Sunday, April 3, 2022

೫ನೇ ಇಂಟರ್‌ನ್ಯಾಷನಲ್ ಯೂತ್ ಗೇಮ್ಸ್ ಪಂದ್ಯಾವಳಿ : ಸಮರ್ಥ ಎಂ. ಪಟೇಲ್ ಆಯ್ಕೆ

    ಭದ್ರಾವತಿ, ಏ. ೩: ತಾಲೂಕಿನ ಕಾರೇಹಳ್ಳಿ ಬಿಜಿಎಸ್ ಕೇಂದ್ರೀಯ ಮಹಾವಿದ್ಯಾಲಯದ ವಿದ್ಯಾರ್ಥಿ ಸಮರ್ಥ ಎಂ. ಪಟೇಲ್ ದಿ ಅಸೋಸಿಯೇಷನ್ ಫಾರ್ ಟ್ರೆಡಿಷನಲ್ ಯೂತ್ ಗೇಮ್ಸ್ ಅಂಡ್ ಸ್ಪೋರ್ಟ್ಸ್ ಇಂಡಿಯಾ(ಟಿಎಎಫ್‌ಟಿವೈಜಿಎಎಸ್) ವತಿಯಿಂದ ಏ.೨೧ ರಿಂದ ೨೫ರವರೆಗೆ ನಡೆಯಲಿರುವ ೫ನೇ ಇಂಟರ್‌ನ್ಯಾಷನಲ್ ಯೂತ್ ಗೇಮ್ಸ್ ಪಂದ್ಯಾವಳಿಗೆ ಕಬಡ್ಡಿ ಆಟಗಾರನಾಗಿ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾನೆ.
    ಪಂದ್ಯಾವಳಿ ನೇಪಾಳದ ಪೊಖಾರದಲ್ಲಿ ನಡೆಯಲಿದ್ದು,  ಕಬಡ್ಡಿ ಕ್ರೀಡೆಯಲ್ಲಿ ಆಯ್ಕೆಯಾಗಿರುವ ಒಟ್ಟು ೪ ವಿದ್ಯಾರ್ಥಿಗಳ ಪೈಕಿ ಸಮರ್ಥ ಎಂ. ಪಟೇಲ್ ಸಹ ಒಬ್ಬನಾಗಿದ್ದು, ಈತ ಬಾರಂದೂರು ನಿವಾಸಿ ಎಚ್. ಮಂಜುನಾಥ್‌ರವರ ಪುತ್ರ. ಈ ವಿದ್ಯಾರ್ಥಿಯನ್ನು ಬಿಜಿಎಸ್ ಕೇಂದ್ರಿಯ ಮಹಾವಿದ್ಯಾಲಯದ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಹಾಗು ಸಿಬ್ಬಂದಿ ವೃಂದದವರು ಅಭಿನಂದಿಸಿದ್ದಾರೆ.

ಏ.೧೧ರಂದು ‘ನನ್ನೊಳಗೆ’ ಕವನ ಸಂಕಲನ ಬಿಡುಗಡೆ, ಸಾಧಕರಿಗೆ ಪ್ರಶಸ್ತಿ ಪ್ರದಾನ

    ಭದ್ರಾವತಿ, ಏ. ೩: ತಾಲೂಕಿನ ಸುಲ್ತಾನ್ ಮಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ, ಅಂತರಾಷ್ಟ್ರೀಯ ಜಾನಪದ ಕಲಾವಿದ ಎಂ.ಆರ್ ರೇವಣಪ್ಪನವರ 'ನನ್ನೊಳಗೆ' ಕವನ ಸಂಕಲನ ಬಿಡುಗಡೆ ಹಾಗು ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್ ಸ್ಮರಣಾರ್ಥ ಏ.೧೧ರಂದು ಹೊಸನಗರ ತಾಲೂಕಿನ ಮಾದಾಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಸಂಜೆ ೪ ಗಂಟೆಗೆ ಹಮ್ಮಿಕೊಳ್ಳಲಾಗಿದೆ.
    ಶಿವಮೊಗ್ಗ ಜಾನಪದ ಕಲಾ ಮತ್ತು ಸಾಹಿತ್ಯ ವೇದಿಕೆ ಹಾಗು ಮಾದಾಪುರ ಶ್ರೀ ಶನಿಪರಮೇಶ್ವರ ಯುವಕ ಸಂಘದ ವತಿಯಿಂದ ಸಮಾರಂಭ ಆಯೋಜಿಸಲಾಗಿದೆ.
    ತಾಲೂಕಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಶಾಸಕ ಬಿ.ಕೆ ಸಂಗಮೇಶ್ವರ್ ಪುತ್ರ ಬಿ.ಎಸ್ ಗಣೇಶ್, ಡಿಎಸ್‌ಎಸ್ ರಾಜ್ಯ ಸಂಚಾಲಕ ಎಂ. ಗುರುಮೂರ್ತಿ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ,  ಶಿಕ್ಷಕಿ ಭಾರತಿ ಗೋವಿಂದಸ್ವಾಮಿ, ಮಹಾಬಲೇಶ್ವರ ಹೆಗಡೆ, ಹುಚ್ಚಪ್ಪ ಮಾಸ್ಟರ್, ಲಕ್ಷ್ಮಣ್ ರಾವ್ ಬೋರತ್, ನಿಸ್ಸಾರ್ ಖಾನ್ ಕೆಂಚಾಯಿಕೊಪ್ಪ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ.
    ಶಿವಮೊಗ್ಗ ಸಹ್ಯಾದ್ರಿ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಮೋಹನ್ ಚಂದ್ರಗುತ್ತಿ ಶಿಕ್ಷಣದ ಹಿನ್ನಲೆಯಲ್ಲಿ ಜಾನಪದ ಸಾಹಿತ್ಯ ಕುರಿತು ಉಪನ್ಯಾಸ ನೀಡಲಿದ್ದು, ಜ್ಯೂನಿಯರ್ ಶಂಕರ್‌ನಾಗ್, ಜ್ಯೂನಿಯರ್ ವಿಷ್ಣುವರ್ಧನ್ ಮತ್ತು ಜ್ಯೂನಿಯರ್ ಪುನೀತ್ ರಾಜ್‌ಕುಮಾರ್ ಕಲಾವಿದರಿಂದ ಸಾಂಸ್ಕೃತಿಕ ಮನರಂಜನೆ ಕಾರ್ಯಕ್ರಮಗಳು ಜರುಗಲಿವೆ.

ಏ.೫ರಂದು ನಗರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್

    ಭದ್ರಾವತಿ, ಏ. ೩:  ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಏ.೫ರಂದು ನಗರಕ್ಕೆ ಆಗಮಿಸುತ್ತಿದ್ದು, ಈಗಾಗಲೇ ಜಿಲ್ಲೆಯಲ್ಲಿ ನಡೆಸಲಾಗಿರುವ ಪಕ್ಷದ ಡಿಜಿಟಲ್ ನೋಂದಾಣಿ ಸದಸ್ಯತ್ವ ಅಭಿಯಾನ ಕುರಿತು ಮಾಹಿತಿ ಪಡೆಯಲಿದ್ದಾರೆ.
    ಅಂದು ಮಧ್ಯಾಹ್ನ ೩ ಗಂಟೆಗೆ ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಗೃಹ ಕಚೇರಿಗೆ ಭೇಟಿ ನೀಡಲಿದ್ದು, ಪಕ್ಷದ ಜಿಲ್ಲಾ ಮುಖಂಡರು, ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕೋರಲಾಗಿದೆ.



ಬೌದ್ಧ ವಿಹಾರದಲ್ಲಿ ಧ್ಯಾನ ಮಂದಿರ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ

    
ಭದ್ರಾವತಿ ಹೊಸ ನಂಜಾಪುರ ಗ್ರಾಮದಲ್ಲಿ ಸುಮಾರು ಎರಡು ಎಕರೆ ಜಾಗದಲ್ಲಿರುವ ಬೌದ್ಧವಿಹಾರದಲ್ಲಿ ಧ್ಯಾನ ಮಂದಿರ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಯಿತು. 
    ಭದ್ರಾವತಿ, ಏ. ೩:  ಹೊಸ ನಂಜಾಪುರ ಗ್ರಾಮದಲ್ಲಿ ಸುಮಾರು ಎರಡು ಎಕರೆ ಜಾಗದಲ್ಲಿರುವ ಬೌದ್ಧವಿಹಾರದಲ್ಲಿ ಧ್ಯಾನ ಮಂದಿರ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಯಿತು. 
ವಾಣಿಜ್ಯ ತೆರಿಗೆ ಇಲಾಖೆ ನಿವೃತ್ತ ಅಧಿಕಾರಿ, ಬೌದ್ಧ ಧರ್ಮದ ಅನುಯಾಯಿಯಾಗಿರುವ ಶ್ರೀನಿವಾಸ್‌ರವರು ತಮ್ಮ ಸ್ವಂತ ಜಮೀನಿನಲ್ಲಿ ೨ ಎಕರೆ ಜಾಗ ಬೌದ್ಧ ವಿಹಾರ ನಿರ್ಮಾಣಕ್ಕೆ ಉಚಿತವಾಗಿ ನೀಡಿದ ಹಿನ್ನಲೆಯಲ್ಲಿ ‘ಸಂಬುದ್ಧ ಧಮ್ಮಾಂಕುರ ಟ್ರಸ್ಟ್’ ಅಸ್ತಿತ್ವಕ್ಕೆ ಬರುವ ಮೂಲಕ ಕಳೆದ ವರ್ಷ ಅಕ್ಟೋಬರ್ ತಿಂಗಳಿನಲ್ಲಿ ಬೌದ್ಧ ವಿಹಾರ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. 
ಇದೀಗ ಧ್ಯಾನ ಮಂದಿರ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಯಿತು. ಟ್ರಸ್ಟ್ ಅಧ್ಯಕ್ಷ, ಬೌದ್ಧ ಧರ್ಮ ಉಪಾಸಕ ಪ್ರೊ. ಎಚ್. ರಾಚಪ್ಪ ಬೌದ್ಧ ಧರ್ಮದ ಆಚರಣೆಗಳನ್ನು ನೆರವೇರಿಸಿಕೊಟ್ಟರು. ಶಿವಕುಮಾರ್ ಅಧ್ಯಕ್ಷತೆ ವಹಿಸಿದ್ದು, ನಗರಸಭೆ ಉಪಾಧ್ಯಕ್ಷ ಚನ್ನಪ್ಪ, ಸದಸ್ಯರಾದ ಬಿ.ಕೆ ಮೋಹನ್, ಪ್ರೇಮಾ, ಉದಯಕುಮಾರ್, ಎಂಜಿನಿಯರ್ ರಂಗರಾಜಪುರೆ,  ಟ್ರಸ್ಟ್ ಪ್ರಮುಖರಾದ ಸುರೇಶ್, ಬದರಿನಾರಾಯಣ, ಶಿವಬಸಪ್ಪ, ಬಿ.ಡಿ ಸಾವಕ್ಕನವರ್, ಬಿ.ಎಸ್  ಗಣೇಶ್, ಶಾಂತಿ, ಅನಿಲ್‌ಕುಮಾರ್, ಪುಟ್ಟರಾಜು, ಕಿರಣ್, ಮಂಜುನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

Friday, April 1, 2022

ಕೂಡ್ಲಿಗೆರೆ ಗ್ರಾಮದಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿಯವರ ಹುಟ್ಟುಹಬ್ಬ ಆಚರಣೆ


ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮದಲ್ಲಿ ಕರ್ನಾಟಕ ರತ್ನ, ತ್ರಿವಿಧ ದಾಸೋಹಿ, ತುಮಕೂರು ಸಿದ್ದಗಂಗಾ ಮಠದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ೧೧೫ನೇ ಹುಟ್ಟುಹಬ್ಬ ಶುಕ್ರವಾರ ವಿಜೃಂಭಣೆಯಿಂದ ಆಚರಿಸಲಾಯಿತು. 
    ಭದ್ರಾವತಿ, ಏ. ೧: ತಾಲೂಕಿನ ಕೂಡ್ಲಿಗೆರೆ ಗ್ರಾಮದಲ್ಲಿ ಕರ್ನಾಟಕ ರತ್ನ, ತ್ರಿವಿಧ ದಾಸೋಹಿ, ತುಮಕೂರು ಸಿದ್ದಗಂಗಾ ಮಠದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ೧೧೫ನೇ ಹುಟ್ಟುಹಬ್ಬ ಶುಕ್ರವಾರ ವಿಜೃಂಭಣೆಯಿಂದ ಆಚರಿಸಲಾಯಿತು. 
ಈ ಬಾರಿ ಗ್ರಾಮದ ಪ್ರಮುಖರು ಒಂದೆಡೆ ಸೇರಿ ವಿಶೇಷವಾಗಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಹುಟ್ಟುಹಬ್ಬ ಆಚರಿಸುವ ಮೂಲಕ ಗಮನ ಸೆಳೆದರು. ಸ್ವಾಮೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಮೂಲಕ ಗೌರವ ಸಲ್ಲಿಸಲಾಯಿತು. ನಂತರ ಸಿಹಿ ಹಂಚಿಕೆಯೊಂದಿಗೆ ದಾಸೋಹ ನಡೆಸಲಾಯಿತು. 
ಕಾರ್ಯಕ್ರಮದಲ್ಲಿ ಸುಗ್ರಾಮ ಚುನಾಯಿತ ಗ್ರಾಮ ಪಂಚಾಯಿತಿ ಮಹಿಳಾ ಸದಸ್ಯರ ಒಕ್ಕೂಟದ ಅಧ್ಯಕ್ಷೆ ಗೌರಮ್ಮ, ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಮಾದೇವಿ, ಮಾಜಿ ಅಧ್ಯಕ್ಷೆ ಮಲ್ಲಕ್ ವೀರಪ್ಪನ್, ಸದಸ್ಯರಾದ ವಿಶ್ವನಾಥ್, ಸಿದ್ದಮ್ಮ ನಾಗೇಶ್,  ಮುಖಂಡರಾದ ಕಾಂಗ್ರೆಸ್ ಪರಿಶಿಷ್ಟ ಪಂಗಡ ಘಟಕದ ಅಧ್ಯಕ್ಷ ಎಸ್. ಮಹಾದೇವ, ಕರುನಾಡು ಹಿತರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ವೈ. ಶಶಿಕುಮಾರ್, ಆರ್. ನಾಗರಾಜ್ ಕೂಡ್ಲಿಗೆರೆ, ಮಂಜುನಾಥ್ ವೆಲ್ಡಿಂಗ್, ಜಯಣ್ಣ, ಶಾಲಿನಿ, ಪ್ರಶಾಂತ್ ಕೋಳಿ ಮತ್ತು ತಂಡದವರು, ಕಾಂಗ್ರೆಸ್ ಮಾಧ್ಯಮ ವಿಭಾಗದ ಪ್ರವೀಣ್‌ನಾಯ್ಕ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. 

ತಕ್ಷಣ ಕೆರೆಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿ : ತಾಲೂಕು ಆಡಳಿತಕ್ಕೆ ಮನವಿ

ವಿಳಂಬವಾದಲ್ಲಿ ಅಮರಣಾಂತರ ಉಪವಾಸ ಸತ್ಯಾಗ್ರಹ


ಭದ್ರಾವತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಕೆರೆಗಳ ಒತ್ತುವರಿ ತೆರವು ಕಾರ್ಯಾಚರಣೆ ವಿಳಂಬವಾಗಿರುವುದನ್ನು ಖಂಡಿಸಿ ಶುಕ್ರವಾರ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ ಮತ್ತು ಸುವರ್ಣ ಮಹಿಳಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಆರ್. ಪ್ರದೀಪ್ ಅವರಿಗೆ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ಏ. ೧: ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಕೆರೆಗಳ ಒತ್ತುವರಿ ತೆರವು ಕಾರ್ಯಾಚರಣೆ ವಿಳಂಬವಾಗಿರುವುದನ್ನು ಖಂಡಿಸಿ ಶುಕ್ರವಾರ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ ಮತ್ತು ಸುವರ್ಣ ಮಹಿಳಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಆರ್. ಪ್ರದೀಪ್ ಅವರಿಗೆ ಮನವಿ ಸಲ್ಲಿಸಲಾಯಿತು.
    ನಿರಂತರವಾಗಿ ಹೋರಾಟ ನಡೆಸಿದ ಹಿನ್ನಲೆಯಲ್ಲಿ ಹಾಗು ಈ ಹಿಂದಿನ ನಗರಸಭೆ ಪೌರಾಯುಕ್ತರಾದ ಮನೋಹರ್‌ರವರ ಪರಿಶ್ರಮದಿಂದ ನಗರಸಭೆ ವ್ಯಾಪ್ತಿಯಲ್ಲಿ ೭೦ ಕೆರೆಗಳ ಬೌಂಡರಿ ನಿಗದಿಪಡಿಸುವ ಕಾರ್ಯಕ್ಕೆ ತಾಲೂಕು ಆಡಳಿತದಿಂದ ಆದೇಶವಾಗಿರುತ್ತದೆ. ಈ ಪೈಕಿ ಈಗಾಗಲೇ ಉಜ್ಜನಿಪುರದ ಬಳಸೋಕಟ್ಟೆ ಕೆರೆ, ಬಳಕಟ್ಟೆ ಕೆರೆ, ಜನ್ನಾಪುರ ಕೆರೆ, ಬುಳ್ಳಾಪುರದ ಸರ್ಕಾರಿ ಚಿಕ್ಕಯ್ಯನ ಕೆರೆ ಮತ್ತು ಗೌಡನಕಟ್ಟೆ ಕೆರೆ, ಸಿದ್ದಾಪುರದ ಬಳಸೋಕೆರೆ, ಬಿದಿರೊಡ್ಡು ಕೆರೆ ಮತ್ತು ಚಿಕ್ಕಯ್ಯನ ಕೆರೆ, ಬುಳ್ಳಾಪುರದ ಸರ್ಕಾರಿ ಕೆರೆ ಮತ್ತು ಬಾಳೆಕಟ್ಟೆ ಕೆರೆ, ಕಡದಕಟ್ಟೆ ಸರ್ಕಾರಿ ಕೆರೆ, ಬೊಮ್ಮನಕಟ್ಟೆ ಕೆರೆ, ದೊಡ್ಡಗೊಪ್ಪೇನಹಳ್ಳಿ ಸರ್ಕಾರಿ ಕೆರೆ, ಹೆಬ್ಬಂಡಿ ಕೆರೆ, ಕಣಕಟ್ಟೆ ಕೆರೆ, ಆನೆಕೊಪ್ಪ ಕೆರೆ, ಕವಲಗುಂದಿ ಯಳವಪ್ಪನಕೆರೆ, ಸೀಗೆಬಾಗಿ ಕೆರೆ, ಹೆಬ್ಬಂಡಿ ಕೆರೆ ಮತ್ತು ಹೊಸಮನೆ ಕೆರೆ ಸೇರಿದಂತೆ ಒಟ್ಟು ೨೩ ಕೆರೆಗಳ ಬೌಂಡರಿ ನಿಗದಿಪಡಿಸುವ ಕಾರ್ಯ ಮುಕ್ತಾಯಗೊಂಡಿರುತ್ತದೆ. ಆದರೆ ಇದುವರೆಗೂ ಒತ್ತುವರಿ ತೆರವು ಕಾರ್ಯ ನಡೆದಿರುವುದಿಲ್ಲ.
    ಇದೆ ರೀತಿ ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಸಿಕೆರೆ, ಬಳಸೋಕೆರೆ, ಸಿರಿಯೂರು ಕೆರೆ ಹಾಗು ಹಿರಿಯೂರು ಗ್ರಾಮ ಪಂಚಾಯಿತಿ ವ್ಯಾಪ್ತಿ ಬಳಸೋಕೆರೆ, ಕೆಂಚವೀರಪ್ಪನ ಕೆರೆ, ಬಸವನಕಟ್ಟೆ ಕೆರೆ ಮತ್ತು ನಾಯಕನ ಕೆರೆ ಸೇರಿದಂತೆ ಒಟ್ಟು ೭ ಕೆರೆಗಳ ಬೌಂಡರಿ ನಿಗದಿಪಡಿಸುವ ಕಾರ್ಯ ಮುಕ್ತಾಯಗೊಂಡಿರುತ್ತದೆ. ಆದರೆ ತೆರವು ಕಾರ್ಯಾಚರಣೆ ನಡೆದಿರುವುದಿಲ್ಲ. ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಈಗಾಗಲೇ ಕೆರೆಗಳ ಒತ್ತುವರಿ ಕಾರ್ಯ ಬಿರುಸಿನಿಂದ ನಡೆದಿದೆ. ಆದರೆ ಈ ಕ್ಷೇತ್ರದ ವ್ಯಾಪ್ತಿಯಲ್ಲಿ ವಿಳಂಬವಾಗುತ್ತಿದ್ದು, ಇದರಿಂದಾಗಿ ಕೇಂದ್ರ ಸರ್ಕಾರದ ಮಹತ್ವಾಂಕ್ಷೆ ಯೋಜನೆಗಳಲ್ಲಿ ಒಂದಾದ ಕ್ಯಾಚ್ ದ ರೈನ್(ಮಳೆ ನೀರು ಹಿಡಿಯಿರಿ) ಅನುಷ್ಠಾನಕ್ಕೆ ಹಿನ್ನಡೆಯಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಲಾಯಿತು.
    ಮುಂದಿನ ವರ್ಷ ಮಾರ್ಚ್ ೨೨ರಂದು ಕ್ಷೇತ್ರದಲ್ಲಿ ಕೆರೆ ಕಟ್ಟೆಗಳ ಉತ್ಸವ ನಡೆಯುತ್ತಿದ್ದು, ಉತ್ಸವಕ್ಕೆ ಪೂರಕವೆಂಬಂತೆ ಹಾಗು ಕ್ಯಾಚ್ ದ ರೈನ್ ಯೋಜನೆಗೆ ಹಿಂಬುಕೊಡಲು ತಕ್ಷಣ ತಾಲೂಕು ಆಡಳಿತ ಕೆರೆಗಳ ಒತ್ತುವರಿ ತೆರವು ಕಾರ್ಯಾಚರಣೆ ತುರ್ತಾಗಿ ನಡೆಸಬೇಕು. ಒಂದು ವೇಳೆ ವಿಳಂಬವಾದಲ್ಲಿ ಮುಂದಿನ ದಿನಗಳಲ್ಲಿ ಕೇಂದ್ರ ಹಾಗು ರಾಜ್ಯ ಸರ್ಕಾರಗಳ ಗಮನ ಸೆಳೆಯಲು ಅಮರಣಾಂತರ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಸಿದರು.
    ಮುಖಂಡರುಗಳಾದ ಆರ್. ವೇಣುಗೋಪಾಲ್, ಮುರುಗೇಶ್, ಚಂದ್ರಶೇಖರ್, ಇಂದ್ರಾಣಿ, ಶೈಲಜಾ ಮಹೇಶ್, ಮೊಹಮ್ಮದ್ ಹನೀಫ್, ಪ್ರಸನ್ನ, ವೆಂಕಟೇಶ್, ಶಂಭೂಗೌಡ, ನಾಗೇಶ್, ಉಮೇಶ್‌ನಾಯ್ಕ, ಕುಮಾರನಾಯ್ಕ, ಕಸ್ನಾನಾಯ್ಕ, ಪಾಂಡುರಂಗೇಗೌಡ ಸೇರಿದಂತೆ ಇನ್ನೂ ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಆದರ್ಶತನ ಮೈಗೂಡಿಸಿಕೊಂಡು ಮುನ್ನಡೆಯಿರಿ : ಬಿಳಿಕಿ ಶ್ರೀ

ಭದ್ರಾವತಿ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ೧೧೫ನೇ ಹುಟ್ಟುಹಬ್ಬದ ಅಂಗವಾಗಿ ಬಿಳಿಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಒಳ ರೋಗಿಗಳಿಗೆ ಹಾಲು, ಹಣ್ಣು ಮತ್ತು ಬ್ರೆಡ್ ವಿತರಿಸಲಾಯಿತು.
    ಭದ್ರಾವತಿ, ಏ. ೧: ಕರ್ನಾಟಕ ರತ್ನ, ತ್ರಿವಿಧ ದಾಸೋಹಿ, ತುಮಕೂರು ಸಿದ್ದಗಂಗಾ ಮಠದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಆದರ್ಶತನಗಳನ್ನು ಮೈಗೂಡಿಸಿಕೊಂಡು ನಾವೆಲ್ಲರೂ ಮುನ್ನಡೆಯಬೇಕಾಗಿದೆ ಎಂದು ಬಿಳಿಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
    ಅವರು ಶುಕ್ರವಾರ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ೧೧೫ನೇ ಹುಟ್ಟುಹಬ್ಬದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಒಳ ರೋಗಿಗಳಿಗೆ ಹಾಲು, ಹಣ್ಣು ಮತ್ತು ಬ್ರೆಡ್ ವಿತರಣೆ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.
    ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರು ಸಮಾಜಕ್ಕೆ ನೀಡಿರುವ ಕೊಡುಗೆ ಅಪಾರವಾಗಿದ್ದು, ಅವರ ಹುಟ್ಟುಹಬ್ಬವನ್ನು ಮಹಾಸಭಾ ವತಿಯಿಂದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಆಚರಿಸುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ ಎಂದರು.
    ಮಹಾಸಭಾ ತಾಲೂಕು ಅಧ್ಯಕ್ಷೆ ನಂದಿನಿ ಮಲ್ಲಿಕಾರ್ಜುನ, ಉಪಾಧ್ಯಕ್ಷ ವಾಗೀಶ್, ಪ್ರಧಾನ ಕಾರ್ಯದರ್ಶಿ ಅರಳಿಹಳ್ಳಿ ರವಿ(ರೇವಪ್ಪ), ಬಾರಂದೂರು ಮಂಜುನಾಥ್, ಮಹಿಳಾ ಘಟಕದ ಅಧ್ಯಕ್ಷೆ ರೂಪ ನಾಗರಾಜ್, ಕಾರ್ಯದರ್ಶಿ ಕವಿತಾ ಸುರೇಶ್, ಯುವ ಘಟಕದ ಅಧ್ಯಕ್ಷ ಎಚ್. ಮಂಜುನಾಥ್, ಉಪಾಧ್ಯಕ್ಷ ಮಹಾದೇವ, ಖಜಾಂಚಿ ರಮೇಶ್,  ಮಹಾಸಭಾ ಮಾಜಿ ಅಧ್ಯಕ್ಷ ಸಿದ್ದಲಿಂಗಯ್ಯ, ರವಿಕುಮಾರ್, ಜಗದೀಶ್ ಪಾಟೀಲ್, ಸಚ್ಚಿದಾನಂದ, ಬಿ.ಎಸ್ ಮಹೇಶ್‌ಕುಮಾರ್, ಕಲ್ಪನಾ, ಲಕ್ಷ್ಮಿಕಾಂತ್, ಕುಮಾರ್ ಹಾಗು ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ವರ್ಗದವರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  
    ಹಿರಿಯ ನಾಗರೀಕರ ಆರೈಕೆ ಕೇಂದ್ರದಲ್ಲಿ ಹುಟ್ಟುಹಬ್ಬ:
   ಉಜ್ಜನಿಪುರ ಆನೇಕೊಪ್ಪ ಎಂಪಿಎಂ ಬಡಾವಣೆಯಲ್ಲಿರುವ ಸಂಜೀವಿನಿ ಹಿರಿಯ ನಾಗರೀಕರ ಆರೈಕೆ ಕೇಂದ್ರದಲ್ಲೂ ಮಹಾಸಭಾ ವತಿಯಿಂದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಹುಟ್ಟುಹಬ್ಬ ಆಚರಿಸಲಾಯಿತು.
    ಬಿಳಿಕಿ ಶ್ರೀಗಳು ಹಿರಿಯ ನಾಗರೀಕರೊಂದಿಗೆ ಹುಟ್ಟುಹಬ್ಬದ ಸಂಭ್ರಮ ಹಂಚಿಕೊಂಡರು. ಮಹಾಸಭಾ ಪ್ರಮುಖರು, ಹಿರಿಯ ನಾಗರೀಕರ ಆರೈಕೆ ಕೇಂದ್ರದ ಮೇಲ್ವಿಚಾರಕರು, ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.