Wednesday, February 9, 2022

ಹಲವು ವಿವಾದಗಳಿಗೆ ಎಡೆಮಾಡಿಕೊಟ್ಟ ಕುವೆಂಪು ವಿ.ವಿ ನಡೆ

ನ್ಯಾಯಲಯದಲ್ಲಿ ಪ್ರಕರಣ ವಿಚಾರಣೆಯಲ್ಲಿರುವಾಗ ಫಲಿತಾಂಶ ಪ್ರಕಟ

ಕುವೆಂಪು ವಿಶ್ವ ವಿದ್ಯಾನಿಲಯ ಪರೀಕ್ಷಾಂಗ ವಿಭಾಗ

    * ಅನಂತಕುಮಾರ್
    ಭದ್ರಾವತಿ, ಫೆ. ೯: ಈಗಾಲೇ ನಕಲಿ ಅಂಕಪಟ್ಟಿ ನೀಡಿಕೆ, ಸುಳ್ಳು ಜಾತಿ ಪ್ರಮಾಣ ನೀಡಿ ವಂಚನೆ ಸೇರಿದಂತೆ ಹಲವು ಆರೋಪಗಳನ್ನು ಹೊಂದಿರುವ ಕುವೆಂಪು ವಿಶ್ವವಿದ್ಯಾನಿಲಯ ಇದೀಗ ಮತ್ತೊಂದು ಆರೋಪಕ್ಕೆ ಗುರಿಯಾಗಿದೆ. ೨೦೧೯-೨೦ನೇ ಸಾಲಿನಲ್ಲಿ ದೂರ ಶಿಕ್ಷಣದ ವಿವಿಧ ಸ್ನಾತಕ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಿಗೆ ಪ್ರವೇಶಾತಿ ಪಡೆದಿರುವ ಕೆಲವು ಕೋರ್ಸ್‌ಗಳ ವಿದ್ಯಾರ್ಥಿಗಳನ್ನು ಪರೀಕ್ಷೆ ನಡೆಸದೆ ಫಲಿತಾಂಶ ಪ್ರಕಟಿಸುವ ಮೂಲಕ ವಿವಾದಕ್ಕೆ ಕಾರಣವಾಗಿರುವುದು ಬೆಳಕಿಗೆ ಬಂದಿದೆ.
    ಫಲಿತಾಂಶ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದು, ಈ ಹಂತದಲ್ಲಿ ತೀರ್ಪು ಬರುವ ಮೊದಲೇ ವಿಶ್ವ ವಿದ್ಯಾನಿಲಯ ಯು.ಜಿ.ಸಿ ಹಾಗು ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ತರಾತುರಿಯಲ್ಲಿ ಫಲಿತಾಂಶ ಪ್ರಕಟಿಸುವ ಮೂಲಕ ಗೊಂದಲಕ್ಕೆ ಎಡೆಮಾಡಿಕೊಟ್ಟಿದೆ. ಕೇವಲ ಹೋಮ್ ಅಸೈನ್‌ಮೆಂಟ್ ಅಂಕಗಳ ಆಧಾರದ ಮೇಲೆ ಫಲಿತಾಂಶ ಪ್ರಕಟಿಸಿದ್ದು, ಇದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಅಲ್ಲದೆ ಅವ್ಯವಹಾರಗಳು ನಡೆದಿರುವ ಬಗ್ಗೆ ಸಾಕಷ್ಟು ಆರೋಪಗಳು ಕೇಳಿ ಬರುತ್ತಿವೆ.
    ಕೋವಿಡ್-೧೯ ಎದುರಾದ ಹಿನ್ನಲೆಯಲ್ಲಿ ೨೦೧೯-೨೦ನೇ ಸಾಲಿನಲ್ಲಿ ವಿವಿಧ ಕೋರ್ಸ್‌ಗಳಲ್ಲಿ ಪ್ರವೇಶಾತಿ ಪಡೆದಿರುವ ಸುಮಾರು ೧೭ ಸಾವಿರ ವಿದ್ಯಾರ್ಥಿಗಳಿದ್ದು, ಈ ಪೈಕಿ ಕೆಲವು ಸ್ನಾತಕ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಿಗೆ  ಪರೀಕ್ಷೆಗಳನ್ನು ನಡೆಸಿ ಫಲಿತಾಂಶ ಪ್ರಕಟಿಸಲಾಗಿದೆ. ಉಳಿದ ಕೋರ್ಸ್‌ಗಳಿಗೆ ಪರೀಕ್ಷೆ ನಡೆಸದೆ ಫಲಿತಾಂಶ ಪ್ರಕಟಿಸಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ.
    ದೂರ ಶಿಕ್ಷಣ ಸ್ಥಗಿತ :
    ರಾಜ್ಯದ ಬಹುತೇಕ ವಿಶ್ವ ವಿದ್ಯಾನಿಲಯಗಳಲ್ಲಿ ದೂರ ಶಿಕ್ಷಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಅವ್ಯವಹಾರದ ಆರೋಪಗಳು ಕೇಳಿ ಬಂದ ಹಿನ್ನಲೆಯಲ್ಲಿ ಸರ್ಕಾರ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಹೊರತುಪಡಿಸಿ ಉಳಿದ ಎಲ್ಲಾ ವಿಶ್ವ ವಿದ್ಯಾನಿಲಯಗಳಲ್ಲಿ ದೂರ ಶಿಕ್ಷಣ ಸ್ಥಗಿತಗೊಳಿಸಿ ಆದೇಶ ಹೊರಡಿಸಿತ್ತು. ಈ ಹಿನ್ನಲೆಯಲ್ಲಿ ಕುವೆಂಪು ವಿ.ವಿಯಲ್ಲಿ ೨೦೧೯-೨೦ನೇ ಸಾಲಿನ ಪ್ರವೇಶಾತಿಯೇ ಕೊನೆಯದಾಗಿದೆ. ಈ ನಡುವೆ ಇದೀಗ ಪರೀಕ್ಷೆ ನಡೆಸದೆ ಫಲಿತಾಂಶ ಪ್ರಕಟಿಸಿ ವಿವಾದಕ್ಕೆ ಒಳಗಾಗಿರುವುದು ವಿಪರ್ಯಾಸದ ಸಂಗತಿಯಾಗಿದೆ.
    ಫಲಿತಾಂಶ ವಿದ್ಯಾರ್ಥಿಗಳಿಗೆ ಮಾರಕ :
    ಪರೀಕ್ಷೆ ನಡೆಸದೆ ಫಲಿತಾಂಶ ಪ್ರಕಟಿಸಿರುವ ಕಾರಣ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ತೊಂದರೆ ಅನುಭವಿಸುವ ಸಾಧ್ಯತೆ ಹೆಚ್ಚಾಗಿದೆ. ಇಂತಹ ಪದವಿಗಳನ್ನು ಯು.ಜಿ.ಸಿ ಅಮಾನ್ಯಗೊಳಿಸುವ ಸಾಧ್ಯತೆ ಇದ್ದು, ಅಲ್ಲದೆ ಈಗಾಗಲೇ ಕೆಲವು ಕೋರ್ಸ್‌ಗಳಲ್ಲಿ ಪರೀಕ್ಷೆ ಬರೆದು ಅನುತ್ತೀರ್ಣಗೊಂಡಿರುವ ವಿದ್ಯಾರ್ಥಿಗಳು ಈ ಫಲಿತಾಂಶದ ವಿರುದ್ಧ ನ್ಯಾಯಾಲಯದಲ್ಲಿ ಹೋರಾಟಕ್ಕೆ ಮುಂದಾಗುವ ಸಾಧ್ಯತೆ ಇದೆ. ಒಟ್ಟಾರೆ ಈ ಫಲಿತಾಂಶ ವಿದ್ಯಾರ್ಥಿಗಳಿಗೆ ಮಾರಕ ಎಂದರೆ ತಪ್ಪಾಗಲಾರದು.
    ಸಿಂಡಿಕೇಟ್ ಸದಸ್ಯರ ನಿರ್ಣಯಗಳಿಗೆ ಬೆಲೆ ಇಲ್ಲ :
    ೨೨ ಸದಸ್ಯರನ್ನು ಒಳಗೊಂಡಿರುವ ಸಿಂಡಿಕೇಟ್ ಸಭೆಯ ನಿರ್ಣಯಗಳಿಗೆ ಇತ್ತೀಚೆಗೆ ವಿಶ್ವವಿದ್ಯಾನಿಲಯ ಬೆಲೆ ನೀಡುತ್ತಿಲ್ಲ. ಸಿಂಡಿಕೇಟ್ ಸದಸ್ಯರು ಕಳೆದ ವರ್ಷ ನವೆಂಬರ್ ೨೧ರಂದು ಸಭೆ ನಡೆಸಿ ದೂರ ಶಿಕ್ಷಣ ಕೋರ್ಸ್‌ಗಳಿಗೆ ಯಾವುದೇ ಕಾರಣಕ್ಕೂ ಪರೀಕ್ಷೆ ನಡೆಸದೆ ಫಲಿತಾಂಶ ಪ್ರಕಟಿಸದಿರುವಂತೆ ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ ಇದೀಗ ಈ ನಿರ್ಣಯಕ್ಕೆ ವಿರುದ್ಧವಾಗಿ ವಿಶ್ವವಿದ್ಯಾನಿಲಯ ನಡೆದುಕೊಂಡಿದೆ. ಇದೆ ರೀತಿ ಮತ್ತೊಂದು ಪ್ರಕರಣದಲ್ಲಿ ಡಾ. ಜಗನ್ನಾಥಡಾಂಗೆ ಅವರನ್ನು ಡೀನ್ ಹುದ್ದೆಗೆ ನಾಮನಿರ್ದೇಶನಗೊಳಿಸುವ ವಿಚಾರದಲ್ಲೂ ಸಿಂಡಿಕೇಟ್ ಸದಸ್ಯರ ನಿರ್ಣಯದ ವಿರುದ್ಧ ನಡೆದುಕೊಂಡಿದೆ ಎನ್ನುವ ಆರೋಪಗಳು ಕೇಳಿ ಬರುತ್ತಿವೆ.


ಜಿ. ಧರ್ಮಪ್ರಸಾದ್, ಸಿಂಡಿಕೇಟ್ ಸದಸ್ಯರು.


ವಿಶ್ವ ವಿದ್ಯಾನಿಲಯಕ್ಕೆ ಉಂಟಾಗಿರುವ ಆರ್ಥಿಕ ನಷ್ಟಕ್ಕೆ ಸಂಬಂಧಿಸಿದಂತೆ ದೂರ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕರನ್ನು ತಕ್ಷಣ ಜಾರಿಗೆ ಬರುವಂತೆ ಹುದ್ದೆಯಿಂದ ಬಿಡುಗಡೆಗೊಳಿಸಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಮತ್ತು ಪರೀಕ್ಷೆ ನಡೆಸದೆ ನಿಯಮಬಾಹಿರ ಆದೇಶ ಹೊರಡಿಸಲು ಪರೀಕ್ಷಾಂಗ ಕುಲಸಚಿವರಿಗೆ ಆದೇಶ ನೀಡಿರುವ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಹಾಗು ಪ್ರಸ್ತುತ ನಡೆದಿರುವ ಪ್ರಕ್ರಿಯೆಗಳನ್ನು ತನಿಖೆಗೆ ಒಳಪಡಿಸುವಂತೆ ಬುಧವಾರ ಕುಲಪತಿಗಳಿಗೆ ಮನವಿ ಸಲ್ಲಿಸಲಾಗಿದೆ.
                                                                     - ಜಿ. ಧಮಪ್ರಸಾದ್, ಸಿಂಡಿಕೇಟ್ ಸದಸ್ಯರು, ಕುವೆಂಪು ವಿ.ವಿ


    ವಿಶ್ವ ವಿದ್ಯಾಲಯಕ್ಕೆ ಕೋಟ್ಯಾಂತರ ರು. ನಷ್ಟ :
    ಈ ನಡುವೆ ದೂರ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕರು ದೂರ ಶಿಕ್ಷಣ ಕೇಂದ್ರಗಳಿಂದ ಇನ್ನೂ ವಿಶ್ವ ವಿದ್ಯಾಲಯಕ್ಕೆ ಬರಬೇಕಾಗಿರುವ ಕೋಟ್ಯಾಂತರ ರು. ಹಣ ವಸೂಲಿ ಮಾಡದೆ, ವಿಶ್ವ ವಿದ್ಯಾಲಯಕ್ಕೆ ಹೆಚ್ಚಿನ ಆರ್ಥಿಕ ನಷ್ಟ ಉಂಟು ಮಾಡಿದ್ದು, ಜೊತೆಗೆ ಪ್ರವೇಶಾತಿಗೆ ಸಂಬಂಧಿಸಿದಂತೆ ಹಲವು ಗೊಂದಲಗಳನ್ನು ಸೃಷ್ಟಿಸಿದ್ದಾರೆಂಬ ಆರೋಪಗಳು ಕೇಳಿ ಬರುತ್ತಿವೆ.
    ಒಟ್ಟಾರೆ ಕುವೆಂಪು ವಿ.ವಿ ಇದೀಗ ಮತ್ತೊಂದು ಆರೋಪದ ಸುಳಿಯಲ್ಲಿ ಸಿಕ್ಕಿ ಬಿದ್ದಿದ್ದು, ವಿಶ್ವ ವಿದ್ಯಾಲಯ ಕೈಗೊಳ್ಳುವ ಮುಂದಿನ ನಿರ್ಧಾರಗಳನ್ನು ಕಾದು ನೋಡಬೇಕಾಗಿದೆ.


ಆನಂದ ಮಾರ್ಗ ಶಾಲೆಗೆ ಬಿಸಿಯೂಟ ತಯಾರಿಕೆಗೆ ಪರಿಕರ ವಿತರಣೆ

ಭದ್ರಾವತಿ ಹೊಸಮನೆ ಆನಂದ ಮಾರ್ಗ ಶಾಲೆಗೆ ಮಕ್ಕಳ ಬಿಸಿಯೂಟ ತಯಾರಿಕೆಗೆ ಅಗತ್ಯವಿರುವ ಪರಿಕರಗಳನ್ನು    ಲಯನ್ಸ್ ಮತ್ತು ಲಿಯೋ ಕ್ಲಬ್ ವತಿಯಿಂದ ವಿತರಿಸಲಾಯಿತು.
    ಭದ್ರಾವತಿ, ಫೆ. ೯: ನಗರದ ಹೊಸಮನೆ ಆನಂದ ಮಾರ್ಗ ಶಾಲೆಗೆ ಮಕ್ಕಳ ಬಿಸಿಯೂಟ ತಯಾರಿಕೆಗೆ ಅಗತ್ಯವಿರುವ ಪರಿಕರಗಳನ್ನು    ಲಯನ್ಸ್ ಮತ್ತು ಲಿಯೋ ಕ್ಲಬ್ ವತಿಯಿಂದ ವಿತರಿಸಲಾಯಿತು.
    ನಗರದಲ್ಲಿ ಹಲವಾರು ವರ್ಷಗಳಿಂದ ಲಯನ್ಸ್ ಮತ್ತು ಲಿಯೋ ಕ್ಲಬ್‌ಗಳು ನಿರಂತರವಾಗಿ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿವೆ. ಈ ಬಾರಿ ಆನಂದ ಮಾರ್ಗ ಶಾಲೆಯನ್ನು ಗುರುತಿಸಿ ಮಕ್ಕಳ ಬಿಸಿಯೂಟ ತಯಾರಿಕೆಗೆ ಅಗತ್ಯವಿರುವ ಪರಿಕರಗಳನ್ನು ವಿತರಿಸುವ ಮೂಲಕ ಗಮನ ಸೆಳೆದಿವೆ.
    ಜಿಲ್ಲಾ ಗೌರ್‍ನರ್ ಎಚ್. ವಿಶ್ವನಾಥಶೆಟ್ಟಿ, ಮಾಜಿ ಗೌರ್‍ನರ್ ಬಿ. ದಿವಾಕರಶೆಟ್ಟಿ, ಲಯನ್ಸ್ ಕ್ಲಬ್ ಅಧ್ಯಕ್ಷ ಬಿ.ಎಸ್ ಮಹೇಶ್‌ಕುಮಾರ್, ಕಾರ್ಯದರ್ಶಿ ಶಂಕರ್ ಮೂರ್ತಿ, ಖಜಾಂಚಿ ವಿ. ವಿನೋದ್ ಗಿರಿ, ವಲಯ ಅಧ್ಯಕ್ಷ ಹೆಬ್ಬಂಡಿ ನಾಗರಾಜ್, ಮಾಜಿ ಅಧ್ಯಕ್ಷ ಎಲ್. ದೇವರಾಜ್, ದಾನಿಗಳಾದ ಶಿವರುದ್ರಪ್ಪ, ರಾಜೇಶ್, ಸುಶಿತ್‌ಶೆಟ್ಟಿ, ಸುಂದರ್ ಬಾಬು ಹಾಗು ಲಿಯೋ ಕ್ಲಬ್ ಅಧ್ಯಕ್ಷರು, ಪದಾಧಿಕಾರಿಗಳು, ಆನಂದ ಮಾರ್ಗ ಶಾಲೆಯ ಮಾತಾಜಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tuesday, February 8, 2022

ಹಿಜಾಬ್, ಕೇಸರಿ ವಸ್ತ್ರ ವಿವಾದ : ಕಾಲೇಜು ಆಡಳಿತ ಮಂಡಳಿಯಿಂದ ಎಚ್ಚರಿಕೆ ನಡೆ

    ಭದ್ರಾವತಿ, ಫೆ. ೮: ನಗರದ ನ್ಯೂಟೌನ್ ವಿಶ್ವೇಶ್ವರಾಯ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲೂ ಕೆಲವು ದಿನಗಳಿಂದ ಬುಗಿಲೆದ್ದಿದ್ದ ಹಿಜಾಬ್ ಮತ್ತು ಕೇಸರಿ ವಸ್ತ್ರ ವಿವಾದ ಮಂಗಳವಾರ ಕಾಲೇಜು ಆಡಳಿತ ಮಂಡಳಿ ವಹಿಸಿದ ಎಚ್ಚರಿಕೆ ಕ್ರಮಗಳಿಂದಾಗಿ ಸ್ವಲ್ಪ ಮಟ್ಟಿಗೆ ನಿಯಂತ್ರಣಕ್ಕೆ ಬಂದಿದೆ ಎನ್ನಲಾಗಿದೆ.
    ಸೋಮವಾರ ಮುಸ್ಲಿಂ ವಿದ್ಯಾರ್ಥಿಗಳು ಹಿಜಾಬ್ ಸಂಬಂಧ ಸರ್ಕಾರದ ಆದೇಶದ ವಿರುದ್ಧ ಕಾಲೇಜು ಮುಂಭಾಗ ಪ್ರತಿಭಟನೆ ನಡೆಸಿ ಹಿಜಾಬ್ ಧರಿಸಿ ತರಗತಿಗೆ ಹೋಗಲು ಅವಕಾಶ ನೀಡುವಂತೆ ಆಗ್ರಹಿಸಿ ಸರ್ಕಾರಕ್ಕೆ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ಮನವಿ ಸಲ್ಲಿಸಿದ್ದರು.
    ಮಂಗಳವಾರ ರಾಜ್ಯದ ಹಲವೆಡೆ ಹಿಜಾಬ್ ಮತ್ತು ಕೇಸರಿ ವಸ್ತ್ರ ಸಂಬಂಧ ಅಹಿತಕರ ಘಟನೆಗಳು ನಡೆದಿವೆ. ಆದರೆ ಈ ಕಾಲೇಜಿನಲ್ಲಿ ಪ್ರತಿಭಟನೆಗೆ ಅವಕಾಶ ನೀಡದ ಆಡಳಿತ ಮಂಡಳಿ ಹಿಜಾಬ್ ಮತ್ತು ಕೇಸರಿ ವಸ್ತ್ರ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳನ್ನು ತರಗತಿಗೆ ಹಾಜರಾಗಲು ಅವಕಾಶ ಕಲ್ಪಿಸಿಕೊಡಲಾಗಿದೆ. ಇದರಿಂದ ಮುಂದೆ ನಡೆಯಬಹುದಾದ ಅನಾಹುತ ತಪ್ಪಿದಂತಾಗಿದೆ. ಇದೀಗ ಸರ್ಕಾರ ೩ ದಿನಗಳ ಕಾಲ ರಜೆ ಘೋಷಿಸಿರುವ ಹಿನ್ನಲೆಯಲ್ಲಿ ಸದ್ಯಕ್ಕೆ ಉಂಟಾಗಿರುವ ಸಮಸ್ಯೆಯಿಂದ ಆಡಳಿತ ಮಂಡಳಿ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

ಆರೋಗ್ಯ ರಕ್ಷಣೆಗೆ ಯೋಗಾಸನ, ಸೂರ್ಯ ನಮಸ್ಕಾರ ಸಹಕಾರಿ : ಡಾ. ಸೆಲ್ವರಾಜ್

ಭದ್ರಾವತಿಯಲ್ಲಿ ಶುಗರ್ ಟೌನ್ ಲಯನ್ಸ್ ಕ್ಲಬ್, ಲಯನ್ಸ್ ಯೋಗ ಸಂಸ್ಥೆ ಮತ್ತು ಪತಂಜಲಿ ಯೋಗ ಸಮಿತಿ ವತಿಯಿಂದ ನ್ಯೂಟೌನ್ ಲಯನ್ಸ್ ಕಣ್ಣಿನ ಆಸ್ಪತ್ರೆ ಸಭಾಂಗಣದಲ್ಲಿ ರಥಸಪ್ತಮಿ ಅಂಗವಾಗಿ  ೧೦೮ ಸೂರ್ಯ ನಮಸ್ಕಾರ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
    ಭದ್ರಾವತಿ, ಫೆ. ೮: ಯೋಗಾಸನ ಮತ್ತು ಸೂರ್ಯ ನಮಸ್ಕಾರ ಅವುಗಳದ್ದೇ ಆದ ವೈದ್ಯಕೀಯ ಹಿನ್ನಲೆ ಹೊಂದಿವೆ ಎಂದು ವೈದ್ಯ ಡಾ. ಸೆಲ್ವರಾಜ್ ಹೇಳಿದರು.
    ಅವರು ಶುಗರ್ ಟೌನ್ ಲಯನ್ಸ್ ಕ್ಲಬ್, ಲಯನ್ಸ್ ಯೋಗ ಸಂಸ್ಥೆ ಮತ್ತು ಪತಂಜಲಿ ಯೋಗ ಸಮಿತಿ ವತಿಯಿಂದ ನ್ಯೂಟೌನ್ ಲಯನ್ಸ್ ಕಣ್ಣಿನ ಆಸ್ಪತ್ರೆ ಸಭಾಂಗಣದಲ್ಲಿ ರಥಸಪ್ತಮಿ ಅಂಗವಾಗಿ ಏರ್ಪಡಿಸಲಾಗಿದ್ದ ೧೦೮ ಸೂರ್ಯ ನಮಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.  
    ನಮ್ಮ ಆರೋಗ್ಯ ರಕ್ಷಣೆಗೆ ಯೋಗಾಸನ ಮತ್ತು ಸೂರ್ಯ ನಮಸ್ಕಾರ ಸಹಕಾರಿಯಾಗಿವೆ. ಯೋಗಾಸನ ಮಾಡುವ ಹವ್ಯಾಸ ಬೆಳೆಸಿಕೊಂಡಾಗ ಮಾತ್ರ ಅದನ್ನು ನಿರಂತರವಾಗಿ ಮಾಡಬೇಕು ಎನ್ನುವ ಮನೋಭಾವ ಬೆಳೆಯುವ ಜೊತೆಗೆ ಸೋಮಾರಿತನ ದೂರವಾಗುತ್ತದೆ. ಯೋಗಾಸನ ಮತ್ತು ಸೂರ್ಯ ನಮಸ್ಕಾರಕ್ಕೆ ವಯಸ್ಸಿನ ಮಿತಿ ಇಲ್ಲ. ಎಲ್ಲರೂ ಇದರಲ್ಲಿ ತೊಡಗಿಸಿಕೊಳ್ಳಬಹುದಾಗಿದ್ದು,  ಯಾವ ವ್ಯಕ್ತಿ ನಿರಂತರ ಚಟುವಟಿಕೆಯಲ್ಲಿ ಇರುತ್ತಾನೋ ಆತನಿಗೆ ಮಾತ್ರ ಎಲ್ಲಾ ರೀತಿಯ ಕಾರ್ಯಗಳನ್ನು ಮಾಡಲು ಸಮಯ ಇರುತ್ತದೆ. ಆದರೆ ಬೇರೆಯವರಿಗೆ ಸಮಯ ಇಲ್ಲ ಎನ್ನುವುದು ಕೇವಲ ನೆಪ ಮಾತ್ರ ಎಂದರು.  
    ನಿತ್ಯಾನಂದ ಪೈ ಅಧ್ಯಕ್ಷತೆ ವಹಿಸಿದ್ದರು. ಅನ್ನಪೂರ್ಣ ಸತೀಶ್, ಸಂಧ್ಯಾ ಸೆಲ್ವರಾಜ್, ಜಯಮಾಲ ಪೈ, ಮಲ್ಲಿಕಾರ್ಜುನ್, ತಮ್ಮೇಗೌಡ, ಯೋಗೀಶ್, ಸತ್ಯಣ್ಣ. ಮಹೇಶ್, ಪ್ರದೀಪ್, ಲಿಂಗೋಜಿ, ರಶ್ಮಿ, ಲತಾ ಪಿ ಮೋರೆ, ಸಾವಿತ್ರಿ, ಸುಧಾ, ಕೃಷ್ಣಮೂರ್ತಿ ಹಾಗು ಲಯನ್ಸ್ ಮತ್ತು  ಪತಂಜಲಿ ಯೋಗ ಸಮಿತಿ ಸದಸ್ಯರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗಕ್ಕೆ ನೂತನ ಪದಾಧಿಕಾರಿಗಳ ನೇಮಕ

    ಭದ್ರಾವತಿ, ಫೆ. ೮: ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ವಿಭಾಗಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕಗೊಳಿಸಲಾಗಿದೆ.
    ಉಪಾಧ್ಯಕ್ಷರಾಗಿ ಎನ್. ಮಂಜುನಾಥ್, ಕುಮಾರ, ಪ್ರಧಾನ ಕಾರ್ಯದರ್ಶಿಯಾಗಿ ಜಗದೀಶ್ ಬೋಸ್ಲೆ, ಮಂಜುನಾಥ ಸಿಂಗ್, ಕಾರ್ಯದರ್ಶಿಗಳಾಗಿ ಪಿ.ಎಲ್ ಪ್ರದೀಪ್, ಬಿ.ಆರ್ ಜಯಶೀಲ ಮತ್ತು ಸಂಚಾಲಕರಾಗಿ ಶ್ರೀನಿವಾಸ್ ಅವರನ್ನು ನೇಮಗೊಳಿಸಿ ವಿಭಾಗದ ಅಧ್ಯಕ್ಷ ಬಿ. ಗಂಗಾಧರ ಆದೇಶ ಹೊರಡಿಸಿದ್ದಾರೆ.

ಆಶಾ ಕಾರ್ಯಕರ್ತೆಯರಿಗೆ ಇ-ಶ್ರರ್ಮ್ ಕಾರ್ಡ್ ನೋಂದಾಣಿಗೆ ಚಾಲನೆ

ಭದ್ರಾವತಿಯಲ್ಲಿ ಕಾರ್ಮಿಕ ಇಲಾಖೆ ಸಹಯೋಗದೊಂದಿಗೆ ಕರ್ನಾಟಕ ಸ್ಟೇಟ್ ಕನ್ಸ್‌ಸ್ಟ್ರಕ್ಷನ್ ವರ್ಕರ್ಸ್ ಸೆಂಟ್ರಲ್ ಯೂನಿಯನ್ ವತಿಯಿಂದ ಮಂಗಳವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಆಶಾ ಕಾರ್ಯಕರ್ತೆಯರಿಗೆ ಇ-ಶ್ರಮ್ ಕಾರ್ಡ್ ನೋಂದಾಣಿ ಕಾರ್ಯಕ್ರಮ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸುವ ಮೂಲಕ ಸಾಂಕೇತಿಕವಾಗಿ ಸ್ಥಳದಲ್ಲಿಯೇ ಇ-ಶ್ರಮ್ ಕಾರ್ಡ್ ವಿತರಿಸಿದರು.
    ಭದ್ರಾವತಿ, ಫೆ. ೮: ಕಾರ್ಮಿಕ ಇಲಾಖೆ ಸಹಯೋಗದೊಂದಿಗೆ ಕರ್ನಾಟಕ ಸ್ಟೇಟ್ ಕನ್ಸ್‌ಸ್ಟ್ರಕ್ಷನ್ ವರ್ಕರ್ಸ್ ಸೆಂಟ್ರಲ್ ಯೂನಿಯನ್ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಮಂಗಳವಾರ ಇ-ಶ್ರಮ್ ಕಾರ್ಡ್ ನೋಂದಾಣಿಗೆ ಚಾಲನೆ ನೀಡಲಾಯಿತು.
    ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಕಾರ್ಯಕ್ರಮ ಉದ್ಘಾಟಿಸಿದರು.
    ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಅಶೋಕ್ ಮಾತನಾಡಿ, ಇ-ಶ್ರಮ್ ಕಾರ್ಡ್ ಆಶಾಕಾರ್ಯಕರ್ತೆಯರಿಗೆ ಹೆಚ್ಚಿನ ಸಹಕಾರಿಯಾಗಲಿದೆ. ಆಶಾ ಕಾರ್ಯಕರ್ತೆಯರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು.
ಕರ್ನಾಟಕ ಸ್ಟೇಟ್ ಕನ್ಸ್‌ಸ್ಟ್ರಕ್ಷನ್ ವರ್ಕರ್ಸ್ ಸೆಂಟ್ರಲ್ ಯೂನಿಯನ್ ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್ ಬಾಬು ಪ್ರಾಸ್ತಾವಿಕ ನುಡಿಗಳನ್ನಾಡಿದರು.  
    ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಪೌರಾಯುಕ್ತ ಕೆ. ಪರಮೇಶ್, ಕಂದಾಯಾಧಿಕಾರಿ ರಾಜ್‌ಕುಮಾರ್, ಸದಸ್ಯ ಬಿ.ಟಿ ನಾಗರಾಜ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ಕರ್ನಾಟಕ ಸ್ಟೇಟ್ ಕನ್ಸ್‌ಸ್ಟ್ರಕ್ಷನ್ ವರ್ಕರ್ಸ್ ಸೆಂಟ್ರಲ್ ಯೂನಿಯನ್ ತಾಲೂಕು ಕಾರ್ಯಾಧ್ಯಕ್ಷ ಅಭಿಲಾಷ್, ವಿಜಯ್, ವಸಂತ, ರಾಜೇಶ್ವರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  
    ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಸುಮಾರು ೪ ಮಂದಿಗೆ ಸ್ಥಳದಲ್ಲಿಯೇ ಇ-ಶ್ರಮ್ ಕಾರ್ಡ್‌ಗಳನ್ನು ವಿತರಿಸಲಾಯಿತು.

ಅರ್ಹ ಫಲಾನುಭವಿಗಳಿಗೆ ನಿವೇಶನ, ಹಕ್ಕು ಪತ್ರ ನೀಡುವಲ್ಲಿ ನಿರ್ಲಕ್ಷ್ಯತನ

ತಾಲೂಕು ಆಡಳಿತ, ಗ್ರಾಮ ಪಂಚಾಯಿತಿಗಳ ವಿರುದ್ಧ ನಗರಸಭೆ ಸದಸ್ಯ ಬಿ.ಕೆ ಮೋಹನ್ ಆರೋಪ


ಭದ್ರಾವತಿ ತಾಲೂಕು ಪಂಚಾಯಿತಿ ಪಂಚಾಯಿತಿ ಸಭಾಂಗಣದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಗರಸಭೆ ಸದಸ್ಯ ಬಿ.ಕೆ ಮೋಹನ್ ಮಾತನಾಡಿದರು.
    ಭದ್ರಾವತಿ, ಫೆ. ೮: ತಾಲೂಕಿನಲ್ಲಿ ನಿವೇಶನ ರಹಿತ ಅರ್ಹ ಫಲಾನುಭವಿಗಳಿಗೆ ಸರ್ಕಾರದ ವಿವಿಧ ಯೋಜನೆಗಳಡಿ ನಿವೇಶನ ನೀಡಲು ಹಾಗು ೯೪ಸಿ ಮತ್ತು ೯೪ಸಿಸಿ ಅಡಿಯಲ್ಲಿ ಅರ್ಜಿ ಸಲ್ಲಿಸುವವರಿಗೆ ಹಕ್ಕು ಪತ್ರ ನೀಡಲು ಸಾಧ್ಯವಾಗುತ್ತಿಲ್ಲ. ತಾಲೂಕು ಆಡಳಿತ ಮತ್ತು ಗ್ರಾಮ ಪಂಚಾಯಿತಿ ಆಡಳಿತಗಳು ನಿರ್ಲಕ್ಷ್ಯವಹಿಸಿವೆ ಎಂದು ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಆರೋಪಿಸಿದರು.
    ಅವರು ಮಂಗಳವಾರ ತಾಲೂಕು ಪಂಚಾಯಿತಿ ಪಂಚಾಯಿತಿ ಸಭಾಂಗಣದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ನಗರಸಭೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗು ಕಾರ್ಯದರ್ಶಿಗಳ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
    ಸರ್ಕಾರ ವಸತಿ ರಹಿತ ಅರ್ಹ ಫಲಾನುಭವಿಗಳಿಗೆ ನಿವೇಶನ ನೀಡಿ ವಸತಿ ಕಲ್ಪಿಸಿಕೊಡಲು ಅವಕಾಶ ಕಲ್ಪಿಸಿಕೊಟ್ಟಿದೆ. ಅಲ್ಲದೆ ೯೪ಸಿ ಮತ್ತು ೯೪ಸಿಸಿ ಅಡಿಯಲ್ಲಿ ಹಕ್ಕುಪತ್ರ ನೀಡಲು ಸೂಚಿಸಿದೆ. ಆದರೆ ಇನ್ನೂ ಅರ್ಹ ಫಲಾನುಭವಿಗಳಿಗೆ ನಿವೇಶನ ನೀಡಲು, ೯೪ಸಿ ಮತ್ತು ೯೪ಸಿಸಿ ಅಡಿಯಲ್ಲಿ ಹಕ್ಕು ಪತ್ರ ನೀಡಲು ಸಾಧ್ಯವಾಗಿಲ್ಲ. ಈ ಸಂಬಂಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾಕಷ್ಟು ದೂರು ಕೇಳಿ ಬರುತ್ತಿವೆ. ತಾಲೂಕು ಆಡಳಿತ ಮತ್ತು ಗ್ರಾಮ ಪಂಚಾಯಿತಿ ಆಡಳಿತಗಳು ನಿರ್ಲಕ್ಷ್ಯವಹಿಸಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನ್ಯಾಯವಾದಿ ಟಿ. ಚಂದ್ರೇಗೌಡ ಮಾತನಾಡಿ, ಎದುರಾಗಿರುವ ಭೂ ವಿವಾದಗಳನ್ನು ವಿವರಿಸುವ ಜೊತೆಗೆ ಅವುಗಳಿಗೆ ಕಾನೂನಾತ್ಮಕವಾಗಿ ಕಂಡುಕೊಳ್ಳಬಹುದಾದ ಮಾಗೋಪಾಯಗಳನ್ನು ವಿವರಿಸಿದರು.
    ತಹಸೀಲ್ದಾರ್ ಪ್ರದೀಪ್ ಆರ್. ನಿಕ್ಕಮ್ ಮಾತನಾಡಿ, ನಿವೇಶನ ರಹಿತ ಅರ್ಹ ಫಲಾನುಭವಿಗಳಿಗೆ ನಿವೇಶನ ನೀಡುವ ಸಂಬಂಧ ಹಾಗು ೯೪ಸಿ ಮತ್ತು ೯೪ಸಿಸಿ ಅಡಿಯಲ್ಲಿ ಕೈಗೊಂಡಿರುವ ಕ್ರಮಗಳನ್ನು ವಿವರಿಸಿದರು. ಭೂ ವಿವಾದಗಳಿಗೆ ಸಂಬಂಧಿಸಿದಂತೆ ಕಾನೂನಾತ್ಮಕವಾಗಿ ಎದುರಾಗಿರುವ ಸಮಸ್ಯೆಗಳಿಗೂ ಸೂಕ್ತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಲಾಗುತ್ತಿದೆ ಎಂದರು.
    ಪಡಿತರ ಚೀಟಿ ವಿತರಣೆಯಲ್ಲಿ ಉಂಟಾಗಿರುವ ಸಮಸ್ಯೆಗಳು ಹಾಗು ಗ್ರಾಮಗಳಲ್ಲಿ ಸ್ಮಶಾನ ಭೂಮಿ ಕಲ್ಪಿಸಿಕೊಡುವ ಸಂಬಂಧ ಸಹ ಸಭೆಯಲ್ಲಿ ಚರ್ಚಿಸಲಾಯಿತು.
    ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಪೌರಾಯುಕ್ತ ಕೆ. ಪರಮೇಶ್, ಕಂದಾಯಾಧಿಕಾರಿ ರಾಜ್‌ಕುಮಾರ್, ಸದಸ್ಯ ಬಿ.ಟಿ ನಾಗರಾಜ್, ತಾಲೂಕು ಬಗರ್ ಹುಕ್ಕುಂ ಸಮಿತಿ ಅಧ್ಯಕ್ಷ ನಾಗೇಶ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.