Thursday, June 30, 2022

ತುರ್ತುಪರಿಸ್ಥಿತಿ ನಿಜಕ್ಕೂ ಭಾರತದ ಇತಿಹಾಸದಲ್ಲಿ ಒಂದು ಕರಾಳಕಾಲಮಾನ : ಆರ್.ಕೆ ಸಿದ್ರಾಮಣ್ಣ

ಭದ್ರಾವತಿ ಹಳೇನಗರದ ಬಿಜೆಪಿ ಪಕ್ಷದ ಕಛೇರಿಯಲ್ಲಿ ಗುರುವಾರ ತುರ್ತು ಪರಿಸ್ಥಿತಿ ಕರಾಳ ನೆನಪಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
    ಭದ್ರಾವತಿ, ಜೂ. ೩೦: ಸಂವಿಧಾನಕ್ಕೆ ವಿರೋಧವಾಗಿ ಇಂದಿರಾಗಾಂಧಿಯವರು ೧೯೭೦ರಲ್ಲಿ  ಜಾರಿಗೆ ತಂದ ತುರ್ತುಪರಿಸ್ಥಿತಿ ನಿಜಕ್ಕೂ ಭಾರತದ ಇತಿಹಾಸದಲ್ಲಿ ಒಂದು ಕರಾಳಕಾಲಮಾನ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಆರ್.ಕೆ ಸಿದ್ರಾಮಣ್ಣ ಹೇಳಿದರು.
      ಅವರು ಗುರುವಾರ ಸಂಜೆ ಹಳೇನಗರದ ಬಿಜೆಪಿ ಪಕ್ಷದ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ತುರ್ತು ಪರಿಸ್ಥಿತಿ ಕರಾಳ ನೆನಪಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅಧಿಕಾರ ದಾಹದಿಂದ ಕಾಂಗ್ರೆಸ್ ಪಕ್ಷದ ನಾಯಕಿ, ಮಾಜಿ ಪ್ರಧಾನಿ ಇಂದಿರಾಗಾಂಧಿಯವರು ಜಾರಿಗೆ ತಂದ ತುರ್ತುಪರಿಸ್ಥಿತಿಯಿಂದಾಗಿ ದೇಶದ ಸಾಮಾನ್ಯ ನಾಗರೀಕರ ಸ್ವಾತಂತ್ರ್ಯ ಹಾಗು ಪತ್ರಿಕಾ ಸ್ವಾತಂತ್ರ್ಯದ ಹರಣವಾಗಿ ಸಂವಿಧಾನದತ್ತವಾದ ಎಲ್ಲಾ ಹಕ್ಕುಗಳನ್ನು ಕಳೆದುಕೊಂಡು ಇಡೀ ದೇಶ ತೊಂದರೆ ಅನುಭವಿಸುವಂತಾಯಿತು. ಇದರ ವಿರುದ್ಧವಾಗಿ ಅಂದು ಜಯಪ್ರಕಾಶ್ ನಾರಾಯಣ್, ಅಟಲ್ ಬಿಹಾರಿ ವಾಜಪೇಯಿ, ಲಾಲ್ ಕೃಷ್ಣ ಅಡ್ವಾಣಿ ಸೇರಿದಂತೆ ಅನೇಕ ರಾಷ್ಟ್ರೀಯ ಹಾಗು ರಾಜ್ಯನಾಯಕರು ಹೋರಾಟ ನಡೆಸಿ ಸೆರೆವಾಸ ಅನುಭವಿಸಿದರು. ನಿರಂತರ ಹೋರಾಟದ ಪರಿಣಾಮ ನಂತರದ ದಿನಗಳಲ್ಲಿ ತುರ್ತುಪರಿಸ್ಥಿತಿಯನ್ನು ಹಿಂಪಡೆಯಲಾಯಿತು ಎಂದರು.
      ಪಕ್ಷದ ಹಿರಿಯರಾದ ಮಧುಕಾನಿಟ್ಕರ್ ಮಾತನಾಡಿ, ತುರ್ತುಪರಿಸ್ಥಿತಿ ವಿರೋಧಿಸಿ  ಸ್ಥಳೀಯವಾಗಿ ನಡೆದ ಹೋರಾಟ ಹಾಗೂ ಅದಕ್ಕಾಗಿ ಹೋರಾಟನಡೆಸಿದವರ ಸ್ಮರಣೆ ಹಾಗೂ ಅಂದಿನ ದಿನಗಳ ಅನುಭವವನ್ನು ಮೆಲಕುಹಾಕಿದರು.  
      ಪಕ್ಷದ ತಾಲೂಕು ಮಂಡಲ ಅಧ್ಯಕ್ಷ ಎಂ. ಪ್ರಭಾಕರ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಕೆ ಶ್ರೀನಾಥ್, ಜಿ. ಧರ್ಮಪ್ರಸಾದ್, ತಾಲೂಕು ಮಂಡಲ ಕಾರ್ಯದರ್ಶಿ ಚನ್ನೇಶ್, ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಪಾಟೀಲ್, ಯುವ ಘಟಕದ ಅಧ್ಯಕ್ಷ ವಿಜಯ್ ಸಿದ್ದಾರ್ಥ್, ಪ್ರಮುಖರಾದ ಟಿ. ವೆಂಕಟೇಶ್, ರುದ್ರಪ್ಪ, ಎಸ್.ಎನ್ ಬಾಲಕೃಷ್ಣ, ವಿಶ್ವನಾಥ್ ಕೋಠಿ, ವಿಶ್ವನಾಥರಾವ್, ರಾಮಲಿಂಗಯ್ಯ, ನರಸಿಂಹಾಚಾರ್, ವಿ. ಕದಿರೇಶ್, ಬಿ.ಎಸ್ ನಾರಾಯಣಪ್ಪ, ಬಸವರಾಜ್, ಶಕುಂತಲ, ಅನ್ನಪೂರ್ಣ, ಮಂಜುಳಾ, ರೇಖಾ ಪದ್ಮಾವತಿ, ಜೆ. ಮೂರ್ತಿ, ರವಿಚಂದ್ರ, ಮಂಜುನಾಥ್, ರಾಮನಾಥ್ ಬರ್ಗೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


ಸಂಗೀತ, ಸಾಹಿತ್ಯ, ಕಲೆಗೆ ವಿಶಿಷ್ಟವಾದ ಶಕ್ತಿ : ಡಾ. ಅನುರಾಧ ಪಟೇಲ್

ಭದ್ರಾವತಿಯಲ್ಲಿ ಚುಂಚಾದ್ರಿ ಮಹಿಳಾ ವೇದಿಕೆವತಿಯಿಂದ ವಿಶ್ವ ಸಂಗೀತ ದಿನದ ಅಂಗವಾಗಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಸನ್ಮಾನ ಹಾಗು ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಹಿರಿಯ ಸುಗಮ ಸಂಗೀತ ಕಲಾವಿದ ಎಸ್.ಬಿ ಶಿವಲಿಂಗಪ್ಪ ಸೇರಿದಂತೆ ಇನ್ನಿತರರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ, ಜೂ. ೩೦: ಸಂಗೀತ, ಸಾಹಿತ್ಯ, ಕಲೆ ಇವುಗಳು ಮನುಷ್ಯನ ಅವಿಭಾಜ್ಯ ಅಂಗವಾಗಿದ್ದು, ವಿಶಿಷ್ಟವಾದ ಶಕ್ತಿ ಹೊಂದಿವೆ ಎಂದು ಚುಂಚಾದ್ರಿ ಮಹಿಳಾ ವೇದಿಕೆ ಗೌರವಾಧ್ಯಕ್ಷೆ ಡಾ. ಅನುರಾಧ ಪಟೇಲ್ ಹೇಳಿದರು.
      ಅವರು ಗುರುವಾರ ವೇದಿಕೆವತಿಯಿಂದ ವಿಶ್ವ ಸಂಗೀತ ದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಸನ್ಮಾನ ಹಾಗು ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
      ಸಂಗೀತ, ಸಾಹಿತ್ಯ, ಕಲೆ ಇವುಗಳು ಮನಸ್ಸಿಗೆ ನೆಮ್ಮದಿ ನೀಡುವ ಜೊತೆಗೆ ಮನಸ್ಸುಗಳನ್ನು ಒಂದುಗೂಡಿಸುವ ಶಕ್ತಿ ಹೊಂದಿವೆ. ಇವು ಮನಷ್ಯರಲ್ಲಿ ಮಾತ್ರವಲ್ಲ ಪ್ರಾಣಿ, ಪಕ್ಷಿಗಳಲ್ಲೂ ಅಡಗಿವೆ. ಇವುಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಸಮಾಜದಲ್ಲಿ ಸಂಸ್ಕಾರಯುತವಾದ ಉತ್ತಮ ಬದುಕು ರೂಪಿಸಿಕೊಳ್ಳಲು ಸಾಧ್ಯ ಎಂದರು.
      ಸಂಗೀತ ಶಿಕ್ಷಕಿ ವಿದ್ವಾನ್ ಪುಷ್ಪ ಕೃಷ್ಣಮೂರ್ತಿ ಮಾತನಾಡಿ, ಕೈಗಾರಿಕೆ ನಗರ ಸಂಗೀತ, ಸಾಹಿತ್ಯ, ಕಲೆಗಳ ತವರೂರಾಗಿದೆ. ಇಲ್ಲಿನ ಕಲಾವಿದರು ರಾಜ್ಯ ಹಾಗು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಕಲಾವಿದರನ್ನು ಗುರುತಿಸಿ ಪ್ರೋತ್ಸಾಹಿಸಿ ಅಭಿನಂದಿಸುವ ಕಾರ್ಯ ಶ್ಲಾಘನೀಯ ಎಂದರು.
      ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಮಣಿಶೇಖರ್, ಸಂಗೀತ ಶಿಕ್ಷಕಿ ವಿದೂಷಿ ಗಾಯತ್ರಿ, ನಗರಸಭೆ ಮಾಜಿ ಅಧ್ಯಕ್ಷೆ ವಿಶಾಲಾಕ್ಷಿ, ಸೇರಿದಂತೆ ಇನ್ನಿತರರು ಮಾತನಾಡಿದರು. ಹಿರಿಯ ಸುಗಮ ಸಂಗೀತ ಕಲಾವಿದ ಎಸ್.ಬಿ ಶಿವಲಿಂಗಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಅಧ್ಯಕ್ಷತೆ ವಹಿಸಿದ್ದರು.
      ನಗರಸಭಾ ಸದಸ್ಯ ಮಣಿ ಎಎನ್‌ಎಸ್, ಪತಂಜಲಿ ಯೋಗ ಶಿಕ್ಷಕ ಮಂಜುನಾಥ್, ಪುಷ್ಪಾ ಕೇಶವಮೂರ್ತಿ, ವೇದಿಕೆ ಖಜಾಂಚಿ ಭಾರತಿ ಕುಮಾರ್ ಹಾಗು ನಿರ್ದೇಶಕಿಯರು  ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  ವೇದಿಕೆ ಕಾರ್ಯದರ್ಶಿ ಲತಾ ಪ್ರಭಾಕರ್ ಸ್ವಾಗತಿಸಿದರು. ನೂತನ್ ನಿರೂಪಿಸಿದರು. ಸಹಕಾರ್ಯದರ್ಶಿ ಶೀಲಾ ರವಿ ವಂದಿಸಿದರು.    


ಪರಿಶುದ್ಧ ಕುಡಿಯುವ ನೀರಿನ ಪೂರೈಕೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ

ವಿಧಾನಪರಿಷತ್ ಸದಸ್ಯ ಡಿ.ಎಸ್ ಅರುಣ್‌ಗೆ ಮನವಿ

ಭದ್ರಾವತಿ ಕ್ಷೇತ್ರದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ  ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ ದೇವರಾಜ ಅರಸು ಜನಸ್ಪಂದನ ವೇದಿಕೆ ಹಾಗು ಸುವರ್ಣ ಮಹಿಳಾ ವೇದಿಕೆ ವತಿಯಿಂದ ವಿಧಾನಪರಿಷತ್ ಸದಸ್ಯ ಡಿ.ಎಸ್ ಅರುಣ್ ಅವರಿಗೆ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ಜೂ. ೩೦ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ ದೇವರಾಜ ಅರಸು ಜನಸ್ಪಂದನ ವೇದಿಕೆ ಹಾಗು ಸುವರ್ಣ ಮಹಿಳಾ ವೇದಿಕೆ ವತಿಯಿಂದ ವಿಧಾನಪರಿಷತ್ ಸದಸ್ಯ ಡಿ.ಎಸ್ ಅರುಣ್ ಅವರಿಗೆ ಮನವಿ ಸಲ್ಲಿಸಲಾಯಿತು.
    ಉಂಬ್ಳೆಬೈಲು ಹಾಗು ತಾಲೂಕಿನ ಕಲ್ಲಹಳ್ಳಿ ಮತ್ತು ೨೮ ಗ್ರಾಮಗಳನ್ನೊಳಗೊಂಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದ್ದು, ಈ ಹಿನ್ನಲೆಯಲ್ಲಿ ಸಮರ್ಪಕವಾದ, ಪರಿಶುದ್ಧವಾದ ಕುಡಿಯುವ ನೀರನ್ನು ಪೂರೈಸಲು ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮಂಜೂರಾತಿ ಮಾಡಿಸುವುದು. ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯಾನವನ, ರಸ್ತೆ, ಕೆರೆಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಶಾಸಕರ ವಿಶೇಷ ಅನುದಾನವನ್ನು ಬಿಡುಗಡೆಗೊಳಿಸುವಂತೆ ಒತ್ತಾಯಿಸಲಾಗಿದೆ.
    ದೊಣಬಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಿಗೆ ಸಮರ್ಪಕವಾದ, ಪರಿಶುದ್ಧವಾದ ಕುಡಿಯುವ ನೀರಿನ ಪೂರೈಕೆ ಮಾಡಲು ಕ್ರಮ ಕೈಗೊಳ್ಳುವುದು. ದೊಣಬಘಟ್ಟ, ತಡಸ, ಬಿಳಿಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಮಹಿಳೆಯರ ಅನುಕೂಲಕ್ಕಾಗಿ ದೊಣಬಘಟ್ಟದಲ್ಲಿರುವ ಸರ್ಕಾರಿ ಆಸ್ಪತ್ರೆಯನ್ನು ೨೫ ಹಾಸಿಗೆಯುಳ್ಳ ತಾಯಿ ಮತ್ತು ಮಗುವಿನ ಆಸ್ಪತ್ರೆಯನ್ನಾಗಿ ಪರಿವರ್ತಿಸುವುದು. ಕೇಂದ್ರ ಸರ್ಕಾರದ ಮಾದರಿಯಂತೆ ಅಮೃತ್ ೨.೦ ಯೋಜನೆಯನ್ನು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅನುಷ್ಠಾನಕ್ಕೆ ತರುವುದು ಹಾಗು ನಗರಸಭೆ ವ್ಯಾಪ್ತಿ ಜನ್ನಾಪುರ ಸರ್ವೆ ನಂ.೭೦ರ ಸುಮಾರು ೪೫ ಎಕರೆ ೨೦ ಗುಂಟೆ ವಿಸ್ತೀರ್ಣವುಳ್ಳ ಜನ್ನಾಪುರ ಕೆರೆ ಬದಿಯಲ್ಲಿ ರಾಜಕಾಲುವೆ ನಿರ್ಮಿಸಲು ೩ ಕೋ. ರು. ಅನುದಾನ ಬಿಡುಗಡೆಗೊಳಿಸುವಂತೆ ಆಗ್ರಹಿಸಲಾಗಿದೆ.
    ಟ್ರಸ್ಟ್ ಛೇರ್‍ಮನ್, ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್, ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಬಿ. ಆನಂದ್, ಸದಸ್ಯರಾದ ಉಮೇಶ್, ಧರ್ಮಪ್ಪ, ಪುನೀತ್, ಗ್ರಾಮಸ್ಥರಾದ ಬೋಟ್ಯಾನಾಯ್ಕ್, ಕುಮಾರ್, ಕೃಷ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Wednesday, June 29, 2022

ಏಕಾಏಕಿ ಸರ್ಕಾರಿ ಜಮೀನಿನಲ್ಲಿ ಅಕ್ರಮ ನಿವೇಶನ, ಮನೆ

ತಹಸೀಲ್ದಾರ್ ನೇತೃತ್ವದ ತಂಡದಿಂದ ತೆರವು ಕಾರ್ಯಾಚರಣೆ

ಭದ್ರಾವತಿ ತಾಲೂಕಿನ ತಾವರೆಘಟ್ಟ ಗ್ರಾಮದ ಸರ್ವೆ ನಂ.೧೪ರ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ನಿರ್ಮಿಸಿಕೊಳ್ಳಲಾಗಿದ್ದ ನಿವೇಶನ ಹಾಗು ಮನೆ ತೆರವುಗೊಳಿಸುವಲ್ಲಿ ತಹಸೀಲ್ದಾರ್ ಆರ್. ಪ್ರದೀಪ್ ನೇತೃತ್ವದ ತಂಡ ಬುಧವಾರ ಯಶಸ್ವಿಯಾಗಿದೆ.
    ಭದ್ರಾವತಿ, ಜೂ. ೨೯: ತಾಲೂಕಿನ ತಾವರೆಘಟ್ಟ ಗ್ರಾಮದ ಸರ್ವೆ ನಂ.೧೪ರ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ನಿರ್ಮಿಸಿಕೊಳ್ಳಲಾಗಿದ್ದ ನಿವೇಶನ ಹಾಗು ಮನೆ ತೆರವುಗೊಳಿಸುವಲ್ಲಿ ತಹಸೀಲ್ದಾರ್ ಆರ್. ಪ್ರದೀಪ್ ನೇತೃತ್ವದ ತಂಡ ಬುಧವಾರ ಯಶಸ್ವಿಯಾಗಿದೆ.
    ಕಳೆದ ಕೆಲವು ದಿನಗಳ ಹಿಂದೆ ಸರ್ಕಾರಿ ಜಮೀನಿನಲ್ಲಿ ಏಕಾಕಿ ನಿವೇಶನ ಹಾಗು ಮನೆ ನಿರ್ಮಿಸಿಕೊಂಡಿದ್ದು, ಈ ಮಾಹಿತಿ ತಿಳಿದ ತಕ್ಷಣ ಸೂಕ್ತ ದಾಖಲೆ ಪತ್ರಗಳೊಂದಿಗೆ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ಆರ್. ಪ್ರದೀಪ್ ನೇತೃತ್ವದ ತಂಡ ಜೆಸಿಬಿ ಮೂಲಕ ತೆರವು ಕಾರ್ಯಾಚರಣೆ ಕೈಗೊಂಡು ಜಮೀನನ್ನು ಸರ್ಕಾರದ ವಶಕ್ಕೆ ಪಡೆಯಲಾಯಿತು.


    ಕಾರ್ಯಾಚರಣೆಯಲ್ಲಿ ತಾವರಘಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಕಾಶ್, ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕರು, ಕಂದಾಯ ನಿರೀಕ್ಷಕ ಸತೀಶ್, ರಘು ಹಾಗು ಕಂದಾಯ ಇಲಾಖೆ ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ಕನ್ನಯ್ಯಾ ಲಾಲ್ ಟೈಲರ್ ಕಗ್ಗೊಲೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

ರಾಜಸ್ತಾನದ ಉದಯಪುರದಲ್ಲಿ ನಡೆದ ಕನ್ನಯ್ಯಾ ಲಾಲ್ ಟೈಲರ್ ಕಗ್ಗೊಲೆ ಖಂಡಿಸಿ ಬುಧವಾರ ಭದ್ರಾವತಿ ಮಾಧವಚಾರ್ ವೃತ್ತದಲ್ಲಿ ತಾಲೂಕು ಬಿಜೆಪಿ ಮಂಡಲ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
    ಭದ್ರಾವತಿ, ಜೂ. ೨೯ : ರಾಜಸ್ತಾನದ ಉದಯಪುರದಲ್ಲಿ ನಡೆದ ಕನ್ನಯ್ಯಾ ಲಾಲ್ ಟೈಲರ್ ಕಗ್ಗೊಲೆ ಖಂಡಿಸಿ ಬುಧವಾರ ನಗರದ ಮಾಧವಚಾರ್ ವೃತ್ತದಲ್ಲಿ ತಾಲೂಕು ಬಿಜೆಪಿ ಮಂಡಲ ವತಿಯಿಂದ ರಸ್ತೆ ತಡೆ ನಡೆಸಿ ಪ್ರತಿಭಟಿಸಲಾಯಿತು.
    ಪಕ್ಷದ ಪ್ರಮುಖರು ಮಾತನಾಡಿ, ರಾಜಸ್ತಾನದ ಉದಯಪುರದಲ್ಲಿ ನೂಪುರ್ ಶರ್ಮಾ ಹೇಳಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಬೆಂಬಲಿಸಿ ಪೋಸ್ಟ್ ಮಾಡಿದ ಕಾರಣಕ್ಕೆ ಕನ್ನಯ್ಯಾ ಲಾಲ್ ಅವರನ್ನು ಹತ್ಯೆ ಮಾಡಿರುವುದು ಖಂಡನೀಯ, ದೇಶದಲ್ಲಿ ಹಿಂದುಗಳು ನೆಮ್ಮದಿಯಾಗಿ ಬದುಕಲು ಸಾಧ್ಯವಾಗುತ್ತಿಲ್ಲ. ತಕ್ಷಣ ಕೊಲೆ ಆರೋಪಿಗಳನ್ನು ಬಂಧಿಸಿ ಸೂಕ್ತ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
    ಪ್ರಮುಖರಾದ ತಾಲೂಕು ಮಂಡಲ ಅಧ್ಯಕ್ಷ ಎಂ. ಪ್ರಭಾಕರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಕೆ ಶ್ರೀನಾಥ್, ಜಿ. ಧರ್ಮಪ್ರಸಾದ್, ತಾಲೂಕು ಪ್ರಧಾನ ಕಾರ್ಯದರ್ಶಿ ಚನ್ನೇಶ್, ಯುವ ಘಟಕದ ಅಧ್ಯಕ್ಷ ವಿಜಯ್ ಸಿದ್ದಾಥ್, ಎಸ್.ಸಿ ಮೋರ್ಚಾ ಅಧ್ಯಕ್ಷ ಪಿ. ಗಣೇಶ್‌ರಾವ್, ವಿ. ಕದಿರೇಶ್, ಎಸ್. ಕುಮಾರ್, ಎಂ. ಮಂಜುನಾಥ್, ಎಂ.ಎಸ್ ಸುರೇಶಪ್ಪ, ನಕುಲ್, ಗೋಕುಲ್ ಕೃಷ್ಣ, ಧನುಷ್ ಬೋಸ್ಲೆ, ಮಹಿಳಾ ಪ್ರಮುಖರಾದ ಶೋಭಾ ಪಾಟೀಲ್, ಗೌರಮ್ಮ, ಮಂಜುಳಾ, ಶಕುಂತಲಾ, ಅನುಷಾ, ಕವಿತಾ ಸುರೇಶ್, ರೇಖಾ ಪದ್ಮಾವತಿ, ಅನ್ನಪೂರ್ಣ, ಹೇಮಾವತಿ ವಿಶ್ವನಾಥ್, ಕವಿತಾರಾವ್, ಲೋಲಾಕ್ಷಿ, ಭಾಗಿರತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಹಿರಿಯೂರು ಗ್ರಾಮ ಪಂಚಾಯಿತಿ ಪಿಡಿಓ ವಿರುದ್ಧ ಪ್ರತಿಭಟನೆ

ಕರ್ತವ್ಯ ಲೋಪ, ಅಕ್ರಮವಾಗಿ ಎನ್‌ಓಸಿ ನೀಡಿದ ಆರೋಪ

ಭದ್ರಾವತಿ ಹಿರಿಯೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸರಿಯಾಗಿ ಕರ್ತವ್ಯ ನಿರ್ವಹಿಸದೆ, ಅಕ್ರಮಗಳಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಿ ಬುಧವಾರ ಪಂಚಾಯಿತಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
    ಭದ್ರಾವತಿ, ಜೂ. ೨೯ : ಹಿರಿಯೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸರಿಯಾಗಿ ಕರ್ತವ್ಯ ನಿರ್ವಹಿಸದೆ, ಅಕ್ರಮಗಳಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಿ ಬುಧವಾರ ಪಂಚಾಯಿತಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
    ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ಕಳೆದ ಸುಮಾರು ೧೦ ತಿಂಗಳಿನಿಂದ ಕರ್ತವ್ಯ ನಿರ್ವಹಿಸುತ್ತಿರುವ ಪರಮೇಶ್ವರಪ್ಪ, ಸರಿಯಾಗಿ ಕರ್ತವ್ಯಕ್ಕೆ ಹಾಜರಾಗುತ್ತಿಲ್ಲ. ಜೊತೆಗೆ  ಸಾರ್ವಜನಿಕರೊಂದಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಪಂಚಾಯಿತಿ ಕೆಲಸ ಮಾಡಿಕೊಡಲು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ. ಅಲ್ಲದೆ ಹಳೇ ಹಿರಿಯೂರು ಭಾಗದ ಗ್ರಾಮ ಠಾಣಾ ಜಾಗದ ಒಂದೇ ನಿವೇಶನಕ್ಕೆ ಅಕ್ರಮವಾಗಿ ಪುನಃ ವಿದ್ಯುತ್ ಸಂಪರ್ಕ ಪಡೆಯಲು ಆಕ್ಷೇಪಣ ರಹಿತ ಪತ್ರ (ಎನ್‌ಓಸಿ) ನೀಡುವ ಮೂಲಕ ಅಕ್ರಮವೆಸಗಿದ್ದಾರೆಂದು ಆರೋಪಿಸಲಾಯಿತು.
    ತಕ್ಷಣ ಅಭಿವೃದ್ಧಿ ಅಧಿಕಾರಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಯಿತು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್‌ರವರು ಈ ಸಂಬಂಧ ಸೂಕ್ತ ತನಿಖೆ ಕೈಗೊಂಡು ನ್ಯಾಯ ಒದಗಿಸಿಕೊಡುವುದಾಗಿ ಭರವಸೆ ನೀಡಿದರು.
    ಪ್ರಮುಖರಾದ ಕೆ.ಟಿ ಪ್ರಸನ್ನ, ರವಿ, ಸತ್ಯನಾರಾಯಣರಾವ್, ಎಚ್.ವೈ ಕುಮಾರ್, ಸಂತೋಷ್ ಹಾಗು ಅಂಬೇಡ್ಕರ್ ಕಾಲೋನಿ ನಿವಾಸಿಗಳು ಪಾಲ್ಗೊಂಡಿದ್ದರು.

ಯುವ ಮೋರ್ಚಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎನ್ ಪ್ರಜ್ವಲ್ ನೇಮಕ


ಬಿ.ಎನ್ ಪ್ರಜ್ವಲ್
    ಭದ್ರಾವತಿ, ಜೂ. ೨೯ : ಬಿಜೆಪಿ ಯುವ ಮೋರ್ಚಾ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎನ್ ಪ್ರಜ್ವಲ್ ನೇಮಕಗೊಂಡಿದ್ದಾರೆ.
    ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ಎಂ. ಪ್ರಭಾಕರ್ ಪ್ರಜ್ವಲ್ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ಯುವ ಮುಖಂಡ ನಕುಲ್ ಅವರಿಂದ ತೆರವಾದ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ಯುವ ಮೋರ್ಚಾ ಅಧ್ಯಕ್ಷ ವಿಜಯ್ ಸಿದ್ದಾರ್ಥ್ ಹಾಗು ಇನ್ನಿತರ ಮುಖಂಡರು ಪ್ರಜ್ವಲ್ ಅವರನ್ನು ಅಭಿನಂದಿಸಿದ್ದಾರೆ.