Friday, February 18, 2022

ಫೆ.೧೯ರಂದು ಹಾನಗಲ್ ಕುಮಾರೇಶ್ವರ ಶಿವಯೋಗಿಗಳ ಪುಣ್ಯಸ್ಮರಣೆ

ಹಾನಗಲ್ ಕುಮಾರೇಶ್ವರ ಶಿವಯೋಗಿ
    ಭದ್ರಾವತಿ, ಫೆ. ೧೮: ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಹಾನಗಲ್ ಕುಮಾರೇಶ್ವರ ಶಿವಯೋಗಿಗಳ ಪುಣ್ಯಸ್ಮರಣೆ ಹಾಗು ಸಮಾಜದ ನೂತನ ಚುನಾಯಿತ ಪ್ರತಿನಿಧಿಗಳಿಗೆ ಸನ್ಮಾನ ಸಮಾರಂಭ ಫೆ.೧೯ರಂದು ಬೆಳಿಗ್ಗೆ ೧೧ ಗಂಟೆ ಸಿದ್ದರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
    ಶ್ರೀಮದ್ ರಂಭಾಪುರಿ ಶಾಖಾ ಹಿರೇಮಠ ಬಿಳಿಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದು, ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷೆ ನಂದಿನಿ ಮಲ್ಲಿಕಾರ್ಜುನ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಬಿ.ಕೆ ಸಂಗಮೇಶ್ವರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ನಗರಸಭೆ ಅಧ್ಯಕ್ಷೆ ಗೀತಾರಾಜ್‌ಕುಮಾರ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.
    ಹಟ್ಟಿ ಚಿನ್ನದ ಗಣಿ ನಿಗಮದ ನಿರ್ದೇಶಕ ಕೂಡ್ಲಿಗೆರೆ ಹಾಲೇಶ್, ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ದೇಶಕ ಮಂಗೋಟೆ ರುದ್ರೇಶ್, ನಗರಸಭೆ ಸದಸ್ಯರಾದ ಬಿ.ಕೆ ಮೋಹನ್, ಬಿ.ಎಂ ಮಂಜುನಾಥ್(ಟೀಕು), ಅನುಪಮ ಚನ್ನೇಶ್, ನಾಮನಿರ್ದೇಶಕ ಸದಸ್ಯ ರವಿಕುಮಾರ್ ಮತ್ತು ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಮಾಜಿ ಅಧ್ಯಕ್ಷ ಸಿದ್ದಲಿಂಗಯ್ಯರವರಿಗೆ ಸನ್ಮಾನ ನಡೆಯಲಿದೆ.

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟ ಅಸ್ತಿತ್ವಕ್ಕೆ

ಫೆ.೨೧ರಂದು ಒಕ್ಕೂಟದ ಲೋಕಾರ್ಪಣೆ, ಕಾರ್ಯಾಲಯ ಉದ್ಘಾಟನೆ


ಭದ್ರಾವತಿಯಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟದ ರಾಜ್ಯಾಧ್ಯಕ್ಷ ವಿ. ವಿನೋದ್ ಹಾಗು ಪದಾಧಿಕಾರಿಗಳು ಉಪಸ್ಥಿತರಿದ್ದರು.
    ಭದ್ರಾವತಿ, ಫೆ. ೧೮: ಕಾರ್ಮಿಕರ ಪರವಾಗಿ ನಮ್ಮ ಹೋರಾಟ ನಿರಂತರವಾಗಿದ್ದು, ಕೇಂದ್ರ ಹಾಗು ರಾಜ್ಯ ಸರ್ಕಾರಗಳಿಂದ ಕಾರ್ಮಿಕರಿಗೆ ಲಭ್ಯವಿರುವ ಸೌಲಭ್ಯಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಕಳೆದ ೩ ವರ್ಷಗಳಿಂದ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟ ಪ್ರಾಮಾಣಿಕವಾಗಿ ಶ್ರಮಿಸುತ್ತಿದೆ.  ಈ ಒಕ್ಕೂಟ ಇದೀಗ ಕಾರ್ಮಿಕ ಇಲಾಖೆಯಲ್ಲಿ ಅಧಿಕೃತವಾಗಿ ನೋಂದಾಣಿಯಾಗುವ ಮೂಲಕ ಫೆ.೨೧ರಂದು ಕಛೇರಿಯ ಉದ್ಘಾಟನೆಗೆ ಮುಂದಾಗಿದೆ ಎಂದು ಒಕ್ಕೂಟದ ರಾಜ್ಯಾಧ್ಯಕ್ಷ ವಿ. ವಿನೋದ್ ಹೇಳಿದರು.
    ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ, ಬಡವ, ದೀನದಲಿತರ ಪರವಾಗಿ ಸರ್ಕಾರಿದಂದ ಸಿಗುವ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ಕಾರ್ಮಿಕರಿಗೆ ತಲುಪಿಸುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಲಾಗಿದೆ. ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಈ ಕಾರ್ಮಿಕರಿಗೆ ಇದುವರೆಗೂ ಇಎಸ್‌ಐ ಸೌಲಭ್ಯ ಒದಗಿಸದೆ ಇರುವುದು ದುರಾದೃಷ್ಟಕರ ಸಂಗತಿಯಾಗಿದೆ. ಈ ನಡುವೆ ಕೇಂದ್ರ ಸರ್ಕಾರ ಕೈಗಾರಿಕೋದ್ಯಮಿಗಳ ಪರವಾಗಿ ಹಾಗು ಕಾರ್ಮಿಕರ ವಿರುದ್ಧವಾಗಿ ಕಾನೂನುಗಳನ್ನು ಜಾರಿಗೆ ತರಲು ಹೊರಟಿರುವುದು ವಿಷಾದನೀಯ ಬೆಳವಣಿಗೆಯಾಗಿದೆ. ಇದರ ವಿರುದ್ಧ ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದರು.
    ಒಕ್ಕೂಟ ಪ್ರಸ್ತುತ ಸುಮಾರು ೫೦೦ ಸದಸ್ಯರನ್ನು ಒಳಗೊಂಡಿದ್ದು, ಸರ್ಕಾರದಿಂದ ಲಭ್ಯವಾದ ಸುರಕ್ಷತಾ ಹಾಗು ಪ್ರತಿರಕ್ಷತಾ ಮತ್ತು ಸಲಕರಣೆ ಕಿಟ್‌ಗಳನ್ನು ವಿತರಿಸಲಾಗಿದೆ. ಕಾರ್ಮಿಕರ ಗುರುತಿನ ಚೀಟಿ, ಇ-ಶ್ರಮ್ ಕಾರ್ಡ್ ನೋಂದಾಣಿ ಸೇರಿದಂತೆ ಇನ್ನಿತರ ಯೋಜನೆಗಳನ್ನು ಕಲ್ಪಿಸಿಕೊಡಲಾಗಿದೆ. ರಾಜ್ಯದ ಇತರ ಜಿಲ್ಲೆಗಳಲ್ಲೂ ಮುಂದಿನ ದಿನಗಳಲ್ಲಿ ಒಕ್ಕೂಟ ಕಾರ್ಯಾರಂಭ ಮಾಡಲಿದೆ.  ನೋಂದಾಣಿಗೊಂಡಿರುವ ಒಕ್ಕೂಟವನ್ನು ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ಫೆ. ೨೧ರಂದು ನಗರದ ಚನ್ನಗಿರಿ ರಸ್ತೆಯಲ್ಲಿರುವ ಶ್ರೀ ಗಂಗಾಪರಮೇಶ್ವರಿ ಸಮುದಾಯ ಭವನದ ಕಟ್ಟಡದಲ್ಲಿ ತೆರೆಯಲಾಗಿರುವ ಕಾರ್ಯಾಲಯದಲ್ಲಿ ಲೋಕಾರ್ಪಣೆಗೊಳಿಸಲಿದ್ದು, ಸಮಾರಂಭಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಚಾಲನೆ ನೀಡಲಿದ್ದಾರೆ.
    ಕಾರ್ಯಾಲಯವನ್ನು ಕಾರ್ಮಿಕ ಅಧಿಕಾರಿ ಸಿ.ಬಿ ರಂಗಯ್ಯ ಮತ್ತು ಶಾಶ್ವತ ನಾಮಫಲಕವನ್ನು ಕಾರ್ಮಿಕ ನಿರೀಕ್ಷಕಿ ಮುಮ್ತಾಜ್ ಬೇಗಂ ಉದ್ಘಾಟಿಸಲಿದ್ದಾರೆ. ತಹಸೀಲ್ದಾರ್ ಆರ್. ಪ್ರದೀಪ್ ಗಣ್ಯರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಲಿದ್ದು, ಡಿಎಸ್‌ಎಸ್ ಮುಖಂಡ ಸತ್ಯ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದು, ಒಕ್ಕೂಟದ ರಾಜ್ಯಾಧ್ಯಕ್ಷ ವಿ. ವಿನೋದ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
    ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಸಮಿತಿ ಉಪಾಧ್ಯಕ್ಷರಾದ ಶಶಿಕುಮಾರ್, ಎನ್. ವೆಂಕಟೇಶ್, ಬಿ. ರಾಜಾಚಾರಿ, ಪ್ರಧಾನ ಕಾರ್ಯದರ್ಶಿ ಎಂ. ಕಂದನ್, ಕಾರ್ಯದರ್ಶಿ ಎಸ್. ಕುಮಾರ್, ಸಹ ಕಾರ್ಯದರ್ಶಿಗಳಾದ ಬಿ.ಎಸ್. ಸುಶೀಲ, ಎಸ್. ವೆಂಕಟೇಶ್, ಖಜಾಂಚಿ ಚೆಲುವರಾಜ್, ನಿರ್ದೇಶಕರಾದ ಪಿ. ಏಳುಮಲೈ, ಬಿ.ಆರ್ ಯಲ್ಲಪ್ಪ, ಸುಬ್ರಮಣಿ, ಎನ್. ವಸಂತಕುಮಾರ್, ಎ. ಶಶಿಕುಮಾರ್, ವಿ. ಅರವಿಂದ್, ಕಾರ್ಯಕಾರಿ ಸಮಿತಿ ಸದಸ್ಯರಾದ ಪಿ. ದೊರೈ, ಶ್ರೀನಿವಾಸ್, ಎಚ್. ನಿಂಗರಾಜ್, ಎಂ. ಪವಿತ್ರ, ಜಿಲ್ಲಾ ಸಮಿತಿ ಅಧ್ಯಕ್ಷ ಎಂ. ಅರುಳ್, ಉಪಾಧ್ಯಕ್ಷರಾದ ಎಂ. ಸುಧಾಕರ್, ಟಿ. ವಡಿವೇಲು, ಪ್ರಧಾನ ಕಾರ್ಯದರ್ಶಿ ಎಸ್. ರಾಮು, ನಿರ್ದೇಶಕರಾದ ಕೆ. ಅಶೋಕ್, ಕೆ. ಶ್ರೀನಿವಾಸ, ಬಸವರಾಜ, ಎಸ್. ನಾಗರಾಜ, ಎನ್. ಸುರೇಶ್ ಮತ್ತು ರಾಧಕೃಷ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Thursday, February 17, 2022

ಪ್ರತಿಭಟನೆಗೆ ಮುಂದಾದ ವಿದ್ಯಾರ್ಥಿನಿಯರ ಮನವೊಲಿಕೆ : ತರಗತಿಗಳಿಗೆ ಹಾಜರು

ನ್ಯಾಯಾಲಯದ ತೀರ್ಪು ಬರುವವರೆಗೂ ತರಗತಿಗಳಿಗೆ ಹಾಜರಾಗುವುದಿಲ್ಲ


ಭದ್ರಾವತಿ ಹಳೇನಗರದ ಸಂಚಿ ಹೊನ್ನಮ್ಮ ಸರ್ಕಾರಿ ಬಾಲಕಿಯರ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿಜಾಬ್ ಧರಿಸಿಕೊಂಡು ಬಂದ ವಿದ್ಯಾರ್ಥಿನಿಯರು ಗುರುವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮುಂಭಾಗ ಪ್ರತಿಭಟನೆಗೆ ಮುಂದಾದ ಘಟನೆ ನಡೆದಿದೆ.

    ಭದ್ರಾವತಿ, ಫೆ. ೧೭: ಹಳೇನಗರದ ಸಂಚಿ ಹೊನ್ನಮ್ಮ ಸರ್ಕಾರಿ ಬಾಲಕಿಯರ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿಜಾಬ್ ಧರಿಸಿಕೊಂಡು ಬಂದ ವಿದ್ಯಾರ್ಥಿನಿಯರು ಗುರುವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮುಂಭಾಗ ಪ್ರತಿಭಟನೆಗೆ ಮುಂದಾದ ಘಟನೆ ನಡೆದಿದೆ.
    ಬುಧವಾರ ಹಿಜಾಬ್ ಧರಿಸಿಕೊಂಡು ಕಾಲೇಜಿಗೆ ಬಂದಿದ್ದ ವಿದ್ಯಾರ್ಥಿನಿಯರಿಗೆ ತಹಸೀಲ್ದಾರ್ ಹಾಗು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪ್ರಾಂಶುಪಾಲರು, ಉಪ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ನ್ಯಾಯಾಲಯದ ಆದೇಶ ಹಾಗು ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸುವ ಜೊತೆಗೆ ಹಿಜಾಬ್ ಧರಿಸದೆ ತರಗತಿಗಳಿಗೆ ಹಾಜರಾಗುವಂತೆ ಮನವೊಲಿಕೆ ಮಾಡುವಲ್ಲಿ ಯಶಸ್ವಿಯಾಗಿದ್ದರು. ಆದರೆ ಕಾಲೇಜು ವಿಭಾಗದ ವಿದ್ಯಾರ್ಥಿನಿಯರು ತರಗತಿಗಳಿಗೆ ಹಾಜರಾಗದೆ ಮನೆಗಳಿಗೆ ಹಿಂದಿರುಗಿದ್ದರು. ಈ ನಡುವೆ ಗುರುವಾರ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿನಿಯರು ಪುನಃ ಹಿಜಾಬ್ ಧರಿಸಿಕೊಂಡು ಬಂದಿದ್ದು, ಈ ಹಿನ್ನಲೆಯಲ್ಲಿ ಈ ವಿದ್ಯಾರ್ಥಿನಿಯರನ್ನು ಶಾಲಾ ಮುಂಭಾಗದಲ್ಲಿಯೇ ತಡೆಯಲಾಗಿತ್ತು. ಈ ಹಿನ್ನಲೆಯಲ್ಲಿ ಈ ವಿದ್ಯಾರ್ಥಿನಿಯರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಗೆ ತೆರಳಿ ಪ್ರತಿಭಟನೆಗೆ ಮುಂದಾದರು.
    ಮಾಹಿತಿ ತಿಳಿದು ತಕ್ಷಣ ಸ್ಥಳಕ್ಕೆ ಆಗಮಿಸಿದ ಅಂಜುಮಾನ್ ಇಸ್ಲಾವುಲ್ ಮುಸ್ಲಿಮೀನ್ ಅಧ್ಯಕ್ಷ ಮುರ್ತುಜಾ ಖಾನ್, ಪ್ರಸ್ತುತ ನ್ಯಾಯಾಲಯದ ಆದೇಶ ಹಾಗು ಸರ್ಕಾರದ ನಿಯಮಗಳನ್ನು ಪಾಲಿಸುವುದು ಅನಿವಾರ್ಯವಾಗಿದ್ದು, ಈ ಹಿನ್ನಲೆಯಲ್ಲಿ ವಿದ್ಯಾರ್ಥಿನಿಯರು ಇದಕ್ಕೆ ಪೂರಕವಾಗಿ ಸ್ಪಂದಿಸಿ ತರಗತಿಗಳಿಗೆ ಹಾಜರಾಗುವಂತೆ ಮನವಿ ಮಾಡಿದರು. ಅಲ್ಲದೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗು ಕಛೇರಿ ಸಿಬ್ಬಂದಿಗಳು ಸಹ ವಿದ್ಯಾರ್ಥಿನಿಯರಿಗೆ ಸೂಕ್ತ ತಿಳುವಳಿಕೆ ನೀಡಿದರು. ಈ ಹಿನ್ನಲೆಯಲ್ಲಿ ವಿದ್ಯಾರ್ಥಿನಿಯರು  ಮೂಲಕ ಮನವೊಲಿಸಿ ತರಗತಿಗಳಿಗೆ ಹಾಜರಾದರು.
    ಮನವೊಲಿಕೆ ವಿಫಲ : ಹಿಜಾಬ್ ಮೊದಲು, ನಂತರ ಶಿಕ್ಷಣ
    ನಗರದ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಾಲೇಜಿನಲ್ಲಿ ಕೆಲವು ದಿನಗಳವರೆಗೆ ತಣ್ಣಗಾಗಿದ್ದ ಹಿಜಾಬ್ ವಿವಾದ ಗುರುವಾರ ಪುನಃ ಕಾಣಿಸಿಕೊಂಡಿದೆ. ನಗರದಲ್ಲಿ ಮೊದಲ ಬಾರಿಗೆ ಹಿಜಾಬ್ ವಿವಾದ ಈ ಕಾಲೇಜಿನಿಂದಲೇ ಆರಂಭಗೊಂಡಿದ್ದು, ಆರಂಭದಲ್ಲಿ ಬಿಗುವಿನ ವಾತಾವರಣ ಕಂಡು ಬಂದರೂ ಸಹ ಇದುವರೆಗೂ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ.
    ಹಿಜಾಬ್ ವಿಚಾರಣೆ ಉಚ್ಛ ನ್ಯಾಯಾಲಯದಲ್ಲಿ ಆರಂಭಗೊಂಡ ನಂತರ ಕಾಲೇಜಿನ ಆಡಳಿತ ಮಂಡಳಿ ಎಚ್ಚರಿಕೆ ನಡೆಗಳನ್ನು ಅನುಸರಿಸಿದ ಹಿನ್ನಲೆಯಲ್ಲಿ ವಿವಾದ ತಣ್ಣಗಾಗಿದ್ದು, ಬುಧವಾರ ಕಾಲೇಜು ಆರಂಭಗೊಂಡರೂ ಸಹ ಹಿಜಾಬ್ ಧರಿಸುವ ವಿದ್ಯಾರ್ಥಿನಿಯರು ಕಾಲೇಜಿಗೆ ಆಗಮಿಸದೆ ಮನೆಗಳಿಲ್ಲಿಯೇ ಉಳಿದುಕೊಂಡಿದ್ದರು. ಆದರೆ ಗುರುವಾರ ಏಕಾಏಕಿ ಹಿಜಾಬ್ ಧರಿಸಿಕೊಂಡು ಕಾಲೇಜಿಗೆ ಆಗಮಿಸಿದ್ದು, ಈ ವಿದ್ಯಾರ್ಥಿನಿಯರನ್ನು ಕಾಲೇಜು ಮಂಡಳಿ ತರಗತಿಗಳಿಗೆ ಕಳುಹಿಸದೆ ಸುಮಾರು ೨ ಗಂಟೆಗೂ ಹೆಚ್ಚು ಸಮಯ ನ್ಯಾಯಾಲಯದ ಆದೇಶ ಹಾಗು ಸರ್ಕಾರದ ಕ್ರಮಗಳನ್ನು ವಿವರಿಸುವ ಮೂಲಕ ಮನವೊಲಿಕೆಗೆ ಪ್ರಯತ್ನಿಸಿತು. ಆದರೆ ಇದಕ್ಕೆ ಒಪ್ಪದ ವಿದ್ಯಾರ್ಥಿನಿಯರು ನಮಗೆ ಮೊದಲು ಹಿಜಾಬ್ ಮುಖ್ಯವಾಗಿದ್ದು, ನಂತರ ಶಿಕ್ಷಣ ಮುಖ್ಯವಾಗಿದೆ. ಈ ಹಿನ್ನಲೆಯಲ್ಲಿ ನಾವುಗಳು ನ್ಯಾಯಾಲಯದ ತೀರ್ಪು ಬರುವವರೆಗೂ ಕಾಲೇಜಿಗೆ ಬರುವುದಿಲ್ಲ ಎಂದು ಬಿಗಿಪಟ್ಟು ಹಿಡಿಯುವ ಜೊತೆಗೆ ಈ ಸಂಬಂಧ ವಿದ್ಯಾರ್ಥಿನಿಯರು ಮುಚ್ಚಳಿಕೆ ಪತ್ರ ಬರೆದುಕೊಟ್ಟು ಮನೆಗಳಿಗೆ ಹಿಂದಿರುಗಿದ್ದಾರೆ.

ಆರೋಗ್ಯ ಇಲಾಖೆ ಗುತ್ತಿಗೆ, ಹೊರಗುತ್ತಿಗೆ ನೌಕರರಿಂದ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮುಷ್ಕರ

ಭದ್ರಾವತಿ ಜನ್ನಾಪುರ ನಗರ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುವ ಗುತ್ತಿಗೆ ಮತ್ತು ಹೊರ ಗುತ್ತಿಗೆ ನೌಕರರು ಕಪ್ಪು ಪಟ್ಟಿ ಧರಿಸಿ ಮತ್ತು ರಾಷ್ಟ್ರೀಯ ಕಾರ್ಯಕ್ರಮದ ವರದಿಗಳನ್ನು ನಿಲ್ಲಿಸಿ ಮುಷ್ಕಾರ ನಡೆಸಿದರು

    ಭದ್ರಾವತಿ, ಫೆ. ೧೭: ಶ್ರೀನಿವಾಸಾಚಾರಿ ಸಮಿತಿ ವರದಿ ಅನುಷ್ಠಾನ ಮತ್ತು ಗುತ್ತಿಗೆ ಹಾಗು ಹೊರಗುತ್ತಿಗೆ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗು ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗು ಹೊರಗುತ್ತಿಗೆ ನೌಕರರು ಮೊದಲ ಹಂತದಲ್ಲಿ ಕಳೆದ ೪ ದಿನಗಳಿಂದ ಮುಷ್ಕರ ನಡೆಸುತ್ತಿದ್ದಾರೆ.
    ರಾಜ್ಯ ಸರ್ಕಾರ ತಕ್ಷಣ ಶ್ರೀನಿವಾಸಾಚಾರಿ ಸಮಿತಿ ವರದಿ ಅನುಷ್ಠಾನಗೊಳಿಸುವ ಜೊತೆಗೆ ರಾಷ್ಟ್ರೀಯ ಆರೋಗ್ಯ ಅಭಿಯಾನ(ಎನ್‌ಎಚ್‌ಎಂ) ಹಾಗು ವೈದ್ಯಕೀಯ ಶಿಕ್ಷಣ ಇಲಾಖೆಯ ಅಡಿಯಲ್ಲಿ ರಾಜ್ಯಾದ್ಯಂತ ಕರ್ತವ್ಯ ನಿರ್ವಹಿಸುತ್ತಿರುವ ಸುಮಾರು ೩೦ ಸಾವಿರ ಗುತ್ತಿಗೆ ಮತ್ತು ಹೊರ ಗುತ್ತಿಗೆ ನೌಕರರಿಗೆ ಸಮಾನ ವೇತನ, ಸೇವಾ ಭದ್ರತೆ, ವರ್ಗಾವಣೆ, ಆರೋಗ್ಯ ಮತ್ತು ಜೀವ ವಿಮೆ, ಎಚ್.ಆರ್ ಪಾಲಿಸಿ ಸೇರಿದಂತೆ ಇನ್ನಿತರ ಒಟ್ಟು ಸುಮಾರು ೧೪ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮೊದಲ ಹಂತದಲ್ಲಿ ಫೆ.೧೪ರಿಂದ ಕಪ್ಪು ಪಟ್ಟಿ ಧರಿಸಿ ಮತ್ತು ರಾಷ್ಟ್ರೀಯ ಕಾರ್ಯಕ್ರಮದ ವರದಿಗಳನ್ನು ನಿಲ್ಲಿಸಿ ಮುಷ್ಕಾರ ನಡೆಸಲಾಗುತ್ತಿದೆ. ಫೆ.೨೩ರ ನಂತರ ೨ನೇ ಹಂತದ ಹೋರಾಟ ನಡೆಯಲಿದೆ.
    ಹಳೇನಗರದ ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ಮತ್ತು ಜನ್ನಾಪುರ ನಗರ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುವ ಗುತ್ತಿಗೆ ಮತ್ತು ಹೊರ ಗುತ್ತಿಗೆ ನೌಕರರು ಮುಷ್ಕಾರ ನಡೆಸಿದರು.
    ಜನ್ನಾಪರ ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಕವಿತಾ, ಪ್ರಯೋಗ ಶಾಲಾ ತಂತ್ರಜ್ಞ ಸಚಿನ್, ಸಿಬ್ಬಂದಿ ದೇವರಾಜ್, ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ವಸಂತ, ಗ್ರೇಷಿಯಾ, ನೇತ್ರಾ, ದೇವಿಕಾ ಮತ್ತು ವಿಜಯ್ ಸೇರಿದಂತೆ ಇನ್ನಿತರರು ಮುಷ್ಕರದಲ್ಲಿ ಪಾಲ್ಗೊಂಡಿದ್ದರು.


ಭದ್ರಾವತಿ ಹಳೇನಗರದ ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುವ ಗುತ್ತಿಗೆ ಮತ್ತು ಹೊರ ಗುತ್ತಿಗೆ ನೌಕರರು ಕಪ್ಪು ಪಟ್ಟಿ ಧರಿಸಿ ಮತ್ತು ರಾಷ್ಟ್ರೀಯ ಕಾರ್ಯಕ್ರಮದ ವರದಿಗಳನ್ನು ನಿಲ್ಲಿಸಿ ಮುಷ್ಕಾರ ನಡೆಸಿದರು

ಆಜಾದಿ ಕ ಆಮೃತ್ ಮಹೋತ್ಸವ ಅಂಗವಾಗಿ ಸೈಲ್-ವಿಐಎಸ್‌ಎಲ್‌ನಲ್ಲಿ ಹೃದಯ ತಪಾಸಣಾ ಶಿಬಿರ

ಆಜಾದಿ ಕ ಆಮೃತ್ ಮಹೋತ್ಸವ ಅಂಗವಾಗಿ ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ೩ನೇ ಬಾರಿಗೆ ಕಾರ್ಖಾನೆಯ ಕಾಯಂ ಹಾಗು ಗುತ್ತಿಗೆ ಕಾರ್ಮಿಕರಿಗೆ ಹೃದಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.
    ಭದ್ರಾವತಿ, ಫೆ. ೧೭:  ಆಜಾದಿ ಕ ಆಮೃತ್ ಮಹೋತ್ಸವ ಅಂಗವಾಗಿ ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ೩ನೇ ಬಾರಿಗೆ ಕಾರ್ಖಾನೆಯ ಕಾಯಂ ಹಾಗು ಗುತ್ತಿಗೆ ಕಾರ್ಮಿಕರಿಗೆ ಹೃದಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.
    ಶಿಬಿರದಲ್ಲಿ ೩೦ ಮಹಿಳಾ ಕಾರ್ಮಿಕರು ಸೇರಿದಂತೆ ಒಟ್ಟು ೨೮೫ ಕಾಯಂ ಹಾಗು ಗುತ್ತಿಗೆ ಕಾರ್ಮಿಕರು ಪಾಲ್ಗೊಂಡಿದ್ದರು. ಶಿಬಿರದಲ್ಲಿ ರಕ್ತದೊತ್ತಡ, ಮಧುಮೇಹ ಮತ್ತು ಆಮ್ಲಜನಕ ಶುದ್ಧತ್ವ, ಎಕೋ ಮತ್ತು ಇಸಿಜಿ ತಪಾಸಣೆ ನಡೆಸಲಾಯಿತು
    ಶಿವಮೊಗ್ಗ ಸಹ್ಯಾದ್ರಿ ನಾರಾಯಣ ಹೃದಯಾಲಯದ ವೈದ್ಯರು ಮತ್ತು ಸಿಬ್ಬಂದಿಗಳ ಸಹಕಾರದೊಂದಿಗೆ ಕಾರ್ಖಾನೆಯ ಮಾನವ ಸಂಪನ್ಮೂಲ, ವಿಐಎಸ್‌ಎಲ್ ಆಸ್ಪತ್ರೆ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಶಿಬಿರ ಆಯೋಜಿಸಲಾಗಿತ್ತು.  ಹೃದಯ ರೋಗ ತಜ್ಞರಾದ ಡಾ. ಶರತ್ ಸಂಗಣ್ಣ ಗೌಡರ್ ಹಾಗೂ ಡಾ. ಎಸ್.ವಿ. ಸಿದ್ಧಾರ್ಥ್ ಮತ್ತು ಕಾರ್ಖಾನೆಯ ವಿವಿಧ ಇಲಾಖೆಗಳ ಅಧಿಕಾರಿಗಳು, ಕಾಯಂ ಹಾಗು ಗುತ್ತಿಗೆ ಕಾರ್ಮಿಕರ ಮತ್ತು ಅಧಿಕಾರಿಗಳ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

Wednesday, February 16, 2022

ಸಿ.ಎಂ. ಖಾದರ್ ನಿವಾಸದಲ್ಲಿ ನಗದು ಸೇರಿದಂತೆ ೨೩ ಲಕ್ಷ ರು. ಮೌಲ್ಯದ ಸ್ವತ್ತು ಕಳ್ಳತನ

    ಭದ್ರಾವತಿ, ಫೆ. ೧೬: ನಗರದ ಅಮೀರ್ ಜಾನ್ ಕಾಲೋನಿಯಲ್ಲಿರುವ ಸಿ.ಎಂ ಇಬ್ರಾಹಿಂರವರ ಸಹೋದರ ಸಿ.ಎಂ ಖಾದರ್ ನಿವಾಸದಲ್ಲಿ ನಗದು ಹಣ ಸೇರಿದಂತೆ ಒಟ್ಟು ಸುಮಾರು ೨೩ ಲಕ್ಷ ರು. ಮೌಲ್ಯದ ಸ್ವತ್ತು ಕಳ್ಳತನ ಮಾಡಿರುವ ಘಟನೆ ನಡೆದಿದೆ.
    ಸಿ.ಎಂ ಖಾದರ್ ಕುಟುಂಬ ಸದಸ್ಯರೊಂದಿಗೆ ಜ.೫ರಂದು ದುಬೈಗೆ ತೆರಳಿದ್ದು, ಈ ಸಂದರ್ಭದಲ್ಲಿ ಕಳ್ಳತನ ನಡೆದಿದೆ ಎನ್ನಲಾಗಿದೆ. ಖಾದರ್‌ರವರ ಕಾರಿನ ಚಾಲಕ ಕೇಶವ ಹಾಗು ಇವರ ಕಛೇರಿಯಲ್ಲಿ ಕೆಲಸ ಮಾಡುವ ಹುಡುಗ ಮುಬಾರಕ್ ಫೆ.೧೩ರಂದು ಬೆಳಿಗ್ಗೆ ಖಾದರ್‌ರವರಿಗೆ ಮೊಬೈಲ್ ಕರೆ ಮಾಡಿ ನಿವಾಸದಲ್ಲಿ ಕಳ್ಳತನ ನಡೆದಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, ಈ ಹಿನ್ನಲೆಯಲ್ಲಿ ಸಂಜೆ ವೇಳೆಗೆ ದುಬೈಯಿಂದ ನಗರಕ್ಕೆ ಆಗಮಿಸಿದ ಖಾದರ್‌ರವರು ಪರಿಶೀಲನೆ ನಡೆಸಿದಾಗ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ.
    ಮನೆಯ ಕಿಟಕಿಯ ಗ್ರಿಲ್ ಕಿತ್ತು ಹಾಕಿ, ಹಿಂಭಾಗದ ಬಾಗಿಲು ಮೂಲಕ ಪ್ರವೇಶಿಸಿ ಕಳ್ಳತನ ಮಾಡಿರುವುದು ಕಂಡು ಬಂದಿದೆ. ಅಡಕೆ ಮಾರಾಟ ಮಾಡಿ ತಂದಿಡಲಾಗಿದ್ದ ೧೬,೫೦,೦೦೦ ಮತ್ತು ಇವರ ತಮ್ಮನ ಕೊಠಡಿಯಲ್ಲಿದ್ದ ೪೫,೦೦೦ ಸೇರಿ ಒಟ್ಟು ೧೬,೯೫,೦೦೦ ರು. ನಗದು, ಒಟ್ಟು ೪೦ ಸಾವಿರ ರು. ಮೌಲ್ಯದ ೨ ಎಲ್‌ಇಡಿ ಟಿ.ವಿ, ೩೫ ಗ್ರಾಂ ತೂಕದ ಒಟ್ಟು ೧,೭೫,೦೦೦ ರು. ಮೌಲ್ಯದ ಬಂಗಾರದ ಮಾಂಗಲ್ಯ ಸರ, ಒಟ್ಟು ೪,೦೦,೦೦೦ ರು. ಮೌಲ್ಯದ ಒಟ್ಟು ೯೦ ಗ್ರಾಂ ತೂಕದ ೬ ಬಂಗಾರದ ಬಳೆಗಳನ್ನು ಹಾಗು ಒಟ್ಟು ೨೫,೦೦೦ ರು. ಮೌಲ್ಯದ ಒಟ್ಟು ೪ ಮೊಬೈಲ್ ಸೇರಿದಂತೆ ಒಟ್ಟು ೨೩,೩೫,೦೦೦ ರು. ಮೌಲ್ಯದ ಸ್ವತ್ತು ಕಳವು ಮಾಡಲಾಗಿದೆ. ಈ ಸಂಬಂಧ ಹಳೇನಗರ ಪೊಲೀಸ್ ಠಾಣೆಯಲ್ಲಿ ಖಾದರ್ ದೂರು ದಾಖಲಿಸಿದ್ದಾರೆ.


ನಾಡೋಜ ಡಾ. ಚೆನ್ನವೀರ ಕಣವಿಗೆ ನುಡಿನಮನ

ಭದ್ರಾವತಿ ನ್ಯೂಟೌನ್ ಪರಿಷತ್ ಕಚೇರಿಯಲ್ಲಿ ಬುಧವಾರ ಸಂಜೆ ಪರಿಷತ್ ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ ಅಧ್ಯಕ್ಷತೆಯಲ್ಲಿ ನುಡಿನಮನ ಕಾರ್ಯಕ್ರಮದ ಮೂಲಕ ಡಾ. ಚೆನ್ನವೀರ ಕಣವಿಯವರಿಗೆ ಸಂತಾಪ ಸೂಚಿಸಲಾಯಿತು.  
    ಭದ್ರಾವತಿ, ಫೆ. ೧೬: ನಾಡಿನ ಹಿರಿಯ ಕವಿ, ನಾಡೋಜ ಡಾ. ಚೆನ್ನವೀರ ಕಣವಿಯವರ ನಿಧನಕ್ಕೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಂತಾಪ ಸೂಚಿಸಿದೆ.
    ನ್ಯೂಟೌನ್ ಪರಿಷತ್ ಕಚೇರಿಯಲ್ಲಿ ಬುಧವಾರ ಸಂಜೆ ಪರಿಷತ್ ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ ಅಧ್ಯಕ್ಷತೆಯಲ್ಲಿ ನುಡಿನಮನ ಕಾರ್ಯಕ್ರಮದ ಮೂಲಕ ಡಾ. ಚೆನ್ನವೀರ ಕಣವಿಯವರಿಗೆ ಸಂತಾಪ ಸೂಚಿಸಲಾಯಿತು.  
    ಪರಿಷತ್ ಕಾರ್ಯದರ್ಶಿ ಎಚ್. ತಿಮ್ಮಪ್ಪ, ಕಾರ್ಯಕಾರಿ ಸಮಿತಿ ಸದಸ್ಯೆ ಇಂದಿರಾ, ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ, ಉಪಾಧ್ಯಕ್ಷೆ ಸುಮತಿ ಕಾರಂತ್, ಪ್ರಧಾನ ಕಾರ್ಯದರ್ಶಿ ಪೀಟರ್, ಕಲಾವಿದ ಗುರು ಹಾಗೂ ನಿವೃತ್ತ ನೌಕರರ ಸಂಘದ ಸದಸ್ಯರು ಹಾಗೂ ಸಾಹಿತ್ಯಭಿಮಾನಿಗಳು ಉಪಸ್ಥಿತರಿದ್ದರು.
    ಸಂತಾಪ :
    ಸಮನ್ವಯ ಕವಿ ನಾಡೋಜ ಡಾ. ಚೆನ್ನವೀರ ಕಣವಿಯವರ ನಿಧನಕ್ಕೆ ಶಿವಮೊಗ್ಗ ಜಿಲ್ಲಾ ವೀರಶೈವ ಮಠಾಧಿಪತಿ ಪರಿಷತ್ ಸಂತಾಪ ಸೂಚಿಸಿದೆ.
    ಪರಿಷತ್ ಪರವಾಗಿ ಬಿಳಿಕಿ ಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರು ಕಣವಿಯವರ ನಿಧನಕ್ಕೆ ಸಂತಾಪ ಸೂಚಿಸಿ ಗೌರವ ಸಲ್ಲಿಸಿದ್ದಾರೆ.