Tuesday, January 3, 2023

ಗ್ರಾಮೀಣ ಪ್ರತಿಭೆ ಬಿ.ಎಚ್ ದರ್ಶನ್ ಎತ್ತರ ಜಿಗಿತದಲ್ಲಿ ಬೆಳ್ಳಿ ಪದಕ

ಭದ್ರಾವತಿ ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಬಿ.ಎಚ್ ದರ್ಶನ್ ಎತ್ತರ ಜಿಗಿತದಲ್ಲಿ ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿದ್ದಾರೆ.
    ಭದ್ರಾವತಿ, ಜ. ೩: ನಗರದ ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಬಿ.ಎಚ್ ದರ್ಶನ್ ಎತ್ತರ ಜಿಗಿತದಲ್ಲಿ ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿದ್ದಾರೆ.
    ಶಿವಮೊಗ್ಗ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕುವೆಂಪು ವಿಶ್ವವಿದ್ಯಾಲಯ ಅಂತರ ಕಾಲೇಜು ಅಥ್ಲೆಟಿಕ್ಸ್ ಪಂದ್ಯಾವಳಿ ಭಾಗವಹಿಸಿ ಎತ್ತರ ಜಿಗಿತ ಸ್ಪರ್ಧೆಯಲ್ಲಿ ೧.೬೬ ಮೀಟರ್ ಎತ್ತರಕ್ಕೆ ಜಿಗಿಯುವ ಮೂಲಕ ಉತ್ತಮ ಸಾಧನೆ ಮಾಡಿದ್ದು, ಬೆಳ್ಳಿ ಪದಕ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ದರ್ಶನ್ ತೃತೀಯ ಬಿ.ಎ ವ್ಯಾಸಂಗ ಮಾಡುತ್ತಿದ್ದು, ತಾಲೂಕಿನ ಗ್ರಾಮೀಣ ಕ್ರೀಡಾ ಪ್ರತಿಭೆಯಾಗಿದ್ದಾರೆ.   
    ಇವರಿಗೆ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್, ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ, ದೈಹಿಕ ಶಿಕ್ಷಣ ನಿರ್ದೇಶಕ ಎಂ.ಡಿ ವಿಶ್ವನಾಥ್, ಎಲ್ಲಾ ಅಧ್ಯಾಪಕರು, ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ. ಅಲ್ಲದೆ ಮಗನ ಸಾಧನೆಗೆ ತಂದೆ ಹನುಮಂತ ನಾಯ್ಕ ಹಾಗೂ ತಾಯಿ ಗೌರಿಬಾಯಿ, ಬಿಸಿಲುಮನೆ ನಿವಾಸಿಗಳು ಸಂಭ್ರಮ ವ್ಯಕ್ತಪಡಿಸಿದ್ದಾರೆ.

ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ೨ನೇ ಅವಧಿಗೆ ಕೆ. ಸುದೀಪ್‌ಕುಮಾರ್ ಆಯ್ಕೆ

ಭದ್ರಾವತಿ ನಗರಸಭೆಯಲ್ಲಿ ಮಂಗಳವಾರ ನಡೆದ ಸ್ಥಾಯಿ ಸಮಿತಿ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕೆ. ಸುದೀಪ್‌ಕುಮಾರ್ ಮರು ಆಯ್ಕೆಯಾಗಿದ್ದಾರೆ.
    ಭದ್ರಾವತಿ, ಜ. ೩: ನಗರಸಭೆಯಲ್ಲಿ ಮಂಗಳವಾರ ನಡೆದ ಸ್ಥಾಯಿ ಸಮಿತಿ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕೆ. ಸುದೀಪ್‌ಕುಮಾರ್ ಮರು ಆಯ್ಕೆಯಾಗಿದ್ದಾರೆ.
    ನಗರಸಭೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷರ ಅಧಿಕಾರವನ್ನು ಒಪ್ಪಂದದಂತೆ ಹಂಚಿಕೆ ಮಾಡಿಕೊಂಡಿದ್ದು, ಮೊದಲ ಅವಧಿಗೆ ಕೆ. ಸುದೀಪ್‌ಕುಮಾರ್ ಆಯ್ಕೆಯಾಗಿದ್ದರು. ೧ ವರ್ಷ ಅವಧಿ ಅಧಿಕಾರ ಹಂಚಿಕೆ ಮಾಡಲಾಗಿತ್ತು. ಅದರಂತೆ ೧ ವರ್ಷ ಅಧಿಕಾರ ನಡೆಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಈ ಹಿನ್ನಲೆಯಲ್ಲಿ ಚುನಾವಣೆ ನಡೆಯಿತು.
    ಕಾಂಗ್ರೆಸ್ ಪಕ್ಷದ ಸದಸ್ಯರು ಪ್ರಸ್ತುತ ಕ್ಷೇತ್ರದಲ್ಲಿ ರಾಜಕೀಯ ಬೆಳವಣಿಗೆಗಳನ್ನು ಗಮನಸಿ ಕೆ. ಸುದೀಪ್‌ಕುಮಾರ್‌ರವರನ್ನು ೨ನೇ ಅವಧಿಗೂ ಮುಂದುವರೆಸುವುದು ಸೂಕ್ತ ಎಂಬ ತೀರ್ಮಾನ ಕೈಗೊಂಡು ಪುನಃ ೨ನೇ ಅವಧಿಗೂ ಆಯ್ಕೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಪಕ್ಷದಿಂದ ವಿಜಯರವರು ನಾಮಪತ್ರ ಸಲ್ಲಿಸಿದ್ದರು. ಕೆ. ಸುದೀಪ್‌ಕುಮಾರ್‌ರವರು ೬ ಮತಗಳನ್ನು ಹಾಗು ವಿಜಯರವರು ೫ ಮತಗಳನ್ನು ಪಡೆದುಕೊಂಡಿದ್ದಾರೆ.
    ೨ನೇ ಅವಧಿಗೆ ಆಯ್ಕೆಯಾದ ಸುದೀಪ್‌ಕುಮಾರ್‌ರವರನ್ನು ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಉಪಾಧ್ಯಕ್ಷ ಚನ್ನಪ್ಪ ಹಾಗು ಸದಸ್ಯರು, ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು, ಪೌರಕಾರ್ಮಿಕರು ಅಭಿನಂದಿಸಿದ್ದಾರೆ.

ಸಹಾಯಕ ಪ್ರಾಧ್ಯಾಪಕ ಎಂ.ಎಚ್ ವಿದ್ಯಾಶಂಕರ್ ಕರ್ತವ್ಯಕ್ಕೆ ಮರುನಿಯುಕ್ತಿ


ಎಂ.ಎಚ್ ವಿದ್ಯಾಶಂಕರ್
    ಭದ್ರಾವತಿ, ಜ. ೩ : ನಗರದ ನಿವಾಸಿ, ಪ್ರಾಧ್ಯಾಪಕ ಎಂ.ಎಚ್ ವಿದ್ಯಾಶಂಕರ್‌ರವರನ್ನು ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗಳು ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಸಹಾಯಕ ಪ್ರಾಧ್ಯಾಪಕರ ಸೇವೆಗೆ ಮರುನಿಯುಕ್ತಿಗೊಳಿಸಿದ್ದಾರೆ.
    ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಎಂ.ಎಚ್ ವಿದ್ಯಾಶಂಕರ್‌ರವರು ಕರ್ತವ್ಯ ನಿರ್ವಹಿಸುತ್ತಿದ್ದು, ಉಚ್ಛ ನ್ಯಾಯಾಲಯದ ಮಧ್ಯಂತರ ಆದೇಶದ ಮೇರೆಗೆ ಡಿ.೨೮ರಂದು ಕುಲಪತಿಗಳು ಡಿ.೧೫ರಿಂದ ಜಾರಿಗೆ ಬರುವಂತೆ ಸೇವೆಗೆ ಮರುನಿಯುಕ್ತಿಗೊಳಿಸಿ ಅನುಮೋದಿಸಿದ್ದಾರೆಂದು ವಿಶ್ವವಿದ್ಯಾಲಯದ ಕುಲಸಚಿವರು ಕಛೇರಿ ಆದೇಶದಲ್ಲಿ ತಿಳಿಸಿದ್ದಾರೆ.

ಜೆಡಿಎಸ್ ಪಕ್ಷಕ್ಕೆ ಯುವ ಮುಖಂಡ ಅಮೋಸ್ ಸೇರ್ಪಡೆ

ಭದ್ರಾವತಿ ಕ್ರೈಸ್ತ ಸಮುದಾಯದ ಯುವ ಮುಖಂಡ ಅಮೋಸ್ ಕಾಂಗ್ರೆಸ್ ಪಕ್ಷ ತೊರೆದು ಅಧಿಕೃತವಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
    ಭದ್ರಾವತಿ, ಜ. ೩ : ಕ್ರೈಸ್ತ ಸಮುದಾಯದ ಯುವ ಮುಖಂಡ ಅಮೋಸ್ ಕಾಂಗ್ರೆಸ್ ಪಕ್ಷ ತೊರೆದು ಅಧಿಕೃತವಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
    ಕಾಂಗ್ರೆಸ್ ಪಕ್ಷದಲ್ಲಿ ರಾಜ್ಯ ವಕ್ತಾರರಾಗಿ ಸೇವೆ ಸಲ್ಲಿಸಿರುವ ಅಮೋಸ್ ಕಡಿಮೆ ಅವಧಿಯಲ್ಲಿ ಹೆಚ್ಚಿನ ಜನಪ್ರಿಯತೆ ಗಳಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಇದೀಗ ಏಕಾಏಕಿ ಕಾಂಗ್ರೆಸ್ ತೊರೆದಿದ್ದಾರೆ.  
    ತಾಲೂಕಿನ ಅಂತರಗಂಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ.ಎಚ್ ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಪ್ಪಾಜಿಯ ಋಣಾನುಬಂಧ ಕಾರ್ಯಕ್ರಮದಲ್ಲಿ ಅಮೋಸ್ ತಮ್ಮ ಬೆಂಬಲಿಗರೊಂದಿಗೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಾರದ ಅಪ್ಪಾಜಿಯವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
    ಜೆಡಿಎಸ್ ಪಕ್ಷದ ಪ್ರಮುಖರಾದ ಜೆ.ಪಿ ಯೋಗೇಶ್, ಆರ್. ಕರುಣಾಮೂರ್ತಿ, ಮಧುಕುಮಾರ್, ಎಂ.ಎ ಅಜಿತ್, ಧರ್ಮೇಗೌಡ, ಆನಂದ್, ಲಕ್ಷ್ಮೀದೇವಿ, ಜಯರಾಂ ಗೊಂದಿ, ಧರ್ಮರಾಜ್, ಮುರ್ತುಜಾಖಾನ್, ಎಚ್.ಬಿ ರವಿಕುಮಾರ್, ಉಮೇಶ್ ಸೇರಿದಂತೆ ಇನ್ನಿತರ ಮುಖಂಡರುಗಳು ಉಪಸ್ಥಿತರಿದ್ದರು.  

ಜಯಂತಿ ಸ್ಟೋರ್ ಮಾಲೀಕ ಆನಂದ್ ಕುಮಾರ್ ನಿಧನ

ಆನಂದ್ ಕುಮಾರ್
    ಭದ್ರಾವತಿ, ಜ. ೩ : ನಗರದ ಸಿ.ಎನ್ ರಸ್ತೆ ಜಯಂತಿ ಸ್ಟೋರ‍್ಸ್ ಮಾಲೀಕ, ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿ ಬೆಂಬಲಿಗ ಆನಂದ್ ಕುಮಾರ್(೫೦) ಸೋಮವಾರ ಬೆಳಿಗ್ಗೆ ನಿಧನ ಹೊಂದಿದರು.
    ಪತ್ನಿ, ಓರ್ವ ಪುತ್ರ ಇದ್ದರು. ಜೈನ ಸಮಾಜದ ಮುಖಂಡರಾದ ಆನಂದಕುಮಾರ್ ಭದ್ರಾವತಿ ನಗರದಲ್ಲಿಯೇ ಹುಟ್ಟಿ ಬೆಳೆದಿದ್ದು, ಕಳೆದ ಸುಮಾರು ೨ ವರ್ಷಗಳಿಂದ ಗುಜರಾತ್ ಅಹಮದಬಾದ್‌ನಲ್ಲಿ ವಾಸಿಸುತ್ತಿದ್ದರು. ಇವರ ನಿಧನಕ್ಕೆ ಜೆಡಿಎಸ್ ಹಾಗು ಕಾಂಗ್ರೆಸ್ ಪಕ್ಷದ ಮುಖಂಡರು, ಜೈನ ಸಮಾಜದ ಪ್ರಮುಖರು ಸಂತಾಪ ಸೂಚಿಸಿದ್ದಾರೆ.

Monday, January 2, 2023

ಪ್ರಾಧ್ಯಾಪಕ ವರದರಾಜ್ ಭಾರ ಎತ್ತುವ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಪ್ರಾಧ್ಯಾಪಕ ಡಾ. ವರದರಾಜ್‌
    ಭದ್ರಾವತಿ, ಜ. ೨: ನಗರದ ನ್ಯೂಟೌನ್ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ವರದರಾಜ್‌ರವರು ಭಾರ ಎತ್ತುವ ಸ್ಪರ್ಧೆ(ವೇಯ್ಟ್ ಲಿಫ್ಟಿಂಗ್)ಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
    ಸರ್ಕಾರಿ ನೌಕರರ ಕ್ರೀಡಾಕೂಟ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನವದೆಹಲಿಯ ತ್ಯಾಗರಾಜ್ ಕ್ರೀಡಾಂಗಣದಲ್ಲಿ ಜ.೪ ರಿಂದ ೯ರ ವರೆಗೆ ಆಯೋಜಿಸಲಾಗಿರುವ ಅಖಿಲ ಭಾರತ ನಾಗರೀಕ ಸೇವಾ ವೇಯ್ಟ್ ಲಿಫ್ಟಿಂಗ್ ಪಂದ್ಯಾವಳಿಯಲ್ಲಿ ವರದರಾಜ್‌ರವರು ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುತ್ತಿದ್ದಾರೆ.
    ವರದರಾಜ್‌ರವರು ಈಗಾಗಲೇ ಜಿಲ್ಲಾ ಹಾಗು ರಾಜ್ಯಮಟ್ಟದ ಹಲವಾರು ಪಂದ್ಯಾವಳಿಗಳಲ್ಲಿ ಭಾಗವಹಿಸಿ ಬಹುಮಾನಗಳನ್ನು ಪಡೆದುಕೊಂಡಿದ್ದಾರೆ. ಇಂದಿನ ಯುವ ಪೀಳಿಗೆ ಕ್ರೀಡಾ ಹಾಗು ಸಾಂಸ್ಕೃತಿಕ ಚಟುವಟಿಕೆಗಳಿಂದ ದೂರ ಉಳಿದಿದ್ದು, ಹೆಚ್ಚಾಗಿ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ವಿಪರ್ಯಾಸ ಸಂಗತಿಯಾಗಿದೆ. ವರದರಾಜ್‌ರವರು ಉಪನ್ಯಾಸಕ ವೃತ್ತಿ ಜೊತೆಗೆ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡುವ ಮೂಲಕ ಯುವ ಪೀಳಿಗೆಗೆ ಮಾದರಿಯಾಗಿದ್ದಾರೆ.
    ವರದರಾಜ್‌ರವರು ರಾಷ್ಟ್ರಮಟ್ಟದಲ್ಲೂ ಉತ್ತಮ ಸಾಧನೆ ಮಾಡುವ ಮೂಲಕ ರಾಜ್ಯಕ್ಕೆ ಕೀರ್ತಿ ತರುವಂತಾಗಲಿ ಎಂದು ಕಾಲೇಜು ಅಭಿವೃದ್ಧಿ ಸಮಿತಿ, ಪ್ರಾಂಶುಪಾಲರು, ಬೋಧಕ ಹಾಗು ಬೋಧಕೇತರ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು, ಸ್ನೇಹಿತರು, ಹಿತೈಷಿಗಳು ಶುಭ ಹಾರೈಸಿದ್ದಾರೆ.  

ಶ್ರೀ ಕ್ಷೇತ್ರ ನಾಗರಕಟ್ಟೆಯಲ್ಲಿ ವಿಜೃಂಭಣೆಯಿಂದ ಜರುಗಿದ ವೈಕುಂಠ ಏಕಾದಶಿ, ದೀಪೋತ್ಸವ

ಭದ್ರಾವತಿ ಕಾಗದನಗರ ೭ನೇ ವಾರ್ಡ್ ಶ್ರೀ ಕ್ಷೇತ್ರ ನಾಗಕಟ್ಟೆಯಲ್ಲಿ ಸೋಮವಾರ ವಿಜೃಂಭಣೆಯಿಂದ ಜರುಗಿದ ವೈಕುಂಠ ಏಕಾದಶಿ ಕಾರ್ಯಕ್ರಮದಲ್ಲಿ ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಾರದ ಅಪ್ಪಾಜಿ ಪಾಲ್ಗೊಂಡು ವೈಕುಂಠನಾಥ ದರ್ಶನ ಪಡೆದರು.
    ಭದ್ರಾವತಿ, ಜ. ೨: ಕಾಗದನಗರ ೭ನೇ ವಾರ್ಡ್ ಶ್ರೀ ಕ್ಷೇತ್ರ ನಾಗಕಟ್ಟೆಯಲ್ಲಿ  ಸೋಮವಾರ ವಿಜೃಂಭಣೆಯಿಂದ ಜರುಗಿದ ವೈಕುಂಠ ಏಕಾದಶಿ ಕಾರ್ಯಕ್ರಮದಲ್ಲಿ ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಾರದ ಅಪ್ಪಾಜಿ ಪಾಲ್ಗೊಂಡು ವೈಕುಂಠನಾಥ ದರ್ಶನ ಪಡೆದರು.
    ಪ್ರತಿವರ್ಷದಂತೆ ಈ ಬಾರಿ ಸಹ ದೇವಸ್ಥಾನದಲ್ಲಿ ದೀಪೋತ್ಸವ ಹಾಗು ವೈಕುಂಠ ಏಕಾದಶಿ ವಿಜೃಂಭಣೆಯಿಂದ ಜರುಗಿತು. ಸಂಜೆ ದೀಪೋತ್ಸವಕ್ಕೂ ಮೊದಲು ಪ್ರಮುಖ ರಸ್ತೆಯಲ್ಲಿ ಶ್ರೀ ಸ್ವಾಮಿಯ ಉತ್ಸವ ಮೆರವಣಿಗೆ ನಡೆಯಿತು. ನಂತರ ಶಾರದ ಅಪ್ಪಾಜಿ ದೀಪ ಬೆಳಗಿಸುವ ಮೂಲಕ ದೀಪೋತ್ಸವಕ್ಕೆ ಚಾಲನೆ ನೀಡಿದರು.
    ನಗರಸಭಾ ಸದಸ್ಯ ಬಸವರಾಜ ಬಿ. ಆನೇಕೊಪ್ಪ ನೇತೃತ್ವದಲ್ಲಿ ಶಾರದ ಅಪ್ಪಾಜಿ ಹುಟ್ಟುಹಬ್ಬ ಆಚರಿಸಿ ಕೇಕ್ ಕತ್ತರಿಸಿ ಲಾಡು ವಿತರಿಸಲಾಯಿತು. ದೇವಸ್ಥಾನ ಸಮಿತಿ ವತಿಯಿಂದ ಶಾರದ ಅಪ್ಪಾಜಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ದೇವಸ್ಥಾನದಲ್ಲಿರುವ ಎಲ್ಲಾ ಮೂಲ ವಿಗ್ರಹಗಳಿಗೂ ವಿಶೇಷ ಅಲಂಕಾರದೊಂದಿಗೆ ಪೂಜೆ, ಹೋಮ-ಹವನ, ತೀರ್ಥಪ್ರಸಾದ ವಿನಿಯೋಗ ನಡೆಯಿತು. ಪ್ರಧಾನ ಅರ್ಚಕ ರಮೇಶ್ ಭಟ್ಟರು ತರಳಿಮಠ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು.


    ಜೆಡಿಎಸ್ ತಾಲೂಕು ಅಧ್ಯಕ್ಷ ಆರ್. ಕರುಣಾಮೂರ್ತಿ, ನಗರಸಭಾ ಸದಸ್ಯರಾದ ರೂಪಾವತಿ ಗುಣಶೇಖರ್, ಸವಿತಾ ಉಮೇಶ್, ಪಲ್ಲವಿ ದಿಲೀಪ್, ಉದಯ್‌ಕುಮಾರ್, ಕುಶಾಲ್, ಭಾಗ್ಯಮ್ಮ, ದೇವಸ್ಥಾನ ಸಮಿತಿ ಪ್ರಮುಖರಾದ ನಿಂಗಪ್ಪ, ಗೋಪಿನಾಥ್ ಸೇರಿದಂತೆ ಭಕ್ತಾಧಿಗಳು ಪಾಲ್ಗೊಂಡಿದ್ದರು.