Tuesday, April 12, 2022

ಸುಸಜ್ಜಿತ ಅಂಬೇಡ್ಕರ್ ಭವನ ನಿರ್ಮಾಣಗೊಂಡಿಲ್ಲ : ೪ ದಶಕಗಳ ಹೋರಾಟಕ್ಕೆ ಫಲ ಲಭಿಸಿಲ್ಲ

ಭವನ ಪೂರ್ಣಗೊಳ್ಳಲು ಬೇಕು ಇನ್ನೂ ರು. ೬೨.೬೩ ಲಕ್ಷ..!

ಭದ್ರಾವತಿ ಹಳೇನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಿಂಭಾಗ ನಿರ್ಮಾಣ ಹಂತದಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಭವನ.

* ಅನಂತಕುಮಾರ್
    ಭದ್ರಾವತಿ, ಏ. ೧೨: ಕ್ಷೇತ್ರದಲ್ಲಿ ಸುಮಾರು ೪ ದಶಕಗಳ ಹೋರಾಟಕ್ಕೆ ಇನ್ನೂ ಫಲ ಲಭಿಸಿಲ್ಲ. ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಭವನ ಈ ಬಾರಿ ಸಹ ಪೂರ್ಣಗೊಂಡಿಲ್ಲ.
    ದಲಿತ ಚಳುವಳಿ ಹುಟ್ಟಿದ ನೆಲದಲ್ಲಿ ಅದರ ಮೂಲ ಪ್ರೇರಕ ಶಕ್ತಿ, ಜಗತ್ತಿನ ಶ್ರೇಷ್ಠ ಜ್ಞಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಡಾ. ಬಿ.ಆರ್ ಅಂಬೇಡ್ಕರ್‌ರವರ ಭವನದ ಕನಸು ಇಂದಿಗೂ ಕನಸಾಗಿ ಉಳಿದುಕೊಂಡಿದೆ. ಕ್ಷೇತ್ರದಲ್ಲಿ ಸುಸಜ್ಜಿತ ಅಂಬೇಡ್ಕರ್ ಭವನ ನಿರ್ಮಿಸಬೇಕೆಂದು ವಿವಿಧ ದಲಿತಪರ ಸಂಘಟನೆಗಳು ಸುಮಾರು ೪ ದಶಕಗಳ ಹಿಂದೆ ಆರಂಭಿಸಿದ ಹೋರಾಟ ಇಂದಿಗೂ ಮುನ್ನಡೆಯುತ್ತಿದೆ. ಆರಂಭದ ಹೋರಾಟದಲ್ಲಿ ಜಯ ಲಭಿಸಿದಾದರೂ ನಿರೀಕ್ಷೆಯಂತೆ ಸುಸಜ್ಜಿತ ಭವನ ನಿರ್ಮಾಣಗೊಳ್ಳಲಿಲ್ಲ.
    ಆರಂಭದಲ್ಲಿ ನಗರದ ಬಿ.ಎಚ್ ರಸ್ತೆ ಅಪ್ಪರ್ ಹುತ್ತಾ ರೈಲ್ವೆ ಕೆಳಸೇತುವೆ ಬಳಿ ಅತಿ ಚಿಕ್ಕದಾದ, ಗುಡಿಸಲಿನ ಮಾದರಿಯ ಭವನ ನಿರ್ಮಾಣಗೊಂಡಿತು. ಆದರೆ ಈ ಭವನವನ್ನು ಯಾರು ಸಹ ಅಂಬೇಡ್ಕರ್ ಭವನವೆಂದು ಸ್ವೀಕರಿಸಲು ಸಿದ್ದರಿರಲಿಲ್ಲ. ಈ ಹಿನ್ನಲೆಯಲ್ಲಿ ಈ  ಭವನ ಸುಮಾರು ೪-೫ ವರ್ಷಗಳ ವರೆಗೆ ಪಾಳು ಬಿದ್ದಿತ್ತು. ನಂತರದ ದಿನಗಳಲ್ಲಿ ಈ ಭವನವನ್ನು ನಗರಸಭೆ ಆಡಳಿತ ಸಾರ್ವಜನಿಕ ಗ್ರಂಥಾಲಯಕ್ಕೆ ಬಿಟ್ಟುಕೊಡುವ ಮೂಲಕ ಇದರ ನಿರ್ವಹಣೆ ಜವಾಬ್ದಾರಿಯನ್ನು ಗ್ರಂಥಾಲಯ ಇಲಾಖೆಗೆ ವಹಿಸಿದೆ.
    ಪುನಃ ಮುಂದುವರೆದ ಹೋರಾಟ : ಜಾಗ ಹುಡುಕಾಟ
    ಸುಸಜ್ಜಿತ ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ಪುನಃ ದಲಿತಪರ ಸಂಘಟನೆಗಳು ಹೋರಾಟ ಮುಂದುವರೆಸಿದ ಪರಿಣಾಮ ನಗರಸಭೆ ವ್ಯಾಪ್ತಿಯಲ್ಲಿ ಜಾಗ ಹುಡುಕುವ ಪ್ರಕ್ರಿಯೆ ಆರಂಭಗೊಂಡಿತು. ಮೊದಲು ಹೊಸಮನೆ ಮುಖ್ಯರಸ್ತೆಯಲ್ಲಿರುವ ಹಳೇ ಸಂತೆ ಮೈದಾನದಲ್ಲಿ ಭವನ ನಿರ್ಮಾಣಕ್ಕೆ ಗುದ್ದಲಿ ಪೂಜೆ ನಡೆಸಲಾಯಿತು. ಆದರೆ ಈ ಸ್ಥಳ ಸೂಕ್ತವಲ್ಲ ಬೇರೆಡೆ ನಿರ್ಮಿಸಬೇಕೆಂದು ಒತ್ತಾಯಗಳು ಕೇಳಿ ಬಂದ ಹಿನ್ನಲೆಯಲ್ಲಿ ಕೈಬಿಡಲಾಯಿತು. ನಂತರ ಜಟ್‌ಪಟ್ ನಗರದಲ್ಲಿ ಭವನಕ್ಕೆ ಜಾಗ ಮಂಜೂರಾತಿ ಪಡೆದುಕೊಂಡರೂ ಈ ಜಾಗ ಸಹ ಸೂಕ್ತವಲ್ಲ ಎಂದು ಕೈಬಿಡಲಾಯಿತು. ಕೊನೆಯದಾಗಿ ತಾಲೂಕು ಕಚೇರಿ ರಸ್ತೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಿಂಭಾಗ ನಗರಸಭೆಗೆ ಸೇರಿದ ಖಾಲಿ ಜಾಗದಲ್ಲಿ ಭವನ ನಿರ್ಮಾಣ ಮಾಡಲು ತೀರ್ಮಾನಿಸಲಾಯಿತು. ೨೦೧೭ರಲ್ಲಿ ಅಂದಿನ ಶಾಸಕರಾಗಿದ್ದ ದಿವಂಗತ ಎಂ.ಜೆ ಅಪ್ಪಾಜಿಯವರು ಭವನ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದರು.
    ಪೂರ್ಣಗೊಳ್ಳಲು ಬೇಕು ಇನ್ನೂ ರು. ೬೨.೬೩ ಲಕ್ಷ..!
    ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಭವನ ನಿರ್ಮಿಸಲಾಗುತ್ತಿದ್ದು, ಆರಂಭದಲ್ಲಿ ಇಲಾಖೆಗೆ ಸರ್ಕಾರದಿಂದ ರು. ೧ ಕೋ. ಅನುದಾನ ಬಿಡುಗಡೆಗೊಂಡಿದ್ದು, ಈ ಅನುದಾನ ಬಳಸಿಕೊಂಡು ಮೊದಲ ಹಂತದ ಕಾಮಗಾರಿ ನಡೆಸಲಾಯಿತು. ಹೆಚ್ಚಿನ ಅನುದಾನ ಅಗತ್ಯತೆ ಹಿನ್ನಲೆಯಲ್ಲಿ ಪುನಃ ಇಲಾಖೆಗೆ ರು. ೧ ಕೋ. ಅನುದಾನ ಸರ್ಕಾರದಿಂದ ಬಿಡುಗಡೆ ಮಾಡಲಾಗಿದೆ. ಇದರ ಜೊತೆಗೆ ನಗರಸಭೆ ವತಿಯಿಂದ ರು.೫೦ ಲಕ್ಷ ಬಿಡುಗಡೆಗೊಳಿಸಲಾಗಿದೆ. ಒಟ್ಟು ರು.೨.೫೦ ಕೋ. ಅನುದಾನ ಲಭ್ಯವಾದರೂ ಸಹ ಭವನ ಪೂರ್ಣಗೊಂಡಿಲ್ಲ. ಬಾಕಿ ಇರುವ ಎಲೆಕ್ಟ್ರಿಕಲ್ ವರ್ಕ್ಸ್, ಫ್ಲಂಬಿಂಗ್, ಸ್ಟೇಜ್ ಪ್ಲೋರಿಂಗ್ ಮತ್ತು ಪೇಟಿಂಗ್ ಕಾಮಗಾರಿಗಳಿಗಾಗಿ ಇನ್ನೂ ರು. ೬೨.೬೩ ಲಕ್ಷ ಅಗತ್ಯವಿದ್ದು, ಈ ಪೈಕಿ ಮಂಜೂರಾತಿಯಾಗಿರುವ ಶಾಸಕರ ಪ್ರದೇಶಾಭಿವೃದ್ಧಿ ಅನುದಾನ ರು. ೩೭.೩೭ ಲಕ್ಷ ಇನ್ನೂ ಬಿಡುಗಡೆಗೊಂಡಿಲ್ಲ. ಇದರಿಂದಾಗಿ ಸದ್ಯಕ್ಕೆ ಕಾಮಗಾರಿ ನೆನೆಗುದಿಗೆ ಬಿದ್ದಿದೆ. ಭವನದ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಶಿವಮೊಗ್ಗ ನಿರ್ಮಿತಿ ಕೇಂದ್ರ ವಹಿಸಿಕೊಂಡಿದೆ.
    ಅನುದಾನ ಬಿಡುಗಡೆಗೆ ಒತ್ತಾಯ:
    ಕೆಲವು ತಿಂಗಳುಗಳ ಹಿಂದೆ ಶಾಸಕ ಬಿ.ಕೆ ಸಂಗಮೇಶ್ವರ್ ವಿಧಾನಸಭೆ ಅಧಿವೇಶನದಲ್ಲಿ ಭವನದ ಕಾಮಗಾರಿ ನೆನೆಗುದಿಗೆ ಬಿದ್ದಿರುವುದನ್ನು ಪ್ರಸ್ತಾಪಿಸಿ ತಕ್ಷಣ ಬಾಕಿ ಅನುದಾನ ಬಿಡುಗಡೆಗೊಳಿಸುವಂತೆ ಒತ್ತಾಯಿಸಿದ್ದಾರೆ. ಅಲ್ಲದೆ ಇತ್ತೀಚಿಗೆ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ದಲಿತಪರ ಸಂಘಟನೆಗಳ ಪ್ರಮುಖರು ಅನುದಾನ ಬಿಡುಗಡೆಗೆ ಒತ್ತಾಯಿಸಿದ್ದು, ಈ ನಡುವೆ ಕಳೆದ ೩ ದಿನಗಳಿಂದ ಹೋರಾಟ ಸಹ ನಡೆಯುತ್ತಿದೆ.
    ಈ ಬಾರಿ ದಲಿತಪರ ಸಂಘಟನೆಗಳು ಏ.೧೪ರೊಳಗೆ ಭವನ ಕಾಮಗಾರಿ ಸಂಪೂರ್ಣವಾಗಿ ಮುಕ್ತಾಯಗೊಳ್ಳುವ ನಿರೀಕ್ಷೆ ಹೊಂದಿದ್ದವು. ಆದರೆ ನಿರೀಕ್ಷೆ ಹುಸಿಯಾಗಿದ್ದು, ಭವನ ಪೂರ್ಣಗೊಳ್ಳುವವರೆಗೆ ಹೋರಾಟ ಮುಂದುವರೆಸುವುದು ಅನಿವಾರ್ಯವಾಗಿದೆ.

ಏ.೧೩ರಂದು ಶ್ರೀ ನಂಜುಂಡೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ

ಭದ್ರಾವತಿ ನಾಗತಿಬೆಳಗಲು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಸ್ಥಾನ.
    ಭದ್ರಾವತಿ, ಏ. ೧೨: ತಾಲೂಕಿನ ನಾಗತಿಬೆಳಗಲು ಇತಿಹಾಸ ಪ್ರಸಿದ್ದ ಶ್ರೀ ನಂಜುಂಡೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಏ. ೧೩ರಂದು ನಡೆಯಲಿದೆ.
    ಬೆಳಿಗ್ಗೆ ೫ ಗಂಟೆಗೆ ಶ್ರೀ ಸ್ವಾಮಿಯ ರುದ್ರಾಭಿಷೇಕ, ಮಂಗಳಾರತಿ, ೧೦ ಗಂಟೆಗೆ ಕೆಂಡಾರ್ಚನೆ, ಸಂಜೆ ಶ್ರೀ ನಂಜುಂಡೇಶ್ವರ ಸ್ವಾಮಿಯ ರಥಾರೋಹಣ, ಏ.೧೪ರ ಬೆಳಿಗ್ಗೆ ೫ ಗಂಟೆಗೆ ರಥೋತ್ಸವ, ಮಧ್ಯಾಹ್ನ ಓಕಳಿ, ಏ.೧೫ರ ಬೆಳಿಗ್ಗೆ ೬ ಗಂಟೆಗೆ ರುದ್ರಾಭಿಷೇಕ, ಸಿದ್ದರಪೂಜೆ, ಮಹಾಮಂಗಳಾರತಿ, ನಂತರ ಪ್ರಸಾದ ವಿನಿಯೋಗ, ಅನ್ನಸಂತರ್ಪಣೆ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸ್ವಾಮಿಯ ಕೃಪೆಗೆ ಪಾತ್ರರಾಗುವಂತೆ ಕೋರಲಾಗಿದೆ.
    ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸ್ವಾಮಿಯ ಕೃಪೆಗೆ ಪಾತ್ರರಾಗುವಂತೆ ಕುಮರಿನಾರಾಯಣಪುರದ ಮುಖಂಡ, ಶ್ರೀವಿನಾಯಕ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಎ. ಧರ್ಮೇಂದ್ರ ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ ದೇವಸ್ಥಾನ ಸೇವಾಸಮಿತಿ ಕಾರ್ಯದರ್ಶಿ, ಮೊ: ೮೧೦೫೨೬೪೩೫೭ ಸಂಖ್ಯೆಗೆ ಕರೆ ಮಾಡಬಹುದಾಗಿದೆ.

ಸಮಗಾರ ಶ್ರೀ ಹರಳಯ್ಯ ಸಮಾಜದ ರಾಜ್ಯಮಟ್ಟದ ವಧು-ವರರ ಸಮಾವೇಶ ಉದ್ಘಾಟನೆ

ಭದ್ರಾವತಿ ಸಮಗಾರ ಶ್ರೀ ಹರಳಯ್ಯ ಸಮಾಜದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಜ್ಯಮಟ್ಟದ ವಧು-ವರರ ಸಮಾವೇಶ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
    ಭದ್ರಾವತಿ, ಏ. ೧೨:  ಸಮಗಾರ ಶ್ರೀ ಹರಳಯ್ಯ ಸಮಾಜದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಜ್ಯಮಟ್ಟದ ವಧು-ವರರ ಸಮಾವೇಶ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
    ತಾಲೂಕಿನಲ್ಲಿ ಸಮಗಾರ ಶ್ರೀ ಹರಳಯ್ಯ ಸಮಾಜ ಸುಮಾರು ೨೫೦೦ ಜನಸಂಖ್ಯೆಯನ್ನು ಹೊಂದಿದ್ದು, ಸಣ್ಣ ಸಮಾಜವಾಗಿದ್ದರೂ ಸಹ ಹೆಚ್ಚು ಸಂಘಟಿತವಾಗಿದೆ. ಮೊದಲ ಬಾರಿಗೆ ಹಳೇನಗರದ ಬಲಿಜ ಸಮಾಜದ ಎಂ.ಎಸ್ ರಾಮಯ್ಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಮಾವೇಶ ೧೦೦ಕ್ಕೂ ಹೆಚ್ಚು ಸಮಾಜ ಬಾಂಧವರಿಗೆ ವೇದಿಕೆಯಾಗಿ ರೂಪುಗೊಂಡಿತ್ತು.  ಒಂದೆಡೆ ಸೇರುವ ಮೂಲಕ
    ಸಮಗಾರ ಸಮಾಜದ ರಾಜ್ಯಾಧ್ಯಕ್ಷ ಜಗದೀಶ್ ಬೆಟಗೇರಿ, ಪರಶುರಾಮ್ ಅರಕೇರಿ, ದೇವರಾವ್ ಭಾಮ್ನೆ, ಸಂಗಮೇಶ್, ಭರತ್ ಉಳ್ಳಿಕಾಶಿ, ಮಂಜುನಾಥ್ ಹಂಜಗಿ, ಹೇಮರಾಜ್ ಲಕ್ಕುಂಡಿ, ವಿನಾಯಕ ಕಾನಡೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಸಮಗಾರ ಸಮಾಜದ ಅಧ್ಯಕ್ಷ ಬಿ. ಪಿ. ರಾಘವೇಂದ್ರ ಸಮಾವೇಶದ ಅಧ್ಯಕ್ಷತೆ ವಹಿಸಿದ್ದರು.  ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ಸಮಾಜ ಬಾಂಧವರು ಭಾಗವಹಿಸಿದ್ದರು.

Monday, April 11, 2022

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮುಕ್ತಾಯ : ಕೊನೆಯ ದಿನ ೧೩೨ ವಿದ್ಯಾರ್ಥಿಗಳು ಗೈರು


ಎ.ಕೆ ನಾಗೇಂದ್ರಪ್ಪ
    ಭದ್ರಾವತಿ, ಏ. ೧೧: ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸೋಮವಾರ ಮುಕ್ತಾಯಗೊಂಡಿದ್ದು, ಯಶಸ್ವಿಯಾಗಿ ನಡೆಯಲು ಸಹಕರಿಸಿದ ಎಲ್ಲರಿಗೂ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಕೃತಜ್ಞತೆ ಸಲ್ಲಿಸಿದ್ದಾರೆ.
    ಕೊನೆಯ ದಿನ ೪೫೧೫ ವಿದ್ಯಾರ್ಥಿಗಳ ಪೈಕಿ ೪೩೮೩ ವಿದ್ಯಾರ್ಥಿಗಳು ೧೩೨ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಈ ಪೈಕಿ ೪ ವಿದ್ಯಾರ್ಥಿಗಳು ಮುಸ್ಲಿಂ ವಿದ್ಯಾರ್ಥಿನಿಯರಾಗಿದ್ದಾರೆ.  ರಾಜ್ಯ ಉಚ್ಛ ನ್ಯಾಯಾಲಯದ ತೀರ್ಪಿನ ನಂತರವೂ ಉಂಟಾದ ಹಿಜಾಬ್ ಸಮಸ್ಯೆ ನಡೆವೆಯೂ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ನಾಗೇಂದ್ರಪ್ಪ  ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಕಡಿಮೆ ಅವಧಿಯಲ್ಲಿ ಹೆಚ್ಚಿನ ಶ್ರಮವಹಿಸಿ ಮೊದಲ ಬಾರಿಗೆ ತಾಲೂಕಿನಲ್ಲಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದ್ದಾರೆ. ಈ ಹಿನ್ನಲೆಯಲ್ಲಿ ಸಹಕರಿಸಿದ ಎಲ್ಲಾ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ನಗರಸಭೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಕಡಿವಾಣ

ದಿನಕ್ಕೆ ೨೦ ಬೀದಿನಾಯಿಗಳಿಗೆ ಸಂತಾನಹರಣ ಶಸ್ತ್ರ ಚಿಕಿತ್ಸೆ


ಭದ್ರಾವತಿ ನಗರಸಭೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಇದೀಗ ಬೀದಿ ನಾಯಿಗಳ ನಿಯಂತ್ರಣಕ್ಕೆ ನಗರಸಭೆ ಆಡಳಿತ ಮುಂದಾಗಿದೆ. ಕಳೆದ ೩ ದಿನಗಳಿಂದ ಬೀದಿ ನಾಯಿಗಳಿಗೆ ಸಂತಾನಹರಣ ಶಸ್ತ್ರ ಚಿಕಿತ್ಸೆ ನಡೆಸಲಾಗುತ್ತಿದೆ. ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
    ಭದ್ರಾವತಿ, ಏ. ೧೧: ನಗರಸಭೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಇದೀಗ ಬೀದಿ ನಾಯಿಗಳ ನಿಯಂತ್ರಣಕ್ಕೆ ನಗರಸಭೆ ಆಡಳಿತ ಮುಂದಾಗಿದೆ. ಕಳೆದ ೩ ದಿನಗಳಿಂದ ಬೀದಿ ನಾಯಿಗಳಿಗೆ ಸಂತಾನಹರಣ ಶಸ್ತ್ರ ಚಿಕಿತ್ಸೆ ನಡೆಸಲಾಗುತ್ತಿದೆ.
    ನಗರಸಭೆ  ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಇತ್ತೀಚೆಗೆ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಈ ಸಂಬಂಧ ಸದಸ್ಯರು ನಗರಸಭೆ ಆಡಳಿತದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.
    ಬಹುತೇಕ ವಾರ್ಡ್‌ಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಕೆಲವು ವಾರ್ಡ್‌ಗಳಲ್ಲಿ ಬೀದಿ ನಾಯಿಗಳು ಸಾರ್ವಜನಿಕರ ಮೇಲೆ ಹಲ್ಲೆ ನಡೆಸಿರುವ ಘಟನೆಗಳು ನಡೆದಿವೆ. ಈ ಹಿನ್ನಲೆಯಲ್ಲಿ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ಈ ಹಿನ್ನಲೆಯಲ್ಲಿ ಪರಿಸರ ಅಭಿಯಂತರ ಪ್ರಭಾಕರ್‌ರವರು ಬೀದಿ ನಾಯಿಗಳಿಗೆ ಸಂತಾನೋತ್ಪತ್ತಿಯಾಗದಂತೆ ಶಸ್ತ್ರ ಚಿಕಿತ್ಸೆ ನಡೆಸುವ ಹಾಗು ಆಂಟಿರೇಬಿಸ್ ಚುಚ್ಚು ಮದ್ದು ನೀಡುವ ಕಾರ್ಯ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು.
    ದಿನಕ್ಕೆ ೨೦ ನಾಯಿಗಳಿಗೆ ಶಸ್ತ್ರ ಚಿಕಿತ್ಸೆ :
    ಮಹಾರಾಷ್ಟ್ರದ ಅನಿಮಲ್ ಪ್ರೊಟೆಕ್ಷನ್ ಅಂಡ್ ವೆಲೇರ್ ಸೊಸೈಟಿ' ಪೂರ್ಣಾ ಸಂಸ್ಥೆ ವತಿಯಿಂದ ಬೀದಿ ನಾಯಿಗಳಿಗೆ ಸಂತಾನಹರಣ ಶಸ್ತ್ರ ಚಿಕಿತ್ಸೆ ಮತ್ತು ಆಂಟಿರೇಬಿಸ್ ಚುಚ್ಚು ಮದ್ದು ನೀಡುವ ಕಾರ್ಯ ನಡೆಯುತ್ತಿದೆ. ಹೊಸಮನೆ ಸಂತಮೈದಾನದ ಪಂಪ್‌ಹೌಸ್ ಪಕ್ಕದಲ್ಲಿರುವ ನಗರಸಭೆ ಕಟ್ಟಡದಲ್ಲಿ ಶಸ್ತ್ರ ಚಿಕಿತ್ಸೆ ನಡೆಯುತ್ತಿದ್ದು, ಪ್ರತಿ ದಿನ ೨೦ ನಾಯಿಗಳಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗುತ್ತಿದೆ. ಶಸ್ತ್ರ ಚಿಕಿತ್ಸೆಗೆ ಒಳಗಾದ ನಾಯಿಗಳನ್ನು ೩ ದಿನಗಳವರೆಗೆ ಆರೈಕೆ ಮಾಡಿ ಶಸ್ತ್ರ ಚಿಕಿತ್ಸೆ ನಡೆಸಿರುವ ಬಗ್ಗೆ ಗುರುತು ಮಾಡಿ ನಂತರ ಅವುಗಳ ಮೂಲ ಸ್ಥಳಗಳಿಗೆ ಬಿಡಲಾಗುತ್ತದೆ. ಇದುವರೆಗೂ ೬೦ ಬೀದಿ ನಾಯಿಗಳಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ. ಶಸ್ತ್ರ ಚಿಕಿತ್ಸೆಗೆ ತಲಾ ರು. ೧,೫೦೦ ವೆಚ್ಚವಾಗುತ್ತಿದ್ದು, ನಗರಸಭೆ ವ್ಯಾಪ್ತಿಯಲ್ಲಿ ಸುಮಾರು ೧,೦೦೦ ಬೀದಿನಾಯಿಗಳಿವೆ ಎಂದು ಅಂದಾಜಿಸಲಾಗಿದೆ. ಪ್ರತಿ ದಿನ ಬೀದಿನಾಯಿಗಳನ್ನು ಹಿಡಿಯುವ ಕಾರ್ಯ ನಡೆಯುತ್ತಿದೆ.
    ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
    ಪೌರಾಯುಕ್ತ ಕೆ. ಪರಮೇಶ್, ಪರಿಸರ ಅಭಿಯಂತರ ಪ್ರಭಾಕರ್, ಸದಸ್ಯರಾದ ಕಾಂತರಾಜ್, ಆರ್. ಶ್ರೇಯಸ್(ಚಿಟ್ಟೆ), ಜಾರ್ಜ್, ಆರ್. ಮೋಹನ್‌ಕುಮಾರ್, ಬಿ.ಎಂ ಮಂಜುನಾಥ್, ಎಸ್.ಎಸ್ ಭೈರಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

ರಾಜ್ಯದ ಗಮನ ಸೆಳೆದಿದ್ದ ಜೀವಂತ ನಾಯಿಗಳನ್ನು ಹೂತಿಟ್ಟ ಪ್ರಕರಣ..!

'ಕಳೆದ ವರ್ಷ ಸೆಪ್ಟಂಬರ್ ತಿಂಗಳಿನಲ್ಲಿ ತಾಲೂಕಿನ ಕಂಬದಾಳ್-ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೂರಾರು ನಾಯಿಗಳನ್ನು ಜೀವಂತವಾಗಿ ಹೂತಿಟ್ಟು ಅವುಗಳ ಸಾವಿಗೆ ಕಾರಣವಾಗಿದ್ದ ಘಟನೆ ನಡೆದಿತ್ತು.
ಈ ಪ್ರಕರಣ ರಾಜ್ಯದ ಗಮನೆ ಸೆಳೆದಿದ್ದು, ಈ ಘಟನೆಯನ್ನು ಪ್ರಾಣಿ ದಯಾ ಸಂಸ್ಥೆಯವರು ತೀವ್ರವಾಗಿ ಖಂಡಿಸಿದ್ದರು. ಅಲ್ಲದೆ ಈ ಸಂಬಂಧ ಪೊಲೀಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಘಟನೆ ಇದೀಗ ನಗರಸಭೆ ಆಡಳಿತಕ್ಕೆ ಎಚ್ಚರಿಕೆ ಗಂಟೆಯಾಗಿದ್ದು, ಬೀದಿ ನಾಯಿಗಳ ನಿಯಂತ್ರಣಕ್ಕೆ ವ್ಯವಸ್ಥಿತ ಕ್ರಮಗಳನ್ನು ಬಹಳ ಮುನ್ನಚ್ಚರಿಕೆಯಿಂದ ಕೈಗೊಳ್ಳಬೇಕಾಗಿದೆ.



ಭದ್ರಾವತಿ ನಗರಸಭೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಇದೀಗ ಬೀದಿ ನಾಯಿಗಳ ನಿಯಂತ್ರಣಕ್ಕೆ ನಗರಸಭೆ ಆಡಳಿತ ಮುಂದಾಗಿದೆ. ಕಳೆದ ೩ ದಿನಗಳಿಂದ ಬೀದಿ ನಾಯಿಗಳಿಗೆ ಸಂತಾನಹರಣ ಶಸ್ತ್ರ ಚಿಕಿತ್ಸೆ ನಡೆಸಲಾಗುತ್ತಿದೆ. ವಿವಿಧ ವಾರ್ಡ್‌ಗಳಲ್ಲಿ ಬೀದಿ ನಾಯಿಗಳನ್ನು ಹಿಡಿದು ತಂದಿರುವುದು.

ಹಿರಿಯೂರು ಗ್ರಾಮ ಪಂಚಾಯಿತಿ ಸೂಪರ್ ಸೀಡ್ ಮಾಡಿ : ಡಿಎಸ್ಎಸ್ ಆಗ್ರಹ



 ಭದ್ರಾವತಿ : ಅವ್ಯವಹಾರ ಹಾಗೂ ಭ್ರಷ್ಟಾಚಾರ ಹಿನ್ನೆಲೆಯಲ್ಲಿ ತಾಲೂಕಿನ ಹಿರಿಯೂರು ಗ್ರಾಮ ಪಂಚಾಯಿತಿಯನ್ನು ಸೂಪರ್ ಸೀಡ್ ಮಾಡುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ಗ್ರಾಮ ಪಂಚಾಯಿತಿ ಮುಂಭಾಗ  ಪ್ರತಿಭಟನೆ ನಡೆಸಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್ ಅವರಿಗೆ ಮನವಿ ಸಲ್ಲಿಸಲಾಯಿತು.
       ಗ್ರಾಮ ಪಂಚಾಯಿತಿಯಲ್ಲಿ  ಈ ಹಿಂದೆ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿರುವ ಮಧುಸೂದನ್ ಅವರು ನಡೆಸಿರುವ ಭ್ರಷ್ಟಾಚಾರ ಕುರಿತು ಸಂಪೂರ್ಣ ಮಾಹಿತಿ ನೀಡಿದ್ದರೂ ಸಹ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ.  ತಕ್ಷಣ ತನಿಖೆ ಕೈಗೊಂಡು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಯಿತು.
      ಕಳೆದ ಸುಮಾರು ಒಂದು ವರ್ಷದಿಂದ ಗ್ರಾಮ ಪಂಚಾಯಿತಿ ಆಡಳಿತ ವ್ಯಾಪಕ ಭ್ರಷ್ಟಾಚಾರಕ್ಕೆ ಇಳಿದಿದ್ದು, ಸಾಕಷ್ಟು ಅವ್ಯವಹಾರಗಳು ನಡೆದಿವೆ. ಈ ಕುರಿತು ಸಹ ತಮ್ಮ ಗಮನಕ್ಕೆ ತರಲಾಗಿದೆ ಆದರೂ ಸಹ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದರು. ತಕ್ಷಣ ಗ್ರಾಮ ಪಂಚಾಯಿತಿ ಆಡಳಿತವನ್ನು ಸೂಪರ್ ಸೀಡ್ ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕು. ಹೋರಾಟಕ್ಕೆ ನ್ಯಾಯ ಒದಗಿಸಿಕೊಡಬೇಕೆಂದು ಆಗ್ರಹಿಸಿ ಒಂದು ವೇಳೆ ಯಾವುದೇ ಕ್ರಮ ಕೈಗೊಳ್ಳದಿದ್ದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.
    ಡಿಎಸ್ಎಸ್ ಜಿಲ್ಲಾ ಸಂಘಟನಾ ಸಂಚಾಲಕ ಏಳುಕೋಟಿ, ತಾಲೂಕು ಸಂಚಾಲಕ ರವಿ ನಾಯ್ಕ, ಹಿರಿಯೂರು ಹೋಬಳಿ ಘಟಕ ಸಂಚಾಲಕ ಕೆಟಿ ಪ್ರಸನ್ನ, ಗ್ರಾಮ ಘಟಕ ಸಂಚಾಲಕ ಬಿ ರವಿ, ತಾಲೂಕು ಸಂಘಟನಾ ಸಂಚಾಲಕ ಶಿವನಾಯ್ಕ, ಮಹಿಳಾ ಪ್ರಮುಖರಾದ ಜೀವ, ಶಶಿಕಲಾ, ಬೀರಣ್ಣ, ಸತ್ಯಣ್ಣ, ಕುಮಾರಣ್ಣ ಸೇರಿದಂತೆ ಗ್ರಾಮಸ್ಥರು ಇನ್ನಿತರರು ಪಾಲ್ಗೊಂಡಿದ್ದರು.

Sunday, April 10, 2022

ಕೇಂದ್ರ, ರಾಜ್ಯದಲ್ಲಿ ಜನರ ಸಂಕಷ್ಟಗಳಿಗೆ ಸ್ಪಂದಿಸುವ ಸರ್ಕಾರಗಳು ಅಧಿಕಾರಕ್ಕೆ ಬರಲಿ

ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ನಗರ ಮತ್ತು ಗ್ರಾಮಾಂತರ ಯುವ ಕಾಂಗ್ರೆಸ್ ವತಿಯಿಂದ ಭಾನುವಾರ ಭದ್ರಾವತಿ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
    ಭದ್ರಾವತಿ, ಏ. ೧೦: ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ನಗರ ಮತ್ತು ಗ್ರಾಮಾಂತರ ಯುವ ಕಾಂಗ್ರೆಸ್ ವತಿಯಿಂದ ಭಾನುವಾರ ನಗರದ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
    ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಶಾಸಕ ಬಿ.ಕೆ ಸಂಗಮೇಶ್ವರ್, ಪೆಟ್ರೋಲ್, ಡೀಸೆಲ್ ಹಾಗು ಅಡುಗೆ ಅನಿಲ ಬೆಲೆ ಏರಿಕೆಯಿಂದಾಗಿ ದಿನನಿತ್ಯದ ಬಳಕೆ ವಸ್ತುಗಳ ಬೆಲೆ ಏರಿಕೆಯಾಗಿದೆ. ಇದರಿಂದಾಗಿ ಮಧ್ಯಮ ಹಾಗು ಬಡ ವರ್ಗದವರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ರೈತ ಹಾಗು ಕಾರ್ಮಿಕ ವಿರೋಧಿ ನೀತಿಗಳಿಂದಾಗಿ ದೇಶದಲ್ಲಿ ರೈತರು, ಕಾರ್ಮಿಕರ ಬದುಕು ಮತ್ತಷ್ಟು ಸಂಕಷ್ಟಕ್ಕೆ ಒಳಗಾಗಿದೆ. ನಿರುದ್ಯೋಗ ಹೆಚ್ಚಾಗಿದ್ದು, ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಕೇಂದ್ರ ಹಾಗು ರಾಜ್ಯದಲ್ಲಿ ಜನರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸುವ ಸರ್ಕಾರಗಳು ಅಧಿಕಾರಕ್ಕೆ ಬರಬೇಕು. ಆಗ ಮಾತ್ರ ಈ ದೇಶದಲ್ಲಿ ನೆಮ್ಮದಿ ಬದುಕು ಕಾಣಬಹುದು. ಈ ಹಿನ್ನಲೆಯಲ್ಲಿ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬೆಂಬಲಿಸಬೇಕೆಂದರು.
    ಯುವ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಜಿ. ವಿನೋದ್ ಕುಮಾರ್ ಮತ್ತು ಗ್ರಾಮಾಂತರ ಘಟಕದ ಅಧ್ಯಕ್ಷ ಅಫ್ತಾಬ್ ಅಹಮದ್ ಪ್ರತಿಭಟನೆ ನೇತೃತ್ವ ವಹಿಸಿದ್ದರು. ಅಡುಗೆ ಸಿಲಿಂಡರ್‌ಗಳಿಗೆ ಹೂವಿನ ಹಾರ ಹಾಕಿ ವಿನೂತನವಾಗಿ ಪ್ರತಿಭಟಿಸಲಾಯಿತು.
    ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಮಹಮದ್ ರಫೀಕ್, ಅಮೋಸ್, ಹಿಂದುಳಿದ ಘಟಕದ ಅಧ್ಯಕ್ಷ ಬಿ. ಗಂಗಾಧರ್, ಕೃಷ್ಣರಾಜ್, ತಬ್ರೇಜ್ ಖಾನ್, ನವೀನ್‌ಕುಮಾರ್, ವರಣ್, ಸಜ್ಜದ್, ಸಂತೋಷ್, ಭರತ್, ಸುನಿಲ್, ಆದರ್ಶ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.