Sunday, December 18, 2022

ದೇವಸ್ಥಾನ ಆವರಣದಲ್ಲಿ ವೃದ್ಧೆ ಭಿಕ್ಷಿಕಿ ಕೊಲೆ ಪ್ರಕರಣ : ಓರ್ವನ ಸೆರೆ

ಪ್ರಕರಣ ಬೇಧಿಸುವಲ್ಲಿ ಯಶಸ್ವಿಯಾದ ಪೇಪರ್‌ಟೌನ್ ಪೊಲೀಸರು

ಭದ್ರಾವತಿ ತಾಲೂಕಿನ ಇತಿಹಾಸ ಪ್ರಸಿದ್ದ ಸುಣ್ಣದಹಳ್ಳಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಭಕ್ತರಿಂದ ಭಿಕ್ಷೆ ಬೇಡಿ ಬದುಕು ಸಾಗಿಸುತ್ತಿದ್ದ ವೃದ್ಧೆಯೊಬ್ಬರ ಕೊಲೆ ಪ್ರಕರಣ ಬೇಧಿಸುವಲ್ಲಿ ಪೇಪರ್‌ಟೌನ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
    ಭದ್ರಾವತಿ, ಡಿ. ೧೮: ತಾಲೂಕಿನ ಇತಿಹಾಸ ಪ್ರಸಿದ್ದ ಸುಣ್ಣದಹಳ್ಳಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಭಕ್ತರಿಂದ ಭಿಕ್ಷೆ ಬೇಡಿ ಬದುಕು ಸಾಗಿಸುತ್ತಿದ್ದ ವೃದ್ಧೆಯೊಬ್ಬರ ಕೊಲೆ ಪ್ರಕರಣ ಬೇಧಿಸುವಲ್ಲಿ ಪೇಪರ್‌ಟೌನ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
    ಸುಣ್ಣದಹಳ್ಳಿ ಗ್ರಾಮದ ನಿವಾಸಿ ಸುಮಾರು ೭೦ ವರ್ಷ ವಯಸ್ಸಿನ ವೃದ್ಧೆ ಶಂಕ್ರಮ್ಮ ಕೊಲೆಯಾಗಿದ್ದು, ಈ ಸಂಬಂಧ ಓರ್ವನನ್ನು ಬಂಧಿಸಿದ್ದಾರೆ. ಶಂಕ್ರಮ್ಮ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಭಕ್ತರಿಂದ ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದರು. ರಾತ್ರಿ ವೇಳೆ ದೇವಸ್ಥಾನ ಎದುರಿನ ಅಂತರಘಟ್ಟಮ್ಮ ದೇವರ ಗುಡಿಯ ಕಾಂಪೌಂಡ್ ಒಳಭಾಗದಲ್ಲಿ ಮಲಗುತ್ತಿದ್ದರು. ಡಿ.೩ ರಂದು ಬೆಳಿಗ್ಗೆ ಇವರು ಮೃತಪಟ್ಟಿರುವುದಾಗಿ ಪೊಲೀಸರಿಗೆ ದೇವಸ್ಥಾನದ ಅರ್ಚಕರು ಕರೆ ಮಾಡಿ ಮಾಹಿತಿ ನೀಡಿದ್ದಾರೆ.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಎರಡೂ ಕಿವಿಯಲ್ಲಿದ್ದ ಚಿನ್ನದ ಓಲೆಗಳು ಮತ್ತು ಮೂಗು ಬಟ್ಟನ್ನು ಕಿತ್ತುಕೊಂಡು ಕೊಲೆ ಮಾಡಿ ಹೋಗಿರುತ್ತಾರೆಂದು ಈ ನಡುವೆ ಶಂಕ್ರಮ್ಮರವರ ಮೊಮ್ಮಗಳು ದೂರು ನೀಡಿದ್ದರು.  ಈ  ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಪ್ರಕರಣ ಬೇಧಿಸಲು ಪೊಲೀಸ್ ಉಪಾಧೀಕ್ಷಕ ಜಿತೇಂದ್ರಕುಮಾರ ದಯಾಮ ಮಾರ್ಗದರ್ಶನದಲ್ಲಿ ಠಾಣೆಯ ಪೊಲೀಸ್  ನಿರೀಕ್ಷಕ ಈ.ಓ ಮಂಜುನಾಥ್‌ರವರ ನೇತೃತ್ವದಲ್ಲಿ ಠಾಣಾಧಿಕಾರಿ ಶಿಲ್ಪಾ ನಾಯನೇಗಲಿ ಮತ್ತು ಸಿಬ್ಬಂದಿಗಳಾದ ರತ್ನಾಕರ, ವಾಸುದೇವ, ಚಿನ್ನನಾಯ್ಕ, ಹನಮಂತ ಅವಟಿ, ಆದರ್ಶ ಶೆಟ್ಟಿ, ಮೌನೇಶ ಶೀಖಲ್, ಆರ್. ಅರುಣ್ ಮತ್ತು ವಿಕ್ರಮ್ ಅವರನ್ನೊಳಗೊಂಡ ತಂಡ ರಚಿಸಲಾಗಿತ್ತು.
    ಡಿ.೧೭ರಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಿ ಕೊಲೆಯಾದ ಶಂಕ್ರಮ್ಮರವರ ಮೈಮೇಲಿಂದ ಕಿತ್ತುಕೊಂಡಿದ್ದ ಅಂದಾಜು ೧೪,೦೦೦ ರು. ಮೌಲ್ಯದ ಒಂದು ಜೊತೆ ಬಂಗಾರದ ಕಿವಿ ಓಲೆ ಮತ್ತು ಮೂಗುತಿಯನ್ನು ವಶಪಡಿಸಿಕೊಳ್ಳಲಾಗಿದೆ. ಡಿ.೨ ರಂದು ರಾತ್ರಿ ಶಂಕ್ರಮ್ಮ ರವರ ಕಿವಿಯಲ್ಲಿದ್ದ ಬಂಗಾರದ ಓಲೆ ಮತ್ತು ಮೂಗಿನಲ್ಲಿದ್ದ ಮೂಗು ಬಟ್ಟನ್ನು ಕಿತ್ತುಕೊಳ್ಳುವ ಸಂಬಂಧ ಆಕೆಯ ಕುತ್ತಿಗೆ ಹಿಸುಕಿ ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ ಎಂಬುದು ಪೊಲೀಸರ ವಿಚಾರಣೆಯಲ್ಲಿ ತಿಳಿದು ಬಂದಿದೆ. ಯಾವುದೇ ಸುಳಿವು ಇಲ್ಲದ ಜಟಿಲವಾದ ಕೊಲೆ ಪ್ರಕರಣವನ್ನು ಪತ್ತೆ ಮಾಡಿದ ತನಿಖಾ ತಂಡದ ಉತ್ತಮ ಕಾರ್ಯಕ್ಕೆ ಜಿಲ್ಲಾ ರಕ್ಷಣಾಧಿಕಾರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಓಂ ಕ್ರಿಕೆಟರ್ಸ್ ತಂಡಕ್ಕೆ ದ್ವಿತೀಯ ಬಹುಮಾನ

ಭದ್ರಾವತಿ ಓಂ ಕ್ರಿಕೆಟರ್ಸ್ ತಂಡ ಶಿವಮೊಗ್ಗ ಸೂಳೆಬೈಲು ಮಲೆನಾಡು ಟ್ರೋಫಿ-೨೦೨೨ರ ಕ್ರಿಕೆಟ್ ಪಂದ್ಯಾವಳಿಯಲ್ಲಿ ದ್ವಿತೀಯ ಬಹುಮಾನ ಪಡೆದುಕೊಂಡಿದೆ.
    ಭದ್ರಾವತಿ, ಡಿ. ೧೮: ನಗರದ ಓಂ ಕ್ರಿಕೆಟರ್ಸ್ ತಂಡ ಶಿವಮೊಗ್ಗ ಸೂಳೆಬೈಲು ಮಲೆನಾಡು ಟ್ರೋಫಿ-೨೦೨೨ರ ಕ್ರಿಕೆಟ್ ಪಂದ್ಯಾವಳಿಯಲ್ಲಿ ದ್ವಿತೀಯ ಬಹುಮಾನ ಪಡೆದುಕೊಂಡಿದೆ.
    ಓಂ ಕ್ರಿಕೆಟರ್ಸ್ ತಂಡದ ಆಟಗಾರರು ಉತ್ತಮ ಪ್ರದರ್ಶನ ನೀಡುವ ಮೂಲಕ ದ್ವಿತೀಯ ಬಹುಮಾನ ೫೦,೦೦೦ ನಗದು ಹಾಗೂ ಟ್ರೋಫಿ ತಮ್ಮದಾಗಿಸಿಕೊಂಡರು. ಹಲವಾರು ವರ್ಷಗಳಿಂದ ಓಂ ಕ್ರಿಕೆಟರ್ಸ್ ತಂಡ ಅನೇಕ ಪಂದ್ಯಾವಳಿಗಳಲ್ಲಿ ಪಾಲ್ಗೊಂಡು ಉತ್ತಮ ಪ್ರದರ್ಶನ ನೀಡುವ ಮೂಲಕ ನಗರದ ಪ್ರತಿಷ್ಠಿತ ಕ್ರಿಕೆಟ್ ತಂಡಗಳಲ್ಲಿ ಒಂದಾಗಿ ಗುರುತಿಸಿಕೊಂಡು ಗಮನ ಸೆಳೆದಿದೆ. ಕೇಸರಿ ಪಡೆ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು, ಕ್ರಿಕೆಟ್ ಅಭಿಮಾನಿಗಳು ವಿಜೇತ ತಂಡವನ್ನು ಅಭಿನಂದಿಸಿದ್ದಾರೆ.

ಜೆಡಿಎಸ್ ಕಾರ್ಮಿಕರ ವಿಭಾಗದ ಕಾರ್ಯಾಧ್ಯಕ್ಷರಾಗಿ ಉಮೇಶ್ ನೇಮಕ

ಭದ್ರಾವತಿ ಜೆಡಿಎಸ್ ಕಾರ್ಮಿಕರ ವಿಭಾಗದ ಕಾರ್ಯಾಧ್ಯಕ್ಷರಾಗಿ ಉಮೇಶ್ ನೇಮಕಗೊಂಡಿದ್ದು, ವಿಧಾನಸಭಾ ಕ್ಷೇತ್ರದ ಪಕ್ಷದ ನಿಯೋಜಿತ ಅಭ್ಯರ್ಥಿ ಶಾರದಾ ಅಪ್ಪಾಜಿ ನೇಮಕ ಆದೇಶ ಪತ್ರ ವಿತರಿಸಿದರು.
    ಭದ್ರಾವತಿ, ಡಿ. ೧೮: ಜಾತ್ಯಾತೀತ ಜನತಾದಳ ವಿಧಾನಸಭಾ ಕ್ಷೇತ್ರದ ಕಾರ್ಮಿಕರ ವಿಭಾಗದ ಕಾರ್ಯಾಧ್ಯಕ್ಷರಾಗಿ ಸುರಗಿತೋಪು ನಿವಾಸಿ, ಯುವ ಮುಖಂಡ ಉಮೇಶ್ ನೇಮಕಗೊಂಡಿದ್ದಾರೆ.
    ಪಕ್ಷದ ಕಾರ್ಮಿಕರ ವಿಭಾಗದ ಜಿಲ್ಲಾಧ್ಯಕ್ಷ ಡಿ. ಶ್ಯಾಮು ನೇಮಕಗೊಳಿಸಿ ಆದೇಶ ಹೊರಡಿಸಿದ್ದು, ಪಕ್ಷದ ತತ್ವ ಸಿದ್ದಾಂತಗಳಿಗೆ ಬದ್ಧರಾಗಿ ಕಾರ್ಯನಿರ್ವಹಿಸುವ ಮೂಲಕ ಪಕ್ಷವನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಸಂಘಟಿಸುವಂತೆ ಕೋರಿದ್ದಾರೆ.
  ಕಾರ್ಯಾಧ್ಯಕ್ಷರಾಗಿ ನೇಮಕಗೊಳ್ಳಲು ಕಾರಣಕರ್ತರಾದ ಪಕ್ಷದ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್, ವಿಧಾನಸಭಾ ಕ್ಷೇತ್ರದ ಪಕ್ಷದ ನಿಯೋಜಿತ ಅಭ್ಯರ್ಥಿ ಶಾರದಾ ಅಪ್ಪಾಜಿ, ಕಾರ್ಮಿಕರ ವಿಭಾಗದ ಜಿಲ್ಲಾಧ್ಯಕ್ಷ ಡಿ. ಶ್ಯಾಮು, ಪ್ರಮುಖರಾದ ಆರ್. ಕರುಣಾಮೂರ್ತಿ, ಎಸ್. ಮಣಿಶೇಖರ್, ಜಯಶೀಲ ಸುರೇಶ್ ಹಾಗು ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರಿಗೆ ಉಮೇಶ್ ಕೃತಜ್ಞತೆ ಸಲ್ಲಿಸಿದ್ದಾರೆ.

ಕರ್ನಾಟಕ ಒನ್ ಕೇಂದ್ರದಿಂದ ಹೆಚ್ಚಿನ ಅನುಕೂಲ : ಬಿ.ಕೆ ಸಂಗಮೇಶ್ವರ್

ಭದ್ರಾವತಿ ತಾಲೂಕು ಕಛೇರಿ ರಸ್ತೆ, ಡಿಸಿಸಿ ಬ್ಯಾಂಕ್ ಸಮೀಪ ನೂತನವಾಗಿ ಕಾರ್ಯಾರಂಭಗೊಂಡಿರುವ ಕರ್ನಾಟಕ ಒನ್ ಕೇಂದ್ರಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಚಾಲನೆ ನೀಡಿದರು.  
    ಭದ್ರಾವತಿ, ಡಿ. ೧೮ : ತಾಲೂಕು ಮಟ್ಟದಲ್ಲೂ ಕರ್ನಾಟಕ ಒನ್ ಕೇಂದ್ರಗಳ ಕಾರ್ಯಾರಂಭದಿಂದಾಗಿ ಜನರಿಗೆ ಹೆಚ್ಚಿನ ಅನುಕೂಲವಾಗಲಿದ್ದು, ಸಮಯ ಹಾಗು ಹಣ ಉಳಿತಾಯದ ಜೊತೆಗೆ ಸರ್ಕಾರಿ ಕಛೇರಿಗಳನ್ನು ಅಲೆಯುವುದು ತಪ್ಪಿದಂತಾಗಿದೆ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.
      ಅವರು ತಾಲೂಕು ಕಛೇರಿ ರಸ್ತೆ, ಡಿಸಿಸಿ ಬ್ಯಾಂಕ್ ಸಮೀಪ ನೂತನವಾಗಿ ಕಾರ್ಯಾರಂಭಗೊಂಡಿರುವ ಕರ್ನಾಟಕ ಒನ್ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದರು.
      ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೊಳಿಸಿವೆ. ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಲು ಕರ್ನಾಟಕ ಒನ್ ಕೇಂದ್ರಗಳು ಸಹಕಾರಿಯಾಗಿವೆ. ತಂತ್ರಜ್ಞಾನ ಬೆಳವಣಿಗೆಯಿಂದಾಗಿ ಪ್ರತಿಯೊಬ್ಬರ ಮನೆ ಬಾಗಿಲಿಗೆ ಸೌಲಭ್ಯಗಳು ಶೀಘ್ರವಾಗಿ, ಸುಲಭವಾಗಿ ತಲುಪುವಂತಾಗಿವೆ ಎಂದರು.
    ತಹಸೀಲ್ದಾರ್ ಆರ್. ಪ್ರದೀಪ್ ಮಾತನಾಡಿ, ನಗರದ ಜನರಿಗೆ ಸಮಗ್ರ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಸರ್ಕಾರ ಈ ಕೇಂದ್ರ ಗಳನ್ನು ತೆರೆಯಲು ಅನುಮತಿ ನೀಡಿದೆ. ಈ ಕೇಂದ್ರಗಳು ಗ್ರಾಮ ಒನ್ ಮಾದರಿಯಲ್ಲಿ ಕಾರ್ಯ ನಿರ್ವಹಿಸಲಿವೆ ಎಂದರು.
      ಹಳೇನಗರ ಪೋಲಿಸ್ ಠಾಣಾಧಿಕಾರಿ ಕವಿತಾ, ಉದ್ಯಮಿ ಬಿ.ಕೆ ಜಗನ್ನಾಥ್, ಸಂಚಾಲಕರಾದ ಮಹಜರ್‌ಖಾನ್, ಲಕ್ಷ್ಮಿದೇವಿ, ಮೊಹಮ್ಮದ್ ಏಜಾಜ್ ಖಾನ್, ಸಂತೋಷ್, ಎಸ್.ಎನ್ ಶಿವಪ್ಪ ಮಂಜುಳಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಶ್ರೀ ಅರಬಿಂದೋ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಬಹುಮಾನ

ಭದ್ರಾವತಿ ಜಾವಳ್ಳಿ ಅರಬಿಂದೋ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
    ಭದ್ರಾವತಿ, ಡಿ. ೧೮: ಜ್ಞಾನದೀಪ ವಿದ್ಯಾಸಂಸ್ಥೆಯ ಜಾವಳ್ಳಿ ಶ್ರೀ ಅರಬಿಂದೋ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
    ಬೆಂಗಳೂರು ರಾಜಾಜಿನಗರ ಕೆಎಲ್‌ಇ ಪದವಿಪೂರ್ವ ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆರ್. ಸಿಂಧೂರ(ಆಂಗ್ಲ ಭಾಷೆ ಪ್ರಬಂಧ) ಪ್ರಥಮ ಮತ್ತು ತ್ರಿಷಾಂತ್ ಎನ್ ರಾಜ್ ಹಾಗು ಪ್ರಹ್ಲಾದ್ ಆರ್ ಶಾಸ್ತ್ರಿ(ರಸ ಪ್ರಶ್ನೆ) ದ್ವಿತೀಯ ಬಹುಮಾನಗಳನ್ನು ಪಡೆದುಕೊಂಡು ಕೀರ್ತಿ ತಂದಿದ್ದಾರೆ.
    ಕಾಲೇಜಿನ ಪ್ರಾಂಶುಪಾಲ ಡಾ.ಕೆ ನಾಗರಾಜ್ ಹಾಗೂ ಆಡಳಿತ ಮಂಡಳಿ, ಅಧ್ಯಾಪಕ ಮತ್ತು ಅಧ್ಯಾಪಕೇತರ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

Saturday, December 17, 2022

ನ್ಯಾಯಾಲಯದ ಮುಂಭಾಗ ರಸ್ತೆ ಅಗಲೀಕರಣ ಕೈಗೊಳ್ಳಿ : ವಕೀಲರ ಸಂಘ ಆಗ್ರಹ

ಭದ್ರಾವತಿ ಹಳೇನಗರದ ಪತ್ರಿಕಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ತಾಲೂಕು ವಕೀಲರ ಸಂಘದ ಅಧ್ಯಕ್ಷ ಕೆ.ಎನ್ ಶ್ರೀಹರ್ಷ ಮಾತನಾಡಿದರು.
    ಭದ್ರಾವತಿ, ಡಿ. ೧೭: ನಗರದ ತಾಲೂಕು ಕಛೇರಿ ರಸ್ತೆ ನ್ಯಾಯಾಲಯದ ಮುಂಭಾಗದಲ್ಲಿ ಅಗಲೀಕರಣಗೊಳ್ಳದ ಕಾರಣ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ತಕ್ಷಣ ಜಿಲ್ಲಾಧಿಕಾರಿಗಳು ತುರ್ತು ಕ್ರಮ ಕೈಗೊಳ್ಳಬೇಕೆಂದು ತಾಲೂಕು ವಕೀಲರ ಸಂಘದ ಅಧ್ಯಕ್ಷ ಕೆ.ಎನ್ ಶ್ರೀಹರ್ಷ ಆಗ್ರಹಿಸಿದರು.
    ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಸ್ತೆ ಅಗಲೀಕರಣ ವಿಚಾರದಲ್ಲಿ ಲೋಕೋಪಯೋಗಿ ಇಲಾಖೆ ನಿರ್ಲಕ್ಷ್ಯತನ ವಹಿಸುತ್ತಿದೆ. ಈ ಹಿಂದೆ ರಸ್ತೆ ಅಗಲೀಕರಣಕ್ಕಾಗಿ ತಾಲೂಕು ಕಛೇರಿ ರಸ್ತೆಯಲ್ಲಿದ್ದ ಬೃಹತ್ ಮರಗಳನ್ನು ವಿರೋಧದ ನಡುವೆಯೂ ಕಡೆತಲೆ ಮಾಡಿ ರಸ್ತೆ ಅಗಲೀಕರಣ ಕೈಗೊಳ್ಳಲಾಗಿತ್ತು. ಆದರೆ ನ್ಯಾಯಾಲಯದ ಮುಂಭಾಗದಲ್ಲಿ ಮಾತ್ರ ಅಗಲೀಕರಣದಲ್ಲಿ ತಾರತಮ್ಯ ಮಾಡಲಾಗಿದೆ. ಇದನ್ನು ವಕೀಲರ ಸಂಘ ತೀವ್ರವಾಗಿ ಖಂಡಿಸಿ ಪ್ರತಿಭಟನೆ ಸಹ ನಡೆಸಿತ್ತು. ಈ ಹಿನ್ನಲೆಯಲ್ಲಿ ಕಾಮಗಾರಿ ಸ್ಥಗಿತಗೊಂಡಿತ್ತು. ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ್ದ ಉಪವಿಭಾಗಾಧಿಕಾರಿಗಳು ತಾರತಮ್ಯ ಸರಿಪಡಿಸುವುದಾಗಿ ಭರವಸೆ ನೀಡಿದ್ದರು. ಆದರೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
    ವಕೀಲರ ಸಂಘ ರಸ್ತೆ ಅಗಲೀಕರಣ ವಿಚಾರದಲ್ಲಿ ಯಾವುದೇ ದುರುದ್ದೇಶ ಅಥವಾ ರಾಜಕೀಯ ಹಿತಾಸಕ್ತಿ ಹೊಂದಿಲ್ಲ. ಸಾರ್ವಜನಿಕ ಹಿತಾಸಕ್ತಿಯಿಂದ ಹೋರಾಟ ನಡೆಸುತ್ತಿದೆ. ಜಿಲ್ಲಾಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಅಗಲೀಕರಣ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಆದೇಶಿಸಬೇಕು. ಈ ನಿಟ್ಟಿನಲ್ಲಿ ಶಾಸಕರು ಜಿಲ್ಲಾಧಿಕಾರಿಗಳ ಮೇಲೆ ಇನ್ನೂ ಹೆಚ್ಚಿನ ಒತ್ತಡ ಹಾಕಬೇಕೆಂದು ಮನವಿ ಮಾಡಿದರು.
    ಸಂಘದ ಉಪಾಧ್ಯಕ್ಷ ಡಿ.ಎಂ ವಿಶ್ವನಾಥ್, ಕಾರ್ಯದರ್ಶಿ ವಿ. ಉದಯ ಕುಮಾರ್, ನಿರ್ದೇಶಕರಾದ ಎಸ್. ಶ್ವೇತಾ, ಮಗೇಶ್‌ಬಾಬು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಎಂ. ನಿಂಗಯ್ಯ ನಿಧನ

ಎಂ. ನಿಂಗಯ್ಯ
    ಭದ್ರಾವತಿ, ಡಿ. ೧೭ : ನಗರದ ಕೇಶವಪುರ ಬಡಾವಣೆ ನಿವಾಸಿ, ಕಂದಾಯ ಇಲಾಖೆ ನಿವೃತ್ತ ನೌಕರರ ಎಂ. ನಿಂಗಯ್ಯ(೬೯) ನಿಧನ ಹೊಂದಿದರು.
    ಪತ್ನಿ, ೩ ಗಂಡು ಮಕ್ಕಳು ಇದ್ದರು. ಇವರ ಅಂತ್ಯಕ್ರಿಯೆ ಶನಿವಾರ ಸಂಜೆ ಹೊಳೆಹೊನ್ನೂರು ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು. ನಿಂಗಯ್ಯರವರು ರಂಗಪ್ಪ ವೃತ್ತ ಸಮೀಪದ ಶ್ರೀ ಗುಳ್ಳಮ್ಮ ದೇವಸ್ಥಾನದ ಟ್ರಸ್ಟಿಯಾಗಿ ಸೇವೆ ಸಲ್ಲಿಸುತ್ತಿದ್ದರು.
    ಇವರ ನಿಧನಕ್ಕೆ ಶ್ರೀ ಗುಳ್ಳಮ್ಮ ದೇವಸ್ಥಾನದ ಟ್ರಸ್ಟಿ ಹನುಮಂತರಾವ್ ಗಾಯಕ್ವಾಡ್ ಮತ್ತು ಸೇವಸ್ಥಾನ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಮಂಜುನಾಥ್‌ರಾವ್ ಮಿಸಾಳೆ, ಸುನಿಲ್ ಗಾಯಕ್ವಾಡ್ ಸೇರಿದಂತೆ ಇನ್ನಿತರರು ಸಂತಾಪ ಸೂಚಿಸಿದ್ದಾರೆ.