Sunday, February 20, 2022

ಫೆ.೨೧ರಂದು ಸಿದ್ದ ಕಣ್ಣಿನ ಹನಿ ಕಾರ್ಯಕ್ರಮ

ಭದ್ರಾವತಿ, ಫೆ. ೨೦ : ನಗರದ ತರೀಕೆರೆ ರಸ್ತೆಯ ಶ್ರೀ ಶಿವಸುಬ್ರಹ್ಮಣ್ಯ ಸ್ವಾಮಿ ಆಶ್ರಮದ ವತಿಯಿಂದ ತಮಿಳುನಾಡು ದಿಂಡಿಕಲ್‌ನ ವಂಶಪಾರಂಪರೆ ಸಿದ್ದ ವೈದ್ಯರಾದ ಕೆ. ಮುತ್ತುಕೃಷ್ಣನ್ ಅವರಿಂದ ಫೆ.೨೧ರಂದು ಸಿದ್ದ ಕಣ್ಣಿನ ಹನಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
    ಕಾರ್ಯಕ್ರಮ ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೧ ಗಂಟೆ ವರೆಗೆ ನಡೆಯಲಿದ್ದು, ಕಣ್ಣಿಗೆ ಹನಿ ಹಾಕುವುದರಿಂದ ಕಣ್ಣಿನಲ್ಲಿ ನೀರು ಬರುತ್ತಿರುವುದು, ಕಣ್ಣು ಉರಿ, ಕಣ್ಣು ಕೆಂಪಗಾಗುವುದು, ಕಣ್ಣಿನಲ್ಲಿ ಪೊರೆ ಬರುವ ಹಂತದಲ್ಲಿರುವವರು ಹಾಗು ದೂರ ದೃಷ್ಠಿ ಮತ್ತು ಸಮೀಪ ದೃಷ್ಠಿ ತೊಂದರೆ ಇರುವವರಿಗೆ ಹಾಗು ಸೂಕ್ಷ್ಮ ಕೆಲಸಗಾರರು, ಚಿನ್ನಬೆಳ್ಳಿ, ಕಂಪ್ಯೂಟರ್, ಟೈಲರಿಂಗ್ ಕೆಲಸಗಾರರಿಗೆ ಹೆಚ್ಚಿನ ಅನುಕೂಲವಾಗಲಿದೆ. ಹೆಚ್ಚಿನ ಮಾಹಿತಿಗೆ ಮೊ: ೯೪೮೦೨೮೩೦೩೦ ಅಥವಾ ೯೪೪೮೨೫೫೫೪೪ ಸಂಖ್ಯೆಗೆ ಕರೆ ಮಾಡಬಹುದಾಗಿದೆ.


Saturday, February 19, 2022

ಜೆಡಿಎಸ್‌ನಲ್ಲಿ ಪಕ್ಷಾಂತರ ಪರ್ವ : ಶಾಸಕ ಸಂಗಮೇಶ್ವರ್‌ಗೆ ಮತ್ತಷ್ಟು ಬಲ

ಬಿಜೆಪಿ ಸೇರಿದ ಅಪ್ಪಾಜಿ ಶಿಷ್ಯ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್

ಭದ್ರಾವತಿಯಲ್ಲಿ ಅಪ್ಪಾಜಿ ಬೆಂಬಲಿಗರಲ್ಲಿ ಪ್ರಮುಖರಾದ ಅಂಜುಮಾನ್ ಇಸ್ಲಾವುಲ್ ಮುಸ್ಲಿಮೀನ್ ಮಾಜಿ ಅಧ್ಯಕ್ಷ ಫೀರ್ ಷರೀಫ್ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಮೂಲಕ ಶಾಸಕ ಬಿ.ಕೆ ಸಂಗಮೇಶ್ವರನ್ನು ಬೆಂಬಲಿಸಿರುವುದು.

    * ಅನಂತಕುಮಾರ್
    ಭದ್ರಾವತಿ, ಫೆ. ೧೯: ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿ ನಿಧನದ ನಂತರ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ತನ್ನ ಅಸ್ತಿತ್ವಕ್ಕಾಗಿ ಹೆಣಕಾಡುತ್ತಿದ್ದು, ಈ ನಡುವೆ ಇದೀಗ ಅಪ್ಪಾಜಿಯೊಂದಿಗೆ ಬಹಳ ವರ್ಷಗಳಿಂದ ಒಡನಾಟ ಹೊಂದಿದ್ದ ಮುಖಂಡರುಗಳು ಪಕ್ಷಾಂತರಗೊಳ್ಳುತ್ತಿದ್ದಾರೆ. ಇದರಿಂದಾಗಿ ಮುಂಬರುವ ವಿಧಾನಸಭಾ ಚುನಾವಣೆ ಸಾಕಷ್ಟು ತಿರುವುಗಳನ್ನು ಪಡೆದುಕೊಳ್ಳುವ ಲಕ್ಷಣಗಳು ಎದ್ದು ಕಾಣುತ್ತಿವೆ.
    ಮಾಜಿ ಶಾಸಕ ಎಂ.ಜೆ ಅಪ್ಪಾಜಿ ನಿಧನ ಹೊಂದಿದ್ದ ನಂತರ ಕ್ಷೇತ್ರದ ರಾಜಕೀಯ ವಿದ್ಯಾಮಾನದಲ್ಲಿ ಸಾಕಷ್ಟು ಬದಲಾವಣೆಗಳು ಕಂಡು ಬಂದಿದ್ದು, ಲಿಂಗಾಯಿತ ಮತ್ತು ಒಕ್ಕಲಿಗ ಪ್ರಮುಖ ಸಮುದಾಯಗಳು ಕ್ಷೇತ್ರದ ವಿಧಾನಸಭಾ ಚುನಾವಣೆಯಲ್ಲಿ ಕಳೆದ ೩ ದಶಕಗಳಿಂದ ನಿರ್ಣಾಯಕ ಪಾತ್ರ ವಹಿಸುತ್ತಿವೆ. ಇದಕ್ಕೂ ಮೊದಲು ಮುಸ್ಲಿಂ ಸಮುದಾಯದವರು ನಿರ್ಣಾಯಕ ಪಾತ್ರ ವಹಿಸುತ್ತಿದ್ದರು.
    ಕ್ಷೇತ್ರದಲ್ಲಿ ಅಪ್ಪಾಜಿಯನ್ನು ಒಕ್ಕಲಿಗ ಸಮುದಾಯದ ಜೊತೆಗೆ ದಲಿತ ಹಾಗು ಹಿಂದುಳಿದ ಸಮುದಾಯಗಳು ಸಹ ಬೆಂಬಲಿಸುತ್ತಿದ್ದವು. ಸುಮಾರು ೪೦ ಸಾವಿರಕ್ಕೂ ಹೆಚ್ಚಿನ ವರ್ಚಸ್ಸಿನ ಮತಗಳನ್ನು ಅಪ್ಪಾಜಿ ಹೊಂದಿದ್ದರು. ಇದೆ ರೀತಿ ಶಾಸಕ ಸಂಗಮೇಶ್ವರನ್ನು ಲಿಂಗಾಯಿತ ಸಮುದಾಯದ ಜೊತೆಗೆ ಮುಸ್ಲಿಂ ಹಾಗು ದಲಿತ ಸಮುದಾಯಗಳು ಬೆಂಬಲಿಸುತ್ತಿವೆ. ಸಂಗಮೇಶ್ವರ್ ಸಹ ಸುಮಾರು ೪೦ ಸಾವಿರಕ್ಕೂ ಹೆಚ್ಚಿನ ವರ್ಚಸ್ಸಿನ ಮತಗಳನ್ನು ಹೊಂದಿದ್ದಾರೆ. ಇದೀಗ ಅಪ್ಪಾಜಿ ಇಲ್ಲವಾಗಿದ್ದು, ಅವರ ವರ್ಚಸ್ಸಿನ ಮತಗಳು ಯಾರಿಗೆ ಎಂಬ ಪ್ರಶ್ನೆಗಳು ಎದುರಾಗಿವೆ. ಈ ನಡುವೆ ಆರಂಭದಿಂದಲೂ ಅಪ್ಪಾಜಿಯೊಂದಿಗೆ ಗುರುತಿಸಿಕೊಂಡಿರುವ ಬೆಂಬಲಿಗರು ಇದೀಗ ಪಕ್ಷಾಂತರಗೊಳ್ಳುತ್ತಿರುವುದು ಜೆಡಿಎಸ್‌ಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ.
    ಮುಂಬರುವ ವಿಧಾನಸಭಾ ಚುನಾವಣೆಗೆ ಈಗಾಗಲೇ ಶಾರದ ಅಪ್ಪಾಜಿಯವರನ್ನು ಜೆಡಿಎಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಘೋಷಿಸಲಾಗಿದ್ದು, ಈ ನಡುವೆ ನಡೆಯುತ್ತಿರುವ ಬೆಳವಣಿಗೆಗಳು ಮುಂಬರುವ ವಿಧಾನಸಭಾ ಚುನಾವಣೆ ಮೇಲೆ ವ್ಯಾಪಕ ಪರಿಣಾಮ ಉಂಟು ಮಾಡುವ ಲಕ್ಷಣಗಳು ಕಂಡು ಬರುತ್ತಿವೆ.


ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್

    ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆ :
ಬಹಳ ವರ್ಷಗಳಿಂದ ಅಪ್ಪಾಜಿಯೊಂದಿಗೆ ಗುರುತಿಸಿಕೊಂಡಿದ್ದ ಪ್ರಮುಖರಾದ ಅಂಜುಮಾನ್ ಇಸ್ಲಾವುಲ್ ಮುಸ್ಲಿಮೀನ್ ಮಾಜಿ ಅಧ್ಯಕ್ಷ ಫೀರ್ ಷರೀಫ್, ನಗರಸಭೆ ಮಾಜಿ ಸದಸ್ಯ ಶಿವರಾಜ್, ಮಡಿವಾಳ ಸಮಾಜದ ಶಿವಮಾದು ಸೇರಿದಂತೆ ಇನ್ನಿತರರು ಸಂಗಮೇಶ್ವರ್ ಬೆಂಬಲಿಸಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
    ಗ್ರಾಮ ಪಂಚಾಯಿತಿ ಚುನಾವಣೆ ನಂತರ ಗ್ರಾಮಾಂತರ ಭಾಗದಲ್ಲಿ ಹೆಚ್ಚಿನ ಪ್ರಾಬಲ್ಯ ಸಾಧಿಸಿರುವ ಸಂಗಮೇಶ್ವರ್ ಇದೀಗ ನಗರ ವ್ಯಾಪ್ತಿಯಲ್ಲೂ ಮತ್ತಷ್ಟು ಪ್ರಾಬಲ್ಯ ಸಾಧಿಸಲು ಮುಂದಾಗಿದ್ದಾರೆ. ಈಗಾಗಲೇ ನಗರಸಭೆ ಆಡಳಿತ ಚುಕ್ಕಾಣಿ ಸಹ ಹಿಡಿದಿದ್ದು, ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತಿರುವ ಅಪ್ಪಾಜಿ ಬೆಂಬಲಿಗರಿಗೆ ತಕ್ಷಣವೇ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಂಬಲಿಗರು ಸೇರ್ಪಡೆಗೊಳ್ಳುವ ನಿರೀಕ್ಷೆ ಇದೆ. ಇದರಿಂದಾಗಿ ಮುಂಬರುವ ವಿಧಾನಸಭಾ ಚುನಾವಣೆ ವೇಳೆಗೆ ಸಂಗಮೇಶ್ವರ್ ಪ್ರಾಬಲ್ಯ ಮತ್ತುಷ್ಟು ಹೆಚ್ಚಾಗುವ ಸಾಧ್ಯತೆ ಇದೀಗ ಕಂಡು ಬರುತ್ತಿದೆ.
    ಬಿಜೆಪಿ ಸೇರಿದ ಅಪ್ಪಾಜಿ ಶಿಷ್ಯ ಎಸ್. ಕುಮಾರ್:
    ಅಪ್ಪಾಜಿಯವರ ಬಹಳ ವರ್ಷಗಳ ಒಡನಾಡಿ, ಅವರ ಶಿಷ್ಯ ಎಸ್. ಕುಮಾರ್ ಇದೀಗ ರಾಜಕೀಯ ಅಸ್ತಿತ್ವಕ್ಕಾಗಿ ಹೆಣಗಾಡುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಈ ಹಿಂದೆ ಶಿವಮೊಗ್ಗ ಹಾಲು ಒಕ್ಕೂಟದ ಚುನಾವಣೆ ಸಂದರ್ಭದಲ್ಲಿ ಅಪ್ಪಾಜಿಯೊಂದಿಗೆ ವೈಷಮ್ಯ ಬೆಳೆಸಿಕೊಂಡಿದ್ದ ಕುಮಾರ್ ಹಂತ ಹಂತವಾಗಿ ಅಪ್ಪಾಜಿಯಿಂದ ಅಂತರ ಕಾಯ್ದುಕೊಳ್ಳಲು ಆರಂಭಿಸಿದ್ದರು. ಈ ನಡುವೆಯೂ ಅಪ್ಪಾಜಿ ಕುಮಾರ್‌ರವರ ಪತ್ನಿ ಜ್ಯೋತಿಯವರಿಗೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನ ಅಲಂಕರಿಸುವಂತೆ ಮಾಡಿದ್ದರು. ಇದರ ನಡುವೆಯೂ ಕುಮಾರ್ ಜೆಡಿಎಸ್ ತೊರೆಯುವ ಲಕ್ಷಣಗಳು ಕಂಡು ಬಂದಿದ್ದವು. ಅಪ್ಪಾಜಿ ನಿಧನದ ನಂತರ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸಂಗಮೇಶ್ವರ್ ಬೆಂಬಲಿಸಿದ್ದರು. ಆದರೂ ಸಹ ಜೆಡಿಎಸ್ ಕುಮಾರ್ ಅವರನ್ನು ಕಡೆಗಣಿಸದೆ ನಗರಸಭೆ ಚುನಾವಣೆ ಜವಾಬ್ದಾರಿಯನ್ನು ವಹಿಸಿತ್ತು. ಆದರೆ ನಿರೀಕ್ಷೆಯಂತೆ ಹೆಚ್ಚು ಸ್ಥಾನ ಗಳಿಸಲು ಸಾಧ್ಯವಾಗಲಿಲ್ಲ. ಇದಕ್ಕೆ ಎಸ್. ಕುಮಾರ್ ಕಾರಣ ಎಂಬ ಆರೋಪಗಳು ಕೇಳಿ ಬರುತ್ತಿದ್ದವು. ಈ ನಡುವೆ ಕರ್ನಾಟಕ ರಾಜ್ಯ ಒಕ್ಕಲಿಗರ ನಿರ್ದೇಶಕರ ಚುನಾವಣೆಗೆ ಸ್ಪರ್ಧಿಸಿ ಕುಮಾರ್ ಸೋಲು ಕಂಡಿದ್ದಾರೆ. ಇದೀಗ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದು, ಮುಂಬರುವ ವಿಧಾನಸಭಾ ಚುನಾವಣೆ ಮೇಲೆ ವ್ಯಾಪಕ ಪರಿಣಾಮ ಉಂಟು ಮಾಡಲಿದೆ ಎನ್ನಲಾಗಿದೆ.

ವೀರಶೈವ ಲಿಂಗಾಯಿತ ಸಮುದಾಯಕ್ಕೆ ಲಿಂಗೈಕ್ಯ ಹಾನಗಲ್ ಕುಮಾರೇಶ್ವರ ಶಿವಯೋಗಿಗಳ ಕೊಡುಗೆ ಅಪಾರ : ಬಿಳಿಕಿ ಶ್ರೀ

ಭದ್ರಾವತಿ ಸಿದ್ಧರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಹಾನಗಲ್ ಕುಮಾರೇಶ್ವರ ಶಿವಯೋಗಿಗಳ ಪುಣ್ಯಸ್ಮರಣೆ ಹಾಗು ಸಮಾಜದ ನೂತನ ಚುನಾಯಿತ ಪ್ರತಿನಿಧಿಗಳಿಗೆ ಸನ್ಮಾನ ಸಮಾರಂಭದಲ್ಲಿ ಹಾನಗಲ್ ಕುಮಾರೇಶ್ವರ ಶಿವಯೋಗಿಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.
    ಭದ್ರಾವತಿ, ಫೆ. ೧೯: ವೀರಶೈವ ಲಿಂಗಾಯಿತ ಸಮುದಾಯಕ್ಕೆ ಲಿಂಗೈಕ್ಯ ಹಾನಗಲ್ ಕುಮಾರೇಶ್ವರ ಶಿವಯೋಗಿಗಳ ಕೊಡುಗೆ ಅಪಾರವಾಗಿದ್ದು, ಸಮುದಾಯ ಒಗ್ಗೂಡಿಸುವಲ್ಲಿ ಶ್ರೀಗಳ ಶ್ರಮ ಹೆಚ್ಚಿನದ್ದಾಗಿದೆ ತಾಲೂಕಿನ ಬಿಳಿಕಿ ಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಸ್ಮರಿಸಿದರು.
    ಶ್ರೀಗಳು ಶನಿವಾರ ಸಿದ್ಧರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಹಾನಗಲ್ ಕುಮಾರೇಶ್ವರ ಶಿವಯೋಗಿಗಳ ಪುಣ್ಯಸ್ಮರಣೆ ಹಾಗು ಸಮಾಜದ ನೂತನ ಚುನಾಯಿತ ಪ್ರತಿನಿಧಿಗಳಿಗೆ ಸನ್ಮಾನ ಸಮಾರಂಭದ ದಿವ್ಯ ಸಾನಿಧ್ಯವಹಿಸಿ ಮಾತನಾಡಿದರು.
    ವೀರಶೈವ ಲಿಂಗಾಯಿತ ಸಮಾಜದ ಎಲ್ಲಾ ಪಂಗಡಗಳನ್ನು ಒಗ್ಗೂಡಿಸಿ ಸಮುದಾಯವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಶ್ರೀಗಳು ಹೆಚ್ಚಿನ ಆಸಕ್ತಿವಹಿಸಿದ್ದರು. ಶ್ರೀಗಳ ಆಶಯದಂತೆ ಎಲ್ಲರೂ ಒಗ್ಗಟ್ಟಾಗಿ ಬಲಿಷ್ಠ ಸಮುದಾಯವನ್ನು ಕಟ್ಟುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಬೇಕೆಂದರು.
    ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ಪ್ರಸ್ತುತ ಸಮುದಾಯದಲ್ಲಿ ಒಗ್ಗಟ್ಟಿನ ಕೊರತೆ ಕಂಡು ಬರುತ್ತಿದೆ. ಎಲ್ಲರೂ ತಮ್ಮ ವೈಯಕ್ತಿಕ ಹಿತಾಸಕ್ತಿಯನ್ನು ಬದಿಗಿಟ್ಟು ಒಗ್ಗಟ್ಟು ಪ್ರದರ್ಶಿಸಬೇಕು. ಆಗ ಮಾತ್ರ ಸಮಾಜದಲ್ಲಿ ಬಲಿಷ್ಠವಾಗಲು ಸಾಧ್ಯ. ಮಹಾಸಭಾ ಬೇಡಿಕೆಯಂತೆ ಅಗತ್ಯವಿರುವ ಆರ್ಥಿಕ ನೆರವಿನ ಜೊತೆಗೆ ಸಮುದಾಯ ಭವನ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
    ಸಾಹಿತಿ ಚಟ್ನಹಳ್ಳಿ ಮಹೇಶ್ ಉಪನ್ಯಾಸ ನೀಡಿದರು. ನೂತನ ಚುನಾಯಿತ ಪ್ರತಿನಿಧಿಗಳಾದ ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಸದಸ್ಯರಾದ ಬಿ.ಕೆ ಮೋಹನ್, ಬಿ.ಎಂ ಮಂಜುನಾಥ್(ಟೀಕು), ಅನುಪಮ ಚನ್ನೇಶ್, ನಾಮನಿರ್ದೇಶಕ ಸದಸ್ಯ ರವಿಕುಮಾರ್ ಮತ್ತು ಹಟ್ಟಿ ಚಿನ್ನದ ಗಣಿ ನಿಗಮದ ನಿರ್ದೇಶಕ ಕೂಡ್ಲಿಗೆರೆ ಹಾಲೇಶ್ ಹಾಗು ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ದೇಶಕ ಮಂಗೋಟೆ ರುದ್ರೇಶ್ ಸೇರಿದಂತೆ ಇನ್ನಿತರರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷೆ ನಂದಿನಿ ಮಲ್ಲಿಕಾರ್ಜುನ ಅಧ್ಯಕ್ಷತೆ ವಹಿಸಿದ್ದರು. ಮಹಾಸಭಾ ಪ್ರಧಾನ ಕಾರ್ಯದರ್ಶಿ ಅರಳಿಹಳ್ಳಿ ರವಿ(ರೇವಪ್ಪ), ಉಪಾಧ್ಯಕ್ಷ ಎಸ್. ವಾಗೀಶ್, ಸಂಘಟನಾ ಕಾರ್ಯದರ್ಶಿ ಬಾರಂದೂರು ಎಚ್. ಮಂಜುನಾಥ್, ಖಜಾಂಚಿ ಜಿ.ಎಂ ಮೂರ್ತಿ, ಸಹಕಾರ್ಯದರ್ಶಿ ಶಕುಂತಲಮ್ಮ, ಜಿಲ್ಲಾ ನಿರ್ದೇಶಕರಾದ ವೇದ ಬಸವರಾಜ್, ಪೂರ್ಣಿಮಾ, ಯುವ ಘಟಕದ ಅಧ್ಯಕ್ಷ ಎಚ್. ಮಂಜುನಾಥ್, ಉಪಾಧ್ಯಕ್ಷರಾದ ಮಹಾದೇವ್, ಶ್ರೀಕಾಂತ್, ರುದ್ರೇಶ್ ಆರ್.ಎನ್, ಪ್ರಧಾನ ಕಾರ್ಯದರ್ಶಿ ಕೆ.ಆರ್ ಆನಂದ, ಮಹಿಳಾ ಘಟಕದ ಅಧ್ಯಕ್ಷೆ ಎಲ್.ಎಚ್ ರೂಪ ನಾಗರಾಜ್, ಪ್ರಧಾನ ಕಾರ್ಯದರ್ಶಿ ಎಚ್.ಎಸ್ ಕವಿತ ಸುರೇಶ್, ಖಜಾಂಚಿ ಶೋಭಾ ಅಶೋಕ್ ಪಾಟೀಲ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಜಗದೀಶ್ ಪಾಟೀಲ್ ಕಾರ್ಯಕ್ರಮ ನಿರೂಪಿಸಿದರು.


ಭದ್ರಾವತಿ ಸಿದ್ಧರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಹಾನಗಲ್ ಕುಮಾರೇಶ್ವರ ಶಿವಯೋಗಿಗಳ ಪುಣ್ಯಸ್ಮರಣೆ ಹಾಗು ಸಮಾಜದ ನೂತನ ಚುನಾಯಿತ ಪ್ರತಿನಿಧಿಗಳಿಗೆ ಸನ್ಮಾನ ಸಮಾರಂಭದಲ್ಲಿ ಬಿಳಿಕಿ ಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಗಳಿಗೆ ಗೌರವ ಸಮರ್ಪಣೆ ಸಲ್ಲಿಸಲಾಯಿತು.

ಶಿವಾಜಿ ಮಹಾರಾಜರ ಹೋರಾಟಗಳು, ಆದರ್ಶಗಳು ಇಂದಿನ ಪೀಳಿಗೆಗೆ ಅವಶ್ಯಕ : ರಂಗನಾಥರಾವ್

ಭದ್ರಾವತಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶನಿವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯುತ್ಸವ ಆಚರಿಸಲಾಯಿತು.
    ಭದ್ರಾವತಿ, ಫೆ. ೧೯ : ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶನಿವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯುತ್ಸವ ಆಚರಿಸಲಾಯಿತು.
  ತಹಸೀಲ್ದಾರ್ ಆರ್. ಪ್ರದೀಪ್ ಅಧ್ಯಕ್ಷತೆಯಲ್ಲಿ ತಾಲೂಕು ಕಛೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನ್ಯೂಟೌನ್ ಸರ್.ಎಂ. ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಉಪನ್ಯಾಸಕ ರಂಗನಾಥರಾವ್ ಛತ್ರಪತಿ ಶಿವಾಜಿ ಮಹಾರಾಜರ ಕುರಿತು ಮಾತನಾಡಿ, ಶಿವಾಜಿ ಮಹಾರಾಜರು ನಡೆಸಿದ ಹೋರಾಟಗಳು, ಅವರ ಆದರ್ಶತನಗಳು ಇಂದಿನ ಯುವ ಪೀಳಿಗೆಗೆ ಅವಶ್ಯಕವಾಗಿದೆ ಎಂದರು.
    ಮರಾಠ ಸಮಾಜದ ಅಧ್ಯಕ್ಷ ಯಶವಂತರಾವ್ ಘೋರ್ಪಡೆ, ಉಪಾಧ್ಯಕ್ಷ ಸಚಿನ್ ಸಿಂಧ್ಯಾ, ಪ್ರಧಾನ ಕಾರ್ಯದರ್ಶಿ ಪ್ರಕಾಶ್‌ರಾವ್ ದುರೆ, ಖಜಾಂಚಿ ವಿಶ್ವೇಶ್ವರ ರಾವ್, ನಿರ್ದೇಶಕರಾದ ಮಂಜುನಾಥ್ ರಾವ್, ಮಲ್ಲೇಶ್ ರಾವ್,  ಶಿವಾಜಿರಾವ್ ಗಾಯಕ್‌ವಾಡ್, ಅಣ್ಣೋಜಿರಾವ್, ಎಸ್.ಬಿ ಮೋಹನ್ ರಾವ್, ಧನುಷ್ ಬೋಸ್ಲೆ, ಪರಶುರಾಮರಾವ್, ಗ್ರೇಡ್ -೨ ತಹಸೀಲ್ದಾರ್ ರಂಗಮ್ಮ, ಉಪತಹಸೀಲ್ದಾರ್ ಮಂಜಾನಾಯ್ಕ, ಅರಸು, ರಾಜಸ್ವ ನಿರೀಕ್ಷಕ ಪ್ರಶಾಂತ್, ಶಿರಸ್ತೇದಾರ್ ರಾಧಕೃಷ್ಣ ಭಟ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ತಾಲೂಕು ಕಛೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.  


Friday, February 18, 2022

ಫೆ.೧೯ರಂದು ಹಾನಗಲ್ ಕುಮಾರೇಶ್ವರ ಶಿವಯೋಗಿಗಳ ಪುಣ್ಯಸ್ಮರಣೆ

ಹಾನಗಲ್ ಕುಮಾರೇಶ್ವರ ಶಿವಯೋಗಿ
    ಭದ್ರಾವತಿ, ಫೆ. ೧೮: ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಹಾನಗಲ್ ಕುಮಾರೇಶ್ವರ ಶಿವಯೋಗಿಗಳ ಪುಣ್ಯಸ್ಮರಣೆ ಹಾಗು ಸಮಾಜದ ನೂತನ ಚುನಾಯಿತ ಪ್ರತಿನಿಧಿಗಳಿಗೆ ಸನ್ಮಾನ ಸಮಾರಂಭ ಫೆ.೧೯ರಂದು ಬೆಳಿಗ್ಗೆ ೧೧ ಗಂಟೆ ಸಿದ್ದರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
    ಶ್ರೀಮದ್ ರಂಭಾಪುರಿ ಶಾಖಾ ಹಿರೇಮಠ ಬಿಳಿಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದು, ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷೆ ನಂದಿನಿ ಮಲ್ಲಿಕಾರ್ಜುನ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಬಿ.ಕೆ ಸಂಗಮೇಶ್ವರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ನಗರಸಭೆ ಅಧ್ಯಕ್ಷೆ ಗೀತಾರಾಜ್‌ಕುಮಾರ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.
    ಹಟ್ಟಿ ಚಿನ್ನದ ಗಣಿ ನಿಗಮದ ನಿರ್ದೇಶಕ ಕೂಡ್ಲಿಗೆರೆ ಹಾಲೇಶ್, ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ದೇಶಕ ಮಂಗೋಟೆ ರುದ್ರೇಶ್, ನಗರಸಭೆ ಸದಸ್ಯರಾದ ಬಿ.ಕೆ ಮೋಹನ್, ಬಿ.ಎಂ ಮಂಜುನಾಥ್(ಟೀಕು), ಅನುಪಮ ಚನ್ನೇಶ್, ನಾಮನಿರ್ದೇಶಕ ಸದಸ್ಯ ರವಿಕುಮಾರ್ ಮತ್ತು ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಮಾಜಿ ಅಧ್ಯಕ್ಷ ಸಿದ್ದಲಿಂಗಯ್ಯರವರಿಗೆ ಸನ್ಮಾನ ನಡೆಯಲಿದೆ.

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟ ಅಸ್ತಿತ್ವಕ್ಕೆ

ಫೆ.೨೧ರಂದು ಒಕ್ಕೂಟದ ಲೋಕಾರ್ಪಣೆ, ಕಾರ್ಯಾಲಯ ಉದ್ಘಾಟನೆ


ಭದ್ರಾವತಿಯಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟದ ರಾಜ್ಯಾಧ್ಯಕ್ಷ ವಿ. ವಿನೋದ್ ಹಾಗು ಪದಾಧಿಕಾರಿಗಳು ಉಪಸ್ಥಿತರಿದ್ದರು.
    ಭದ್ರಾವತಿ, ಫೆ. ೧೮: ಕಾರ್ಮಿಕರ ಪರವಾಗಿ ನಮ್ಮ ಹೋರಾಟ ನಿರಂತರವಾಗಿದ್ದು, ಕೇಂದ್ರ ಹಾಗು ರಾಜ್ಯ ಸರ್ಕಾರಗಳಿಂದ ಕಾರ್ಮಿಕರಿಗೆ ಲಭ್ಯವಿರುವ ಸೌಲಭ್ಯಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಕಳೆದ ೩ ವರ್ಷಗಳಿಂದ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟ ಪ್ರಾಮಾಣಿಕವಾಗಿ ಶ್ರಮಿಸುತ್ತಿದೆ.  ಈ ಒಕ್ಕೂಟ ಇದೀಗ ಕಾರ್ಮಿಕ ಇಲಾಖೆಯಲ್ಲಿ ಅಧಿಕೃತವಾಗಿ ನೋಂದಾಣಿಯಾಗುವ ಮೂಲಕ ಫೆ.೨೧ರಂದು ಕಛೇರಿಯ ಉದ್ಘಾಟನೆಗೆ ಮುಂದಾಗಿದೆ ಎಂದು ಒಕ್ಕೂಟದ ರಾಜ್ಯಾಧ್ಯಕ್ಷ ವಿ. ವಿನೋದ್ ಹೇಳಿದರು.
    ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ, ಬಡವ, ದೀನದಲಿತರ ಪರವಾಗಿ ಸರ್ಕಾರಿದಂದ ಸಿಗುವ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ಕಾರ್ಮಿಕರಿಗೆ ತಲುಪಿಸುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಲಾಗಿದೆ. ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಈ ಕಾರ್ಮಿಕರಿಗೆ ಇದುವರೆಗೂ ಇಎಸ್‌ಐ ಸೌಲಭ್ಯ ಒದಗಿಸದೆ ಇರುವುದು ದುರಾದೃಷ್ಟಕರ ಸಂಗತಿಯಾಗಿದೆ. ಈ ನಡುವೆ ಕೇಂದ್ರ ಸರ್ಕಾರ ಕೈಗಾರಿಕೋದ್ಯಮಿಗಳ ಪರವಾಗಿ ಹಾಗು ಕಾರ್ಮಿಕರ ವಿರುದ್ಧವಾಗಿ ಕಾನೂನುಗಳನ್ನು ಜಾರಿಗೆ ತರಲು ಹೊರಟಿರುವುದು ವಿಷಾದನೀಯ ಬೆಳವಣಿಗೆಯಾಗಿದೆ. ಇದರ ವಿರುದ್ಧ ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದರು.
    ಒಕ್ಕೂಟ ಪ್ರಸ್ತುತ ಸುಮಾರು ೫೦೦ ಸದಸ್ಯರನ್ನು ಒಳಗೊಂಡಿದ್ದು, ಸರ್ಕಾರದಿಂದ ಲಭ್ಯವಾದ ಸುರಕ್ಷತಾ ಹಾಗು ಪ್ರತಿರಕ್ಷತಾ ಮತ್ತು ಸಲಕರಣೆ ಕಿಟ್‌ಗಳನ್ನು ವಿತರಿಸಲಾಗಿದೆ. ಕಾರ್ಮಿಕರ ಗುರುತಿನ ಚೀಟಿ, ಇ-ಶ್ರಮ್ ಕಾರ್ಡ್ ನೋಂದಾಣಿ ಸೇರಿದಂತೆ ಇನ್ನಿತರ ಯೋಜನೆಗಳನ್ನು ಕಲ್ಪಿಸಿಕೊಡಲಾಗಿದೆ. ರಾಜ್ಯದ ಇತರ ಜಿಲ್ಲೆಗಳಲ್ಲೂ ಮುಂದಿನ ದಿನಗಳಲ್ಲಿ ಒಕ್ಕೂಟ ಕಾರ್ಯಾರಂಭ ಮಾಡಲಿದೆ.  ನೋಂದಾಣಿಗೊಂಡಿರುವ ಒಕ್ಕೂಟವನ್ನು ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ಫೆ. ೨೧ರಂದು ನಗರದ ಚನ್ನಗಿರಿ ರಸ್ತೆಯಲ್ಲಿರುವ ಶ್ರೀ ಗಂಗಾಪರಮೇಶ್ವರಿ ಸಮುದಾಯ ಭವನದ ಕಟ್ಟಡದಲ್ಲಿ ತೆರೆಯಲಾಗಿರುವ ಕಾರ್ಯಾಲಯದಲ್ಲಿ ಲೋಕಾರ್ಪಣೆಗೊಳಿಸಲಿದ್ದು, ಸಮಾರಂಭಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಚಾಲನೆ ನೀಡಲಿದ್ದಾರೆ.
    ಕಾರ್ಯಾಲಯವನ್ನು ಕಾರ್ಮಿಕ ಅಧಿಕಾರಿ ಸಿ.ಬಿ ರಂಗಯ್ಯ ಮತ್ತು ಶಾಶ್ವತ ನಾಮಫಲಕವನ್ನು ಕಾರ್ಮಿಕ ನಿರೀಕ್ಷಕಿ ಮುಮ್ತಾಜ್ ಬೇಗಂ ಉದ್ಘಾಟಿಸಲಿದ್ದಾರೆ. ತಹಸೀಲ್ದಾರ್ ಆರ್. ಪ್ರದೀಪ್ ಗಣ್ಯರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಲಿದ್ದು, ಡಿಎಸ್‌ಎಸ್ ಮುಖಂಡ ಸತ್ಯ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದು, ಒಕ್ಕೂಟದ ರಾಜ್ಯಾಧ್ಯಕ್ಷ ವಿ. ವಿನೋದ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
    ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಸಮಿತಿ ಉಪಾಧ್ಯಕ್ಷರಾದ ಶಶಿಕುಮಾರ್, ಎನ್. ವೆಂಕಟೇಶ್, ಬಿ. ರಾಜಾಚಾರಿ, ಪ್ರಧಾನ ಕಾರ್ಯದರ್ಶಿ ಎಂ. ಕಂದನ್, ಕಾರ್ಯದರ್ಶಿ ಎಸ್. ಕುಮಾರ್, ಸಹ ಕಾರ್ಯದರ್ಶಿಗಳಾದ ಬಿ.ಎಸ್. ಸುಶೀಲ, ಎಸ್. ವೆಂಕಟೇಶ್, ಖಜಾಂಚಿ ಚೆಲುವರಾಜ್, ನಿರ್ದೇಶಕರಾದ ಪಿ. ಏಳುಮಲೈ, ಬಿ.ಆರ್ ಯಲ್ಲಪ್ಪ, ಸುಬ್ರಮಣಿ, ಎನ್. ವಸಂತಕುಮಾರ್, ಎ. ಶಶಿಕುಮಾರ್, ವಿ. ಅರವಿಂದ್, ಕಾರ್ಯಕಾರಿ ಸಮಿತಿ ಸದಸ್ಯರಾದ ಪಿ. ದೊರೈ, ಶ್ರೀನಿವಾಸ್, ಎಚ್. ನಿಂಗರಾಜ್, ಎಂ. ಪವಿತ್ರ, ಜಿಲ್ಲಾ ಸಮಿತಿ ಅಧ್ಯಕ್ಷ ಎಂ. ಅರುಳ್, ಉಪಾಧ್ಯಕ್ಷರಾದ ಎಂ. ಸುಧಾಕರ್, ಟಿ. ವಡಿವೇಲು, ಪ್ರಧಾನ ಕಾರ್ಯದರ್ಶಿ ಎಸ್. ರಾಮು, ನಿರ್ದೇಶಕರಾದ ಕೆ. ಅಶೋಕ್, ಕೆ. ಶ್ರೀನಿವಾಸ, ಬಸವರಾಜ, ಎಸ್. ನಾಗರಾಜ, ಎನ್. ಸುರೇಶ್ ಮತ್ತು ರಾಧಕೃಷ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Thursday, February 17, 2022

ಪ್ರತಿಭಟನೆಗೆ ಮುಂದಾದ ವಿದ್ಯಾರ್ಥಿನಿಯರ ಮನವೊಲಿಕೆ : ತರಗತಿಗಳಿಗೆ ಹಾಜರು

ನ್ಯಾಯಾಲಯದ ತೀರ್ಪು ಬರುವವರೆಗೂ ತರಗತಿಗಳಿಗೆ ಹಾಜರಾಗುವುದಿಲ್ಲ


ಭದ್ರಾವತಿ ಹಳೇನಗರದ ಸಂಚಿ ಹೊನ್ನಮ್ಮ ಸರ್ಕಾರಿ ಬಾಲಕಿಯರ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿಜಾಬ್ ಧರಿಸಿಕೊಂಡು ಬಂದ ವಿದ್ಯಾರ್ಥಿನಿಯರು ಗುರುವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮುಂಭಾಗ ಪ್ರತಿಭಟನೆಗೆ ಮುಂದಾದ ಘಟನೆ ನಡೆದಿದೆ.

    ಭದ್ರಾವತಿ, ಫೆ. ೧೭: ಹಳೇನಗರದ ಸಂಚಿ ಹೊನ್ನಮ್ಮ ಸರ್ಕಾರಿ ಬಾಲಕಿಯರ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿಜಾಬ್ ಧರಿಸಿಕೊಂಡು ಬಂದ ವಿದ್ಯಾರ್ಥಿನಿಯರು ಗುರುವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮುಂಭಾಗ ಪ್ರತಿಭಟನೆಗೆ ಮುಂದಾದ ಘಟನೆ ನಡೆದಿದೆ.
    ಬುಧವಾರ ಹಿಜಾಬ್ ಧರಿಸಿಕೊಂಡು ಕಾಲೇಜಿಗೆ ಬಂದಿದ್ದ ವಿದ್ಯಾರ್ಥಿನಿಯರಿಗೆ ತಹಸೀಲ್ದಾರ್ ಹಾಗು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪ್ರಾಂಶುಪಾಲರು, ಉಪ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ನ್ಯಾಯಾಲಯದ ಆದೇಶ ಹಾಗು ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸುವ ಜೊತೆಗೆ ಹಿಜಾಬ್ ಧರಿಸದೆ ತರಗತಿಗಳಿಗೆ ಹಾಜರಾಗುವಂತೆ ಮನವೊಲಿಕೆ ಮಾಡುವಲ್ಲಿ ಯಶಸ್ವಿಯಾಗಿದ್ದರು. ಆದರೆ ಕಾಲೇಜು ವಿಭಾಗದ ವಿದ್ಯಾರ್ಥಿನಿಯರು ತರಗತಿಗಳಿಗೆ ಹಾಜರಾಗದೆ ಮನೆಗಳಿಗೆ ಹಿಂದಿರುಗಿದ್ದರು. ಈ ನಡುವೆ ಗುರುವಾರ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿನಿಯರು ಪುನಃ ಹಿಜಾಬ್ ಧರಿಸಿಕೊಂಡು ಬಂದಿದ್ದು, ಈ ಹಿನ್ನಲೆಯಲ್ಲಿ ಈ ವಿದ್ಯಾರ್ಥಿನಿಯರನ್ನು ಶಾಲಾ ಮುಂಭಾಗದಲ್ಲಿಯೇ ತಡೆಯಲಾಗಿತ್ತು. ಈ ಹಿನ್ನಲೆಯಲ್ಲಿ ಈ ವಿದ್ಯಾರ್ಥಿನಿಯರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಗೆ ತೆರಳಿ ಪ್ರತಿಭಟನೆಗೆ ಮುಂದಾದರು.
    ಮಾಹಿತಿ ತಿಳಿದು ತಕ್ಷಣ ಸ್ಥಳಕ್ಕೆ ಆಗಮಿಸಿದ ಅಂಜುಮಾನ್ ಇಸ್ಲಾವುಲ್ ಮುಸ್ಲಿಮೀನ್ ಅಧ್ಯಕ್ಷ ಮುರ್ತುಜಾ ಖಾನ್, ಪ್ರಸ್ತುತ ನ್ಯಾಯಾಲಯದ ಆದೇಶ ಹಾಗು ಸರ್ಕಾರದ ನಿಯಮಗಳನ್ನು ಪಾಲಿಸುವುದು ಅನಿವಾರ್ಯವಾಗಿದ್ದು, ಈ ಹಿನ್ನಲೆಯಲ್ಲಿ ವಿದ್ಯಾರ್ಥಿನಿಯರು ಇದಕ್ಕೆ ಪೂರಕವಾಗಿ ಸ್ಪಂದಿಸಿ ತರಗತಿಗಳಿಗೆ ಹಾಜರಾಗುವಂತೆ ಮನವಿ ಮಾಡಿದರು. ಅಲ್ಲದೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗು ಕಛೇರಿ ಸಿಬ್ಬಂದಿಗಳು ಸಹ ವಿದ್ಯಾರ್ಥಿನಿಯರಿಗೆ ಸೂಕ್ತ ತಿಳುವಳಿಕೆ ನೀಡಿದರು. ಈ ಹಿನ್ನಲೆಯಲ್ಲಿ ವಿದ್ಯಾರ್ಥಿನಿಯರು  ಮೂಲಕ ಮನವೊಲಿಸಿ ತರಗತಿಗಳಿಗೆ ಹಾಜರಾದರು.
    ಮನವೊಲಿಕೆ ವಿಫಲ : ಹಿಜಾಬ್ ಮೊದಲು, ನಂತರ ಶಿಕ್ಷಣ
    ನಗರದ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಾಲೇಜಿನಲ್ಲಿ ಕೆಲವು ದಿನಗಳವರೆಗೆ ತಣ್ಣಗಾಗಿದ್ದ ಹಿಜಾಬ್ ವಿವಾದ ಗುರುವಾರ ಪುನಃ ಕಾಣಿಸಿಕೊಂಡಿದೆ. ನಗರದಲ್ಲಿ ಮೊದಲ ಬಾರಿಗೆ ಹಿಜಾಬ್ ವಿವಾದ ಈ ಕಾಲೇಜಿನಿಂದಲೇ ಆರಂಭಗೊಂಡಿದ್ದು, ಆರಂಭದಲ್ಲಿ ಬಿಗುವಿನ ವಾತಾವರಣ ಕಂಡು ಬಂದರೂ ಸಹ ಇದುವರೆಗೂ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ.
    ಹಿಜಾಬ್ ವಿಚಾರಣೆ ಉಚ್ಛ ನ್ಯಾಯಾಲಯದಲ್ಲಿ ಆರಂಭಗೊಂಡ ನಂತರ ಕಾಲೇಜಿನ ಆಡಳಿತ ಮಂಡಳಿ ಎಚ್ಚರಿಕೆ ನಡೆಗಳನ್ನು ಅನುಸರಿಸಿದ ಹಿನ್ನಲೆಯಲ್ಲಿ ವಿವಾದ ತಣ್ಣಗಾಗಿದ್ದು, ಬುಧವಾರ ಕಾಲೇಜು ಆರಂಭಗೊಂಡರೂ ಸಹ ಹಿಜಾಬ್ ಧರಿಸುವ ವಿದ್ಯಾರ್ಥಿನಿಯರು ಕಾಲೇಜಿಗೆ ಆಗಮಿಸದೆ ಮನೆಗಳಿಲ್ಲಿಯೇ ಉಳಿದುಕೊಂಡಿದ್ದರು. ಆದರೆ ಗುರುವಾರ ಏಕಾಏಕಿ ಹಿಜಾಬ್ ಧರಿಸಿಕೊಂಡು ಕಾಲೇಜಿಗೆ ಆಗಮಿಸಿದ್ದು, ಈ ವಿದ್ಯಾರ್ಥಿನಿಯರನ್ನು ಕಾಲೇಜು ಮಂಡಳಿ ತರಗತಿಗಳಿಗೆ ಕಳುಹಿಸದೆ ಸುಮಾರು ೨ ಗಂಟೆಗೂ ಹೆಚ್ಚು ಸಮಯ ನ್ಯಾಯಾಲಯದ ಆದೇಶ ಹಾಗು ಸರ್ಕಾರದ ಕ್ರಮಗಳನ್ನು ವಿವರಿಸುವ ಮೂಲಕ ಮನವೊಲಿಕೆಗೆ ಪ್ರಯತ್ನಿಸಿತು. ಆದರೆ ಇದಕ್ಕೆ ಒಪ್ಪದ ವಿದ್ಯಾರ್ಥಿನಿಯರು ನಮಗೆ ಮೊದಲು ಹಿಜಾಬ್ ಮುಖ್ಯವಾಗಿದ್ದು, ನಂತರ ಶಿಕ್ಷಣ ಮುಖ್ಯವಾಗಿದೆ. ಈ ಹಿನ್ನಲೆಯಲ್ಲಿ ನಾವುಗಳು ನ್ಯಾಯಾಲಯದ ತೀರ್ಪು ಬರುವವರೆಗೂ ಕಾಲೇಜಿಗೆ ಬರುವುದಿಲ್ಲ ಎಂದು ಬಿಗಿಪಟ್ಟು ಹಿಡಿಯುವ ಜೊತೆಗೆ ಈ ಸಂಬಂಧ ವಿದ್ಯಾರ್ಥಿನಿಯರು ಮುಚ್ಚಳಿಕೆ ಪತ್ರ ಬರೆದುಕೊಟ್ಟು ಮನೆಗಳಿಗೆ ಹಿಂದಿರುಗಿದ್ದಾರೆ.