Thursday, March 24, 2022

ಶ್ರೀ ರಾಮರಾಜ್ಯ ಸಂಘದಿಂದ ‘ಅಪ್ಪು ನಮನ’

ಚಲನಚಿತ್ರ ನಟ, ಸಮಾಜ ಸೇವಕ ದಿವಂಗತ ಪವರ್ ಸ್ಟಾರ್ ಪುನೀತ್‌ರಾಜ್‌ಕುಮಾರ್‌ರವರ ಹುಟ್ಟುಹಬ್ಬ 'ಅಪ್ಪು ನಮನ' ಕಾರ್ಯಕ್ರಮ ಭದ್ರಾವತಿ ನಗರದ ಪ್ರತಿಷ್ಠಿತ ಸಂಘಟನೆಗಳಲ್ಲಿ ಒಂದಾದ ಜನ್ನಾಪುರ ಶ್ರೀ ರಾಮರಾಜ್ಯ ಸಂಘದ ವತಿಯಿಂದ ಆಚರಿಸಲಾಯಿತು.
    ಭದ್ರಾವತಿ, ಮಾ. ೨೪: ಚಲನಚಿತ್ರ ನಟ, ಸಮಾಜ ಸೇವಕ ದಿವಂಗತ ಪವರ್ ಸ್ಟಾರ್ ಪುನೀತ್‌ರಾಜ್‌ಕುಮಾರ್‌ರವರ ಹುಟ್ಟುಹಬ್ಬ 'ಅಪ್ಪು ನಮನ' ಕಾರ್ಯಕ್ರಮ ನಗರದ ಪ್ರತಿಷ್ಠಿತ ಸಂಘಟನೆಗಳಲ್ಲಿ ಒಂದಾದ ಜನ್ನಾಪುರ ಶ್ರೀ ರಾಮರಾಜ್ಯ ಸಂಘದ ವತಿಯಿಂದ ಆಚರಿಸಲಾಯಿತು.
    ಕಾರ್ಯಕ್ರಮವನ್ನು ಜೆಡಿಎಸ್ ಮುಖಂಡರಾದ ಶಾರದ ಅಪ್ಪಾಜಿ ಉದ್ಘಾಟಿಸಿದರು. ಪುನೀತ್‌ರಾಜ್‌ಕುಮಾರ್‌ರವರು ಚಿತ್ರರಂಗಕ್ಕೆ ನೀಡಿರುವ ಕೊಡುಗೆ ಹಾಗು ಅವರು ಕೈಗೊಂಡಿರುವ ಸಾಮಾಜಿಕ ಸೇವಾ ಕಾರ್ಯಗಳನ್ನು ಸ್ಮರಿಸಲಾಯಿತು.
    ನಗರಸಭಾ ಸದಸ್ಯರಾದ ಸವಿತಾ, ನಾಗರತ್ನ, ನಗರಸಭೆ ಮಾಜಿ ಸದಸ್ಯ ಎಂ. ರಾಜು, ಮುಖಂಡರಾದ ಉಮೇಶ್ ಸೇರಿದಂತೆ ಸ್ಥಳೀಯ ಮುಖಂಡರು ಮುಖಂಡರು. ಜನ್ನಾಪುರ, ಗಣೇಶ್ ಕಾಲೋನಿ, ಹುತ್ತಾಕಾಲೋನಿ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳ ನಿವಾಸಿಗಳು, ಪುನೀತ್‌ರಾಜ್‌ಕುಮಾರ್ ಅಭಿಮಾನಿಗಳು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಪಾಲ್ಗೊಂಡಿದ್ದರು.

ನಾ ಕಂಡ ಪೌರಾಯುಕ್ತರು ಅಭಿನಂದನ ಕೃತಿ ಬಿಡುಗಡೆ


    ಭದ್ರಾವತಿ, ಮಾ. ೨೪: ರಂಗಕರ್ಮಿ-ಕಿರುತೆರೆ ಕಲಾವಿದ ಅಪರಂಜಿ ಶಿವರಾಜ್‌ರವರ ನಾ ಕಂಡ ಪೌರಾಯುಕ್ತರು ಅಭಿನಂದನ ಕೃತಿ ಬಿಡುಗಡೆ ಸಮಾರಂಭ ಮಾ.೨೭ರಂದು ಬೆಳಿಗ್ಗೆ ೧೧ ಗಂಟೆಗೆ ಸಿದ್ದರೂಢ ನಗರದ ಶಂಕರಮಠದಲ್ಲಿ ನಡೆಯಲಿದೆ.
    ಶಾಸಕ ಬಿ.ಕೆ ಸಂಗಮೇಶ್ವರ್ ಪುಸ್ತಕ ಬಿಡುಗಡೆಗೊಳಿಸಲಿದ್ದು, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ ಕೃತಿ ಕುರಿತು ಅಭಿಪ್ರಾಯ ವ್ಯಕ್ತಪಡಿಸಲಿದ್ದಾರೆ.
    ಮಿಸ್ ಸುಪ್ರ ನ್ಯಾಷನಲ್ ೨೦೧೪ ವಿಜೇತೆ, ಚಲನಚಿತ್ರ ನಟಿ ಆಶಾಭಟ್, ನಟ, ನಿರ್ದೇಶಕ ಎಂ.ಡಿ ಕೌಶಿಕ್, ಬೆಂಗಳೂರು ವಿಶ್ವವಿದ್ಯಾಲಯದ ಕಾನೂನು ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಡಾ. ವಿ. ಸುದೇಶ್, ಚಿಕ್ಕಮಗಳೂರು ಯೋಜನಾ ನಿರ್ದೇಶಕ ಮನೋಹರ್, ಶೃಂಗೇರಿ ಶಂಕರಮಠ ಧರ್ಮದರ್ಶಿ ಕೆ.ಆರ್ ಸುಬ್ಬರಾವ್, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎನ್ ಶ್ರೀಹರ್ಷ ಮತ್ತು ಅಪರಂಜಿ ಶಿವರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ.

ಮಾ.೨೫ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ


    ಭದ್ರಾವತಿ, ಮಾ. ೨೪: ಹಳೇನಗರದ ಮಹಿಳಾ ಸೇವಾ ಸಮಾಜದ ವತಿಯಿಂದ ಮಾ.೨೫ರಂದು ಸಂಜೆ ೪ ಗಂಟೆಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
    ನಗರಸಭೆ ಅಧ್ಯಕ್ಷೆ ಗೀತಾರಾಜ್‌ಕುಮಾರ್ ಉದ್ಘಾಟಿಸಲಿದ್ದು, ಮಹಿಳಾ ಸೇವಾ ಸಮಾಜದ ಅಧ್ಯಕ್ಷೆ ಹೇಮಾವತಿ ವಿಶ್ವನಾಥರಾವ್ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಧಾನ ಕಾರ್ಯದರ್ಶಿ ಶೋಭ ಗಂಗರಾಜ್ ಮತ್ತು ಖಜಾಂಚಿ ಜಯಂತಿ ನಾಗರಾಜ್‌ಶೇಟ್, ಶಾಶ್ವತಿ ಮಹಿಳಾ ಸಮಾಜದ ಅಧ್ಯಕ್ಷೆ ರೂಪರಾವ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. ಸಮಾಜದ ಹಿರಿಯ ಸದಸ್ಯರಾದ ಭಾಗ್ಯವತಿ ನಿಜಗುಣ, ರೇಣುಕ ಚಂದ್ರಶೇಖರಯ್ಯ ಮತ್ತು ಪುಷ್ಪ ಸುಬ್ರಮಣ್ಯರವರಿಗೆ ಗೌರವ ಸಮರ್ಪಣೆ ನಡೆಯಲಿದೆ.

Wednesday, March 23, 2022

ರೆಸ್ಟೋರೆಂಟ್, ಮದ್ಯದಂಗಡಿ ಬೇರೆಡೆಗೆ ಸ್ಥಳಾಂತರಿಸಿ ಶಾಂತಿ ಸುವ್ಯವಸ್ಥೆ ಕಾಪಾಡಿ

ಭದ್ರಾವತಿ ನಗರಸಭೆ ವ್ಯಾಪ್ತಿಯ ಜನ್ನಾಪುರ ವಾಣಿಜ್ಯ ರಸ್ತೆಯಲ್ಲಿ ರೆಸ್ಟೋರೆಂಟ್ ಮತ್ತು ಮದ್ಯದಂಗಡಿಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಇವುಗಳನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಆಗ್ರಹಿಸಿ ಬುಧವಾರ ಹುತ್ತಾ ಕಾಲೋನಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಸಮೀಪದಲ್ಲಿರುವ ಆಟೋ ನಿಲ್ದಾಣ ಬಳಿ ಪ್ರತಿಭಟನಾ ಧರಣಿ ಸತ್ಯಾಗ್ರಹ ನಡೆಸಲಾಯಿತು.
    ಭದ್ರಾವತಿ: ನಗರಸಭೆ ವ್ಯಾಪ್ತಿಯ ಜನ್ನಾಪುರ ವಾಣಿಜ್ಯ ರಸ್ತೆಯಲ್ಲಿ ರೆಸ್ಟೋರೆಂಟ್ ಮತ್ತು ಮದ್ಯದಂಗಡಿಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಇವುಗಳನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಆಗ್ರಹಿಸಿ ಬುಧವಾರ ಹುತ್ತಾ ಕಾಲೋನಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಸಮೀಪದಲ್ಲಿರುವ ಆಟೋ ನಿಲ್ದಾಣ ಬಳಿ ಪ್ರತಿಭಟನಾ ಧರಣಿ ಸತ್ಯಾಗ್ರಹ ನಡೆಸಲಾಯಿತು.
    ಸ್ಥಳೀಯ ಮುಖಂಡ ಶಶಿಕುಮಾರ್ ಎಸ್. ಗೌಡ ಮಾತನಾಡಿ, ಜನ್ನಾಪುರ ವಾಣಿಜ್ಯ ರಸ್ತೆ ನಗರಸಭೆ ಶಾಖಾ ಕಛೇರಿ, ನಗರ ಆರೋಗ್ಯ ಕೇಂದ್ರ, ಕ್ಲಿನಿಕ್‌ಗಳು, ಶಾಲೆಗಳು, ದೇವಸ್ಥಾನ, ನ್ಯಾಯಬೆಲೆ ಅಂಗಡಿ, ಬ್ಯಾಂಕ್‌ಗಳು, ಔಷಧಿ ಹಾಗು ದಿನಸಿ ಅಂಗಡಿಗಳು ಸೇರಿದಂತೆ ಇನ್ನಿತರ ಅಂಗಡಿ ಮುಂಗಟ್ಟುಗಳಿಂದ ಕೂಡಿದೆ. ಇದರಿಂದಾಗಿ ಫಿಲ್ಟರ್‌ಶೆಡ್, ವೇಲೂರ್‌ಶೆಡ್, ಕೂಲಿಬ್ಲಾಕ್, ಆಂಜನೇಯ ಆಗ್ರಹಾರ, ನ್ಯೂಕಾಲೋನಿ, ವಿದ್ಯಾಮಂದಿರ, ಹಾಲಪ್ಪಶೆಡ್, ಹಾಜಪ್ಪ ಲೇಔಟ್, ಕೆ.ಸಿ ಬ್ಲಾಕ್, ಗಣೇಶ್‌ಕಾಲೋನಿ, ಜಿಂಕ್‌ಲೈನ್, ಭಂಡಾರಹಳ್ಳಿ ಸೇರಿದಂತೆ ಸುತ್ತಮುತ್ತನ ನಿವಾಸಿಗಳು ಪ್ರತಿ ದಿನ ಸುಮಾರು ೧೦ ಸಾವಿರಕ್ಕೂ ಹೆಚ್ಚು ಮಂದಿ ಈ ರಸ್ತೆಯಲ್ಲಿ ಸಂಚರಿಸುತ್ತಾರೆ ಎಂದರು.
    ಈ ರಸ್ತೆಯಲ್ಲಿ ಕಾನೂನು ಬಾಹಿರವಾಗಿ ಸುಮಾರು ೫ ರೆಸ್ಟೋರೆಂಟ್‌ಗಳು ಮತ್ತು ಅಬಕಾರಿ ನಿಯಮಗಳನ್ನು ಪಾಲನೆ ಮಾಡದ ಸಿಎಲ್೨ ಎರಡು ಹಾಗು ಎಂಎಸ್‌ಐಎಲ್ ಒಂದು ಮದ್ಯದಂಗಡಿ ಇದ್ದು, ಈ ಭಾಗದಲ್ಲಿ ಮದ್ಯವ್ಯಸನಿಗಳ ಹಾವಳಿ ಹೆಚ್ಚಾಗಿದೆ. ಇದರಿಂದಾಗಿ ಆಶಾಂತಿ ವಾತಾವರಣ ನಿರ್ಮಾಣವಾಗುತ್ತಿದ್ದು,  ಮಹಿಳೆಯರು, ವಯೋವೃದ್ಧರು, ಶಾಲಾ ಮಕ್ಕಳು ಸೇರಿದಂತೆ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಕೆಲವು ದಿನಗಳ ಹಿಂದೆ ಈ ರಸ್ತೆಯಲ್ಲಿ ಅಹಿತಕರ ಘಟನೆಯೊಂದು ನಡೆದಿದ್ದು, ಆದರೂ ಸಹ ಸಂಬಂಧಪಟ್ಟ ಇಲಾಖೆಯವರು ಗಮನ ಹರಿಸುತ್ತಿಲ್ಲ ಎಂದು ಆರೋಪಿಸಿದರು.
    ರೆಸ್ಟೋರೆಂಟ್ ಮತ್ತು ಮದ್ಯದಂಗಡಿಗಳನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ತಕ್ಷಣ ಬೇರೆಡೆಗೆ ಸ್ಥಳಾಂತರಿಸಿ ಕಾನೂನು ಸುವ್ಯವಸ್ಥೆ ಕಾಪಾಡಬೇಕು. ಇಲ್ಲವಾದಲ್ಲಿ ಶಿವಮೊಗ್ಗ ಜಿಲ್ಲೆಗೆ ಏ.೨೪ರಂದು ಆಗಮಿಸಲಿರುವ  ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಪಾದಯಾತ್ರೆ ಮೂಲಕ ಭೇಟಿ ಮಾಡಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ದೂರು ನೀಡುವುದಾಗಿ ಎಚ್ಚರಿಸಿದರು.
    ಕರುನಾಡು ಹಿತರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ವೈ. ಶಶಿಕುಮಾರ್, ಅಖಿಲ ಭಾರತ ವೀರಶೈವ ಮಹಾಸಭಾ ಯುವ ಘಟಕದ ಅಧ್ಯಕ್ಷ ಮಂಜುನಾಥ್ ಸೇರಿದಂತೆ ಇನ್ನಿತರರು ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.


ಗ್ರಾಮಾಂತರ ಕಾಂಗ್ರೆಸ್ ಯುವ ಘಟಕದಿಂದ ಭಗತ್ ಸಿಂಗ್ ಪುಣ್ಯ ಸ್ಮರಣೆ

ಭದ್ರಾವತಿಯಲ್ಲಿ ವೀರಯೋಧರನ್ನು ಸನ್ಮಾನಿಸಿ ಗೌರವಿಸುವ ಮೂಲಕ ಗ್ರಾಮಾಂತರ ಯುವ ಕಾಂಗ್ರೆಸ್ ವತಿಯಿಂದ ಬುಧವಾರ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಹೋರಾಟಗಾರ ಭಗತ್ ಸಿಂಗ್ ಪುಣ್ಯ ಸ್ಮರಣೆ ವಿಶೇಷವಾಗಿ ಆಚರಿಸಲಾಯಿತು.  
    ಭದ್ರಾವತಿ, ಮಾ. ೨೩: ಗ್ರಾಮಾಂತರ ಯುವ ಕಾಂಗ್ರೆಸ್ ವತಿಯಿಂದ ಬುಧವಾರ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಹೋರಾಟಗಾರ ಭಗತ್ ಸಿಂಗ್ ಪುಣ್ಯ ಸ್ಮರಣೆ ವಿಶೇಷವಾಗಿ ಆಚರಿಸಲಾಯಿತು.  
    ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಗೃಹ ಕಛೇರಿಯಲ್ಲಿ ದೇಶ ರಕ್ಷಣೆಯಲ್ಲಿ ತೊಡಗಿಸಿಕೊಂಡಿರುವ ವೀರಯೋಧರನ್ನು ಸನ್ಮಾನಿಸಿ ಗೌರವಿಸುವ ಮೂಲಕ ಭಗತ್ ಸಿಂಗ್‌ರವರ ದೇಶ ಪ್ರೇಮ, ಆದರ್ಶತನ ಹಾಗು ಕ್ರಾಂತಿಕಾರಿ ಹೋರಾಟಗಳನ್ನು ಸ್ಮರಿಸಲಾಯಿತು. ಇದಕ್ಕೂ ಮೊದಲು ನಗರದ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತದಿಂದ ಬೈಕ್ ರ್‍ಯಾಲಿ ನಡೆಸಲಾಯಿತು.
    ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ ಆಫ್ತಬ್ ಅಹಮದ್ ನೇತೃತ್ವ ವಹಿಸಿದ್ದರು. ಉದ್ಯಮಿ ಬಿ.ಕೆ ಜಗನ್ನಾಥ್, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯ ವಕ್ತಾರ ಆಮೋಸ್, ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಬಿ. ಗಂಗಾಧರ್, ಅಸಂಘಟಿತ ಕಾರ್ಮಿಕ ವಲಯ ನಗರ ಘಟಕದ ಅಧ್ಯಕ್ಷ ಐಸಾಕ್ ಲಿಂಕನ್, ಗ್ರಾಮಾಂತರ ಯುವ ಕಾಂಗ್ರೆಸ್ ಉಪಾಧ್ಯಕ್ಷ ತಬ್ರೆಜ್ ಖಾನ್, ನವೀನ್ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ಸಜ್ಜದ್, ಆನಂದ್, ವರುಣ್ ಹಾಗು ಕಾರ್ಯಕರ್ತರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

ಸಾರ್ವಜನಿಕರ ಕೆಲಸಗಳನ್ನು ನಿಗದಿತ ಅವಧಿಯಲ್ಲಿ ಮಾಡಿಕೊಡುವುದು ಸರ್ಕಾರಿ ಅಧಿಕಾರಿಗಳ ಜವಾಬ್ದಾರಿ

ವಿನಾಕಾರಣ ಅಲೆಯುವಂತೆ ಮಾಡದಿರಿ, ಕರ್ತವ್ಯದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಿ 

ಭದ್ರಾವತಿ ಹಳೇ ತಾಲೂಕು ಕಛೇರಿ ಆವರಣದಲ್ಲಿ ಭ್ರಷ್ಟಾಚಾರ ನಿಗ್ರಹ ದಳ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಜನ ಸಂಪರ್ಕ, ಅಹವಾಲು ಸ್ವೀಕಾರ ಸಭೆಯ ನೇತೃತ್ವ ವಹಿಸಿ ಪೊಲೀಸ್ ಉಪಾಧೀಕ್ಷಕ ವಸಂತಕುಮಾರ್ ಮಾತನಾಡಿದರು. 
    ಭದ್ರಾವತಿ, ಮಾ. ೨೩: ಸಾರ್ವಜನಿಕರನ್ನು ಕಛೇರಿಯಿಂದ ಕಛೇರಿಗೆ ಅಲೆಯುವಂತೆ ಮಾಡದೆ ನಿಗದಿತ ಸಮಯದಲ್ಲಿ ಅವರ ಕೆಲಸ ಮಾಡಿಕೊಡುವುದು ಸರ್ಕಾರಿ ಅಧಿಕಾರಿಗಳ ಜವಾಬ್ದಾರಿಯಾಗಿದ್ದು, ಅಲ್ಲದೆ ಗ್ರಾಮೀಣ ಭಾಗದಿಂದ ಬರುವ ಜನರಿಗೆ ತಮ್ಮ ಕೆಲಸದ ಬಗ್ಗೆ ತಿಳುವಳಿಕೆ ಮೂಡಿಸಬೇಕು. ವಿನಾಕಾರಣ ಅವರೊಂದಿಗೆ ಸಂಘರ್ಷಕ್ಕೆ ಇಳಿಯಬಾರದು. ಕರ್ತವ್ಯ ನಿರ್ವಹಣೆಯಲ್ಲಿ ಯಾವುದೇ ರೀತಿ ಭ್ರಷ್ಟಾಚಾರವಿರಬಾರದು ಎಂದು ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಉಪಾಧೀಕ್ಷಕ ವಸಂತಕುಮಾರ್ ಹೇಳಿದರು. 
ಅವರು ಬುಧವಾರ ಹಳೇ ತಾಲೂಕು ಕಛೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜನ ಸಂಪರ್ಕ, ಅಹವಾಲು ಸ್ವೀಕಾರ ಸಭೆಯ ನೇತೃತ್ವ ವಹಿಸಿ ಮಾತನಾಡಿದರು. 
ಸರ್ಕಾರಿ ಅಧಿಕಾರಿಗಳ ವಿರುದ್ಧ ಸಾಕಷ್ಟು ದೂರುಗಳು ಬರುತ್ತಿದ್ದು, ಸರ್ಕಾರಿ ಇಲಾಖೆಗಳ ಆಡಳಿತ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಮಾಡಬೇಕೆಂಬುದು ಇಲಾಖೆಯ ಆಶಯವಾಗಿದೆ. ಇದಕ್ಕೆ ಪೂರಕವಾಗಿ ಅಧಿಕಾರಿಗಳು ನಡೆದುಕೊಳ್ಳಬೇಕು. ತಮ್ಮ ಕರ್ತವ್ಯದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಬೇಕೆಂದರು. 
ಜನರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸದ ಹಾಗು ಅವರ ಕೆಲಸಗಳನ್ನು ಮಾಡಿಕೊಡಲು ವಿನಾಕಾರಣ ತೊಂದರೆ ಕೊಡುವ ಅಧಿಕಾರಿಗಳ ವಿರುದ್ಧ ಇಲಾಖೆಗೆ ದೂರು ನೀಡಬಹುದು. ಇಲಾಖೆ ದೂರುಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿ ನ್ಯಾಯ ಒದಗಿಸಿಕೊಡಲಿದೆ ಎಂದರು. 
ಪೊಲೀಸ್ ಇನ್ಸ್‌ಪೆಕ್ಟರ್ ಇಮ್ರಾನ್ ಬೇಗ್, ಇಲಾಖೆಯ ಸುಧೀಂದ್ರ, ಅರುಣ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ನಗರಸಭೆ ಪೌರಾಯುಕ್ತ ಕೆ. ಪರಮೇಶ್, ನಗರ ಆಹಾರ ನಿರೀಕ್ಷಕ ಎ.ಟಿ ಬಸವರಾಜ್, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ಮೆಸ್ಕಾಂ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು. ಸ್ಥಳದಲ್ಲಿಯೇ ಹಲವಾರು ದೂರುಗಳು ಸಲ್ಲಿಕೆಯಾದವು. ಉಪ ತಹಸೀಲ್ದಾರ್ ಮಂಜನಾಯ್ಕ ನಿರೂಪಿಸಿದರು. 

Tuesday, March 22, 2022

ಕಾನೂನುಗಳ ಅರಿವಿನಿಂದ ಉತ್ತಮ ಸಮಾಜ ನಿರ್ಮಾಣ : ಕಾಳಿದಾಸ್ ನಾಯ್ಕ

ಭದ್ರಾವತಿ ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘದ ನೇತೃತ್ವದಲ್ಲಿ ಮಂಗಳವಾರ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಗ್ರಾಹಕರ ಹಾಗೂ ಜಲ ದಿನಾಚರಣೆ ಕಾರ್ಯಕ್ರಮಕ್ಕೆ ಪ್ರಾಚಾರ್ಯ ಕಾಳಿದಾಸ್ ನಾಯ್ಕ ಚಾಲನೆ ನೀಡಿದರು.
    ಭದ್ರಾವತಿ, ಮಾ. ೨೨:  ಕಾನೂನುಗಳ ಅರಿವಿನಿಂದ ಉತ್ತಮ ಸಮಾಜ ನಿರ್ಮಾಣ ಮಾಡುವ ಜೊತೆಗೆ ನಮ್ಮ ಜವಾಬ್ದಾರಿ, ಹಕ್ಕುಗಳ ಅರಿವು ತಿಳಿಯುತ್ತದೆ ಎಂದು ಕೈಗಾರಿಕಾ ತರಬೇತಿ ಸಂಸ್ಥೆ ಪ್ರಾಂಶುಪಾಲ ಕಾಳಿದಾಸ್ ನಾಯ್ಕ ಹೇಳಿದರು.
    ಅವರು ತರಬೇತಿ ಸಂಸ್ಥೆಯಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘದ ನೇತೃತ್ವದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಗ್ರಾಹಕರ ಹಾಗೂ ಜಲ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
    ಗ್ರಾಹಕರ ಹಕ್ಕುಗಳ ರಕ್ಷಣೆ ಮಾಡಿಕೊಳ್ಳಲು ಇರುವ ಕಾನೂನು ಭಾಗದ ವಿಚಾರ ಹಾಗೂ ಜಲ ಸಂರಕ್ಷಣೆ ಮೂಲಕ ಭವಿಷ್ಯದಲ್ಲಿ ಅದನ್ನು ಹೇಗೆ ನಿಭಾಯಿಸಿಕೊಳ್ಳಲು ಸಾಧ್ಯ ಎಂಬ ವಿಚಾರಗಳ ಸಮಗ್ರ ಮಾಹಿತಿ ಭವಿಷ್ಯದ ಪೀಳಿಗೆಗೆ ಮನವರಿಕೆ ಮಾಡಿಕೊಡಲು ನೆರವಾಗಿದೆ ಎಂದರು.
    ಗ್ರಾಹಕರ ಹಕ್ಕು ಮತ್ತು ಅವರಿಗೆ ಸಿರುವ ನೆರವಿನ ಕುರಿತಾಗಿ ಮಾತನಾಡಿದ ವಕೀಲ ಮಹಮ್ಮದ್ ಇಲಿಯಾಸ್, ಪ್ರತಿಯೊಬ್ಬ ವ್ಯಕ್ತಿಯೂ ಒಂದಲ್ಲ ಒಂದು ರೀತಿಯಲ್ಲಿ ಗ್ರಾಹಕನಾಗಿ ತನ್ನ ಜವಾಬ್ದಾರಿ ನಿರ್ವಹಣೆ ಮಾಡುವ ಸಂದರ್ಭ ಒದಗಿ ಬರಲಿದೆ, ಇದರ ಜ್ಞಾನವಿದ್ದಲ್ಲಿ ಅವರಿಗೆ  ಸುಲಭವಾಗಿ ನೆರವು ಸಿಗುವ ಜೊತೆಗೆ ಅವರ ಹಕ್ಕುಗಳ ರಕ್ಷಣೆ ಆಗಲಿದೆ ಎಂದರು.
    ಜಲ ದಿನಾಚರಣೆ ಹಿನ್ನೆಲೆಯಲ್ಲಿ ಮಾತನಾಡಿದ ವಕೀಲ ಎಚ್.ವಿ ಆದರ್ಶ್, ಭೂಮಿಯ ಒಟ್ಟು ವಿಸ್ತೀರ್ಣದಲ್ಲಿ ಶೇ.೭೦ರಷ್ಟು ನೀರಿನಾಂಶವಿದ್ದು, ಉಳಿದ ಶೇ.೩೦ ಭೂಮಿ ಇದೆ, ಇಷ್ಟಾದರೂ ನೀರಿನ ಸಂರಕ್ಷಣೆ ಮಾಡಿಕೊಳ್ಳದಿದ್ದಲ್ಲಿ ಭವಿಷ್ಯದಲ್ಲಿ ಸಾಕಷ್ಟು ಸಮಸ್ಯೆ ಎದುರಿಸುವ ಪರಿಸ್ಥಿತಿ ಇದೆ ಎಂದರು.
    ಸಹಾಯಕ ಸರ್ಕಾರಿ ಅಭಿಯೋಜಕ ಎಂ.ಜಿ ತ್ಯಾಗರಾಜ್, ವಕೀಲರ ಸಂಘದ ಅಧ್ಯಕ್ಷ ಕೆ.ಎನ್ ಶ್ರೀಹರ್ಷ, ಪದಾಧಿಕಾರಿಗಳಾದ ಡಿ.ಎಂ.ವಿಶ್ವನಾಥ್,ವಿ.ಉದಯಕುಮಾರ್, ಎಸ್. ಮಂಜಪ್ಪ, ವಿಮಲ, ಶಿಕ್ಷಕರಾದ ಪುಟ್ಟಲಿಂಗಮೂರ್ತಿ, ಉದಯಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.