Monday, September 5, 2022

ಖಾತೆ ಪಹಣಿ ಮ್ಯುಟೇಷನ್ ದಾಖಲೆ ವಿಳಂಬ : ಡಿಎಸ್‌ಎಸ್ ಪ್ರತಿಭಟನೆ

ರೈತರಿಗೆ ಸಾಗುವಳಿ ಚೀಟಿ ನೀಡಿದ್ದರೂ ಸಹ ಖಾತೆ ಪಹಣಿ ಮ್ಯುಟೇಷನ್ ದಾಖಲೆ ಮಾಡದೆ ವಿಳಂಬ ನೀತಿ ಮತ್ತು ೯೪ಸಿ ಅಡಿಯ ಫಲಾನುಭವಿಗಳಿಗೆ ಹಕ್ಕು ಪತ್ರ ಮತ್ತು ಹಿಂದೂ ರುದ್ರಭೂಮಿ ಮಂಜೂರಾತಿಗೆ ಆಗ್ರಹಿಸಿ ಸೋಮವಾರ ತಾಲೂಕು ಕಛೇರಿ ಮುಂಭಾಗ ದಲಿತ ಸಂಘರ್ಷ ಸಮಿತಿ(ಸಂಯೋಜಕ) ವತಿಯಿಂದ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ಸೆ. ೫: ರೈತರಿಗೆ ಸಾಗುವಳಿ ಚೀಟಿ ನೀಡಿದ್ದರೂ ಸಹ ಖಾತೆ ಪಹಣಿ ಮ್ಯುಟೇಷನ್ ದಾಖಲೆ ಮಾಡದೆ ವಿಳಂಬ ನೀತಿ ಮತ್ತು ೯೪ಸಿ ಅಡಿಯ ಫಲಾನುಭವಿಗಳಿಗೆ ಹಕ್ಕು ಪತ್ರ ಮತ್ತು ಹಿಂದೂ ರುದ್ರಭೂಮಿ ಮಂಜೂರಾತಿಗೆ ಆಗ್ರಹಿಸಿ ಸೋಮವಾರ ತಾಲೂಕು ಕಛೇರಿ ಮುಂಭಾಗ ದಲಿತ ಸಂಘರ್ಷ ಸಮಿತಿ(ಸಂಯೋಜಕ) ವತಿಯಿಂದ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
    ತಾಲೂಕಿನಲ್ಲಿ ೨೦೨೧-೨೨ನೇ ಸಾಲಿನಲ್ಲಿ ಬಗರ್ ಹುಕುಂ ಜಮೀನು ಅಳತೆ ಮಾಡಿ ಸ್ಕೆಚ್ ಮಾಡಿ ಸಾಗುವಳಿ ಚೀಟಿ ನೀಡಿದ್ದು, ಆದರೆ ಇದುವರೆಗೂ ಖಾತೆ ಪಹಣಿ ಮ್ಯುಟೇಷನ್ ದಾಖಲೆ ಮಾಡದೆ ವಿಳಂಬ ನೀತಿ ಅನುಸರಿಸಲಾಗುತ್ತಿದ್ದು, ತಕ್ಷಣ  ಪರಿಶೀಲಿಸಿ ಖಾತೆ ಪಹಣಿ ಮ್ಯುಟೇಷನ್ ಮಾಡಿಕೊಡುವುದು.
    ತಾಲೂಕಿನಾದ್ಯಂತ ೯೪ಸಿ ಅಡಿಯಲ್ಲಿ ಮನೆಗಳಿಗೆ ಹಕ್ಕು ಪತ್ರ ಕೊಡುವುದಾಗಿ ಸರ್ಕಾರಕ್ಕೆ ಹಣ ಸಂದಾಯ ಮಾಡಿಕೊಂಡು ಇದುವರೆಗೂ ಹಕ್ಕು ಪತ್ರ ನೀಡದೆ ಬಡ ಕುಟುಂಬಗಳಿಗೆ ಅನ್ಯಾಯ ಮಾಡಲಾಗಿದ್ದು, ತಕ್ಷಣ ಅನ್ಯಾಯ ಸರಿಪಡಿಸುವುದು.
    ತಾಲೂಕಿನ ಕೂಡ್ಲಿಗೆರೆ ಹೋಬಳಿ ದೇವರಹಳ್ಳಿ ಅಂಚೆ ಗುಡ್ಡದ ನೇರಳೆಕೆರೆ ಗ್ರಾಮದ ಸರ್ವೆ ನಂ. ೩೪ ಮತ್ತು ೩೫ರಲ್ಲಿ ೨ ಎಕರೆ ಜಮೀನು ಹಿಂದೂ ರುದ್ರಭೂಮಿಗೆ ಮಂಜೂರು ಮಾಡುವಂತೆ ಹಲವಾರು ಬಾರಿ ಅರ್ಜಿ ಸಲ್ಲಿಸಿ ಕೋರಲಾಗಿದೆ. ಆದರೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ತಕ್ಷಣ ಹಿಂದೂ ರುದ್ರಭೂಮಿ ಮಂಜೂರು ಮಾಡಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.
    ಸಮಿತಿ ತಾಲೂಕು ಸಂಯೋಜಕ ಅಣ್ಣಾದೊರೈ, ಸಂಘಟನಾ ಸಂಯೋಜಕ ಬಸವರಾಜು ಮತ್ತು ರಾಜು ಸೇರಿದಂತೆ ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಅಪ್ಪಾಜಿ ಪುಣ್ಯಸ್ಮರಣೆ, ಬಾಗಿನ ಸಮರ್ಪಣೆ, ಜೆಡಿಎಸ್ ಶಕ್ತಿ ಪ್ರದರ್ಶನ

ಶಾರದ ಅಪ್ಪಾಜಿ ಸಮ್ಮುಖದಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ ಸ್ವೀಕಾರ


ಭದ್ರಾವತಿ ಗೋಣಿಬೀಡಿನಲ್ಲಿರುವ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಅವರ ಶಕ್ತಿಧಾಮದಲ್ಲಿ ಅಪ್ಪಾಜಿ ಪ್ರತಿಮೆಗೆ ಶಾರದ ಅಪ್ಪಾಜಿ ಹಾಗು ಕುಟುಂಬ ವರ್ಗದವರು ಅಭಿಮಾನಿಗಳು, ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು.

ಶಾರದ ಅಪ್ಪಾಜಿ ಕುಟುಂಬ ವರ್ಗದವರು ಭದ್ರಾವತಿ ಬಿಆರ್‌ಪಿ ಭದ್ರಾ ಜಲಾಶಯದಲ್ಲಿ ಬಾಗಿನ ಸಮರ್ಪಿಸಿದರು. 

ಭದ್ರಾವತಿಯಲ್ಲಿ ಸೋಮವಾರ ಶಾರದ ಅಪ್ಪಾಜಿ ನೇತೃತ್ವದಲ್ಲಿ ಪಾದಯಾತ್ರೆ ನಡೆಸಲಾಯಿತು.

ಭದ್ರಾವತಿ ನ್ಯೂಟೌನ್ ಉಂಬ್ಳೆಬೈಲು ರಸ್ತೆ, ರೋಟರಿ ಕ್ಲಬ್ ಸಮೀಪದಲ್ಲಿರುವ ಅಪ್ಪಾಜಿ ನಿವಾಸದಿಂದ ಗೋಣಿಬೀಡಿನ ಶಕ್ತಿಧಾಮದವರೆಗೂ ನಂತರ ಶಂಕರಘಟ್ಟ, ಬಿಆರ್‌ಪಿ ವ್ಯಾಪ್ತಿಯಲ್ಲಿ  ಬೈಕ್ ರ‍್ಯಾಲಿ ನಡೆಸಲಾಯಿತು.
    ಭದ್ರಾವತಿ, ಸೆ. ೫ : ಒಂದೆಡೆ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ೨ನೇ ವರ್ಷದ ಪುಣ್ಯಸ್ಮರಣೆ, ಮತ್ತೊಂದೆಡೆ ತುಂಬಿದ ಭದ್ರೆಗೆ ಬಾಗಿನ ಸಮರ್ಪಣೆ, ಇನ್ನೊಂದೆಡೆ ಜೆಡಿಎಸ್ ಪಕ್ಷದ ಶಕ್ತಿ ಪ್ರದರ್ಶನ ಸೋಮವಾರ ತಾಲೂಕಿನ ಗೋಣಿಬೀಡು, ಶಂಕರಘಟ್ಟ, ಬಿಆರ್‌ಪಿ ವ್ಯಾಪ್ತಿಯಲ್ಲಿ  ನಡೆಯಿತು.
    ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಅವರ ೨ನೇ ವರ್ಷದ ಪುಣ್ಯಸ್ಮರಣೆ ಗೋಣಿಬೀಡಿನ ಅವರ ತೋಟದಲ್ಲಿರುವ ಶಕ್ತಿಧಾಮದಲ್ಲಿ ಬೆಳಿಗ್ಗೆ ನಡೆಯಿತು. ಅಪ್ಪಾಜಿ ಪ್ರತಿಮೆಗೆ ಶಾರದ ಅಪ್ಪಾಜಿ ಹಾಗು ಕುಟುಂಬ ವರ್ಗದವರು ಅಭಿಮಾನಿಗಳು, ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು. ನಂತರ ಬಿಆರ್‌ಪಿ ಭದ್ರಾ ಜಲಾಶಯದಲ್ಲಿ ಬಾಗಿನ ಸಮರ್ಪಿಸಲಾಯಿತು. ಮಧ್ಯಾಹ್ನ ಜೆಡಿಎಸ್ ಪಕ್ಷದ ಶಕ್ತಿ ಪ್ರದರ್ಶನ ನಡೆಯಿತು. ನೂತನ ಪದಾಧಿಕಾರಿಗಳು ಪದಗ್ರಹಣ ಸ್ವೀಕರಿಸಿದರು.
    ನ್ಯೂಟೌನ್ ಉಂಬ್ಳೆಬೈಲು ರಸ್ತೆ, ರೋಟರಿ ಕ್ಲಬ್ ಸಮೀಪದಲ್ಲಿರುವ ಅಪ್ಪಾಜಿ ನಿವಾಸದಿಂದ ಗೋಣಿಬೀಡಿನ ಶಕ್ತಿಧಾಮದವರೆಗೂ ನಂತರ ಶಂಕರಘಟ್ಟ, ಬಿಆರ್‌ಪಿ ವ್ಯಾಪ್ತಿಯಲ್ಲಿ  ಬೈಕ್ ರ‍್ಯಾಲಿ ನಡೆಸಲಾಯಿತು. ಈ ನಡುವೆ ಶಾರದ ಅಪ್ಪಾಜಿ ನೇತೃತ್ವದಲ್ಲಿ ಪಾದಯಾತ್ರೆ ಸಹ ನಡೆಯಿತು. 
     ನೂತನ    ಪದಾಧಿಕಾರಿಗಳ ಪದಗ್ರಹಣ :
    ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿ ಮಧುಕುಮಾರ್, ತಾಲೂಕು ನಗರ ಘಟಕದ ಅಧ್ಯಕ್ಷರಾಗಿ ಆರ್. ಕರುಣಾಮೂರ್ತಿ, ಗ್ರಾಮಂತರ ಘಟಕದ ಅಧ್ಯಕ್ಷರಾಗಿ ಕೆ. ಧರ್ಮಕುಮಾರ, ನಗರ ಘಟಕದ ಮಹಿಳಾ ಅಧ್ಯಕ್ಷರಾಗಿ ವಿಶಾಲಾಕ್ಷಿ, ಗ್ರಾಮಾಂತರ ಘಟಕದ ಅಧ್ಯಕ್ಷರಾಗಿ ಪಾರ್ವತಿಬಾಯಿ, ಅಲ್ಪ ಸಂಖ್ಯಾಂತರ ನಗರ ಘಟಕದ ಅಧ್ಯಕ್ಷರಾಗಿ ಮುತುರ್ಜಾಖಾನ್, ತಾಲೂಕು ಯುವ ಘಟಕದ ಅಧ್ಯಕ್ಷರಾಗಿ ಎಂ.ಎ ಅಜಿತ್, ನಗರ ಘಟಕದ ಕಾರ್ಯಾಧ್ಯಕ್ಷರಾಗಿ ಬಿ.ಸಿ ಉಮೇಶ್, ಪರಿಶಿಷ್ಟ ಜಾತಿ ನಗರ ಘಟಕದ ಅಧ್ಯಕ್ಷರಾಗಿ ಮೈಲಾರಪ್ಪ, ಪರಿಶಿಷ್ಟ ಜಾತಿ ಗ್ರಾಮಾಂತರ ಘಟಕದ ಅಧ್ಯಕ್ಷರಾಗಿ ಶ್ರೀಧರನಾಯ್ಕ, ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗು ವಕ್ತಾರರಾಗಿ ಎಂ. ರಾಜು ಮತ್ತು ನಗರ ಘಟಕದ ಮಹಿಳಾ ಕಾರ್ಯದರ್ಶಿಯಾಗಿ ಭಾಗ್ಯಮ್ಮ ಅವರು ಪದಗ್ರಹಣ ಸ್ವೀಕರಿಸಿದರು.  
    ಜೆಡಿಎಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಗೀತಾ ಸತೀಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜೆ.ಪಿ ಯೋಗೇಶ್, ಮುಖಂಡರಾದ ಕರಿಯಪ್ಪ, ಡಿ.ಟಿ ಶ್ರೀಧರ್, ಲೋಕೇಶ್ವರ್ ರಾವ್, ಧರ್ಮೇಗೌಡ ಹಾಗು ನಗರಸಭೆ ಮತ್ತು ಗ್ರಾಮ ಪಂಚಾಯಿತಿ ಸದಸ್ಯರು, ವಿವಿಧ ಸಂಘ-ಸಂಸ್ಥೆಗಳು ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Sunday, September 4, 2022

ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ ಚಾಲನೆ


 ಭದ್ರಾವತಿ, ಸೆ. ೩: ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗು ತಾಲೂಕು ಶಿಕ್ಷಕರ ದಿನಾಚರಣೆ ಸಮಿತಿ ವತಿಯಿಂದ ಸೋಮವಾರ ಹಳೇನಗರದ ಶ್ರೀ ವೀರಶೈವ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ  ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ರವರ ಜನ್ಮದಿನಾಚರಣೆ ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ ಚಾಲನೆ ನೀಡಿದರು.
    ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಶಿಕ್ಷಕರಿಗೆ ಶುಭ ಕೋರಿದರು.  ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.
     ತಾಲೂಕು ಮಟ್ಟದ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ, ನಿವೃತ್ತ ಶಿಕ್ಷಕರಿಗೆ ಹಾಗು ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.೧೦೦ರಷ್ಟು ಫಲಿತಾಂಶ ಪಡೆದ ಶಾಲೆಗಳಿಗೆ ಸನ್ಮಾನ ಹಾಗು ಶಿಕ್ಷಕರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
     ತಹಸೀಲ್ದಾರ್ ಆರ್.ಪ್ರದೀಪ್, ನಗರಸಭೆ  ಅಧ್ಯಕ್ಷ ಚನ್ನಪ್ಪ, ಪೌರಾಯುಕ್ತ ಮನುಕುಮಾರ್, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ರಮೇಶ್, ನಗರಸಭೆ ಸದಸ್ಯರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.




೪ ಮಂದಿಗೆ ಜಿಲ್ಲಾಮಟ್ಟದ ಶಿಕ್ಷಕ ಪ್ರಶಸ್ತಿ

ಕೆ. ಕೋಕಿಲಾ


ಜಿ.ಪಿ ಇಬ್ರಾಹಿಂ


ಎನ್. ಅಣ್ಣಪ್ಪ


ಎ.ಎಂ ಪ್ರಸನ್ನ

    ಭದ್ರಾವತಿ, ಸೆ. ೪ : ಈ ಬಾರಿ ೪ ಮಂದಿಗೆ ಜಿಲ್ಲಾಮಟ್ಟದ ಶಿಕ್ಷಕ ಪ್ರಶಸ್ತಿ ಲಭಿಸಿದ್ದು, ತಾಲೂಕಿನ ಶಿಕ್ಷಕ ವೃಂದದವರಲ್ಲಿ ಸಂತಸವನ್ನುಂಟು ಮಾಡಿದೆ.
    ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ತಾಲೂಕಿನ ಹಡ್ಲಘಟ್ಟ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಜಿ.ಪಿ ಇಬ್ರಾಹಿಂ, ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಹಳೇನಗರದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಕೆ. ಕೋಕಿಲಾ, ಪ್ರೌಢಶಾಲಾ ವಿಭಾಗದಲ್ಲಿ ಅರಹತೊಳಲು ಸರ್ಕಾರಿ ಪ್ರೌಢಶಾಲೆ ಸಹ ಶಿಕ್ಷಕ ಎನ್. ಅಣ್ಣಪ್ಪ ಹಾಗು ಜಿಲ್ಲಾಮಟ್ಟದ ಉತ್ತಮ ಶಿಕ್ಷಕರ ವಿಶೇಷ ಪ್ರಶಸ್ತಿಯನ್ನು ಅತ್ತಿಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಎ.ಎಂ ಪ್ರಸನ್ನ ಪಡೆದುಕೊಂಡಿದ್ದಾರೆ.
    ಪ್ರಶಸ್ತಿಗೆ ಭಾಜನರಾಗಿರುವ ಶಿಕ್ಷಕರಿಗೆ ಶಾಸಕ ಬಿ.ಕೆ ಸಂಗಮೇಶ್ವರ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸೇರಿದಂತೆ ಶಿಕ್ಷಕ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

ಸೈಲ್ ಸುವರ್ಣ ಮಹೋತ್ಸವ ಹಿನ್ನಲೆಯಲ್ಲಿ ಕ್ರೀಡಾಕೂಟಗಳಿಗೆ ವಿಐಎಸ್‌ಎಲ್ ಕ್ರೀಡಾಂಗಣ ಉಚಿತ

ಎಲ್. ಪ್ರವೀಣ್‌ಕುಮಾರ್
   
 ಭದ್ರಾವತಿ, ಸೆ. ೪: ಭಾರತೀಯ ಉಕ್ಕು ಪ್ರಾಧಿಕಾರ ತನ್ನ ೫೦ನೇ ವರ್ಷದ ಸುವರ್ಣ ಸಂಭ್ರಮಾಚರಣೆ ಹಾಗು ೭೫ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ  ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ಉಚಿತವಾಗಿ ಕ್ರೀಡಾಕೂಟಗಳನ್ನು ಆಯೋಜಿಸಲು ಅವಕಾಶ ನೀಡಲಾಗಿದೆ ಎಂದು ಕಾರ್ಖಾನೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಎಲ್. ಪ್ರವೀಣ್‌ಕುಮಾರ್ ತಿಳಿಸಿದರು.
    ಕಾರ್ಖಾನೆ ತನ್ನ ಸಾಮಾಜಿಕ ಹೊಣೆಗಾರಿಕೆಯೊಂದಿಗೆ ಕ್ರೀಡಾಪಟುಗಳಿಗೆ ನೆರವಾಗಬೇಕೆಂಬ ಉದ್ದೇಶದೊಂದಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಕ್ರೀಡಾಕೂಟಗಳನ್ನು ಆಯೋಜಿಸಲು ಅವಕಾಶ ನೀಡಲಾಗಿದೆ. ಈಗಾಗಲೇ ಭದ್ರಾ ವಲಯ, ತುಂಗಾ ವಲಯ, ತುಂಗಾ-ಭದ್ರಾ ವಲಯ, ಕಾವೇರಿ ವಲಯ ತಾಲೂಕು ಮಟ್ಟದ ಕ್ರೀಡಾಕೂಟಗಳನ್ನು ಹಾಗು ದಸರಾ ಕ್ರೀಡಾ ಕೂಟದ ಆಯ್ಕೆ ಸ್ಪರ್ಧೆಗಳನ್ನು ಆಯೋಜಿಸಲು ಅವಕಾಶ ನೀಡಲಾಗಿದೆ ಎಂದರು.


    ಮುಂದೊಂದು ದಿನ ಈ ಕ್ರೀಡಾಪಟುಗಳು ಎತ್ತರಕ್ಕೆ ಬೆಳೆದು ಕೀರ್ತಿ ತರಲಿ ಎಂಬ ಆಶಯ ಸಂಸ್ಥೆ ಹೊಂದಿದೆ. : ಭಾರತೀಯ ಉಕ್ಕು ಪ್ರಾಧಿಕಾರ ತನ್ನ ೫೦ನೇ ವರ್ಷದ ಸುವರ್ಣ ಸಂಭ್ರಮಾಚರಣೆ ಹಾಗು ೭೫ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಈಗಾಗಲೇ ಹಲವಾರು ಸಾಮಾಜಿಕ ಕಾರ್ಯಗಳನ್ನು ಆಯೋಜಿಸಿದೆ ಎಂದರು.
    ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತ, ದೈಹಿಕ ಶಿಕ್ಷಕ ಶಿವಲಿಂಗೇಗೌಡ ಮಾತನಾಡಿ, ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ಕ್ರೀಡಾಪಟುಗಳಿಗೆ ಹೆಚ್ಚಿನ ಸಹಕಾರಿಯಾಗಿದೆ. ಈ ಬಾರಿ ಉಚಿತವಾಗಿ ಕ್ರೀಡಾಕೂಟಗಳನ್ನು ಆಯೋಜಿಸಲು ಅವಕಾಶ ನೀಡಿರುವುದಕ್ಕೆ ಕಾರ್ಖಾನೆ ಆಡಳಿತ ಮಂಡಳಿಗೆ ಶಿಕ್ಷಣ ಇಲಾಖೆ ವತಿಯಿಂದ ಕೃತಜ್ಞತೆ ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲೂ ಇದೆ ರೀತಿ ನೆರವಾಗುವ ಮೂಲಕ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವಂತೆ ಮನವಿ ಮಾಡಿದರು.




ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಆಯ್ಕೆ ಸ್ಪರ್ಧೆಗಳಿಗೆ ಚಾಲನೆ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಗರದ ನ್ಯೂಟೌನ್ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಆಯ್ಕೆ ಸ್ಪರ್ಧೆಗಳಿಗೆ ನಗರಸಭೆ ಪ್ರಭಾರ ಅಧ್ಯಕ್ಷ ಚನ್ನಪ್ಪ ಚಾಲನೆ ನೀಡಿದರು.
    ಭದ್ರಾವತಿ, ಸೆ. ೪ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಗರದ ನ್ಯೂಟೌನ್ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಆಯ್ಕೆ ಸ್ಪರ್ಧೆಗಳಿಗೆ ನಗರಸಭೆ ಪ್ರಭಾರ ಅಧ್ಯಕ್ಷ ಚನ್ನಪ್ಪ ಚಾಲನೆ ನೀಡಿದರು.
    ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಜಿ. ಪ್ರಭು, ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತ, ದೈಹಿಕ ಶಿಕ್ಷಕ ಶಿವಲಿಂಗೇಗೌಡ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಅನಂದ್, ಕಾರ್ಯದರ್ಶಿ ಶ್ರೀಧರ್ ಸಾವಂತ್, ಅಥ್ಲೆಟಿಕ್ಸ್ ತರಬೇತಿದಾರ ಬಾಳಪ್ಪು ಮಾನೆ, ಖೋ ಖೋ ತರಬೇತಿದಾರ ಶ್ರೀನಿವಾಸ್, ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಯ ಕಾರ್ತಿಕ್, ಕೇಶವ, ಕ್ರೀಡಾಕೂಟದ ಸಂಘಟನಾ ಕಾರ್ಯದರ್ಶಿ ಶಿವರಾಜ್, ದೇವರಾಜ್, ಕರಣ್‌ಸಿಂಗ್, ಗೋಪಾಲ, ನೂರ್ ಫಾತಿಮಾ, ರೇವತಿ, ಸಿದ್ದಯ್ಯ, ಆನಂದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.     
    ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ಅಥ್ಲೆಟಿಕ್ಸ್ ಸ್ಪರ್ಧೆಗಳು, ಪುಟ್‌ಬಾಲ್, ಖೋ ಖೋ, ಕಬಡ್ಡಿ, ವಾಲಿಬಾಲ್, ಥ್ರೋ ಬಾಲ್    ಹಾಗು ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗಳು ನಡೆದವು.



ಭೋವಿ ಕಾಲೋನಿ ಗಣಪತಿ ವಿಜೃಂಭಣೆ ರಾಜಬೀದಿ ಉತ್ಸವ ಮೆರವಣಿಗೆ

ಬಿಗಿ ಪೊಲೀಸ್ ಬಂದೋಬಸ್ತ್‌ನೊಂದಿಗೆ ಭದ್ರಾ ನದಿಯಲ್ಲಿ ಸಂಜೆ ವಿಸರ್ಜನೆ

ಭದ್ರಾವತಿ ಮುಖ್ಯರಸ್ತೆಯ ಭೋವಿ ಕಾಲೋನಿಯಲ್ಲಿ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ೩೮ನೇ ವರ್ಷದ ಅಂಗವಾಗಿ ಪ್ರತಿಷ್ಠಾಪಿಸಲಾಗಿದ್ದ ವಿನಾಯಕ ಮೂರ್ತಿ ವಿಸರ್ಜನೆ ಅಂಗವಾಗಿ ಭಾನುವಾರ ಉತ್ಸವ ಮೆರವಣಿಗೆ ನಡೆಯಿತು.
    ಭದ್ರಾವತಿ, ಸೆ. ೪: ನಗರದ ಹೊಸಮನೆ ಮುಖ್ಯರಸ್ತೆಯ ಭೋವಿ ಕಾಲೋನಿಯಲ್ಲಿ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ೩೮ನೇ ವರ್ಷದ ಅಂಗವಾಗಿ ಪ್ರತಿಷ್ಠಾಪಿಸಲಾಗಿದ್ದ ವಿನಾಯಕ ಮೂರ್ತಿ ವಿಸರ್ಜನೆ ಭಾನುವಾರ ನಡೆಯಿತು.
    ನಗರದ ಪ್ರಮುಖ ಸಂಘನೆಗಳಲ್ಲಿ ಇದು ಸಹ ಒಂದಾಗಿದ್ದು, ವಿವಿಧ ಧಾರ್ಮಿಕ ಆಚರಣೆಗಳೊಂದಿಗೆ ವಿನಾಯಕ ಮೂರ್ತಿಯನ್ನು ೫ ದಿನಗಳ ಕಾಲ ಪ್ರತಿಷ್ಠಾಪಿಸುವ ಮೂಲಕ ವಿಸರ್ಜಿಸಲಾಯಿತು.
ವಿಸರ್ಜನೆ ಅಂಗವಾಗಿ ನಡೆದ ರಾಜಬೀದಿ ಉತ್ಸವ ಮೆರವಣಿಗೆ ಗಮನ ಸೆಳೆಯಿತು. ಡೊಳ್ಳು ಕುಣಿತ, ವೀರಾಗಾಸೆ, ಗೊಂಬೆ ನೃತ್ಯ ಸೇರಿದಂತೆ ವಿವಿಧ ಕಲಾತಂಡಗಳು ಮೆರವಣಿಗೆಗೆ ಮತ್ತಷ್ಟು ಮೆರಗು ನೀಡಿದವು. ಯುವಕರು ಮೆರವಣಿಗೆಯಲ್ಲಿ ಕೇಸರಿ ಧ್ವಜ ಹಿಡಿದು ಕಲಾ ತಂಡಗಳ ಜೊತೆ ಹೆಜ್ಜೆ ಹಾಕುವ ಮೂಲಕ ಸಂಭ್ರಮಿಸಿದರು.


    ಉತ್ಸವ ಮೆರವಣಿಗೆ ಹೊಸಮನೆ ಮುಖ್ಯರಸ್ತೆ ಮೂಲಕ ರಂಗಪ್ಪ ವೃತ್ತ, ಮಾಧವಚಾರ್ ವೃತ್ತ ಮತ್ತು ಗಾಂಧಿವೃತ್ತ ಮೂಲಕ ನಗರಸಭೆ ಮುಂಭಾಗ ಭದ್ರಾ ನದಿವರೆಗೂ ಸಾಗಿತು. ಈ ಬಾರಿ ಹೆಚ್ಚಿನ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಅದರಲ್ಲೂ ನಗರಸಭೆ ಮುಂಭಾಗ ಕಟ್ಟೆಚ್ಚರ ವಹಿಸಲಾಗಿತ್ತು.
    ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ವಿಕ್ರಮ್ ಅಮಟೆ ಮಾರ್ಗದರ್ಶನದಲ್ಲಿ ಪೊಲೀಸ್ ಉಪಾಧೀಕ್ಷಕ ಜಿತೇಂದ್ರ ಕುಮಾರ್ ದಯಾಮ ನೇತೃತ್ವದಲ್ಲಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ೫ ಮಂದಿ ಪ್ರೊಬೇಷನರಿ ಉಪಾಧೀಕ್ಷಕರು, ೪ ಮಂದಿ ವೃತ್ತ ನಿರೀಕ್ಷಕರು, ೧೦ ಮಂದಿ ಠಾಣಾಧಿಕಾರಿಗಳು ಹಾಗು ಸುಮಾರು ೧೫೦ ಸಿಬ್ಬಂದಿಗಳು ಭದ್ರತಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.


    ವಿನಾಯಕ ಸೇವಾ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ವಿವಿಧ ರಾಜಕೀಯ ಪಕ್ಷಗಳ, ಸಂಘಟನೆಗಳ ಪ್ರಮುಖರು, ಭಕ್ತರು ಉತ್ಸವ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.