Friday, October 14, 2022

ಪ್ರೊ. ಬಿ. ಕೃಷ್ಣಪ್ಪನವರ ಹೋರಾಟದ ದಾರಿ ಇಂದಿನ ಪೀಳಿಗೆಗೆ ಅವಶ್ಯಕ : ಬಿ.ಕೆ ಸಂಗಮೇಶ್ವರ್

ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ಭದ್ರಾವತಿ ತಾಲೂಕು ಶಾಖೆ ವತಿಯಿಂದ ಹಳೇನಗರದ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಶ್ರೀ ಅಕ್ಕಮಹಾದೇವಿ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರೊ. ಬಿ.ಕೃಷ್ಣಪ್ಪನವರ ೮೫ನೇ ಜನ್ಮದಿನ ಸಾಮಾಜಿಕ ನ್ಯಾಯದ ದಿನ ಹಾಗು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
    ಭದ್ರಾವತಿ, ಅ. ೧೪: ಶೋಷಿತರಪರವಾದ ಹೋರಾಟಗಳಿಗೆ ಧ್ವನಿಯಾಗಿ ನ್ಯಾಯ ಒದಗಿಸಿಕೊಟ್ಟ ಪ್ರೊ. ಬಿ. ಕೃಷ್ಣಪ್ಪನವರ ಹೋರಾಟದ ದಾರಿ ಇಂದಿನ ಯುವ ಪೀಳಿಗೆಗೆ ತಿಳಿಸಿಕೊಡುವ ಅನಿವಾರ್ಯತೆ ಇದೆ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.
    ಅವರು ಶುಕ್ರವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ತಾಲೂಕು ಶಾಖೆ ವತಿಯಿಂದ ಹಳೇನಗರದ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಶ್ರೀ ಅಕ್ಕಮಹಾದೇವಿ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರೊ. ಬಿ.ಕೃಷ್ಣಪ್ಪನವರ ೮೫ನೇ ಜನ್ಮದಿನ ಸಾಮಾಜಿಕ ನ್ಯಾಯದ ದಿನ ಹಾಗು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಪ್ರೊ. ಬಿ. ಕೃಷ್ಣಪ್ಪನವರು ದಲಿತರ ಪರವಾದ ಹೋರಾಟಗಳಿಗೆ ಮುನ್ನುಡಿ ಬರೆದವರು. ದಲಿತರನ್ನು ಸಂಘಟಿಸಿ ರಾಜ್ಯಾದ್ಯಂತ ಹಲವಾರು ಚಳುವಳಿಗಳನ್ನು ರೂಪಿಸಿ ಅನ್ಯಾಯದ ವಿರುದ್ಧ ನ್ಯಾಯ ಒದಗಿಸಿಕೊಟ್ಟರು. ಇವರ ಹೋರಾಟಗಳು, ಆದರ್ಶತನಗಳು ಎಂದಿಗೂ ಮಾದರಿಯಾಗಿದ್ದು, ಇಂದಿನ ಯುವ ಪೀಳಿಗೆ ಇವರ ದಾರಿಯಲ್ಲಿ ಸಾಗುವಂತಾಗಬೇಕೆಂದರು.
    ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಟಿ.ಎಚ್ ಹಾಲೇಶಪ್ಪ, ತಾಲೂಕು ಪ್ರಧಾನ ಸಂಚಾಲಕ ಎಂ. ಪಳನಿರಾಜ್, ಜೆಡಿಎಸ್ ಮುಖಂಡರಾದ ಶಾರದ ಅಪ್ಪಾಜಿ, ಬಿಜೆಪಿ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಪ್ರಮುಖರಾದ ಮಂಗೋಟೆ ರುದ್ರೇಶ್, ಬಸವರಾಜ್ ಬಿ. ಅನೇಕೊಪ್ಪ, ಮಹಾದೇವಸ್ವಾಮಿ, ಶೇಷಪ್ಪ, ಪುಟ್ಟರಾಜ್, ಗೋಕುಲ್‌ಕೃಷ್ಣನ್, ಆನಂದಪ್ಪ, ಗೋವಿಂದರಾಜು, ಹರೀಶ್, ಗೋಪಾಲಪ್ಪ, ರುದ್ರೇಶ್, ಪ್ರಭು, ನಿಂಗಣ್ಣ, ಮೂರ್ತಿ, ಕಲ್ಲೇಶಪ್ಪ ಮತ್ತು ಶಿವಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಅತಿಹೆಚ್ಚು ಅಂಕಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಲಾಯಿತು. ಇದಕ್ಕೂ ಮೊದಲು ಅಂಡರ್‌ಬ್ರಿಡ್ಜ್ ಬಳಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ನೆರವೇರಿಸಲಾಯಿತು.

ವಿಐಎಸ್‌ಎಲ್ ಖಾಸಗಿಕರಣ ಪ್ರಕ್ರಿಯೆ ಕೈಬಿಟ್ಟಿರುವುದು ತಾತ್ಕಾಲಿಕ : ಮುಂದಿನ ಹೋರಾಟ ಅಗತ್ಯ

ಪ್ರಧಾನಿ, ಕೇಂದ್ರ ಸಚಿವರು, ಸಂಸದರಿಗೆ ಕೃತಜ್ಞತೆ  : ಜಿ. ಧರ್ಮಪ್ರಸಾದ್

ಭದ್ರಾವತಿಯಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಮಾತನಾಡಿದರು.
    ಭದ್ರಾವತಿ, ಅ. ೧೪: ಬಿ.ವೈ ರಾಘವೇಂದ್ರ ಸೇರಿದಂತೆ ರಾಜ್ಯದ ಎಲ್ಲಾ ಸಂಸದರು ಹಾಗು ಸ್ಥಳೀಯ ಮುಖಂಡರ ಪ್ರಯತ್ನದ ಫಲವಾಗಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನು ಕೇಂದ್ರ ಸರ್ಕಾರ ಖಾಸಗಿಕರಣಗೊಳಿಸುವ ಪ್ರಕ್ರಿಯೆಯನ್ನು ತಾತ್ಕಾಲಿಕ ಕೈಬಿಟ್ಟಿದ್ದು, ಇದೀಗ ಕಾರ್ಖಾನೆಗೆ ಅಗತ್ಯವಿರುವ ಬಂಡವಾಳ ಹೂಡುವ ಸಮಯ ಎದುರಾಗಿದೆ ಎಂದು ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಹೇಳಿದರು.
    ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾರ್ಖಾನೆಯನ್ನು ಮುನ್ನಡೆಸಿಕೊಂಡು ಹೋಗಲು ಬಂಡವಾಳಶಾಹಿಗಳು ಯಾರು ಸಹ ಮುಂದೆ ಬಾರದಿರುವ ಹಿನ್ನಲೆಯಲ್ಲಿ ಸರ್ಕಾರ ತಾತ್ಕಾಲಿಕವಾಗಿ ಖಾಸಗಿಕರಣಗೊಳಿಸುವ ಪ್ರಕ್ರಿಯೆಯನ್ನು ಕೈಬಿಟ್ಟಿದ್ದು, ಇದರಿಂದಾಗಿ ಮುಂದಿನಗಳಲ್ಲಿ ಉಕ್ಕು ಪ್ರಾಧಿಕಾರ ಬಂಡವಾಳ ಹೂಡುವ ನಿರೀಕ್ಷೆಯನ್ನು ಕ್ಷೇತ್ರದ ಜನರು ಎದುರು ನೋಡುವಂತಾಗಿದೆ ಎಂದರು.
    ಈ ಬೆಳವಣಿಗೆಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಸೇರಿದಂತೆ ರಾಜ್ಯದ ಎಲ್ಲಾ ಸಂಸದರ ಹಾಗು ಸ್ಥಳೀಯ ಮುಖಂಡರು ನಡೆಸಿದ ಪ್ರಯತ್ನ ಕಾರಣವಾಗಿದೆ ಎಂದರೆ ತಪ್ಪಾಗಲಾರದು. ಕೇಂದ್ರ ಸರ್ಕಾರದ ಕ್ರಮ ಕೇವಲ ತಾತ್ಕಾಲಿಕವಾಗಿದ್ದು, ಈ ಅವಧಿಯಲ್ಲಿ ನಮ್ಮ ಮುಂದಿನ ಹೋರಾಟ ರೂಪಿಸಿಕೊಳ್ಳಬೇಕಾಗಿದೆ. ಕೇಂದ್ರ ಉಕ್ಕು ಪ್ರಾಧಿಕಾರ ಕಾರ್ಖಾನೆಗೆ ಅಗತ್ಯವಿರುವ ಬಂಡವಾಳ ಹೂಡುವಂತೆ ಒತ್ತಾಯಿಸಬೇಕಾಗಿದೆ. ಇಲ್ಲವಾದಲ್ಲಿ ಪುನಃ ಖಾಸಗಿಕರಣ ಭೀತಿ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
    ಪ್ರಸ್ತುತ ಕಾರ್ಖಾನೆಯನ್ನು ಖಾಸಗಿಕರಣ ಪ್ರಕ್ರಿಯೆಯಿಂದ ಕೈಬಿಟ್ಟಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಹಣಕಾಸು ಹಾಗು ಉಕ್ಕು ಸಚಿವರಿಗೆ ಮತ್ತು ರಾಜ್ಯದ ಎಲ್ಲಾ ಸಂಸದರಿಗೆ ಕ್ಷೇತ್ರದ ನಾಗರೀಕರ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
    ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಚನ್ನೇಶ್, ಜಿಲ್ಲಾ ಪ್ರಮುಖರಾದ ಎಂ. ಮಂಜುನಾಥ್, ಆರ್.ಎಸ್ ಶೋಭಾ, ದೇವರನರಸೀಪುರ ಚಂದ್ರು, ಕವಿತಾರಾವ್, ಬಿ.ಎಸ್ ಶ್ರೀನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಧರ್ಮಲಿಂಗಂ ನಿಧನ

ಧರ್ಮಲಿಂಗಂ
    ಭದ್ರಾವತಿ, ಅ. ೧೪ : ನಗರದ ಸೆವೆನ್ಸ್ ಕಬಡ್ಡಿ ತಂಡದ ಹಿರಿಯ ಆಟಗಾರ, ಸುರುಗಿತೋಪು ನಿವಾಸಿ ಧರ್ಮಲಿಂಗಂ(೬೫) ನಿಧನ ಹೊಂದಿದರು.
    ಓರ್ವ ಪುತ್ರ, ಓರ್ವ ಪುತ್ರಿ ಇದ್ದರು. ಧರ್ಮಲಿಂಗಂ ಎಂಪಿಎಂ ಕಾರ್ಖಾನೆಯಲ್ಲಿ ಗುತ್ತಿಗೆ ಕಾರ್ಮಿಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಕಬಡ್ಡಿ ಕ್ರೀಡೆಯಲ್ಲಿ ತೊಡಗಿಸಿಕೊಂಡು ಯುವ ಕ್ರೀಡಾಪಟುಗಳಿಗೆ ಮಾರ್ಗದರ್ಶಕರಾಗಿದ್ದರು.
    ಇವರ ಅಂತ್ಯಕ್ರಿಯೆ ಬೈಪಾಸ್ ರಸ್ತೆ ಮಿಲ್ಟ್ರಿಕ್ಯಾಂಪ್‌ನಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಶುಕ್ರವಾರ ಸಂಜೆ ನೆರವೇರಿತು. ಇವರ ನಿಧನಕ್ಕೆ ಕಬಡ್ಡಿ ಕೇಸರಿ ಪ್ರಶಸ್ತಿ ವಿಜೇತ ಎಚ್.ಆರ್ ರಂಗನಾಥ್ ಸೇರಿದಂತೆ ಕಬಡ್ಡಿ ಕ್ರೀಡಾಪಟುಗಳು ಸಂತಾಪ ಸೂಚಿಸಿದ್ದಾರೆ.

ಮದ್ಯವರ್ಜನ ಶಿಬಿರ ಮಧ್ಯಮ ವರ್ಗದವರ ಕುಟುಂಬಗಳಿಗೆ ಹೆಚ್ಚಿನ ಸಹಕಾರಿ : ಶಾರದ ಅಪ್ಪಾಜಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ಹಳೇನಗರ ವಲಯ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಆರಕ್ಷಕ ಠಾಣೆ, ಪತ್ರಕರ್ತರ ಸಂಘ ಹಾಗು ನವಜೀವನ ಸಮಿತಿ ಮತ್ತು ಇನ್ನಿತರ ಸ್ಥಳೀಯ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಲೋಯರ್ ಹುತ್ತಾ ಶ್ರೀ ಭದ್ರೇಶ್ವರ ಸಮುದಾಯ ಭವನದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ೧೬೦೪ನೇ ಮದ್ಯವರ್ಜನ ಶಿಬಿರ ಜೆಡಿಎಸ್ ಪಕ್ಷದ ಮುಖಂಡರಾದ ಶಾರದ ಅಪ್ಪಾಜಿ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.
    ಭದ್ರಾವತಿ, ಅ. ೧೪ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಮ್ಮಿಕೊಳ್ಳಲಾಗುತ್ತಿರುವ ಮದ್ಯವರ್ಜನ ಶಿಬಿರ ಮಧ್ಯಮ ವರ್ಗದವರ ಕುಟುಂಬಗಳಿಗೆ ಹೆಚ್ಚಿನ ಸಹಕಾರಿಯಾಗಿದೆ ಎಂದು ಜೆಡಿಎಸ್ ಪಕ್ಷದ ಮುಖಂಡರಾದ ಶಾರದ ಅಪ್ಪಾಜಿ ಹೇಳಿದರು.
    ಅವರು ಶುಕ್ರವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ಹಳೇನಗರ ವಲಯ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಆರಕ್ಷಕ ಠಾಣೆ, ಪತ್ರಕರ್ತರ ಸಂಘ ಹಾಗು ನವಜೀವನ ಸಮಿತಿ ಮತ್ತು ಇನ್ನಿತರ ಸ್ಥಳೀಯ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಲೋಯರ್ ಹುತ್ತಾ ಶ್ರೀ ಭದ್ರೇಶ್ವರ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ೧೬೦೪ನೇ ಮದ್ಯವರ್ಜನ ಶಿಬಿರ ಉದ್ಘಾಟಿಸಿ ಮಾತನಾಡಿದರು.
    ಪ್ರಸ್ತುತ ಬಹಳಷ್ಟು ಮಧ್ಯಮ ವರ್ಗದ ಕುಟುಂಬಗಳಲ್ಲಿ ಮಹಿಳೆಯರೇ ಕುಟುಂಬದ ಹೆಚ್ಚಿನ ಜವಾಬ್ದಾರಿ ನಿಭಾಯಿಸುವಂತಾಗಿದೆ. ಅದರಲ್ಲೂ ಕೆಲವು ಕುಟುಂಬಗಳಲ್ಲಿ ಪುರುಷರು ಮದ್ಯವ್ಯಸನಕ್ಕೆ ಒಳಗಾಗುತ್ತಿರುವುದು ಮಹಿಳೆಯರನ್ನು ಹೆಚ್ಚಿನ ಸಂಕಷ್ಟಕ್ಕೆ ಒಳಗಾಗುವಂತೆ ಮಾಡುತ್ತಿದೆ. ಇದನ್ನು ಅರ್ಥ ಮಾಡಿಕೊಂಡು ಈ ಶಿಬಿರದ ಸದ್ಬಳಕೆ ಮಾಡಿಕೊಳ್ಳಬೇಕೆಂದರು.
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಮಹಿಳೆಯರು ಪ್ರಮುಖ ಪಾತ್ರವಹಿಸುತ್ತಿದ್ದಾರೆ. ಈ ಯೋಜನೆಯಿಂದ ಪಡೆಯುವ ಸಾಲದ ಹಣ ದುರುಪಯೋಗವಾಗದಂತೆ ಎಚ್ಚರವಹಿಸಬೇಕು. ಮಹಿಳೆಯರಿಗೆ ಹಲವಾರು ಉದ್ಯೋಗಾವಕಾಶಗಳಿವೆ. ಅವುಗಳನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸದೃಢರಾಗುವಂತೆ ಕರೆ ನೀಡಿದರು.
    ನ್ಯಾಯವಾದಿ ಮಂಗೋಟೆ ರುದ್ರೇಶ್ ಮಾತನಾಡಿ, ಮದ್ಯವ್ಯಸನವೇ ಜೀವನವಲ್ಲ. ನಮ್ಮನ್ನು ನಂಬಿರುವ ಬಹಳಷ್ಟು ಮಂದಿ ನಮ್ಮೊಂದಿಗಿದ್ದಾರೆ. ಅವರ ಭವಿಷ್ಯದ ಬಗ್ಗೆ ಅಲೋಚಿಸುವ ಮೂಲಕ ನೆಮ್ಮದಿಕಂಡುಕೊಳ್ಳಬೇಕಾಗಿದೆ ಎಂದರು.
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಜಿಲ್ಲಾ ನಿರ್ದೇಶಕ ಜೆ. ಚಂದ್ರಶೇಖರ್, ನಗರಸಭೆ ಉಪಾಧ್ಯಕ್ಷ ಚನ್ನಪ್ಪ, ಮದ್ಯವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷೆ ಆರ್. ಕರುಣಾಮೂರ್ತಿ,  ಓ ಶಕ್ತಿ ಡೆವಲಪರ‍್ಸ್ ಅಶೋಕ್ ಕುಮಾರ್, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಪಾಲಾಕ್ಷಪ್ಪ ಮತ್ತು ಜಯರಾಂ ಗೊಂದಿ, ಗೋಕುಲಕೃಷ್ಣ, ಎಂ. ರಾಜು ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಜಿ. ಅನಂದಕುಮಾರ್ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಯೋಜನಾಧಿಕಾರಿ ಪ್ರಕಾಶ್ ಸ್ವಾಗತಿಸಿದರು.

Thursday, October 13, 2022

ಅ.೧೬ರಂದು ಜನ್ನಾಪುರ ಲಿಂಗಾಯತರ ಬೀದಿ ವಿನಾಯಕ ಮೂರ್ತಿ ವಿಸರ್ಜನೆ

ಭದ್ರಾವತಿ ನಗರಸಭೆ ವ್ಯಾಪ್ತಿಯ ಜನ್ನಾಪುರ ಲಿಂಗಾಯತರ ಬೀದಿಯಲ್ಲಿ ಸ್ವಾಗತ್ ಯುವಕರ ಸಂಘದ ವತಿಯಿಂದ ೨೫ನೇ ವರ್ಷದ ವಿನಾಯಕ ಮಹೋತ್ಸವ ಅಂಗವಾಗಿ ಪ್ರತಿಷ್ಠಾಪಿಸಲಾಗಿರುವ ವಿನಾಯಕ ಮೂರ್ತಿ ವಿಸರ್ಜನೆ ಅ.೧೬ರ ಭಾನುವಾರ ನಡೆಯಲಿದ್ದು, ಗುರುವಾರ ಸತ್ಯನಾರಾಯಣ ಪೂಜೆ, ಗಣಹೋಮ, ಅನ್ನಸಂತರ್ಪಣೆ ಕಾರ್ಯಕ್ರಮಗಳು ಜರುಗಿದವು. ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
    ಭದ್ರಾವತಿ, ಅ. ೧೩ : ನಗರಸಭೆ ವ್ಯಾಪ್ತಿಯ ಜನ್ನಾಪುರ ಲಿಂಗಾಯತರ ಬೀದಿಯಲ್ಲಿ ಸ್ವಾಗತ್ ಯುವಕರ ಸಂಘದ ವತಿಯಿಂದ ೨೫ನೇ ವರ್ಷದ ವಿನಾಯಕ ಮಹೋತ್ಸವ ಅಂಗವಾಗಿ ಪ್ರತಿಷ್ಠಾಪಿಸಲಾಗಿರುವ ವಿನಾಯಕ ಮೂರ್ತಿ ವಿಸರ್ಜನೆ ಅ.೧೬ರ ಭಾನುವಾರ ನಡೆಯಲಿದೆ.
    ಈ ಬಾರಿ ಅಯೋಧ್ಯೆ ಶ್ರೀರಾಮ ಮಂದಿರ ಮಾದರಿ ಭವ್ಯವಾದ ಪ್ರತಿಷ್ಠಾಪನಾ ವೇದಿಕೆ ನಿರ್ಮಿಸುವ ಮೂಲಕ ಅದ್ದೂರಿಯಾಗಿ ವಿನಾಯಕ ಮಹೋತ್ಸವ ಆಚರಿಸಲಾಗುತ್ತಿದ್ದು, ಗುರುವಾರ ಸತ್ಯನಾರಾಯಣ ಪೂಜೆ, ಗಣಹೋಮ, ಅನ್ನಸಂತರ್ಪಣೆ ಕಾರ್ಯಕ್ರಮಗಳು ಜರುಗಿದವು.
     ಶಾಸಕರಾದ ಬಿ.ಕೆ ಸಂಗಮೇಶ್ವರ್,  ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್‌ರವರ ತಾಯಿ ಉಮಾದೇವಿ, ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಉಪಾಧ್ಯಕ್ಷ ಚನ್ನಪ್ಪ, ಸದಸ್ಯ ಕಾಂತ್‌ರಾಜ್, ಯುವ ಮುಖಂಡರಾದ ಬಿ.ಎಸ್ ಗಣೇಶ್, ಬಿವಿಕೆ ಕೃಷ್ಣರಾಜ್, ಹರೀಶ್, ಸಂಘದ ಗೌರವಾಧ್ಯಕ್ಷ ಆರ್. ವೇಣುಗೋಪಾಲ್, ಅಧ್ಯಕ್ಷ ಸುಂದರ್, ಉಪಾಧ್ಯಕ್ಷ ಎಚ್ ಮಧುಸೂಧನ್, ಪ್ರಧಾನ ಕಾರ್ಯದರ್ಶಿ ಹರ್ಷ, ಮನೋಜ್ ಕುಮಾರ್, ಸಹ ಕಾರ್ಯದರ್ಶಿ ಧನುಷ್, ಪವನ್, ಮಂಜು, ಅರುಣ, ಸಂತೋಷ್, ಖಜಾಂಚಿ ಜಗದೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಕಾರ್ಯಕರ್ತರು, ಜನ್ನಾಪುರ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳ ನಿವಾಸಿಗಳು ಪಾಲ್ಗೊಂಡಿದ್ದರು.
    ಅ.೧೬ರಂದು ಜನ್ನಾಪುರ ಕೆರೆಯಲ್ಲಿ ಮೂರ್ತಿ ವಿಸರ್ಜನೆ ನಡೆಯಲಿದ್ದು, ಇದಕ್ಕೂ ಮೊದಲು ವಿವಿಧ ಕಲಾತಂಡಗಳೊಂದಿಗೆ ರಾಜಬೀದಿ ಉತ್ಸವ ಮೆರವಣಿಗೆ ನಡೆಯಲಿದೆ.

ಅ.೧೪ರಂದು ಪ್ರೊ. ಬಿ. ಕೃಷ್ಣಪ್ಪ ೮೫ನೇ ಜನ್ಮದಿನ

    ಭದ್ರಾವತಿ, ಅ. ೧೩: ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ತಾಲೂಕು ಶಾಖೆ ವತಿಯಿಂದ ಅ. ೧೪ರಂದು ಬೆಳಿಗ್ಗೆ ೧೧ ಗಂಟೆಗೆ ಹಳೇನಗರದ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಶ್ರೀ ಅಕ್ಕಮಹಾದೇವಿ ಸಮುದಾಯ ಭವನದಲ್ಲಿ ಪ್ರೊ. ಬಿ.ಕೃಷ್ಣಪ್ಪನವರ ೮೫ನೇ ಜನ್ಮದಿನ ಸಾಮಾಜಿಕ ನ್ಯಾಯದ ದಿನ ಹಾಗು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
    ತಾಲೂಕಿನಲ್ಲಿ ೭೦ರ ದಶಕದಲ್ಲಿ ದಲಿತ ಚಳುವಳಿ ಹುಟ್ಟು ಹಾಕಿ ಶೋಷಿತರ ಪರವಾಗಿ ಹೋರಾಟದ ಧ್ವನಿಯಾಗುವ ಮೂಲಕ ದಲಿತರನ್ನು ಜಾಗೃತಗೊಳಿಸಿದ ಪ್ರೊ. ಬಿ. ಕೃಷ್ಣಪ್ಪನವರು ಚಳುವಳಿಯನ್ನು ರಾಜ್ಯಾದ್ಯಂತ ವಿಸ್ತರಿಸುವ ಜೊತೆಗೆ ಹಲವು ಹೋರಾಟಗಳಿಗೆ ಶಕ್ತಿ ತುಂಬಿದರು. ದಲಿತರಪರವಾದ ಹೋರಾಟಗಳಿಗೆ ನ್ಯಾಯ ಒದಗಿಸಿಕೊಟ್ಟರು. ದಲಿತರಿಗೆ ಸ್ವಾಭಿಮಾನದ ಬದುಕು ರೂಪಿಸಿಕೊಟ್ಟರು. ಈ ಹಿನ್ನಲೆಯಲ್ಲಿ ಇವರ ಜನ್ಮದಿನ ಆಚರಿಸಲಾಗುತ್ತಿದ್ದು, ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು, ಮಹಿಳೆಯರು, ಶೋಷಿತ ಸಮುದಾಯದವರು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ತಾಲೂಕು ಸಂಚಾಲಕ ಎಂ. ಪಳನಿರಾಜ್ ಕೋರಿದ್ದಾರೆ.

ಬಾಬಳ್ಳಿ ಗ್ರಾಮದಲ್ಲಿ ಅ.೧೫ರಂದು ವಿದ್ಯುತ್ ಅದಾಲತ್




    ಭದ್ರಾವತಿ, ಅ. ೧೩: ಗ್ರಾಮೀಣ ಪ್ರದೇಶದಲ್ಲಿನ ವಿದ್ಯುತ್ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರದ ಆದೇಶದಂತೆ ಮೆಸ್ಕಾಂ ವತಿಯಿಂದ ಗ್ರಾಮ ವಿದ್ಯುತ್ ಅದಾಲತ್ ಹಮ್ಮಿಕೊಳ್ಳಲಾಗಿದೆ.
    ಅ.೧೫ರಂದು ಬೆಳಿಗ್ಗೆ ೧೦.೩೦ಕ್ಕೆ ಗ್ರಾಮಾಂತರ ಉಪವಿಭಾಗ, ಘಟಕ-೩ರ ಕೂಡ್ಲಿಗೆರೆ ಶಾಖೆಯಲ್ಲಿನ ಕಾಗೆಕೋಡಮಗ್ಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಬಳ್ಳಿ ಗ್ರಾಮದಲ್ಲಿ ವಿದ್ಯುತ್ ಅದಾಲತ್ ಹಮ್ಮಿಕೊಳ್ಳಲಾಗಿದೆ.
    ಪಂಚಾಯಿತಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮಸ್ಥರು ಅದಾಲತ್‌ನಲ್ಲಿ ಭಾಗವಹಿಸಿ ವಿದ್ಯುತ್ ಸಮಸ್ಯೆಗಳ ಬಗ್ಗೆ ಅಹವಾಲುಗಳಿದ್ದಲ್ಲಿ ಪರಿಹರಿಸಿಕೊಳ್ಳಲು ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.