Tuesday, August 30, 2022

ಚಿನ್ನದ ಸರ ಅಪಹರಣ : 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ

 ಭದ್ರಾವತಿ:  ಮಹಿಳೆಯೊಬ್ಬರ ಚಿನ್ನದ ಸರ ಹಾಗೂ ಬೆಳ್ಳಿ ಕರಡಿಕೆ  ಕಳುವು ಮಾಡಿದ್ದ ವ್ಯಕ್ತಿಗೆ  ಏಳು ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ. 
    ಪೇಪರ್ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ಬಾಳೆ ಮಾರನಹಳ್ಳಿಯಲ್ಲಿ ತಮ್ಮ ಮನೆಯ ಹಿತ್ತಲಿನಲ್ಲಿ ಪಾತ್ರೆ ತೊಳೆಯುತ್ತಿದ್ದ ಮಹಿಳೆಯೊಬ್ಬರ ಚಿನ್ನದ ಸರವನ್ನು ದುಷ್ಕರ್ಮಿಯೊಬ್ಬ ಕದ್ದೊಯ್ದ ಘಟನೆ ನಡೆದಿತ್ತು. 
      ಮಹಿಳೆಯೊಬ್ಬರು ತಮ್ಮ ಮನೆಯ ಹಿತ್ತಲಿನಲ್ಲಿ ಪಾತ್ರೆ ತೊಳೆಯುತ್ತಿದ್ದ ವೇಳೆ ತಿಮ್ಲಾಪುರದ ಜಯ  ಸುನಿಲ್ ಎಂಬ ವ್ಯಕ್ತಿಯು ಹಿಂದಿನಿಂದ ಬಂದು ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಮತ್ತು ಬೆಳ್ಳಿಯ ಕರಡಿಗೆಯನ್ನು ಕಿತ್ತುಕೊಂಡು ಪರಾರಿಯಾಗಿದ್ದನು. 
ದೂರಿನ ಆಧಾರದಲ್ಲಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದ ಅಂದಿನ  ಗ್ರಾಮಾಂತರ ವೃತ್ತ ನಿರೀಕ್ಷಕರಾಗಿದ್ದ  ಕೆ.ಎಂ ಯೋಗೇಶ್ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದಲ್ಲಿ  4ನೇ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಧೀಶರು ಆರೋಪಿಗೆ ಶಿಕ್ಷೆ ವಿಧಿಸಿ ಆದೇಶಿಸಿದೆ.

ಗೌರಿ-ಗಣೇಶ ಹಬ್ಬಕ್ಕೆ ಅತಿ ಸೂಕ್ಷ್ಮ ಗಣೇಶ

ಭದ್ರಾವತಿ ಹಳೇನಗರದ ಸೂಕ್ಷ್ಮ ಕೆತ್ತನೆಗಳ ಕಲಾವಿದ ವರುಣ್ ಆಚಾರ್ ಈ ಬಾರಿ ಗೌರಿ-ಗಣೇಶ ಹಬ್ಬದ ಪ್ರಯುಕ್ತ ಅತಿಸೂಕ್ಷ್ಮ ಗಣೇಶ ಮಾದರಿಯನ್ನು ತಯಾರಿಸಿ ಗಮನ ಸೆಳೆದಿದ್ದಾರೆ.
    ಭದ್ರಾವತಿ, ಆ. ೩೦: ಹಳೇನಗರದ ಸೂಕ್ಷ್ಮ ಕೆತ್ತನೆಗಳ ಕಲಾವಿದ ವರುಣ್ ಆಚಾರ್ ಈ ಬಾರಿ ಗೌರಿ-ಗಣೇಶ ಹಬ್ಬದ ಪ್ರಯುಕ್ತ ಅತಿಸೂಕ್ಷ್ಮ ಗಣೇಶ ಮಾದರಿಯನ್ನು ತಯಾರಿಸಿ ಗಮನ ಸೆಳೆದಿದ್ದಾರೆ.
    ಪೆನ್ಸಿಲ್ ತುದಿಯಲ್ಲಿ ಸುಮಾರು ೦.೫ ಎಂ.ಎಂ ಎತ್ತರದ ಅತಿಸೂಕ್ಷ್ಮವಾದ ಗಣೇಶ ಮಾದರಿಯನ್ನು ಕೇವಲ ೨ ಗಂಟೆ ೨.೫ ನಿಮಿಷದಲ್ಲಿ ತಯಾರಿಸಿದ್ದಾರೆ. ವರುಣ್ ಅವರು ಈಗಾಗಲೇ  ಅಕ್ಕಿ ಕಾಳು, ಸೀಮೆ ಸುಣ್ಣ, ಪೆನ್ಸಿಲ್ ಸೇರಿದಂತೆ ಅತಿ ಸೂಕ್ಷ್ಮ ವಸ್ತುಗಳನ್ನು ಬಳಸಿ ಹಲವಾರು ಸೂಕ್ಷ್ಮ ಕಲಾ ಮಾದರಿಗಳನ್ನು ತಯಾರಿಸಿದ್ದು,  ಇಂಡಿಯಾ ಬುಕ್ ಅಫ್ ರೆಕಾರ್ಡ್ಸ್ ಸಾಧನೆ ಸಹ ಮಾಡಿದ್ದಾರೆ. ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

ಅಕ್ರಮವಾಗಿ ಗಾಂಜಾ ಮಾರಾಟ : ನಾಲ್ಕು ಯುವಕರ ಬಂಧನ

೬೯ ಸಾವಿರ ರು. ಮೌಲ್ಯದ ೨ ಕೆ.ಜಿ ೧೫೦ ಗ್ರಾಂ ಒಣ ಗಾಂಜಾ ವಶ

ಭದ್ರಾವತಿ ಹಳೇನಗರ ಠಾಣೆ ಪೊಲೀಸರು ವಶಪಡಿಸಿಕೊಂಡಿರುವ ಒಣ ಗಾಂಜಾ.
    ಭದ್ರಾವತಿ, ಆ. ೩೦ : ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಯುವಕರನ್ನು ಹಳೇನಗರ ಠಾಣೆ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
    ಅಮೀರ್‌ಜಾನ್ ಕಾಲೋನಿ ನಿವಾಸಿ ಮೊಹಮ್ಮದ್ ಖಾಲಿದ್(೨೧), ಸೀಗೇಬಾಗಿ ನಿವಾಸಿಗಳಾದ ಮೊಹಮ್ಮದ್ ಸಾಹಿಲ್(೧೮) ಮತ್ತು ಸಯ್ಯದ್ ಅರ್ಬಾಜ್(೨೬) ಹಾಗು ಅನ್ವರ್ ಕಾಲೋನಿ ನಿವಾಸಿ ಮೊಹಮ್ಮದ್ ಅರ್ಷನ್(೨೩)ನನ್ನು ಬಂಧಿಸಲಾಗಿದೆ. ಬಂಧಿತರಿಂದ ಒಟ್ಟು ೬೯,೦೦೦ ರು. ಮೌಲ್ಯದ ೨ ಕೆ.ಜಿ ೧೫೦ ಗ್ರಾಂ ತೂಕದ ಒಣ ಗಾಂಜಾ ಹಾಗು ೮೦೦ ರು. ನಗದು, ೩ ಮೊಬೈಲ್ ಮತ್ತು ೨ ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.
    ಹೊಳೆಹೊನ್ನೂರು ರಸ್ತೆಯಿಂದ ಹೊಸಸೀಗೇಬಾಗಿ ಕಡೆಗೆ ಹೋಗುವ ರಸ್ತೆಯ ಸಮೀಪದ ಅಂಗಡಿಯ ಮುಂಭಾಗದ ಕಚ್ಚಾರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಪೊಲೀಸ್ ಉಪಾಧೀಕ್ಷಕ, ನಗರವೃತ್ತ ನಿರೀಕ್ಷಕ ಹಾಗು ಹಳೇನಗರ ಪೊಲೀಸ್ ಠಾಣೆ ಸಿಬ್ಬಂದಿಗಳನ್ನೊಳಗೊಂಡ ತಂಡ ಸೋಮವಾರ ದಾಳಿ ನಡೆಸಿದೆ.

ಯೋಗ ಕ್ಷೇತ್ರದ ಸಾಧನೆಗೆ ಡಿ. ನಾಗರಾಜ್‌ಗೆ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ


ಭದ್ರಾವತಿ ನಗರದ ವಿವೇಕಾನಂದ ಯೋಗ ಶಿಕ್ಷಣ ಟ್ರಸ್ಟ್ ಅಧ್ಯಕ್ಷ, ಅಂತರಾಷ್ಟ್ರೀಯ ಯೋಗಪಟು ಡಿ. ನಾಗರಾಜ್ ಅವರ ಯೋಗ ಕ್ಷೇತ್ರದಲ್ಲಿನ ಸಾಧನೆಯನ್ನು ಗುರುತಿಸಿ ರಾಜ್ಯ ಸರ್ಕಾರ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ ನೀಡಿ ಗೌರವಿಸಿದೆ.
    ಭದ್ರಾವತಿ, ಆ. ೩೦ : ನಗರದ ವಿವೇಕಾನಂದ ಯೋಗ ಶಿಕ್ಷಣ ಟ್ರಸ್ಟ್ ಅಧ್ಯಕ್ಷ, ಅಂತರಾಷ್ಟ್ರೀಯ ಯೋಗಪಟು ಡಿ. ನಾಗರಾಜ್ ಅವರ ಯೋಗ ಕ್ಷೇತ್ರದಲ್ಲಿನ ಸಾಧನೆಯನ್ನು ಗುರುತಿಸಿ ರಾಜ್ಯ ಸರ್ಕಾರ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ ನೀಡಿ ಗೌರವಿಸಿದೆ.
    ಡಿ. ನಾಗರಾಜ್ ಅವರು ಕಳೆದ ೪ ದಶಕಗಳಿಂದ ಯೋಗ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು, ಲಕ್ಷಾಂತರ ಜನರಿಗೆ ಯೋಗ ತರಬೇತಿ ನೀಡುವ ಮೂಲಕ ಅವರು ಸಹ ಯೋಗ ಕ್ಷೇತ್ರದಲ್ಲಿ ಗುರುತಿಸಿಕೊಳ್ಳಲು ಕಾರಣಕರ್ತರಾಗಿದ್ದಾರೆ. ಅಲ್ಲದೆ ಡಿ. ನಾಗರಾಜ್ ಅವರು ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಯೋಗ ಸ್ಪರ್ಧೆಗಳಲ್ಲಿ ಭಾಗವಹಿಸಿ ಹಲವಾರು ಪ್ರಶಸ್ತಿ, ಬಿರುದನ್ನು ತಮ್ಮದಾಗಿಸಿಕೊಂಡಿದ್ದಾರೆ.
    ಯೋಗ ಕ್ಷೇತ್ರದಲ್ಲಿನ ಸಾಧನೆಯನ್ನು ಗುರುತಿಸಿ ರಾಜ್ಯ ಸರ್ಕಾರ ಇವರಿಗೆ ೨೦೨೦ನೇ ಸಾಲಿನ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಯನ್ನು ನೀಡಿದೆ. ರಾಷ್ಟ್ರೀಯ ಕ್ರೀಡಾದಿನವಾದ ಸೋಮವಾರ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಕ್ರೀಡಾ ಮತ್ತು ರೇಷ್ಮೆ ಸಚಿವ ಡಾ. ಕೆ.ಸಿ ನಾರಾಯಣಗೌಡ, ವಿಧಾನಪರಿಷತ್ ಸದಸ್ಯ, ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಗೋವಿಂದರಾಜ್, ಡಾ. ಶಾಲಿನಿರಜನೀಶ್, ಡಾ.ಎಚ್.ಎನ್ ಗೋಪಾಲಕೃಷ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಪ್ರಶಸ್ತಿ ಪುರಸ್ಕೃತರಾದ ಡಿ. ನಾಗರಾಜ್ ಅವರನ್ನು ಕರ್ನಾಟಕ ಯೋಗ ಸಂಸ್ಥೆ ಅಧ್ಯಕ್ಷ ಡಾ. ರಾಮಮೂರ್ತಿ ಹಾಗು ಕಾರ್ಯದರ್ಶಿ ಡಾ. ಡಿ. ಪುಟ್ಟೇಗೌಡ ಮತ್ತು ಯೋಗಪಟುಗಳು, ಕ್ರೀಡಾಭಿಮಾನಿಗಳು ಅಭಿನಂದಿಸಿದ್ದಾರೆ.

ಗೌರಿ-ಗಣೇಶ ಹಬ್ಬ ವಿಶಿಷ್ಟ ಆಚರಣೆ : ಮಹಿಳೆಯರಿಗೆ ಬಾಗಿನ ನೀಡಿ ಸಂಭ್ರಮ

ಭದ್ರಾವತಿ ನಗರಸಭೆ ವಾರ್ಡ್ ನಂ.೨೧ರ ಸದಸ್ಯೆ ವಿಜಯ ಅವರು ಈ ಬಾರಿ ಗೌರಿ-ಗಣೇಶ ಹಬ್ಬವನ್ನು ವಾರ್ಡ್‌ನಲ್ಲಿ ವಿಶಿಷ್ಟವಾಗಿ ಆಚರಿಸುವ ಮೂಲಕ ಸ್ಥಳೀಯರೊಂದಿಗೆ ಸಂಭ್ರಮ ಹಂಚಿಕೊಂಡರು.
    ಭದ್ರಾವತಿ, ಆ. ೩೦: ನಗರಸಭೆ ವಾರ್ಡ್ ನಂ.೨೧ರ ಸದಸ್ಯೆ ವಿಜಯ ಅವರು ಈ ಬಾರಿ ಗೌರಿ-ಗಣೇಶ ಹಬ್ಬವನ್ನು ವಾರ್ಡ್‌ನಲ್ಲಿ ವಿಶಿಷ್ಟವಾಗಿ ಆಚರಿಸುವ ಮೂಲಕ ಸ್ಥಳೀಯರೊಂದಿಗೆ ಸಂಭ್ರಮ ಹಂಚಿಕೊಂಡರು.
    ಹಿಂದೂ ಸಂಪ್ರದಾಯದಲ್ಲಿ ಗೌರಿ-ಗಣೇಶ ಹಬ್ಬ ತನ್ನದೇ ಆದ ಮಹತ್ವ ಪಡೆದುಕೊಂಡಿದ್ದು, ವಾರ್ಡ್‌ನ ಎಲ್ಲಾ ಮಹಿಳೆಯರಿಗೆ ಬಾಗಿನ ನೀಡುವ ಮೂಲಕ ಹಬ್ಬದ ಮಹತ್ವ ತಿಳಿಸಿಕೊಡುವ ಜೊತೆಗೆ ವಾರ್ಡ್ ನಿವಾಸಿಗಳ ನೋವು-ನಲಿವುಗಳಿಗಗೆ ಸದಾ ಕಾಲ ಸ್ಪಂದಿಸುತ್ತೇನೆ ಎಂಬ ಸಂದೇಶವನ್ನು ವಿಜಯ ಅವರು ಹಬ್ಬದ ಸಂಭ್ರಮದ ಮೂಲಕ ತೋರ್ಪಡಿಸಿಕೊಂಡಿದ್ದಾರೆ.
    ಜೆಡಿಎಸ್ ಪಕ್ಷದ ಮುಖಂಡರಾದ ಶಾರದ ಅಪ್ಪಾಜಿ, ಯುವ ಘಟಕದ ಜಿಲ್ಲಾಧ್ಯಕ್ಷ ಮಧುಕುಮಾರ್,  ಮುಖಂಡರಾದ ಡಿ.ಟಿ ಶ್ರೀಧರ್, ಮೈಲಾರಪ್ಪ, ಅಶೋಕ್‌ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

ಕವಲಗುಂದಿ ತಗ್ಗು ಪ್ರದೇಶದ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆ : ಎಲ್ಲಾ ರೀತಿ ಸಹಕಾರ ನೀಡಲು ಬದ್ದ ಬಿ.ವೈ.ಆರ್

ಭದ್ರಾವತಿ ನಗರಸಭೆ ಸಭಾಂಗಣದಲ್ಲಿ ಮಂಗಳವಾರ ನಗರಸಭೆ ವಾರ್ಡ್ ನಂ.೨ರ ವ್ಯಾಪ್ತಿಯ ಭದ್ರಾ ನದಿ ತಗ್ಗು ಪ್ರದೇಶದ ಕವಲಗುಂದಿ ಗ್ರಾಮದ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆ ಕಾರ್ಯಕ್ರಮ ನಡೆಯಿತು.
    ಭದ್ರಾವತಿ, ಆ. ೩೦: ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಕವಲಗುಂದಿ ತಗ್ಗು ಪ್ರದೇಶದ ನಿವಾಸಿಗಳಿಗೆ ಹಕ್ಕು ಪತ್ರ ನೀಡಲಾಗಿದ್ದು, ಅಲ್ಲದೆ ಮನೆ ನಿರ್ಮಿಸಿಕೊಳ್ಳಲು ಅಗತ್ಯವಿರುವ ಎಲ್ಲಾ ರೀತಿಯ ನೆರವು ಸಹ ನೀಡಲಾಗುವುದು ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.
    ಅವರು ಮಂಗಳವಾರ ನಗರಸಭೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ನಗರಸಭೆ ವಾರ್ಡ್ ನಂ.೨ರ ವ್ಯಾಪ್ತಿಯ ಭದ್ರಾ ನದಿ ತಗ್ಗು ಪ್ರದೇಶದ ಕವಲಗುಂದಿ ಗ್ರಾಮದ ನಿವಾಸಿಗಳಿಗೆ ಹಕ್ಕು ಪತ್ರ ವಿತರಿಸಿ ಮಾತನಾಡಿದರು.
    ಇಲ್ಲಿನ ನಿವಾಸಿಗಳು ಪ್ರತಿವರ್ಷ ಭದ್ರಾ ಜಲಾಶಯದಿಂದ ನದಿಗೆ ನೀರು ಹರಿಸಿದ ಸಂದರ್ಭದಲ್ಲಿ ಜಲಾವೃತಗೊಂಡು ಸಂತ್ರಸ್ಥರಾಗುತ್ತಿದ್ದು, ಶಾಶ್ವತ ಪರಿಹಾರ ಕಂಡುಕೊಳ್ಳಬೇಕೆಂಬ ನಿಟ್ಟಿನಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳ ಸಹಕಾರ ಪಡೆದು ಕ್ರಮ ಕೈಗೊಳ್ಳಲಾಗಿದೆ. ಸಂತ್ರಸ್ಥರಿಗೆ ಹಕ್ಕುಪತ್ರ ವಿತರಣೆ ಜೊತೆಗೆ ಮುಂದಿನ ದಿನಗಳಲ್ಲಿ ಮನೆ ನಿರ್ಮಿಸಿಕೊಳ್ಳಲು ಅಥವಾ ಮನೆ ಕಟ್ಟಿಸಿಕೊಡಲು ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು.
    ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಹಲವಾರು ವಸತಿ ಯೋಜನೆಗಳನ್ನು ಜಾರಿಗೆ ತಂದಿವೆ. ಅಲ್ಲದೆ ರಾಜ್ಯ ಸರ್ಕಾರ ಪ್ರಾಕೃತಿಕ ವಿಕೋಪಗಳಿಂದ ಹಾನಿಯಾಗುವ ದಾಖಲೆ ರಹಿತ ಅನಧಿಕೃತ ಮನೆಗಳು ಸೇರಿದಂತೆ ಎಲ್ಲಾ ಮನೆಗಳಿಗೂ ಸಹ ಸೂಕ್ತ ಪರಿಹಾರ ನೀಡಲಿದೆ. ದೇಶದಲ್ಲಿ ಈ ರೀತಿಯ ಪರಿಹಾರ ನೀಡುವ ಏಕೈಕ ರಾಜ್ಯ ಕರ್ನಾಟಕವಾಗಿದೆ. ಇತ್ತೀಚೆಗೆ ಜಿಲ್ಲೆಯಲ್ಲಿ ಹಾಗು ತಾಲೂಕಿನಲ್ಲಿ ಮಳೆಯಿಂದಾಗಿ ಹಾನಿಯಾಗಿರುವ ಮನೆಗಳಿಗೆ ತಕ್ಷಣ ಪರಿಹಾರ ನೀಡಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಬಡಜನರಿಗೆ ತೊಂದರೆ ನೀಡಬಾರದು. ಶಾಸಕರು ಹಾಗು ನಾನು ಬೇರೆ ಬೇರೆ ಪಕ್ಷದಲ್ಲಿದ್ದರೂ ಸಹ ಚುನವಣೆ ಸಂದರ್ಭದಲ್ಲಿ ಮಾತ್ರ ನಮ್ಮ ನಡುವೆ ಭಿನ್ನಾಭಿಪ್ರಾಯಗಳು ಇರುತ್ತವೆ. ಆದರೆ ಜನಪ್ರತಿನಿಧಿಯಾಗಿ ಆಯ್ಕೆಯಾದ ನಂತರ ಇಬ್ಬರು ಸಹ ಅಭಿವೃದ್ಧಿ ವಿಚಾರದಲ್ಲಿ ಒಗ್ಗಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದರು.
    ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ಕ್ಷೇತ್ರದಲ್ಲಿ ಹಾಗು ಜಿಲ್ಲೆಯಲ್ಲಿ ಎಷ್ಟೋ ಜನ ಶಾಸಕರು, ಸಂಸದರು ಬಂದು ಹೋದರೂ ಆದರೆ ಯಾರಿಂದಲೂ ಸಹ ಹಕ್ಕು ಪತ್ರ ನೀಡಲು ಸಾಧ್ಯವಾಗಿರಲಿಲ್ಲ. ಇದೀಗ ನಾನು ಹಾಗು ಸಂಸದರು ಒಗ್ಗಟ್ಟಾಗಿ ಈ ಕೆಲಸ ಯಶಸ್ವಿಯಾಗಿ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಫಲಾನುಭವಿಗಳಿಗೆ ರಾಜೀವ್‌ಗಾಂಧಿ ವಸತಿ ನಿಗಮದಿಂದ ಮನೆ ನಿರ್ಮಾಣಕ್ಕೂ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿ ಸಂಸದರು ಜಿಲ್ಲೆಯ ೬ ವಿಧಾನಸಭಾ ಕ್ಷೇತ್ರಗಳಿಗೆ ನೀಡುವಷ್ಟು ಆದ್ಯತೆಯನ್ನು ನನ್ನ ಕ್ಷೇತ್ರಕ್ಕೂ ಸಹ ನೀಡಬೇಕೆಂದು ಮನವಿ ಮಾಡಿದರು.
    ಕಲವಗುಂದಿ ಒಟ್ಟು ೩೦ ನೆರೆ ಸಂತ್ರಸ್ಥರ ಪೈಕಿ ೨೮ ಮಂದಿಗೆ ರಾಜೀವ್‌ಗಾಂಧಿ ವಸತಿ ನಿಗಮದಿಂದ ನಗರಸಭೆ ಜೇಡಿಕಟ್ಟೆ ಗ್ರಾಮದಲ್ಲಿ ಸುಮಾರು ೧೮ ಎಕರೆ ಪ್ರದೇಶದಲ್ಲಿ ಹಕ್ಕು ಪತ್ರ ನೀಡಲಾಗಿದೆ. ಇಬ್ಬರು ಫಲಾನುಭವಿಗಳಿಗೆ ತಾಂತ್ರಿಕ ಕಾರಣಗಳಿಂದ ಇನ್ನೂ ಹಕ್ಕು ಪತ್ರ ನೀಡಿಲ್ಲ.
    ನಗರಸಭೆ ಪ್ರಭಾರ ಅಧ್ಯಕ್ಷ ಚನ್ನಪ್ಪ ಅಧ್ಯಕ್ಷತೆ ವಹಿಸಿದ್ದರು.  ಉಪವಿಭಾಗಾಧಿಕಾರಿ ದೊಡ್ಡೇಗೌಡರ್, ತಹಸೀಲ್ದಾರ್ ಆರ್. ಪ್ರದೀಪ್, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಪೌರಾಯುಕ್ತ ಮನುಕುಮಾರ್, ಕಂದಾಯಾಧಿಕಾರಿ ರಾಜ್‌ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಭದ್ರಾವತಿ ನಗರಸಭೆ ಸಭಾಂಗಣದಲ್ಲಿ ಮಂಗಳವಾರ ನಗರಸಭೆ ವಾರ್ಡ್ ನಂ.೨ರ ವ್ಯಾಪ್ತಿಯ ಭದ್ರಾ ನದಿ ತಗ್ಗು ಪ್ರದೇಶದ ಕವಲಗುಂದಿ ಗ್ರಾಮದ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರು ಹಾಗು ನಗರಸಭೆ ಸದಸ್ಯರ  ನಡುವೆ ಮಾತಿನ ಚಕಮಕಿ ನಡೆದು ಅಂತಿಮವಾಗಿ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತು.

ಸಂಸದರು-ಶಾಸಕರ ಮುಂದೆಯೇ ಮಾತಿನ ಚಕಮಕಿ : ಅವಾಚ್ಯ ಶಬ್ದ

    ಶಾಸಕ ಬಿ.ಕೆ ಸಂಗಮೇಶ್ವರ್ ತಮ್ಮ ಭಾಷಣದಲ್ಲಿ ಸಂಸದರಿಗೆ ಕ್ಷೇತ್ರದ ಅಭಿವೃದ್ದಿಗೆ ಹೆಚ್ಚಿನ ಗಮನ ಹರಿಸುವಂತೆ ಮನವಿ ಮಾಡಿದ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಹಾಗು ನಗರಸಭೆ ಸದಸ್ಯರ  ನಡುವೆ ಮಾತಿನ ಚಕಮಕಿ ನಡೆದು ಅಂತಿಮವಾಗಿ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತು. ಈ ನಡುವೆ ಸ್ವತಃ ಸಂಸದರು ಸಮಾಧಾನ ಮಾಡಲು ಮುಂದಾದರೂ ಸಹ ಸಾಧ್ಯವಾಗಲಿಲ್ಲ. ಈ ನಡುವೆ ಶಾಸಕರು ಬಿಜೆಪಿ ಮುಖಂಡರೊಬ್ಬರಿಗೆ ಅವಾಚ್ಯ ಶಬ್ದ ಬಳಸಿದ್ದು, ಈ ಸಂದರ್ಭದಲ್ಲಿ ಸಂಸದರು ತಕ್ಷಣ ಸ್ಥಳದಿಂದ ಕಾಲ್ಕಿತ್ತರು. ಶಾಸಕರ ಅವಾಚ್ಯ ಶಬ್ದ ಬಳಕೆಯಿಂದ ಸಂಸದರೇ ಬೆಚ್ಚಿ ಬಿದ್ದ ಘಟನೆ ನಡೆಯಿತು. ಈ ನಡುವೆ ಶಾಸಕರ ವರ್ತನೆಗೆ ಬಿಜೆಪಿ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.



ಸಮಸ್ತ ನಾಗರೀಕರಿಗೆ ಗೌರಿ-ಗಣೇಶ ಹಬ್ಬದ ಶುಭಾಶಯಗಳು