ಭದ್ರಾವತಿ: ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ವತಿಯಿಂದ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸೆ.30ರಂದು ಹಮ್ಮಿಕೊಳ್ಳಲಾಗಿದೆ. ನ್ಯೂಟೌನ್ ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ಆವರಣದಲ್ಲಿ ಬೆಳಿಗ್ಗೆ 9 ಗಂಟೆಗೆ ಆರಂಭಗೊಳ್ಳಲಿದೆ. ಬಿ.ಕೆ ಸಂಗಮೇಶ್ವರ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.
Thursday, September 29, 2022
ಸೆ.೩೦ರಂದು ಶ್ರೀ ವಿನಯ್ ಗುರೂಜಿ ನೇತೃತ್ವದಲ್ಲಿ ಸಪ್ತಪತಿ ಪಾರಾಯಣ
ಭದ್ರಾವತಿ, ಸೆ. ೨೯: ನವರಾತ್ರಿ ಮಹೋತ್ಸವ ಅಂಗವಾಗಿ ಸಮಸ್ತ ನಾಗರೀಕರ ಕಲ್ಯಾಣಾಭಿವೃದ್ಧಿಗಾಗಿ ಶ್ರೀ ವಿನಯ್ ಗುರೂಜಿ ಭಕ್ತ ವೃಂದದಿಂದ ಸೆ.೩೦ರಂದು ದುರ್ಗಾ ಸಪ್ತಪತಿ ಪಾರಾಯಣ ಹಮ್ಮಿಕೊಳ್ಳಲಾಗಿದೆ.
ಶ್ರೀ ವಿನಯ್ ಗುರೂಜಿ ನೇತೃತ್ವದಲ್ಲಿ ಸಿದ್ದಾರೂಢ ನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಬೆಳಿಗ್ಗೆ ೧೧ ಗಂಟೆಗೆ ದುರ್ಗಾ ಸಪ್ತಪತಿ ಪಾರಾಯಣ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ.
ಪರಿಸರ ದಸರಾ : ಗಮನ ಸೆಳೆದ ಬೀದಿ ನಾಟಕ
ಭದ್ರಾವತಿ ನಗರಸಭೆ ವತಿಯಿಂದ ಪರಿಸರ ದಸರಾ ಅಂಗವಾಗಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಬೀದಿ ನಾಟಕ ಪ್ರದರ್ಶನ ಗಮನ ಸೆಳೆಯಿತು.
ಭದ್ರಾವತಿ, ಸೆ. ೨೯; ನಗರಸಭೆ ವತಿಯಿಂದ ಪರಿಸರ ದಸರಾ ಅಂಗವಾಗಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಬೀದಿ ನಾಟಕ ಪ್ರದರ್ಶನ ಗಮನ ಸೆಳೆಯಿತು.
ನಗರದ ಸ್ವಚ್ಛತೆಯಲ್ಲಿ ಪೌರಕಾರ್ಮಿಕರ ಪಾತ್ರ ಹಾಗು ನಾಗರೀಕರ ಜವಾಬ್ದಾರಿ ಮತ್ತು ಪ್ಲಾಸ್ಟಿಕ್ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಬೀದಿ ನಾಟಕದ ಮೂಲಕ ಜಾಗೃತಿ ಮೂಡಿಸಲಾಯಿತು.
ಅಂಬೇಡ್ಕರ್ ಜಾನಪದ ಕಲಾ ತಂಡದ ಕಲಾವಿದರಾದ ತಮಟೆ ಜಗದೀಶ್, ದಿವಾಕರ್, ಜಿ. ರವಿಕುಮಾರ್, ಷಣ್ಮುಖಪ್ಪ, ಆಂಜನಪ್ಪ ಮತ್ತು ರವಿನಾಯ್ಕ ಅವರ ಅಭಿನಯ ಎಲ್ಲರ ಗಮನ ಸೆಳೆಯಿತು.
ಇದಕ್ಕೂ ಮೊದಲು ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತದಿಂದ ವಿದ್ಯಾರ್ಥಿಗಳು, ನಗರಸಭೆ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿಗಳು, ಪೌರಕಾರ್ಮಿಕರು, ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಜಾಗೃತಿ ಜಾಥಾ ನಡೆಸಲಾಯಿತು.
ಪರಿಸರ ದಸರಾ : ಭದ್ರಾ ನದಿ ತಟದಲ್ಲಿ ಸ್ವಚ್ಛತಾ ಕಾರ್ಯ
ಭದ್ರಾವತಿ ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ನಾಡಹಬ್ಬ ದಸರಾ ಅಂಗವಾಗಿ ಗುರುವಾರ ಪರಿಸರ ದಸರಾ ವಿಶೇಷ ಕಾರ್ಯಕ್ರಮ ನಡೆಯಿತು. ನದಿ ತಟದಲ್ಲಿ ನಡೆದ ಸ್ವಚ್ಛತಾ ಕಾರ್ಯ ಗಮನ ಸೆಳೆಯಿತು.
ಭದ್ರಾವತಿ, ಸೆ. ೨೯ : ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ನಾಡಹಬ್ಬ ದಸರಾ ಅಂಗವಾಗಿ ಗುರುವಾರ ಪರಿಸರ ದಸರಾ ವಿಶೇಷ ಕಾರ್ಯಕ್ರಮ ನಡೆಯಿತು. ನದಿ ತಟದಲ್ಲಿ ನಡೆದ ಸ್ವಚ್ಛತಾ ಕಾರ್ಯ ಗಮನ ಸೆಳೆಯಿತು.
ನಗರದ ಕೆಎಸ್ಆರ್ಟಿಸಿ ಮುಖ್ಯ ಬಸ್ ನಿಲ್ದಾಣದ ಸಮೀಪದಲ್ಲಿರುವ ಹೊಸಸೇತುವೆಯ ಎಡ ಮತ್ತು ಬಲ ಬದಿಯ ಭದ್ರಾ ನದಿ ತಟದಲ್ಲಿ ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಸ್ವಚ್ಛತಾ ಕಾರ್ಯ ನಡೆಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.
ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ ಸಹಿ ಮಾಡುವ ಮೂಲಕ ಚಾಲನೆ ನೀಡಿದರು. ನಂತರ ಆರಂಭಗೊಂಡ ಸ್ವಚ್ಛತಾ ಕಾರ್ಯ ಸುಮಾರು ೨ ಗಂಟೆ ಸಮಯ ನಡೆಯಿತು.
ನಾಡಹಬ್ಬ ದಸರಾ ಆಚರಣೆ ವಿವಿಧ ಸಮಿತಿಗಳ ಅಧ್ಯಕ್ಷರು, ನಗರಸಭೆ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿಗಳು, ಪೌರಕಾರ್ಮಿಕರು, ತಾಲೂಕು ಮಾಜಿ ಸೈನಿಕರ ಸಂಘ, ತಾಲೂಕು ರೈಫಲ್ ಅಸೋಸಿಯೇಷನ್, ಪತಂಜಲಿ ಯೋಗ ಸಮಿತಿ, ಹಳೇನಗರ ಮಹಿಳಾ ಸೇವಾ ಸಂಘ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದವು.
Wednesday, September 28, 2022
ಪ್ರೇಕ್ಷಕರ ಮನಸೂರೆಗೊಂಡ ದಸರಾ ಜಾನಪದ ಉತ್ಸವ
ಭದ್ರಾವತಿ ನಗರಸಭೆ ವತಿಯಿಂದ ನಾಡಹಬ್ಬ ದಸರಾ ಅಂಗವಾಗಿ ಬುಧವಾರ ಹಳೇನಗರದ ಕನಕಮಂಟಪದಲ್ಲಿ ಆಯೋಜಿಸಲಾಗಿದ್ದ ದಸರಾ ಜಾನಪದ ಉತ್ಸವ ಪ್ರೇಕ್ಷಕರ ಮನಸೂರೆಗೊಂಡಿತು.
ಭದ್ರಾವತಿ, ಸೆ. ೨೮: ನಗರಸಭೆ ವತಿಯಿಂದ ನಾಡಹಬ್ಬ ದಸರಾ ಅಂಗವಾಗಿ ಬುಧವಾರ ಹಳೇನಗರದ ಕನಕಮಂಟಪದಲ್ಲಿ ಆಯೋಜಿಸಲಾಗಿದ್ದ ದಸರಾ ಜಾನಪದ ಉತ್ಸವ ಪ್ರೇಕ್ಷಕರ ಮನಸೂರೆಗೊಂಡಿತು.
ಜನಪದ ಕಲಾ ಪ್ರಾಕಾರಗಳಿಗೆ ವೇದಿಕೆ ಕಲ್ಪಿಸಿಕೊಟ್ಟಿರುವುದು ಈ ಬಾರಿ ನಾಡಹಬ್ಬ ದಸರಾ ವಿಶೇಷತೆಗಳಲ್ಲಿ ಒಂದಾಗಿದೆ. ಜಾನಪದ ಕಲೆಗಳು ಎಂದರೆ ಮೂಗು ಮುರಿಯುವ ಇಂದಿನ ಯುವ ಜನತೆಯ ಮನಸ್ಥಿತಿಯನ್ನು ಬದಲಾಯಿಸುವ ಹೊಸ ಪ್ರಯತ್ನ ಸಹ ಇಂದಿನ ಜಾನಪದ ಕಲಾವಿದರು ಮೈಗೂಡಿಸಿಕೊಳ್ಳುವುದು ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಕಾಲಘಟ್ಟಕ್ಕೆ ತಕ್ಕಂತೆ ಹೊಸ ಪ್ರಯೋಗಗಳೊಂದಿಗೆ ಕಲಾವಿದರು ಪ್ರೇಕ್ಷಕರ ಮನಸೂರೆಗೊಳ್ಳುವಲ್ಲಿ ಯಶಸ್ವಿಯಾದರು.
ಜಾನಪದ ಕಲಾವಿದ ತಮಟೆ ಜಗದೀಶ್ ನೇತೃತ್ವದಲ್ಲಿ ವಿವಿಧ ಜನಪದ ಕಲಾ ತಂಡಗಳು ತಮ್ಮ ಪ್ರತಿಭೆಗಳನ್ನು ವೇದಿಕೆಯಲ್ಲಿ ಅನಾವರಣಗೊಳಿಸಿದವು.
ಜಾನಪದ ಕಲಾಸಕ್ತರು, ವಿವಿಧ ಸಂಘಟನೆಗಳ ಪ್ರಮುಖರು, ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸ್ಥಾಯಿ ಸಮಿತಿ ಅಧ್ಯಕ್ಷರು, ಸದಸ್ಯರು ಹಾಗು ಅಧಿಕಾರಿಗಳು, ಸಿಬ್ಬಂದಿಗಳು, ಪೌರಕಾರ್ಮಿಕರು ಮತ್ತು ಹಳೇನಗರ, ಹೊಸಮನೆ ಸೇರಿದಂತೆ ಸುತ್ತಮುತ್ತಲಿನ ಭಾಗದ ನಿವಾಸಿಗಳು ದಸರಾ ಜಾನಪದ ಉತ್ಸವ ಕಣ್ತುಂಬಿಕೊಂಡರು.
ನಾಡಹಬ್ಬ ದಸರಾ : ಸೆ.೨೯ರಂದು ಪರಿಸರ ದಸರಾ
ಭದ್ರಾವತಿ, ಸೆ. ೨೮ : ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ನಾಡಹಬ್ಬ ದಸರಾ ಅಂಗವಾಗಿ ಸೆ.೨೯ರಂದು ಪರಿಸರ ದಸರಾ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ ೭ ಗಂಟೆಗೆ ಮಾಧವಚಾರ್ ವೃತ್ತದ ಎಡ ಮತ್ತು ಬಲ ಬದಿಯ ನದಿ ತಟದಲ್ಲಿ ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಭದ್ರಾ ನದಿ ತಟದಲ್ಲಿ ಸ್ವಚ್ಛತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ನಂತರ ೧೧ ಗಂಟೆಗೆ ಬಿ.ಎಚ್ ರಸ್ತೆ ಅಂಡರ್ ಬ್ರಿಡ್ಜ್ ಬಳಿ ಅಂಬೇಡ್ಕರ್ ವೃತ್ತದಿಂದ ಪರಿಸರ ಜನಜಾಗೃತಿ ಜಾಥಾ ಮತ್ತು ಕಲಾ ತಂಡಗಳಿಂದ ಪರಿಸರ ಜಾಗೃತಿ ಕುರಿತು ಬೀದಿ ನಾಟಕ ಪ್ರದರ್ಶನ ನಡೆಯಲಿದೆ.
ಹಳೇನಗರದ ಕನಕಮಂಟಪ ಮೈದಾನದಲ್ಲಿ ಸಂಜೆ ೬.೩೦ಕ್ಕೆ ಗಾಂಧಿ ಕಂಡ ಕನಸು ಸ್ವಚ್ಛತೆ ಕುರಿತು ನಗರಸಭಾ ಪೌರ ಕಾರ್ಮಿಕರಿಂದ ರೂಪಕ ಹಾಗು ಕಾಲಾಯ ತಸ್ಮೈ ನಮಃ ವಿಡಂಬನಾತ್ಮಕ ರೂಪಕ ನಗರಸಭೆ ಸಿಬ್ಬಂದಿಗಳಿಂದ ನಡೆಯಲಿದ್ದು, ಕಿರುತೆರೆ ನಟ, ರಂಗಕರ್ಮಿ ಅಪರಂಜಿ ಶಿವರಾಜ್ ರೂಪಕ ರಚಿಸಿ ನಿರ್ದೇಶಿಸಿದ್ದಾರೆ.
ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶರಣಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದು, ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಅಧ್ಯಕ್ಷತೆ ವಹಿಸಲಿದ್ದಾರೆ. ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್ಕುಮಾರ್ ಮತ್ತು ಪೌರಾಯುಕ್ತ ಎಚ್.ಎಂ ಮನುಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.
ಪ್ರೊ. ಬಿ. ಕೃಷ್ಣಪ್ಪನವರ ಡಿಎಸ್ಎಸ್ ದುರ್ಬಳಕೆ : ಕಠಿಣ ಕ್ರಮಕ್ಕೆ ಆಗ್ರಹಿಸಿ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ
ಕೆಲವು ಕಿಡಿಗೇಡಿಗಳು ಪ್ರೊ. ಬಿ. ಕೃಷ್ಣಪ್ಪನವರು ಸ್ಥಾಪಿಸಿರುವ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸಂಘಟನೆಯ ಹೆಸರನ್ನು ದುರ್ಬಳಕೆ ಮಾಡಿಕೊಂಡು ವಂಚಿಸುತ್ತಿದ್ದು, ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಬುಧವಾರ ಭದ್ರಾವತಿಯಲ್ಲಿ ಪೇಪರ್ಟೌನ್ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಭದ್ರಾವತಿ, ಸೆ. ೨೮ : ಕೆಲವು ಕಿಡಿಗೇಡಿಗಳು ಪ್ರೊ. ಬಿ. ಕೃಷ್ಣಪ್ಪನವರು ಸ್ಥಾಪಿಸಿರುವ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸಂಘಟನೆಯ ಹೆಸರನ್ನು ದುರ್ಬಳಕೆ ಮಾಡಿಕೊಂಡು ವಂಚಿಸುತ್ತಿದ್ದು, ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಬುಧವಾರ ಪೇಪರ್ಟೌನ್ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಖಜಾಂಚಿ ಸತ್ಯ ಹಾಗು ಜಿಲ್ಲಾ ಸಂಚಾಲಕ ಚಿನ್ನಯ್ಯ ನೇತೃತ್ವದಲ್ಲಿ ಠಾಣೆ ಮುಂಭಾಗ ಪ್ರತಿಭಟನೆ ನಡೆಸಲಾಗುತ್ತಿದ್ದು, ನ್ಯಾಯ ಲಭಿಸುವವರೆಗೂ ಹೋರಾಟ ನಡೆಸುವುದಾಗಿ ಎಚ್ಚರಿಸಲಾಯಿತು.
ಜಿಲ್ಲಾ ಸಂಚಾಲಕ ಚಿನ್ನಯ್ಯ ಮಾತನಾಡಿ, ಕೆ.ಟಿ ಪ್ರಸನ್ನ, ರವಿನಾಯ್ಕ ಸೇರಿದಂತೆ ಇನ್ನೂ ಕೆಲವು ವ್ಯಕ್ತಿಗಳು ಪ್ರೊ. ಬಿ. ಕೃಷ್ಣಪ್ಪನವರು ಸ್ಥಾಪಿಸಿರುವ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸಂಘಟನೆಯ ಹೆಸರನ್ನು ದುರ್ಬಳಕೆ ಮಾಡಿಕೊಂಡು ತಾಲೂಕಿನ ಹಿರಿಯೂರು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಹಾಗು ಸದಸ್ಯರಿಗೆ ಬೆದರಿಕೆ ಹಾಕುತ್ತಿದ್ದಾರೆ. ಗ್ರಾಮ ಪಂಚಾಯಿತಿ ಕಾಮಗಾರಿಗಳಲ್ಲಿ ಕಮಿಷನ್ ನೀಡುವಂತೆ ಪೀಡಿಸುತ್ತಿದ್ದಾರೆ. ಗ್ರಾಮಠಾಣಾ ಜಾಗಕ್ಕೆ ಸಂಬಂಧಿಸಿದಂತೆ ವಿನಾಕಾರಣ ಗ್ರಾಮದಲ್ಲಿ ಗೊಂದಲದ ವಾತಾವರಣ ಮೂಡಿಸುತ್ತಿದ್ದಾರೆ. ಇಷ್ಟೆ ಅಲ್ಲದೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗು ಸದಸ್ಯರ ವಿರುದ್ಧ ಜಾತಿನಿಂದನೆ ಸುಳ್ಳು ದೂರು ದಾಖಲಿಸಿದ್ದಾರೆ ಎಂದು ಆರೋಪಿಸಿದರು.
ಪ್ರೊ. ಬಿ ಕೃಷ್ಣಪ್ಪನವರು ಸ್ಥಾಪಿಸಿರುವ ಸಂಘಟನೆ ನಮ್ಮದ್ದಾಗಿದ್ದು, ನ್ಯಾಯಾಲಯದಲ್ಲಿ ಈ ಸಂಬಂಧ ಆದೇಶವಾಗಿದೆ ಎಂದು ಸುಳ್ಳು ಹೇಳಿಕೊಂಡು ಎಲ್ಲೆಡೆ ವಂಚಿಸಲಾಗುತ್ತಿದೆ. ಈಗಾಗಲೇ ಈ ವಿಚಾರಕ್ಕೆ ಸಂಬಂಧಿಸಿದಂತೆ ಎಂ. ಗುರುಮೂರ್ತಿ ಎಂಬುವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಹ ದಾಖಲಾಗಿದೆ. ಈ ನಡುವೆಯೂ ಇದೀಗ ಹಿರಿಯೂರು ಗ್ರಾಮದಲ್ಲಿ ಸಂಘಟನೆ ಹೆಸರನ್ನು ದುರ್ಬಳಕೆ ಮಾಡಿಕೊಂಡು ಸಂಘಟನೆಯ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡಲಾಗುತಿದೆ. ಇಂತಹವರನ್ನು ತಕ್ಷಣ ಬಂಧಿಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಹೋರಾಟ ಮುಂದುವರೆಯಲಿದೆ ಎಂದು ಎಚ್ಚರಿಸಿದರು.
ಪ್ರಮುಖರಾದ ವಿ. ವಿನೋದ್, ಕೆ. ರಂಗನಾಥ್, ಕುಪೇಂದ್ರಪ್ಪ, ಜಿಂಕ್ಲೈನ್ ಮಣಿ, ಕಾಣಿಕ್ರಾಜ್, ಎನ್. ಗೋವಿಂದ ಹಾಗು ಹಿರಿಯೂರು ಗ್ರಾಮ ಮುಖಂಡರು ಹಾಗು ಡಿಎಸ್ಎಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.
Subscribe to:
Posts (Atom)