Sunday, May 21, 2023

ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಸಚಿವ ಸ್ಥಾನಕ್ಕಾಗಿ ಸಾಮಾಜಿಕ ಜಾಲತಾಣದಲ್ಲಿ ಅಂದೋಲನ

ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಈ ಬಾರಿ ಸಚಿವ ಸ್ಥಾನ ನೀಡಬೇಕೆಂಬ ಕೂಗು ಕ್ಷೇತ್ರದಲ್ಲಿ ಹೆಚ್ಚಾಗುತ್ತಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಅಂದೋಲನವಾಗಿ ಮಾರ್ಪಟ್ಟಿದೆ.
    ಭದ್ರಾವತಿ, ಮೇ. ೨೧ : ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಈ ಬಾರಿ ಸಚಿವ ಸ್ಥಾನ ನೀಡಬೇಕೆಂಬ ಕೂಗು ಕ್ಷೇತ್ರದಲ್ಲಿ ಹೆಚ್ಚಾಗುತ್ತಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಅಂದೋಲನವಾಗಿ ಮಾರ್ಪಟ್ಟಿದೆ.
ಶ್ರೀ ಬಿ.ಕೆ ಸಂಗಮೇಶ್ವರ್‌ರವರು ಮಿನಿಸ್ಟರ್ ಪಟ್ಟ ಏರಲೇಬೇಕು... ಎಂಬ ಶೀರ್ಷಿಕೆಯೊಂದಿಗೆ ಅಂದೋಲನ ನಡೆಯುತ್ತಿದ್ದು, ಭದ್ರಾವತಿಯಲ್ಲಿ ೪ನೇ ಬಾರಿ ಗೆದ್ದು ಶಾಸಕರಾಗಿ ಆಯ್ಕೆಯಾದ ನಮ್ಮ ಶ್ರೀ ಬಿ.ಕೆ ಸಂಗಮೇಶ್ವರ್ ಅವರನ್ನು ಮಿನಿಸ್ಟರ್ ಮಾಡದೆ ಇನ್ಯಾರನ್ನ ಮಾಡುತ್ತೀರಾ..? ಎಂಬ ಅಂದೋಲನದಲ್ಲಿ ಆರಂಭಿಸಿದ್ದಾರೆ.
    ಈಗಾಗಲೇ ಪಕ್ಷದ ಸ್ಥಳೀಯ ಮುಖಂಡರು, ಅಭಿಮಾನಿಗಳು, ಕಾರ್ಯಕರ್ತರು ಮಾತ್ರವಲ್ಲದೆ ಪಕ್ಷಭೇದ ಮರೆತು ವಿವಿಧ ಸಮುದಾಯಗಳು, ಸಂಘ-ಸಂಸ್ಥೆಗಳು, ಗಣ್ಯರು ಸಹ ಸಂಗಮೇಶ್ವರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಒಕ್ಕೂರಲಿನಿಂದ ಆಗ್ರಹಿಸಿದ್ದಾರೆ.
    ಒಂದು ವೇಳೆ ಸಚಿವ ಸ್ಥಾನ ನೀಡಲು ವಿಳಂಬ ಮಾಡಿದ್ದಲ್ಲಿ ಉಗ್ರ ಹೋರಾಟ ನಡೆಸುವ ಎಚ್ಚರಿಕೆ ಸಹ ಕೇಳಿ ಬರುತ್ತಿದೆ. ಈಗಾಗಲೇ ಶಾಸಕ ಬಿ.ಕೆ ಸಂಗಮೇಶ್ವರ್‌ರವರು ಸರ್ಕಾರ ರಚನೆ ಆರಂಭದಲ್ಲಿಯೇ ಸಚಿವ ಸ್ಥಾನ ಸಿಗದಿರುವ ಕುರಿತು ಬಹಿರಂಗವಾಗಿ ಬೇಸರ ವ್ಯಕ್ತಪಡಿಸಿದ್ದಾರೆ.  

ವಿಜೃಂಭಣೆಯಿಂದ ಜರುಗಿದ ಮಾರಿಯಮ್ಮ ದೇವಿ ಕರಗ ಉತ್ಸವ

ಪ್ರತಿವರ್ಷದಂತೆ ಈ ಬಾರಿ ಸಹ ಭದ್ರಾವತಿ ನ್ಯೂಟೌನ್ ಕೂಲಿಬ್ಲಾಕ್ ಶೆಡ್, ಆಂಜನೇಯ ಅಗ್ರಹಾರದ ಶ್ರೀ ಮಾರಿಯಮ್ಮನವರ ದೇವಸ್ಥಾನದಲ್ಲಿ ಭಾನುವಾರ ಕರಗ ಉತ್ಸವ ವಿಜೃಂಭಣೆಯಿಂದ ಜರುಗಿತು.
    ಭದ್ರಾವತಿ, ಮೇ. ೨೧ : ಪ್ರತಿವರ್ಷದಂತೆ ಈ ಬಾರಿ ಸಹ ನ್ಯೂಟೌನ್ ಕೂಲಿಬ್ಲಾಕ್ ಶೆಡ್, ಆಂಜನೇಯ ಅಗ್ರಹಾರದ ಶ್ರೀ ಮಾರಿಯಮ್ಮನವರ ದೇವಸ್ಥಾನದಲ್ಲಿ ಭಾನುವಾರ ಕರಗ ಉತ್ಸವ ವಿಜೃಂಭಣೆಯಿಂದ ಜರುಗಿತು.
    ಮಿಲ್ಟ್ರಿಕ್ಯಾಂಪ್ ಶ್ರೀ ಶ್ರೀನಿವಾಸ ಸ್ವಾಮಿ ದೇವಸ್ಥಾನದಿಂದ ಅಲಂಕೃತಗೊಂಡ ಶಕ್ತಿ ಕರಗ ಮೆರವಣಿಗೆ ಮೂಲಕ ಕಲಾತಂಡಗಳೊಂದಿಗೆ ಮಧ್ಯಾಹ್ನ ಸುಮಾರು ೨ ಗಂಟೆಗೆ ಅಮ್ಮನವರ ದೇವಸ್ಥಾನಕ್ಕೆ ಆಗಮಿಸಿತು. ನಂತರ ಕರಗ ಪ್ರತಿಷ್ಠಾಪನೆ ನಡೆಯಿತು. ಇದಕ್ಕೂ ಮೊದಲು ಬೆಳಿಗ್ಗೆ ಅಮ್ಮನವರಿಗೆ ಎಳನೀರು ಅಭಿಷೇಕ ಮತ್ತು ೧೦೮ ಕಲಶ ಸಹಿತ ಬ್ರಹ್ಮಕಲಶ ಅಭಿಷೇಕ ಮತ್ತು ಪೂಜೆ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.


    ಬಹುತೇಕ ಭಕ್ತರು ಅಂಬಲಿ ಸೇವೆ ಹಾಗು ಪ್ರಸಾದ ನೈವೇದ್ಯ ಸಮರ್ಪಿಸಿದರು. ತೀರ್ಥಪ್ರಸಾದ ವಿನಿಯೋಗ, ನಂತರ ಅನ್ನದಾನ ನಡೆಯಿತು. ಸಂಜೆ  ವಿದ್ಯುತ್ ದೀಪಗಳಿಂದ ಅಲಂಕೃತಗೊಂಡ ರಥದಲ್ಲಿ ಅಮ್ಮನವರ ರಾಜಬೀದಿ ಉತ್ಸವ ಮತ್ತು ಮಂಗಳವಾದ್ಯದೊಂದಿಗೆ ಕರಗ ಆಟ ನಡೆಯಿತು. ಸುರಗಿತೋಪು, ಬಾಲಭಾರತಿ, ನ್ಯೂಟೌನ್, ವಿದ್ಯಾಮಂದಿರ, ಗಣೇಶ್‌ಕಾಲೋನಿ, ಜನ್ನಾಪುರ, ಹುಡ್ಕೋಕಾಲೋನಿ ಸೇರಿದಂತೆ ವಿವಿಧೆಡೆಗಳಿಂದ ಭಕ್ತರು ಆಗಮಿಸಿದ್ದರು.

Saturday, May 20, 2023

ಮೇ.೨೧ರಂದು ಮಾರಿಯಮ್ಮ ದೇವಿ ಕರಗ ಉತ್ಸವ

    ಭದ್ರಾವತಿ, ಮೇ. ೨೦ : ಪ್ರತಿವರ್ಷದಂತೆ ಈ ಬಾರಿ ಸಹ ನ್ಯೂಟೌನ್ ಶ್ರೀ ಮಾರಿಯಮ್ಮನವರ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ಕರಗ ಮಹೋತ್ಸವ ನಡೆಯುತ್ತಿದ್ದು, ಮೇ.೨೧ರ ಭಾನುವಾರ ಕರಗ ಉತ್ಸವ ಜರುಗಲಿದೆ.
    ಬೆಳಿಗ್ಗೆ ೮ ಗಂಟೆಗೆ ಶ್ರೀ ದೇವಿಗೆ ಎಳನೀರು ಅಭಿಷೇಕ ಮತ್ತು ೧೦೮ ಕಲಶ ಸಹಿತ ಬ್ರಹ್ಮಕಲಶ ಅಭಿಷೇಕ ಮತ್ತು ಪೂಜೆ, ಮಧ್ಯಾಹ್ನ ೧ ಗಂಟೆಗೆ ಶಕ್ತಿ ಕರಗ ಸ್ಥಾಪನೆ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ, ನಂತರ ಅನ್ನದಾನ ನಡೆಯಲಿದೆ. ಸಂಜೆ ೬ ಗಂಟೆಗೆ ವಿದ್ಯುತ್ ದೀಪಗಳಿಂದ ಅಲಂಕೃತಗೊಂಡ ರಥದಲ್ಲಿ ಶ್ರೀ ದೇವಿಯವರ ರಾಜಬೀದಿ ಉತ್ಸವ ಮತ್ತು ಮಂಗಳವಾದ್ಯದೊಂದಿಗೆ ಕರಗ ಆಟ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಲು ಕೋರಲಾಗಿದೆ.

ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ : ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ

 ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಶನಿವಾರ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಹಿನ್ನಲೆಯಲ್ಲಿ ಭದ್ರಾವತಿಯಲ್ಲಿ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ನಡೆಸಿದರು.
    ಭದ್ರಾವತಿ, ಮೇ. ೨೦ : ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಶನಿವಾರ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಹಿನ್ನಲೆಯಲ್ಲಿ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ನಡೆಸಿದರು.
    ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹಾಗು ೮ ಮಂದಿ ಸಚಿವರಾಗಿ ಪದಗ್ರಹಣ ಸ್ವೀಕರಿಸುವ ಮೂಲಕ ನಾಡಿನ ಜನರ ಆಶಯದಂತೆ ನೂತನ ಜನಹಿತ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ರಾಜ್ಯದಲ್ಲಿ ಉತ್ತಮ ಆಡಳಿತ ನೀಡುವ ವಿಶ್ವಾಸವನ್ನು ಮುಖಂಡರು, ಕಾರ್ಯಕರ್ತರು ವ್ಯಕ್ತಪಡಿಸಿದರು.  
    ನಗರದ ಮಾಧವಚಾರ್ ವೃತ್ತ ಮತ್ತು ರಂಗಪ್ಪ ವೃತ್ತದಲ್ಲಿ ಸಂಭ್ರಮಾಚರಣೆ ನಡೆಸಲಾಯಿತು. ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಸದಸ್ಯರಾದ ಟಿಪ್ಪು ಸುಲ್ತಾನ್, ಬಷೀರ್ ಅಹಮದ್, ಜಾರ್ಜ್, ಮಾಜಿ ಅಧ್ಯಕ್ಷೆ ವೈ. ರೇಣುಕಮ್ಮ, ಮಾಜಿ ಉಪಾಧ್ಯಕ್ಷ ಚನ್ನಪ್ಪ, ಮಾಜಿ ಸದಸ್ಯ ಆಂಜನಪ್ಪ, ಪಕ್ಷದ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ಮಂಜುಳಾ ರಾಮಚಂದ್ರ, ರೂಪಾನಾರಾಯಣ, ಮುಖಂಡರಾದ ರಮಾಕಾಂತ್, ಪ್ರಕಾಶ್‌ರಾವ್, ಕೇಶವ, ಅಯೂಬ್ ಖಾನ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಸಂಗಮೇಶ್ವರ್‌ಗೆ ಕೈ ತಪ್ಪಿದ ಸಚಿವ ಸ್ಥಾನ : ಕ್ಷೇತ್ರದ ಜನತೆಗೆ ನಿರಾಸೆ

ಬಿ.ಕೆ ಸಂಗಮೇಶ್ವರ್
    ಭದ್ರಾವತಿ, ಮೇ. ೨೦ : ಈ ಬಾರಿ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆಯಲ್ಲಿದ್ದ ಕ್ಷೇತ್ರದ ಜನತೆಗೆ ನಿರಾಸೆಯುಂಟಾಗಿದೆ. ಸರ್ಕಾರ ರಚನೆ ಆರಂಭದಲ್ಲಿಯೇ ಸಚಿವ ಸ್ಥಾನ ಸಿಗುವ ಮೂಲಕ ಕ್ಷೇತ್ರದ ಮೊದಲ ಸಚಿವ ಎಂಬ ಹೆಗ್ಗಳಿಕೆಗೆ ಪಾತ್ರರಾಗುತ್ತಾರೆಂಬ ನಿರೀಕ್ಷೆ ಹೊಂದಲಾಗಿತ್ತು.  
    ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಶನಿವಾರ ಕೇವಲ ೮ ಮಂದಿ ಮಾತ್ರ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಶಾಸಕ ಬಿ.ಕೆ ಸಂಗಮೇಶ್ವರ್ ಸಹ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆಂಬ ಸುದ್ದಿ ಕ್ಷೇತ್ರದಾದ್ಯಂತ ವ್ಯಾಪಕವಾಗಿ ಹರಡಿತ್ತು. ಪ್ರಮಾಣ ವಚನ ಸ್ವೀಕಾರಕ್ಕೆ ಕೆಲವೇ ಗಂಟೆಗಳು ಬಾಕಿ ಇರುವಂತೆ ನೂತನ ಸಚಿವರ ಪಟ್ಟಿ ಅಧಿಕೃತವಾಗಿ ಬಿಡುಗಡೆಗೊಂಡ ನಂತರ ಕ್ಷೇತ್ರದ ಜನರಲ್ಲಿ ಹೆಚ್ಚಿನ ನಿರಾಸೆಯನ್ನುಂಟು ಮಾಡಿದೆ.
    ಕ್ಷೇತ್ರದಲ್ಲಿ ಇದುವರೆಗೂ ಯಾರಿಗೂ ಸಚಿವ ಸ್ಥಾನ ಸಿಕ್ಕಿಲ್ಲ. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದ್ದು, ನನಗೆ ಸಚಿವ ಸ್ಥಾನ ಸಿಗುವುದು ಖಚಿತ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಕ್ಷೇತ್ರದಾದ್ಯಂತ ಮತಯಾಚನೆ ನಡೆಸಿದ್ದರು. ಅಲ್ಲದೆ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗು ಅಭಿಮಾನಿಗಳಲ್ಲೂ ಸಚಿವ ಸ್ಥಾನ ಸಿಗುವ ವಿಶ್ವಾಸ ಮೂಡಿಸುವ ಮೂಲಕ ಉತ್ಸಾಹ ತುಂಬಿದ್ದರು.
    ಜಿಲ್ಲೆಯಲ್ಲಿ ಪ್ರಸ್ತುತ ೩ ಮಂದಿ ಶಾಸಕರಿದ್ದು, ಈ ಪೈಕಿ ಶಾಸಕ ಬಿ.ಕೆ ಸಂಗಮೇಶ್ವರ್ ಹಿರಿಯರಾಗಿದ್ದಾರೆ. ಅಲ್ಲದೆ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಶಾಸಕರಾಗಿದ್ದು,  ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬೆಂಬಲಿಗರಲ್ಲಿ ಒಬ್ಬರಾಗಿದ್ದಾರೆ. ಈ ಹಿನ್ನಲೆಯಲ್ಲಿ ಇವರಿಗೆ ಸಚಿವ ಸ್ಥಾನ ಸಿಗುವುದು ಬಹುತೇಕ ಖಚಿತ ಎನ್ನಲಾಗಿತ್ತು. ಈ ಬಾರಿ ಸಚಿವ ಸ್ಥಾನ ಸಿಗದಿರುವುದು ವಿಪರ್ಯಾಸದ ಸಂಗತಿಯಾಗಿದೆ.

Friday, May 19, 2023

ಸಂಗಮೇಶ್ವರ್‌ಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆ

ಜಾತಕ ಪಕ್ಷಿಗಳಂತೆ ಎದುರು ನೋಡುತ್ತಿರುವ ಕ್ಷೇತ್ರದ ಮತದಾರರು

ಬಿ.ಕೆ ಸಂಗಮೇಶ್ವರ್
    ಭದ್ರಾವತಿ, ಮೇ. ೧೯ : ಈ ಬಾರಿಯಾದರೂ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆಯಲ್ಲಿ ಕ್ಷೇತ್ರದ ಜನತೆ ಎದುರು ನೋಡುತ್ತಿದ್ದು, ಶುಕ್ರವಾರ ರಾತ್ರಿ ೧೦ ಗಂಟೆ ಕಳೆದರೂ ಸಹ ಅಧಿಕೃತ ಮಾಹಿತಿ ಹೊರಬೀಳದೆ ಇರುವುದು ನಿರಾಸೆಯನ್ನುಂಟು ಮಾಡಿದೆ.
    ಕ್ಷೇತ್ರದಲ್ಲಿ ಇದುವರೆಗೂ ಯಾರಿಗೂ ಸಚಿವ ಸ್ಥಾನ ಸಿಕ್ಕಿಲ್ಲ. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದ್ದು, ನನಗೆ ಸಚಿವ ಸ್ಥಾನ ಸಿಗುವುದು ಖಚಿತ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಕ್ಷೇತ್ರದಾದ್ಯಂತ ಮತಯಾಚನೆ ನಡೆಸಿದ್ದರು. ಅಲ್ಲದೆ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗು ಅಭಿಮಾನಿಗಳಲ್ಲೂ ಸಚಿವ ಸ್ಥಾನ ಸಿಗುವ ವಿಶ್ವಾಸ ಮೂಡಿಸುವ ಮೂಲಕ ಉತ್ಸಾಹ ತುಂಬಿದ್ದರು. ಇದೀಗ ಪದಗ್ರಹಣ ಸಮಾರಂಭಕ್ಕೆ ಕೆಲವು ಕೆಲವು ಗಂಟೆಗಳು ಮಾತ್ರ ಬಾಕಿ ಉಳಿದಿವೆ. ಇನ್ನೂ ಸಚಿವ ಸ್ಥಾನ ಸಿಗುವ ಅಧಿಕೃತ ಘೋಷಣೆಯಾಗದಿರುವುದು ನಿರಾಸೆಯನ್ನುಂಟು ಮಾಡುತ್ತಿದೆ.
    ಜಿಲ್ಲೆಯಲ್ಲಿ ಪ್ರಸ್ತುತ ೩ ಮಂದಿ ಶಾಸಕರಿದ್ದು, ಈ ಪೈಕಿ ಶಾಸಕ ಬಿ.ಕೆ ಸಂಗಮೇಶ್ವರ್ ಹಿರಿಯರಾಗಿದ್ದಾರೆ. ಅಲ್ಲದೆ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಶಾಸಕರಾಗಿದ್ದು, ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬೆಂಬಲಿಗರಲ್ಲಿ ಒಬ್ಬರಾಗಿದ್ದಾರೆ. ಈ ಹಿನ್ನಲೆಯಲ್ಲಿ ಇವರಿಗೆ ಸಚಿವ ಸಿಗುವುದು ಬಹುತೇಕ ಖಚಿತ ಎನ್ನಲಾಗಿದ್ದು, ಆದರೂ ಸಹ ಈ ನಡುವೆ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹಾಗು  ಕ್ಷೇತ್ರದ ಮತದಾರರಲ್ಲಿ ಆತಂಕ ಮನೆ ಮಾಡಿದೆ.  

ಭದ್ರಾವತಿ ಕ್ಷೇತ್ರದ ಸರ್ವತೋಮುಖ ಅಭಿವೃದಿಗೆ ಸಂಗಮೇಶ್ವರ್‌ಗೆ ಸಚಿವ ಸ್ಥಾನ ನೀಡಿ

ಭದ್ರಾವತಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ ಹಿನ್ನಲೆಯಲ್ಲಿ ಈ ಬಾರಿ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಸಚಿವ ಸ್ಥಾನ ನೀಡಬೇಕೆಂದು ವೀರಶೈವ ಲಿಂಗಾಯತ ಸಮಾಜದ ವಿವಿಧ ಸಂಘಟನೆಗಳು ಒತ್ತಾಯಿಸಿವೆ.
     ಭದ್ರಾವತಿ, ಮೇ. ೧೯ : ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ ಹಿನ್ನಲೆಯಲ್ಲಿ ಈ ಬಾರಿ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಸಚಿವ ಸ್ಥಾನ ನೀಡಬೇಕೆಂದು ವೀರಶೈವ ಲಿಂಗಾಯತ ಸಮಾಜದ ವಿವಿಧ ಸಂಘಟನೆಗಳು ಒತ್ತಾಯಿಸಿವೆ.
    ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಗಳ ಪ್ರಮುಖರು, ವೀರಶೈವ ಲಿಂಗಾಯತ ಸಮಾಜ ರಾಜಕೀಯವಾಗಿ ಸಮನ್ವಯತೆ ಕಾಯ್ದುಕೊಂಡು ಬರುತ್ತಿದೆ. ಚುನಾವಣೆ ಸಂದರ್ಭದಲ್ಲಿ ಎಲ್ಲಾ ಪಕ್ಷಗಳಲ್ಲೂ ಸಮಾಜದವರು ಗುರುತಿಸಿಕೊಂಡಿದ್ದು, ಚುನಾವಣೆ ನಂತರ ನಾವೆಲ್ಲರೂ ಒಗ್ಗಟ್ಟಿನಿಂದ ಸಮಾಜದ ಅಭಿವೃದ್ಧಿಗೆ ಪೂರಕವಾಗಿ ಚಿಂತಿಸುವ ಮನೋಭಾವನೆ ಹೊಂದಿದ್ದೇವೆ. ಸಮಾಜದ ಬಿ.ಕೆ ಸಂಗಮೇಶ್ವರ್‌ರವರು ೪ನೇ ಬಾರಿಗೆ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿರುವುದು ಹೆಮ್ಮೆಯ ವಿಚಾರವಾಗಿದೆ ಎಂದರು.
    ಸಂಗಮೇಶ್ವರ್‌ರವರು ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ ಬಗ್ಗೆ ಹೆಚ್ಚಿನ ಕಾಳಜಿ ಹೊಂದಿದ್ದಾರೆ. ವಿಶೇಷವಾಗಿ ವಿಐಎಸ್‌ಎಲ್ ಮತ್ತು ಎಂಪಿಎಂ ಕಾರ್ಖಾನೆಗಳ ಅಭಿವೃದ್ಧಿಗೆ ಹೆಚ್ಚಿನ ಗಮನ ನೀಡಿದ್ದಾರೆ. ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ ಕೈಗೊಳ್ಳಲು ಸಂಗಮೇಶ್ವರ್ ಸಮರ್ಥರಾಗಿದ್ದಾರೆ. ಈ ಹಿನ್ನಲೆಯಲ್ಲಿ ಅವರಿಗೆ ಈ ಬಾರಿ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸುತ್ತೇವೆ ಎಂದರು.
    ಸಮಾಜದ ವಿವಿಧ ಸಂಘಟನೆಗಳ ಪ್ರಮುಖರಾದ ಅಡವೀಶಯ್ಯ, ಜಿ. ಸುರೇಶಯ್ಯ, ಸಿದ್ದಲಿಂಗಯ್ಯ, ಬಸವರಾಜಯ್ಯ, ಸತೀಶ್, ಆರ್. ಮಹೇಶ್‌ಕುಮಾರ್, ಬಸವಂತಪ್ಪ, ಡಾ. ಜಿ.ಎಂ ನಟರಾಜ್, ವಾಗೀಶ್, ಪೂರ್ಣಿಮಾ, ಮಹಾದೇವ್, ಜಗದೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.