Tuesday, May 3, 2022

ಶ್ರೀ ಹಳದಮ್ಮ ದೇವಿ ‘ಊರ ಹಬ್ಬ’ಕ್ಕೆ ಸಂಸದ ಬಿ.ವೈ ರಾಘವೇಂದ್ರ ಚಾಲನೆ

ಭದ್ರಾವತಿ ಹಳೇನಗರದ ಪುರಾಣ ಪ್ರಸಿದ್ದ ೩೩ ಗ್ರಾಮಗಳ ಅದಿದೇವತೆ ಶ್ರೀ ಹಳದಮ್ಮ ದೇವಿಯ ಜಾತ್ರಾಮಹೋತ್ಸವ 'ಊರ ಹಬ್ಬ'ಕ್ಕೆ ಮಂಗಳವಾರ ರಾತ್ರಿ ಸಂಸದ ಬಿ.ವೈ ರಾಘವೇಂದ್ರ ಚಾಲನೆ ನೀಡಿ ಮಾತನಾಡಿದರು.
    ಭದ್ರಾವತಿ, ಮೇ. ೩: ಹಳೇನಗರದ ಪುರಾಣ ಪ್ರಸಿದ್ದ ೩೩ ಗ್ರಾಮಗಳ ಅದಿದೇವತೆ ಶ್ರೀ ಹಳದಮ್ಮ ದೇವಿಯ ಜಾತ್ರಾಮಹೋತ್ಸವ 'ಊರ ಹಬ್ಬ'ಕ್ಕೆ ಮಂಗಳವಾರ ರಾತ್ರಿ ಸಂಸದ ಬಿ.ವೈ ರಾಘವೇಂದ್ರ ಚಾಲನೆ ನೀಡಿದರು.
    ಈ ಸಂದರ್ಭದಲ್ಲಿ ಮಾತನಾಡಿದ ಅವರು, ಶ್ರೀ ಹಳದಮ್ಮ ದೇವಿ ಎಲ್ಲರಿಗೂ ಒಳಿತು ಮಾಡುವಂತೆ ಪ್ರಾರ್ಥಿಸುತ್ತೇನೆ. ದೇವಿ ದರ್ಶನಕ್ಕೆ ಅವಕಾಶ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ದೇವಸ್ಥಾನ ಮತ್ತಷ್ಟು ಅಭಿವೃದ್ಧಿಗೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಸಹಕಾರ ನೀಡುವುದಾಗಿ ಭರವಸೆ ನೀಡಿದರು
    ಶಾಸಕ ಬಿ.ಕೆ ಸಂಗಮೇಶ್ವರ್, ನಗರಸಭೆ ಅಧ್ಯಕ್ಷೆ ಗೀತಾರಾಜ್‌ಕುಮಾರ್, ಎಸ್. ದತ್ತಾತ್ರಿ, ನಗರಸಭಾ ಸದಸ್ಯರಾದ ಆರ್. ಶ್ರೇಯಸ್, ಶಶಿಕಲಾ, ಅನುಪಮಾ, ದೇವಸ್ಥಾನ ಸಮಿತಿ ಕಾರ್ಯದರ್ಶಿ ಬಿ.ಎಂ ಸಂತೋಷ್, ಪ್ರಮುಖರಾದ ಕೆ. ಮಂಜುನಾಥ್, ಜಿ. ಆನಂದಕುಮಾರ್, ಎಂ. ಪ್ರಭಾಕರ್, ಗಿರೀಶ್, ಬಿ.ಎಸ್ ಗಣೇಶ್, ರಾಜಶೇಖರ್ ಉಪ್ಪಾರ, ಗೋಪಿ, ಬಿ.ಎಸ್ ಬಸವೇಶ್ ಹಾಗು ದೇವಸ್ಥಾನ ಸೇವಾ ಸಮಿತಿ ಪ್ರಮುಖರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಜಾತ್ರಾ ಮಹೋತ್ಸವ ೬ ದಿನಗಳ ಕಾಲ ನಡೆಯಲಿದೆ. ಮೊದಲ ದಿನವೇ ಸಾವಿರಾರು ಭಕ್ತಾಧಿಗಳು ಪಾಲ್ಗೊಂಡು ದೇವಿಯ ದರ್ಶನ ಪಡೆದು ಕೃಪೆಗೆ ಪಾತ್ರರಾದರು. ಮಹಿಳೆಯರಿಂದ ಡೊಳ್ಳು ಕುಣಿತ ಸೇರಿದಂತೆ ಇನ್ನಿತರ ಕಲಾತಂಡಗಳು ಪಾಲ್ಗೊಂಡಿದ್ದವು. ಆಕರ್ಷಕ ಸಿಡಿಮದ್ದು ಪ್ರದರ್ಶನ ನಡೆಯಿತು.

ನಗರಸಭೆಯಲ್ಲಿ ಬಸವೇಶ್ವರರ ಜಯಂತ್ಯೋತ್ಸವ

ವಿಶ್ವ ಜ್ಞಾನಿ, ಮಹಾಮಾನವತಾವಾದಿ ಜಗಜ್ಯೋತಿ ಬಸವೇಶ್ವರರ ಜಯಂತೋತ್ಸವ ಮಂಗಳವಾರ ಭದ್ರಾವತಿ ನಗರಸಭೆಯಲ್ಲಿ ಆಚರಿಸಲಾಯಿತು.
    ಭದ್ರಾವತಿ, ಮೇ. ೩: ವಿಶ್ವ ಜ್ಞಾನಿ, ಮಹಾಮಾನವತಾವಾದಿ ಜಗಜ್ಯೋತಿ ಬಸವೇಶ್ವರರ ಜಯಂತೋತ್ಸವ ಮಂಗಳವಾರ ನಗರಸಭೆಯಲ್ಲಿ ಆಚರಿಸಲಾಯಿತು.
    ನಗರಸಭೆ ಅಧ್ಯಕ್ಷೆ ಗೀತಾ ರಾಜಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್ ಕುಮಾರ್, ಪೌರಾಯುಕ್ತ ಕೆ. ಪರಮೇಶ್, ಹಿರಿಯ ಸದಸ್ಯ ಬಿ.ಕೆ ಮೋಹನ್ ಹಾಗೂ ಅಧಿಕಾರಿ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು. ಈಶ್ವರಪ್ಪ ನಿರೂಪಿಸಿ, ರಾಜಕುಮಾರ್ ಸ್ವಾಗತಿಸಿದರು. ನರಸಿಂಹ ಮೂರ್ತಿ ವಂದಿಸಿದರು.


ಬಿಳಿಕಿ ಹಿರೇಮಠದಲ್ಲಿ ಬಸವೇಶ್ವರ ಜಯಂತಿ, ಅಕ್ಷಯ ತೃತೀಯ

ಭದ್ರಾವತಿ ತಾಲೂಕಿನ ಬಿಳಿಕಿ ಹಿರೇಮಠದಲ್ಲಿ ಮಂಗಳವಾರ ವಿಶೇಷವಾಗಿ ಬಸವೇಶ್ವರ ಜಯಂತಿ ಹಾಗು ಅಕ್ಷಯ ತೃತೀಯ ಆಚರಿಸಲಾಯಿತು.
    ಭದ್ರಾವತಿ, ಮೇ. ೩: ತಾಲೂಕಿನ ಬಿಳಿಕಿ ಹಿರೇಮಠದಲ್ಲಿ ಮಂಗಳವಾರ ವಿಶೇಷವಾಗಿ ಬಸವೇಶ್ವರ ಜಯಂತಿ ಹಾಗು ಅಕ್ಷಯ ತೃತೀಯ ಆಚರಿಸಲಾಯಿತು.
    ಕಾರ್ಯಕ್ರಮದ ಅಂಗವಾಗಿ ಗ್ರಾಮದ ದಿವಂಗತ ಗೋವಿಂದರಾವ್‌ರವರ ಪತ್ನಿ ಶತಾಯುಷಿ ಸುಂದರ ಬಾಯಿ ಹಾಗು ಶ್ರೀ ಮರುಳಸಿದ್ದೇಶ್ವರ ಜನಕಲ್ಯಾಣ ಟ್ರಸ್ಟ್ ಅಧ್ಯಕ್ಷ ಸಿದ್ದಲಿಂಗಯ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಮಠದ ಪೀಠಾಧ್ಯಕ್ಷರಾದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನಿಧ್ಯವಹಿಸಿದ್ದರು. ಅಖಿಲಭಾರತ ವೀರಶೈವ ಯುವ ಘಟಕದ ಅಧ್ಯಕ್ಷ ಎಚ್. ಮಂಜುನಾಥ್, ಉಪಾಧ್ಯಕ್ಷ ಕೂಡ್ಲಿಗೆರೆ ಆರ್.ಎನ್ ರುದ್ರೇಶ್, ಖಜಾಂಚಿ ಬಿ.ಎಂ ರಮೇಶ್, ಪ್ರಧಾನ ಕಾರ್ಯದರ್ಶಿ ಕೆ.ಆರ್ ಆನಂದ್, ನಿರ್ದೇಶಕರಾದ ಮಂಜುನಾಥ್, ಹರೀಶ್, ಸಂತೋಷ್, ವಿನಯ್, ಜೆಡಿಯು ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್. ಗೌಡ, ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ವಸಂತ, ದೂದನಾಯ್ಕ, ಗ್ರಾಮ ಪಂಚಾಯಿತಿ ಸದಸ್ಯ ಶಿವಕುಮಾರ್, ಮಾಜಿ ಅಧ್ಯಕ್ಷ ಲಂಬೋದರ, ಅರ್ಜುನ್‌ರಾವ್, ಲೋಕೇಶ್‌ರಾವ್ ಸೇರಿದಂತೆ ಗ್ರಾಮಸ್ಥರು ಪಾಲ್ಗೊಂಡಿದ್ದರು.

ಬಸವಣ್ಣನವರ ವಿಧಾರಧಾರೆಗಳು ಸಭೆ-ಸಮಾರಂಭಗಳಿಗೆ ಮೀಸಲಾಗದಿರಲಿ : ಬಿ.ಕೆ ಸಂಗಮೇಶ್ವರ್

ಭದ್ರಾವತಿಯಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸಿದ್ಧಾರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಆಯೋಜಿಸಲಾಗಿದ್ದ ವಿಶ್ವಗುರು ಬಸವಣ್ಣನವರ ಜಯಂತ್ಯೋತ್ಸವ ಕಾರ್ಯಕ್ರಮ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
    ಭದ್ರಾವತಿ, ಮೇ. ೩: ಜಗಜ್ಯೋತಿ ಬಸವಣ್ಣನವರ ವಿಚಾರಧಾರೆಗಳು ಕೇವಲ ಸಭೆ-ಸಮಾರಂಭಗಳಿಗೆ ಮೀಸಲಾಗಬಾರದು.  ಎಲ್ಲರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವಂತಾಗಬೇಕೆಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.
    ಅವರು ಮಂಗಳವಾರ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸಿದ್ಧಾರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಆಯೋಜಿಸಲಾಗಿದ್ದ ವಿಶ್ವಗುರು ಬಸವಣ್ಣನವರ ಜಯಂತ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಮಾನವ ಸಮಾಜಕ್ಕೆ ಸಮಾನತೆ ಪರಿಕಲ್ಪನೆ ತೋರಿಸಿಕೊಟ್ಟ ಮಹಾನ್ ಆದರ್ಶ ವ್ಯಕ್ತಿ ಬಸವಣ್ಣ ಎಂಬುದನ್ನು ಯಾರು ಸಹ  ಮರೆಯಬಾರದು. ಬಸವಣ್ಣ ಹಾಗು ಅಂಬೇಡ್ಕರ್‌ರವರ ಚಿಂತನೆಗಳು ಇಂದಿನ ಸಮಾಜಕ್ಕೆ ಅವಶ್ಯಕವಾಗಿವೆ. ಜಾತಿ, ಧರ್ಮ, ಮತ ಪಂಥಗಳಿಲ್ಲದ ಸಮಾನತೆಯ ಸಮಾಜ ನಿರ್ಮಾಣವಾಗಬೇಕು. ನಾವೆಲ್ಲರೂ ಒಗ್ಗಟ್ಟಾಗಿ ಮುನ್ನಡೆಯಬೇಕೆಂದರು.
    ಡಿಎಸ್‌ಎಸ್ ರಾಜ್ಯ ಖಜಾಂಚಿ ಸತ್ಯ ಮಾತನಾಡಿ, ಜಗಜ್ಯೋತಿ ಬಸವಣ್ಣ, ಗೌತಮ ಬುದ್ಧ ಹಾಗು ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಈ ಮೂವರು ಮಹಾನ್ ವ್ಯಕ್ತಿಗಳು ಸಮಾನತೆ ಪರಿಕಲ್ಪನೆಯೊಂದಿಗೆ ಸಮಾಜ ನಿರ್ಮಾಣಗೊಳ್ಳಬೇಕೆಂಬ ಆಶಯಗಳನ್ನು ಹೊಂದಿದ್ದರು. ಬಸವಣ್ಣನವರು ೧೨ನೇ ಶತಮಾನದಲ್ಲಿಯೇ ಪುರುಷ ಮತ್ತು ಮಹಿಳೆಯರ ನಡುವಿನ ತಾರತಮ್ಯ ದೂರವಾಗಿಸಿ ಮಹಿಳೆಯರಿಗೆ ಸಮಾನ ಸ್ಥಾನಮಾನಗಳನ್ನು ಕಲ್ಪಿಸಿಕೊಟ್ಟಿದ್ದರು.  ಅನುಭವ ಮಂಟಪ ಇದಕ್ಕೆ ಸಾಕ್ಷಿಯಾಗಿದೆ. ಬಸವಣ್ಣನವರು ನುಡಿದಂತೆ ನಡೆದುಕೊಳ್ಳುವ ಮೂಲಕ ಆದರ್ಶ ವ್ಯಕ್ತಿಯಾಗಿ ಇಂದಿಗೂ ನಮ್ಮೆಲ್ಲರ ನಡುವೆ ಉಳಿದುಕೊಂಡಿದ್ದಾರೆ. ಇವರ ಆದರ್ಶ ಚಿಂತನೆಗಳನ್ನು ಮೈಗೂಡಿಸಿಕೊಳ್ಳಬೇಕೆಂದರು.
    ನಿವೃತ್ತ ಪ್ರಾಂಶುಪಾಲ ಶಿವಬಸಪ್ಪ ಮಾತನಾಡಿ, ಬಸವಣ್ಣನವರು ಅಸ್ಪೃಶ್ಯತೆ, ಕಂದಾಚಾರ, ಮೂಡನಂಬಿಕೆ ಹಾಗೂ ಶೋಷಣೆಗಳ ವಿರುದ್ಧ ಸಾಮಾಜಿಕ ಸುಧಾರಣೆಗಳನ್ನು ಕೈಗೊಂಡರು. ನಂತರ ಅಂಬೇಡ್ಕರ್‌ರವರು ಇದಕ್ಕೆ ಪೂರಕವೆಂಬಂತೆ ಸಮಾಸಮಾನತೆಯ ಪರಿಕಲ್ಪನೆಯೊಂದಿಗೆ ಸಂವಿಧಾನ ರಚಿಸಿದರು. ಈ ಇಬ್ಬರು ಆದರ್ಶ ವ್ಯಕ್ತಿಗಳ ಚಿಂತನೆಗಳು ಒಂದೇ ಆಗಿದ್ದು, ಇದನ್ನು ನಾವೆಲ್ಲರೂ ಅರ್ಥ ಮಾಡಿಕೊಳ್ಳಬೇಕಾಗಿದೆ ಎಂದರು.
    ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಎಂ. ವಿರುಪಾಕ್ಷಪ್ಪ ಮಾತನಾಡಿ, ಬಸವಣ್ಣನವರು ಸಮಾಜದಲ್ಲಿನ ಶೋಷಿತ ಸಮುದಾಯಗಳನ್ನು ಗುರುತಿಸಿದರು. ಜಾತಿ, ಧರ್ಮ, ಮತ ಪಂಥಗಳಿಲ್ಲದ ಕಾಯಕ ಸಮಾಜವನ್ನು ರೂಪಿಸಿದರು. ಆ ಮೂಲಕ ದಾಸೋಹದ ಪರಿಕಲ್ಪನೆ ತೋರಿಸಿಕೊಟ್ಟರು. ಪ್ರತಿಯೊಬ್ಬರು ತಮ್ಮ ಬದುಕುನ್ನು ತಮ್ಮ ದುಡಿಮೆಯಿಂದ ಸಾಗಿಸಬೇಕು. ಅನ್ಯಾಯ, ಅನೀತಿ, ಅಧರ್ಮದ ದಾರಿಯಲ್ಲಿ ಸಾಗದಂತೆ ಎಚ್ಚರಿಸಿದರು. ಭವಿಷ್ಯಕ್ಕೆ ಉತ್ತಮ ಸಮಾಜ ನಿರ್ಮಾಣದ ಪರಿಕಲ್ಪನೆ ರೂಪಿಕೊಟ್ಟರು. ಇವರು ರೂಪಿಸಿಕೊಟ್ಟಿರುವ ದಾರಿಯಲ್ಲಿ ಇಂದು ನಾವೆಲ್ಲರೂ ಸಾಗಬೇಕಾಗಿದೆ ಎಂದರು.
    ವೇದಿಕೆಯಲ್ಲಿ ನಗರಸಭಾ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಪೌರಾಯುಕ್ತ ಕೆ. ಪರಮೇಶ್ ಹಾಗು ಸದಸ್ಯರು, ತಾಲೂಕು ಕಾರ್ಯನಿರ್ವಹಣಾಧಿಕಾರಿ ರಮೇಶ್, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗೋಪಿನಾಥ್, ವಿವಿಧ ಸಂಘಟನೆಗಳ ಪ್ರಮುಖರಾದ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ, ಚಿನ್ನಯ್ಯ, ಎಸ್. ಮಂಜುನಾಥ್, ತೀರ್ಥಯ್ಯ, ಆರ್. ಮಹೇಶ್‌ಕುಮಾರ್, ಟಿ. ಚಂದ್ರೇಗೌಡ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ತಹಸೀಲ್ದಾರ್ ಆರ್. ಪ್ರದೀಪ್ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿವಿಧ ಸರ್ಕಾರಿ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು, ವೀರಶೈವ ಲಿಂಗಾಯಿತ ಸಮುದಾಯದ ವಿವಿಧ ಸಂಘಟನೆಗಳ ಪ್ರಮುಖರು, ವಿವಿಧ ಸಂಘ-ಸಂಸ್ಥೆಗಳ, ರಾಜಕೀಯ ಪಕ್ಷಗಳ, ಮಹಿಳಾ ಸಂಘಟನೆಗಳ ಪ್ರಮುಖರು ಪಾಲ್ಗೊಂಡಿದ್ದರು.
    ಇದಕ್ಕೂ ಮೊದಲು ನಗರದ ಅಂಬೇಡ್ಕರ್ ವೃತ್ತದಿಂದ ಸಭಾಭವನದವರೆಗೂ ವಿವಿಧ ಕಲಾತಂಡಗಳೊಂದಿಗೆ ವಿಶ್ವಗುರು ಬಸವಣ್ಣನವರ ಭಾವಚಿತ್ರದೊಂದಿಗೆ ಮೆರವಣಿಗೆ ನಡೆಸಲಾಯಿತು.

Monday, May 2, 2022

ಹೋರಾಟಗಾರ ಗಿರೀಶ್ ಹೆಸರು ನಾಮಕರಣಕ್ಕೆ ಒತ್ತಾಯಿಸಿ ಮನವಿ

ಹೋರಾಟಗಾರ ದಿವಂಗತ ಬಿ.ವಿ ಗಿರೀಶ್‌ರವರ ಹೆಸರನ್ನು ನಗರದ ಬೈಪಾಸ್ ರಸ್ತೆ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಸಮೀಪದಲ್ಲಿರುವ ತಿಮ್ಲಾಪುರಕ್ಕೆ ಹೋಗುವ ರಸ್ತೆಗೆ ನಾಮಕರಣಗೊಳಿಸುವಂತೆ ಒತ್ತಾಯಿಸಿ ಭದ್ರಾವತಿಯಲ್ಲಿ ಸೋಮವಾರ ವಿವಿಧ ಸಂಘಟನೆಗಳ ಪ್ರಮುಖರು ತಹಸೀಲ್ದಾರ್ ಆರ್. ಪ್ರದೀಪ್‌ಗೆ ಮನವಿ ಸಲ್ಲಿಸಿದರು.
    ಭದ್ರಾವತಿ, ಮೇ. ೨: ಹೋರಾಟಗಾರ ದಿವಂಗತ ಬಿ.ವಿ ಗಿರೀಶ್‌ರವರ ಹೆಸರನ್ನು ನಗರದ ಬೈಪಾಸ್ ರಸ್ತೆ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಸಮೀಪದಲ್ಲಿರುವ ತಿಮ್ಲಾಪುರಕ್ಕೆ ಹೋಗುವ ರಸ್ತೆಗೆ ನಾಮಕರಣಗೊಳಿಸುವಂತೆ ಒತ್ತಾಯಿಸಿ ಸೋಮವಾರ ವಿವಿಧ ಸಂಘಟನೆಗಳ ಪ್ರಮುಖರು ತಹಸೀಲ್ದಾರ್ ಆರ್. ಪ್ರದೀಪ್‌ಗೆ ಮನವಿ ಸಲ್ಲಿಸಿದರು.
    ತಾಲೂಕು ಕಛೇರಿ ಬಳಿ ಹಮ್ಮಿಕೊಳ್ಳಲಾಗಿದ್ದ ಬಿ.ವಿ ಗಿರೀಶ್‌ರವರ ಮೊದಲ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಮುಖರು ಬಿ.ವಿ ಗಿರೀಶ್‌ರವರು ಕನ್ನಡಪರ ಹೋರಾಟಗಳ ಜೊತೆಗೆ ಕಾರ್ಮಿಕರು, ರೈತರು, ವಿದ್ಯಾರ್ಥಿಗಳ ಹೋರಾಟಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಹೋರಾಟಗಳಿಗೆ ಬೆನ್ನೆಲುಬಾಗಿ ನ್ಯಾಯ ದೊರಕಿಸಿಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇವರ ಹೆಸರನ್ನು ಚಿರಸ್ಥಾಯಿಯಾಗಿಸಲು ಬೈಪಾಸ್ ರಸ್ತೆ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಸಮೀಪದಲ್ಲಿರುವ ತಿಮ್ಲಾಪುರಕ್ಕೆ ಹೋಗುವ ರಸ್ತೆಗೆ ಇವರ ಹೆಸರನ್ನು ನಾಮಕರಣಗೊಳಿಸುವಂತೆ ಮನವಿ ಮಾಡಿದರು.
    ಜನತಾದಳ(ಸಂಯುಕ್ತ) ಕರ್ನಾಟಕ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ, ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು, ಕರುನಾಡು ಹಿತರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ವೈ. ಶಶಿಕುಮಾರ್, ವೀರಶೈವ ಲಿಂಗಾಯತ ಸಮಾಜದ  ಪ್ರಮುಖರಾದ ತೀರ್ಥಯ್ಯ, ಮಲ್ಲಿಕಾರ್ಜುನ, ಬಾರಂದೂರು ಮಂಜುನಾಥ್, ಬಸವರಾಜ್, ನಗರಸಭಾ ಸದಸ್ಯರಾದ ಆರ್. ಮೋಹನ್‌ಕುಮಾರ್, ಆರ್. ಶ್ರೇಯಸ್(ಚಿಟ್ಟೆ), ಪೌರಾಯುಕ್ತ ಕೆ. ಪರಮೇಶ್, ಪರಿಸರ ಅಭಿಯಂತರ ಪ್ರಭಾಕರ್, ಮುಖಂಡರಾದ ಬಿ. ಗಂಗಾಧರ್, ಚಂದ್ರಶೇಖರ್ ಹಾಗು ಬಿ.ವಿ ಗಿರೀಶ್ ಅಭಿಮಾನಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Sunday, May 1, 2022

ತವರಿಗೆ ಮರಳಿದ ವೀರಯೋಧ ಜಿ. ಮಂಜುನಾಥ್‌ಗೆ ಅದ್ದೂರಿ ಸ್ವಾಗತ

ಭಾರತೀಯ ಸೇನೆಯಲ್ಲಿ ಸುಮಾರು ೨೦ ವರ್ಷ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿ ಭದ್ರಾವತಿಗೆ ಮರಳಿದ ವೀರ ಯೋಧ ಜಿ. ಮಂಜುನಾಥ್ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು.
    ಭದ್ರಾವತಿ, ಮೇ. ೧: ಭಾರತೀಯ ಸೇನೆಯಲ್ಲಿ ಸುಮಾರು ೨೦ ವರ್ಷ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿ ತವರಿಗೆ ಮರಳಿದ ವೀರ ಯೋಧ ಜಿ. ಮಂಜುನಾಥ್ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು.
    ಹೊಸಮನೆ ನಿವಾಸಿ ಜಿ. ಮಂಜುನಾಥ್‌ರವರು ಭಾರತೀಯ ಸೇನೆಯಲ್ಲಿ ಕರ್ತವ್ಯಕ್ಕೆ ಸೇರ್ಪಡೆಗೊಂಡು ಅಸ್ಸಾಂ, ಭೂಪಾಲ್, ಲಡಾಕ್ ಸೇರಿದಂತೆ ಹಲವೆಡೆ ಕರ್ತವ್ಯ ನಿರ್ವಹಿಸಿದ್ದಾರೆ. ನಿವೃತ್ತಿ ಕೊನೆಯ ಅವಧಿಯನ್ನು ಪಂಜಾಬ್‌ನಲ್ಲಿ ಪೂರೈಸಿ ಇದೀಗ ತವರಿಗೆ ಮರಳಿದ್ದಾರೆ.
    ಬಿಜೆಪಿ ಹಿಂದುಳಿದ ವರ್ಗ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಎಸ್. ರಾಜಶೇಖರ್ ನೇತೃತ್ವದಲ್ಲಿ ಬಜರಂಗದಳ ಪ್ರಮುಖರು, ಕಾರ್ಯಕರ್ತರು, ಅಭಿಮಾನಿಗಳು ಪುಷ್ಪ ಮಾಲಿಕೆಯೊಂದಿಗೆ ಪ್ರಮುಖ ರಸ್ತೆಗಳಲ್ಲಿ ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಿ ಅದ್ದೂರಿ ಸ್ವಾಗತ ಕೋರಿ ವೀರ ಯೋಧ ಜಿ. ಮಂಜುನಾಥ್‌ರವರ ದೇಶ ಪ್ರೇಮ, ಕರ್ತವ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು.

ಮೇ.೩ರಂದು ವಿಶ್ವಗುರು ಬಸವಣ್ಣನವರ ಜಯಂತ್ಯೋತ್ಸವ

    ಭದ್ರಾವತಿ, ಮೇ. ೧: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಮೇ.೩ರಂದು ಬೆಳಿಗ್ಗೆ ೧೧ ಗಂಟೆಗೆ ಸಿದ್ದರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ವಿಶ್ವಗುರು ಬಸವಣ್ಣನವರ ಜಯಂತ್ಯೋತ್ಸವ ಹಮ್ಮಿಕೊಳ್ಳಲಾಗಿದೆ.
    ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದು, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಬಿ ಅಶೋಕ್‌ನಾಯ್ಕ ಕಾರ್ಯಕ್ರಮ ಉದ್ಘಾಟಿಸುವರು. ಸಚಿವರಾದ ಕೆ.ಸಿ ನಾರಾಯಣಗೌಡ, ಅರಗಜ್ಞಾನೇಂದ್ರ, ಸಂಸದ ಬಿ.ವೈ ರಾಘವೇಂದ್ರ, ಶಾಸಕರಾದ ಕೆ.ಎಸ್ ಈಶ್ವರಪ್ಪ, ಆಯನೂರು ಮಂಜುನಾಥ್, ಎಸ್.ಎಲ್ ಭೋಜೇಗೌಡ, ಎಸ್. ರುದ್ರೇಗೌಡ, ಭಾರತಿ ಶೆಟ್ಟಿ, ಡಿ.ಎಸ್ ಅರುಣ್, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್ ಕುಮಾರ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ತಹಸೀಲ್ದಾರ್ ಆರ್. ಪ್ರದೀಪ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಪೌರಾಯುಕ್ತ ಕೆ. ಪರಮೇಶ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.
    ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಎಂ. ವಿರೂಪಾಕ್ಷಪ್ಪ ಉಪನ್ಯಾಸ ನೀಡಲಿದ್ದು, ಕಾರ್ಯಕ್ರಮಕ್ಕೂ ಮೊದಲು ಬಿ.ಎಚ್ ರಸ್ತೆ ಅಂಡರ್‌ಬ್ರಿಡ್ಜ್ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಸಭಾಭವನದವರೆಗೂ ವಿಶ್ವಗುರು ಬಸವಣ್ಣನವರ ಭಾವಚಿತ್ರದೊಂದಿಗೆ ವಿವಿಧ ತಂಡಗಳೊಂದಿಗೆ ಮೆರವಣಿಗೆ ನಡೆಯಲಿದ್ದು, ಎಲ್ಲಾ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು, ಚುನಾಯಿತ ಪ್ರತಿನಿಧಿಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಮಹಿಳಾ ಸಂಘಟನೆಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರಾದ ತಹಸೀಲ್ದಾರ್ ಆರ್. ಪ್ರದೀಪ್  ಕೋರಿದ್ದಾರೆ.