ ಶುಕ್ರವಾರ ಶಾಸಕ ಬಿ.ಕೆ ಸಂಗಮೇಶ್ವರ್ ನೇತೃತ್ವದಲ್ಲಿ ಸಾಮಿಲ್ ಮಾಲೀಕ ನಾಗರಾಜ್ ಪರಿಹಾರದ ಚೆಕ್ ವಿತರಿಸಿದರು.
    ಭದ್ರಾವತಿ, ಜ. ೭: ನಗರದ ಹೊಸಸೇತುವೆ ರಸ್ತೆಯಲ್ಲಿರುವ ಶ್ರೀ ಮಂಜುನಾಥಸ್ವಾಮಿ ಸಾಮಿಲ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಹಾನಿಯಾದ ವಾಣಿಜ್ಯ ಮಳಿಗೆಗಳ ಹಾಗು ಮನೆಗಳ ಮಾಲೀಕರಿಗೆ ಶುಕ್ರವಾರ ಶಾಸಕ ಬಿ.ಕೆ ಸಂಗಮೇಶ್ವರ್ ನೇತೃತ್ವದಲ್ಲಿ ಸಾಮಿಲ್ ಮಾಲೀಕ ನಾಗರಾಜ್ ಪರಿಹಾರದ ಚೆಕ್ ವಿತರಿಸಿದರು.
    ಸಾಮಿಲ್‌ನಲ್ಲಿ ಬುಧವಾರ ರಾತ್ರಿ ಬೃಹತ್ ಪ್ರಮಾಣದ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಒಟ್ಟು ೫ ಮಳಿಗೆಗಳು ಹಾಗು ೩ ಮನೆಗಳು ಹಾನಿಯಾಗಿದ್ದವು. ಈ ಪೈಕಿ ಜಿ.ಎಸ್ ಆಟೋ ಮೊಬೈಲ್ಸ್ ಮತ್ತು  ಸ್ಕಂದ ಸ್ಯಾನಿಟರ್ ಮಳಿಗೆಗಳು  ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದ್ದವು.  ಈ ಎರಡು ಮಳಿಗೆಗಳ ಮಾಲೀಕರಿಗೆ ತಲಾ ರು. ೧೦ ಲಕ್ಷ, ಉಳಿದಂತೆ ಫ್ಲೆಕ್ಸ್ ಅಂಗಡಿ ಮಾಲೀಕರಿಗೆ ರು. ೧೦ ಲಕ್ಷ, ಪ್ಲೈವುಡ್ ಮತ್ತು ಬ್ಯಾಟರಿ ಅಂಗಡಿ ಮಾಲೀಕರಿಗೆ ತಲಾ ರು. ೩ ಲಕ್ಷ, ಕಟ್ಟಡ ಹಾನಿಯಾದ ಹಿನ್ನಲೆಯಲ್ಲಿ ಮಾಲೀಕರಿಗೆ ರು. ೨ ಲಕ್ಷ, ಒಂದು ಮನೆ ಮಾಲೀಕರಿಗೆ ರು. ೩ ಲಕ್ಷ, ಉಳಿದ ೨ ಮನೆಗಳ ಪೈಕಿ ಒಂದು ಮನೆ ಮಾಲೀಕರಲ್ಲಿ ರು.೨ ಲಕ್ಷ, ಇನ್ನೊಂದು ಮಾಲೀಕರಿಗೆ ರು. ೧ ಲಕ್ಷ ಪರಿಹಾರದ ಚೆಕ್ ವಿತರಿಸಲಾಯಿತು.
    ಇದಕ್ಕೂ ಮೊದಲು ಶಾಸಕರ ನೇತೃತ್ವದಲ್ಲಿ ಪರಿಹಾರ ನೀಡುವ ಸಂಬಂಧ ಸಾಮಿಲ್ ಮಾಲೀಕರು ಹಾಗು ಹಾನಿಗೊಳಗಾದ ಮಳಿಗೆಗಳ ಹಾಗು ಮನೆಗಳ ಮಾಲೀಕರೊಂದಿಗೆ ಮಾತುಕತೆ ನಡೆಸಲಾಯಿತು.
    ತಹಸೀಲ್ದಾರ್ ಆರ್. ಪ್ರದೀಪ್ ನಿಕ್ಕಮ್, ಮುಖಂಡರಾದ ಬಾಲಕೃಷ್ಣ, ಮೆಸ್ಕಾಂ ನಿವೃತ್ತ ಇಂಜಿನಿಯರ್ ಕೃಷ್ಣಮೂರ್ತಿ, ನಗರಸಭಾ ಸದಸ್ಯ ಆರ್. ಶ್ರೇಯಸ್(ಚಿಟ್ಟೆ), ಕಟ್ಟಡ ಕಾರ್ಮಿಕರ ಸಂಘದ ಕಾರ್ಯಾಧ್ಯಕ್ಷ ಅಭಿಲಾಷ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.