Thursday, April 7, 2022

ಭದ್ರಾವತಿ ನಗರಸಭೆ ವ್ಯಾಪ್ತಿಯಲ್ಲಿ ಎರಡು ಕೆರೆಗಳ ತೆರವು ಕಾರ್ಯಾಚರಣೆ


 
ಭದ್ರಾವತಿ: ಭದ್ರಾವತಿ ನಗರಸಭೆ ವ್ಯಾಪ್ತಿಯ ವಾರ್ಡ್ ನಂ. 22ರ ಬಿಳಿ ಕಟ್ಟೆ ಕೆರೆ ಮತ್ತು ಬಳಸ ಕಟ್ಟೆ ಕೆರೆ ತೆರವು ಕಾರ್ಯಾಚರಣೆ ಶುಕ್ರವಾರ ನಡೆಯಿತು.
ಸರ್ವೆ ನಂ. 13ರ ಬಿಳಿಕಟ್ಟೆ ಕೆರೆ ಮತ್ತು ಸರ್ವೆ ನಂ. 16ರ ಬಳಸಕಟ್ಟೆ ಕೆರೆ ಒಟ್ಟು10 ಎಕರೆ 18 ಗುಂಟೆ ವಿಸ್ತೀರ್ಣ ಹೊಂದಿದ್ದು, ಸುಮಾರು ಮೂರ್ನಾಲ್ಕು ದಶಕಗಳಿಂದ ಒತ್ತುವರಿಯಾಗಿತ್ತು. ವಿವಿಧ ಸಂಘ-ಸಂಸ್ಥೆಗಳಿಂದ ಕೆರೆ ಒತ್ತುವರಿ ತೆರವುಗೊಳಿಸುವಂತೆ ತಾಲೂಕು ಆಡಳಿತಕ್ಕೆ ದೂರುಗಳ ಬಂದ ಹಿನ್ನೆಲೆಯಲ್ಲಿ ಸರ್ವೆ ಕಾರ್ಯಕ್ಕೆ ಮುಂದಾಗಿ ನಗರಸಭೆ ಆಡಳಿತದೊಂದಿಗೆ ತೆರವು ಕಾರ್ಯಾಚರಣೆ ನಡೆಸಲಾಯಿತು.
ತೆರವು ಕಾರ್ಯಾಚರಣೆಯಲ್ಲಿ ನಗರಸಭೆ ಹಾಗೂ ಕಂದಾಯ ಇಲಾಖೆ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ಪೇಪರ್ ಟೌನ್ ಪೊಲೀಸ್ ಠಾಣೆ ಸಿಬ್ಬಂದಿಗಳನ್ನು ಭದ್ರತೆಗೆ ನಿಯೋಜಿಸಲಾಗಿತ್ತು.
ಕಂದಾಯಾಧಿಕಾರಿ ಪ್ರಶಾಂತ್ ನಗರಸಭೆ ಇಂಜಿನಿಯರ್ ರಂಗರಾಜಪುರ ಮತ್ತು ಕಂದಾಯಾಧಿಕಾರಿ ರಾಜಕುಮಾರ್ ಪೊಲೀಸ್ ಇನ್ಸ್ ಪೆಕ್ಟರ್ ಈ ಓ ಮಂಜುನಾಥ್ ಸೇರಿದಂತೆ ಇನ್ನಿತರ ಅಧಿಕಾರಿಗಳು, ನಗರಸಭೆ ಮಾಜಿ ಸದಸ್ಯರಾದ ಬದರಿ ನಾರಾಯಣ, ವೆಂಕಟಯ್ಯ ಸೇರಿದಂತೆ ಮುಖಂಡರು ಉಪಸ್ಥಿತರಿದ್ದರು.







ಪ್ರಚೋದನಾಕಾರಿ ಹೇಳಿಕೆ ಗೃಹ ಸಚಿವರ ವಿರುದ್ಧ ದೂರು

ಗೃಹ ಸಚಿವ ಅರಗ ಜ್ಞಾನೆಂದ್ರ ವಿರುದ್ಧ ಯುವ ಕಾಂಗ್ರೆಸ್ ನಗರ ಮತ್ತು ಗ್ರಾಮಾಂತರ ಘಟಕಗಳಿಂದ ಗುರುವಾರ ಭದ್ರಾವತಿ ಹಳೇನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಯಿತು.
    ಭದ್ರಾವತಿ, ಏ. ೭: ಗೃಹ ಸಚಿವ ಅರಗ ಜ್ಞಾನೆಂದ್ರ ವಿರುದ್ಧ ಯುವ ಕಾಂಗ್ರೆಸ್ ನಗರ ಮತ್ತು ಗ್ರಾಮಾಂತರ ಘಟಕಗಳಿಂದ ಗುರುವಾರ ಹಳೇನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.
    ಗೃಹ ಸಚಿವರು ಜಾತಿ-ಧರ್ಮಗಳ ನಡುವೆ ಕೋಮು ಗಲಭೆ ಸೃಷ್ಟಿಸುವ ನಿಟ್ಟಿನಲ್ಲಿ ಪ್ರಚೋದನಾಕಾರಿ ಹೇಳಿಕೆಯನ್ನು ನೀಡಿದ್ದು, ಈ ಹೇಳಿಕೆಯನ್ನು ಯುವ ಕಾಂಗ್ರೆಸ್ ಖಂಡಿಸುತ್ತದೆ. ಸಚಿವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಆಗ್ರಹಿಸಲಾಗಿದೆ.
    ಪೊಲೀಸ್ ನಗರ ವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆಯವರಿಗೆ ದೂರು ನೀಡಲಾಯಿತು. ಯುವ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಜಿ. ವಿನೋದ್‌ಕುಮಾರ್, ಗ್ರಾಮಾಂತರ ಘಟಕದ ಅಧ್ಯಕ್ಷ ಅಫ್ತಾಬ್ ಅಹಮದ್, ಉಪಾಧ್ಯಕ್ಷ ತಬ್ರೇಜ್ ಖಾನ್, ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಬಿ. ಗಂಗಾಧರ್, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಚಿನ್ ಸಿಂಧ್ಯಾ, ಕೇಶವ, ಅಮೋಸ್, ಸಜ್ಜಾದ್, ಸೈಯದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಆಸ್ತಿ ತೆರಿಗೆ ಹೆಚ್ಚಳಕ್ಕೆ ತೀವ್ರ ವಿರೋಧ : ಬಾವಿಗಿಳಿದು ಧರಣಿಗೆ ಮುಂದಾದ ಸದಸ್ಯರು

ಗೀತಾರಾಜ್‌ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಾಮಾನ್ಯ ಸಭೆ

ಭದ್ರಾವತಿ ನಗರಸಭೆಯಲ್ಲಿ ಗುರುವಾರ ನಡೆದ ವಿಶೇಷ ಸಾಮಾನ್ಯಸಭೆಯಲ್ಲಿ ಸದಸ್ಯರು ಆಸ್ತಿ ತೆರಿಗೆ ಶುಲ್ಕ ಹೆಚ್ಚಳಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದರು. 
    ಭದ್ರಾವತಿ, ಏ. ೭: ನಗರಸಭೆ ವ್ಯಾಪ್ತಿಯಲ್ಲಿ ಈ ಬಾರಿ ಆಸ್ತಿ ತೆರಿಗೆ ಹೆಚ್ಚಳಕ್ಕೆ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದ ಘಟನೆ ಗುರುವಾರ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಕಂಡು ಬಂದಿತು.
    ಅಧ್ಯಕ್ಷೆ ಗೀತಾ ರಾಜ್‌ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಿರಿಯ ಸದಸ್ಯರಾದ ವಿ. ಕದಿರೇಶ್, ಬಿ.ಕೆ ಮೋಹನ್, ಬಿ.ಟಿ ನಾಗರಾಜ್ ಸೇರಿದಂತೆ ಇನ್ನಿತರರು ಮಾತನಾಡಿ, ಈ ಹಿಂದೆ ಆಸ್ತಿ ತೆರಿಗೆ ಶುಲ್ಕ ಕೇವಲ ೬೭ ರು. ಗಳಿದ್ದು, ಏಕಾಏಕಿ ೨೦೦೦ ರು.ಗಳಿಗೂ ಅಧಿಕ ಏರಿಕೆಯಾಗಿದ್ದು, ಇದಕ್ಕೆ ಕಾರಣ ತಿಳಿದು ಬಂದಿಲ್ಲ. ಇದೀಗ ಪುನಃ ಶೇ.೩ ರಿಂದ ೫ರಷ್ಟು ಏರಿಕೆ ಮಾಡುತ್ತಿರುವುದು ಜನಸಾಮಾನ್ಯರನ್ನು ಸಂಕಷ್ಟಕ್ಕೆ ತಳುವಂತಾಗಿದೆ. ಈಗಾಗಲೇ ಕಳೆದ ೨ ವರ್ಷಗಳಿಂದ ಕೊರೋನಾ ಹಿನ್ನಲೆಯಲ್ಲಿ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ನಡುವೆ ಆಸ್ತಿ ತೆರಿಗೆ ಶುಲ್ಕ ಹೆಚ್ಚಳ ಮಾಡುವುದು ಸರಿಯಲ್ಲ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಒತ್ತಾಯಿಸಿದರು.
    ಇದಕ್ಕೆ ಪ್ರತಿಕ್ರಿಯಿಸಿದ ಕಂದಾಯಾಧಿಕಾರಿ ರಾಜ್‌ಕುಮಾರ್, ಮಾ.೧೮ರಂತೆ ಸ್ವಯಂ ಘೋಷಿತ ಆಸ್ತಿ ತೆರಿಗೆಯನ್ನು ಕರ್ನಾಟಕ ಪುರಸಭೆಗಳ ಅಧಿನಿಯಮ ೧೯೬೪ ಹಾಗು ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ ೧೯೭೬ ಗಳಿಗೆ ತಿದ್ದುಪಡಿ ತರಲಾಗಿದ್ದು, ಕರ್ನಾಟಕ ಸ್ಟ್ಯಾಂಪ್ ಅಧಿನಿಯಮ ೧೯೫೭ ರ ೪೫(ಬಿ) ಪ್ರಕರಣದಡಿಯಲ್ಲಿ ಪ್ರಕಟಿಸಲಾಗುವ ಚಾಲ್ತಿ ಸಾಲಿನ ಮಾರುಕಟ್ಟೆ ಮೌಲ್ಯದ ಮಾರ್ಗ ಸೂಚಿ 'ಎ' ಬೆಲೆಗಳ ಆಧಾರದ ಮೇರೆಗೆ ಆಸ್ತಿ ತೆರಿಗೆ ನಿರ್ಧರಣೆ ಮಾಡಬೇಕಾಗಿರುತ್ತದೆ. ಈ ಹಿನ್ನಲೆಯಲ್ಲಿ ಶೇ.೩ ರಿಂದ ೫ರಷ್ಟು ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ. ನೋಂದಾಣಿ ಇಲಾಖೆ ಶುಲ್ಕ ಹೆಚ್ಚಳ ಮಾಡಿರುವುದು ಸೇರಿದಂತೆ ಇನ್ನಿತರ ಕಾರಣಗಳಿಂದ ಈ ಹಿಂದೆ ೬೭ ರು. ಇದ್ದ ಆಸ್ತಿ ತೆರಿಗೆ ಶುಲ್ಕ  ೨,೬೬೬ ರು.ಗಳಿಗೆ ಏರಿಕೆಯಾಗಿದೆ. ತೆರಿಗೆ ಶುಲ್ಕ ತಾಂತ್ರಿಕವಾಗಿ ನಿಗದಿಗೊಳ್ಳುತ್ತಿದ್ದು, ನಗರಸಭೆ ಇದನ್ನು ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
    ಇದಕ್ಕೆ ತೀವ್ರ ವಿರೋಧಪಡಿಸಿದ ಸದಸ್ಯರು ಬಾವಿಗಿಳಿದು ಧರಣಿ ನಡೆಸಲು ಮುಂದಾದರೂ ಕೆಲ ಸಮಯ ಮಾತಿನ ಚಕಮಕಿ ನಡೆದು ಕೊನೆಯಲ್ಲಿ ಆಸ್ತಿ ತೆರಿಗೆ ಹೆಚ್ಚಳ ಮಾಡದೆ ಯಥಾಸ್ಥಿತಿ ಕಾಯ್ದುಕೊಳ್ಳುವುದಾಗಿ ಅಧ್ಯಕ್ಷರು ಭರವಸೆ ನೀಡಿದರು.
        ಉಳಿದಂತೆ ೨೦೨೧-೨೨ನೇ ಸಾಲಿನ ಶೇ.೨೪.೧೦ರ ನಿಧಿ ಕ್ರಿಯಾ ಯೋಜನೆಯಡಿ ಪರಿಶಿಷ್ಟ ಜಾತಿಯವರಿಗೆ ಬ್ಯಾಂಕ್‌ಗಳ ಸಾಲದ ನೆರವಿನಿಂದ ಸಣ್ಣ ಉದ್ದಿಮೆಯನ್ನು ಪ್ರಾರಂಭಿಸಲು ಸಹಾಯಧನ ಕೋರಿ ಬಂದಿರುವ ಅರ್ಜಿಗಳ ಬಗ್ಗೆ, ಶೇ.೭.೨೫ರ ನಿಧಿ ಕ್ರಿಯಾ ಯೋಜನೆಯಡಿಯಲ್ಲಿ ಇತರೆ ಬಡವರ್ಗದವರಿಗೆ ಬ್ಯಾಂಕ್‌ಗಳ ಸಾಲದ ನೆರವಿನಿಂದ ಸಣ್ಣ ಉದ್ದಿಮೆಯನ್ನು ಪ್ರಾರಂಭಿಸಲು ಸಹಾಯಧನ ಕೋರಿ ಬಂದಿರುವ ಅರ್ಜಿಗಳ ಬಗ್ಗೆ  ಹಾಗು ಶೇ.೫ರ ನಿಧಿ ಕ್ರಿಯಾ ಯೋಜನೆಯಡಿಯಲ್ಲಿ ೫ ವಿಕಲಚೇತನರಿಗೆ ಬ್ಯಾಂಕ್‌ಗಳ ಸಾಲದ ನೆರವಿನಿಂದ ಸಣ್ಣ ಉದ್ದಿಮೆಯನ್ನು ಪ್ರಾರಂಭಿಸಲು ಸಹಾಯಧನ ಕೋರಿ ಬಂದಿರುವ ಅರ್ಜಿಗಳ ಬಗ್ಗೆ ಚರ್ಚಿಸಲಾಯಿತು.
    ೧೫ನೇ ಹಣಕಾಸು ಆಯೋಗದ ಸಾಮಾನ್ಯ ಮೂಲ ಅನುದಾನದಡಿಯಲ್ಲಿ ಉಳಿಕೆಯಾಗಿರುವ ಮೊತ್ತದಲ್ಲಿ ಕೈಗೊಳ್ಳಲಾಗಿರುವ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡುವ ಕುರಿತು ಹಾಗು ೨೦೨೧-೨೨ನೇ ಸಾಲಿನ ಎಸ್‌ಎಫ್‌ಸಿ ಮುಕ್ತ ನಿಧಿ ಮತ್ತು ೧೫ನೇ ಹಣಕಾಸು ಅನುದಾನ, ಎಸ್‌ಎಫ್‌ಸಿ ಕುಡಿಯುವ ನೀರು ಅನುದಾನದಡಿಯಲ್ಲಿ ಮತ್ತು ೨೦೧೭-೧೮ ಹಾಗು ೨೦೧೮-೧೯ನೇ ಸಾಲಿನ ೧೪ನೇ ಹಣಕಾಸು ಸಾಮಾನ್ಯ ಮೂಲ ಅನುದಾನ ಹಾಗು ೨೦೧೬-೧೭ನೇ ಸಾಲಿನ ಹಣಕಾಸು ಪ್ರೋತ್ಸಾಹ ಅನುದಾನದ ಉಳಿತಾಯ ಮೊತ್ತಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಿರ್ವಹಿಸಲು ಗುತ್ತಿಗೆದಾರರನ್ನು ಅನುಮೋದಿಸುವ ಕುರಿತು ಚರ್ಚೆ ನಡೆಸಲಾಯಿತು.
    ಸಭೆ ಆರಂಭದಲ್ಲಿ ಹಿರಿಯ ಸದಸ್ಯ ಬಿ.ಟಿ ನಾಗರಾಜ್ ಮಾತನಾಡಿ, ೩೫ ವಾರ್ಡ್‌ಗಳನ್ನು ಹೊಂದಿರುವ ನಗರಸಭೆಯಲ್ಲಿ ಕೇವಲ ಒಂದೇ ಒಂದು ಮುಕ್ತಿ ವಾಹಿನಿ ವಾಹನವಿದ್ದು, ನಗರಸಭೆ ವ್ಯಾಪ್ತಿಯಲ್ಲಿ ಮುಕ್ತಿ ವಾಹಿನಿ ವಾಹನಗಳ ಬೇಡಿಕೆ ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
    ಬಸವರಾಜ್ ಬಿ ಆನೇಕೊಪ್ಪ ಮಾತನಾಡಿ, ಸಾಮಾನ್ಯ ಸಭೆಗಳಲ್ಲಿ ಎಲ್ಲಾ ಸದಸ್ಯರಿಗೂ ಮಾತನಾಡಲು ಅವಕಾಶ ನೀಡಬೇಕು. ಹೊಸದಾಗಿ ಆಯ್ಕೆಯಾಗಿರುವ ಸದಸ್ಯರ ಸಲಹೆಗಳಿಗೂ ಬೆಲೆ ನೀಡಿ ದಾಖಲಿಸಿಕೊಳ್ಳಬೇಕೆಂದು ಆಗ್ರಹಿಸಿದರು.
    ಈ ನಡುವೆ ಸದಸ್ಯರು ವಾರ್ಡ್‌ಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪರಿಸರ ಅಭಿಯಂತರ ಪ್ರಭಾಕರ್, ಬೀದಿಗಳನ್ನು ಹಿಡಿದು ಅವುಗಳಿಗೆ ಶಸ್ತ್ರ ಚಿಕಿತ್ಸೆ ನಡೆಸುವ ಕಾರ್ಯ ಶುಕ್ರವಾರದಿಂದ ಆರಂಭವಾಗಲಿದೆ. ಈಗಾಗಲೇ ಬೈಪಾಸ್ ರಸ್ತೆಯಲ್ಲಿರುವ ನಗರಸಭೆ ಪಂಪ್ ಹೌಸ್‌ನಲ್ಲಿ ಶಸ್ತ್ರ ಚಿಕಿತ್ಸೆಗೆ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಬೀದಿ ನಾಯಿಗಳಿಗೆ ಮಾತ್ರ ಶಸ್ತ್ರ ಚಿಕಿತ್ಸೆ ನಡೆಸಲಾಗುವುದು ಈ ಹಿನ್ನಲೆಯಲ್ಲಿ ಈ ಅವಧಿಯಲ್ಲಿ ಸಾಕು ನಾಯಿಗಳನ್ನು ಮನೆಯಿಂದ ಹೊರಬಿಡದಿರುವಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ ಎಂದರು.
    ಸದಸ್ಯ ಆರ್. ಶ್ರೇಯಸ್ ಗ್ರಾಮ ದೇವತೆ ಹಳೇನಗರದ ಶ್ರೀ ಹಳದಮ್ಮ ದೇವಿ ಜಾತ್ರಾ ಮಹೋತ್ಸವಕ್ಕೆ ನಗರಸಭೆವತಿಯಿಂದ ಅನುದಾನ ಬಿಡುಗಡೆಗೊಳಿಸುವಂತೆ ಮನವಿ ಮಾಡಿದರು.
    ಸಭೆಯಲ್ಲಿ ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಸುದೀಪ್‌ಕುಮಾರ್, ಪೌರಾಯುಕ್ತ ಕೆ. ಪರಮೇಶ್ ಉಪಸ್ಥಿತರಿದ್ದರು. ನಗರಸಭೆ ಬಹುತೇಕ ಸದಸ್ಯರು, ಅಧಿಕಾರಿಗಳು ಪಾಲ್ಗೊಂಡಿದ್ದರು.

ಹೊಸಮನೆ ಸರ್ಕಾರಿ ಕಾಲೇಜಿಗೆ ಅಧ್ಯಾಪಕರ ಸಂಘದ ರಾಜ್ಯಾಧ್ಯಕ್ಷರ ತಂಡ ಭೇಟಿ

ಕರ್ನಾಟಕ ರಾಜ್ಯ ಸರ್ಕಾರಿ ಪದವಿ ಕಾಲೇಜು ಅಧ್ಯಾಪಕರ ಸಂಘದ ರಾಜ್ಯಾಧ್ಯಕ್ಷ ಡಾ. ಟಿ.ಎಂ. ಮಂಜುನಾಥ್ ನೇತೃತ್ವದ ತಂಡ ಭದ್ರಾವತಿ ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜೆಗೆ ಭೇಟಿ ನೀಡಿ ಕಾಲೇಜಿನ ಅಧ್ಯಾಪಕರೊಂದಿಗೆ ಸಮಾಲೋಚನೆ ನಡೆಸಿತು. ತಂಡದ ಅಧ್ಯಕ್ಷರು ಮತ್ತು  ಪದಾಧಿಕಾರಿಗಳನ್ನು ಕಾಲೇಜು ಆಡಳಿತ ಮಂಡಳಿ ಪರವಾಗಿ ಅಭಿನಂದಿಸಲಾಯಿತು.
    ಭದ್ರಾವತಿ, ಏ. ೭: ಕರ್ನಾಟಕ ರಾಜ್ಯ ಸರ್ಕಾರಿ ಪದವಿ ಕಾಲೇಜು ಅಧ್ಯಾಪಕರ ಸಂಘದ ರಾಜ್ಯಾಧ್ಯಕ್ಷ ಡಾ. ಟಿ.ಎಂ. ಮಂಜುನಾಥ್ ನೇತೃತ್ವದ ತಂಡ ನಗರದ ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜೆಗೆ ಭೇಟಿ ನೀಡಿ ಕಾಲೇಜಿನ ಅಧ್ಯಾಪಕರೊಂದಿಗೆ ಸಮಾಲೋಚನೆ ನಡೆಸಿತು
    ಅಧ್ಯಾಪಕರ ವಿವಿಧ ಸಮಸ್ಯೆಗಳ ಕುರಿತು ಸಮಾಲೋಚನೆ ನಡೆಸಿ, ಅಧ್ಯಾಪಕರು ವಿದ್ಯಾರ್ಥಿ ಸ್ನೇಹಿಯಾಗಿ ಸರ್ಕಾರದ ಎಲ್ಲಾ ಶೈಕ್ಷಣಿಕ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಮುಂದಾಗುವಂತೆ ಹಾಗು ಅಧ್ಯಾಪಕರು ಕಡ್ಡಾಯವಾಗಿ ಸಾಮಾಜಿಕ ಕಳಕಳಿಯ ವಿಷಯ ಕುರಿತು ಸಂಶೋಧನೆ ಕೈಗೊಳ್ಳಲು ಮನವಿ ಮಾಡಲಾಯಿತು.
    ತಂಡ ಕಾಲೇಜಿನ ಶೈಕ್ಷಣಿಕ ಪ್ರಗತಿ ಹಾಗು ಪರಿಸರ ಮತ್ತು ಕಲಿಕೆಯ ಸೌಲಭ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿತು.
    ಪ್ರಾಂಶುಪಾಲ ಡಾ . ಧನಂಜಯ ಬಿ. ಜಿ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಕಾರ್ಯದರ್ಶಿ ಡಾ . ನಾರಾಯಣ, ಕೋಶಾಧ್ಯಕ್ಷ  ಡಾ. ಶ್ರೀನಾಥ್ ಮತ್ತು ರಾಜ್ಯ ಪದಾಧಿಕಾರಿಗಳು ಉಪಸ್ಥಿತರಿದ್ದರು.  ತಂಡದ ಅಧ್ಯಕ್ಷರು ಮತ್ತು  ಪದಾಧಿಕಾರಿಗಳನ್ನು ಕಾಲೇಜು ಆಡಳಿತ ಮಂಡಳಿ ಪರವಾಗಿ ಅಭಿನಂದಿಸಲಾಯಿತು.

ನ್ಯಾಯವಾದಿ ಸೂರ್ಯಪ್ರಕಾಶ್ ಎಎಪಿ ಸೇರ್ಪಡೆ

ಭದ್ರಾವತಿ ನಗರದ ಹಿರಿಯ ನ್ಯಾಯವಾದಿ ಸೂರ್ಯಪ್ರಕಾಶ್ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
    ಭದ್ರಾವತಿ, ಏ. ೭:  ನಗರದ ಹಿರಿಯ ನ್ಯಾಯವಾದಿ ಸೂರ್ಯಪ್ರಕಾಶ್ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
    ಪಕ್ಷದ ತತ್ವ, ಸಿದ್ಧಾಂತಗಳು ಹಾಗು ಅರವಿಂದ್ ಕೇಜ್ರಿವಾಲ್‌ರವರ ದೆಹಲಿ ಆಡಳಿತ ಮೆಚ್ಚಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದು, ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೇಂದ್ರ ಹಾಗು ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳ ವಿರೋಧ ಹೋರಾಟ ನಡೆಸುವ ಜೊತೆಗೆ ಭ್ರಷ್ಟಾಚಾರ ನಿರ್ಮೂಲನೆಗೆ ಶ್ರಮಿಸುತ್ತೇನೆ. ಪಕ್ಷದ ವಿಚಾರಧಾರೆಗಳು ನಗರ ಹಾಗು ಗ್ರಾಮೀಣ ಪ್ರದೇಶಗಳಿಗೆ ತಲುಪುವಂತೆ ಮಾಡಿ ಶ್ರೀಸಾಮಾನ್ಯರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದರು.
    ಪಕ್ಷದ ಪ್ರಮುಖರಾದ ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್, ಪರಮೇಶ್ವರಚಾರ್, ಜಾವಿದ್, ರಮೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Wednesday, April 6, 2022

ಬಿಜೆಪಿ ಸಂಸ್ಥಾಪನಾ ದಿನ : ಶೋಭಯಾತ್ರೆ


ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನದ ಅಂಗವಾಗಿ ಬುಧವಾರ ಭದ್ರಾವತಿಯಲ್ಲಿ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತದಿಂದ ಮಾಧವಚಾರ್ ವೃತ್ತದವರೆಗೂ ಶೋಭಯಾತ್ರೆ ನಡೆಸಲಾಯಿತು.
    ಭದ್ರಾವತಿ, ಏ. ೬: ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನದ ಅಂಗವಾಗಿ ಬುಧವಾರ ನಗರದಲ್ಲಿ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತದಿಂದ ಮಾಧವಚಾರ್ ವೃತ್ತದವರೆಗೂ ಶೋಭಯಾತ್ರೆ ನಡೆಸಲಾಯಿತು.
    ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್‌ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಪಕ್ಷದ ಪ್ರಮುಖರು, ಕಾರ್ಯಕರ್ತರು ಪಕ್ಷದ ತತ್ವ, ಸಿದ್ದಾಂತಗಳು, ಧ್ಯೇಯೋದ್ದೇಶಗಳನ್ನು ಹಾಗು ಬಿಜೆಪಿ ಸರ್ಕಾರದ ಸಾಧನೆಗಳಿಗೆ ಪ್ರಶಂಸೆ ವ್ಯಕ್ತಪಡಿಸಿ ಘೋಷಣೆಗಳನ್ನು ಹಾಕಿದರು. ಶೋಭಯಾತ್ರೆ ಹಾಲಪ್ಪ ವೃತ್ತ ಮೂಲಕ ಮಾಧವಚಾರ್ ವೃತ್ತ ತಲುಪಿತು. ಪಕ್ಷದ ಮಂಡಲ ಅಧ್ಯಕ್ಷ ಎಂ. ಪ್ರಭಾಕರ್ ನೇತೃತ್ವ ವಹಿಸಿದ್ದರು.
    ಪ್ರಮುಖರಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಕೆ ಶ್ರೀನಾಥ್, ಜಿ. ಧರ್ಮಪ್ರಸಾದ್, ತಾಲೂಕು ಪ್ರಧಾನ ಕಾರ್ಯದರ್ಶಿಗಳಾದ ಚನ್ನೇಶ್, ರಂಗಸ್ವಾಮಿ, ಎಸ್. ಕುಮಾರ್, ಎನ್. ವಿಶ್ವನಾಥರಾವ್, ಕರ್ನಾಟಕ ಒಳಚರಂಡಿ ಮತ್ತು ನೀರು ಸರಬರಾಜು ಮಂಡಳಿ ನಿರ್ದೇಶಕ ಮಂಗೋಟೆ ರುದ್ರೇಶ್, ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಪಾಟೀಲ್, ಎಸಿ.ಸಿ ಮೋರ್ಚಾ ಅಧ್ಯಕ್ಷ ಪಿ. ಗಣೇಶ್‌ರಾವ್, ಯುವ ಘಟಕದ ಅಧ್ಯಕ್ಷ ವಿಜಯ್‌ರಾಜ್, ನಗರಸಭೆ ಸದಸ್ಯರಾದ ಅನಿತಾ ಮಲ್ಲೇಶ್, ಕರಿಗೌಡ, ಮಂಜುನಾಥ್, ಜಿ. ಆನಂದಕುಮಾರ್, ಎಂ. ಮಂಜುನಾಥ್, ಬಿ.ಎಸ್ ಶ್ರೀನಾಥ್, ರಾಮನಾಥ್ ಬರ್ಗೆ, ರಾಜಶೇಖರ್ ಉಪ್ಪಾರ್, ಚಂದ್ರಪ್ಪ, ಹೇಮಾವತಿ, ಕವಿತಾ, ಅನ್ನಪೂರ್ಣ, ಮಂಜುಳ, ಚಂದ್ರು, ಸತೀಶ್‌ಕುಮಾರ್, ಸುಬ್ರಮಣಿ, ಧನುಷ್ ಬೋಸ್ಲೆ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
    ಪಕ್ಷಕ್ಕೆ ಸೇರ್ಪಡೆ :
    ಪಕ್ಷದ ತತ್ವ, ಸಿದ್ದಾಂತಗಳು, ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯ ವೈಖರಿಗಳನ್ನು ಮೆಚ್ಚಿ ಪಕ್ಷದ ಸಂಸ್ಥಾಪನಾ ದಿನದಂದು ನಗರದಲ್ಲಿ ಕೆಲವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಹರೀಶ್, ಮೋಹನ್, ವೆಂಕಟೇಶ್ ಮತ್ತು ವಿಶು ಸೇರಿದಂತೆ ಇನ್ನಿತರರು ಪಕ್ಷಕ್ಕೆ ಸೇರ್ಪಡೆಗೊಂಡರು. ಪಕ್ಷದ ಸ್ಥಳೀಯ ಮುಖಂಡ ರಾಜಶೇಖರ ಉಪ್ಪಾರ ಪಕ್ಷದ ಧ್ವಜ ನೀಡಿ ಪರಮಾಡಿ ಕೊಂಡರು.


ಬಿಜೆಪಿ ಪಕ್ಷದ ತತ್ವ, ಸಿದ್ದಾಂತಗಳು, ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯ ವೈಖರಿಗಳನ್ನು ಮೆಚ್ಚಿ ಪಕ್ಷದ ಸಂಸ್ಥಾಪನಾ ದಿನದಂದು ಭದ್ರಾವತಿಯಲ್ಲಿ  ಕೆಲವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಕೆರೆ ಕೋಡಿ ಶಿಥಿಲ : ನೀರು ಹರಿದು ಹಾಳಾದ ರಸ್ತೆ

ಸ್ಥಳ ಪರಿಶೀಲನೆ ನಡೆಸಿದ ಕಾಡಾ ಅಧ್ಯಕ್ಷೆ ಪವಿತ್ರ ರಾಮಯ್ಯ

ಭದ್ರಾವತಿ ನಗರಸಭೆ ವ್ಯಾಪ್ತಿಯ ತಮ್ಮಣ್ಣ ಕಾಲೋನಿಯಲ್ಲಿರುವ ಕೆರೆ ಕೋಡಿ ಶಿಥಿಲಗೊಂಡಿದ್ದು, ಇದರಿಂದಾಗಿ ಕೆರೆ ನೀರು ಹರಿದು ರಸ್ತೆ ಹಾಳಾಗಿದೆ. ಈ ಹಿನ್ನಲೆಯಲ್ಲಿ  ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷೆ ಪವಿತ್ರ ರಾಮಯ್ಯ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು.
    ಭದ್ರಾವತಿ, ಏ. ೬: ನಗರಸಭೆ ವ್ಯಾಪ್ತಿಯ ತಮ್ಮಣ್ಣ ಕಾಲೋನಿಯಲ್ಲಿರುವ ಕೆರೆ ಕೋಡಿ ಶಿಥಿಲಗೊಂಡಿದ್ದು, ಇದರಿಂದಾಗಿ ಕೆರೆ ನೀರು ಹರಿದು ರಸ್ತೆ ಹಾಳಾಗಿದೆ. ಈ ಹಿನ್ನಲೆಯಲ್ಲಿ  ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷೆ ಪವಿತ್ರ ರಾಮಯ್ಯ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು.
    ಕೆರೆ ಕೋಡಿ ಪಕ್ಕದಲ್ಲಿರುವ ರಸ್ತೆಯು ರೈತರ ಜಮೀನುಗಳಿಗೆ ಸಂಪರ್ಕಗೊಂಡಿದ್ದು, ರಸ್ತೆ ಹಾಳಾಗಿರುವುದರಿಂದ ಈ ಭಾಗದಲ್ಲಿ ಸಂಚಾರಕ್ಕೆ ತೊಂದರೆಯಾಗಿದೆ. ಈ ಹಿನ್ನಲೆಯಲ್ಲಿ ರೈತರು ಹಾಗು ಸ್ಥಳೀಯರು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ ಶ್ರೀನಾಥ್ ನೇತೃತ್ವದಲ್ಲಿ ಕಾಡಾ ಅಧ್ಯಕ್ಷರನ್ನು ಭೇಟಿ ಮಾಡಿ ಸಮಸ್ಯೆ ವಿವರಿಸಿದ್ದರು.
    ಖುದ್ದಾಗಿ ಸ್ಥಳ ಪರಿಶೀಲನೆ ನಡೆಸಿದ ಅಧ್ಯಕ್ಷರು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ರೈತರು ಹಾಗು ಸ್ಥಳೀಯರು ಕೆರೆ ಕೋಡಿ ಬಳಿ ರಸ್ತೆಗೆ ಮೇಲ್ಸೇತುವೆ ನಿರ್ಮಿಸುವಂತೆ ಮನವಿ ಮಾಡಿದರು.