Wednesday, May 11, 2022

೩ ಮಂದಿ ದರೋಡೆಕೋರರ ಬಂಧನ : ಪೇಪರ್‌ಟೌನ್ ಪೊಲೀಸರ ಯಶಸ್ವಿ ಕಾರ್ಯಾಚರಣೆ

ರಾತ್ರಿ ವೇಳೆ ಆಟೋ ಅಡ್ಡಗಟ್ಟಿ ನಗದು ಹಣ ದರೋಡೆ ಮಾಡಿದ್ದ ೩ ಮಂದಿ ದರೋಡೆಕೋರರನ್ನು ಬಂಧಿಸುವಲ್ಲಿ ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣೆ ಸಿಬ್ಬಂದಿಗಳು ಯಶಸ್ವಿಯಾಗಿರುವುದು.
    ಭದ್ರಾವತಿ, ಮೇ. ೧೧: ರಾತ್ರಿ ವೇಳೆ ಆಟೋ ಅಡ್ಡಗಟ್ಟಿ ನಗದು ಹಣ ದರೋಡೆ ಮಾಡಿದ್ದ ೩ ಮಂದಿ ದರೋಡೆಕೋರರನ್ನು ಬಂಧಿಸುವಲ್ಲಿ ಪೇಪರ್ ಟೌನ್ ಪೊಲೀಸ್ ಠಾಣೆ ಸಿಬ್ಬಂದಿಗಳು ಯಶಸ್ವಿಯಾಗಿರುವ ಘಟನೆ ನಡೆದಿದೆ.
    ತಾಲೂಕಿನ ಕೆಂಚೇನಹಳ್ಳಿ ನಿವಾಸಿಗಳಾದ ಬಸವರಾಜು ಅಲಿಯಾಸ್ ಟಮಟೋ(೨೪), ಪವನ ಅಲಿಯಾಸ್ ಕಣ್ಣು(೨೬) ಹಾಗು ಶಿವಮೊಗ್ಗ ಯರಗನಾಳ್ ಗ್ರಾಮದ ನಿವಾಸಿ ಜೆ. ಭರತ(೨೪) ಬಂಧಿತ ದರೋಡೆಕೋರರಾಗಿದ್ದಾರೆ.
    ದರೋಡೆಕೋರರಿಂದ ೩೭ ಸಾವಿರ ರು. ನಗದು ಹಾಗು ಕೃತ್ಯಕ್ಕೆ ಬಳಸಿದ್ದ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
    ಘಟನೆ ವಿವರ:
    ತರೀಕೆರೆಯ ಗೋಪಾಲ ಕಾಲೋನಿ ನಿವಾಸಿ ಎಚ್.ಎಸ್ ಜಯೇಂದ್ರ ಎಂಬುವರು ತಮ್ಮ ಹೊಸ ಮನೆಯ ಗೃಹ ಪ್ರವೇಶ ಕಾರ್ಯಕ್ಕೆ ಸ್ನೇಹಿತರಿಂದ ೧ ಲಕ್ಷ ರು. ನಗದು ಹಣ ಪಡೆದುಕೊಂಡು ತಮ್ಮ ಊರಿನ ನಿವಾಸಿ ತಮ್ಮಯ್ಯ ಅವರೊಂದಿಗೆ ಮೇ.೯ರಂದು ರಾತ್ರಿ ಸುಮಾರು ೧೧.೩೦ರ ಸಮಯದಲ್ಲಿ ಲಗೇಜ್ ಆಟೋದಲ್ಲಿ ತಾಲೂಕಿನ ಬಾರಂದೂರು ಗ್ರಾಮದ  ಪೆಟ್ರೋಲ್ ಬಂಕ್‌ನಲ್ಲಿ ಡಿಸೇಲ್ ಹಾಕಿಸಿಕೊಂಡು ಊರಿಗೆ ಹಿಂದಿರುವಾಗ ಕೃಷಿ ತರಬೇತಿ ಕೇಂದ್ರದ ಮುಂಭಾಗ ಈ ಮೂವರು ದರೋಡೆಕೋರರು ಅಡ್ಡಗಟ್ಟಿ ಸುಮಾರು ೫೦ ಸಾವಿರ ರು. ನಗದು ಹಣ ಕಿತ್ತುಕೊಂಡು ಪರಾರಿಯಾಗಿದ್ದರು. ಈ ಸಂಬಂಧ ಪೇಪರ್‌ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
    ಈ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಬಿ.ಎಂ ಲಕ್ಷ್ಮೀ ಪ್ರಸಾದ್, ಹೆಚ್ಚುವರಿ ರಕ್ಷಣಾಧಿಕಾರಿ ವಿಕ್ರಮ್ ಅಮಟೆ ಹಾಗು ಪೊಲೀಸ್ ಉಪಾಧೀಕ್ಷಕ ಜೀತೆಂದ್ರಕುಮಾರ್ ದಯಾಮಾ ಮಾರ್ಗದರ್ಶನದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಈ.ಓ ಮಂಜುನಾಥ್ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು.
    ಕಾರ್ಯಾಚರಣೆಯಲ್ಲಿ ಠಾಣಾಧಿಕಾರಿ ಶಿಲ್ಪಾ ನಾಯನೇಗಲಿ, ಸಿಬ್ಬಂದಿಗಳಾದ ಆರ್. ರತ್ನಾಕರ್, ಅರುಣ್, ಚಿನ್ನನಾಯ್ಕ, ಕಾಳಾನಾಯ್ಕ, ಹನಮಂತ ಆವಟಿ ಮತ್ತು ರಾಜೇಶ್ ಪಾಲ್ಗೊಂಡಿದ್ದರು.

ಸಿದ್ದರೂಢನಗರದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ಜರುಗಿದ ಶ್ರೀನಿವಾಸ ಕಲ್ಯಾಣೋತ್ಸವ

ಭದ್ರಾವತಿ ಸಿದ್ಧಾರೂಢ ನಗರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಸಮೀಪದಲ್ಲಿರುವ ಶ್ರೀ ವೆಂಕಟೇಶ್ವರಸ್ವಾಮಿ ದೇವಾಲಯದಲ್ಲಿ ಬುಧವಾರ ಶ್ರೀನಿವಾಸ ಕಲ್ಯಾಣೋತ್ಸವ ವಿಜೃಂಭಣೆಯಿಂದ ಜರುಗಿತು.  ಶಾಸಕ ಬಿ.ಕೆ ಸಂಗಮೇಶ್ವರ್ ಪಾಲ್ಗೊಂಡು ಸ್ವಾಮಿಯ ಕೃಪೆಗೆ ಪಾತ್ರರಾದರು.
    ಭದ್ರಾವತಿ, ಮೇ. ೧೧: ಸಿದ್ಧಾರೂಢ ನಗರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಸಮೀಪದಲ್ಲಿರುವ ಶ್ರೀ ವೆಂಕಟೇಶ್ವರಸ್ವಾಮಿ ದೇವಾಲಯದಲ್ಲಿ ಬುಧವಾರ ಶ್ರೀನಿವಾಸ ಕಲ್ಯಾಣೋತ್ಸವ ವಿಜೃಂಭಣೆಯಿಂದ ಜರುಗಿತು.  
    ಶ್ರೀ ಶ್ರೀನಿವಾಸ ಕಲ್ಯಾಣ ಸಮಿತಿ ಹಾಗೂ ಶ್ರೀ ಸಂಕರ್ಷಣ ಧರ್ಮ ಸಂಸ್ಥೆ ವತಿಯಿಂದ ಆಯೋಜಿಸಲಾಗಿದ್ದ ಕಲ್ಯಾಣೋತ್ಸವದ ಅಂಗವಾಗಿ ಬೆಳಿಗ್ಗೆ ಶ್ರೀ ವೆಂಕಟೇಶ್ವರಸ್ವಾಮಿಗೆ ಅಭಿಷೇಕ ಹಾಗೂ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು.
    ದಾವಣಗೆರೆಯ ಪಂಡಿತ ವೆಂಕಟೇಶಾಚಾರ್ಯ ಮಣ್ಣೂರು ಅವರಿಂದ ಶ್ರೀನಿವಾಸ ಸ್ವಾಮಿಯ ಕುರಿತು ಉಪನ್ಯಾಸ ನಡೆಸಿಕೊಟ್ಟರು. ನಂತರ ಸ್ವಾಮಿಯ ಕಲ್ಯಾಣೋತ್ಸವ ನಡೆಯಿತು. ಮಧ್ಯಾಹ್ನ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಜರುಗಿತು.
    ಶಾಸಕ ಬಿ.ಕೆ.ಸಂಗಮೆಶ್ವರ್ ಸೇರಿದಂತೆ ಸಿದ್ದರೂಢನಗರ, ಕನಕನಗರ, ಹಳೇನಗರ  ಸುತ್ತಮುತ್ತಲಿನ ಪ್ರದೇಶಗಳ ಭಕ್ತರು ಪಾಲ್ಗೊಂಡು ಸ್ವಾಮಿಯ ಕೃಪೆಗೆ ಪಾತ್ರರಾದರು.
    ಪಂಡಿತ ಗೊಪಾಲಾಚಾರ್, ಶ್ರೀನಿವಾಸಾಚಾರ್, ಶೇಷಗಿರಿಆಚಾರ್, ಅರ್ಚಕರಾದ ಜಗನ್ನಾಥ, ವೆಂಕಟೇಶ್, ಸಮಿತಿ ಅಧ್ಯಕ್ಷ ಕಲ್ಲಾಪುರಾಮಚಂದ್ರ, ಜಯತೀರ್ಥ, ರಾಘವೇಂದ್ರ, ವಾಸುದೇವಮೂರ್ತಿ, ರಮಾಕಾಂತ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ನಗರ, ಗ್ರಾಮೀಣ ಭಾಗದಲ್ಲಿ ಆರೋಗ್ಯ ಕೇಂದ್ರಗಳನ್ನು ತೆರೆದು ಬಡ ಜನರ ಆರೋಗ್ಯ ರಕ್ಷಿಸಿ

ಕರ್ನಾಟಕ ಜನತಾದಳ(ಸಂಯುಕ್ತ) ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ ಮನವಿ


ದೇಶದ ಎಲ್ಲೆಡೆ ಗ್ರಾಮೀಣ ಭಾಗದಲ್ಲಿ ಕನಿಷ್ಠ ಪ್ರತಿ ಎರಡು ಗ್ರಾಮ ಪಂಚಾಯತಿಗೆ ಒಂದರಂತೆ ಪ್ರಾಥಮಿಕ ಆರೋಗ್ಯ ಕ್ಷೇಮ ಕೇಂದ್ರ  ಹಾಗು ನಗರಸಭೆ ವ್ಯಾಪ್ತಿಯಲ್ಲಿ ಕನಿಷ್ಠ ಪ್ರತಿ ಎರಡು ವಾರ್ಡ್‌ಗಳಿಗೆ ಒಂದರಂತೆ ನಗರ ಆರೋಗ್ಯ ಪ್ರಾಥಮಿಕ ಕೇಂದ್ರ ತೆರೆಯುವ ಮೂಲಕ ಬಡ ಜನರ ಆರೋಗ್ಯ ಸುಧಾರಣೆಗೆ ಸರ್ಕಾರ ಹೆಚ್ಚಿನ ಗಮನ ನೀಡಬೇಕೆಂದು ಕರ್ನಾಟಕ ಜನತಾದಳ(ಸಂಯುಕ್ತ) ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.
    ಭದ್ರಾವತಿ, ಮೇ. ೧೧: ದೇಶದ ಎಲ್ಲೆಡೆ ಗ್ರಾಮೀಣ ಭಾಗದಲ್ಲಿ ಕನಿಷ್ಠ ಪ್ರತಿ ಎರಡು ಗ್ರಾಮ ಪಂಚಾಯತಿಗೆ ಒಂದರಂತೆ ಪ್ರಾಥಮಿಕ ಆರೋಗ್ಯ ಕ್ಷೇಮ ಕೇಂದ್ರ  ಹಾಗು ನಗರಸಭೆ ವ್ಯಾಪ್ತಿಯಲ್ಲಿ ಕನಿಷ್ಠ ಪ್ರತಿ ಎರಡು ವಾರ್ಡ್‌ಗಳಿಗೆ ಒಂದರಂತೆ ನಗರ ಆರೋಗ್ಯ ಪ್ರಾಥಮಿಕ ಕೇಂದ್ರ ತೆರೆಯುವ ಮೂಲಕ ಬಡ ಜನರ ಆರೋಗ್ಯ ಸುಧಾರಣೆಗೆ ಸರ್ಕಾರ ಹೆಚ್ಚಿನ ಗಮನ ನೀಡಬೇಕೆಂದು ಕರ್ನಾಟಕ ಜನತಾದಳ(ಸಂಯುಕ್ತ) ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.
    ಇತ್ತೀಚಿನ ದಿನಗಳಲ್ಲಿ ನಗರ ಹಾಗೂ ಗ್ರಾಮೀಣ ಭಾಗದ ಜನರು  ಹೆಚ್ಚು ಅನಾರೋಗ್ಯಗಳಿಗೆ ತುತ್ತಾಗುತ್ತಿದ್ದು, ಅದರಲ್ಲೂ ಚಿಕ್ಕ ವಯಸ್ಸಿನಲ್ಲಿಯೇ ಹೃದಯಾಘಾತ, ಕಿಡ್ನಿ ವೈಫಲ್ಯ, ಬಾಯಿ, ಗಂಟಲು ಹಾಗು ಗರ್ಭಕೋಶದ ಕ್ಯಾನ್ಸರ್ ಸೇರಿದಂತೆ ಇನ್ನಿತರ ಮಾರಾಣಾಂತಿಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರುಗಳ ಕೊರತೆ ಸೇರಿದಂತೆ ಇನ್ನಿತರ ಕಾರಣಗಳಿಂದ ಚಿಕಿತ್ಸೆಯಿಂದ ವಂಚಿತರಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚಿನ ಹಣ ನೀಡಿ ಚಿಕಿತ್ಸೆ ಪಡೆಯಬೇಕಾದ ಅನಿವಾರ್ಯತೆ ಉಂಟಾಗುತ್ತಿದೆ ಎಂದು ಆರೋಪಿಸಿದ್ದಾರೆ.
    ಸರ್ಕಾರ ಗ್ರಾಮೀಣ ಭಾಗದಲ್ಲಿ ಕನಿಷ್ಠ ಪ್ರತಿ ಎರಡು ಗ್ರಾಮ ಪಂಚಾಯತಿಗೆ ಒಂದರಂತೆ ಪ್ರಾಥಮಿಕ ಆರೋಗ್ಯ ಕ್ಷೇಮ ಕೇಂದ್ರ  ಹಾಗು ನಗರಸಭೆ ವ್ಯಾಪ್ತಿಯಲ್ಲಿ ಕನಿಷ್ಠ ಪ್ರತಿ ಎರಡು ವಾರ್ಡ್‌ಗಳಿಗೆ ಒಂದರಂತೆ ನಗರ ಆರೋಗ್ಯ ಪ್ರಾಥಮಿಕ ಕೇಂದ್ರ ತೆರೆಯುವ ಮೂಲಕ ತಜ್ಞ ವೈದ್ಯರು, ಸಿಬ್ಬಂದಿಗಳನ್ನು ನೇಮಕಗೊಳಿಸಿ ಅಗತ್ಯವಿರುವ ಸೌಲಭ್ಯಗಳನ್ನು ಕಲ್ಪಿಸಿಕೊಡುವಂತೆ ಹಾಗು ಹೆಚ್ಚು ಹೆಚ್ಚು ಆರೋಗ್ಯ ಶಿಬಿರಗಳನ್ನು ಆಯೋಜಿಸಿ ಆರೋಗ್ಯ ಕುರಿತು ಹೆಚ್ಚಿನ ಜಾಗೃತಿ ಮೂಡಿಸುವಂತೆ ಮನವಿ ಮಾಡಿದ್ದಾರೆ.
    ರೈತ ಮುಖಂಡ ಕಾಳಿಂಗನಹಳ್ಳಿ ಶೇಖರ್, ಕರುನಾಡು ಹಿತರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ವೈ. ಶಶಿಕುಮಾರ್, ಹಿರಿಯ ಮುಖಂಡ ನಾಗಾನಾಯ್ಕ, ಸಾಮಾಜಿಕ ಹೋರಾಟಗಾರ ಉಕ್ಕುಂದ ಶಿವಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ತೋಟಗಾರಿಕೆ ಬೆಳಗಳಲ್ಲಿ ಪ್ರಗತಿ ಸಾಧಿಸಿ : ಬಿ.ಕೆ ಸಂಗಮೇಶ್ವರ್

ಭದ್ರಾವತಿ ತರೀಕೆರೆ ರಸ್ತೆಯಲ್ಲಿರುವ ತೋಟಗಾರಿಕೆ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಹನಿ ನೀರಾವರಿ, ರಸಾವರಿ ಹಾಗು ನೀರಿನ ಸಂರಕ್ಷಣೆ ಮತ್ತು ತೋಟಗಾರಿಕೆ ಬೆಳೆಗಳ ಕುರಿತು ಒಂದು ದಿನದ ಕಾರ್ಯಾಗಾರದಲ್ಲಿ ರೈತರಿಗೆ ತರಕಾರಿ ಬೀಜಗಳ ಕಿಟ್ ಹಾಗೂ ಪರಿಕರಗಳನ್ನು ಶಾಸಕ ಬಿ.ಕೆ ಸಂಗಮೇಶ್ವರ್ ವಿತರಿಸಿದರು.
    ಭದ್ರಾವತಿ, ಮೇ. ೧೧: ತೋಟಗಾರಿಕೆ ಬೆಳೆಗಳಿಗೆ ಸರ್ಕಾರದಿಂದ ಲಭ್ಯವಿರುವ ಸೌಲಭ್ಯಗಳನ್ನು ಬಳಸಿಕೊಂಡು ಹಾಗೂ ಸೂಕ್ತ ತರಬೇತಿಯೊಂದಿಗೆ ರೈತರು ಪ್ರಗತಿ ಸಾಧಿಸಬೇಕೆಂದು ಶಾಸಕ ಬಿ.ಕೆ ಸಂಗಮೇಶ್ವರ್ ಕರೆ ನೀಡಿದರು.
    ಅವರು ಬುಧವಾರ ನಗರದ ತರೀಕೆರೆ ರಸ್ತೆಯಲ್ಲಿರುವ ತೋಟಗಾರಿಕೆ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಹನಿ ನೀರಾವರಿ, ರಸಾವರಿ ಹಾಗು ನೀರಿನ ಸಂರಕ್ಷಣೆ ಮತ್ತು ತೋಟಗಾರಿಕೆ ಬೆಳೆಗಳ ಕುರಿತು ಒಂದು ದಿನದ ಕಾರ್ಯಾಗಾರದಲ್ಲಿ ರೈತರಿಗೆ ತರಕಾರಿ ಬೀಜಗಳ ಕಿಟ್ ಹಾಗೂ ಪರಿಕರಗಳನ್ನು ವಿತರಿಸಿ ಮಾತನಾಡಿದರು.
    ಅಡಕೆ ಬೆಳೆ ಬೆಳೆಯಲು ಅನುಸರಿಸಬೇಕಾದ ವೈಜ್ಞಾನಿಕ ಕ್ರಮಗಳು, ಕಂಡು ಬರುವ ವಿವಿಧ ಬಗೆಯ ರೋಗಬಾಧೆಗಳು ಹಾಗು ನಿಯಂತ್ರಣಕ್ಕೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ದಾವಣಗೆರೆ ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ ವಿಜ್ಞಾನಿ ಡಾ. ಬಸವನಗೌಡ ಮಾಹಿತಿ ನೀಡಿದರು.
    ತೀರ್ಥಹಳ್ಳಿ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಟಿ. ಸಿದ್ದಲಿಂಗೇಶ್ವರ, ಹನಿ ನೀರಾವರಿ, ರಸಾವರಿ ಹಾಗು ನೀರಿನ ಸಂರಕ್ಷಣೆ ಕುರಿತು ಮಾಹಿತಿ ನೀಡಿದರು.
    ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕ ಜೆ. ಕಾಂತರಾಜ್ ಪ್ರಾಸ್ತಾವಿಕವಾಗಿ ಮಾತನಾಡಿ, ಇಲಾಖೆ ವತಿಯಿಂದ ತಾಲೂಕಿನಲ್ಲಿ ತೋಟಗಾರಿಕೆ ಬೆಳೆಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ರೈತರಿಗೆ ಅನುಕೂಲವಾಗುವಂತೆ ತರಕಾರಿ ಬೀಜಗಳನ್ನು ಹಾಗು ಪರಿಕರಗಳಾದ ಲಘು ಪೋಷಕಾಂಶ ಮತ್ತು ನೀರಿನಲ್ಲಿ ಕರಗುವ ಗೊಬ್ಬರಗಳನ್ನು ವಿತರಿಸಲಾಗುತ್ತಿದೆ. ಅಲ್ಲದೆ ಕಾರ್ಯಾಗಾರದ ಮೂಲಕ ಸಂಪನ್ಮೂಲ ವ್ಯಕ್ತಿಗಳಿಂದ ಅಗತ್ಯ ಮಾಹಿತಿಗಳನ್ನು ನೀಡಲಾಗುತ್ತಿದ್ದು, ಇದರ ಸದ್ಬಳಕೆ ಮಾಡಿಕೊಳ್ಳುವಂತೆ ಮನವಿ ಮಾಡಿದರು.  
    ಕೃಷಿ ಸಹಾಯಕ ನಿರ್ದೇಶಕ ಶಶಿಧರ್ ಉಪಸ್ಥಿತರಿದ್ದರು. ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ಕೆ. ನಂದಿನಿ ನಿರೂಪಿಸಿದರು.


Tuesday, May 10, 2022

ವಿವಿಧ ಮಾಲಿನ್ಯ ತಡೆಗಟ್ಟುವ ಜೊತೆಗೆ ಸ್ವಚ್ಛತೆಯೊಂದಿಗೆ ಸುಂದರ ಪರಿಸರ ನಿರ್ಮಿಸಿ : ನಗರಸಭೆ ಪೌರಾಯುಕ್ತರಿಗೆ ಮನವಿ

ಭದ್ರಾವತಿ ನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಮಾಲಿನ್ಯ ತಡೆಗಟ್ಟುವ ಜೊತೆಗೆ ಸ್ವಚ್ಛತೆಯೊಂದಿಗೆ ಸುಂದರ ಪರಿಸರ ನಿರ್ಮಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಆಗ್ರಹಿಸಿ ಮಂಗಳವಾರ ನಗರಸಭೆ ಪೌರಾಯುಕ್ತ ಕೆ. ಪರಮೇಶ್‌ರವರಿಗೆ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ಮೇ. ೧೦: ನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಮಾಲಿನ್ಯ ತಡೆಗಟ್ಟುವ ಜೊತೆಗೆ ಸ್ವಚ್ಛತೆಯೊಂದಿಗೆ ಸುಂದರ ಪರಿಸರ ನಿರ್ಮಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಆಗ್ರಹಿಸಿ ಮಂಗಳವಾರ ನಗರಸಭೆ ಪೌರಾಯುಕ್ತ ಕೆ. ಪರಮೇಶ್‌ರವರಿಗೆ ಮನವಿ ಸಲ್ಲಿಸಲಾಯಿತು.
    ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಎಲ್ಲಿಬೇಕೆಂದರಲ್ಲಿ ಎಸೆಯುವುದು, ರಸ್ತೆ ಬದಿಯಲ್ಲಿ ತಂದು ಸುರಿಯುವುದನ್ನು ತಡೆಯುವುದು. ರಸ್ತೆ ಬದಿಗಳಲ್ಲಿ ಒಂದೆಡೆ ತ್ಯಾಜ್ಯ ಹಾಕಲು ಸೂಕ್ತ ವ್ಯವಸ್ಥೆ ಕಲ್ಪಿಸುವುದು. ಅಂಗಡಿಮುಂಗಟ್ಟುಗಳ ಬಳಿ ಕಡ್ಡಾಯವಾಗಿ ತ್ಯಾಜ್ಯ ಒಂದೆಡೆ ಸಂಗ್ರಹಿಸಿಟ್ಟು ಕೊಂಡು ವಿಲೇವಾರಿ ಮಾಡಲು ಕ್ರಮ ಕೈಗೊಳ್ಳುವುದು.
    ನಗರದ ಪ್ರಮುಖ ರಸ್ತೆಗಳಲ್ಲಿ ಧೂಳು ಉಂಟಾಗದಂತೆ ಎಚ್ಚರ ವಹಿಸುವುದು. ಆಗಾಗ ಸಿಮೆಂಟ್ ಹಾಗು ಡಾಂಬರ್ ರಸ್ತೆಗಳನ್ನು ಸ್ವಚ್ಛಗೊಳಿಸಿ ರಸ್ತೆಗಳ ಬದಿಗಳಲ್ಲಿ ಮಣ್ಣು ಸಂಗ್ರಹಗೊಳ್ಳದಂತೆ ನೋಡಿಕೊಳ್ಳುವುದು. ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲಿಬೇಕೆಂದರಲ್ಲಿ ಉಗುಳುವುದನ್ನು ತಡೆಯುವುದು. ಈ ಕುರಿತು ಸಾರ್ವಜನಿಕರಿಗೆ ಎಚ್ಚರಿಕೆ ನೀಡಲು ಫಲಕಗಳನ್ನು ಅಳವಡಿಸುವುದು. ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಬಳಕೆ ಮಾಡುವುದನ್ನು ನಿಯಂತ್ರಿಸುವುದು. ಅಲ್ಲದೆ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳುವುದು. ಈಗಾಗಲೇ ನಗರಸಭೆ ವ್ಯಾಪ್ತಿಯಲ್ಲಿ ಈಗಾಗಲೇ ಸಾಕಷ್ಟು ಪ್ರಮಾಣದಲ್ಲಿ ಹಸಿರು ಕಣ್ಮರೆಯಾಗಿದ್ದು, ಈ ಹಿನ್ನಲೆಯಲ್ಲಿ ಮಳೆಗಾಲ ಆರಂಭದಲ್ಲಿ ರಸ್ತೆಯ ಎರಡು ಬದಿಗಳಲ್ಲಿ ಸಸಿಗಳನ್ನು ನೆಡುವ ಕಾರ್ಯ ಕೈಗೊಳ್ಳುವುದು. ಪ್ರತಿಯೊಬ್ಬರು ಸಸಿಗಳನ್ನು ಬೆಳೆಸಲು ಪ್ರೋತ್ಸಾಹಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಲಾಗಿದೆ.
    ನಗರಸಭೆ ಪರಿಸರ ಅಭಿಯಂತರ ಪ್ರಭಾಕರ್, ತಾಲೂಕು ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಗಣೇಶ್‌ರಾವ್, ರಾಮನಾಥ್ ಬರ್ಗೆ, ವೈದ್ಯರಾದ ಡಾ. ಶಿವಪ್ರಕಾಶ್, ವಿನೀತ್ ಆನಂದ್, ಕಸಾಪ ಮಾಜಿ ಅಧ್ಯಕ್ಷ ಅಪೇಕ್ಷ ಮಂಜುನಾಥ್, ಮಾಜಿ ಉಪಾಧ್ಯಕ್ಷ ಡಾ. ಬಿ.ಎಂ ನಾಸಿರ್‌ಖಾನ್, ಅಧ್ಯಾಪಕ ಅರಳೇಹಳ್ಳಿ ಅಣ್ಣಪ್ಪ, ದೈಹಿಕ ಶಿಕ್ಷಕಿ ಬನಶಂಕರಮ್ಮ, ಮಾರುತಿ ರಾಜ್, ಗಾಯಕ ಚರಣ್, ಕಲಾವಿದ ಆರ್. ವಿಶ್ವನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಪ್ರತಿಯೊಬ್ಬರು ಸಂವಿಧಾನ ಅರಿತುಕೊಂಡು ಸದ್ಬಳಕೆ ಮಾಡಿಕೊಳ್ಳಿ : ಬಿ.ಕೆ ಜಗನ್ನಾಥ

ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ತಾಲೂಕು ಸಮಿತಿ ವತಿಯಿಂದ ಭದ್ರಾವತಿ ಹಳೇನಗರದ ಶ್ರೀ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಶ್ರೀ ಅಕ್ಕಮಹಾದೇವಿ ಸಮುದಾಯ ಭವನದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಮಹಾನ್ ಚೇತನ ಡಾ.ಬಿ.ಆರ್ ಅಂಬೇಡ್ಕರ್‌ರವರ ೧೩೧ನೇ ಜನ್ಮದಿನ 'ಸಾಮಾಜಿಕ ನ್ಯಾಯದ ದಿನ' ಕಾರ್ಯಕ್ರಮದಲ್ಲಿ ಉದ್ಯಮಿ ಬಿ.ಕೆ ಜಗನ್ನಾಥ ಹಾಗು ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ, ಮೇ. ೧೦: ಮಹಾಮಾನವತಾವಾದಿ ಡಾ. ಬಿ.ಆರ್ ಅಂಬೇಡ್ಕರ್‌ರವರು ರಚಿಸಿರುವ ಸಂವಿಧಾನವನ್ನು ಎಲ್ಲರೂ ಅರ್ಥ ಮಾಡಿಕೊಳ್ಳುವ ಜೊತೆಗೆ ಅದರ ಸದ್ಬಳಕೆ ಮಾಡಿಕೊಳ್ಳಬೇಕೆಂದು ಉದ್ಯಮಿ ಬಿ.ಕೆ ಜಗನ್ನಾಥ ಹೇಳಿದರು.
ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ತಾಲೂಕು ಸಮಿತಿ ವತಿಯಿಂದ  ಹಳೇನಗರದ ಶ್ರೀ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಶ್ರೀ ಅಕ್ಕಮಹಾದೇವಿ ಸಮುದಾಯ ಭವನದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಮಹಾನ್ ಚೇತನ ಡಾ.ಬಿ.ಆರ್ ಅಂಬೇಡ್ಕರ್‌ರವರ ೧೩೧ನೇ ಜನ್ಮದಿನ 'ಸಾಮಾಜಿಕ ನ್ಯಾಯದ ದಿನ' ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಮಹಾಮಾನವತಾವಾದಿಗಳಾದ ಗೌತಮ ಬುದ್ಧ, ಬಸವಣ್ಣ ಹಾಗು ಅಂಬೇಡ್ಕರ್‌ರವರು ಎಲ್ಲರೂ ಸಮಾನವಾಗಿ ಬದುಕುವಂತಹ ಚಿಂತನೆಗಳೊಂದಿಗೆ ಸಮಾಜ ನಿರ್ಮಾಣಕ್ಕೆ ಮುಂದಾಗಿದ್ದರು. ಅವರ ಆದರ್ಶಗಳು, ಚಿಂತನೆಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕಾಗಿದೆ.  ಸಂವಿಧಾನದ ಆಶಯಗಳನ್ನು ಅರಿತು ಅದರ ಸದ್ಬಳಕೆ ಮಾಡಿಕೊಂಡಾಗ ಮಾತ್ರ ನಮ್ಮ ಬದುಕು ಸಾರ್ಥಕಗೊಳ್ಳುತ್ತದೆ ಎಂದರು.
    ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ಗೌತಮ ಬುದ್ಧ, ಬಸವಣ್ಣ ಹಾಗು ಅಂಬೇಡ್ಕರ್‌ರವರು ಸಮಾನತೆ ಪ್ರತಿಪಾದಿಸಿದ ಮಹಾನ್ ಆದರ್ಶ ವ್ಯಕ್ತಿಗಳಾಗಿದ್ದಾರೆ. ಅದರಲ್ಲೂ ಅಂಬೇಡ್ಕರ್‌ರವರು ಶ್ರೇಷ್ಠವಾದ ಸಂವಿಧಾನ ರಚಿಸುವ ಮೂಲಕ ಪರಸ್ಪರ ನಡುವೆ ಸಮಾನತೆ, ಸೌಹಾರ್ದತೆ ವಾತಾವರಣದೊಂದಿಗೆ ಉತ್ತಮ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ರೂಪಿಸಿಕೊಟ್ಟಿದ್ದಾರೆ. ಇದನ್ನು ನಾವೆಲ್ಲರೂ ಅರ್ಥ ಮಾಡಿಕೊಂಡು ಇವರ ಆದರ್ಶ ಚಿಂತನೆಗಳನ್ನು ಮೈಗೊಡಿಸಿಕೊಂಡು ಮುನ್ನಡೆಯಬೇಕೆಂದರು.
    ಸಂಬುದ್ಧ ಧಮ್ಮಾಂಕುರ ಟ್ರಸ್ಟ್ ಅಧ್ಯಕ್ಷ ಎಚ್. ರಾಚಪ್ಪ ಉಪನ್ಯಾಸ ನಡೆಸಿಕೊಟ್ಟರು. ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ತಾಲೂಕು ಬಂಜಾರ ಯುವ ವೇದಿಕೆ ಅಧ್ಯಕ್ಷ ಕೃಷ್ಣನಾಯ್ಕ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ತಾಲೂಕು ಪ್ರಧಾನ ಸಂಚಾಲಕ ಎಂ. ಕುಬೇಂದ್ರಪ್ಪ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಡಿಎಸ್‌ಎಸ್ ಪ್ರಮುಖರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
    ಮಕ್ಕಳಿಂದ ನೃತ್ಯ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಇದಕ್ಕೂ ಮೊದಲು ಬಿ.ಎಚ್ ರಸ್ತೆ ಅಂಡರ್‌ಬ್ರಿಡ್ಜ್ ಬಳಿ ಇರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.


ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ತಾಲೂಕು ಸಮಿತಿ ವತಿಯಿಂದ ಭದ್ರಾವತಿ ಹಳೇನಗರದ ಶ್ರೀ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಶ್ರೀ ಅಕ್ಕಮಹಾದೇವಿ ಸಮುದಾಯ ಭವನದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಮಹಾನ್ ಚೇತನ ಡಾ.ಬಿ.ಆರ್ ಅಂಬೇಡ್ಕರ್‌ರವರ ೧೩೧ನೇ ಜನ್ಮದಿನ 'ಸಾಮಾಜಿಕ ನ್ಯಾಯದ ದಿನ' ಕಾರ್ಯಕ್ರಮ ಉದ್ಯಮಿ ಬಿ.ಕೆ ಜಗನ್ನಾಥ ಉದ್ಘಾಟಿಸಿದರು.




ಸಹಾಯಕ ಪ್ರಾಧ್ಯಾಪಕ ಎಸ್. ವರದರಾಜರಿಗೆ ಪಿಎಚ್‌ಡಿ ಪದವಿ

ಎಸ್. ವರದರಾಜ
    ಭದ್ರಾವತಿ, ಮೇ. ೧೦: ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಎಸ್. ವರದರಾಜಯವರು ದಾವಣಗೆರೆ ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿ ಪದವಿ ಪಡೆದುಕೊಂಡಿದ್ದಾರೆ.
    'ಅರ್ಬನ್ ಹೌಸಿಂಗ್ ಸ್ಕೀಮ್ ಇನ್ ಕರ್ನಾಟಕ ವಿತ್ ಸ್ಪೆಷಲ್ ರೆಫರನ್ಸ್ ಟು ಶಿವಮೊಗ್ಗ ಡಿಸ್ಟ್ರಿಕ್ಟ್' ಮಹಾ ಪ್ರಬಂಧಕ್ಕೆ ಪಿಎಚ್‌ಡಿ ಪದವಿ ಲಭಿಸಿದ್ದು, ದಾವಣಗೆರೆ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗದ ಮಾರ್ಗದರ್ಶಕರು ಮತ್ತು ಅಧ್ಯಕ್ಷರಾದ ಪ್ರೊ. ಎನ್.ಕೆ ಗೌಡ(ನಿವೃತ್ತ)ರವರ ಮಾರ್ಗದರ್ಶನದಲ್ಲಿ ಮಹಾ ಪ್ರಬಂಧ ಮಂಡಿಸಿದ್ದರು.
    ವರದರಾಜರವರು ವಿಐಎಸ್‌ಎಲ್ ಕಾರ್ಖಾನೆ ನಿವೃತ್ತ ಕಾರ್ಮಿಕರಾದ ದಿವಂಗತ ಶಿವಲಿಂಗಯ್ಯ, ಲಕ್ಷ್ಮಮ್ಮ ದಂಪತಿ ಪುತ್ರರಾಗಿದ್ದು, ಇವರಿಗೆ ಕಾಲೇಜಿನ ಆಡಳಿತ ಮಂಡಳಿ, ವಿವಿಧ ಸಂಘ-ಸಂಸ್ಥೆಗಳು ಅಭಿನಂದನೆ ಸಲ್ಲಿಸಿವೆ.