Wednesday, March 23, 2022

ರೆಸ್ಟೋರೆಂಟ್, ಮದ್ಯದಂಗಡಿ ಬೇರೆಡೆಗೆ ಸ್ಥಳಾಂತರಿಸಿ ಶಾಂತಿ ಸುವ್ಯವಸ್ಥೆ ಕಾಪಾಡಿ

ಭದ್ರಾವತಿ ನಗರಸಭೆ ವ್ಯಾಪ್ತಿಯ ಜನ್ನಾಪುರ ವಾಣಿಜ್ಯ ರಸ್ತೆಯಲ್ಲಿ ರೆಸ್ಟೋರೆಂಟ್ ಮತ್ತು ಮದ್ಯದಂಗಡಿಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಇವುಗಳನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಆಗ್ರಹಿಸಿ ಬುಧವಾರ ಹುತ್ತಾ ಕಾಲೋನಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಸಮೀಪದಲ್ಲಿರುವ ಆಟೋ ನಿಲ್ದಾಣ ಬಳಿ ಪ್ರತಿಭಟನಾ ಧರಣಿ ಸತ್ಯಾಗ್ರಹ ನಡೆಸಲಾಯಿತು.
    ಭದ್ರಾವತಿ: ನಗರಸಭೆ ವ್ಯಾಪ್ತಿಯ ಜನ್ನಾಪುರ ವಾಣಿಜ್ಯ ರಸ್ತೆಯಲ್ಲಿ ರೆಸ್ಟೋರೆಂಟ್ ಮತ್ತು ಮದ್ಯದಂಗಡಿಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಇವುಗಳನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಆಗ್ರಹಿಸಿ ಬುಧವಾರ ಹುತ್ತಾ ಕಾಲೋನಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಸಮೀಪದಲ್ಲಿರುವ ಆಟೋ ನಿಲ್ದಾಣ ಬಳಿ ಪ್ರತಿಭಟನಾ ಧರಣಿ ಸತ್ಯಾಗ್ರಹ ನಡೆಸಲಾಯಿತು.
    ಸ್ಥಳೀಯ ಮುಖಂಡ ಶಶಿಕುಮಾರ್ ಎಸ್. ಗೌಡ ಮಾತನಾಡಿ, ಜನ್ನಾಪುರ ವಾಣಿಜ್ಯ ರಸ್ತೆ ನಗರಸಭೆ ಶಾಖಾ ಕಛೇರಿ, ನಗರ ಆರೋಗ್ಯ ಕೇಂದ್ರ, ಕ್ಲಿನಿಕ್‌ಗಳು, ಶಾಲೆಗಳು, ದೇವಸ್ಥಾನ, ನ್ಯಾಯಬೆಲೆ ಅಂಗಡಿ, ಬ್ಯಾಂಕ್‌ಗಳು, ಔಷಧಿ ಹಾಗು ದಿನಸಿ ಅಂಗಡಿಗಳು ಸೇರಿದಂತೆ ಇನ್ನಿತರ ಅಂಗಡಿ ಮುಂಗಟ್ಟುಗಳಿಂದ ಕೂಡಿದೆ. ಇದರಿಂದಾಗಿ ಫಿಲ್ಟರ್‌ಶೆಡ್, ವೇಲೂರ್‌ಶೆಡ್, ಕೂಲಿಬ್ಲಾಕ್, ಆಂಜನೇಯ ಆಗ್ರಹಾರ, ನ್ಯೂಕಾಲೋನಿ, ವಿದ್ಯಾಮಂದಿರ, ಹಾಲಪ್ಪಶೆಡ್, ಹಾಜಪ್ಪ ಲೇಔಟ್, ಕೆ.ಸಿ ಬ್ಲಾಕ್, ಗಣೇಶ್‌ಕಾಲೋನಿ, ಜಿಂಕ್‌ಲೈನ್, ಭಂಡಾರಹಳ್ಳಿ ಸೇರಿದಂತೆ ಸುತ್ತಮುತ್ತನ ನಿವಾಸಿಗಳು ಪ್ರತಿ ದಿನ ಸುಮಾರು ೧೦ ಸಾವಿರಕ್ಕೂ ಹೆಚ್ಚು ಮಂದಿ ಈ ರಸ್ತೆಯಲ್ಲಿ ಸಂಚರಿಸುತ್ತಾರೆ ಎಂದರು.
    ಈ ರಸ್ತೆಯಲ್ಲಿ ಕಾನೂನು ಬಾಹಿರವಾಗಿ ಸುಮಾರು ೫ ರೆಸ್ಟೋರೆಂಟ್‌ಗಳು ಮತ್ತು ಅಬಕಾರಿ ನಿಯಮಗಳನ್ನು ಪಾಲನೆ ಮಾಡದ ಸಿಎಲ್೨ ಎರಡು ಹಾಗು ಎಂಎಸ್‌ಐಎಲ್ ಒಂದು ಮದ್ಯದಂಗಡಿ ಇದ್ದು, ಈ ಭಾಗದಲ್ಲಿ ಮದ್ಯವ್ಯಸನಿಗಳ ಹಾವಳಿ ಹೆಚ್ಚಾಗಿದೆ. ಇದರಿಂದಾಗಿ ಆಶಾಂತಿ ವಾತಾವರಣ ನಿರ್ಮಾಣವಾಗುತ್ತಿದ್ದು,  ಮಹಿಳೆಯರು, ವಯೋವೃದ್ಧರು, ಶಾಲಾ ಮಕ್ಕಳು ಸೇರಿದಂತೆ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಕೆಲವು ದಿನಗಳ ಹಿಂದೆ ಈ ರಸ್ತೆಯಲ್ಲಿ ಅಹಿತಕರ ಘಟನೆಯೊಂದು ನಡೆದಿದ್ದು, ಆದರೂ ಸಹ ಸಂಬಂಧಪಟ್ಟ ಇಲಾಖೆಯವರು ಗಮನ ಹರಿಸುತ್ತಿಲ್ಲ ಎಂದು ಆರೋಪಿಸಿದರು.
    ರೆಸ್ಟೋರೆಂಟ್ ಮತ್ತು ಮದ್ಯದಂಗಡಿಗಳನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ತಕ್ಷಣ ಬೇರೆಡೆಗೆ ಸ್ಥಳಾಂತರಿಸಿ ಕಾನೂನು ಸುವ್ಯವಸ್ಥೆ ಕಾಪಾಡಬೇಕು. ಇಲ್ಲವಾದಲ್ಲಿ ಶಿವಮೊಗ್ಗ ಜಿಲ್ಲೆಗೆ ಏ.೨೪ರಂದು ಆಗಮಿಸಲಿರುವ  ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಪಾದಯಾತ್ರೆ ಮೂಲಕ ಭೇಟಿ ಮಾಡಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ದೂರು ನೀಡುವುದಾಗಿ ಎಚ್ಚರಿಸಿದರು.
    ಕರುನಾಡು ಹಿತರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ವೈ. ಶಶಿಕುಮಾರ್, ಅಖಿಲ ಭಾರತ ವೀರಶೈವ ಮಹಾಸಭಾ ಯುವ ಘಟಕದ ಅಧ್ಯಕ್ಷ ಮಂಜುನಾಥ್ ಸೇರಿದಂತೆ ಇನ್ನಿತರರು ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.


ಗ್ರಾಮಾಂತರ ಕಾಂಗ್ರೆಸ್ ಯುವ ಘಟಕದಿಂದ ಭಗತ್ ಸಿಂಗ್ ಪುಣ್ಯ ಸ್ಮರಣೆ

ಭದ್ರಾವತಿಯಲ್ಲಿ ವೀರಯೋಧರನ್ನು ಸನ್ಮಾನಿಸಿ ಗೌರವಿಸುವ ಮೂಲಕ ಗ್ರಾಮಾಂತರ ಯುವ ಕಾಂಗ್ರೆಸ್ ವತಿಯಿಂದ ಬುಧವಾರ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಹೋರಾಟಗಾರ ಭಗತ್ ಸಿಂಗ್ ಪುಣ್ಯ ಸ್ಮರಣೆ ವಿಶೇಷವಾಗಿ ಆಚರಿಸಲಾಯಿತು.  
    ಭದ್ರಾವತಿ, ಮಾ. ೨೩: ಗ್ರಾಮಾಂತರ ಯುವ ಕಾಂಗ್ರೆಸ್ ವತಿಯಿಂದ ಬುಧವಾರ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಹೋರಾಟಗಾರ ಭಗತ್ ಸಿಂಗ್ ಪುಣ್ಯ ಸ್ಮರಣೆ ವಿಶೇಷವಾಗಿ ಆಚರಿಸಲಾಯಿತು.  
    ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಗೃಹ ಕಛೇರಿಯಲ್ಲಿ ದೇಶ ರಕ್ಷಣೆಯಲ್ಲಿ ತೊಡಗಿಸಿಕೊಂಡಿರುವ ವೀರಯೋಧರನ್ನು ಸನ್ಮಾನಿಸಿ ಗೌರವಿಸುವ ಮೂಲಕ ಭಗತ್ ಸಿಂಗ್‌ರವರ ದೇಶ ಪ್ರೇಮ, ಆದರ್ಶತನ ಹಾಗು ಕ್ರಾಂತಿಕಾರಿ ಹೋರಾಟಗಳನ್ನು ಸ್ಮರಿಸಲಾಯಿತು. ಇದಕ್ಕೂ ಮೊದಲು ನಗರದ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತದಿಂದ ಬೈಕ್ ರ್‍ಯಾಲಿ ನಡೆಸಲಾಯಿತು.
    ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ ಆಫ್ತಬ್ ಅಹಮದ್ ನೇತೃತ್ವ ವಹಿಸಿದ್ದರು. ಉದ್ಯಮಿ ಬಿ.ಕೆ ಜಗನ್ನಾಥ್, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯ ವಕ್ತಾರ ಆಮೋಸ್, ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಬಿ. ಗಂಗಾಧರ್, ಅಸಂಘಟಿತ ಕಾರ್ಮಿಕ ವಲಯ ನಗರ ಘಟಕದ ಅಧ್ಯಕ್ಷ ಐಸಾಕ್ ಲಿಂಕನ್, ಗ್ರಾಮಾಂತರ ಯುವ ಕಾಂಗ್ರೆಸ್ ಉಪಾಧ್ಯಕ್ಷ ತಬ್ರೆಜ್ ಖಾನ್, ನವೀನ್ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ಸಜ್ಜದ್, ಆನಂದ್, ವರುಣ್ ಹಾಗು ಕಾರ್ಯಕರ್ತರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

ಸಾರ್ವಜನಿಕರ ಕೆಲಸಗಳನ್ನು ನಿಗದಿತ ಅವಧಿಯಲ್ಲಿ ಮಾಡಿಕೊಡುವುದು ಸರ್ಕಾರಿ ಅಧಿಕಾರಿಗಳ ಜವಾಬ್ದಾರಿ

ವಿನಾಕಾರಣ ಅಲೆಯುವಂತೆ ಮಾಡದಿರಿ, ಕರ್ತವ್ಯದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಿ 

ಭದ್ರಾವತಿ ಹಳೇ ತಾಲೂಕು ಕಛೇರಿ ಆವರಣದಲ್ಲಿ ಭ್ರಷ್ಟಾಚಾರ ನಿಗ್ರಹ ದಳ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಜನ ಸಂಪರ್ಕ, ಅಹವಾಲು ಸ್ವೀಕಾರ ಸಭೆಯ ನೇತೃತ್ವ ವಹಿಸಿ ಪೊಲೀಸ್ ಉಪಾಧೀಕ್ಷಕ ವಸಂತಕುಮಾರ್ ಮಾತನಾಡಿದರು. 
    ಭದ್ರಾವತಿ, ಮಾ. ೨೩: ಸಾರ್ವಜನಿಕರನ್ನು ಕಛೇರಿಯಿಂದ ಕಛೇರಿಗೆ ಅಲೆಯುವಂತೆ ಮಾಡದೆ ನಿಗದಿತ ಸಮಯದಲ್ಲಿ ಅವರ ಕೆಲಸ ಮಾಡಿಕೊಡುವುದು ಸರ್ಕಾರಿ ಅಧಿಕಾರಿಗಳ ಜವಾಬ್ದಾರಿಯಾಗಿದ್ದು, ಅಲ್ಲದೆ ಗ್ರಾಮೀಣ ಭಾಗದಿಂದ ಬರುವ ಜನರಿಗೆ ತಮ್ಮ ಕೆಲಸದ ಬಗ್ಗೆ ತಿಳುವಳಿಕೆ ಮೂಡಿಸಬೇಕು. ವಿನಾಕಾರಣ ಅವರೊಂದಿಗೆ ಸಂಘರ್ಷಕ್ಕೆ ಇಳಿಯಬಾರದು. ಕರ್ತವ್ಯ ನಿರ್ವಹಣೆಯಲ್ಲಿ ಯಾವುದೇ ರೀತಿ ಭ್ರಷ್ಟಾಚಾರವಿರಬಾರದು ಎಂದು ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಉಪಾಧೀಕ್ಷಕ ವಸಂತಕುಮಾರ್ ಹೇಳಿದರು. 
ಅವರು ಬುಧವಾರ ಹಳೇ ತಾಲೂಕು ಕಛೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜನ ಸಂಪರ್ಕ, ಅಹವಾಲು ಸ್ವೀಕಾರ ಸಭೆಯ ನೇತೃತ್ವ ವಹಿಸಿ ಮಾತನಾಡಿದರು. 
ಸರ್ಕಾರಿ ಅಧಿಕಾರಿಗಳ ವಿರುದ್ಧ ಸಾಕಷ್ಟು ದೂರುಗಳು ಬರುತ್ತಿದ್ದು, ಸರ್ಕಾರಿ ಇಲಾಖೆಗಳ ಆಡಳಿತ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಮಾಡಬೇಕೆಂಬುದು ಇಲಾಖೆಯ ಆಶಯವಾಗಿದೆ. ಇದಕ್ಕೆ ಪೂರಕವಾಗಿ ಅಧಿಕಾರಿಗಳು ನಡೆದುಕೊಳ್ಳಬೇಕು. ತಮ್ಮ ಕರ್ತವ್ಯದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಬೇಕೆಂದರು. 
ಜನರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸದ ಹಾಗು ಅವರ ಕೆಲಸಗಳನ್ನು ಮಾಡಿಕೊಡಲು ವಿನಾಕಾರಣ ತೊಂದರೆ ಕೊಡುವ ಅಧಿಕಾರಿಗಳ ವಿರುದ್ಧ ಇಲಾಖೆಗೆ ದೂರು ನೀಡಬಹುದು. ಇಲಾಖೆ ದೂರುಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿ ನ್ಯಾಯ ಒದಗಿಸಿಕೊಡಲಿದೆ ಎಂದರು. 
ಪೊಲೀಸ್ ಇನ್ಸ್‌ಪೆಕ್ಟರ್ ಇಮ್ರಾನ್ ಬೇಗ್, ಇಲಾಖೆಯ ಸುಧೀಂದ್ರ, ಅರುಣ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ನಗರಸಭೆ ಪೌರಾಯುಕ್ತ ಕೆ. ಪರಮೇಶ್, ನಗರ ಆಹಾರ ನಿರೀಕ್ಷಕ ಎ.ಟಿ ಬಸವರಾಜ್, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ಮೆಸ್ಕಾಂ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು. ಸ್ಥಳದಲ್ಲಿಯೇ ಹಲವಾರು ದೂರುಗಳು ಸಲ್ಲಿಕೆಯಾದವು. ಉಪ ತಹಸೀಲ್ದಾರ್ ಮಂಜನಾಯ್ಕ ನಿರೂಪಿಸಿದರು. 

Tuesday, March 22, 2022

ಕಾನೂನುಗಳ ಅರಿವಿನಿಂದ ಉತ್ತಮ ಸಮಾಜ ನಿರ್ಮಾಣ : ಕಾಳಿದಾಸ್ ನಾಯ್ಕ

ಭದ್ರಾವತಿ ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘದ ನೇತೃತ್ವದಲ್ಲಿ ಮಂಗಳವಾರ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಗ್ರಾಹಕರ ಹಾಗೂ ಜಲ ದಿನಾಚರಣೆ ಕಾರ್ಯಕ್ರಮಕ್ಕೆ ಪ್ರಾಚಾರ್ಯ ಕಾಳಿದಾಸ್ ನಾಯ್ಕ ಚಾಲನೆ ನೀಡಿದರು.
    ಭದ್ರಾವತಿ, ಮಾ. ೨೨:  ಕಾನೂನುಗಳ ಅರಿವಿನಿಂದ ಉತ್ತಮ ಸಮಾಜ ನಿರ್ಮಾಣ ಮಾಡುವ ಜೊತೆಗೆ ನಮ್ಮ ಜವಾಬ್ದಾರಿ, ಹಕ್ಕುಗಳ ಅರಿವು ತಿಳಿಯುತ್ತದೆ ಎಂದು ಕೈಗಾರಿಕಾ ತರಬೇತಿ ಸಂಸ್ಥೆ ಪ್ರಾಂಶುಪಾಲ ಕಾಳಿದಾಸ್ ನಾಯ್ಕ ಹೇಳಿದರು.
    ಅವರು ತರಬೇತಿ ಸಂಸ್ಥೆಯಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘದ ನೇತೃತ್ವದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಗ್ರಾಹಕರ ಹಾಗೂ ಜಲ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
    ಗ್ರಾಹಕರ ಹಕ್ಕುಗಳ ರಕ್ಷಣೆ ಮಾಡಿಕೊಳ್ಳಲು ಇರುವ ಕಾನೂನು ಭಾಗದ ವಿಚಾರ ಹಾಗೂ ಜಲ ಸಂರಕ್ಷಣೆ ಮೂಲಕ ಭವಿಷ್ಯದಲ್ಲಿ ಅದನ್ನು ಹೇಗೆ ನಿಭಾಯಿಸಿಕೊಳ್ಳಲು ಸಾಧ್ಯ ಎಂಬ ವಿಚಾರಗಳ ಸಮಗ್ರ ಮಾಹಿತಿ ಭವಿಷ್ಯದ ಪೀಳಿಗೆಗೆ ಮನವರಿಕೆ ಮಾಡಿಕೊಡಲು ನೆರವಾಗಿದೆ ಎಂದರು.
    ಗ್ರಾಹಕರ ಹಕ್ಕು ಮತ್ತು ಅವರಿಗೆ ಸಿರುವ ನೆರವಿನ ಕುರಿತಾಗಿ ಮಾತನಾಡಿದ ವಕೀಲ ಮಹಮ್ಮದ್ ಇಲಿಯಾಸ್, ಪ್ರತಿಯೊಬ್ಬ ವ್ಯಕ್ತಿಯೂ ಒಂದಲ್ಲ ಒಂದು ರೀತಿಯಲ್ಲಿ ಗ್ರಾಹಕನಾಗಿ ತನ್ನ ಜವಾಬ್ದಾರಿ ನಿರ್ವಹಣೆ ಮಾಡುವ ಸಂದರ್ಭ ಒದಗಿ ಬರಲಿದೆ, ಇದರ ಜ್ಞಾನವಿದ್ದಲ್ಲಿ ಅವರಿಗೆ  ಸುಲಭವಾಗಿ ನೆರವು ಸಿಗುವ ಜೊತೆಗೆ ಅವರ ಹಕ್ಕುಗಳ ರಕ್ಷಣೆ ಆಗಲಿದೆ ಎಂದರು.
    ಜಲ ದಿನಾಚರಣೆ ಹಿನ್ನೆಲೆಯಲ್ಲಿ ಮಾತನಾಡಿದ ವಕೀಲ ಎಚ್.ವಿ ಆದರ್ಶ್, ಭೂಮಿಯ ಒಟ್ಟು ವಿಸ್ತೀರ್ಣದಲ್ಲಿ ಶೇ.೭೦ರಷ್ಟು ನೀರಿನಾಂಶವಿದ್ದು, ಉಳಿದ ಶೇ.೩೦ ಭೂಮಿ ಇದೆ, ಇಷ್ಟಾದರೂ ನೀರಿನ ಸಂರಕ್ಷಣೆ ಮಾಡಿಕೊಳ್ಳದಿದ್ದಲ್ಲಿ ಭವಿಷ್ಯದಲ್ಲಿ ಸಾಕಷ್ಟು ಸಮಸ್ಯೆ ಎದುರಿಸುವ ಪರಿಸ್ಥಿತಿ ಇದೆ ಎಂದರು.
    ಸಹಾಯಕ ಸರ್ಕಾರಿ ಅಭಿಯೋಜಕ ಎಂ.ಜಿ ತ್ಯಾಗರಾಜ್, ವಕೀಲರ ಸಂಘದ ಅಧ್ಯಕ್ಷ ಕೆ.ಎನ್ ಶ್ರೀಹರ್ಷ, ಪದಾಧಿಕಾರಿಗಳಾದ ಡಿ.ಎಂ.ವಿಶ್ವನಾಥ್,ವಿ.ಉದಯಕುಮಾರ್, ಎಸ್. ಮಂಜಪ್ಪ, ವಿಮಲ, ಶಿಕ್ಷಕರಾದ ಪುಟ್ಟಲಿಂಗಮೂರ್ತಿ, ಉದಯಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಮುಂಚೂಣಿಗೆ ಬರಲು ಎಲ್ಲರ ಸಹಕಾರ ಅಗತ್ಯ : ಶೃತಿ

ಭದ್ರಾವತಿ ಉಜ್ಜನಿಪುರದ ಡಾನ್ ಬಾಸ್ಕೋ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ಮಂಗಳವಾರ ಹೊಲಿಗೆ ತರಬೇತಿ ಸಮಾರೋಪ ಸಮಾರಂಭ ಹಾಗು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.  
    ಭದ್ರಾವತಿ, ಮಾ. ೨೨: ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಮುಂಚೂಣಿಗೆ ಬರಬೇಕು. ಈ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಸಹಾಯವಾಣಿ ಕೇಂದ್ರದ ಶೃತಿ ಹೇಳಿದರು.
    ಅವರು ಮಂಗಳವಾರ ಉಜ್ಜನಿಪುರದ ಡಾನ್ ಬಾಸ್ಕೋ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಹೊಲಿಗೆ ತರಬೇತಿ ಸಮಾರೋಪ ಸಮಾರಂಭ ಹಾಗು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ಮಹಿಳೆಯರು ಕೇವಲ ಮನೆಗೆ ಸೀಮಿತವಾಗದೆ ಸಮಾಜದ ಮುಖ್ಯ ವಾಹಿನಿನಲ್ಲಿ ಗುರುತಿಸಿಕೊಳ್ಳಬೇಕು. ಡಾನ್ ಬಾಸ್ಕೋ ಸಂಸ್ಥೆಯು ಮಹಿಳೆಯರಿಗೆ ವಿಶೇಷವಾಗಿ ಕೌಶಲ್ಯ ತರಬೇತಿ ಪ್ರಾರಂಭಿಸಿರುವುದು ಹೆಚ್ಚಿನ ಅನುಕೂಲವಾಗಿದ್ದು, ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದರು.
    ಡಾನ್ ಬಾಸ್ಕೋ ಸಂಸ್ಥೆಯ ನಿರ್ದೇಶಕ ಪಾದರ್ ಆರೋಗ್ಯ ರಾಜ್ ಮಾತನಾಡಿ, ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಮಹಿಳೆ ತನ್ನನ್ನು ತಾನು ಅರಿಯುವ ದಿನವಾಗಿದೆ. ಸಮಾಜದಲ್ಲಿ ಮಹಿಳೆಯರು ಸಹ ಘನತೆ, ಗೌರವದ ಬದುಕು ಕಟ್ಟಿಕೊಳ್ಳುವಂತಾಗಬೇಕು. ಎಲ್ಲಾ ಕ್ಷೇತ್ರಗಳಲ್ಲೂ ಮುಂಚೂಣಿಗೆ ಬರಬೇಕು. ಜೊತೆಗೆ ಕುಟುಂಬದಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿದ್ದು, ಮನೆಯೇ ಮೊದಲ ಪಾಠ ಶಾಲೆಯಾಗಿದೆ. ಮಕ್ಕಳಿಗೆ ಉತ್ತಮ ಸಂಸ್ಕಾರದ ಜೊತೆಗೆ ಅವರನ್ನು ಭವಿಷ್ಯದ ಪ್ರಜೆಗಳಾಗಿ ರೂಪಿಸಬೇಕು. ಈ ನಿಟ್ಟಿನಲ್ಲೂ ಸಹ ಹೆಚ್ಚಿನ ಗಮನ ಹರಿಸಬೇಕು. ಪುರುಷರನ್ನು ತಪ್ಪಾಗಿ ಅರ್ಥೈಸಿಕೊಳ್ಳದೆ ಇಬ್ಬರು ಸಹ ಸರಿಸಮಾನವಾಗಿ ಮುನ್ನಡೆಯಬೇಕು. ಇಬ್ಬರು ತಮ್ಮ ಜವಾಬ್ದಾರಿ ಅರಿತುಕೊಳ್ಳಬೇಕು. ಆಗ ಮಾತ್ರ ಉತ್ತಮ ಸಮಾಜ ನಿರ್ಮಾಣಗೊಳ್ಳಲು ಸಾಧ್ಯ ಎಂದರು.
    ಆಶಾ ಕಾರ್ಯಕರ್ತೆ ರಾಜೇಶ್ವರಿ ಮಾತನಾಡಿ, ಡಾನ್ ಬಾಸ್ಕೋ ಸಂಸ್ಥೆಯು ಬಡ ವರ್ಗದ ಜನರ ಏಳಿಗೆಗೆ ಶ್ರಮಿಸುತ್ತಿದ್ದು, ವಿಶೇಷವಾಗಿ ಮಹಿಳೆಯರ ಅಭಿವೃದ್ಧಿಗೆ ಹೆಚ್ಚಿನ ಗಮನ ಹರಿಸಿದೆ. ಕೋವಿಡ್-೧೯ರ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದ ಜನರು ಸೋಂಕಿನಿಂದ ರಕ್ಷಿಸಿಕೊಳ್ಳಲು ಅಗತ್ಯವಿರುವ ಸೌಲಭ್ಯಗಳನ್ನು ಕಲ್ಪಿಸಿಕೊಡುವಲ್ಲಿ ಯಶಸ್ವಿಯಾಗಿದೆ. ಅಲ್ಲದೆ ಆಶಾ ಕಾರ್ಯಕರ್ತೆಯರ ನೆರವಿಗೂ ಧಾವಿಸಿದೆ. ಈ ಹಿನ್ನಲೆಯಲ್ಲಿ ಸಂಸ್ಥೆಯ ಸೇವಾ ಕಾರ್ಯಕ್ಕೆ ಚಿರಋಣಿ ಎಂದರು.
    ಪ್ರಾಂಶುಪಾಲ ಪಾದರ್ ಜೋಮಿ, ಆಡಳಿತಾಧಿಕಾರಿ ಸೋನಿಜೆನ್ ಹಾಗು ತರಬೇತಿದಾರರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ೬ ಮಂದಿ ಆಶಾ ಕಾರ್ಯಕರ್ತೆಯರಿಗೆ ಗ್ರಾಮೀಣ ಪ್ರದೇಶದ ಜನರಿಗೆ ಉಚಿತವಾಗಿ ಸಕ್ಕರೆ ಖಾಯಿಲೆ ಪರೀಕ್ಷೆ ನಡೆಸಲು ಅನುಕೂಲವಾಗುವಂತೆ ಅಗತ್ಯವಿರುವ ಪರಿಕರ ವಿತರಿಸಲಾಯಿತು. ಡಾನ್ ಬಾಸ್ಕೋ ಸಂಸ್ಥೆ ಮೊದಲ ಬಾರಿಗೆ ಕಳೆದ ೩ ದಿನಗಳ ಹಿಂದೆ ಮಹಿಳೆಯರಿಗೆ ಉಚಿತ ಹೊಲಿಗೆ ತರಬೇತಿ ಆರಂಭಿಸಿದ್ದು, ತರಬೇತಿ ಪಡೆದವರು ತಮ್ಮ ಅನುಭವಗಳನ್ನು ಹಂಚಿಕೊಂಡರು.

ಮಾ.೨೩ರಂದು ಧರಣಿ ಸತ್ಯಾಗ್ರಹ


    ಭದ್ರಾವತಿ, ಮಾ. ೨೨: ನಗರದ ಜನ್ನಾಪುರ ವಾಣಿಜ್ಯ ರಸ್ತೆಯಲ್ಲಿರುವ ರೆಸ್ಟೋರೆಂಟ್‌ಗಳು ಮತ್ತು ಮದ್ಯದಂಗಡಿಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಹಿನ್ನಲೆಯಲ್ಲಿ ಇವುಗಳನ್ನು ಸ್ಥಳಾಂತರಗೊಳಿಸುವಂತೆ ಆಗ್ರಹಿಸಿ ಮಾ.೨೩ರಂದು ಬೆಳಿಗ್ಗೆ ೧೧ ಗಂಟೆಗೆ ವಿಶ್ವೇಶ್ವರಯ್ಯ ಆಟೋ ನಿಲ್ದಾಣದ ಸಮೀಪ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.
    ರೆಸ್ಟೋರೆಂಟ್‌ಗಳು ಮತ್ತು ಮದ್ಯದಂಗಡಿಗಳಿಂದ ಈ ಭಾಗದಲ್ಲಿ ಮದ್ಯವ್ಯಸನಿಗಳ ಹಾವಳಿ ಹೆಚ್ಚಾಗಿದ್ದು, ಇದರಿಂದಾಗಿ ಮಕ್ಕಳು, ಮಹಿಳೆಯರು ಮತ್ತು ವಯೋವೃದ್ಧರು ಓಡಾಡಲು ತೊಂದರೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಇವುಗಳನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. ಜನ್ನಾಪರ ಸುತ್ತಮುತ್ತಲ ವಾರ್ಡ್‌ಗಳ ಜನಪ್ರತಿನಿಧಿಗಳು, ವಿವಿಧ ಸಂಘ-ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಸ್ಥಳೀಯ ಮುಖಂಡರಾದ ಶಶಿಕುಮಾರ್ ಎಸ್ ಗೌಡ ಹಾಗು ಮಂಜುನಾಥ್ ಕೋರಿದ್ದಾರೆ.

ಮಾ.೨೩ ಜನಸಂಪರ್ಕ, ಅಹವಾಲು ಸ್ವೀಕಾರ ಸಭೆ

    ಭದ್ರಾವತಿ, ಮಾ. ೨೨: ತಾಲೂಕು ಕಛೇರಿ ಸಭಾಂಗಣದಲ್ಲಿ ಮಾ.೨೩ರಂದು ಮಧ್ಯಾಹ್ನ ೧೨ ಗಂಟೆಗೆ ಭ್ರಷ್ಟಾಚಾರ ನಿಗ್ರಹ ದಳ ವತಿಯಿಂದ ಜನಸಂಪರ್ಕ ಮತ್ತು ಅಹವಾಲು ಸ್ವೀಕಾರ ಸಭೆ ಹಮ್ಮಿಕೊಳ್ಳಲಾಗಿದೆ.
    ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಉಪಾಧೀಕ್ಷಕರು ಅಧ್ಯಕ್ಷತೆ ವಹಿಸಲಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಹಸೀಲ್ದಾರ್ ಆರ್. ಪ್ರದೀಪ್ ಕೋರಿದ್ದಾರೆ.