Saturday, May 7, 2022

ಗುತ್ತಿಗೆ ಕಾರ್ಮಿಕರೇ ಅಧಿಕವಾಗಿರುವ ಕಾರ್ಖಾನೆಯಲ್ಲಿ ಗಮನ ಸೆಳೆಯುತ್ತಿರುವ ಚುನಾವಣೆ

ಮೇ.೮ರಂದು ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರ ಚುನಾವಣೆ

ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆ
    * ಅನಂತಕುಮಾರ್
    ಭದ್ರಾವತಿ, ಮೇ. ೭: ಕೇಂದ್ರ ಸರ್ಕಾರಿ ಸ್ವಾಮ್ಯದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಇದೀಗ ಗುತ್ತಿಗೆ ಕಾರ್ಮಿಕರೇ ಅಧಿಕವಾಗಿದ್ದು, ಈ ಹಿನ್ನಲೆಯಲ್ಲಿ ಗುತ್ತಿಗೆ ಕಾರ್ಮಿಕರ ಪರವಾದ ಹೋರಾಟಗಳಿಗೆ ಹೆಚ್ಚು ಶಕ್ತಿ ತುಂಬಿಕೊಡುವ ನಾಯಕರ ಅಗತ್ಯವಿದೆ. ಗುತ್ತಿಗೆ ಕಾರ್ಮಿಕರು ಮೇ.೮ರಂದು ನಡೆಯಲಿರುವ ಚುನಾವಣೆಯಲ್ಲಿ ತಮ್ಮ ನಾಯಕನ ಆಯ್ಕೆಯಲ್ಲಿ ಮುಂದಾಗಿದ್ದಾರೆ.
    ಅಭಿವೃದ್ಧಿ ನಿರೀಕ್ಷೆಯೊಂದಿಗೆ ಸುಮಾರು ೨ ದಶಕಗಳಿಗೂ ಹೆಚ್ಚು ಕಾಲದಿಂದ ಮುನ್ನಡೆಯುತ್ತಿರುವ ಕಾರ್ಖಾನೆಯಲ್ಲಿ . ಒಂದು ಕಾಲದಲ್ಲಿ ಸುಮಾರು ೧೫ ಸಾವಿರಕ್ಕೂ ಹೆಚ್ಚು ಕಾಯಂ ಹಾಗು ೧೦ ಸಾವಿರಕ್ಕೂ ಹೆಚ್ಚು ಗುತ್ತಿಗೆ ಕಾರ್ಮಿಕರು ಕರ್ತವ್ಯ ನಿರ್ವಹಿಸುತ್ತಿದ್ದರು. ದೇಶದ ಪ್ರತಿಷ್ಠಿತ ಕಾರ್ಖಾನೆಗಳಲ್ಲಿ ಒಂದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಇಂತಹ ಬೃಹತ್ ಕಾರ್ಖಾನೆಯಲ್ಲಿ ಇದೀಗ ಕೇವಲ ೨೧೭ ಕಾಯಂ ಹಾಗು ೫೩ ಅಧಿಕಾರಿಗಳು ಮತ್ತು ೧೧೪೫ ಗುತ್ತಿಗೆ ಕಾರ್ಮಿಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.
    ಉದ್ಯೋಗ ಭದ್ರತೆ ಇಲ್ಲ, ತಿಂಗಳ ಪೂರ್ತಿ ಉದ್ಯೋಗವಿಲ್ಲ, ಇಎಸ್‌ಐ ಸೌಲಭ್ಯಗಳು ಸಮರ್ಪಕವಾಗಿಲ್ಲ, ಅಲ್ಲದೆ ಹಲವಾರು ಕಾರ್ಮಿಕ ಸೌಲಭ್ಯಗಳಿಂದ ವಂಚಿತರಾಗಿರುವ ಗುತ್ತಿಗೆ ಕಾರ್ಮಿಕರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ನಿರಂತರವಾಗಿ ಹೋರಾಟ ನಡೆಸಿಕೊಂಡು ಬರುತ್ತಿದ್ದಾರೆ. ಇವರಿಗೆ ಅಧಿಕೃತ ಕಾರ್ಮಿಕ ಸಂಘ ಸಹ ನಿರಂತರವಾಗಿ ಬೆಂಬಲ ನೀಡುತ್ತಾ ಬಂದಿದೆ. ಆದರೂ ಇವರ ಬೇಡಿಕೆಗಳು ಈಡೇರುತ್ತಿಲ್ಲ.

ಕಾರ್ಖಾನೆಯನ್ನು ಅಭಿವೃದ್ದಿಪಡಿಸುವಲ್ಲಿ ಅಥವಾ ಖಾಸಗೀಕರಣಗೊಳಿಸುವಲ್ಲಿ ಕೇಂದ್ರ ಹಾಗು ರಾಜ್ಯ ಸರ್ಕಾರಗಳು ವಿಫಲವಾಗಿವೆ. ಪ್ರಸ್ತುತ ಕಾರ್ಖಾನೆ ಇರುವ ವ್ಯವಸ್ಥೆಯಲ್ಲಿಯೇ ಸಣ್ಣ ಪ್ರಮಾಣದ ಉತ್ಪಾದನೆ, ಸಣ್ಣ ಪ್ರಮಾಣದ ಲಾಭದಲ್ಲಿ ಮುನ್ನಡೆಯುತ್ತಿದೆ. ಚಿಕ್ಕ ಚಿಕ್ಕ ಯಂತ್ರಗಳನ್ನು ಬದಲಿಸಿ ಹೊಸ ಯಂತ್ರಗಳನ್ನು ಅಳವಡಿಸಲಾಗುತ್ತಿದೆ. ಈ ನಡುವೆ ಪ್ರಾಧಿಕಾರ ರು. ೧೩ ಕೋ. ಬಿಡುಗಡೆಗೊಳಿಸಿದೆ. ಈ ಹಿನ್ನಲೆಯಲ್ಲಿ ಕಾರ್ಮಿಕ ಸಂಘ ತಟಸ್ಥವಾಗಿ ಉಳಿದುಕೊಂಡಿದ್ದು, ಯಾವುದೇ ಹೋರಾಟಕ್ಕೆ ಮುಂದಾಗದೆ ಮುಂದಿನ ಬೆಳವಣಿಗೆಗಳನ್ನು ಎದುರು ನೋಡುತ್ತಿದೆ. ಕಾರ್ಮಿಕ ಸಂಘ ಸದಾ ಕಾಲ ಗುತ್ತಿಗೆ ಕಾರ್ಮಿಕರ ಪರವಾಗಿದ್ದು, ಅವರ ಹೋರಾಟಗಳಲ್ಲಿ ಕೈಜೋಡಿಸಲಿದೆ.
          - ಜೆ. ಜಗದೀಶ್, ಅಧ್ಯಕ್ಷರು, ವಿಐಎಸ್‌ಎಲ್ ಕಾರ್ಮಿಕರ ಸಂಘ, ಭದ್ರಾವತಿ

    ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಕಾರ್ಖಾನೆಯನ್ನು ಅಭಿವೃದ್ಧಿಗೊಳಿಸುವಲ್ಲಿ ನಿರ್ಲಕ್ಷ್ಯತನ ತೋರುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಒಂದೆಡೆ ಅಗತ್ಯವಿರುವ ಬಂಡವಾಳ ತೊಡಗಿಸದೆ, ಮತ್ತೊಂದೆಡೆ ಖಾಸಗಿಕರಣಗೊಳ್ಳದೆ ಅತಂತ್ರ ಸ್ಥಿತಿಯಲ್ಲಿ ಮುನ್ನಡೆಯುವಂತಾಗಿದೆ. ಈ ನಡುವೆ ೩-೪ ವರ್ಷಗಳಿಂದ ಉಕ್ಕು ಪ್ರಾಧಿಕಾರ ಸರ್ಕಾರ ಕೈಗೊಳ್ಳುವ ತೀರ್ಮಾನಗಳಿಗೆ ಎದುರು ನೋಡದೆ ಕಾರ್ಖಾನೆಯನ್ನು ಸಂಕಷ್ಟದಲ್ಲಿಯೂ ಮುನ್ನಡೆಸಿಕೊಂಡು ಹೋಗುವ ದೃಢ ಸಂಕಲ್ಪ ಕೈಗೊಂಡಿರುವಂತೆ ಕಂಡು ಬರುತ್ತಿದೆ. ಈ ಹಿನ್ನಲೆಯಲ್ಲಿ ಅಲ್ಪ ಪ್ರಮಾಣದ ಬಂಡವಾಳ, ಅಲ್ಪ ಪ್ರಮಾಣದ ಉತ್ಪಾದನೆ, ಅಲ್ಪ ಪ್ರಮಾಣದ ಲಾಭ ಕಾಯ್ದುಕೊಂಡು ಬರುತ್ತಿದೆ.  
    ಈ ಎಲ್ಲಾ ಬೆಳವಣಿಗೆಗಳ ನಡುವೆ ಗುತ್ತಿಗೆ ಕಾರ್ಮಿಕರು ತಮ್ಮ ನಾಯಕನ ಆಯ್ಕೆಯಲ್ಲಿ ತೊಡಗಿರುವುದು ಇದೀಗ ಹೆಚ್ಚು ಗಮನ ಸೆಳೆಯುತ್ತಿದೆ. ಅಧ್ಯಕ್ಷ-೧,  ಉಪಾಧ್ಯಕ್ಷ-೨, ಪ್ರಧಾನ ಕಾರ್ಯದರ್ಶಿ-೧, ಸಹ ಕಾರ್ಯದರ್ಶಿ-೩, ಖಜಾಂಚಿ-೧ ಹಾಗು ೧೨ ಕಾರ್ಯಕಾರಿ ಸಮಿತಿ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಹಲವು ಮಂದಿ ಮೊದಲ ಬಾರಿಗೆ ಚುನಾವಣೆ ಎದುರಿಸಲು ಮುಂದಾಗಿದ್ದಾರೆ. ನ್ಯೂಟೌನ್ ಸರ್‌ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೫ ಗಂಟೆವರೆಗೆ ಮತದಾನ ನಡೆಯಲಿದೆ.
    ಗುತ್ತಿಗೆ ಕಾರ್ಮಿಕರು ಸಹ ವಿವಿಧ ರಾಜಕೀಯ ಪಕ್ಷಗಳಲ್ಲಿ ಹರಿದು ಹಂಚಿ ಹೋಗಿದ್ದು, ತಮ್ಮ ನಾಯಕನ ಆಯ್ಕೆಯಲ್ಲಿ ರಾಜಕೀಯ ಪಕ್ಷವನ್ನು ಬದಿಗಿಟ್ಟು ಸಮರ್ಥರನ್ನು ಆಯ್ಕೆ ಮಾಡುವಕೊಳ್ಳುವ ನಿಟ್ಟಿನಲ್ಲಿ ಮುಂದಾಗಬೇಕಾಗಿದೆ. ಆಗ ಮಾತ್ರ ಅವರ ಮುಂದಿನ ಹೋರಾಟಗಳು ರಾಜಕೀಯ ಪ್ರೇರಿತವಾಗದೆ ಕಾರ್ಮಿಕರ ಹೋರಾಟವಾಗಲಿವೆ ಎಂಬುದು ಪ್ರಜ್ಞಾವಂತರ ಆಶಯವಾಗಿದೆ.

ಕೋಟ್ಪಾ ಕಾಯ್ದೆಯಡಿ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ : ೨,೪೦೦ ರು. ದಂಡ ವಸೂಲಿ

ಭದ್ರಾವತಿ ನಗರದ ವಿವಿಧೆಡೆ ತಂಬಾಕು ನಿಯಂತ್ರಣ ಕಾಯ್ದೆಯಡಿ ಶನಿವಾರ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿ ಕಾಯ್ದೆ ಉಲ್ಲಂಘಿಸಿರುವವರ ವಿರುದ್ಧ ದಂಡ ವಿಧಿಸಲಾಯಿತು.
    ಭದ್ರಾವತಿ, ಮೇ. ೭ : ನಗರದ ವಿವಿಧೆಡೆ ತಂಬಾಕು ನಿಯಂತ್ರಣ ಕಾಯ್ದೆಯಡಿ ಶನಿವಾರ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿ ಕಾಯ್ದೆ ಉಲ್ಲಂಘಿಸಿರುವವರ ವಿರುದ್ಧ ದಂಡ ವಿಧಿಸಿರುವ ಘಟನೆ ನಡೆದಿದೆ.
      ಶಿವಮೊಗ್ಗ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನೊಳಗೊಂಡ ತಂಡ  ಹಳೇನಗರದ ಬಸವೇಶ್ವರ ವೃತ್ತ, ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸಮೀಪ ತಂಬಾಕು ಉತ್ಪನ್ನಗಳ ಮಾರಾಟದಲ್ಲಿ ತೊಡಗಿದ್ದ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿ ಒಟ್ಟು ೨೪೦೦ ರು.  ದಂಡ ವಸೂಲಾತಿ ಮಾಡಲಾಯಿತು.      
    ಕಾರ್ಯಾಚರಣೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ಎಂ ವಿ ಅಶೋಕ್,  ಭದ್ರಾವತಿ, ಎಚ್.ಐ.ಓ ಅನಂದಮೂರ್ತಿ ಮೂರ್ತಿ, ಜಿಲ್ಲಾ  ತಂಬಾಕು ನಿಯಂತ್ರಣ ಕೋಶದ    ಹೇಮಂತ್ ರಾಜ್,  ರವಿರಾಜ್ ಹಾಗೂ ನಗರ ಆರೋಗ್ಯ ಕೇಂದ್ರದ  ಮನೋಹರ್ರ ಚೇತನ್ ಕಾರ್ಯಾಚರಣೆಯಲ್ಲಿ  ಪಾಲ್ಗೊಂಡಿದ್ದರು.

ಸುಮಾರು ೭ ಅಡಿ ಉದ್ದದ ಹೆಬ್ಬಾವು ಸೆರೆ : ಹಾವುಗಳ ರಕ್ಷಣೆಯಲ್ಲಿ ತೊಡಗಿರುವ ಅರುಣ್


ಭದ್ರಾವತಿ ತಾಲೂಕಿನ ಉಕ್ಕುಂದ ಗ್ರಾಮದಲ್ಲಿ ಕಾಣಿಸಿಕೊಂಡ ಸುಮಾರು ೭ ಅಡಿ ಉದ್ದದ ಹೆಬ್ಬಾವು ಹಿಡಿದು ಸುರಕ್ಷಿತವಾಗಿ ಅರಣ್ಯಕ್ಕೆ ಬಿಡುವಲ್ಲಿ ಅರುಣ್ ಎಂಬುವರು ಯಶಸ್ವಿಯಾಗಿದ್ದಾರೆ.

ಭದ್ರಾವತಿ, ಮೇ. ೭: ತಾಲೂಕಿನ ಉಕ್ಕುಂದ ಗ್ರಾಮದಲ್ಲಿ ಕಾಣಿಸಿಕೊಂಡ ಸುಮಾರು ೭ ಅಡಿ ಉದ್ದದ ಹೆಬ್ಬಾವು ಹಿಡಿದು ಸುರಕ್ಷಿತವಾಗಿ ಅರಣ್ಯಕ್ಕೆ ಬಿಡುವಲ್ಲಿ ಅರುಣ್ ಎಂಬುವರು ಯಶಸ್ವಿಯಾಗಿದ್ದಾರೆ.
ಕೂಲಿ ಕೆಲಸದೊಂದಿಗೆ ಹಾವುಗಳನ್ನು ಹಿಡಿಯುವ ಹವ್ಯಾಸದಲ್ಲಿ ತೊಡಗಿಸಿಕೊಂಡಿರುವ ಅರುಣ್ ಹೆಬ್ಬಾವು ಹಿಡಿದು ಅರಣ್ಯ ಇಲಾಖೆಯವರ ಸಹಕಾರದೊಂದಿಗೆ ಸಮೀಪದ ಗಂಗೂರು ಅರಣ್ಯ ಪ್ರದೇಶಕ್ಕೆ ಬಿಡುವಲ್ಲಿ ಯಶಸ್ವಿಯಾಗಿದ್ದಾರೆ.
ಸುತ್ತಮುತ್ತಲ ಗ್ರಾಮಗಳ ಜನ ವಸತಿ ಪ್ರದೇಶಗಳಲ್ಲಿ ಹಾವುಗಳು ಕಂಡು ಬಂದಲ್ಲಿ ತಕ್ಷಣ ಆಗಮಿಸಿ ಹಾವುಗಳನ್ನು ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಬಿಡುವ ಮೂಲಕ ಹಾವುಗಳ ರಕ್ಷಣೆ ಜೊತೆಗೆ ಜನ, ಜಾನುವಾರಗಳ ಪ್ರಾಣ ರಕ್ಷಣೆಯಲ್ಲೂ ಅರಣ್ ನಿರತರಾಗಿದ್ದು, ಹೆಚ್ಚಿನ ಮಾಹಿತಿಗೆ ಮೊ: ೮೧೯೭೭೦೦೧೬೧ ಸಂಖ್ಯೆಗೆ ಕರೆ ಮಾಡಬಹುದಾಗಿದೆ.


Friday, May 6, 2022

ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾವಳಿ : ಬಿ.ವೈ.ಕೆ ತಂಡಕ್ಕೆ ದ್ವಿತೀಯ ಬಹುಮಾನ

ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಭದ್ರಾವತಿ ಹಳೇನಗರದ ಬಿ.ವೈ.ಕೆ ಕಬಡ್ಡಿ ತಂಡ ಭಾಗವಹಿಸಿ ದ್ವಿತೀಯ ಬಹುಮಾನ ಪಡೆದುಕೊಂಡಿದೆ.
    ಭದ್ರಾವತಿ, ಮೇ. ೬: ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಹಳೇನಗರದ ಬಿ.ವೈ.ಕೆ ಕಬಡ್ಡಿ ತಂಡ ಭಾಗವಹಿಸಿ ದ್ವಿತೀಯ ಬಹುಮಾನ ಪಡೆದುಕೊಂಡಿದೆ.
    ಡಾ.ಬಿ.ಆರ್ ಅಂಬೇಡ್ಕರ್ ಯುವಕರ ಸಂಘ ಹಾಗು ಆರ್‌ಎಸ್‌ಎನ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ನ್ಯೂಟೌನ್ ಆಂಜನೇಯ ಅಗ್ರಹಾರದ ಡಾ.ಬಿ.ಆರ್ ಅಂಬೇಡ್ಕರ್ ಸಮುದಾಯ ಭವನ ಸಮೀಪದ ಮೈದಾನದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ಬಿ.ವೈ.ಕೆ ಕಬಡ್ಡಿ ಭಾಗವಹಿಸಿ ದ್ವಿತೀಯ ಬಹುಮಾನ ಪಡೆದುಕೊಂಡಿದೆ.
    ತಂಡದ ತರಬೇತಿದಾರ ಕಬಡ್ಡಿ ಕೇಸರಿ ಪ್ರಸಸ್ತಿ ವಿಜೇತ ಎಚ್.ಆರ್ ರಂಗನಾಥ್ ವಿಜೇತ ತಂಡವನ್ನು ಅಭಿನಂದಿಸಿದ್ದಾರೆ.

ಅವೈಜ್ಞಾನಿಕವಾಗಿ ನಗರಸಭೆ ಆಸ್ತಿ ತೆರಿಗೆ ಹೆಚ್ಚಳ : ಮೇ.೯ರಂದು ನಗರಸಭೆ ಮುಂಭಾಗ ಧರಣಿ ಸತ್ಯಾಗ್ರಹ

ಟಿ.ಜಿ ಬಸವರಾಜಯ್ಯ
    ಭದ್ರಾವತಿ, ಮೇ. ೬: ನಗರಸಭೆ ಆಸ್ತಿ ತೆರಿಗೆಯನ್ನು ಅವೈಜ್ಞಾನಿಕವಾಗಿ ಹೆಚ್ಚು ಮಾಡಿರುವುದನ್ನು ವಿರೋಧಿಸಿ ಮನೆ ಮಾಲೀಕರ ಸಂಘದ ವತಿಯಿಂದ ಮೇ.೯ರ ಸೋಮವಾರ ಬೆಳಿಗ್ಗೆ ೧೧ ಗಂಟೆಗೆ ನಗರಸಭೆ ಮುಂಭಾಗ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.
    ವಿಐಎಸ್‌ಎಲ್ ಮತ್ತು ಎಂಪಿಎಂ ಕಾರ್ಖಾನೆಗಳಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿರುವ ನೌಕರರು ನಗರಸಭೆ ವ್ಯಾಪ್ತಿಯಲ್ಲಿ ಹೆಚ್ಚಾಗಿ ವಾಸಿಸುತ್ತಿದ್ದು, ನಿವೃತ್ತಿ ನಂತರ ಬಂದ ಹಣದಲ್ಲಿ ಕಷ್ಟಪಟ್ಟು ಸ್ವಂತ ಮನೆ ಅಥವಾ ನಿವೇಶನ ಹೊಂದಿರುತ್ತಾರೆ. ಈ ನಡುವೆ ಜೀವನ ನಿರ್ವಹಣೆ ಕಷ್ಟಕರವಾಗಿರುವಾಗ ನಗರಸಭೆ ಆಡಳಿತ ೨೦೨೦-೨೧ನೇ ಸಾಲಿನಲ್ಲಿ ಶೇ.೧೫ರಷ್ಟು, ೨೦೨೧-೨೨ನೇ ಸಾಲಿನಲ್ಲಿ ಶೇ.೩೦ರಷ್ಟು, ಇದೀಗ ಪ್ರಸಕ್ತ ಸಾಲಿನಲ್ಲಿ ಶೇ.೫ ರಷ್ಟು ಆಸ್ತಿ ತೆರಿಗೆ ಹೆಚ್ಚಳ ಮಾಡಿದ್ದು, ಅಲ್ಲದೆ ಖಾಲಿ ನಿವೇಶನಗಳ ತೆರಿಗೆಯನ್ನು ಶೇ.೬೦೦ರಷ್ಟು ಹೆಚ್ಚಳ ಮಾಡಲಾಗಿದೆ. ಮುಂದಿನ ವರ್ಷ ಸಹ ನೋಂದಾಣಿ ಶುಲ್ಕ ಮೌಲ್ಯ ಹೆಚ್ಚಾಗುವುದರಿಂದ ಪುನಃ ಶೇ.೫೦ರಷ್ಟು ತೆರಿಗೆ ಹೆಚ್ಚಾಗುವ ಸಾಧ್ಯತೆ ಇದೆ.
    ತೆರಿಗೆ ಪಾವತಿಸಲು ವಿಳಂಬವಾದಲ್ಲಿ ಶೇ.೨೪ರಷ್ಟು ದಂಡ ವಿಧಿಸಲಾಗುತ್ತಿದೆ. ದಂಡದ ಹಣದಲ್ಲಿಯೇ ನಗರಸಭೆ ನಡೆಸುವ ಲಕ್ಷಣಗಳು ಕಂಡು ಬರುತ್ತಿವೆ. ತೆರಿಗೆ ಶುಲ್ಕ ಕಟ್ಟಲು ಆಸ್ತಿಯನ್ನೇ ಮಾರಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಅಲ್ಲದೆ ಘನ ತ್ಯಾಜ್ಯ ವಿಲೇವಾರಿ ಶುಲ್ಕ ಸಹ ಬೇಕಾಬಿಟ್ಟಿಯಾಗಿ ವಸೂಲಾತಿ ಮಾಡಲಾಗುತ್ತಿದೆ. ಈ ಸಂಬಂಧ ಹಲವಾರು ಬಾರಿ ನಗರಸಭೆ ಆಡಳಿತಕ್ಕೆ ಮನವಿ ಮಾಡಲಾಗಿದೆ. ಆದರೂ ಸಹ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ.    
    ಸರ್ಕಾರದ ಆದೇಶದಂತೆ ಆಸ್ತಿ ತೆರಿಗೆ ಹೆಚ್ಚಳ ಮಾಡಿರುವುದಾಗಿ ನಗರಸಭೆ ಅಧಿಕಾರಿಗಳು ಹೇಳುತ್ತಿದ್ದು, ಸರ್ಕಾರ ಇಲ್ಲಿನ ನಿವಾಸಿಗಳ ಬದುಕು ಅರ್ಥ ಮಾಡಿಕೊಳ್ಳಬೇಕು. ತೆರಿಗೆ ಕಡಿಮೆ ಮಾಡಬೇಕೆಂಬ ಬೇಡಿಕೆಯೊಂದಿಗೆ ಹೋರಾಟ ನಡೆಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಹೋರಾಟ ಯಶಸ್ವಿಗೊಳಿಸುವಂತೆ ಸಂಘದ ಅಧ್ಯಕ್ಷ ಟಿ.ಜಿ ಬಸವರಾಜಯ್ಯ ಕೋರಿದ್ದಾರೆ.

ಎಂಪಿಎಂ ಕಬ್ಬು ಬೆಳೆಗಾರರಿಗೆ ಹೆಚ್ಚುವರಿ ಹಣ ಪಾವತಿಸುವುದಾಗಿ ಜಿಲ್ಲಾಧಿಕಾರಿ ಭರವಸೆ

ಶಿವಮೊಗ್ಗ ಜಿಲ್ಲಾ ಕಬ್ಬು ಬೆಳೆಗಾರರ ಸಂಘದ ತಾಲೂಕು ಘಟಕ ಕೃತಜ್ಞತೆ


    ಭದ್ರಾವತಿ, ಮೇ. ೬: ನಗರದ ಮೈಸೂರು ಕಾಗದ ಕಾರ್ಖಾನೆಯಲ್ಲಿ ಉತ್ಪಾದನೆ ಸ್ಥಗಿತಗೊಂಡು ಸುಮಾರು ೭ ವರ್ಷಗಳು ಕಳೆದಿವೆ. ಈ ನಡುವೆ ೧೨ ವರ್ಷಗಳ ನಿರಂತರ ಹೋರಾಟದ ಪರಿಣಾಮ ಕಾರ್ಖಾನೆಗೆ ಕಬ್ಬು ಪೂರೈಸಿರುವ ರೈತರಿಗೆ ಬಾಕಿ ಹಣ ನೀಡುವುದಾಗಿ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರಾಗಿರುವ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಭರವಸೆ ನೀಡಿರುತ್ತಾರೆಂದು ಶಿವಮೊಗ್ಗ ಜಿಲ್ಲಾ ಕಬ್ಬು ಬೆಳೆಗಾರರ ಸಂಘದ ತಾಲೂಕು ಘಟಕ ತಿಳಿಸಿದೆ.
    ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘದ ಅಧ್ಯಕ್ಷ ಕೆ. ಈರಣ್ಣ, ಪ್ರಧಾನ ಕಾರ್ಯದರ್ಶಿ ಸಣ್ಣಯ್ಯ ಮತ್ತು ರಾಜ್ಯ ಜಿಲ್ಲಾ ಸಂಚಾಲಕ ಎನ್.ಎಚ್ ದೇವಕುಮಾರ್‌ರವರು, ೨೦೧೦-೧೧ನೇ ಸಾಲಿನಲ್ಲಿ ಎಂಪಿಎಂ ಸಕ್ಕರೆ ಕಾರ್ಖಾನೆಗೆ ರೈತರು ಕಬ್ಬು ಸರಬರಾಜು ಮಾಡಿದ್ದು, ಪ್ರತಿ ಟನ್‌ಗೆ ೧,೮೦೦ ರು. ಬೆಲೆ ನಿಗದಿ ಮಾಡಿ ಹಣ ಪಾವತಿಸಲಾಗಿತ್ತು. ಅಂದಿನ ಮುಖ್ಯಮಂತ್ರಿಯಾಗಿದ್ದ ಡಿ.ವಿ ಸದಾನಂದಗೌಡರವರು ಹೆಚ್ಚುವರಿಯಾಗಿ ಪ್ರತಿ ಟನ್ ಕಬ್ಬಿಗೆ ೧೦೦ ರು. ನೀಡುವುದಾಗಿ ಆದೇಶಿಸಿದ್ದರು. ಆದರೆ ಕಾರ್ಖಾನೆ ವತಿಯಿಂದ ೧೦೦ ರು. ಪಾವತಿಸದ ಹಿನ್ನಲೆಯಲ್ಲಿ ಸಂಘದ ವತಿಯಿಂದ ನಿರಂತರವಾಗಿ ಹೋರಾಟ ನಡೆಸಿಕೊಂಡು ಬರಲಾಗುತ್ತಿತ್ತು. ಬಾಕಿ ಹಣ ೨.೯೪ ಕೋ. ರು. ನೀಡುವಂತೆ ಹಲವಾರು ಮುಖ್ಯಮಂತ್ರಿಗಳಿಗೆ, ಸಂಬಂಧಪಟ್ಟ ಸಚಿವರಿಗೆ ಮನವಿ ಸಲ್ಲಿಸಲಾಗಿತ್ತು. ಆದರೆ ಯಾವುದೇ ಪ್ರಯೋಜನವಾಗಿರಲಿಲ್ಲ.
    ಡಾ. ಸೆಲ್ವಮಣಿಯವರು ಜಿಲ್ಲಾಧಿಕಾರಿಯಾಗಿ ಹಾಗು ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ನಂತರ ಸಂಘದ ವತಿಯಿಂದ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಲಾಗಿತ್ತು. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಕಬ್ಬು ಬೆಳೆಗಾರರ ಹಿತ ಕಾಪಾಡುವುದಾಗಿ ತಿಳಿಸಿ ಕಡಿಮೆ ಬಾಕಿ ಇರುವ ರೈತರಿಗೆ ಹೆಚ್ಚುವರಿ ೧೦೦ ರು. ಮೊದಲು ಪಾವತಿಸಿ ನಂತರ ಹೆಚ್ಚು ಹಣ ಬಾಕಿ ಇರುವವರಿಗೆ ನೀಡಲಾಗುವುದು ಎಂದು ಭರವಸೆ ನೀಡಿರುತ್ತಾರೆ. ಈ ಹಿನ್ನಲೆಯಲ್ಲಿ ಕಬ್ಬು ಬೆಳೆಗಾರರ ಪರವಾಗಿ ಜಿಲ್ಲಾಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.  

ನಗರದ ವಿವಿಧೆಡೆ ಆದಿ ಶಂಕರಚಾರ್ಯರ ಜಯಂತ್ಯೋತ್ಸವ

ಭದ್ರಾವತಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಕಚೇರಿ ಸಭಾಂಗಣದಲ್ಲಿ ತಹಸೀಲ್ದಾರ್ ಆರ್. ಪ್ರದೀಪ್ ನೇತೃತ್ವದಲ್ಲಿ ಶಂಕರಚಾರ್ಯರ ಜಯಂತ್ಯೋತ್ಸವ ಸರಳವಾಗಿ ನಡೆಯಿತು.
    ಭದ್ರಾವತಿ, ಮೇ. ೬: ತಾಲೂಕು ಕಚೇರಿ ಸೇರಿದಂತೆ ವಿವಿಧೆಡೆ ಶುಕ್ರವಾರ ಆದಿ ಶಂಕರಚಾರ್ಯರ ಜಯಂತ್ಯೋತ್ಸವ ನಡೆಯಿತು.
    ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಕಚೇರಿ ಸಭಾಂಗಣದಲ್ಲಿ ತಹಸೀಲ್ದಾರ್ ಆರ್. ಪ್ರದೀಪ್ ನೇತೃತ್ವದಲ್ಲಿ ಜಯಂತ್ಯೋತ್ಸವ ಸರಳವಾಗಿ ನಡೆಯಿತು.
    ಆದಿ ಶಂಕರಚಾರ್ಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ತಾಲೂಕು ಬ್ರಾಹ್ಮಣ ಸಮಾಜದ ಗೌರವಾಧ್ಯಕ್ಷ ಕೃಷ್ಣ ಸೋಮಯಾಜಿಯವರು ಉಪನ್ಯಾಸ ನಡೆಸಿಕೊಟ್ಟರು.
    ಉಪತಹಸೀಲ್ದಾರ್ ಮಂಜಾನಾಯ್ಕ, ಶಿರಸ್ತೇದಾರ್ ರಾಧಾಕೃಷ್ಣ ಭಟ್, ಬ್ರಾಹ್ಮಣ ಸಮಾಜದ ಅಧ್ಯಕ್ಷ ಎಂ.ಎಸ್ ಜನಾರ್ಧನ ಅಯ್ಯಂಗಾರ್, ನರಸಿಂಹಚಾರ್, ರಮಾಕಾಂತ್, ಅರ್ಚಕರಾದ ಮುರಳಿ ಭಟ್, ನಾಗರಾಜ್ ಭಟ್ ಹಾಗು ತಾಲೂಕು ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
      ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ  ಜಯಂತ್ಯೋತ್ಸವ :
    ಹಳೇನಗರದ ಶ್ರೀ ರಾಮೇಶ್ವರ ಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಆದಿ ಶಂಕರಚಾರ್ಯರ ಜಯಂತಿ ಅಂಗವಾಗಿ ಉತ್ಸವ ಮೆರವಣಿಗೆ ನಡೆಸಲಾಯಿತು.
    ಜಯಂತ್ಯೋತ್ಸವ ಅಂಗವಾಗಿ ಪ್ರತಿ ವರ್ಷದಂತೆ ಈ ಬಾರಿ ಸಹ ಶತರುದ್ರಾಭಿಷೇಕ ಹಾಗು ಪುರಾಣ ಪ್ರಸಿದ್ದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದವರೆಗೆ ಉತ್ಸವ ಮೆರವಣಿಗೆ ಜರುಗಿತು. ನಂತರ ಮಹಾಮಂಗಳಾರತಿ ತೀರ್ಥಪ್ರಸಾದ ನೆರವೇರಿತು.
    ಶ್ರೀ ರಾಮೇಶ್ವರ ಸುಬ್ರಮಣ್ಯ ಸ್ವಾಮಿ ದೇವಸ್ಥಾನದ ಅಧ್ಯಕ್ಷ ಆನಂದ್ ರಾವ್, ರಾಮರಾವ್, ಮಧು, ನಾಗರಾಜ್, ಮಂಜುನಾಥ್‌ರಾವ್, ಸುರೇಶ್‌ರಾವ್, ಶೇಷಾಚಲ, ಕೃಷ್ಣಮೂರ್ತಿ, ಗೋಪಾಲ್ ಜೋಯಿಸ್, ರಮಾಕಾಂತ್, ಪ್ರಧಾನ ಅರ್ಚಕ ಚಂದನ್ ಜೋಯ್ಸ್, ರಂಗನಾಥ್, ಲಲಿತಾ ಮಹಿಳಾ ಮಂಡಳಿಯ ಮಹಿಳೆಯರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
    ಸಿದ್ದರೂಢನಗರದ ಶೃಂಗೇರಿ ಶಂಕರ ಮಠದಲ್ಲಿ ಧರ್ಮಾಧಿಕಾರಿ ಕೆ.ಆರ್ ಸುಬ್ಬರಾವ್ ನೇತೃತ್ವದಲ್ಲಿ, ನ್ಯೂಟೌನ್ ದತ್ತಮಂದಿರದಲ್ಲಿ ಹಾಗು ಜನ್ನಾಪರ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ಕೃಷ್ಣಮೂರ್ತಿ ಸೋಮಯಾಜಿಯವರ ನೇತೃತ್ವದಲ್ಲಿ ಶ್ರೀ ಆದಿ ಶಂಕರಚಾರ್ಯರ ಜಯಂತ್ಯೋತ್ಸವ ನಡೆಯಿತು.


ಭದ್ರಾವತಿ ಹಳೇನಗರದ ಶ್ರೀ ರಾಮೇಶ್ವರ ಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಆದಿ ಶಂಕರಚಾರ್ಯರ ಜಯಂತಿ ಅಂಗವಾಗಿ ಉತ್ಸವ ಮೆರವಣಿಗೆ ನಡೆಸಲಾಯಿತು.