Thursday, October 6, 2022

ದೇವಸ್ಥಾನ ಜಾಗದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಗುದ್ದಲಿ ಪೂಜೆ

ಭದ್ರಾವತಿ ನಗರಸಭೆ ವಾರ್ಡ್ ನಂ.೧೪ರ ಹೊಸಮನೆ ಕುರುಬರ ಬೀದಿಯಲ್ಲಿರುವ ಶ್ರೀ ಕೆರೆಕೋಡಮ್ಮ ದೇವಸ್ಥಾನ ಸಮಿತಿ ವತಿಯಿಂದ ನೂತನ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಯಿತು.
    ಭದ್ರಾವತಿ, ಅ. ೬: ನಗರಸಭೆ ವಾರ್ಡ್ ನಂ.೧೪ರ ಹೊಸಮನೆ ಕುರುಬರ ಬೀದಿಯಲ್ಲಿರುವ ಶ್ರೀ ಕೆರೆಕೋಡಮ್ಮ ದೇವಸ್ಥಾನ ಸಮಿತಿ ವತಿಯಿಂದ ನೂತನ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಯಿತು.
    ಗ್ರಾಮ ದೇವತೆ ಶ್ರೀ ಕೆರೆಕೋಡಮ್ಮ ದೇವಸ್ಥಾನಕ್ಕೆ ಸೇರಿದ ಜಾಗದಲ್ಲಿ ಅಂಗನವಾಡಿ ಕಟ್ಟಡ ನಿರ್ಮಿಸಲು ದೇವಸ್ಥಾನ ಸಮಿತಿ ತಿರ್ಮಾನಿಸಿದ್ದು, ಈ ಹಿನ್ನಲೆಯಲ್ಲಿ ಸಮಿತಿ ಅಧ್ಯಕ್ಷ ಕೇಶವ ಅಧ್ಯಕ್ಷತೆಯಲ್ಲಿ ಗುದ್ದಲಿ ಪೂಜೆ ನೆರವೇರಿಸಲಾಯಿತು.
    ಗೌರವಾಧ್ಯಕ್ಷ ನಾಗರಾಜ್ ದೊಡ್ಮನೆ, ಕಾರ್ಯದರ್ಶಿ ಸಂತೋಷ್, ಖಜಾಂಚಿ ಶಿವಕುಮಾರ್, ಸ್ಥಳೀಯ ಪ್ರಮುಖರಾದ ಮಂಜಪ್ಪ, ಮಲ್ಲಿಕಾರ್ಜುನ, ಸತ್ಯನಾರಾಯಣ, ಹಾಲಪ್ಪ, ನರಸಿಂಹಮೂರ್ತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಈದ್ ಮಿಲಾದ್ ಸಡಗರ, ಸಂಭ್ರಮದ ಆಚರಣೆಗೆ ಸಹಕರಿಸಿ ; ಪೊಲೀಸ್ ಇಲಾಖೆಯಿಂದ ಶಾಂತಿ ಸಭೆ

ಮುಸ್ಲಿಂ ಸಮುದಾಯದವರು ಈ ಬಾರಿ ನಗರದಲ್ಲಿ ಈದ್ ಮಿಲಾದ್ ಹಬ್ಬ ವಿಜೃಂಭಣೆಯಿಂದ ಆಚರಿಸಲು ಮುಂದಾಗಿರುವ ಹಿನ್ನಲೆಯಲ್ಲಿ ಗುರುವಾರ ಪೊಲೀಸ್ ಇಲಾಖೆ ವತಿಯಿಂದ ಭದ್ರಾವತಿ ಹಳೇನಗರದ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಶಾಂತಿ ಸಭೆ ನಡೆಸಲಾಯಿತು.
    ಭದ್ರಾವತಿ, ಅ. ೬: ಮುಸ್ಲಿಂ ಸಮುದಾಯದವರು ಈ ಬಾರಿ ನಗರದಲ್ಲಿ ಈದ್ ಮಿಲಾದ್ ಹಬ್ಬ ವಿಜೃಂಭಣೆಯಿಂದ ಆಚರಿಸಲು ಮುಂದಾಗಿರುವ ಹಿನ್ನಲೆಯಲ್ಲಿ ಗುರುವಾರ ಪೊಲೀಸ್ ಇಲಾಖೆ ವತಿಯಿಂದ ಹಳೇನಗರದ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಶಾಂತಿ ಸಭೆ ನಡೆಸಲಾಯಿತು.
    ಮಹಾಮಾರಿ ಕೊರೋನಾ ಹಿನ್ನಲೆಯಲ್ಲಿ ಕಳೆದ ೨ ವರ್ಷಗಳಿಂದ  ಈದ್ ಮಿಲಾದ್ ವಿಜೃಂಭಣೆಯಿಂದ ಆಚರಿಸಲು ಅವಕಾಶವಿರಲಿಲ್ಲ. ಈ ಬಾರಿ ಗೌರಿ-ಗಣೇಶ ಹಬ್ಬ ಆಚರಣೆಯಂತೆ ಈದ್ ಮಿಲಾದ್ ಆಚರಣೆಗೂ ಅವಕಾಶ ನೀಡಲಾಗಿದೆ. ಹಬ್ಬದ ಹಿನ್ನಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಮೆರವಣಿಗೆ ಶಾಂತಿಯುತವಾಗಿ, ಸೌಹಾರ್ದಯುತವಾಗಿ ನಡೆಯಬೇಕು. ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು. ಪ್ರತಿಯೊಬ್ಬರು ಸಹಕಾರ ನೀಡಬೇಕೆಂದು ಕೋರಲಾಯಿತು.
    ಪೊಲೀಸ್ ಉಪಾಧೀಕ್ಷಕ ಜಿತೇಂದ್ರಕುಮಾರ್ ದಯಾಮ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಗರಸಭೆ ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಪೌರಾಯುಕ್ತ ಮನುಕುಮಾರ್, ವೃತ್ತ ನಿರೀಕ್ಷಕರಾದ ರಾಘವೇಂದ್ರ ಕಾಂಡಿಕೆ, ಗುರುರಾಜ್, ಪೊಲೀಸ್ ಇನ್ಸ್‌ಪೆಕ್ಟರ್ ಇ.ಓ  ಮಂಜುನಾಥ್, ಲಕ್ಷ್ಮೀಪತಿ, ಉಪತಹಸೀಲ್ದಾರ್ ಉಪಸ್ಥಿತರಿದ್ದರು.
    ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ವಿನಾಯಕ ಸೇವಾ ಸಮಿತಿ ಅಧ್ಯಕ್ಷ ವಿ. ಕದಿರೇಶ್, ಖಜಾಂಚಿ ಮಣಿ ಎಎನ್‌ಎಸ್, ನಗರಸಭೆ ಸದಸ್ಯ ಕರೀಗೌಡ, ಪರಿಸರ ಅಭಿಯಂತರ ಪ್ರಭಾಕರ್, ಜೆಡಿಎಸ್ ನಗರ ಅಧ್ಯಕ್ಷ ಆರ್. ಕರುಣಾಮೂರ್ತಿ, ಮುಸ್ಲಿಂ ಸಮುದಾಯದ ಪ್ರಮುಖರಾದ ಮುರ್ತುಜಾ ಖಾನ್, ಮಹಮದ್ ಸನಾವುಲ್ಲಾ, ಅಮೀರ್‌ಜಾನ್, ಜೆಬಿಟಿ ಬಾಬು, ಪೊಲೀಸ್ ಉಪವಿಭಾಗದ ಠಾಣಾಧಿಕಾರಿಗಳು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಸಾಂಸ್ಕೃತಿಕ ಭವನ, ರಾಜಕಾಲುವೆ, ಕೆರೆ ಕೋಡಿ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿಸಿ

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಸಂಸದ ಬಿ.ವೈ ರಾಘವೇಂದ್ರರಿಗೆ ಮನವಿ

ಭದ್ರಾವತಿ ನ್ಯೂಟೌನ್ ಭಾಗದಲ್ಲಿ ಮಹಿಳೆಯರ ಸಾಮಾಜಿಕ ಕಾರ್ಯಚಟುವಟಿಕೆಗಳಿಗೆ ಅನುಕೂಲವಾಗುವಂತೆ ಸಾಂಸ್ಕೃತಿಕ ಭವನ ನಿರ್ಮಾಣ ಮಾಡುವ ಸಂಬಂಧ ನಗರಸಭೆ ವತಿಯಿಂದ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈ ಹಿನ್ನಲೆಯಲ್ಲಿ ತಕ್ಷಣ ೧ ಕೋ.ರು. ಬಿಡುಗಡೆಗೊಳಿಸುವಂತೆ ಹಾಗು ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಒತ್ತಾಯಿಸುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗು ಸಂಸದ ಬಿ.ವೈ ರಾಘವೇಂದ್ರ ಅವರಿಗೆ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ ಹಾಗು ಸುವರ್ಣ ಮಹಿಳಾ ವೇದಿಕೆ ವತಿಯಿಂದ ಮನವಿ ಸಲ್ಲಿಸಲಾಗಿದೆ.
    ಭದ್ರಾವತಿ, ಅ. ೬: ನಗರದ ನ್ಯೂಟೌನ್ ಭಾಗದಲ್ಲಿ ಮಹಿಳೆಯರ ಸಾಮಾಜಿಕ ಕಾರ್ಯಚಟುವಟಿಕೆಗಳಿಗೆ ಅನುಕೂಲವಾಗುವಂತೆ ಸಾಂಸ್ಕೃತಿಕ ಭವನ ನಿರ್ಮಾಣ ಮಾಡುವ ಸಂಬಂಧ ನಗರಸಭೆ ವತಿಯಿಂದ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈ ಹಿನ್ನಲೆಯಲ್ಲಿ ತಕ್ಷಣ ೧ ಕೋ.ರು. ಬಿಡುಗಡೆಗೊಳಿಸುವಂತೆ ಹಾಗು ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಒತ್ತಾಯಿಸುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗು ಸಂಸದ ಬಿ.ವೈ ರಾಘವೇಂದ್ರ ಅವರಿಗೆ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ ಹಾಗು ಸುವರ್ಣ ಮಹಿಳಾ ವೇದಿಕೆ ವತಿಯಿಂದ ಮನವಿ ಸಲ್ಲಿಸಲಾಗಿದೆ.
    ಸಾಂಸ್ಕೃತಿಕ ಭವನ ನಿರ್ಮಾಣ ಮಾಡುವ ಸಂಬಂಧ ನಗರಸಭೆ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈ ಹಿನ್ನಲೆಯಲ್ಲಿ ಇಲಾಖೆಗೆ ತಕ್ಷಣ ೧ ಕೋ. ರು. ಬಿಡುಗಡೆಗೊಳಿಸುವುದು. ಜನ್ನಾಪುರ ಸರ್ವೆ ನಂ.೭೦ರ ಜನ್ನಾಪುರ ಕೆರೆಗೆ ಕಲ್ಮಶಗೊಂಡ ನೀರು ಸೇರ್ಪಡೆಗೊಳ್ಳುತ್ತಿದ್ದು, ಇದನ್ನು ತಪ್ಪಿಸಲು ಕೆರೆಯ ಬದಿಯಲ್ಲಿ ರಾಜಕಾಲುವೆ ನಿರ್ಮಾಣ ಮಾಡಲು ನಗರಾಭಿವೃದ್ಧಿ ಇಲಾಖೆಯಿಂದ ನಗರಸಭೆಗೆ ತಕ್ಷಣ ೩ ಕೋ.ರು. ಬಿಡುಗಡೆಗೊಳಿಸುವುದು.
    ನಗರಸಭೆ ವ್ಯಾಪ್ತಿ ಹೊಸಮನೆ ತಮ್ಮಣ್ಣ ಕಾಲೋನಿ ಸಮೀಪದಲ್ಲಿರುವ ಸುಮಾರು ೮೦೦ ವರ್ಷಗಳ ಇತಿಹಾಸವಿರುವ ೫೦ ಎಕರೆ ೨೦ ಗುಂಟೆ ವಿಸ್ತ್ರೀರ್ಣವುಳ್ಳ ಸರ್ಕಾರಿ ಹಿರೇಕೆರೆ ಕೋಡಿ ಬಿದ್ದು, ರಸ್ತೆ ಹಾಳಾಗಿದೆ. ಇದರಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಈ ಹಿನ್ನಲೆಯಲ್ಲಿ ಕೆರೆ ಕೋಡಿ ಹಾಗು ರಸ್ತೆ ನಿರ್ಮಾಣ ಮಾಡಲು ಸುಮಾರು ೧.೫ ಕೋ.ರು. ವಿಶೇಷ ಅನುದಾನ ಬಿಡುಗಡೆಗೊಳಿಸುವ ಸಂಬಂಧ ಸರ್ಕಾರಕ್ಕೆ ಒತ್ತಾಯಿಸುವಂತೆ ಕೋರಲಾಗಿದೆ.
    ಪ್ರಮುಖರಾದ ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್, ಗು ಸುವರ್ಣ ಮಹಿಳಾ ವೇದಿಕೆ ಅಧ್ಯಕ್ಷೆ ರಮಾವೆಂಕಟೇಶ್, ಶೈಲಜಾ ರಾಮಕೃಷ್ಣ, ದೇವಿಕಾ ನಾಗರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

ಎಂಪಿಎಂ ನಿವೃತ್ತ ಉದ್ಯೋಗಿ ಭೀಮರಾವ್ ನಿಧನ

ಭೀಮರಾವ್
    ಭದ್ರಾವತಿ, ಅ. ೬: ನಗರದ ರಾಜ್ಯ ಸರ್ಕಾರಿ ಸ್ವಾಮ್ಯದ ಮೈಸೂರು ಸಕ್ಕರೆ ಕಾರ್ಖಾನೆ ನಿವೃತ್ತ ಉದ್ಯೋಗಿ, ಹುಡ್ಕೋ ಕಾಲೋನಿ ನಿವಾಸಿ ಭೀಮರಾವ್(೬೨) ನಿಧನ ಹೊಂದಿದರು.
    ಪತ್ನಿ ಹಾಗು ಹೆಣ್ಣು ಮಕ್ಕಳು ಇದ್ದರು. ಇವರು ಬುಧವಾರ ರಾತ್ರಿ ಏಕಾಏಕಿ ಅಸ್ವಸ್ಥರಾಗಿದ್ದು, ತಕ್ಷಣ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದರೂ ಸಹ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇವರ ನಿಧನಕ್ಕೆ ಕಾರ್ಮಿಕ ಮುಖಂಡರು, ಗಣ್ಯರು ಸಂತಾಪ ಸೂಚಿಸಿದ್ದಾರೆ.

ಭಾರಿ ಮಳೆಗೆ ಧರೆಗುರುಳಿದ ತೆಂಗಿನ ಮರ

ಭದ್ರಾವತಿ, ಅ. ೬: ನಗರದಲ್ಲಿ ಬುಧವಾರ ಮಧ್ಯಾಹ್ನ ಸುಮಾರು ಎರಡು ಗಂಟೆಗಳ ಕಾಲ ಸುರಿದ ಭಾರಿ ಮಳೆಗೆ ಚನ್ನಗಿರಿ ರಸ್ತೆಯಲ್ಲಿ ತೆಂಗಿನ ಮರ ಏಕಾಏಕಿ ಧರೆಗುರುಳಿ ಬಿದ್ದಿದ್ದು, ಆದರೂ ಯಾವುದೇ ಹಾನಿ ಸಂಭವಿಸಿಲ್ಲ.
ತಾಲೂಕು ಬಿಜೆಪಿ ಮಂಡಲ ಮಾಜಿ ಅಧ್ಯಕ್ಷ ಮಂಗೋಟೆ ರುದ್ರೇಶ್‌ರವರ ಮನೆಯ ಕಾಂಪೌಂಡ್‌ನಲ್ಲಿ ಬಾನೆತ್ತರಕ್ಕೆ ಬೆಳೆದಿದ್ದ ತೆಂಗಿನ ಮರ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು, ತೆಂಗಿನ ಮರ ಧರೆಗುರುಳುವ ವೇಳೆ ರಸ್ತೆಯಲ್ಲಿ ಯಾರು ಸಂಚರಿಸದ ಕಾರಣ ಪ್ರಾಣಹಾನಿ ಸಂಭವಿಸಿಲ್ಲ.


ತೆಂಗಿನ ಮರ ಧರೆಗುರುಳಿದ ಸ್ಥಳದಲ್ಲಿಯೇ ಒಂದು ಕಾರು ನಿಲ್ಲಿಸಲಾಗಿದ್ದು, ಕಾರಿಗೂ ಸಹ ಯಾವುದೇ ಹಾನಿಯಾಗಿಲ್ಲ. ಆದರೆ ವಿದ್ಯುತ್ ತಂತಿಗಳು ಕತ್ತರಿಸಿ ಬಿದ್ದಿದ್ದು, ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಮೆಸ್ಕಾಂ ಸಿಬ್ಬಂದಿಗಳು ದುರಸ್ತಿಪಡಿಸಿ ವಿದ್ಯುತ್ ಸಂಪರ್ಕ ಕಲ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾಂಪೌಂಡ್ ಹಾಗು ಕಬ್ಬಿಣದ ಗೇಟ್ ಸ್ವಲ್ಪ ಪ್ರಮಾಣದಲ್ಲಿ ಹಾನಿಯಾಗಿವೆ.


Wednesday, October 5, 2022

ಭದ್ರಾವತಿಯಲ್ಲಿ ೧೦ ದಿನಗಳ ನಾಡಹಬ್ಬ ದಸರಾ ಆಚರಣೆ ಸಂಪನ್ನ

ಉತ್ಸವ ಮೆರವಣಿಗೆ, ಬನ್ನಿ ಮುಡಿದ ತಹಸೀಲ್ದಾರ್ ಆರ್. ಪ್ರದೀಪ್

ಭದ್ರಾವತಿ ನಾಡಹಬ್ಬ ದಸರಾ ಆಚರಣೆ ಹಿನ್ನಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಉತ್ಸವ ಮೆರವಣಿಗೆಯಲ್ಲಿ ದೇವಾನು ದೇವತೆಗಳು ಪಾಲ್ಗೊಂಡಿರುವುದು.
    ಭದ್ರಾವತಿ, ಅ. ೫: ನಗರಸಭೆ ವತಿಯಿಂದ ಸುಮಾರು ೧೦ ದಿನಗಳ ಕಾಲ ಹಮ್ಮಿಕೊಳ್ಳಲಾಗಿದ್ದ ನಾಡಹಬ್ಬ ದಸರಾ ಆಚರಣೆಗೆ ತಹಸೀಲ್ದಾರ್ ಆರ್. ಪ್ರದೀಪ್‌ರವರು ಬನ್ನಿ ಮುಡಿಯುವ ಮೂಲಕ ಬುಧವಾರ ರಾತ್ರಿ ಸಂಪನ್ನಗೊಳಿಸಿದರು.
    ಹಳೇನಗರದ ಕನಕಮಂಟಪ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕ ರಂಗನಾಥ ಶರ್ಮರವರ ನೇತೃತ್ವದ ತಂಡ ಧಾರ್ಮಿಕ ಆಚರಣೆ ನೆರವೇರಿಸಿತು. ಕೊನೆಯಲ್ಲಿ ತಹಸೀಲ್ದಾರ್ ಆರ್. ಪ್ರದೀಪ್ ಬನ್ನಿ ಮುಡಿಯುವ ಮೂಲಕ ಆಚರಣೆಗೆ ತೆರೆ ಎಳೆದರು. ಸಿಡಿಮದ್ದು ಪ್ರದರ್ಶನ ಹಾಗು ರಾವಣ ಸಂಹಾರ ಎಲ್ಲರ ಗಮನ ಸೆಳೆಯಿತು.


ಭದ್ರಾವತಿ ನಾಡಹಬ್ಬ ದಸರಾ ಆಚರಣೆ ಹಿನ್ನಲೆಯಲ್ಲಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಆರ್. ಪ್ರದೀಪ್ ಬನ್ನಿ ಮುಡಿದರು.
      ಮುಂದಿನ ವರ್ಷ ಇನ್ನೂ ಅದ್ದೂರಿ ಆಚರಣೆ :
    ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ನಮ್ಮ ದೇಶದ ಸಂಸ್ಕೃತಿ, ಪರಂಪರೆ ಇಂದಿನ ಪೀಳಿಗೆಗೆ ಉಳಿಸಿಕೊಡುವ ನಿಟ್ಟಿನಲ್ಲಿ ನಾಡಹಬ್ಬ ದಸರಾ ಆಚರಣೆಯನ್ನು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ಆಚರಿಸಲಾಗಿದೆ. ಮುಂದಿನ ವರ್ಷ ಇನ್ನೂ ಅದ್ದೂರಿಯಾಗಿ ಆಚರಿಸಲು ಪ್ರತಿಯೊಬ್ಬರು ಸಹಕರಿಸಬೇಕೆಂದರು.
    ಇದಕ್ಕೂ ಮೊದಲು ನಗರದ ಬಿ.ಎಚ್ ರಸ್ತೆ ಹುತ್ತಾ ಕಾಲೋನಿಯಿಂದ ಉತ್ಸವ ಮೆರವಣಿಗೆ ಹಮ್ಮಿಕೊಳ್ಳಲಾಗಿದ್ದು, ಮಳೆ ಹಿನ್ನೆಲೆಯಲ್ಲಿ ಉತ್ಸವ ಮೆರವಣಿಗೆ ವಿಳಂಬವಾಯಿತು. ಮಧ್ಯಾಹ್ನ ೨:೩೦ಕ್ಕೆ ಆರಂಭಗೊಳ್ಳಬೇಕಿದ್ದ ಉತ್ಸವ ಮೆರವಣಿಗೆ ಸಂಜೆ ೪:೩೦ ಆದರೂ ಸಹ ಆರಂಭಗೊಳ್ಳಲಿಲ್ಲ. ಸುಮಾರು ೫೦ಕ್ಕೂ  ಹೆಚ್ಚು ಅಲಂಕೃತಗೊಂಡ ದೇವಾನು ದೇವತೆಗಳು ಪಾಲ್ಗೊಂಡಿದ್ದವು. ಈ ನಡುವೆ ವಿಶ್ವ ಸ್ವರೂಪಿಣಿ ಮಾರಿಯಮ್ಮ ದೇವರು ಹೆಚ್ಚು ಆಕರ್ಷಕವಾಗಿ ಕಂಡು ಬರುವ ಮೂಲಕ ಎಲ್ಲರ ಗಮನ ಸೆಳೆಯತು. ಡೊಳ್ಳು ಕುಣಿತ, ವೀರಗಾಸೆ ಸೇರಿದಂತೆ ಇನ್ನಿತರ ಕಲಾ ತಂಡಗಳು ಭಾಗವಹಿಸಿದ್ದವು.


ಭದ್ರಾವತಿ ನಾಡಹಬ್ಬ ದಸರಾ ಆಚರಣೆ ಹಿನ್ನಲೆಯಲ್ಲಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ರಾವಣನ ಸಂಹಾರ ಎಲ್ಲರನ್ನು ಆಕರ್ಷಿಸಿತು. 
     ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಪೌರಾಯುಕ್ತ ಮನುಕುಮಾರ್, ದಸರಾ ಆಚರಣೆ ವಿವಿಧ ಸಮಿತಿಗಳ ಅಧ್ಯಕ್ಷರು, ಪದಾಧಿಕಾರಿಗಳು, ಪೌರಾಕಾರ್ಮಿಕರ ಸಂಘದ ಅಧ್ಯಕ್ಷ ಮಂಜುನಾಥ್ ಹಾಗು ಪದಾಧಿಕಾರಿಗಳು, ನಗರಸಭೆ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿಗಳು, ಪೌರಕಾರ್ಮಿಕರು, ಸೇವಾಕರ್ತರಾದ ರಮಾಕಾಂತ್, ನರಸಿಂಹಚಾರ್, ಶ್ರೀನಿವಾಸ್, ಮಾರುತಿ, ಪವನ್‌ಕುಮಾರ್ ಉಡುಪ, ಸುಧೀಂದ್ರ, ವಿವಿಧ ಸಂಘ-ಸಂಸ್ಥೆಗಳ, ರಾಜಕೀಯ ಪಕ್ಷಗಳ ಪದಾಧಿಕಾರಿಗಳು, ಪ್ರಮುಖರು, ಗಣ್ಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.    

ನಾಡಹಬ್ಬ ದಸರಾ ಉತ್ಸವ ಮೆರವಣಿಗೆಗೆ ಚಾಲನೆ

ಭದ್ರಾವತಿ: ನಗರಸಭೆ ನಾಡಹಬ್ಬ ದಸರಾ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಬುಧವಾರ ಉತ್ಸವ ಮೆರವಣಿಗೆ ಹಮ್ಮಿಕೊಳ್ಳಲಾಗಿದ್ದು, ಮಳೆ ಹಿನ್ನೆಲೆಯಲ್ಲಿ ಉತ್ಸವ ಮೆರವಣಿಗೆ ವಿಳಂಬವಾಯಿತು.
ಮಧ್ಯಾಹ್ನ 2:30ಕ್ಕೆ ಆರಂಭಗೊಳ್ಳಬೇಕಿದ್ದ ಉತ್ಸವ ಮೆರವಣಿಗೆ ಸಂಜೆ 4:30 ಆದರೂ ಸಹ ಆರಂಭಗೊಳ್ಳಲಿಲ್ಲ. ಸುಮಾರು 10ಕ್ಕೂ  ಹೆಚ್ಚು ಅಲಂಕೃತಗೊಂಡ ದೇವಾನು ದೇವತೆಗಳು ಪಾಲ್ಗೊಂಡಿದ್ದವು. ಈ ನಡುವೆ ವಿಶ್ವ ಸ್ವರೂಪಿಣಿ ಮಾರಿಯಮ್ಮ ದೇವರು ಹೆಚ್ಚು ಆಕರ್ಷಕವಾಗಿ ಕಂಡು ಬರುವ ಮೂಲಕ ಎಲ್ಲರ ಗಮನ ಸೆಳೆಯತು. ಡೊಳ್ಳು ಕುಣಿತ, ವೀರಗಾಸೆ ಸೇರಿದಂತೆ ಇನ್ನಿತರ ಕಲಾ ತಂಡಗಳು ಭಾಗವಹಿಸಿದ್ದವು.