Sunday, April 24, 2022

ವಿಶೇಷ ಗ್ರಾಮ ಸಭೆ ಮೂಲಕ ಪಂಚಾಯತ್ ರಾಜ್ ದಿವಸ್ ಆಚರಣೆ

ಭದ್ರಾವತಿ ತಾಲೂಕಿನ ಅರಕೆರೆ ಗ್ರಾಮ ಪಂಚಾಯಿತಿಯಲ್ಲಿ ಹಿರಿಯ ನಾಗರೀಕರಿಗೆ ಸಿಹಿ ತಿನ್ನಿಸುವ ಮೂಲಕ ವಿಶೇಷ ಗ್ರಾಮ ಸಭೆ ನಡೆಸಿ ಪಂಚಾಯತ್ ರಾಜ್ ದಿವಸ್ ಆಚರಿಸಲಾಯಿತು.
    ಭದ್ರಾವತಿ, ಏ. ೨೪: ತಾಲೂಕಿನ ಅರಕೆರೆ ಗ್ರಾಮ ಪಂಚಾಯಿತಿಯಲ್ಲಿ ಹಿರಿಯ ನಾಗರೀಕರಿಗೆ ಸಿಹಿ ತಿನ್ನಿಸುವ ಮೂಲಕ ವಿಶೇಷ ಗ್ರಾಮ ಸಭೆ ನಡೆಸಿ ಪಂಚಾಯತ್ ರಾಜ್ ದಿವಸ್ ಆಚರಿಸಲಾಯಿತು.
    ಗ್ರಾಮ ಪಂಚಾಯತಿ ಅಧ್ಯಕ್ಷ ಆರ್.ಡಿ ಶೇಖರಪ್ಪ ವಿಶೇಷ ಗ್ರಾಮ ಸಭೆ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಹಾಗು ಪಿ.ಎಂ ಕಿಸಾನ್ ಯೋಜನಾ ಕ್ರಿಡಿಟ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸುವ ಬಗ್ಗೆ ರೈತರಿಗೆ ಮಾಹಿತಿ ನೀಡಲಾಯಿತು.
    ಸಭೆಯಲ್ಲಿ ಪಂಚಾಯಿತಿ ಉಪಾಧ್ಯಕ್ಷೆ ಗಾಯತ್ರಿ ಶಂಕರಪ್ಪ, ಅಭಿವೃದ್ಧಿ ಅಧಿಕಾರಿ ಸುರೇಶ್ ಹಾಗು ಸದಸ್ಯರು, ರೈತರು, ಗ್ರಾಮಸ್ಥರು ಪಾಲ್ಗೊಂಡಿದ್ದರು. ಕಾರ್ಯದರ್ಶಿ ಭಾಸ್ಕರ್ ಸ್ವಾಗತಿಸಿದರು. ಅರಕೆರೆ ಭೈರೇಶ್‌ಕುಮಾರ್ ವಂದಿಸಿದರು.  

ಸಾತ್ವಿಕ ಬ್ರಾಹ್ಮಣ ಸಮುದಾಯ ಗುರುಗಳ ಕೃಪೆಪಡೆದು ದೇಶದ ನಾಯಕನಿಗೆ ಶಕ್ತಿ ತುಂಬಲಿ : ಶ್ರೀ ವಿಶ್ವಪ್ರಿಯತೀರ್ಥರು

ಭದ್ರಾವತಿ ಸಿದ್ಧಾರೂಢನಗರದ ನಂಜನಗೂಡು ಶ್ರೀರಾಘವೇಂದ್ರಸ್ವಾಮಿಗಳ ಮಠದಲ್ಲಿ ಕಳೆದ ಸುಮಾರು ವಾರದಿಂದ ನಡೆಯುತ್ತಿರುವ ಮಠದ ರಜತಮಹೋತ್ಸವದ ಕೊನೆಯ ದಿನವಾದ ಭಾನುವಾರ ಉಡುಪಿ ಅದಮಾರು ಮಠದ ಹಿರಿಯ ಶ್ರೀಗಳಾದ ಶ್ರೀ ವಿಶ್ವಪ್ರಿಯತೀರ್ಥರ ನೇತೃತ್ವದಲ್ಲಿ ರಾಯರ ವೃಂದಾವನಕ್ಕೆ ಪಂಚಾಮೃತಭಿಷೇಕ ಹಾಗೂ ವಿಶೇಷ ಅಲಂಕಾರ ಕೈಗೊಳ್ಳಲಾಯಿತು.
    ಭದ್ರಾವತಿ, ಏ. ೨೪: ಸಾತ್ವಿಕ ಬ್ರಾಹ್ಮಣ ಸಮುದಾಯ ಮಂತ್ರ, ಜಪ, ತಪಗಳ ಮೂಲಕ ಹರಿವಾಯು ಗುರುಗಳ ಕೃಪೆಪಡೆದು ಅದನ್ನು ಹಿಂದೂ ಸಮಾಜವನ್ನೊಳಗೊಂಡ ಈ ದೇಶದ ಒಳಿತಿಗಾಗಿ ಶ್ರಮಿಸುತ್ತಿರುವ ದೇಶದ ನಾಯಕನಿಗೆ ಶಕ್ತಿ ತುಂಬಲು ಬಳಸಬೇಕು ಎಂದು ಉಡುಪಿ ಅದಮಾರು ಮಠದ ಹಿರಿಯ ಶ್ರೀಗಳಾದ ಶ್ರೀ ವಿಶ್ವಪ್ರಿಯತೀರ್ಥರು ಹೇಳಿದರು.
    ಅವರು ಸಿದ್ಧಾರೂಢನಗರದ ನಂಜನಗೂಡು ಶ್ರೀರಾಘವೇಂದ್ರಸ್ವಾಮಿಗಳ ಮಠದಲ್ಲಿ ಕಳೆದ ಸುಮಾರು ವಾರದಿಂದ ನಡೆಯುತ್ತಿರುವ ಮಠದ ರಜತಮಹೋತ್ಸವದ ಕೊನೆಯ ದಿನವಾದ ಭಾನುವಾರ ಅನುಗ್ರಹ ಸಂದೇಶನೀಡಿ ಮಾತನಾಡಿದರು.
ಸಮಾಜದ ಒಳಿತಿಗಾಗಿ ಅಗತ್ಯಬಿದ್ದರೆ ಕುಟುಂಬ ಸದಸ್ಯರ ಬಾಂಧವ್ಯ ತೊರೆದು ಸಮಾಜಮುಖಿಯಾಗಿ ಕೆಲಸಮಾಡಲು ಮುಂದಾಗಬೇಕು ಎಂಬುದನ್ನು ಸ್ವತಃ ಗುರು ಶ್ರೀರಾಘವೇಂದ್ರಸ್ವಾಮಿಗಳ ಜೀವನವೇ ನಮಗೆ ಮಾರ್ಗದರ್ಶಕವಾಗಿದೆ ಎಂದರು.
    ಸಮಾಜದ ಒಳಿತಿಗಾಗಿ ಅವರು ಸನ್ಯಾಸ ಸ್ವೀಕಾರಕ್ಕೆ ಮುಂದಾದಾಗ ಅವರ ಪತ್ನಿ ಅದಕ್ಕೆ ಅಡ್ಡಿಪಡಿಸಿದರೂ ಸಹ ಅವರು ತಮ್ಮ ನಿರ್ಧಾರದಿಂದ ಹಿಂದೆ ಸರಿಯದೆ ಸನ್ಯಾಸ ಸ್ವೀಕರಿಸಿ ತಪಃ ಪ್ರಭಾವದಿಂದ ಧರ್ಮ, ಜಾತಿ, ಪಂಗಡ ತಾರತಮ್ಯವಿಲ್ಲದೆ ಹಿಂದೂ, ಮುಸ್ಲಿಂ ಎಲ್ಲಾ ಜನರ ಕಷ್ಟಗಳನ್ನು ನಿವಾರಣೆ ಮಾಡಿ ಅವರ ಕೈಹಿಡಿದು ದಾರಿತೋರಿದ್ದಾರೆ ಎಂಬುದು ಎಷ್ಟು ಸತ್ಯವೋ ಅದೇ ರೀತಿ ಹಿಂದೂ ಸಮಾಜದ ಧಾರ್ಮಿಕ ಆಚಾರ-ವಿಚಾರಧಾರೆಗಳಿಗೆ ಅಡ್ಡಿಪಡಿಸುವ ಕಾರ್ಯಕ್ಕೆ ಯಾರೇ ಕೈಹಾಕಿದರೂ ಅಂತಹ ಜನರ ಕೈಗಳನ್ನು ಆ ರೀತಿ ಮಾಡದ ರೀತಿ ತಡೆಯುವ ಶಕ್ತಿ ಸಹ ಆ ಗುರು ಶ್ರೀ ರಾಘವೇಂದ್ರಸ್ವಾಮಿಗಳು ಕರುಣಿಸುತ್ತಾರೆ ಎಂಬುದೂ ಸಹ ಅಷ್ಠೇ ಸತ್ಯ ಎಂದರು.
    ಸಾತ್ವಿಕತೆಗೆ ಹೆಸರಾದ ಬ್ರಾಹಣ ಸಮುದಾಯ ದೈಹಿಕವಾಗಿ ದೇಶದ ರಕ್ಷಣೆ ಮಾಡಲು ಸಶಕ್ತ ವಾಗಿರದಿದ್ದರೂ ಸಹ, ಹೆಚ್ಚು ಹೆಚ್ಚು ಮಠ ಮಂದಿರಗಳಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಸುವ ಜೊತೆಗೆ ವೇದ, ಶಾಸ್ತ್ರ, ಪುರಾಣ, ಮಂತ್ರಗಳ ಅಧ್ಯಯನದ ಮೂಲಕ ಶಕ್ತಿ ಸಂಪಾದಿಸಿ  ಅದನ್ನು ದೇಶ ರಕ್ಷಣೆಗೆ ಕಟಿಬದ್ಧರಾಗಿ ಕಾರ್ಯನಿರ್ವಹಿಸುತ್ತಿರುವ ನಾಯಕನಿಗೆ ಶಕ್ತಿ ತುಂಬಲು ಬಳಸುವ ಸಂಕಲ್ಪ ಮಾಡಬೇಕು ಎಂದರು.
    ಡಾ. ದಯಾವತಿ, ನಾಗರಾಜ್, ರಮಾಕಾಂತ್, ವೆಂಕಟೇಶ್ ಮುಂತಾದವರು ಶ್ರೀಮಠ ಬೆಳೆದುಬಂದ ಹಾದಿಯ ಕುರಿತಂತೆ ಹಾಗೂ ಅದಕ್ಕೆ ಶ್ರಮಸಿದ ವ್ಯಕ್ತಿಗಳ ಕಾರ್ಯವನ್ನು ಸ್ಮರಿಸಿ ಮಾತನಾಡಿದರು. ಶ್ರೀಮಠದ ಮುಖ್ಯಸ್ಥರಾದ ಶೇಷಗಿರಿಆಚಾರ್ ಕಾರ್ಯಕ್ರಮದ ಯಶಸ್ಸಿಗೆ ಕಾರಣರಾ ದವರಿಗೆ ಕೃತಜ್ಞತೆ ಸಲ್ಲಿಸಿದರು.
    ಬೆಳಿಗ್ಗೆ ರಾಯರ ವೃಂದಾವನಕ್ಕೆ ಪಂಚಾಮೃತಭಿಷೇಕ ಹಾಗೂ ವಿಶೇಷ ಅಲಂಕಾರ ಮಾಡಲಾಯಿತು. ಶ್ರೀಗಳು ಅದಮಾರು ಮಠದ ಸಂಸ್ಥಾನದ ಶ್ರೀಕಾಳಿಂಗಮರ್ಧನ ಕೃಷ್ಣನ ಪೂಜೆಯನ್ನು ನೆರೆವೇರಿಸಿದರು.
    ಜಗನ್ನಾಥದಾಸರ ಹರಿಕಥಾಮೃತಸಾರದ ಕುರಿತಂತೆ ರಸಪ್ರಶ್ನೆ ಕಾರ್ಯಕ್ರಮ ನಡೆದು ವಿಜೇತರಿಗೆ ಬಹುಮಾನ ವಿತರಿಸಲಾಯಿತು. ತೀರ್ಥಪ್ರಸಾದ ವಿನಿಯೋಗ, ಅನ್ನಸಂತರ್ಪಣೆ ನೆರವೇರಿತು.
    ಮಠದ ವ್ಯವಸ್ಥಾಪಕರಾದ ಪಂಡಿತ್ ಗೋಪಾಲಾಚಾರ್, ಶ್ರೀನಿವಾಸಾಚಾರ್, ಶೇಷಗಿರಿ ಆಚಾರ್, ಜಗನ್ನಾಥ್, ವಾಸು, ರಾಘವೇಂದ್ರ, ಜಯತೀರ್ಥ, ವೆಂಕಟೇಶ್, ಮಧುಸೂದನ್, ಮಾಧವ ಮೂರ್ತಿ, ಸುಮಾ ಶೇಷಗಿರಿ, ಗುರುರಾಜಚಾರ್ ಸೇರಿದಂತೆ  ಅನೇಕರು ಉಪಸ್ಥಿತರಿದ್ದರು. ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಇನ್ನಿತರ ಗಣ್ಯರು ಪಾಲ್ಗೊಂಡು ಶ್ರೀಗಳ ಆಶೀರ್ವಾದ ಪಡೆದು ಕೃಪೆಗೆ ಪಾತ್ರರಾದರು.
 

ಉಡುಪಿ ಅದಮಾರು ಮಠದ ಹಿರಿಯ ಶ್ರೀಗಳಾದ ಶ್ರೀ ವಿಶ್ವಪ್ರಿಯತೀರ್ಥರಿಂದ ಗುರು ರಕ್ಷೆ ಪಡೆದರು.


ವಿಜೃಂಭಣೆಯಿಂದ ಜರುಗಿದ ಶ್ರೀ ದೊಡ್ಡಮ್ಮದೇವಿ ದೇವಸ್ಥಾನದ ಕಲಶ ಪ್ರತಿಷ್ಠಾಪನೆ

ಭದ್ರಾವತಿ ರಂಗಪ್ಪ ವೃತ್ತದ ಜೈಭೀಮ್ ನಗರದಲ್ಲಿರುವ ಶ್ರೀ ದೊಡ್ಡಮ್ಮದೇವಿ ದೇವಸ್ಥಾನದ ಕಲಶ ಪ್ರತಿಷ್ಠಾಪನೆ ಅಂಗವಾಗಿ ಶ್ರೀ ದೇವಿಗೆ ಕಲಾ ತತ್ತ್ವಾಧಿವಾಸ ಹೋಮ, ನವ ಕಲಾಭಿಷೇಕ, ಮಹಾಪೂಜೆ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.
    ಭದ್ರಾವತಿ, ಏ. ೨೪: ರಂಗಪ್ಪ ವೃತ್ತದ ಜೈಭೀಮ್ ನಗರದಲ್ಲಿರುವ ಶ್ರೀ ದೊಡ್ಡಮ್ಮದೇವಿ ದೇವಸ್ಥಾನದ ಕಲಶ ಪ್ರತಿಷ್ಠಾಪನೆ ಭಾನುವಾರ ವಿಜೃಂಭಣೆಯಿಂದ ಜರುಗಿತು.
    ಬೆಳಿಗ್ಗೆ ಶ್ರೀ ದೇವಿಗೆ ಕಲಾ ತತ್ತ್ವಾಧಿವಾಸ ಹೋಮ, ನವ ಕಲಾಭಿಷೇಕ, ಮಹಾಪೂಜೆ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ  ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು. ಪೊಲೀಸ್ ಉಮೇಶ್ ನೇತೃತ್ವದ ಸ್ನೇಹ ಜೀವಿ ಬಳಗದಿಂದ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.
    ಶಾಸಕ ಬಿ.ಕೆ ಸಂಗಮೇಶ್ವರ್, ದಾನಿಗಳಾದ ಸುನಿಲ್, ವಿ.ಎನ್ ವೆಂಕಟೇಶ್, ಎನ್. ರಾಜು, ಆನಂದ್(ಮೆಡಿಕಲ್), ಜಿ. ಧರ್ಮಪ್ರಸಾದ್, ಜಿ. ಆನಂದಕುಮಾರ್, ಗೋಕುಲ್, ರಮೇಶ್, ಸುಹಾಸ್‌ಗೌಡ ಮತ್ತು ಮುಳ್ಕೆರೆ ಲೋಕೇಶ್, ಸೇವಾಕರ್ತರಾದ ನಗರಸಭೆ ಪೌರಾಯುಕ್ತ ಕೆ. ಪರಮೇಶ್, ಸದಸ್ಯರಾದ ಮಣಿ, ಬಿ.ಎಂ ಮಂಜುನಾಥ್, ಅನುಪಮ ಚನ್ನೇಶ್, ಜಿ.ಪಂ. ಮಾಜಿ ಸದಸ್ಯ ಎಸ್. ಮಣಿಶೇಖರ್, ಸುರೇಶ್, ಬಿ.ಕೆ ಆನಂದ್, ಎನ್. ಕೃಷ್ಣಪ್ಪ, ಗಣೇಶ್‌ರಾವ್, ನರಸಿಂಹಪ್ಪ, ಸತ್ಯ, ಚಿನ್ನಯ್ಯ ಸೇರಿದಂತೆ ಜೈಭೀಮ್ ನಗರ ಸೇರಿದಂತೆ ಸುತ್ತಮುತ್ತಲಿನ ಭಕ್ತಾಧಿಗಳು ಪಾಲ್ಗೊಂಡಿದ್ದರು.
    ದೇವಸ್ಥಾನ ಸಮಿತಿ ಗೌರವಾಧ್ಯಕ್ಷ ಎನ್. ಶಿವ, ವಿ.ಎನ್ ವೆಂಕಟೇಶ್, ಅಧ್ಯಕ್ಷ ಕೆ. ಮಂಜುನಾಥ್, ಕಾರ್ಯಾಧ್ಯಕ್ಷ ಎಂ. ನಾಗರಾಜ್, ಉಪಾಧ್ಯಕ್ಷರಾದ ಎನ್. ಕುಮಾರ್, ಎನ್. ವಸಂತ, ಕರಿಗೌಡ, ಪ್ರಧಾನ ಕಾರ್ಯದರ್ಶಿ ಓ. ನರಸಿಂಹ, ಸಹ ಕಾರ್ಯದರ್ಶಿಗಳಾದ ಏಳುಮಲೈ, ಎಸ್. ರಾಜ, ಖಜಾಂಚಿ ಎನ್. ಹರೀಶ್, ಟಿ.ಎನ್ ಗುರುರಾಜ್ ಮತ್ತು ಸದಸ್ಯರು ಉಪಸ್ಥಿತರಿದ್ದರು.


ಭದ್ರಾವತಿ ರಂಗಪ್ಪ ವೃತ್ತದ ಜೈಭೀಮ್ ನಗರದಲ್ಲಿರುವ ಶ್ರೀ ದೊಡ್ಡಮ್ಮದೇವಿ ದೇವಸ್ಥಾನದ ಕಲಶ ಪ್ರತಿಷ್ಠಾಪನೆ ಭಾನುವಾರ ವಿಜೃಂಭಣೆಯಿಂದ ಜರುಗಿತು.

ಅಂಬೇಡ್ಕರ್‌ರವರ ಪುಸ್ತಕ ಜ್ಞಾನದಿಂದ ಜಗತ್ತಿನ ಶ್ರೇಷ್ಠ ಸಂವಿಧಾನ ರಚನೆ

ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕ ಡಾ.ಹ.ಮ ನಾಗಾರ್ಜುನ

ಛಲವಾದಿಗಳ ಸಮಾಜದ ವತಿಯಿಂದ ಡಾ. ಬಿ. ಅಂಬೇಡ್ಕರ್‌ರವರ ಜನ್ಮದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಸಮಾಜದ ನೂತನ ಭವನ ನಿರ್ಮಾಣದ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಕ, ಕಲಾವಿದ ಅಪೇಕ್ಷ ಮಂಜುನಾಥ್, ಹಿಂದಿ ಶಿಕ್ಷಕಿ ತ್ರಿವೇಣಿ, ಡಿಎಸ್‌ಎಸ್ ಸಂಸ್ಥಾಪಕ ಕಾರ್ಯದರ್ಶಿ ರಾಜು, ಕ್ರೀಡಾಪಟು ಎಂ. ನಾಗರಾಜ್ ಹಾಗು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
    ಭದ್ರಾವತಿ, ಏ. ೨೪: ಡಾ. ಬಿ.ಆರ್ ಅಂಬೇಡ್ಕರ್‌ರವರು ಸಂಪಾದಿಸಿದ ಪುಸ್ತಕ ಜ್ಞಾನ ಜಗತ್ತಿನ ಶ್ರೇಷ್ಠ ಸಂವಿಧಾನ ರಚನೆಗೆ ನೆರವಾಯಿತು ಎಂದು ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕ ಡಾ.ಹ.ಮ ನಾಗಾರ್ಜುನ ಹೇಳಿದರು.
    ಅವರು ನ್ಯೂಟೌನ್ ಜಯಶ್ರೀ ವೃತ್ತದ ಸಮೀಪ ತಾಲೂಕು ಛಲವಾದಿಗಳ ಸಮಾಜದ ವತಿಯಿಂದ ಡಾ. ಬಿ. ಅಂಬೇಡ್ಕರ್‌ರವರ ಜನ್ಮದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಸಮಾಜದ ನೂತನ ಭವನ ನಿರ್ಮಾಣದ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ಬಿ.ಆರ್ ಅಂಬೇಡ್ಕರ್‌ರವರು ವಿದೇಶದಲ್ಲಿ ಸುಮಾರು ೫೦ ಸಾವಿರ ಪುಸ್ತಕಗಳನ್ನು ಸಂಗ್ರಹಿಸಿ ಗ್ರಂಥಾಲಯ ನಿರ್ಮಾಣ ಮಾಡುವ ಜೊತೆಗೆ ಅವುಗಳ ಅಧ್ಯಯನ ನಡೆಸಿದರು. ಜೊತೆಗೆ ಸುಮಾರು ೧೫ ಸಾವಿರ ಪುಸ್ತಕಗಳನ್ನು ರಚಿಸಿದರು. ಅವರ ಪುಸ್ತಕ ಜ್ಞಾನ ದೇಶದ ಸಂವಿಧಾನ ರಚನೆಗೆ ನೆರವಾಯಿತು. ಅಂಬೇಡ್ಕರ್‌ರವರು ಹೊಂದಿದ್ದ ಅಪಾರ ಜ್ಞಾನದಿಂದಾಗಿ ಅವರು ಜಗತ್ತಿನ ಶ್ರೇಷ್ಠ ವ್ಯಕ್ತಿಗಳ ಸಾಲಿನಲ್ಲಿ ಒಬ್ಬರಾಗಿ ಗುರುತಿಸಿಕೊಳ್ಳಲು ಸಾಧ್ಯವಾಯಿತು. ಅಂಬೇಡ್ಕರ್‌ರವರ ಆಶಯದಂತೆ ದೇಶದಲ್ಲಿ ಪ್ರತಿಯೊಬ್ಬರಿಗೂ ಇಂದು ಶಿಕ್ಷಣ, ಸಂಘಟನೆ ಮತ್ತು ಹೋರಾಟ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ನಾವುಗಳು ಮುನ್ನಡೆಯಬೇಕೆಂದರು.
    ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಮಾತನಾಡಿ, ಕ್ಷೇತ್ರದಲ್ಲಿ ಛಲವಾದಿ ಸಮಾಜದವರು ಇನ್ನೂ ಹೆಚ್ಚಿನ ರೀತಿಯಲ್ಲಿ ಸಂಘಟಿತರಾಗಬೇಕು. ಎಲ್ಲಿಯವರೆಗೆ ಸಂಘಟಿತರಾಗುವುದಿಲ್ಲವೋ ಅಲ್ಲಿಯವರೆಗೂ ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಲು ಸಾಧ್ಯವಿಲ್ಲ. ಅಲ್ಲದೆ ಸಮಾಜ ಬಲಗೊಳ್ಳುವುದಿಲ್ಲ. ಈ ಹಿನ್ನಲೆಯಲ್ಲಿ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕು. ಕ್ಷೇತ್ರದಲ್ಲಿ ಛಲವಾದಿ ಸಮಾಜದವರು ಪ್ರಾಮಾಣಿಕತೆಯನ್ನು ಕಾಯ್ದುಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಪ್ರಸ್ತುತ ಹಲವಾರು ಹುದ್ದೆಗಳನ್ನು ಅಲಂಕರಿಸಲು ಸಾಧ್ಯವಾಗಿದೆ. ಈ ಸಮಾಜಕ್ಕೆ ಎಲ್ಲಾ ರೀತಿಯ ಸಹಕಾರ ನೀಡಲು ಬದ್ಧ ಎಂದರು.
    ಸರ್‌ಎಂವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಪ್ರಾಂಶುಪಾಲ ಡಾ. ಟಿ. ಮಂಜುನಾಥ್ ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿ, ಗೌತಮ ಬುದ್ಧ ಹಾಗು ಡಾ. ಬಿ.ಆರ್ ಅಂಬೇಡ್ಕರ್‌ರವರು ತಮ್ಮ ಬದುಕನ್ನು ಸಮಾ ಸಮಾಜ ನಿರ್ಮಾಣಕ್ಕಾಗಿ ಮೀಸಲಿಡುವ ಮೂಲಕ ಶಾಶ್ವತವಾಗಿ ಉಳಿದುಕೊಂಡಿದ್ದಾರೆ. ಅವರು ಜಗತ್ತಿಗೆ ನೀಡಿರುವ ಕೊಡುಗೆಗಳನ್ನು ನಾವುಗಳು ಸ್ಮರಿಸಿಕೊಳ್ಳುವ ಜೊತೆಗೆ ಅವರ ಆಶಯದಂತೆ ಮುನ್ನಡೆಯಬೇಕಾಗಿದೆ ಎಂದರು.
    ಶಾಸಕ ಬಿ.ಕೆ ಸಂಗಮೇಶ್ವರ್ ಸಮಾಜದ ನೂತನ ಭವನ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದರು. ಸಮಾಜದ ಅಧ್ಯಕ್ಷ, ನಗರಸಭೆ ಉಪಾಧ್ಯಕ್ಷ ಚನ್ನಪ್ಪ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಇಂಜಿನಿಯರ್ ರಂಗರಾಜಪುರ ಬೌದ್ಧಧರ್ಮದ ಸಂದೇಶಗಳನ್ನು ವಾಚಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಪ್ರತಿಭಾ ಪುರಸ್ಕಾರ ನೆರವೇರಿಸಿಕೊಟ್ಟರು.
     ನಗರಸಭಾ ಸದಸ್ಯರಾದ ಉದಯಕುಮಾರ್, ಪ್ರೇಮ, ಅನ್ನಪೂರ್ಣ, ಸರ್ವಮಂಗಳ, ಕಾಂತರಾಜ್, ದೊಡ್ಡೇರಿ ಗ್ರಾ.ಪಂ. ಉಪಾಧ್ಯಕ್ಷೆ ಹೇಮಾವತಿ, ಸಿಂಗನಮನೆ ಗ್ರಾ.ಪಂ. ಸದಸ್ಯೆ ಚಂದನಮಧು, ಹಿರಿಯೂರು ಗ್ರಾ.ಪಂ. ಸದಸ್ಯ ಕಿರಣ್, ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಚಿನ್ನಯ್ಯ, ಕೆ. ರಂಗನಾಥ್, ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಹೇಮಾವತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಬದರಿ ನಾರಾಯಣ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಎಸ್ ಎಸ್ ಬೈರಪ್ಪ ಸ್ವಾಗತಿಸಿದರು. ಎ. ತಿಪ್ಪೇಸ್ವಾಮಿ ನಿರೂಪಿಸಿದರು. ಡಿ. ನರಸಿಂಹಮೂರ್ತಿ ವಂದಿಸಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ದೈಹಿಕ ಶಿಕ್ಷಕ, ಕಲಾವಿದ ಅಪೇಕ್ಷ ಮಂಜುನಾಥ್, ಹಿಂದಿ ಶಿಕ್ಷಕಿ ತ್ರಿವೇಣಿ, ಡಿಎಸ್‌ಎಸ್ ಸಂಸ್ಥಾಪಕ ಕಾರ್ಯದರ್ಶಿ ರಾಜು, ಕ್ರೀಡಾಪಟು ಎಂ. ನಾಗರಾಜ್ ಹಾಗು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

Saturday, April 23, 2022

ಛಲವಾದಿಗಳ ಸಮಾಜದ ನೂತನ ಭವನ ನಿರ್ಮಾಣಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಗುದ್ದಲಿ ಪೂಜೆ


    
ಭದ್ರಾವತಿ: ತಾಲೂಕು ಛಲವಾದಿಗಳ ಸಮಾಜದ ನೂತನ ಭವನ ನಿರ್ಮಾಣಕ್ಕೆ ಶನಿವಾರ ಶಾಸಕ ಬಿ.ಕೆ ಸಂಗಮೇಶ್ವರ್ ಗುದ್ದಲಿ ಪೂಜೆ ನೆರವೇರಿಸಿದರು. 
       ಸಮಾಜದ ಅಧ್ಯಕ್ಷ, ನಗರಸಭೆ ಉಪಾಧ್ಯಕ್ಷ ಚನ್ನಪ್ಪ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಇಂಜಿನಿಯರ್ ರಂಗರಾಜಪುರ ಬೌದ್ಧಧರ್ಮದ ಸಂದೇಶಗಳನ್ನು ವಾಚಿಸಿದರು.
ಸರ್‌ಎಂವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಪ್ರಾಂಶುಪಾಲ ಡಾ. ಟಿ. ಮಂಜುನಾಥ್ ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.
      ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕ ಡಾ.ಹ.ಮ ನಾಗಾರ್ಜುನ ಉಪನ್ಯಾಸ ನಡೆಸಿಕೊಟ್ಟರು.
         ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಪ್ರತಿಭಾ ಪುರಸ್ಕಾರ ನೆರವೇರಿಸಿಕೊಟ್ಟರು.
     ನಗರಸಭಾ ಸದಸ್ಯರಾದ ಬಿ.ಕೆ ಮೋಹನ್, ಉದಯಕುಮಾರ್, ಪ್ರೇಮ, ಅನ್ನಪೂರ್ಣ, ಸರ್ವಮಂಗಳ, ಕಾಂತರಾಜ್, ದೊಡ್ಡೇರಿ ಗ್ರಾ.ಪಂ. ಉಪಾಧ್ಯಕ್ಷೆ ಹೇಮಾವತಿ, ಸಿಂಗನಮನೆ ಗ್ರಾ.ಪಂ. ಸದಸ್ಯೆ ಚಂದನಮಧು, ಹಿರಿಯೂರು ಗ್ರಾ.ಪಂ. ಸದಸ್ಯ ಕಿರಣ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಬದರಿ ನಾರಾಯಣ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಎಸ್ ಎಸ್ ಬೈರಪ್ಪ ಸ್ವಾಗತಿಸಿದರು. ಕೆ ತಿಪ್ಪೇಸ್ವಾಮಿ ನಿರೂಪಿಸಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ದೇಶದಲ್ಲಿ, ರಾಜ್ಯದಲ್ಲಿ ನೀರಾವರಿ ಯೋಜನೆಗಳಿಗೆ ಜೆಡಿಎಸ್ ಕೊಡುಗೆ ಅಪಾರ

ರಾಜ್ಯದ ಮುಂದಿನ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ : ಎಚ್.ಡಿ ರೇವಣ್ಣ

ಭದ್ರಾವತಿ ತಾಲೂಕಿನ ಭದ್ರಾ ಜಲಾಶಯ ಸಮೀಪದ ಬಿ.ಆರ್ ಪ್ರಾಜೆಕ್ಟ್‌ನಲ್ಲಿ ಶನಿವಾರ 'ಜನತಾ ಜಲಧಾರೆ ಯಾತ್ರೆ' ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಬಹಿರಂಗ ಸಭೆಯನ್ನು ಮಾಜಿ ಸಚಿವ ಎಚ್.ಡಿ ರೇವಣ್ಣ ಉದ್ಘಾಟಿಸಿದರು.  
    ಭದ್ರಾವತಿ, ಏ. ೨೩: ದೇಶದಲ್ಲಿ ಹಾಗು ರಾಜ್ಯದಲ್ಲಿ ನೀರಾವರಿ ಯೋಜನೆಗಳಿಗೆ ಜೆಡಿಎಸ್ ಸರ್ಕಾರ ನೀಡಿರುವ ಕೊಡುಗೆ ಅಪಾರವಾಗಿದ್ದು, ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹಾಗು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಯವರು ನೀಡಿರುವಷ್ಟು ಅನುದಾನ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ನೀಡಿಲ್ಲ ಎಂದು ಮಾಜಿ ಸಚಿವ ರೇವಣ ಹೇಳಿದರು.
    ಅವರು ಶನಿವಾರ ತಾಲೂಕಿನ ಭದ್ರಾ ಜಲಾಶಯ ಸಮೀಪದ ಬಿ.ಆರ್ ಪ್ರಾಜೆಕ್ಟ್‌ನಲ್ಲಿ 'ಜನತಾ ಜಲಧಾರೆ ಯಾತ್ರೆ' ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಬಹಿರಂಗ ಸಭೆ ಉದ್ಘಾಟಿಸಿ ಮಾತನಾಡಿದರು.
    ರಾಜ್ಯದಲ್ಲಿ ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವುದು ೧೦೦ಕ್ಕೆ ೧೦೦ರಷ್ಟು ಸತ್ಯ. ದೇಶಕ್ಕೆ ಸ್ವಾತಂತ್ರ್ಯ ಬಂದು ೭೫ ವರ್ಷಗಳು ಕಳೆದರೂ ಸಹ ಇಂದಿಗೂ ನೀರಾವರಿ ಯೋಜನೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಿಲ್ಲ. ೫೦ ವರ್ಷಗಳ ಕಾಲ ಆಡಳಿತ ನಡೆಸಿರುವ ಕಾಂಗ್ರೆಸ್ ಹಾಗು ಆ ನಂತರ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರಗಳು ನೀರಾವರಿ ಯೋಜನೆಗಳಿಗೆ ಹೆಚ್ಚಿನ ಮಹತ್ವ ನೀಡಿಲ್ಲ. ಇವುಗಳ ಕೊಡುಗೆ ಅತ್ಯಲ್ಪವಾಗಿದ್ದು, ಜೆಡಿಎಸ್ ಪಕ್ಷ ತನ್ನ ಅಧಿಕಾರದ ಅವಧಿಯಲ್ಲಿ ಹೆಚ್ಚಿನ ಅನುದಾನಗಳನ್ನು ಬಿಡುಗಡೆಗೊಳಿಸುವ ಮೂಲಕ ಹಲವು ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ ಎಂದರು.
    ಜೆಡಿಎಸ್ ಅಭಿವೃದ್ಧಿ ವಿಚಾರದಲ್ಲಿ ಎಂದಿಗೂ ಯಾರೊಂದಿಗೂ ರಾಜಿ ಮಾಡಿಕೊಂಡಿಲ್ಲ. ತನ್ನದೇ ಆದ ದೃಢ ನಿರ್ಧಾರಗಳನ್ನು ಹೊಂದಿದೆ. ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಎ ಮತ್ತು ಬಿ ಟೀಮ್‌ಗಳಾಗಿ ಹೊಂದಾಣಿಕೆ ರಾಜಕಾರಣ ಮಾಡುತ್ತಿವೆ. ಕೋಲಾರದಲ್ಲಿ ಹಿರಿಯ ರಾಜಕೀಯ ಮುತ್ಸದ್ದಿ ಕೆ.ಎಚ್ ಮುನಿಯಪ್ಪನವರನ್ನು ಹಾಗು ತುಮಕೂರಿನಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರನ್ನು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಹೊಂದಾಣಿಕೆ ಮಾಡಿಕೊಂಡು ಲೋಕಸಭಾ ಚುನಾವಣೆಯಲ್ಲಿ ಸೋಲಿಸಿವೆ ಎಂದರು ಆರೋಪಿಸಿದರು.
    ವಿಧಾನಸಭಾ ಕ್ಷೇತ್ರದ ನಿಯೋಜಿತ ಅಭ್ಯರ್ಥಿ ಶಾರದ ಅಪ್ಪಾಜಿ ಮಾತನಾಡಿ, ಕ್ಷೇತ್ರದಲ್ಲಿ ಮಾಜಿ ಶಾಸಕರಾದ ದಿವಂಗತ ಎಂ.ಜೆ ಅಪ್ಪಾಜಿಯವರ ಕೊಡುಗೆ ಅನನ್ಯವಾಗಿದೆ. ಅವರ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿರುವುದು ಇದಕ್ಕೆ ಸಾಕ್ಷಿಯಾಗಿದೆ. ಕ್ಷೇತ್ರದಲ್ಲಿ ಅಪ್ಪಾಜಿಯವರ ಕನಸಿನ ಹಲವಾರು ನೀರಾವರಿ ಯೋಜನೆಗಳು ಇಂದಿಗೂ ಅನುಷ್ಠಾನಗೊಳ್ಳದೆ ನೆನೆಗುದಿಗೆ ಬಿದ್ದಿವೆ. ನೀರಾವರಿ ಯೋಜನೆಗಳು ಅನುಷ್ಠಾನಗೊಳ್ಳುವ ಜೊತೆಗೆ ವಿಐಎಸ್‌ಎಲ್ ಮತ್ತು ಎಂಪಿಎಂ ಕಾರ್ಖಾನೆಗಳು ಪುನಶ್ಚೇತನಗೊಳ್ಳಬೇಕಾಗಿದೆ. ಕ್ಷೇತ್ರದಲ್ಲಿ ಹಲವಾರು ಸಮಸ್ಯೆಗಳು ಉಳಿದುಕೊಂಡಿವೆ. ಇವುಗಳಿಗೆ ಪರಿಹಾರ ಕಂಡುಕೊಳ್ಳಬೇಕಾದರೆ ಜೆಡಿಎಸ್ ಪಕ್ಷ ಬೆಂಬಲಿಸುವ ಮೂಲಕ ಕ್ಷೇತ್ರದಿಂದ ನನ್ನನ್ನು ಗೆಲ್ಲಿಸಿ ವಿಧಾನಸಭೆಗೆ ಕಳುಹಿಸಬೇಕು. ಅಪ್ಪಾಜಿ ಅವರಿಗೆ ನೀಡುತ್ತಿದ್ದ ಎಲ್ಲಾ ರೀತಿಯ ಸಹಕಾರ ನನಗೂ ನೀಡಬೇಕೆಂದು ಮನವಿ ಮಾಡಿದರು.

ಕುಮಾರಸ್ವಾಮಿ ವಿಧಿ ಲಿಖಿತ..!
ಕೋಡಿಮಠದ ಶ್ರೀಗಳು ಭವಿಷ್ಯ ವಾಣಿ ನುಡಿದಿರುವ ಮೆಸೇಜ್ ಇತ್ತೀಚೆಗೆ ವಾಟ್ಸಪ್‌ನಲ್ಲಿ ಗಮನಿಸಿದ್ದೇನೆ. ಶ್ರೀಗಳು ರಾಜ್ಯದ ಮುಂದಿನ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಎಂದು ಖಚಿತವಾಗಿ ತಿಳಿಸಿದ್ದಾರೆ. ಇದು ವಿಧಿ ಲಿಖಿತವಾಗಿದ್ದು, ಇದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ.
                                                                                                        - ಎಚ್.ಡಿ ರೇವಣ್ಣ, ಮಾಜಿ ಸಚಿವ

    ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜೆ.ಪಿ ಯೋಗೇಶ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಮಾಜಿ ಶಾಸಕಿ ಶಾರದ ಪೂರ್‍ಯಾನಾಯ್ಕ, ಜೆಡಿಎಸ್ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಗೀತಾ ಸತೀಶ್, ಪಕ್ಷದ ಯುವ ಘಟಕದ ನೂತನ ಜಿಲ್ಲಾಧ್ಯಕ್ಷ ಮಧುಕುಮಾರ್, ಯುವ ಘಟಕದ ತಾಲೂಕು ಅಧ್ಯಕ್ಷ ಎಂ.ಎ ಅಜಿತ್, ಜೆಡಿಎಸ್ ತಾಲೂಕು ಅಧ್ಯಕ್ಷ ಆರ್. ಕರುಣಾಮೂರ್ತಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಎಸ್. ಮಣಿಶೇಖರ್, ಜೆ.ಪಿ ಯೋಗೇಶ್, ಶಿಮೂಲ್ ಮಾಜಿ ಅಧ್ಯಕ್ಷ ಡಿ. ಆನಂದ್, ನಗರಸಭೆ ವಿರೋಧ ಪಕ್ಷದ ನಾಯಕ ಬಸವರಾಜ ಬಿ. ಆನೇಕೊಪ್ಪ, ಸದಸ್ಯರಾದ ಉದಯಕುಮಾರ್, ಕೋಟೇಶ್ವರರಾವ್, ವಿಜಯ, ಸವಿತಾ, ಜಯಶೀಲ, ರೇಖಾ, ಮಂಜುಳ, ಪಲ್ಲವಿ, ನಾಗರತ್ನ, ರೂಪಾವತಿ, ಮುಖಂಡರಾದ ಡಿ.ಟಿ ಶ್ರೀಧರ್, ಮುರ್ತುಜಾಖಾನ್, ನಂಜುಂಡೇಗೌಡ, ಲೋಕೇಶ್ವರರಾವ್, ಮೈಲಾರಪ್ಪ, ಉಮೇಶ್, ಗೊಂದಿ ಜಯರಾಂ, ದಿಲೀಪ್, ಗಿರಿನಾಯ್ಡು, ಗುಣಶೇಖರ್, ಕೆಬಲ್ ಸುರೇಶ್, ಅಶೋಕ್‌ಕುಮಾರ್, ಭಾಗ್ಯಮ್ಮ, ವಿಶಾಲಾಕ್ಷಿ  ಸೇರಿದಂತೆ ಇನ್ನಿತರರು ಕೈಜೋಡಿಸಿ ಬಹಿರಂಗಸಭೆ ಯಶಸ್ವಿಗೆ ಮುಂದಾಗಿದ್ದಾರೆ.
    ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರಾದ ಎಂ. ರಾಜು ಸ್ವಾಗತಿಸಿದರು. ಎಚ್.ಬಿ ರವಿಕುಮಾರ್ ವಂದಿಸಿದರು. ಮಾಜಿ ಉಪಾಧ್ಯಕ್ಷೆ ಮಹಾದೇವಿ ಸಂಗಡಿಗರು ಪ್ರಾರ್ಥಿಸಿದರು.
    ಇದಕ್ಕೂ ಮೊದಲು ತಾಲೂಕಿನ ಶ್ರೀರಾಮನಗರದ ಶ್ರೀ ರಾಮೇಶ್ವರ ದೇವಸ್ಥಾನದಿಂದ ಬೆಳಿಗ್ಗೆ 'ಜನತಾ ಜಲಧಾರೆ ಯಾತ್ರೆ'ಗೆ ಚಾಲನೆ ನೀಡಲಾಯಿತು. ಮಧ್ಯಾಹ್ನ ಸುಮಾರು ೧ ಗಂಟೆಗೆ ಯಾತ್ರೆ ಬಿ.ಆರ್ ಪ್ರಾಜೆಕ್ಟ್ ತಲುಪಿತು. ನಂತರ ಭದ್ರಾ ಜಲಾಶಯದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ 'ಜನತಾ ಜಲಧಾರೆ ಯಾತ್ರೆ' ರಥಕ್ಕೆ ಅಭಿಷೇಕ ಸಲ್ಲಿಸಲಾಯಿತು.


ಭದ್ರಾವತಿ ತಾಲೂಕಿನ ಭದ್ರಾ ಜಲಾಶಯ ಸಮೀಪದ ಬಿ.ಆರ್ ಪ್ರಾಜೆಕ್ಟ್‌ನಲ್ಲಿ ಶನಿವಾರ 'ಜನತಾ ಜಲಧಾರೆ ಯಾತ್ರೆ' ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಬಹಿರಂಗ ಸಭೆಯಲ್ಲಿ ಮಾಜಿ ಸಚಿವ ಎಚ್.ಡಿ ರೇವಣ್ಣ, ಮಾಜಿ ಶಾಸಕಿ ಶಾರದ ಪೂರ್‍ಯನಾಯ್ಕ, ಶಾರದ ಅಪ್ಪಾಜಿ ಅವರನ್ನು ಅಭಿನಂದಿಸಲಾಯಿತು.  

Friday, April 22, 2022

‘ಜನತಾ ಜಲಧಾರೆ ಯಾತ್ರೆ’ ಬಹಿರಂಗ ಸಭೆಗೆ ಭರದ ಸಿದ್ದತೆ : ಮುಖಂಡರಲ್ಲಿ ಉತ್ಸಾಹ

ಸಭೆಯಲ್ಲಿ ಪಾಲ್ಗೊಳ್ಳಲಿರುವ ಮಾಜಿ ಪ್ರಧಾನಿ ದೇವೇಗೌಡ

    ಭದ್ರಾವತಿ, ಏ. ೨೨: ರಾಜ್ಯದ ಸಮಗ್ರ ನೀರಾವರಿ ಮತ್ತು ಕುಡಿಯುವ ನೀರಿನ ಯೋಜನೆಗಳಿಗೆ ಆದ್ಯಾರ್ಪಣೆಗಾಗಿ ಜಾತ್ಯಾತೀತ ಜನತಾದಳ ವತಿಯಿಂದ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿರುವ 'ಜನತಾ ಜಲಧಾರೆ ಯಾತ್ರೆ' ಶುಕ್ರವಾರ ಸಂಜೆ ತಾಲೂಕಿನ ಶ್ರೀರಾಮನಗರಕ್ಕೆ ಆಗಮಿಸಿತು.  
    ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ತುಂಗಾಭದ್ರಾ ಸಂಗಮ ಸ್ಥಳದ ಸಮೀಪದ ಚಿಕ್ಕಕೂಡ್ಲಿಯಿಂದ ಯಾತ್ರೆ ಹೊಳೆಹೊನ್ನೂರು, ಕೈಮರ, ಅರಹತೊಳಲು, ಕಲ್ಲಿಹಾಳ್, ಅರಬಿಳಿಚಿ, ಕೂಡ್ಲಿಗೆರೆ ಮಾರ್ಗವಾಗಿ ಶ್ರೀರಾಮನಗರ ಪ್ರವೇಶಿಸಿತು.
ಮಾಜಿ ಪ್ರಧಾನಿ ಆಗಮನಕ್ಕೆ ಭರದ ಸಿದ್ದತೆ :
    'ಜನತಾ ಜಲಧಾರೆ ಯಾತ್ರೆ' ಅಂಗವಾಗಿ ಶನಿವಾರ ಭದ್ರಾ ಜಲಾಶಯದ ಸಮೀಪದ ಬಿ.ಆರ್ ಪ್ರಾಜೆಕ್ಟ್‌ನಲ್ಲಿ ನಡೆಯಲಿರುವ ಬಹಿರಂಗ ಸಭೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಆಗಮಿಸಲಿದ್ದಾರೆ ಈ ಹಿನ್ನಲೆಯಲ್ಲಿ ನಗರದಲ್ಲಿ ಭರದ ಸಿದ್ದತೆ ನಡೆಸಲಾಗಿದೆ.
    ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿಯವರ ಪ್ರಥಮ ವರ್ಷದ ಪುಣ್ಯ ಸ್ಮರಣೆ ನಂತರ ಶಾರದ ಅಪ್ಪಾಜಿ ನೇತೃತ್ವದಲ್ಲಿ ನಡೆಸುತ್ತಿರುವ ಬೃಹತ್ ಬಹಿರಂಗ ಸಭೆ ಇದಾಗಿದ್ದು, ನಗರದೆಲ್ಲೆಡೆ ಜೆಡಿಎಸ್ ಪಕ್ಷದ ಧ್ವಜ, ಬಂಟಿಂಗ್ಸ್‌ಗಳು ರಾರಾಜಿಸುತ್ತಿವೆ. 'ಜನತಾ ಜಲಧಾರೆ ಯಾತ್ರೆ'ಗೆ ಸ್ವಾಗತಕೋರಲು ಪ್ರಮುಖ ವೃತ್ತಗಳಲ್ಲಿ, ರಸ್ತೆಗಳಲ್ಲಿ ಫ್ಲೆಕ್ಸ್‌ಗಳು ರಾರಾಜಿಸುತ್ತಿವೆ.



     ಮುಖಂಡರಲ್ಲಿ ಉತ್ಸಾಹ :
    ಕಳೆದ ಕೆಲವು ತಿಂಗಳಿನಿಂದ ಪಕ್ಷದಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು, ಅಪ್ಪಾಜಿ ಅವರೊಂದಿಗೆ ಗುರುತಿಸಿಕೊಂಡಿದ್ದ ಪ್ರಮುಖರು ಪಕ್ಷ ತೊರೆದು ಬೇರೆ ಬೇರೆ ಪಕ್ಷಗಳಿಗೆ ಸೇರ್ಪಡೆಗೊಂಡರೂ ಸಹ ಶಾರದ ಅಪ್ಪಾಜಿ  ಯಾವುದಕ್ಕೂ ಎದೆಗುಂದದೆ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇದರಿಂದಾಗಿ ಪ್ರಸ್ತುತ ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಮುಖಂಡರು, ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾಗಿದೆ.
    ಪಕ್ಷದ ಯುವ ಘಟಕದ ನೂತನ ಜಿಲ್ಲಾಧ್ಯಕ್ಷ ಮಧುಕುಮಾರ್ ಹೆಚ್ಚು ಉತ್ಸಾಹದಿಂದ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಇವರೊಂದಿಗೆ ತಾಲೂಕು ಅಧ್ಯಕ್ಷ ಆರ್. ಕರುಣಾಮೂರ್ತಿ, ಯುವ ಘಟಕದ ತಾಲೂಕು ಅಧ್ಯಕ್ಷ ಎಂ.ಎ ಅಜಿತ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಎಸ್. ಮಣಿಶೇಖರ್, ಜೆ.ಪಿ ಯೋಗೇಶ್, ಶಿಮೂಲ್ ಮಾಜಿ ಅಧ್ಯಕ್ಷ ಡಿ. ಆನಂದ್, ನಗರಸಭೆ ವಿರೋಧ ಪಕ್ಷದ ನಾಯಕ ಬಸವರಾಜ ಬಿ. ಆನೇಕೊಪ್ಪ, ಸದಸ್ಯರಾದ ಉದಯಕುಮಾರ್, ಕೋಟೇಶ್ವರರಾವ್, ವಿಜಯ, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರಾದ ಎಚ್.ಬಿ ರವಿಕುಮಾರ್, ಎಂ. ರಾಜು, ಮುಖಂಡರಾದ ಕರಿಯಪ್ಪ, ಮುರ್ತುಜಾಖಾನ್, ನಂಜುಂಡೇಗೌಡ, ಲೋಕೇಶ್ವರರಾವ್, ಮೈಲಾರಪ್ಪ, ಉಮೇಶ್, ಗೊಂದಿ ಜಯರಾಂ, ದಿಲೀಪ್, ಗಿರಿನಾಯ್ಡು, ಗುಣಶೇಖರ್ ಸೇರಿದಂತೆ ಇನ್ನಿತರರು ಕೈಜೋಡಿಸಿ ಬಹಿರಂಗಸಭೆ ಯಶಸ್ವಿಗೆ ಮುಂದಾಗಿದ್ದಾರೆ.