Friday, July 15, 2022

ಭದ್ರಾ ನದಿ ತಡೆಗೋಡೆ ನಿರ್ಮಾಣದ ಪ್ರಸ್ತಾವನೆಗೆ ಸ್ಪಂದಿಸದ ಸರ್ಕಾರ : ಕೇವಲ ೮ ಕೋ. ಬಿಡುಗಡೆ

ಭದ್ರಾವತಿಯಲ್ಲಿ ಭದ್ರಾ ನದಿಯಿಂದ ಉಂಟಾಗಿರುವ ಪ್ರವಾಹ ಪೀಡಿತ ಸ್ಥಳಕ್ಕೆ ಶುಕ್ರವಾರ ಶಾಸಕ ಬಿ.ಕೆ ಸಂಗಮೇಶ್ವರ್ ಭೇಟಿ ಪರಿಶೀಲನೆ ನಡೆಸಿ ಸಂತ್ರಸ್ಥರ ಸಂಕಷ್ಟ ಆಲಿಸಿದರು.
    ಭದ್ರಾವತಿ, ಜು. ೧೫: ನಗರದ ಮಧ್ಯ ಭಾಗದಲ್ಲಿ ಹಾದು ಹೋಗಿರುವ ಭದ್ರಾ ನದಿಯಿಂದ ಪ್ರವಾಹ ತಪ್ಪಿಸಲು ತಡೆಗೋಡೆ ನಿರ್ಮಿಸುವಂತೆ ಸರ್ಕಾರಕ್ಕೆ ಹಲವಾರು ಬಾರಿ ಒತ್ತಾಯಿಸಿದ್ದು, ಆದರೆ ಇದುವರೆಗೂ ಪೂರಕವಾಗಿ ಸ್ಪಂದಿಸಿಲ್ಲ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ವಿಷಾದ ವ್ಯಕ್ತಪಡಿಸಿದರು.
      ಅವರು ಶುಕ್ರವಾರ ಭದ್ರಾ ನದಿಯಿಂದ ಉಂಟಾದ ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿ ಸಂತ್ರಸ್ಥರ ಸಂಕಷ್ಟಗಳನ್ನು ಆಲಿಸಿ ಮಾತನಾಡಿದರು. ೨ನೇ ಬಾರಿಗೆ ಶಾಸಕನಾಗಿ ಆಯ್ಕೆಯಾದ ಸಂದರ್ಭದಲ್ಲಿಯೇ ಕವಲಗುಂದಿಯಿಂದ ತರೀಕೆರೆ ರಸ್ತೆಯ ಖಬರ್‌ಸ್ತಾನದವರೆಗೆ ತಡೆಗೋಡೆ ನಿರ್ಮಿಸುವಂತೆ ೧೩೮ ಕೋ.ರು. ಪ್ರಸ್ತಾವನೆ ಸಲ್ಲಿಸಿದ್ದೇನೆ. ಆದರೆ ಕೇವಲ ೮ ಕೋ.ರು. ಮಾತ್ರ ಬಿಡುಗಡೆ ಮಾಡಲಾಗಿದೆ. ಈ ಹಣದಲ್ಲಿಯೇ ಇದೀಗ ಎರಡು ಭಾಗಗಳಲ್ಲಿ ಸ್ವಲ್ಪ ಸ್ವಲ್ಪ ತಡೆಗೋಡೆ ನಿರ್ಮಿಸುವಂತೆ ಸೂಚಿಸಲಾಗಿದೆ. ಮುಂದಿನ ದಿನಗಳಲ್ಲಿ ತಗ್ಗು ಪ್ರದೇಶಗಳಲ್ಲಿ ತಡೆಗೋಡೆ ನಿರ್ಮಾಣಗೊಳ್ಳಲಿದೆ ಎಂದರು.
      ಪ್ರತಿ ವರ್ಷ ಮುಳುಗಡೆಗೊಳ್ಳುತ್ತಿರುವ ಹೊಸಸೇತುವೆಗೆ ಪರ್ಯಾಯವಾಗಿ ಮತ್ತೊಂದು ಸೇತುವೆ ಮಂಜೂರಾತಿಯಾಗಿದ್ದು, ಶೀಘ್ರದಲ್ಲಿಯೇ ಟೆಂಡರ್ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದರು.
      ನಗರ ಹಾಗು ಗ್ರಾಮಾಂತರ ಭಾಗಗಳಲ್ಲಿ ಮಳೆಯಿಂದ ಉಂಟಾದ ಹಾನಿಗೆ ಸರ್ಕಾರ ನಿಗದಿಪಡಿಸಿರುವ ಪರಿಹಾರ ಧನವನ್ನು ಸಂತ್ರಸ್ಥರಿಗೆ ತಕ್ಷಣ ನೀಡಬೇಕು. ಈ ನಿಟ್ಟಿನಲ್ಲಿ ತಹಸೀಲ್ದಾರ್‌ರವರು ಹೆಚ್ಚಿನ ಗಮನ ನೀಡಬೇಕು. ಅಲ್ಲದೆ ಮಳೆಯಿಂದ ಉಂಟಾಗುವ ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕೆಂದರು.

ಭದ್ರಾ ನದಿಯಲ್ಲಿ ಪ್ರವಾಹ : ೧೫೦ಕ್ಕೂ ಹೆಚ್ಚು ಮನೆಗಳು ಜಲಾವೃತ

ಭದ್ರಾವತಿ ನಗರಸಭೆ ೨ನೇ ವಾರ್ಡಿನ ಕವಲಗುಂದಿ ಗ್ರಾಮದಲ್ಲಿ ಭದ್ರಾ ನದಿ ಪ್ರವಾಹದಿಂದಾಗಿ ಸುಮಾರು ೩೨ ಮನೆಗಳು ಸಂಪೂರ್ಣವಾಗಿ ಜಲಾವೃತಗೊಂಡಿರುವುದು.
    ಭದ್ರಾವತಿ, ಜು. ೧೫: ಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ನದಿಗೆ ಬಿಟ್ಟಿರುವ ಹಿನ್ನಲೆಯಲ್ಲಿ ಪ್ರತಿ ವರ್ಷದಂತೆ ಈ ಬಾರಿ ನಗರ ವ್ಯಾಪ್ತಿಯಲ್ಲಿ ಪ್ರವಾಹ ಉಂಟಾಗಿದ್ದು, ನದಿ ತೀರದ ತಗ್ಗು ಪ್ರದೇಶದಲ್ಲಿನ ೧೫೦ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿವೆ. ಪ್ರವಾಹ ನಿಯಂತ್ರಿಸುವಲ್ಲಿ ನಗರಸಭೆ, ತಾಲೂಕು ಪಂಚಾಯಿತಿ ಮತ್ತು ತಾಲೂಕು ಆಡಳಿತಗಳು ಕಾರ್ಯಾಚರಣೆಯಲ್ಲಿ ತೊಡಗಿವೆ.
      ಗುರುವಾರ ಮಧ್ಯಾಹ್ನ ಜಲಾಶಯದಿಂದ ೪ ಕ್ರೆಸ್ಟ್ ಗೇಟ್‌ಗಳ ಮೂಲಕ ನದಿಗೆ ನೀರು ಬಿಡಲಾಗಿತ್ತು. ಸಂಜೆ ೬ ಗಂಟೆ ವೇಳೆಗೆ ಪ್ರವಾಹ ಪರಿಸ್ಥಿತಿ ಕಾಣಿಸಿಕೊಂಡಿದ್ದು, ಹಳೇಸೇತುವೆ ಸಮೀಪದಲ್ಲಿರುವ ಸಂಗಮೇಶ್ವರ ದೇವಸ್ಥಾನ ಸಂಪೂರ್ಣವಾಗಿ ಮುಳುಗಡೆಗೊಂಡಿತು. ರಾತ್ರಿ ೮ ಗಂಟೆ ವೇಳೆಗೆ ಹೊಸಸೇತುವೆ ಸಹ ಮುಳುಗಡೆಗೊಂಡ ಹಿನ್ನಲೆಯಲ್ಲಿ ಸೇತುವೆ ಎರಡು ಬದಿಯಲ್ಲೂ ಬ್ಯಾರಿಗೇಡ್‌ಗಳನ್ನು ಅಳವಡಿಸಿ ಸಂಚಾರ ಸ್ಥಗಿತಗೊಳಿಸಲಾಗಿತ್ತು.


ಭದ್ರಾವತಿ ನಗರಸಭೆ ೩ನೇ ವಾರ್ಡಿನ ಅಂಬೇಡ್ಕರ್ ನಗರದಲ್ಲಿ ಭದ್ರಾ ನದಿ ಪ್ರವಾದಿಂದಾಗಿ ಸಂತ್ರಸ್ಥರಾದವರು ಮಕ್ಕಳುಮರಿಗಳೊಂದಿಗೆ ಕಾಳಜಿ ಕೇಂದ್ರಗಳಿಗೆ ತೆರಳುತ್ತಿರುವುದು.

      ತಗ್ಗು ಪ್ರದೇಶದಲ್ಲಿನ ೧೫೦ಕ್ಕೂ ಹೆಚ್ಚು ಮನೆಗಳಿಗೆ ನೀರು:
      ರಾತ್ರಿ ೧೦ ಗಂಟೆಯ ನಂತರ ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗಿದ್ದು, ಇದರಿಂದಾಗಿ ನಗರಸಭೆ ವ್ಯಾಪ್ತಿಯ ಸುಣ್ಣದಹಳ್ಳಿಯಲ್ಲಿ ಸುಮಾರು ೨, ಗುಂಡೂರಾವ್ ಶೆಡ್‌ನಲ್ಲಿ ಸುಮಾರು ೨೦, ಎಕಿನ್ಸಾ ಕಾಲೋನಿಯಲ್ಲಿ ಸುಮಾರು ೪೦, ಅಂಡರ್ ಬ್ರಿಡ್ಜ್ ಬಳಿ ಅಂಬೇಡ್ಕರ್ ನಗರದಲ್ಲಿ ಸುಮಾರು ೬೦ ಹಾಗು ಕವಲಗುಂದಿ ಎ.ಕೆ ಕಾಲೋನಿಯಲ್ಲಿ ಸುಮಾರು ೩೨ ಮನೆಗಳು ಸೇರಿದಂತೆ ಒಟ್ಟು ೧೫೦ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿವೆ. ರಾತ್ರಿಯೇ ಕಾರ್ಯಾಚರಣೆಗೆ ಮುಂದಾದ ನಗರಸಭೆ, ತಾಲೂಕು ಪಂಚಾಯಿತಿ ಮತ್ತು ತಾಲೂಕು ಆಡಳಿತ ಸಿಬ್ಬಂದಿಗಳು ಪ್ರವಾಹ ಪೀಡಿತ ಸಂತ್ರಸ್ಥರಿಗೆ ಕಾಳಜಿ ಕೇಂದ್ರಗಳಲ್ಲಿ ತಾತ್ಕಾಲಿಕ ವ್ಯವಸ್ಥೆ ಕಲ್ಪಿಸಿಕೊಡುವಲ್ಲಿ ಯಶಸ್ವಿಯಾದರು.
       ೩ ಕಾಳಜಿ ಕೇಂದ್ರ, ೨೫೦ಕ್ಕೂ ಹೆಚ್ಚು ಮಂದಿ ಆಶ್ರಯ :
      ಸದ್ಯದ ಪರಿಸ್ಥಿತಿಯಲ್ಲಿ ನಗರಸಭೆ ವ್ಯಾಪ್ತಿಯ ತರೀಕೆರೆ ರಸ್ತೆಯಲ್ಲಿರುವ ವಳ್ಳುವರ್ ಕಲ್ಯಾಣ ಮಂಟ, ಹಾಲಪ್ಪ ವೃತ್ತದಲ್ಲಿರುವ ಭದ್ರಾ ಪ್ರೌಢಶಾಲೆ ಮತ್ತು ಅಪ್ಪರ್ ಹುತ್ತಾದಲ್ಲಿರುವ ಒಕ್ಕಲಿಗರ ಸಮುದಾಯ ಭವನದಲ್ಲಿ ಒಟ್ಟು ೩ ಕಡೆ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ. ಅಗತ್ಯ ಬಿದ್ದಲ್ಲಿ ಇನ್ನೂ ಹೆಚ್ಚಿನ ಕಾಳಜಿ ಕೇಂದ್ರಗಳನ್ನು ತೆರೆಯಲು ತೀರ್ಮಾನಿಸಲಾಗಿದೆ.
      ವಯೋವೃದ್ಧರು, ಮಹಿಳೆಯರು, ಮಕ್ಕಳು ಸೇರಿದಂತೆ ಸುಮಾರು ೨೫೦ಕ್ಕೂ ಹೆಚ್ಚು ಮಂದಿ ತಾತ್ಕಾಲಿಕ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದುಕೊಂಡಿದ್ದು, ಈ ನಡುವೆ ೩ ಕಾಳಜಿ ಕೇಂದ್ರಗಳಲ್ಲೂ ನವಜಾತ ಶಿಶುಗಳೊಂದಿಗೆ ಬಾಣಂತಿ ಮಹಿಳೆಯರಿದ್ದು, ಅವರ ಪರದಾಟ ಹೇಳತಿಹದು. ಊಟದ ವ್ಯವಸ್ಥೆ ಕಲ್ಪಿಸಲಾಗಿದ್ದು, ಜೊತೆಗೆ ಆರೋಗ್ಯ ಸಿಬ್ಬಂದಿಗಳನ್ನು ನಿಯೋಜನೆಗೊಳಿಸಲಾಗಿದೆ. ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಗುರುವಾರ ರಾತ್ರಿಯೇ ನಗರಕ್ಕೆ ಭೇಟಿ ಪರಿಶೀಲನೆ ನಡೆಸಿದ್ದು, ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದುಕೊಂಡಿರುವವರ ಸಂಕಷ್ಟಗಳನ್ನು ಆಲಿಸಿದರು.


ಭದ್ರಾ ನದಿ ಪ್ರವಾಹದಿಂದಾಗಿ ಸಂತ್ರಸ್ಥರಾಗಿರುವ ಕವಲಗುಂದಿ ಎ.ಕೆ ಕಾಲೋನಿ ನಿವಾಸಿಗಳು ಅಪ್ಪರ್ ಹುತ್ತಾದಲ್ಲಿರುವ ಒಕ್ಕಲಿಗರ ಸಮುದಾಯ ಭವನದಲ್ಲಿ ತೆರೆಯಲಾಗಿರುವ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿರುವುದು.

      ಶಾಸಕ ಬಿ.ಕೆ ಸಂಗಮೇಶ್ವರ್ ಪರಿಶೀಲನೆ :
      ಶಾಸಕ ಬಿ.ಕೆ ಸಂಗಮೇಶ್ವರ್ ಶುಕ್ರವಾರ ಬೆಳಿಗ್ಗೆ ಪ್ರವಾಹ ಪೀಡಿತ ಪ್ರದೇಶಗಳಾದ ಸುಣ್ಣದಹಳ್ಳಿ, ಗುಂಡೂರಾವ್ ಶೆಡ್, ಎಕಿನ್ಸಾ ಕಾಲೋನಿ, ಅಂಬೇಡ್ಕರ್ ನಗರ ಮತ್ತು ಕಲವಗುಂದಿ ಪ್ರದೇಶಗಳಿಗೆ ಭೇಟಿ ಪರಿಶೀಲನೆ ನಡೆಸಿದರು. ಸಂತ್ರಸ್ಥರ ಸಂಕಷ್ಟಗಳನ್ನು ಆಲಿಸಿ ಮುಂದಿನ ದಿನಗಳಲ್ಲಿ ಯಾವುದೇ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದರು. ಅಲ್ಲದೆ ಸಂತ್ರಸ್ಥರಿಗೆ ಕಾಳಜಿ ಕೇಂದ್ರಗಳಲ್ಲಿ ಅಗತ್ಯವಿರುವ ಮೂಲ ಸೌಲಭ್ಯಗಳನ್ನು ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
      ನಗರಸಭೆ ಅಧ್ಯಕ್ಷೆ ಗೀತಾರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಪೌರಾಯುಕ್ತ ಮನುಕುಮಾರ್, ತಹಸೀಲ್ದಾರ್ ಆರ್. ಪ್ರದೀಪ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್ ಸೇರಿದಂತೆ ನಗರಸಭೆ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
      ಶಾಸಕರ ವಿರುದ್ಧ ಸಂತ್ರಸ್ಥರ ಆಕ್ರೋಶ :
      ಶಾಸಕ ಬಿ.ಕೆ ಸಂಗಮೇಶ್ವರ್ ನಗರದ ಬಿ.ಎಚ್ ರಸ್ತೆ ಅಂಡರ್‌ಬ್ರಿಡ್ಜ್ ಬಳಿ ಪ್ರವಾಹ ಪೀಡಿತ ಅಂಬೇಡ್ಕರ್ ನಗರಕ್ಕೆ ಭೇಟಿ ನೀಡಿದ ಪ್ರದೇಶದಲ್ಲಿ ಅಲ್ಲಿನ ನಿವಾಸಿಗಳು, ಸಂತ್ರಸ್ಥರು ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಭದ್ರಾ ನದಿಗೆ ತಡೆಗೋಡೆ ನಿರ್ಮಿಸುವಂತೆ ಹಲವಾರು ವರ್ಷಗಳಿಂದ ಒತ್ತಾಯಿಸಿಕೊಂಡು ಬರಲಾಗುತ್ತಿದೆ. ಆದರೂ ಸಹ ಇದುವರೆಗೂ ಯಾರು ಗಮನ ಹರಿಸಿಲ್ಲ. ಪ್ರತಿ ವರ್ಷ ಪ್ರವಾಹಕ್ಕೆ ಒಳಗಾಗುವುದು ತಪ್ಪಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.


ಭದ್ರಾ ನದಿ ಪ್ರವಾಹದಿಂದಾಗಿ ಹೊಸ ಸೇತುವೆ ಮುಳುಗಡೆಗೊಂಡಿರುವುದನ್ನು ವೀಕ್ಷಿಸಲು ಆಗಮಿಸಿರುವ ಜನರ ದಂಡು.
      ಮುಳುಗಡೆಗೊಂಡ ಹೊಸ ಸೇತುವೆ ವೀಕ್ಷಿಸಲು ಜನರ ದಂಡು :
      ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಸಮೀಪದಲ್ಲಿರುವ ಹೊಸಸೇತುವೆ ಗುರುವಾರ ರಾತ್ರಿಯಿಂದ ಮುಳುಗಡೆಗೊಂಡಿದ್ದು, ಸೇತುವೆಯನ್ನು ವೀಕ್ಷಿಸಲು ನಗರದ ವಿವಿಧೆಡೆಗಳಿಂದ ಜನರ ದಂಡು ಆಗಮಿಸುತ್ತಿದೆ. ಕೆಲವರು ಮೊಬೈಲ್‌ನಲ್ಲಿ ವಿಡಿಯೋ ರೆಕಾರ್ಡ್ ಮಾಡಿಕೊಳ್ಳುವುದು ಕಂಡು ಬಂದರೇ, ಮತ್ತೆ ಕೆಲವರು ಸೆಲ್ಫಿ ತೆಗೆದುಕೊಳ್ಳುವುದು ಕಂಡು ಬಂದಿತು.
      ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುವಂತಾಗಿದ್ದು, ಪ್ರವಾಹ ಕ್ಷಣ ಕ್ಷಣಕ್ಕೆ ಹೆಚ್ಚಾಗುತ್ತಿದೆ. ಇದರಿಂದಾಗಿ ತಗ್ಗು ಪ್ರದೇಶದಲ್ಲಿನ ನಿವಾಸಿಗಳಿಗೆ ಮತ್ತಷ್ಟು ಆತಂಕ ಹೆಚ್ಚಾಗಿದೆ. ಸೇತುವೆ ಎರಡು ಬದಿಯಲ್ಲೂ ಬ್ಯಾರಿಗೇಡ್‌ಗಳನ್ನು ಅಳವಡಿಸಲಾಗಿದೆ.


ಭದ್ರಾ ನದಿ ಪ್ರವಾಹದಿಂದಾಗಿ ಹೊಸ ಸೇತುವೆ ಸಂಪೂರ್ಣವಾಗಿ ಮುಳುಗಡೆಗೊಂಡಿರುವ ಹಿನ್ನಲೆಯಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಈ ಹಿನ್ನಲೆಯಲ್ಲಿ ನಗರದಲ್ಲಿ ವಾಹನ ದಟ್ಟಣೆ ಅಧಿಕವಾಗಿರುವುದು.
      ವಾಹನ ದಟ್ಟಣೆ :
      ಪ್ರವಾಹದಿಂದ ಹೊಸಸೇತುವೆ ಮುಳುಗಡೆಗೊಂಡಿರುವ ಹಿನ್ನಲೆಯಲ್ಲಿ ನಗರದಲ್ಲಿ ವಾಹನ ದಟ್ಟಣೆ ಅಧಿಕವಾಗಿದ್ದು, ಎಲ್ಲಾ ವಾಹನಗಳು ಹಳೇ ಸೇತುವೆ ಮೇಲೆ ಸಂಚರಿಸುವಂತಾಗಿದೆ. ಬಿ.ಎಚ್ ರಸ್ತೆ ಹಾಗು ಸಿ.ಎನ್ ರಸ್ತೆ ಗಳಲ್ಲಿ ವಾಹನ ದಟ್ಟಣೆ ಅಧಿಕವಾಗಿದೆ. ಕಳೆದ ಸುಮಾರು ೪ ವರ್ಷಗಳಿಂದ ಹಳೇ ಸೇತುವೆ ಪಕ್ಕದಲ್ಲಿ ಹೊಸ ಸೇತುವೆ ನಿರ್ಮಾಣಗೊಳ್ಳುತ್ತಿದ್ದು, ಸೇತುವೆ ಕಾಮಗಾರಿ ಶೇ.೮೦ರಷ್ಟು ಮುಕ್ತಾಯಗೊಂಡಿದೆ. ಈ ಸೇತುವೆ ಪೂರ್ಣಗೊಂಡಲ್ಲಿ ಸಂಚಾರ ದಟ್ಟಣೆ ಸ್ವಲ್ಪಮಟ್ಟಿಗೆ ಕಡಿಮೆಯಾಗಲಿದೆ.      

ವಿಐಎಸ್‌ಎಲ್ ಬಂಡವಾಳ ಹಿಂಪಡೆಯುವಿಕೆ ಪ್ರಕ್ರಿಯೆಯಿಂದ ಹೊರಗೆ : ಆಶಾದಾಯಕ ಬೆಳವಣಿಗೆ

 ೩೦೦ ಕೋ. ರು. ಬಂಡವಾಳ ತೊಡಗಿಸಲು ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್ ಮನವಿ


ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕರ್ಖಾನೆ ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್ ಮತ್ತು ಪದಾಧಿಕಾರಿಗಳು, ನಿರ್ದೇಶಕರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಭದ್ರಾವತಿ, ಜು. ೧೫: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನು ಬಂಡವಾಳ ಹಿಂಪಡೆಯುವಿಕೆ ಪ್ರಕ್ರಿಯೆ ಮೂಲಕ ಖಾಸಗೀಕರಣಗೊಳಿಸುವ ಕೇಂದ್ರ ಸರ್ಕಾರದ ಪ್ರಯತ್ನ ವಿಫಲವಾಗಿದ್ದು, ಇದೀಗ ಕಾರ್ಖಾನೆಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸುವ ಅಗತ್ಯವಿದೆ. ಪ್ರಸ್ತುತ ಕಾರ್ಖಾನೆಯ ಉತ್ಪಾದನೆಯಲ್ಲಿ ಬೆಳವಣಿಗೆ ಸಾಧಿಸಲು ಉಕ್ಕು ಪ್ರಾಧಿಕಾರ ಕೇವಲ ೩೦೦ ಕೋ.ರು. ಬಂಡವಾಳ ತೊಡಗಿಸಲು ಮುಂದಾಗಬೇಕೆಂದು ಕಾರ್ಖಾನೆಯ ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್ ಮನವಿ ಮಾಡಿದರು.
      ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇದೀಗ ಕಾರ್ಖಾನೆ ಆಶಾದಾಯಕ ದಿನಗಳನ್ನು ಎದುರು ನೋಡುವಂತಾಗಿದೆ. ಕೇಂದ್ರ ಸರ್ಕಾರ ೨೦೧೬ರಲ್ಲಿ ಕಾರ್ಖಾನೆಯನ್ನು ಬಂಡವಾಳ ಹಿಂಪಡೆಯುವಿಕೆ ಪ್ರಕ್ರಿಯೆ ಮೂಲಕ ಖಾಸಗೀಕರಣಗೊಳಿಸುವ ಪ್ರಯತ್ನಕ್ಕೆ ಮುಂದಾಯಿತು. ಆದರೆ ಯಾವುದೇ ಖಾಸಗಿ ಮಾಲೀಕರು ಕಾರ್ಖಾನೆಯನ್ನು ಕೊಂಡುಕೊಳ್ಳಲು ಮುಂದೆ ಬರಲಿಲ್ಲ. ಸರ್ಕಾರದ ಪ್ರಯತ್ನ ವಿಫಲವಾಯಿತು. ಇದೀಗ ಕಾರ್ಖಾನೆಯನ್ನು ಬಂಡವಾಳ ಹಿಂಪಡೆಯುವಿಕೆ ಪ್ರಕ್ರಿಯೆಯಿಂದ ಹೊರಗಿಡಲು ಸಂಬಂಧಪಟ್ಟ ಪ್ರಾಧಿಕಾರ ಸೂಚಿಸಿದ್ದು, ಇದು ಕಾರ್ಖಾನೆಯ ಆಶಾದಾಯಕ ಬೆಳೆವಣಿಗೆಯಾಗಿದೆ. ನಮ್ಮೆಲ್ಲರ ಹೋರಾಟ ಯಶಸ್ವಿಯಾದಂತಾಗಿದೆ ಎಂದರು.
      ಪ್ರಸ್ತುತ ಕಾರ್ಖಾನೆಯನ್ನು ಯಾವ ರೀತಿ ಅಭಿವೃದ್ಧಿಪಡಿಸಬೇಕೆಂಬುದರ ಬಗ್ಗೆ ಹೆಚ್ಚಿನ ಗಮನ ಹರಿಸಬೇಕಾಗಿದೆ. ಕೇಂದ್ರ ಸರ್ಕಾರ ೨೦೧೬ರಲ್ಲಿ ಬಂಡವಾಳ ಹಿಂಪಡೆಯುವಿಕೆ ಪ್ರಕ್ರಿಯೆ ಮೂಲಕ ಖಾಸಗೀಕರಣಗೊಳಿಸುವ ಪ್ರಯತ್ನಕ್ಕೆ ಮುಂದಾದ ಹಿನ್ನಲೆಯಲ್ಲಿ ಪ್ರತಿ ವರ್ಷ ೧೫೦ ಕೋ. ರು. ನಷ್ಟ ಅನುಭವಿಸುವಂತಾಯಿತು. ನಂತರದ ದಿನಗಳಲ್ಲಿ ಕಾರ್ಖಾನೆಯಲ್ಲಿ ಹೆಚ್ಚಿನ ಶ್ರಮವಹಿಸಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಲಾಭದ ದಾರಿಯಲ್ಲಿ ಸಾಗುತ್ತಿದ್ದು, ನಷ್ಟದ ಪ್ರಮಾಣ ೩೦ ರಿಂದ ೪೫ ಕೋ.ರು. ಗಳಿಗೆ ಕಡಿಮೆಗೊಳಿಸಲಾಗಿದೆ. ನಷ್ಟದಲ್ಲೂ ಲಾಭ ಕಂಡುಕೊಳ್ಳಲಾಗುತ್ತಿದೆ. ಉಕ್ಕು ಪ್ರಾಧಿಕಾರ ೨೦೨೧-೨೨ನೇ ಸಾಲಿನಲ್ಲಿ ೧೨,೦೧೫ ಕೋ. ರು. ಲಾಭ ಗಳಿಸಿದ್ದು, ಮುಂದಿನ ದಿನಗಳಲ್ಲಿ ದೆಶದಲ್ಲಿ ಉಕ್ಕು ವಲಯವನ್ನು ಮತ್ತಷ್ಟು ವಿಸ್ತರಿಸಬೇಕೆಂಬ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ. ಇದಕ್ಕೆ ಪೂರಕವೆಂಬಂತೆ ಉಕ್ಕು ಪ್ರಾಧಿಕಾರ ೧.೫ ಲಕ್ಷ ಕೋಟಿ ಬಂಡವಾಳ ತೊಡಗಿಸಲು ಮುಂದಾಗಿದೆ. ಈ ಬಂಡವಾಳದಲ್ಲಿ ವಿಐಎಸ್‌ಎಲ್ ಕಾರ್ಖಾನೆಗೆ ಕೇವಲ ೩೦೦ ಕೋ.ರು ತೊಡಗಿಸಿದರೆ ಸಾಕು ಕಾರ್ಖಾನೆ ಬೆಳವಣಿಗೆ ಹೊಂದಲು ಸಾಧ್ಯವಾಗುತ್ತದೆ. ಈಗಾಗಲೇ ಈ ಸಂಬಂಧ ರೂಪುರೇಷೆಗಳನ್ನು ಸಿದ್ದಪಡಿಸಲಾಗಿದೆ. ಈ ಕುರಿತು ಸಂಸದ ಬಿ.ವೈ ರಾಘವೇಂದ್ರ ಅವರೊಂದಿಗೆ ಚರ್ಚಿಸಲಾಗಿದೆ. ರಾಜ್ಯದ ಎಲ್ಲಾ ಸಂಸದರು, ಸಚಿವರು, ಕೇಂದ್ರ ಉಕ್ಕು ಸಚಿವರ ಗಮನಕ್ಕೆ ತರಲಾಗಿದೆ ಎಂದರು.
      ರಾಜ್ಯ ಸರ್ಕಾರ ೨೦೧೯ರಲ್ಲಿ ಕಾರ್ಖಾನೆಗೆ ಬಳ್ಳಾರಿ ಜಿಲ್ಲೆ ರಮಣದುರ್ಗದಲ್ಲಿ ೧೫೦ ಎಕರೆ ಕಬ್ಬಿಣದ ಅದಿರಿನ ಗಣಿ ಮಂಜೂರಾತಿ ಮಾಡಿದ್ದು, ಕೇಂದ್ರ ಸರ್ಕಾರ ಕಾರ್ಖಾನೆಯನ್ನು ಖಾಸಗೀಕರಣಗೊಳಿಸಲು ಪ್ರಯತ್ನಿಸಿದ ಹಿನ್ನಲೆಯಲ್ಲಿ ಗಣಿ ಮಂಜೂರಾತಿ ಪ್ರಕ್ರಿಯೆಯಲ್ಲಿ ಸಮಸ್ಯೆ ಎದುರಾಯಿತು. ಈಗಾಗಲೆ ಈ ಅದಿರು ಗಣಿ ಅಭಿವೃದ್ಧಿಗೆ ೫ ಕೋ.ರು. ಬಂಡವಾಳವನ್ನು ಬಜೆಟ್‌ನಲ್ಲಿ ಮೀಸಲಿಡಲಾಗಿದೆ. ಈ ಅನುದಾನದಲ್ಲಿ ೪ ಕೋ. ರು. ಬಳಸಿಕೊಂಡು ಎಲ್ಲಾ ಇಲಾಖೆಗಳಿಂದ ಅನುಮತಿ ಪಡೆದು ಮುಂದಿನ ಎರಡೂವರೆ ವರ್ಷದಲ್ಲಿ ಅದಿರು ಉತ್ಪಾದನೆ ಕೈಗೊಳ್ಳುವ ನಿಟ್ಟಿನಲ್ಲಿ ಗಮನ ಹರಿಸಬೇಕಾಗಿದೆ. ಅದಿರು ಕಾರ್ಖಾನೆಗೆ ಲಭ್ಯವಾದ ನಂತರ ಅನುಸರಿಸಬೇಕಾದ ಉತ್ಪಾದನಾ ಕ್ರಮಗಳ ಕುರಿತು ಈಗಾಗಲೇ ರೂಪುರೇಷೆ ಸಹ ಸಿದ್ದಪಡಿಸಲಾಗಿದೆ. ಈ ಎಲ್ಲಾ ಪ್ರಕ್ರಿಯೆಗಳು ಕಾರ್ಖಾನೆ ಆಶಾದಾಯಕ ದಿನಗಳನ್ನು ಎದುರು ನೋಡುವ ಬೆಳವಣಿಗೆಯನ್ನು ಉಂಟುಮಾಡಿವೆ ಎಂದು ಸಂತಸ ವ್ಯಕ್ತಪಡಿಸಿದರು.
      ಪತ್ರಿಕಾಗೋಷ್ಠಿಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಯು.ಎ ಬಸಂತ್‌ಕುಮಾರ್, ಕಾರ್ಯದರ್ಶಿ ಕೆ.ಆರ್ ಮನು, ಖಜಾಂಚಿ ಎಸ್. ಮೋಹನ್, ನಿರ್ದೇಶಕರಾದ ಕುಮಾರಸ್ವಾಮಿ, ಯೋಗೇಶ್, ಸುನಿಲ್‌ಕುಮಾರ್, ರಾಜು, ಮಂಜುನಾಥ್, ಮನೋಹರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.





Thursday, July 14, 2022

ಹೊಸಸೇತುವೆ ಸಂಪೂರ್ಣ ಮುಳುಗಡೆ : ಸಂಚಾರ ಸ್ಥಗಿತ


ಭದ್ರಾ ಜಲಾಶಯದಿಂದ ಗುರುವಾರ ಮಧ್ಯಾಹ್ನ ನದಿಗೆ ನೀರು ಬಿಟ್ಟ ಹಿನ್ನಲೆಯಲ್ಲಿ ಭದ್ರಾವತಿ ನಗರದ ಹೃದಯ ಭಾಗದಲ್ಲಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪದ ಹೊಸಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿದ್ದು, ಸೇತುವೆ ಮೇಲಿನ ಸಂಚಾರ ಸ್ಥಗಿತಗೊಳಿಸಲಾಗಿದೆ.
    ಭದ್ರಾವತಿ, ಜು. ೧೪: ಭದ್ರಾ ಜಲಾಶಯದಿಂದ ಗುರುವಾರ ಮಧ್ಯಾಹ್ನ ನದಿಗೆ ನೀರು ಬಿಟ್ಟ ಹಿನ್ನಲೆಯಲ್ಲಿ ನಗರದ ಹೃದಯ ಭಾಗದಲ್ಲಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪದ ಹೊಸಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿದ್ದು, ಸೇತುವೆ ಮೇಲಿನ ಸಂಚಾರ ಸ್ಥಗಿತಗೊಳಿಸಲಾಗಿದೆ.
      ಜಲಾಶಯದ ವ್ಯಾಪ್ತಿಯಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಈ ಬಾರಿ ಜಲಾಶಯ ಬಹುಬೇಗನೆ ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ನದಿಗೆ ಬಿಡಲಾಗುತ್ತಿದೆ. ನೀರು ನಗರ ಪ್ರವೇಶಿಸುತ್ತಿದ್ದಂತೆ ಹಂತ ಹಂತವಾಗಿ ಏರಿಕೆ ಕಂಡು ಬರುತ್ತಿದೆ. ರಾತ್ರಿ ಸುಮಾರು ೮.೩೦ರ ವೇಳೆಗೆ ಹೊಸಸೇತುವೆ ಸಂಪೂರ್ಣವಾಗಿ ಮುಳುಗಡೆಗೊಂಡಿದ್ದು, ತಕ್ಷಣ ಸೇತುವೆ ಮೇಲಿನ ಸಂಚಾರ ಸ್ಥಗಿತಗೊಳಿಸಿ ಎರಡು ಕಡೆ ಬ್ಯಾರಿಗೇಡ್‌ಗಳನ್ನು ಅಳವಡಿಸಲಾಗಿದೆ. ಎರಡು ಬದಿ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆಗೊಳಿಸಲಾಗಿದೆ.
      ಹೊಸಸೇತುವೆ ಮುಳುಗಡೆಗೊಳ್ಳುವ ಒಂದು ತಾಸು ಮೊದಲೇ ಹಳೇಸೇತುವೆ ಸಮೀಪದಲ್ಲಿರುವ ಸಂಗಮೇಶ್ವರ ದೇವಸ್ಥಾನ ಸಂಪೂರ್ಣವಾಗಿ ಮುಳುಗಡೆಗೊಂಡಿದೆ.
      ಎಲ್ಲಾ ವಾಹನಗಳು ಹಳೇಸೇತುವೆ ಸಂಚರಿಸುತ್ತಿದ್ದು, ಇದರಿಂದಾಗಿ ವಾಹನ ದಟ್ಟಣೆ ಅಧಿಕವಾಗಿದೆ. ನೀರನ ಮಟ್ಟ ಇನ್ನೂ ಏರಿಕೆಯಾಗುವ ಸಾಧ್ಯತೆ ಕಂಡು ಬರುತ್ತಿದ್ದು, ಇದರಿಂದಾಗಿ ತಗ್ಗು ಪ್ರದೇಶದ ನಿವಾಸಿಗಳು ಆತಂಕಕ್ಕೆ ಒಳಗಾಗುವಂತಾಗಿದೆ.

ನಿರಂತರ ಮಳೆ ಹಿನ್ನಲೆಯಲ್ಲಿ ಶಾಸಕರಿಂದ ತುರ್ತು ಸಭೆ : ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಸೂಚನೆ

ಭದ್ರಾವತಿ ಕ್ಷೇತ್ರದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಗುರುವಾರ ಸರ್ಕಾರದ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳ ತುರ್ತು ಸಭೆ ನಡೆಸಿದರು.
    ಭದ್ರಾವತಿ, ಜು. ೧೪: ಕ್ಷೇತ್ರದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಗುರುವಾರ ಸರ್ಕಾರದ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳ ತುರ್ತು ಸಭೆ ನಡೆಸಿದರು.
      ಕಂದಾಯ ಇಲಾಖೆ ಅಧಿಕಾರಿಗಳು ತುರ್ತು ಸಂದರ್ಭದಲ್ಲಿ ತಕ್ಷಣ ಸ್ಪಂದಿಸುವ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ತಕ್ಷಣ ಭೇಟಿ ನೀಡಿ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕೆಂದರು.
      ಮೆಸ್ಕಾಂ ಇಲಾಖೆಯವರು ಗ್ರಾಮಾಂತರ ಮತ್ತು ನಗರ ಪ್ರದೇಶಗಳಲ್ಲಿ ವಿದ್ಯುತ್ ಸಂಬಂಧಿಸಿದ ಸಮಸ್ಯೆಗಳನ್ನು ತುರ್ತಾಗಿ ಬಗೆಹರಿಸುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಬೇಕು. ಲೋಕೋಪಯೋಗಿ ಇಲಾಖೆಯವರು ಮಳೆಯಿಂದ ಹಾನಿಯಾದ ರಸ್ತೆಗಳನ್ನು ತಕ್ಷಣ ದುರಸ್ತಿಪಡಿಸುವ ಮೂಲಕ ಸಂಚಾರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಇದೆ ರೀತಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಅಂಗನವಾಡಿ, ಶಾಲಾ ಕಟ್ಟಡಗಳ ಬಗ್ಗೆ ಹೆಚ್ಚಿನ ನಿಗಾವಹಿಸಬೇಕು. ಮಕ್ಕಳಿಗೆ ಯಾವುದೇ ರೀತಿ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕೆಂದರು. ಉಳಿದಂತೆ ನೀರಾವರಿ, ಕೃಷಿ ಇಲಾಖೆ, ತೋಟಗಾರಿಕೆ ಹಾಗು ನಗರಸಭೆ ಅಧಿಕಾರಿಗಳು ಸಹ ಜಾಗೃತರಾಗಿರುವಂತೆ ಎಚ್ಚರಿಸಿದರು.
      ಸಭೆಯಲ್ಲಿ ತಹಸೀಲ್ದಾರ್ ಆರ್. ಪ್ರದೀಪ್, ತಹಸೀಲ್ದಾರ್ ಗ್ರೇಡ್-೨ ರಂಗಮ್ಮ, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಪೌರಾಯುಕ್ತ ಮನುಕುಮಾರ್, ಸೂಡಾ ಸದಸ್ಯ ವಿ. ಕದಿರೇಶ್, ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್, ತಾಲೂಕು ಬಗರ್‌ಹುಕುಂ ಸಮಿತಿ ಅಧ್ಯಕ್ಷ ನಾಗೇಶ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ಕೃಷಿ ಅಧಿಕಾರಿ ಶಶಿಧರ್, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಕಾಂತರಾಜ್, ಪೊಲೀಸ್ ನಗರ ವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ, ಸಂಚಾರಿ ಪೊಲೀಸ್ ಠಾಣಾಧಿಕಾರಿ ಕವಿತಾ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಭಷ್ಟಾಚಾರ ನಿರ್ಮೂಲನೆಗೆ ಪೊರಕೆ ಹಿಡಿದು ಸ್ವಚ್ಛತೆಗೆ ಮುಂದಾಗಿರುವವರ ಕೈ ಬಲಪಡಿಸಿ : ವಿಜಯಶರ್ಮ

ಭದ್ರಾವತಿ ರಂಗಪ್ಪ ವೃತ್ತದ ಸಮೀಪದಲ್ಲಿರುವ ಮಾರುತಿ ಮೆಡಿಕಲ್ಸ್ ಬಿಲ್ಡಿಂಗ್‌ನಲ್ಲಿ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಾರ್ಟಿ ಕಾರ್ಯಾಲಯ ಉದ್ಘಾಟನೆ ಗುರುವಾರ ನಡೆಯಿತು.  
    ಭದ್ರಾವತಿ, ಜು. ೧೪: ರಾಜ್ಯದಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಪೊರಕೆ ಹಿಡಿದು ಸ್ವಚ್ಛತೆ ಮುಂದಾಗಿರುವವರ ಕೈ ಬಲಪಡಿಸಬೇಕೆಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಉಪಾಧ್ಯಕ್ಷ ವಿಜಯಶರ್ಮ ಮನವಿ ಮಾಡಿದರು.
      ಅವರು ಗುರುವಾರ ನಗರದ ರಂಗಪ್ಪ ವೃತ್ತದ ಸಮೀಪದಲ್ಲಿರುವ ಮಾರುತಿ ಮೆಡಿಕಲ್ಸ್ ಬಿಲ್ಡಿಂಗ್‌ನಲ್ಲಿ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಾರ್ಟಿ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದರು.
      ರಾಜ್ಯದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದ್ದು, ಅದರಲ್ಲೂ ಭದ್ರಾವತಿ ವಿಧಾನಸಭಾ ಕ್ಷೇತ್ರದಲ್ಲಿ ಭ್ರಷ್ಟಾಚಾರದಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ. ಇಂತಹ ಸಂದರ್ಭದಲ್ಲಿ ಸಾಮಾಜಿಕ ಸೇವಾ ಮನೋಭಾವ ಹೊಂದಿರುವ ಮಾರುತಿ ಮೆಡಿಕಲ್ಸ್ ಆನಂದ್‌ರವರು ಪಕ್ಷಕ್ಕೆ ಸೇರ್ಪಡೆಗೊಂಡು ಇಲ್ಲಿನ ರಾಜಕಾರಣಕ್ಕೆ ಹೊಸ ತಿರುವು ನೀಡಲು ಮುಂದಾಗಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದರು.
      ಶಿವಮೊಗ್ಗ-ಚಿಕ್ಕಮಗಳೂರು-ಹಾಸನ ಜಿಲ್ಲಾ ವಲಯ ಉಸ್ತುವಾರಿ ದಿವಾಕರ ಮಾತನಾಡಿ, ಈ ಕ್ಷೇತ್ರದಲ್ಲಿನ ರಾಜಕಾರಣವನ್ನು ಬಹಳ ವರ್ಷಗಳಿಂದ ಗಮನಿಸಿದ್ದೇನೆ. ಒಂದು ಬಾರಿ ಪಕ್ಷದ ಅಭ್ಯರ್ಥಿಗೆ ಅವಕಾಶ ಕೊಡಿ. ನಾವು ಈ ಕ್ಷೇತ್ರದ ಸಂಪೂರ್ಣ ಚಿತ್ರಣ ಬದಲಾಯಿಸುತ್ತೇವೆ. ಎರಡು ಕಾರ್ಖಾನೆಗಳನ್ನು ಅಭಿವೃದ್ಧಿಪಡಿಸುತ್ತೇವೆ. ಭ್ರಷ್ಟಾಚಾರ ಮುಕ್ತ ಕ್ಷೇತ್ರವನ್ನಾಗಿಸುತ್ತೇವೆ ಎಂದರು.
      ಜಂಟಿ ಕಾರ್ಯದರ್ಶಿ ದರ್ಶನ್ ಜೈನ್ ಮಾತನಾಡಿ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಶಾಸಕರ ಕಛೇರಿಯನ್ನೂ ಸಹ ತೆರೆಯುವ ವಿಶ್ವಾಸ ಹೊಂದಿದ್ದೇವೆ.
      ಪಕ್ಷದ ಮುಖಂಡ, ಉದ್ಯಮಿ ಮೆಡಿಕಲ್ ಆನಂದ್ ಮಾತನಾಡಿ, ಒಂದು ಒಳ್ಳೆಯ ಮಾರ್ಗದಲ್ಲಿ ನಡೆಯಬೇಕೆಂಬ ಆಶಯ ಹೊಂದಿದ್ದೇನೆ. ಇದಕ್ಕೆ ಪೂರಕವಾದ ಪಕ್ಷ ಆಮ್ ಆದ್ಮಿ ಪಾರ್ಟಿಯಾಗಿದ್ದು, ಪಕ್ಷದ ತತ್ವ, ಸಿದ್ದಾಂತಗಳಿಗೆ ಬದ್ಧನಾಗಿದ್ದೇನೆ ಎಂದರು.
      ಜಿಲ್ಲಾ ವಲಯ ಉಸ್ತುವಾರಿ ಗೋಪಾಲ, ಜಿಲ್ಲಾ ಮುಖಂಡ ಎಚ್. ರವಿಕುಮಾರ್, ತಾಲೂಕು ಅಧ್ಯಕ್ಷ ಬಿ.ಕೆ ರಮೇಶ್, ತಾಲೂಕು ಪ್ರಮುಖರಾದ ಪರಮೇಶ್ವರಚಾರ್, ಎನ್.ಪಿ ಜೋಸೆಫ್, ಎ. ಮಸ್ತಾನ್, ಅಬ್ದುಲ್ ಖದೀರ್, ಜಾವಿದ್, ರೇಷ್ಮಬಾನು, ಜೋಸೆಫ್, ನಾಗಮಣಿ, ಜ್ಯೋತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


ಭದ್ರಾವತಿ ರಂಗಪ್ಪ ವೃತ್ತದ ಸಮೀಪದಲ್ಲಿರುವ ಮಾರುತಿ ಮೆಡಿಕಲ್ಸ್ ಬಿಲ್ಡಿಂಗ್‌ನಲ್ಲಿ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಾರ್ಟಿ ಕಾರ್ಯಾಲಯ ಉದ್ಘಾಟನೆ ಸಮಾರಂಭದಲ್ಲಿ ಪಕ್ಷದ ಪ್ರಮುಖರು ಸಂಭ್ರಮಿಸಿದರು.  



ಧಾನ್ಯಕ್ಕೆ ಶೇ.5 ಜಿಎಸ್ ಟಿ ವಿರೋಧಿಸಿ 2 ದಿನ ಹೋರಾಟ

 


ಭದ್ರಾವತಿ, ಜು. ೧೪: ಕೇಂದ್ರ ಸರ್ಕಾರ ಧಾನ್ಯಕ್ಕೆ ಶೇ.೫ರಷ್ಟು ಜಿಎಸ್‌ಟಿ ವಿಧಿಸಿರುವುದು ಸರಿಯಲ್ಲ. ತಕ್ಷಣ ಹಿಂಪಡೆದುಕೊಳ್ಳುವಂತೆ ಆಗ್ರಹಿಸಿ ದೇಶಾದ್ಯಂತ ಜು.೧೫ ಮತ್ತು ೧೬ ಎರಡು ದಿನ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ರೈಸ್‌ಮಿಲ್ ಮಾಲೀಕರ ಸಂಘ ಹಾಗು ದವಸ ಧಾನ್ಯ, ಅಕ್ಕಿ ವರ್ತಕರ ಸಂಘದ ಪ್ರಮುಖರು ತಿಳಿಸಿದರು.

      ಗುರುವಾರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶೇ.೫ರಷ್ಟು ಜಿಎಸ್‌ಟಿ ಪರಿಣಾಮ ರೈತರು, ವರ್ತಕರು ಮತ್ತು ಜನಸಾಮಾನ್ಯರು ತೊಂದರೆ ಅನುಭವಿಸುವಂತಾಗಿದೆ. ಈ ಹಿಂದೆ ಧಾನ್ಯಕ್ಕೆ ಯಾವುದೇ ಜಿಎಸ್‌ಟಿ ವಿಧಿಸದ ಕಾರಣ ಅಕ್ಕಿ, ಬೇಳೆಕಾಳು ಸೇರಿದಂತೆ ಜನಸಾಮಾನ್ಯರಿಗೆ ಅತಿ ಅಗತ್ಯವಿರುವ ಧ್ಯಾನ ಕಡಿಮೆ ಬೆಲೆಯಲ್ಲಿ ತಲುಪಿಸಲು ಸಾಧ್ಯವಾಗುತ್ತಿತ್ತು. ಇದೀಗ ಜಿಎಸ್‌ಟಿ ವಿಧಿಸಿರುವುದರಿಂದ ಧಾನ್ಯ ಮಾರಾಟ ಉದ್ಯಮಗಳು, ಧಾನ್ಯ ಉತ್ಪಾದಿಸುವ ರೈತರು ಹಾಗು ಧಾನ್ಯ ಕೊಂಡುಕೊಳ್ಳುವ ಜನ ಸಾಮಾನ್ಯರು ಸಂಕಷ್ಟ ಎದುರಿಸುವಂತಾಗಿದೆ ಎಂದರು.

       ಜಿಎಸ್‌ಟಿ ಪರಿಣಾಮ ಈಗಾಗಲೇ ರೈಸ್‌ಮಿಲ್ ಮಾಲೀಕರು ಆರ್ಥಿಕವಾಗಿ ಸಂಕಷ್ಟಕ್ಕೆ ಒಳಗಾಗಿದ್ದು, ಬಹಳಷ್ಟು ರೈಸ್ ಮಿಲ್‌ಗಳು ಮುಚ್ಚಿ ಹೋಗಿವೆ. ಇದೀಗ ರೈತರು, ಜನಸಾಮಾನ್ಯರು ಸಹ ಸಂಕಷ್ಟಕ್ಕೆ ಒಳಗಾಗುವಂತಾಗಿದೆ. ಈ ಹಿನ್ನಲೆಯಲ್ಲಿ ವರ್ತಕರು ಹಾಗು ಮಿಲ್ ಮಾಲೀಕರು ಸ್ವಯಂ ಬಂದ್ ಮಾಡುವ ಮೂಲಕ ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು.
      ಪ್ರಮುಖರಾದ ರೈಸ್ ಮಾಲೀಕರ ಸಂಘದ ಅಧ್ಯಕ್ಷ ಡಾ. ಎನ್‌ಟಿಸಿ ನಾಗೇಶ್, ಗಿರಿರಾಜ್, ಹರೀಶ್‌ಬಾಬು, ಅಭಯ್‌ರಾಜ್, ಮಹಮದ್ ಖಲೀಲ್, ದಿಲೀಪ್‌ಕುಮಾರ್ ಜೈನ್, ಸಂದೇಶ್ ಮೆಹ್ತಾ, ಭರತ್‌ಕುಮಾರ್, ಶಂಕರ್, ಸತ್ಯನಾರಾಯಣ್, ಧನಂಜಯ ಮತ್ತು ರಂಗನಾಥ್ ಸೇರಿದಂತೆ ಇನ್ನಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.