Thursday, April 21, 2022

ಕುಟುಂಬದಲ್ಲಿ ಉತ್ತಮ ವಾತಾವರಣ ರೂಪುಗೊಳ್ಳಲು ಸಂಗೀತ ಸಹಕಾರಿ : ಶಿವರಾಜ್

ವೀರಶೈವ ಲಿಂಗಾಯಿತ ಮಹಿಳಾ ವೇದಿಕೆ ವತಿಯಿಂದ ಭದ್ರಾವತಿ ಹಳೇನಗರದ ಶ್ರೀ ವೀರಶೈವ ಸಮುದಾಯ ಭವನದಲ್ಲಿ  ವಚನ ಗಾಯನ ಸ್ಪರ್ಧೆ ಆಯೋಜಿಸಲಾಗಿತ್ತು.
    ಭದ್ರಾವತಿ, ಏ. ೨೧: ಕುಟುಂಬದಲ್ಲಿ ಉತ್ತಮ ವಾತಾವರಣ ರೂಪುಗೊಳ್ಳಲು ಸಂಗೀತ ಸಹಕಾರಿಯಾಗಿದ್ದು, ಸಂಗೀತದಂತಹ ಕ್ಷೇತ್ರಗಳಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹಿಂದೂಸ್ತಾನಿ, ಶಾಸ್ತ್ರೀಯ ಸಂಗೀತ ಗಾಯಕ ಶಿವರಾಜ್ ಹೇಳಿದರು.
    ಅವರು ವೀರಶೈವ ಲಿಂಗಾಯಿತ ಮಹಿಳಾ ವೇದಿಕೆ ವತಿಯಿಂದ ಹಳೇನಗರದ ಶ್ರೀ ವೀರಶೈವ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ವಚನ ಗಾಯನ ಸ್ಪರ್ಧೆ ಕಾರ್ಯಕ್ರಮದಲ್ಲಿ ತೀರ್ಪುಗಾರರಾಗಿ ಪಾಲ್ಗೊಂಡು ಮಾತನಾಡಿದರು.
    ಇಂದು ನಾವು ಪಾಶ್ಚಿಮಾತ್ಯ ಸಂಗೀತದ ಕಡೆ ಹೆಚ್ಚಿನ ಒಲುವು ತೋರುತ್ತಿದ್ದೇವೆ. ಆದರೆ ಅದಕ್ಕಿಂತ ನಮ್ಮ ಸನಾತನ ಪರಂಪರೆಯ ಸಂಗೀತ, ವಚನಗಳು ಮನಸ್ಸಿಗೆ ನೀಡುವ ಸಂತೋಷ, ನೆಮ್ಮದಿ ಅವುಗಳು ನೀಡುವುದಿಲ್ಲ ಎಂದರು.
ಸಂಗೀತದಿಂದ ಹಲವು ಖಾಯಿಲೆಗಳಿಗೆ ಚಿಕಿತ್ಸೆ ನೀಡುವ ಮೂಲಕ ಗುಣಪಡಿಸಿದ ಹಲವಾರು ಘಟನೆಗಳು ವೈಜ್ಞಾನಿಕವಾಗಿ ಸಾಕ್ಷಿಯಾಗಿವೆ. ಇಂತಹ ವಿಶಿಷ್ಟವಾದ ಮಾಂತ್ರಿಕ ಶಕ್ತಿ ಹೊಂದಿರುವಂತಹ ಕ್ಷೇತ್ರದತ್ತ ಒಲವು ಬೆಳೆಸಿಕೊಳ್ಳಿ ಎಂದರು.
    ಸಂಗೀತ ವಿದೂಷಿಗಳಾದ ಗಾಯಿತ್ರಿ ಹಾಗು ಗಿರಿಜಾ ಮಾತನಾಡಿ, ಮಹಿಳೆಯರು ರಾಗ, ತಾಳ, ಭಾವ, ಸಾಹಿತ್ಯದೊಂದಿಗೆ ಸಂಗೀತದ ಜೊತೆ ವಚನಗಳನ್ನು ಹೇಳುವ ಅಭ್ಯಾಸ ಬೆಳೆಸಿಕೊಂಡಾಗ ಮಾತ್ರ ಅಂತಹವರಿಗೆ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಉತ್ತಮ ವೇದಿಕೆಗಳು ದೊರೆಯುತ್ತವೆ ಎಂದರು.
    ಸಂಗೀತ ಹಾಗು ವಚನಗಳನ್ನು ಕಲಿಯಲು ವಯಸ್ಸಿನ ಮಿತಿ ಇಲ್ಲ. ಆದರೆ ಕಲಿಯುವ ಆಸಕ್ತಿ ಬಹುಮುಖ್ಯ. ಇಂತಹ ಕಾರ್ಯಕ್ರಮ ಮತ್ತು ಶಿಬಿರಗಳಲ್ಲಿ ಭಾಗವಹಿಸಿದಾಗ ಮನಸ್ಸಿಗೆ ನೆಮ್ಮದಿ, ಆನಂದ ದೊರೆಯುತ್ತದೆ. ಅಲ್ಲದೆ ಪರಸ್ಪರರಲ್ಲಿ ಸ್ನೇಹ ಭಾವದ ಸಂಬಂಧ ಹೆಚ್ಚಾಗುತ್ತದೆ ಎಂದರು.
    ಆರ್.ಎಸ್ ಶೋಭಾ ಅಧ್ಯಕ್ಷತೆ ವಹಿಸಿದ್ದರು. ಸುಲೋಚನಾ ಪ್ರಾರ್ಥಿಸಿದರು. ನಾಗರತ್ನ ವಿ ಕೋಠಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಶಾಂತ ವಂದಿಸಿದರು. ಭಾಗ್ಯ, ಪುಟ್ಟಮ್ಮ, ಉಷಾ, ಶೃತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಮಹಿಳೆಯರು ಕೇವಲ ಆರ್ಥಿಕ ಚಟುವಟಿಕೆಗಳಿಗೆ ಸೀಮಿತಗೊಳ್ಳಬಾರದು : ಮಹಾದೇವ್

ಭದ್ರಾವತಿಯಲ್ಲಿ ಸ್ನೇಹ ಮಿಲನ ಮಹಿಳಾ ಸಂಘದ ವತಿಯಿಂದ  ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಹಾಗೂ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
    ಭದ್ರಾವತಿ, ಏ. ೨೧: ಮಹಿಳಾ ಸಂಘಗಳು ಕೇವಲ ಆರ್ಥಿಕ ಚಟುವಟಿಕೆಗಳಿಗೆ ಸೀಮಿತಗೊಳ್ಳಬಾರದು ಎಂದು ತಾಲೂಕು ಅಖಿಲ ಭಾರತ ವೀರಶೈವ ಮಹಾಸಭಾ ಯುವ ಘಟಕದ ಉಪಾಧ್ಯಕ್ಷ ಮಹಾದೇವ್ ಹೇಳಿದರು.
     ಅವರು ನಗರದ ಸ್ನೇಹ ಮಿಲನ ಮಹಿಳಾ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಹಾಗೂ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ಸಾಲ ಪಡೆಯುವುದು, ಪಡೆದ ಸಾಲವನ್ನು ತೀರಿಸುವುದು, ಉಳಿತಾಯ ಮಾಡುವುದು ಇಷ್ಟಕ್ಕೆ ಸೀಮಿತವಾಗಬಾರದು. ಮಹಾನ್ ಆದರ್ಶ ವ್ಯಕ್ತಿಗಳ ಜನ್ಮದಿನಾಚರಣೆ, ಸಾಮಾಜಿಕ ಸೇವಾ ಕಾರ್ಯಗಳು ಸೇರಿದಂತೆ ವಿಭಿನ್ನ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ತಮ್ಮ ಬದ್ದತೆಯನ್ನು ಪ್ರದರ್ಶಿಸಬೇಕು. ಈ ನಿಟ್ಟಿನಲ್ಲಿ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
    ಪ್ರಸ್ತುತ ದಿನಗಳಲ್ಲಿ ಒಂದು ಅಥವಾ ಎರಡು ಪದವಿ ಪಡೆಯುವುದೇ ಹೆಚ್ಚು. ಅಂಬೇಡ್ಕರ್‌ರವರು ಅಂದಿನ ಕಾಲದಲ್ಲಿಯೇ ೨೭ ಪದವಿಗಳನ್ನು ಪಡೆಯುವ ಮೂಲಕ ಮಹಾನ್ ಸಾಧನೆಯನ್ನು ಮಾಡಿ ತೋರಿಸಿದ್ದಾರೆ. ಅವರ ಕಠಿಣ ಪರಿಶ್ರಮ ದೇಶದ ಮಹಾನ್ ವ್ಯಕ್ತಿಯನ್ನಾಗಿ ಮಾಡುವಲ್ಲಿ ಸಹಕಾರಿಯಾಯಿತು. ಇವರ ಸ್ಮರಣೆ ಮಾಡುವುದು ಇಂದಿನ ಅಗತ್ಯವಾಗಿದೆ. ಅಂಬೇಡ್ಕರ್ ಹಾಗು ಅಕ್ಕಮಹಾದೇವಿಯವರ ಜೀವನ ಚರಿತ್ರೆ ನಾವೆಲ್ಲರೂ ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
    ಸಂಘದ ಅಧ್ಯಕ್ಷೆ ಕವಿತಾ ಸುರೇಶ್ ಅಧ್ಯಕ್ಷತೆ ವಹಿಸಿದ್ದರು. ಸಂಘದ ಖಜಾಂಚಿ ಬಿ.ಎಸ್ ರೂಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  ವತ್ಸಲಾ ರಮೇಶ್ ಸ್ವಾಗತಿಸಿದರು.  ರೇಣುಕಾ ಯಶೋಧರ ನಿರೂಪಿಸಿದರು. ಮಂಜುಳಾ ವಂದಿಸಿದರು.
ಕಾರ್ಯಕ್ರಮದಲ್ಲಿ ಯಶೋಧರ,  ಮಂಜುಳ. ಬಿ.ಎಸ್.ರೂಪಾ. ಸೇರಿದಂತೆ ಹಲವರಿದ್ದರು.

ಏ.೩೦, ಮೇ.೧ರಂದು ಎರಡು ದಿನ ಕಬಡ್ಡಿ ಪಂದ್ಯಾವಳಿ

ಭದ್ರಾವತಿ, ಏ. ೨೧: ಡಾ. ಬಿ.ಆರ್ ಅಂಬೇಡ್ಕರ್ ಯುವಕರ ಸಂಘ ಹಾಗು ಆರ್‌ಎಸ್‌ಎನ್ ಸ್ಪೋಟ್ಸ್ ಕ್ಲಬ್ ವತಿಯಿಂದ ಏ.೨೩ ಮತ್ತು ೨೪ ಎರಡು ದಿನಗಳ ಕಾಲ ನಗರದ ನ್ಯೂಟೌನ್ ಆಂಜನೇಯ ಅಗ್ರಹಾರ ಡಾ. ಬಿ.ಆರ್ ಅಂಬೇಡ್ಕರ್ ಸಮುದಾಯ ಭವನದ ಸಮೀಪ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ಮುಂದೂಡಲಾಗಿದೆ.
    ಏ.೩೦ ಮತ್ತು ಮೇ.೧ರಂದು ಪಂದ್ಯಾವಳಿ ನಡೆಯಲಿದ್ದು, ಕ್ರೀಡಾಪಟುಗಳು ಹಾಗು ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪಂದ್ಯಾವಳಿ ಯಶಸ್ವಿಗೊಳಿಸುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಮೊ:  ೯೯೦೨೧೯೨೦೨೩ ಅಥವಾ ೯೯೬೪೪೪೬೧೨೩ ಸಂಖ್ಯೆಗೆ ಕರೆ ಮಾಡಬಹುದಾಗಿದೆ.

ಏ.೨೨ರಂದು ವಿದ್ಯುತ್ ನಿಲುಗಡೆ

    ಭದ್ರಾವತಿ, ಏ. ೨೧: ಮೆಸ್ಕಾಂ ನಗರ ಉಪವಿಭಾಗದ ವತಿಯಿಂದ ಹಳೇನಗರದ ಬಸವೇಶ್ವರ ವೃತ್ತದ ರಸ್ತೆಯಲ್ಲಿರುವ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾರ್ಯ ಹಮ್ಮಿಕೊಂಡಿರುವುದರಿಂದ ಏ.೨೨ರಂದು ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೫ ಗಂಟೆವರೆಗೆ ವಿದ್ಯುತ್ ನಿಲುಗಡೆಯಾಗಲಿದೆ.
    ಬಸವೇಶ್ವರ ವೃತ್ತ, ಖಾಜಿ ಮೊಹಲ್ಲಾ, ಎನ್‌ಎಸ್‌ಟಿ ರಸ್ತೆ, ಮಾಧವಚಾರ್ ವೃತ್ತ, ಕನಕ ಮಂಟಪ ಮೈದಾನ, ಕುರುಬರ ಬೀದಿ, ಬ್ರಾಹ್ಮಣರ ಬೀದಿ, ಸಿ.ಎನ್ ರಸ್ತೆ, ಸಂಚಿ ಹೊನ್ನಮ್ಮ ಸರ್ಕಾರಿ ಬಾಲಕಿಯರ ಕಾಲೇಜು, ಹಳೇನಗರ ಮಾರುಕಟ್ಟೆ ಸೇರಿದಂತೆ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.

Wednesday, April 20, 2022

ಗರೀಬ್ ಕಲ್ಯಾಣ ಅನ್ನಯೋಜನೆಯಡಿ ಉಚಿತ ಅಕ್ಕಿ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ

ಭದ್ರಾವತಿ, ಏ. ೨೦: ನಗರಸಭೆ ವಾರ್ಡ್ ೩೧ರ ಜಿಂಕ್‌ಲೈನ್ ನ್ಯಾಯಬೆಲೆ ಅಂಗಡಿಯಲ್ಲಿ  ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನಯೋಜನೆ ಅಡಿಯಲ್ಲಿ ಅಜಾದಿ-ಕಾ-ಅಮೃತ್ ಮಹೋತ್ಸವ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಉಚಿತ ಅಕ್ಕಿ ವಿತರಣೆ ಕಾರ್ಯಕ್ರಮಕ್ಕೆ ಗುರುವಾರ ಚಾಲನೆ ನೀಡಲಾಯಿತು.
    ಭದ್ರಾವತಿ, ಏ. ೨೦: ನಗರಸಭೆ ವಾರ್ಡ್ ೩೧ರ ಜಿಂಕ್‌ಲೈನ್ ನ್ಯಾಯಬೆಲೆ ಅಂಗಡಿಯಲ್ಲಿ  ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನಯೋಜನೆ ಅಡಿಯಲ್ಲಿ ಅಜಾದಿ-ಕಾ-ಅಮೃತ್ ಮಹೋತ್ಸವ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಉಚಿತ ಅಕ್ಕಿ ವಿತರಣೆ ಕಾರ್ಯಕ್ರಮಕ್ಕೆ ಗುರುವಾರ ಚಾಲನೆ ನೀಡಲಾಯಿತು.
    ಗರೀಬ್ ಕಲ್ಯಾಣ ಅನ್ನಯೋಜನೆಯಡಿ ಕೇಂದ್ರ ಸರ್ಕಾರ ಪ್ರತಿ ಪಡಿತರದಾರನಿಗೆ ೫ ಕೆ.ಜಿ ಹೆಚ್ಚುವರಿ ಅಕ್ಕಿಯನ್ನು ನೀಡುತ್ತಿದ್ದು, ಇದರ ಜೊತೆಗೆ ರಾಜ್ಯ ಸರ್ಕಾರದ ೧ ಕೆ.ಜಿ ಹೆಚ್ಚುವರಿ ಅಕ್ಕಿ ಸೇರಿ ಒಟ್ಟು ೧೧ ಕೆ.ಜಿ ಅಕ್ಕಿಯನ್ನು ಮಾ.೧೯ರಿಂದ ನೀಡಲಾಗುತ್ತಿದೆ. ಇದರ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಸರ್ಕಾರದ ನಿರ್ದೇಶನದ ಮೇರೆಗೆ ಪ್ರತಿ ನ್ಯಾಯಾಬೆಲೆ ಅಂಗಡಿಯಲ್ಲೂ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.  
    ನಗರಸಭೆ ಸದಸ್ಯೆ ಪಲ್ಲವಿ, ನಗರ ಆಹಾರ ನಿರೀಕ್ಷಕಿ ಗಾಯತ್ರಿದೇವಿ, ಜಾಗೃತಿ ಸಮಿತಿ ಸದಸ್ಯೆ ಸುಶೀಲಮ್ಮ, ನ್ಯಾಯಬೆಲೆ ಅಂಗಡಿ ಮಾಲೀಕ ಸಿದ್ದಲಿಂಗಯ್ಯ, ಮುಖಂಡರಾದ ದಿಲೀಪ್, ಎಚ್.ಕೆ ರಾಜು, ಜಿ. ಕುಮಾರ್, ನಾಗರಾಜ ಕದಂ, ಪಡಿತರದಾರರು ಉಪಸ್ಥಿತರಿದ್ದರು.

ಅಪರಂಜಿ ಅಭಿನಯ ಶಾಲೆವತಿಯಿಂದ ರಜಾ-ಮಜಾ ಬೇಸಿಗೆ ಶಿಬಿರ


    ಭದ್ರಾವತಿ, ಏ. ೨೦: ಜನ್ನಾಪುರ ಮಲ್ಲೇಶ್ವರ ಸಮುದಾಯ ಭವನ ಸಮೀಪದಲ್ಲಿರುವ ಅಪರಂಜಿ ಅಭಿನಯ ಶಾಲೆಯಲ್ಲಿ ರಂಗಕರ್ಮಿ, ಕಿರುತೆರೆ-ಚಲನಚಿತ್ರ ನಟ ಅಪರಂಜಿ ಶಿವರಾಜ್ ನೇತೃತ್ವದಲ್ಲಿ ರಜಾ-ಮಜಾ ಬೇಸಿಗೆ ಶಿಬಿರ ಏ.೨೫ ರಿಂದ ಮೇ.೧ರವರೆಗೆ ಹಮ್ಮಿಕೊಳ್ಳಲಾಗಿದೆ.
    ಡ್ರಾಮಾ ಜ್ಯೂನಿಯರ್, ಡ್ರಾಮಾ ಸೀನಿಯರ್, ಓದುವ ಕ್ರಮ, ನೆನಪಿನ ಶಕ್ತಿ, ಏಕಾಗ್ರತೆ, ಕಾಮಿಡಿ ಕಿಲಾಡಿಗಳ ಶೋ, ಅಂಗಳದ ಆಟಗಳು, ಹಾಸ್ಯ ಮತ್ತು ನವರಸ ಸೇರಿದಂತೆ ಇನ್ನಿತರ ಚಟುವಟಿಕೆಗಳು ಶಿಬಿರದಲ್ಲಿ ನಡೆಯಲಿದ್ದು, ೫ ವರ್ಷದಿಂದ ೧೫ ವರ್ಷದೊಳಗಿನ ಮಕ್ಕಳು ಪಾಲ್ಗೊಳ್ಳಬಹುದಾಗಿದೆ. ಶಿಬಿರ ಬೆಳಿಗ್ಗೆ ೧೦.೩೦ ರಿಂದ ಮಧ್ಯಾಹ್ನ ೧.೩೦ರವರೆಗೆ ನಡೆಯಲಿದ್ದು, ಹೆಚ್ಚಿನ ಮಾಹಿತಿಗೆ ಮೊ: ೯೯೮೦೫೩೪೪೦೬ ಸಂಖ್ಯೆಗೆ ಕರೆ ಮಾಡಬಹುದಾಗಿದೆ.

ಏ.೨೧ರಂದು ಉಚಿತ ಸಿದ್ದ ಕಣ್ಣಿನ ಹನಿ ಕಾರ್ಯಕ್ರಮ

    ಭದ್ರಾವತಿ, ಮಾ. ೨೦ : ನಗರದ ತರೀಕೆರೆ ರಸ್ತೆಯ ಶ್ರೀ ಶಿವಸುಬ್ರಹ್ಮಣ್ಯ ಸ್ವಾಮಿ ಆಶ್ರಮದ ವತಿಯಿಂದ ತಮಿಳುನಾಡು ದಿಂಡಿಕಲ್‌ನ ವಂಶಪಾರಂಪರೆ ಸಿದ್ದ ವೈದ್ಯರಾದ ಕೆ. ಮುತ್ತುಕೃಷ್ಣನ್ ಅವರಿಂದ ಏ.೨೧ರಂದು ಉಚಿತ ಸಿದ್ದ ಕಣ್ಣಿನ ಹನಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
    ಕಾರ್ಯಕ್ರಮ ಬೆಳಿಗ್ಗೆ ೯.೩೦ ರಿಂದ ಮಧ್ಯಾಹ್ನ ೧.೩೦ ಗಂಟೆ ವರೆಗೆ ನಡೆಯಲಿದ್ದು, ಕಣ್ಣಿಗೆ ಹನಿ ಹಾಕುವುದರಿಂದ ಕಣ್ಣಿನಲ್ಲಿ ನೀರು ಬರುತ್ತಿರುವುದು, ಕಣ್ಣು ಉರಿ, ಕಣ್ಣು ಕೆಂಪಗಾಗುವುದು, ಕಣ್ಣಿನಲ್ಲಿ ಪೊರೆ ಬರುವ ಹಂತದಲ್ಲಿರುವವರು ಹಾಗು ದೂರ ದೃಷ್ಠಿ ಮತ್ತು ಸಮೀಪ ದೃಷ್ಠಿ ತೊಂದರೆ ಇರುವವರಿಗೆ ಹಾಗು ಸೂಕ್ಷ್ಮ ಕೆಲಸಗಾರರು, ಚಿನ್ನಬೆಳ್ಳಿ, ಕಂಪ್ಯೂಟರ್, ಟೈಲರಿಂಗ್ ಕೆಲಸಗಾರರಿಗೆ ಹೆಚ್ಚಿನ ಅನುಕೂಲವಾಗಲಿದೆ. ಹೆಚ್ಚಿನ ಮಾಹಿತಿಗೆ ಮೊ: ೯೪೮೦೨೮೩೦೩೦ ಅಥವಾ ೯೪೪೮೨೫೫೫೪೪ ಸಂಖ್ಯೆಗೆ ಕರೆ ಮಾಡಬಹುದಾಗಿದೆ.