Thursday, June 15, 2023

ಜೂ.೨೦ರಂದು ಜಾಗೃತಿ ಸಭೆ, ಜನ್ಮದಿನಾಚರಣೆ

    ಭದ್ರಾವತಿ, ಜೂ. ೧೬ : ಡಾ. ಬಿ.ಆರ್ ಅಂಬೇಡ್ಕರ್ ಭವನ ಸಂರಕ್ಷಣಾ ಸಮಿತಿ ವತಿಯಿಂದ ಜೂ.೨೦ರ ಸಂಜೆ ೪ ಗಂಟೆಗೆ ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಜಾಗೃತಿ ಸಭೆ ಮತ್ತು ಕಾಂಮ್ರೇಡ್ ಡಿ.ಸಿ ಮಾಯಣ್ಣನವರ ೮೯ನೇ ಜನ್ಮದಿನಾಚರಣೆ ಹಮ್ಮಿಕೊಳ್ಳಲಾಗಿದೆ.
    ರೈತ ಸಂಘದ ವರಿಷ್ಠ ಕೆ.ಟಿ ಗಂಗಾಧರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಡಿಎಸ್‌ಎಸ್ ಮುಖಂಡರಾದ ವಿಜಯಮ್ಮ ಎನ್ ಗಿರಿಯಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಪ್ರೊ. ಎಂ. ಚಂದ್ರಶೇಖರಯ್ಯ ನಿವೃತ್ತ ತಹಸೀಲ್ದಾರ್ ಇಂದಿರಾ ಬಿ. ಕೃಷ್ಣಪ್ಪ, ಸಾಹಿತಿ ಹರೋನಹಳ್ಳಿ ಸ್ವಾಮಿ, ಚಿತ್ರನಟ ಆಂಜನೇಯ ಸೇರಿದಂತೆ ಇನ್ನಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಡಾ. ಬಿ.ಆರ್ ಅಂಬೇಡ್ಕರ್ ಭವನ ಸಂರಕ್ಷಣಾ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಕೋರಿದ್ದಾರೆ.

ಜೂ. ೧೬ರಂದು ಆರ್‌ಎಎಫ್ ಘಟಕ, ರೈಲ್ವೆ ಮೇಲ್ಸೇತುವೆ ಕಾಮಗಾರಿ ಪರಿಶೀಲನೆಗೆ ಸಂಸದ ಬಿ.ವೈ ರಾಘವೇಂದ್ರ ಆಗಮನ

ಸಂಸದ ಬಿ.ವೈ ರಾಘವೇಂದ್ರರವರು ಕಾಮಗಾರಿಗಳ ಪರಿಶೀಲನೆಗೆ ಶುಕ್ರವಾರ ಭದ್ರಾವತಿಗೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಸ್ಥಳೀಯ ಬಿಜೆಪಿ ಮುಖಂಡರು ಗುರುವಾರ ಪೂರ್ವ ಪರಿಶೀಲನೆ ನಡೆಸಿದರು. ಕಾಮಗಾರಿಗಳ ಸಂಪೂರ್ಣ ಮಾಹಿತಿ ಒದಗಿಸುವ ನಿಟ್ಟಿನಲ್ಲಿ ಪೂರಕ ಸಿದ್ದತೆಗಳನ್ನು ಕೈಗೊಂಡರು.
    ಭದ್ರಾವತಿ, ಜೂ. ೧೫ : ಸಂಸದ ಬಿ.ವೈ ರಾಘವೇಂದ್ರ ನಗರದಲ್ಲಿ ಹಲವು ಕಾಮಗಾರಿಗಳ ಪ್ರಗತಿ ಪರಿಶೀಲನೆಗಾಗಿ ಜೂ.೧೬ರ ಶುಕ್ರವಾರ ಆಗಮಿಸುತ್ತಿದ್ದು, ಕಾಮಗಾರಿಗಳು ಮತ್ತಷ್ಟು ವೇಗ ಪಡೆದುಕೊಳ್ಳುವ ಲಕ್ಷಣಗಳು ಕಂಡು ಬರುತ್ತಿವೆ.
    ಮುಂದಿನ ವರ್ಷ ಲೋಕಸಭಾ ಚುನಾವಣೆ ಎದುರಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಸಂಸದ ಬಿ.ವೈ ರಾಘವೇಂದ್ರ ವಿವಿಧ ಕಾಮಗಾರಿಗಳ ವೀಕ್ಷಣೆ-ವಿಕಾಸ ತೀರ್ಥಯಾತ್ರೆ ಕೈಗೊಂಡಿದ್ದು, ಈ ಅಂಗವಾಗಿ ಕಳೆದ ಸುಮಾರು ೨ ವರ್ಷಗಳ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಉದ್ಘಾಟನೆಗೊಂಡ ೯೭ ಬಿ.ಎನ್ ಆರ್‌ಎಎಫ್ ಘಟಕ ಹಾಗು ಕಡದಕಟ್ಟೆ ಬಳಿ ನಿರ್ಮಾಣಗೊಳ್ಳುತ್ತಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿ ವೀಕ್ಷಣೆ ನಡೆಸಲಿದ್ದಾರೆ.
    ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳು ಪಾಲ್ಗೊಳ್ಳಲಿದ್ದು, ಕಾಮಗಾರಿಗಳು ಮತ್ತಷ್ಟು ವೇಗ ಪಡೆದುಕೊಳ್ಳುವ ಲಕ್ಷಣಗಳು ಕಂಡು ಬರುತ್ತಿವೆ. ಈ ಹಿಂದೆ ಸಹ ಬಿ.ವೈ ರಾಘವೇಂದ್ರ ಅವರು ಕಾಮಗಾರಿಗಳ ವೀಕ್ಷಣೆ ನಡೆಸಿದ್ದರು.
    ಬಿಜೆಪಿ ಮುಖಂಡರಿಂದ ಪೂರ್ವ ಪರಿಶೀಲನೆ:
    ಸಂಸದ ಬಿ.ವೈ ರಾಘವೇಂದ್ರರವರು ಕಾಮಗಾರಿಗಳ ಪರಿಶೀಲನೆಗೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಸ್ಥಳೀಯ ಬಿಜೆಪಿ ಮುಖಂಡರು ಗುರುವಾರ ಪೂರ್ವ ಪರಿಶೀಲನೆ ನಡೆಸಿದರು. ಕಾಮಗಾರಿಗಳ ಸಂಪೂರ್ಣ ಮಾಹಿತಿ ಒದಗಿಸುವ ನಿಟ್ಟಿನಲ್ಲಿ ಪೂರಕ ಸಿದ್ದತೆಗಳನ್ನು ಕೈಗೊಂಡರು.

ಅಂತರರಾಷ್ಟ್ರೀಯ ಯೋಗ ದಿನಾಚರಣೆ : ಜೂ.೧೮ ಮುಕ್ತ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆ


    ಭದ್ರಾವತಿ, ಜೂ. ೧೫: ನ್ಯೂಟೌನ್ ಮಹಾತ್ಮಗಾಂಧಿ ಉದ್ಯಾನವನ ಸಮೀಪದಲ್ಲಿರುವ ಶ್ರೀ ಅನ್ನಪೂರ್ಣೇಶ್ವರಿ ವಿವೇಕಾನಂದ ಯೋಗ ಅಸೋಸಿಯೇಷನ್ ವತಿಯಿಂದ ಜೂ.೨೧ರಂದು ೯ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
    ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ ಪೂರಕವಾಗಿ ಜೂ.೧೮ರಂದು ಮುಕ್ತ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆ ಆಯೋಜಿಸಲಾಗಿದೆ. ಜೂ.೨೧ರಂದು ಯೋಗ ದಿನಾಚರಣೆ ಪ್ರಯುಕ್ತ ಬೆಳಿಗ್ಗೆ ೬ ಗಂಟೆಯಿಂದ ೭.೧೫ರ ವರೆಗೆ ಸಾಮೂಹಿಕ ಯೋಗ ಪ್ರದರ್ಶನ ನಡೆಯಲಿದೆ.
    ಯೋಗಪಟುಗಳು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಅಸೋಸಿಯೇಷನ್ ಅಧ್ಯಕ್ಷ ಕೆ.ಎಚ್ ಪಾಲಾಕ್ಷಪ್ಪ, ಕಾರ್ಯದರ್ಶಿ ತಮ್ಮಣ್ಣ ಗೌಡ ಮತ್ತು ಖಜಾಂಚಿ ವಾದಿರಾಜ ಆಚಾರ್ ಕೋರಿದ್ದಾರೆ.  

ವಿಐಎಸ್‌ಎಲ್ ನಿವೃತ್ತ ನೌಕರ ನರಸಿಂಹಯ್ಯ ನಿಧನ

ನರಸಿಂಹಯ್ಯ
    ಭದ್ರಾವತಿ, ಜೂ. ೧೫ : ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಿವೃತ್ತ ನೌಕರ, ವಿದ್ಯಾಮಂದಿರ ನಿವಾಸಿ ನರಸಿಂಹಯ್ಯ ನಿಧನ ಹೊಂದಿದರು.
    ಇವರಿಗೆ ಪತ್ನಿ, ಓರ್ವ ಪುತ್ರಿ ಇದ್ದರು. ಅನಾರೋಗ್ಯಕ್ಕೆ ಒಳಗಾಗಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
    ನರಸಿಂಹಯ್ಯ ಅವರು ಈ ಹಿಂದೆ ವಿಐಎಸ್‌ಎಲ್ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ ಹಲವಾರು ವರ್ಷಗಳಿಂದ ನಿವೃತ್ತ ಕಾರ್ಮಿಕರ ಪರ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದರು. ನಿವೃತ್ತ ಕಾರ್ಮಿಕರನ್ನು ಸಂಘಟಿಸುವಲ್ಲಿ ಹೆಚ್ಚಿನ ಶ್ರಮ ವಹಿಸಿದ್ದರು.
    ಸಂತಾಪ :
    ವಿಐಎಸ್‌ಎಲ್ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ಅಧ್ಯಕ್ಷ ರಾಮಲಿಂಗಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ಬೆಳಿಗ್ಗೆ ತುರ್ತು ಸಭೆ ನಡೆಸಿ ನರಸಿಂಹಯ್ಯನವರ ನಿಧನಕ್ಕೆ ಸಂತಾಪ ಸೂಚಿಸಲಾಯಿತು.
    ಅವರ ಸೇವೆಯನ್ನು ಸ್ಮರಿಸಿ, ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸಲಾಯಿತು. ಪ್ರಮುಖರಾದ ಹನುಮಂತರಾವ್, ನರಸಿಂಹಚಾರ್, ಬಸವರಾಜ್, ಕೆಂಪಯ್ಯ, ಮಹೇಶ್ವರಪ್ಪ, ನಂಜಪ್ಪ, ಅಡವೀಶಯ್ಯ, ನಾಗರಾಜ್, ಜಯರಾಜ್, ಭೈರಪ್ಪ, ಹಾ. ರಾಮಪ್ಪ, ಗಜೇಂದ್ರ, ರವೀಂದ್ರ ರೆಡ್ಡಿ, ಮಂಜುನಾಥ್, ಸುರೇಶ್ ಪಟೇಲ್, ರಮೇಶ್, ಲಾಜರ್, ಡಾಕಪ್ಪ, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Wednesday, June 14, 2023

ಶಾಲಾ ಆವರಣದಲ್ಲಿ ನೆಲಕ್ಕುರುಳಿ ಬಿದ್ದಿರುವ ಮರಗಳನ್ನು ತೆರವುಗೊಳಿಸಿ : ಸ್ವಚ್ಛತೆ ಕಾಪಾಡಿ

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಮನವಿ

ಭದ್ರಾವತಿಯಲ್ಲಿ ಸರ್ಕಾರಿ ಶಾಲಾ ಆವರಣದಲ್ಲಿ ಸ್ವಚ್ಛತೆ ಕೈಗೊಳ್ಳುವಂತೆ ಹಾಗು ನೆಲಕ್ಕುರುಳಿ ಬಿದ್ದಿರುವ ಮರಗಳನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಮೇಲಾಧಿಕಾರಿಗಳಿಗೆ ಹಾಗು ವಲಯ ಅರಣ್ಯಾಧಿಕಾರಿಗಳಿಗೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ಜೂ. ೧೪: ಸರ್ಕಾರಿ ಶಾಲಾ ಆವರಣದಲ್ಲಿ ಸ್ವಚ್ಛತೆ ಕೈಗೊಳ್ಳುವಂತೆ ಹಾಗು ನೆಲಕ್ಕುರುಳಿ ಬಿದ್ದಿರುವ ಮರಗಳನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಮೇಲಾಧಿಕಾರಿಗಳಿಗೆ ಹಾಗು ವಲಯ ಅರಣ್ಯಾಧಿಕಾರಿಗಳಿಗೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಮನವಿ ಸಲ್ಲಿಸಲಾಯಿತು.
    ಕಾಗದನಗರ ನಗರಸಭೆ ವಾರ್ಡ್ ನಂ.೨೧ರ ವ್ಯಾಪ್ತಿಯ ಬೈಪಾಸ್ ರಸ್ತೆ ಪಕ್ಕದಲ್ಲಿರುವ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ(ಪಶ್ಚಿಮ)ಯ ಆವರಣದ ಸುತ್ತಮುತ್ತ ಸ್ವಚ್ಛತೆ ಇಲ್ಲದಂತಾಗಿದೆ. ಮಕ್ಕಳಿಗೆ ಸ್ವಚ್ಛತೆ ಕುರಿತು ಅರಿವು ಮೂಡಿಸುವ ಬದಲು ನಿರ್ಲಕ್ಷ್ಯವಹಿಸಿರುವುದು ವಿಪರ್ಯಾಸದ ಸಂಗತಿಯಾಗಿದೆ. ಮೊದಲು ಮಕ್ಕಳಿಗೆ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸಿ ಶಾಲಾ ಆವರಣದಲ್ಲಿ ಸುಂದರ ಪರಿಸರ ರೂಪಿಸಬೇಕು.
    ಶಾಲಾ ಆವರಣದಲ್ಲಿ ವರ್ಷದ ಹಿಂದೆ ನೆಲಕ್ಕುರುಳಿ ಬಿದ್ದಿರುವ ಮರಗಳನ್ನು ತೆರವುಗೊಳಿಸಿಲ್ಲ. ಇದರಿಂದಾಗಿ ಶಾಲಾ ಮಕ್ಕಳಿಗೆ ತೊಂದರಿಯಾಗಿದೆ. ಮಕ್ಕಳಿಗೆ ವಿಶಾಲವಾದ ಸ್ಥಳದಲ್ಲಿ ಕ್ರೀಡಾ ಚಟುವಟಿಕೆಗಳನ್ನು ನಡೆಸಲು ಸಾಧ್ಯವಾಗುತ್ತಿಲ್ಲ. ಮಕ್ಕಳು ಭಯದಲ್ಲಿ ಬದುಕುವಂತಾಗಿದೆ. ಈ ಹಿನ್ನಲೆಯಲ್ಲಿ ತಕ್ಷಣ ನೆಲಕ್ಕುರುಳಿ ಬಿದ್ದಿರುವ ಮರಗಳನ್ನು ಅರಣ್ಯ ಇಲಾಖೆ ತೆರವುಗೊಳಿಸಬೇಕೆಂದು ಮನವಿ ಸಲ್ಲಿಸಲಾಯಿತು.
  ಪಕ್ಷದ ತಾಲೂಕು ಅಧ್ಯಕ್ಷ ನಾಗರಾಜರಾವ್ ಸಿಂಧೆ, ಸುಮಿತ್ರ ಬಾಯಿ, ಉಪಾಧ್ಯಕ್ಷರಾದ ಆನಂದ್, ತೀರ್ಥಕುಮಾರ್, ಯುವ ಘಟಕದ ತಾಲೂಕು ಅಧ್ಯಕ್ಷ ತೀರ್ಥ ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

ಅಂತರ್ ಇಲಾಖೆಯ ಸಮನ್ವಯ ಸಮಿತಿ ಸಭೆ

ಭದ್ರಾವತಿ ತಾಲೂಕು ದಂಡಾಧಿಕಾರಿಗಳು, ತಹಸೀಲ್ದಾರ್ ಹಾಗು ತಾಲೂಕು ಆರೋಗ್ಯಾಧಿಕಾರಿಗಳ ಅಧ್ಯಕ್ಷತೆಯಲ್ಲಿ ತಾಲೂಕಿನ ಅಂತರ್ ಇಲಾಖೆಯ ಸಮನ್ವಯ ಸಮಿತಿ ಸಭೆ ನಡೆಯಿತು.
    ಭದ್ರಾವತಿ, ಜೂ. ೧೪ : ತಾಲೂಕು ದಂಡಾಧಿಕಾರಿಗಳು, ತಹಸೀಲ್ದಾರ್ ಹಾಗು ತಾಲೂಕು ಆರೋಗ್ಯಾಧಿಕಾರಿಗಳ ಅಧ್ಯಕ್ಷತೆಯಲ್ಲಿ ತಾಲೂಕಿನ ಅಂತರ್ ಇಲಾಖೆಯ ಸಮನ್ವಯ ಸಮಿತಿ ಸಭೆ ನಡೆಯಿತು.
    ಸಭೆಯಲ್ಲಿ ಎಂ.ಆರ್ ಎಲಿಮಿನೇಷನ್, ಐಡಿಸಿಎಫ್, ಎಲ್‌ಸಿಡಿಸಿ, ಕೆಎಫ್‌ಡಿ, ಕೋಟ್ಪಾ, ಎನ್‌ವಿಬಿಡಿಸಿಪಿ, ಕೋವಿಡ್-೧೯, ಫ್ಲೋರೋಸಿಸ್, ಆರ್‌ಬಿಎಸ್‌ಕೆ, ಎನ್‌ಟಿಇಪಿ, ಕೆಎಫ್‌ಡಿ ಕುರಿತು ಸಮಗ್ರವಾಗಿ ಚರ್ಚಿಸಿ ಮಾಹಿತಿ ನೀಡಲಾಯಿತು.
    ತಹಸೀಲ್ದಾರ್ ಸುರೇಶ್ ಆಚಾರ್, ತಹಸೀಲ್ದಾರ್ ಗ್ರೇಡ್-೨ ರಂಗಮ್ಮ, ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಅಶೋಕ್, ನಗರಸಭೆ ಆರೋಗ್ಯ ನಿರೀಕ್ಷಕ ಆರ್.ಬಿ ಸತೀಶ್, ವಸಂತ, ಆನಂದಮೂರ್ತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಜೂ.೨೭ರೊಳಗಾಗಿ ಪಡಿತರ ವಿತರಿಸಲು ಸೂಚನೆ

    ಭದ್ರಾವತಿ, ಜೂ. ೧೪ : ತಾಲೂಕಿನ ನ್ಯಾಯಬೆಲೆ ಅಂಗಡಿಗಳಲ್ಲಿ ಜೂನ್-೨೦೨೩ರ ತಿಂಗಳಿನ ಪಡಿತರ ಹಂಚಿಕೆ ಕಾರ್ಯ ೨೭ರೊಳಗಾಗಿ ಮುಕ್ತಾಯಗೊಳಿಸುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಅನೌಪಚಾರಿಕ ಪಡಿತರ ಪ್ರದೇಶದ ಸಹಾಯಕ ನಿರ್ದೇಶಕರು ಸೂಚಿಸಿದ್ದಾರೆ.
    ಬೆಂಗಳೂರು ಕಛೇರಿಯ ಸುತ್ತೋಲೆ ಪತ್ರದಂತೆ ಜೂ.೨೮ರಿಂದ ಸರ್ವರ್ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಪಡಿತರ ಚೀಟಿದಾರರಿಗೆ ಜೂ.೨೭ರೊಳಗಾಗಿ ಈ ತಿಂಗಳ ಆಹಾರ ಧಾನ್ಯ ವಿತರಣೆ/ಹಂಚಿಕೆ ಕಾರ್ಯ ಮುಕ್ತಾಯಗೊಳಿಸುವಂತೆ ಸೂಚಿಸಲಾಗಿದೆ.
    ಪಡಿತರ ಚೀಟಿದಾರರು ಸಹಕರಿಸುವ ಮೂಲಕ ತಮಗೆ ಹಂಚಿಕೆಯಾದ ಆಹಾರ ಧಾನ್ಯಗಳನ್ನು ನ್ಯಾಯಬೆಲೆ ಅಂಗಡಿಗಳಿಂದ ಪಡೆಯಲು ಸಹಾಯಕ ನಿರ್ದೇಶಕರು ಕೋರಿದ್ದಾರೆ. ಅಲ್ಲದೆ ಪಡಿತರ ಚೀಟಿದಾರರು ಕಡ್ಡಾಯವಾಗಿ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ನೋಂದಾಯಿಸಿಕೊಳ್ಳುವಂತೆ ತಿಳಿಸಿದ್ದಾರೆ.