Wednesday, October 5, 2022

ಭದ್ರಾವತಿಯಲ್ಲಿ ೧೦ ದಿನಗಳ ನಾಡಹಬ್ಬ ದಸರಾ ಆಚರಣೆ ಸಂಪನ್ನ

ಉತ್ಸವ ಮೆರವಣಿಗೆ, ಬನ್ನಿ ಮುಡಿದ ತಹಸೀಲ್ದಾರ್ ಆರ್. ಪ್ರದೀಪ್

ಭದ್ರಾವತಿ ನಾಡಹಬ್ಬ ದಸರಾ ಆಚರಣೆ ಹಿನ್ನಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಉತ್ಸವ ಮೆರವಣಿಗೆಯಲ್ಲಿ ದೇವಾನು ದೇವತೆಗಳು ಪಾಲ್ಗೊಂಡಿರುವುದು.
    ಭದ್ರಾವತಿ, ಅ. ೫: ನಗರಸಭೆ ವತಿಯಿಂದ ಸುಮಾರು ೧೦ ದಿನಗಳ ಕಾಲ ಹಮ್ಮಿಕೊಳ್ಳಲಾಗಿದ್ದ ನಾಡಹಬ್ಬ ದಸರಾ ಆಚರಣೆಗೆ ತಹಸೀಲ್ದಾರ್ ಆರ್. ಪ್ರದೀಪ್‌ರವರು ಬನ್ನಿ ಮುಡಿಯುವ ಮೂಲಕ ಬುಧವಾರ ರಾತ್ರಿ ಸಂಪನ್ನಗೊಳಿಸಿದರು.
    ಹಳೇನಗರದ ಕನಕಮಂಟಪ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕ ರಂಗನಾಥ ಶರ್ಮರವರ ನೇತೃತ್ವದ ತಂಡ ಧಾರ್ಮಿಕ ಆಚರಣೆ ನೆರವೇರಿಸಿತು. ಕೊನೆಯಲ್ಲಿ ತಹಸೀಲ್ದಾರ್ ಆರ್. ಪ್ರದೀಪ್ ಬನ್ನಿ ಮುಡಿಯುವ ಮೂಲಕ ಆಚರಣೆಗೆ ತೆರೆ ಎಳೆದರು. ಸಿಡಿಮದ್ದು ಪ್ರದರ್ಶನ ಹಾಗು ರಾವಣ ಸಂಹಾರ ಎಲ್ಲರ ಗಮನ ಸೆಳೆಯಿತು.


ಭದ್ರಾವತಿ ನಾಡಹಬ್ಬ ದಸರಾ ಆಚರಣೆ ಹಿನ್ನಲೆಯಲ್ಲಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಆರ್. ಪ್ರದೀಪ್ ಬನ್ನಿ ಮುಡಿದರು.
      ಮುಂದಿನ ವರ್ಷ ಇನ್ನೂ ಅದ್ದೂರಿ ಆಚರಣೆ :
    ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ನಮ್ಮ ದೇಶದ ಸಂಸ್ಕೃತಿ, ಪರಂಪರೆ ಇಂದಿನ ಪೀಳಿಗೆಗೆ ಉಳಿಸಿಕೊಡುವ ನಿಟ್ಟಿನಲ್ಲಿ ನಾಡಹಬ್ಬ ದಸರಾ ಆಚರಣೆಯನ್ನು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ಆಚರಿಸಲಾಗಿದೆ. ಮುಂದಿನ ವರ್ಷ ಇನ್ನೂ ಅದ್ದೂರಿಯಾಗಿ ಆಚರಿಸಲು ಪ್ರತಿಯೊಬ್ಬರು ಸಹಕರಿಸಬೇಕೆಂದರು.
    ಇದಕ್ಕೂ ಮೊದಲು ನಗರದ ಬಿ.ಎಚ್ ರಸ್ತೆ ಹುತ್ತಾ ಕಾಲೋನಿಯಿಂದ ಉತ್ಸವ ಮೆರವಣಿಗೆ ಹಮ್ಮಿಕೊಳ್ಳಲಾಗಿದ್ದು, ಮಳೆ ಹಿನ್ನೆಲೆಯಲ್ಲಿ ಉತ್ಸವ ಮೆರವಣಿಗೆ ವಿಳಂಬವಾಯಿತು. ಮಧ್ಯಾಹ್ನ ೨:೩೦ಕ್ಕೆ ಆರಂಭಗೊಳ್ಳಬೇಕಿದ್ದ ಉತ್ಸವ ಮೆರವಣಿಗೆ ಸಂಜೆ ೪:೩೦ ಆದರೂ ಸಹ ಆರಂಭಗೊಳ್ಳಲಿಲ್ಲ. ಸುಮಾರು ೫೦ಕ್ಕೂ  ಹೆಚ್ಚು ಅಲಂಕೃತಗೊಂಡ ದೇವಾನು ದೇವತೆಗಳು ಪಾಲ್ಗೊಂಡಿದ್ದವು. ಈ ನಡುವೆ ವಿಶ್ವ ಸ್ವರೂಪಿಣಿ ಮಾರಿಯಮ್ಮ ದೇವರು ಹೆಚ್ಚು ಆಕರ್ಷಕವಾಗಿ ಕಂಡು ಬರುವ ಮೂಲಕ ಎಲ್ಲರ ಗಮನ ಸೆಳೆಯತು. ಡೊಳ್ಳು ಕುಣಿತ, ವೀರಗಾಸೆ ಸೇರಿದಂತೆ ಇನ್ನಿತರ ಕಲಾ ತಂಡಗಳು ಭಾಗವಹಿಸಿದ್ದವು.


ಭದ್ರಾವತಿ ನಾಡಹಬ್ಬ ದಸರಾ ಆಚರಣೆ ಹಿನ್ನಲೆಯಲ್ಲಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ರಾವಣನ ಸಂಹಾರ ಎಲ್ಲರನ್ನು ಆಕರ್ಷಿಸಿತು. 
     ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಪೌರಾಯುಕ್ತ ಮನುಕುಮಾರ್, ದಸರಾ ಆಚರಣೆ ವಿವಿಧ ಸಮಿತಿಗಳ ಅಧ್ಯಕ್ಷರು, ಪದಾಧಿಕಾರಿಗಳು, ಪೌರಾಕಾರ್ಮಿಕರ ಸಂಘದ ಅಧ್ಯಕ್ಷ ಮಂಜುನಾಥ್ ಹಾಗು ಪದಾಧಿಕಾರಿಗಳು, ನಗರಸಭೆ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿಗಳು, ಪೌರಕಾರ್ಮಿಕರು, ಸೇವಾಕರ್ತರಾದ ರಮಾಕಾಂತ್, ನರಸಿಂಹಚಾರ್, ಶ್ರೀನಿವಾಸ್, ಮಾರುತಿ, ಪವನ್‌ಕುಮಾರ್ ಉಡುಪ, ಸುಧೀಂದ್ರ, ವಿವಿಧ ಸಂಘ-ಸಂಸ್ಥೆಗಳ, ರಾಜಕೀಯ ಪಕ್ಷಗಳ ಪದಾಧಿಕಾರಿಗಳು, ಪ್ರಮುಖರು, ಗಣ್ಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.    

ನಾಡಹಬ್ಬ ದಸರಾ ಉತ್ಸವ ಮೆರವಣಿಗೆಗೆ ಚಾಲನೆ

ಭದ್ರಾವತಿ: ನಗರಸಭೆ ನಾಡಹಬ್ಬ ದಸರಾ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಬುಧವಾರ ಉತ್ಸವ ಮೆರವಣಿಗೆ ಹಮ್ಮಿಕೊಳ್ಳಲಾಗಿದ್ದು, ಮಳೆ ಹಿನ್ನೆಲೆಯಲ್ಲಿ ಉತ್ಸವ ಮೆರವಣಿಗೆ ವಿಳಂಬವಾಯಿತು.
ಮಧ್ಯಾಹ್ನ 2:30ಕ್ಕೆ ಆರಂಭಗೊಳ್ಳಬೇಕಿದ್ದ ಉತ್ಸವ ಮೆರವಣಿಗೆ ಸಂಜೆ 4:30 ಆದರೂ ಸಹ ಆರಂಭಗೊಳ್ಳಲಿಲ್ಲ. ಸುಮಾರು 10ಕ್ಕೂ  ಹೆಚ್ಚು ಅಲಂಕೃತಗೊಂಡ ದೇವಾನು ದೇವತೆಗಳು ಪಾಲ್ಗೊಂಡಿದ್ದವು. ಈ ನಡುವೆ ವಿಶ್ವ ಸ್ವರೂಪಿಣಿ ಮಾರಿಯಮ್ಮ ದೇವರು ಹೆಚ್ಚು ಆಕರ್ಷಕವಾಗಿ ಕಂಡು ಬರುವ ಮೂಲಕ ಎಲ್ಲರ ಗಮನ ಸೆಳೆಯತು. ಡೊಳ್ಳು ಕುಣಿತ, ವೀರಗಾಸೆ ಸೇರಿದಂತೆ ಇನ್ನಿತರ ಕಲಾ ತಂಡಗಳು ಭಾಗವಹಿಸಿದ್ದವು.

ಭದ್ರಾವತಿ ನಗರಸಭೆ : ವಿಜೃಂಭಣೆಯಿಂದ ಜರುಗಿದ ಆಯುಧ ಪೂಜೆ

ಭದ್ರಾವತಿ ನಗರಸಭೆ ವತಿಯಿಂದ ನಾಡಹಬ್ಬ ದಸರಾ ಆಚರಣೆ ಹಿನ್ನಲೆಯಲ್ಲಿ ಆಯುಧ ಪೂಜೆ ವಿಜೃಂಭಣೆಯಿಂದ ಜರುಗಿತು.
    ಭದ್ರಾವತಿ, ಅ. ೫: ನಗರಸಭೆ ವತಿಯಿಂದ ನಾಡಹಬ್ಬ ದಸರಾ ಆಚರಣೆ ಹಿನ್ನಲೆಯಲ್ಲಿ ಆಯುಧ ಪೂಜೆ ವಿಜೃಂಭಣೆಯಿಂದ ಜರುಗಿತು.
    ನಗರದ ವಿವಿಧೆಡೆ ಪಂಪ್ ಹೌಸ್‌ಗಳಲ್ಲಿ, ತರೀಕೆರೆ ರಸ್ತೆಯ ನಗರಸಭೆ ಮುಂಭಾಗ ತ್ಯಾಜ್ಯ ವಿಲೇವಾರಿ ವಾಹನಗಳು, ಮುಕ್ತಿ ವಾಹಿನಿ ಸೇರಿದಂತೆ ಎಲ್ಲಾ ವಾಹನಗಳಿಗೆ ಹಾಗು ಸ್ವಚ್ಛತಾ ಪರಿಕರಗಳಿಗೆ ಅರ್ಚಕ ಪವನ್‌ಕುಮಾರ್ ಉಡುಪ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
    ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಪೌರಾಯುಕ್ತ ಮನುಕುಮಾರ್, ದಸರಾ ಆಚರಣೆ ವಿವಿಧ ಸಮಿತಿಗಳ ಅಧ್ಯಕ್ಷರು, ಪದಾಧಿಕಾರಿಗಳು, ಪೌರಾಕಾರ್ಮಿಕರ ಸಂಘದ ಅಧ್ಯಕ್ಷ ಮಂಜುನಾಥ್ ಹಾಗು ಪದಾಧಿಕಾರಿಗಳು, ನಗರಸಭೆ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿಗಳು, ಪೌರಕಾರ್ಮಿಕರು, ಸೇವಾಕರ್ತರಾದ ರಮಾಕಾಂತ್, ನರಸಿಂಹಚಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.    

ಭದ್ರಾವತಿ ನಾಡಹಬ್ಬ ದಸರಾ : ಪ್ರೇಕ್ಷಕರ ಮನಸೂರೆಗೊಂಡ ದಸರಾ ಹಾಸ್ಯ-ಲಾಸ್ಯ

ಭದ್ರಾವತಿ ನಗರಸಭೆ ವತಿಯಿಂದ ನಾಡಹಬ್ಬ ದಸರಾ ಅಂಗವಾಗಿ ಹಳೇನಗರದ ಕನಕಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ದಸರಾ ಹಾಸ್ಯ-ಲಾಸ್ಯ ಕಾರ್ಯಕ್ರಮವನ್ನು ಸಂಸದ ಬಿ.ವೈ ರಾಘವೇಂದ್ರ ಉದ್ಘಾಟಿಸಿದರು.
    ಭದ್ರಾವತಿ, ಅ. ೫ : ನಗರಸಭೆ ವತಿಯಿಂದ ನಾಡಹಬ್ಬ ದಸರಾ ಅಂಗವಾಗಿ ಹಳೇನಗರದ ಕನಕಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ದಸರಾ ಹಾಸ್ಯ-ಲಾಸ್ಯ ಕಾರ್ಯಕ್ರಮವನ್ನು ಸಂಸದ ಬಿ.ವೈ ರಾಘವೇಂದ್ರ ಉದ್ಘಾಟಿಸಿದರು.
    ನಾಡಹಬ್ಬ ದಸರಾ ಕೊನೆಯ ದಿನದ ಸಾಂಸ್ಕೃತಿಕ ಕಾರ್ಯಕ್ರಮ ಬೆಂಗಳೂರಿನ ಗಿಜ್ಜಿ ಗಿಲಿ-ಗಿಲಿ ಕಾರ್ಯಕ್ರಮ ತಂಡದ ಕಲಾವಿದರಿಂದ ನೆರವೇರಿತು. ಕಾರ್ಯಕ್ರಮ ಪ್ರೇಕ್ಷಕರ ಮನಸೂರೆಗೊಂಡಿತು.
ಶಾಸಕ ಬಿ.ಕೆ ಸಂಗಮೇಶ್ವರ್, ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಪೌರಾಯುಕ್ತ ಮನುಕುಮಾರ್, ಅಂತರಾಷ್ಟ್ರೀಯ ಯೋಗಪಟು ಡಿ. ನಾಗರಾಜ್, ದಸರಾ ಆಚರಣೆ ವಿವಿಧ ಸಮಿತಿಗಳ ಅಧ್ಯಕ್ಷರು, ಪದಾಧಿಕಾರಿಗಳು, ಪೌರಾಕಾರ್ಮಿಕರ ಸಂಘದ ಅಧ್ಯಕ್ಷ ಮಂಜುನಾಥ್ ಹಾಗು ಪದಾಧಿಕಾರಿಗಳು, ನಗರಸಭೆ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿಗಳು, ಪೌರಕಾರ್ಮಿಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.    


ಭದ್ರಾವತಿ ನಗರಸಭೆ ವತಿಯಿಂದ ನಾಡಹಬ್ಬ ದಸರಾ ಅಂಗವಾಗಿ ಹಳೇನಗರದ ಕನಕಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ದಸರಾ ಹಾಸ್ಯ-ಲಾಸ್ಯ ಕಾರ್ಯಕ್ರಮ ಪ್ರೇಕ್ಷಕರ ಮನಸೂರೆಗೊಂಡಿತು.

ಆರ್.ಎಸ್ ಸಿಂಚನ ರಾಜ್ಯಮಟ್ಟಕ್ಕೆ ಆಯ್ಕೆ

ಶಿವಮೊಗ್ಗ ಜಿಲ್ಲಾ ಮಟ್ಟದ ೧೪ನೇ ವರ್ಷ ವಯೋಮಿತಿಯ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ ಭದ್ರಾವತಿ ಪೂರ್ಣಪ್ರಜ್ಞಾ ಶಾಲೆಯ ಆರ್.ಎಸ್ ಸಿಂಚನ ತಟ್ಟೆ ಎಸೆತದಲ್ಲಿ(ಡಿಸ್ಕಸ್) ಪ್ರಥಮ ಸ್ಥಾನದೊಂದಿಗೆ ಬಂಗಾರದ ಪದಕ ತಮ್ಮದಾಗಿಸಿಕೊಂಡಿದ್ದಾರೆ. 
    ಭದ್ರಾವತಿ, ಅ. ೫: ಶಿವಮೊಗ್ಗ ಜಿಲ್ಲಾ ಮಟ್ಟದ ೧೪ನೇ ವರ್ಷ ವಯೋಮಿತಿಯ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ ಪೂರ್ಣಪ್ರಜ್ಞಾ ಶಾಲೆಯ ಆರ್.ಎಸ್ ಸಿಂಚನ ತಟ್ಟೆ ಎಸೆತದಲ್ಲಿ( ಡಿಸ್ಕಸ್)) ಪ್ರಥಮ ಸ್ಥಾನದೊಂದಿಗೆ ಬಂಗಾರದ ಪದಕ ತಮ್ಮದಾಗಿಸಿಕೊಂಡಿದ್ದಾರೆ.
    ಜಿಲ್ಲಾಮಟ್ಟದಿಂದ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ಆರ್.ಎಸ್ ಸಿಂಚಿನ ಸಿದ್ದಾರೂಢನಗರದ ನಿವಾಸಿ, ವಿಶ್ವ ಹಿಂದೂ ಪರಿಷತ್(ವಿಎಚ್‌ಪಿ)  ದಕ್ಷಿಣ ಪ್ರಾಂತ್ಯ ಉಪಾಧ್ಯಕ್ಷ ಹಾ. ರಾಮಪ್ಪನವರ ಮೊಮ್ಮಗಳಾಗಿದ್ದು, ಇವರ ತಂದೆ ಕೆ.ಆರ್ ಸತೀಶ್ ಹಾಗು ತಾಯಿ ಮತ್ತು ನಗರದ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಗಣ್ಯರು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡುವಂತಾಗಲಿ ಎಂದು ಅರ್.ಎಸ್ ಸಿಂಚನ ಅವರನ್ನು ಅಭಿನಂದಿಸಿದ್ದಾರೆ.

Monday, October 3, 2022

ಭಕ್ತರ ಗಮನ ಸೆಳೆದ ಶ್ರೀ ಬನಶಂಕರಿ ಅಮ್ಮನವರ ಮಹಿಷಾಸುರ ಮರ್ದಿನಿ ಅಲಂಕಾರ

ಭದ್ರಾವತಿ ಹೊಸ ಸೇತುವೆ ರಸ್ತೆಯಲ್ಲಿರುವ ಶ್ರೀ ಬನಶಂಕರಿ ದೇವಸ್ಥಾನದಲ್ಲಿ ೧೧ನೇ ವರ್ಷದ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ಅಮ್ಮನವರಿಗೆ ಪ್ರತಿದಿನ ವಿವಿಧ ಅಲಂಕಾರ ಕೈಗೊಳ್ಳಲಾಗಿದ್ದು, ಸೋಮವಾರ ಮಹಿಷಾಸುರ ಮರ್ದಿನಿ ಅಲಂಕಾರ ಭಕ್ತರ ಗಮನ ಸೆಳೆಯಿತು.
    ಭದ್ರಾವತಿ, ಅ. ೩: ನಗರದ ಹೊಸ ಸೇತುವೆ ರಸ್ತೆಯಲ್ಲಿರುವ ಶ್ರೀ ಬನಶಂಕರಿ ದೇವಸ್ಥಾನದಲ್ಲಿ ೧೧ನೇ ವರ್ಷದ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ಅಮ್ಮನವರಿಗೆ ಪ್ರತಿದಿನ ವಿವಿಧ ಅಲಂಕಾರ ಕೈಗೊಳ್ಳಲಾಗಿದ್ದು, ಸೋಮವಾರ ಮಹಿಷಾಸುರ ಮರ್ದಿನಿ ಅಲಂಕಾರ ಭಕ್ತರ ಗಮನ ಸೆಳೆಯಿತು.
    ಅಮ್ಮನವರಿಗೆ ಗಜಲಕ್ಷ್ಮಿ, ಸ್ಕಂದ ಮಾತೇ, ರಾಜರಾಜೇಶ್ವರಿ, ಧನಲಕ್ಷ್ಮೀ, ಶಾಖಾಂಬರಿ, ಸಪ್ತಮಿ ಸರಸ್ವತಿ ಮತ್ತು ಮಹಿಷಾಸುರ ಮರ್ದಿನಿ ಅಲಂಕಾರಗಳನ್ನು ಕೈಗೊಳ್ಳಲಾಗಿದ್ದು, ಪ್ರತಿಯೊಂದು ಅಲಂಕಾರ ಸಹ ಭಕ್ತರ ಮನಸೂರೆಗೊಂಡಿತು. ಅಲ್ಲದೆ ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮಗಳು, ಅನ್ನಸಂತರ್ಪಣೆ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ಜರುಗಿದವು.
    ನಗರದ ವಿವಿಧೆಡೆಗಳಿಂದ ಭಕ್ತರು ಪಾಲ್ಗೊಂಡು ಅಮ್ಮನವರ ದರ್ಶನ ಪಡೆದು ಕೃಪೆಗೆ ಪಾತ್ರರಾದರು. ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ನಾಮಕರಣ ಹಾಗು ಹೆಚ್ಚುವರಿ ನಾಮಕರಣ ಕಾರ್ಯಕಾರಿ ಸಮಿತಿ ಸದಸ್ಯರು ಸೇರಿದಂತೆ ಸೇವಾಕರ್ತರು ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯುವಲ್ಲಿ ಹೆಚ್ಚಿನ ಶ್ರಮ ವಹಿಸಿದ್ದರು.

ವೀಕ್ಷಕರ ಮೆಚ್ಚುಗೆಗೆ ಪಾತ್ರವಾದ ಮಕ್ಕಳ ದಸರಾ


ಭದ್ರಾವತಿ ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ನಾಡಹಬ್ಬ ದಸರಾ ಅಂಗವಾಗಿ ಸೋಮವಾರ ನಡೆದ ಮಕ್ಕಳ ದಸರಾ ಕಾರ್ಯಕ್ರಮದಲ್ಲಿ ಪುಟಾಣಿ ಮಗುವೊಂದು ಛತ್ರಪತಿ ಶಿವಾಜಿ ಮಹಾರಾಜರ ವೇಷದಲ್ಲಿ ಕಾಣಿಸಿಕೊಂಡು ಗಮನ ಸೆಳೆಯಿತು.
    ಭದ್ರಾವತಿ, ಅ. ೩: ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ನಾಡಹಬ್ಬ ದಸರಾ ಅಂಗವಾಗಿ ಸೋಮವಾರ ನಡೆದ ಮಕ್ಕಳ ದಸರಾ ಕಾರ್ಯಕ್ರಮ ವೀಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು.
    ಚಿಣ್ಣರ ಸಾಂಸ್ಕೃತಿಕ ಸಿರಿ ಹೆಸರಿನಲ್ಲಿ ಕನಕಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಕ್ಕಳಿಂದ ನೃತ್ಯ, ಏಕ ಪಾತ್ರಾಭಿನಯ ಸೇರಿದಂತೆ ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಅಲ್ಲದೆ ಜಾನಪದ ಕಲಾವಿದರಿಂದ ಗೀಗೀ ಪದ ಸಹ ನಡೆಯಿತು.
    ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ದಸರಾ ಆಚರಣೆ ವಿವಿಧ ಸಮಿತಿಗಳ ಅಧ್ಯಕ್ಷರು, ಸದಸ್ಯರು, ಪೌರಾಯುಕ್ತ ಮನುಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಸಮನ್ವಯಾಧಿಕಾರಿ ಪಂಚಾಕ್ಷರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


ಭದ್ರಾವತಿ ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ನಾಡಹಬ್ಬ ದಸರಾ ಅಂಗವಾಗಿ ಸೋಮವಾರ ನಡೆದ ಮಕ್ಕಳ ದಸರಾ ಕಾರ್ಯಕ್ರಮದಲ್ಲಿ ಜಾನಪದ ಕಲಾವಿದರಿಂದ ಗೀಗೀ ಪದ ನಡೆಯಿತು.