Saturday, July 22, 2023

೨೩ರಂದು ಸಾಹಿತಿಗಳೊಂದಿಗೆ ಒಂದು ಸಂಜೆ ಆನ್‌ಲೈನ್‌ ಕಾರ್ಯಕ್ರಮ

ಕುಟುಂಬ ವೈದ್ಯ ಡಾ. ಕೃಷ್ಣ ಎಸ್. ಭಟ್‌
    ಭದ್ರಾವತಿ, ಜು. ೨೨: ಭಾರತೀಯ ವೈದ್ಯಕೀಯ ಸಂಘ, ಕರ್ನಾಟಕ ಶಾಖೆ, ಕನ್ನಡ ವೈದ್ಯ ಬರಹಗಾರರ ಸಮಿತಿ ಮತ್ತು ವಾಸವಿ ಸಾಹಿತ್ಯ ಕಲಾ ವೇದಿಕೆ ವತಿಯಿಂದ ಜು.೨೩ರ ಭಾನುವಾರ ಸಂಜೆ ೬.೩೦ರಿಂದ ೭.೩೦ರವರೆಗೆ ಸಾಹಿತಿಗಳೊಂದಿಗೆ ಒಂದು ಸಂಜೆ ೧೦೧ನೇ ಆನ್‌ಲೈನ್‌ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
    ನಗರದ ಕುಟುಂಬ ವೈದ್ಯ ಡಾ. ಕೃಷ್ಣ ಎಸ್. ಭಟ್‌ ಆರೋಗ್ಯದ ವಿವಿಧ ಆಯಾಮಗಳು ಕುರಿತು ಮಾಹಿತಿ ನೀಡಲಿದ್ದಾರೆ. ಭಾ.ವೈ.ಸಂ ರಾಜ್ಯಾಧ್ಯಕ್ಷ ಡಾ. ಶಿವಕುಮಾರ್‌ ಲಕ್ಕೋಳ್‌, ಕಾರ್ಯದರ್ಶಿ ಡಾ.ಬಿ.ಪಿ ಕರುಣಾಕರ, ಕನ್ನಡ ವೈದ್ಯ ಬರಹಗಾರರ ಸಮಿತಿ ಅಧ್ಯಕ್ಷ ಡಾ. ಶಿವಾನಂದ ಕುಬಸದ, ವಾಸವಿ ಸಾಹಿತ್ಯ ಕಲಾ ವೇದಿಕೆಯ ಡಾ. ವೀಣಾ ಎನ್‌ ಸುಳ್ಯ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಿದ್ದಾರೆ. ಆಸಕ್ತರು ಝೂಮ್‌ ಲಿಂಕ್‌ https://bit.ly/2UbE22Z ,  ಮೀಟಿಂಗ್‌ ಐಡಿ : ೫೯೪೦೭೬೫೭೭೪,  ಪಾಸ್‌ ಕೋಡ್‌ : imakab ಸಂಪರ್ಕಿಸಬಹುದಾಗಿದೆ.

ಬಿಎಸ್‌ವೈ ಗೌರವ ಡಾಕ್ಟರೇಟ್‌ : ಅಭಿನಂದಿಸಿ ಆಶೀರ್ವದಿಸಿದ ಶ್ರೀಗಳು

ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಮುಖ್ಯಮಂತ್ರಿ  ಬಿ ಎಸ್ ಯಡಿಯೂರಪ್ಪನವರಿಗೆ ಗೌರವ ಡಾಕ್ಟರೇಟ್‌ ಪದವಿ ನೀಡಿ ಗೌರವಿಸಿರುವ ಹಿನ್ನಲೆಯಲ್ಲಿ ಜಿಲ್ಲೆಯ ಕೆಲವು ಮಠಾಧೀಶರು ಯಡಿಯೂರಪ್ಪನವರನ್ನು ಭೇಟಿ ಮಾಡಿ ಆಶೀರ್ವದಿಸಿದ್ದಾರೆ.
    ಭದ್ರಾವತಿ, ಜು. ೨೨ : ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಮುಖ್ಯಮಂತ್ರಿ  ಬಿ ಎಸ್ ಯಡಿಯೂರಪ್ಪನವರಿಗೆ ಗೌರವ ಡಾಕ್ಟರೇಟ್‌ ಪದವಿ ನೀಡಿ ಗೌರವಿಸಿರುವ ಹಿನ್ನಲೆಯಲ್ಲಿ ಜಿಲ್ಲೆಯ ಕೆಲವು ಮಠಾಧೀಶರು ಯಡಿಯೂರಪ್ಪನವರನ್ನು ಭೇಟಿ ಮಾಡಿ ಆಶೀರ್ವದಿಸಿದ್ದಾರೆ.
    ಬಿಳಿಕಿ ಹಿರೇಮಠದ ಶ್ರೀರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ, ಚನ್ನಗಿರಿ ಶಿಲಾಮಠದ ಶ್ರೀ ಡಾ. ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಹಾಗು  ಶಂಕರ ದೇವರ ಮಠದ ಸ್ವಾಮೀಜಿಯವರು ಯಡಿಯೂರಪ್ಪನವರನ್ನು ಭೇಟಿ ಮಾಡಿ ಅಭಿನಂದಿಸುವ ಮೂಲಕ ಅಶೀರ್ವದಿಸಿದರು.  
    ವೀರಶೈವ ಲಿಂಗಾಯತ ಮಠಾಧೀಶರ ವೇದಿಕೆಯಿಂದ  ಶಿವಮೊಗ್ಗ ವೀರಶೈವ ಸಾಂಸ್ಕೃತಿಕ  ಸಭಾಭವನದಲ್ಲಿ  ಜು. 26ರ  ಬುಧವಾರ ಬೆಳಗ್ಗೆ 10.30 ಕ್ಕೆ  ಹಮ್ಮಿಕೊಳ್ಳಲಾಗಿರುವ  ಸಮಾರಂಭಕ್ಕೆ ಆಮಂತ್ರಿಸಲಾಯಿತು.

Friday, July 21, 2023

ರೌಡಿಶೀಟರ್‌ ಮುಜಾಯಿದ್ದೀನ್‌ ಹತ್ಯೆ : ೫ ಮಂದಿ ಪೊಲೀಸರ ವಶಕ್ಕೆ

ಭದ್ರಾವತಿ ಬೊಮ್ಮನಕಟ್ಟೆಯಲ್ಲಿ ಹತ್ಯೆಯಾದ ಮುಜ್ಜು ಅಲಿಯಾಸ್‌ ಮುಜಾಯಿದ್ದೀನ್‌.
    ಭದ್ರಾವತಿ, ಜು. ೨೨ : ರೌಡಿಶೀಟರ್‌ ಮುಜ್ಜು ಅಲಿಯಾಸ್‌ ಮುಜಾಯಿದ್ದೀನ್(32) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ೫ ಜನರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
    ನಗರಸಭೆ ವ್ಯಾಪ್ತಿಯ ಬೊಮ್ಮನಕಟ್ಟೆಯಲ್ಲಿ ಜು.೨೦ರ ಮಧ್ಯರಾತ್ರಿ ಮನೆಯ ಮುಂಭಾಗ ಈತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.  ಘಟನಾ ಸ್ಥಳಕ್ಕೆ ಜಿಲ್ಲಾ ರಕ್ಷಣಾಧಿಕಾರಿ, ಹೆಚ್ಚುವರಿ ರಕ್ಷಣಾಧಿಕಾರಿ, ಹಿರಿಯ ಪೊಲೀಸ್‌ ಉಪಾಧೀಕ್ಷಕ ಸೇರಿದಂತೆ ಇನ್ನಿತರರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.
    ಈ ಸಂಬಂಧ ಪೇಪರ್‌ಟೌನ್‌ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು. ಘಟನೆ ನಡೆದ ೨೪ ಗಂಟೆಯೊಳಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ೫ ಜನರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮುಜ್ಜು ಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಕುವೆಂಪು ವೈಚಾರಿಕ ತತ್ವಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಿ : ಡಾ. ಟಿ.ಸಿ ಭಾರತಿ

ಭದ್ರಾವತಿ ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ವಿಭಾಗ ಮತ್ತು ಐಕ್ಯೂ ಎಸಿ ಸಹಯೋಗದಲ್ಲಿ  ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ʻಕುವೆಂಪು ನಾಟಕಗಳು ಮತ್ತು ಸಾಮಾಜಿಕ ಶ್ರೇಣಿಕರಣ ವ್ಯವಸ್ಥೆʼ  ವಿಷಯ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮ ಕಾಲೇಜಿನ ಪ್ರಾಂಶುಪಾಲರು, ಗಣ್ಯರು, ವಿದ್ಯಾರ್ಥಿಗಳು ಉದ್ಘಾಟಿಸಿದರು. 

    ಭದ್ರಾವತಿ, ಜು. ೨೧:  ವಿಶ್ವ ಮಾನವ ಸಂದೇಶ ಸಾರಿದ ರಾಷ್ಟ್ರಕವಿ ಕುವೆಂಪುರವರು  ಪ್ರತಿಪಾದಿಸಿದ ವೈಚಾರಿಕ ತತ್ವಗಳನ್ನು ನಾವೆಲ್ಲರೂ ನಮ್ಮ ಬದುಕಿನಲ್ಲಿಅಳವಡಿಸಿಕೊಳ್ಳುವಂತಾಗಬೇಕೆಂದು ನ್ಯಾಮತಿ  ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಪ್ರಾಧ್ಯಾಪಕಿ ಡಾ. ಟಿ.ಸಿ ಭಾರತಿ ಹೇಳಿದರು.  
    ಅವರು ಶುಕ್ರವಾರ ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ವಿಭಾಗ ಮತ್ತು ಐಕ್ಯೂ ಎಸಿ ಸಹಯೋಗದಲ್ಲಿ  ಹಮ್ಮಿಕೊಳ್ಳಲಾಗಿದ್ದ ʻಕುವೆಂಪು ನಾಟಕಗಳು ಮತ್ತು ಸಾಮಾಜಿಕ ಶ್ರೇಣಿಕರಣ ವ್ಯವಸ್ಥೆʼ  ವಿಷಯ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ಕುವೆಂಪು ಅವರ ವೈಚಾರಿಕ ತತ್ವಗಳು ಎಂದಿಗೂ ಪ್ರಸ್ತುತವಾಗಿವೆ. ಪ್ರತಿಯೊಬ್ಬರು ಇದರ  ಕುರಿತು ಹೆಚ್ಚಿನ ಅರಿವು ಹೊಂದಬೇಕಾಗಿದೆ. ಈ ನಿಟ್ಟಿನಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಹೆಚ್ಚಿನ ಸಹಕಾರಿಯಾಗಿದೆ ಎಂದರು.
    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ. ಮಂಜುನಾಥ್ ಸಕಲೇಶ್ ಮಾತನಾಡಿ, ಕುವೆಂಪು ಸಾಹಿತ್ಯ ಮತ್ತು ವಿಚಾರಗಳು ಹಿಂದಿಗಿಂತಲೂ ಇಂದು ಹೆಚ್ಚು ಪ್ರಸ್ತುತವಾಗಿರುವುದರ ಕುರಿತು ವಿವರಿಸಿದರು.
  ಕನ್ನಡ ವಿಭಾಗದ ಮುಖ್ಯಸ್ಥ, ಸಾಂಸ್ಕೃತಿಕ ವೇದಿಕೆ ಸಂಚಾಲಕ ಎನ್.  ಕುಮಾರ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.   ಐಕ್ಯೂಎಸಿ ಸಂಚಾಲಕ ಡಾ. ಟಿ. ಪ್ರಸನ್ನ ಉಪಸ್ಥಿತರಿದ್ದರು.
    ವರ್ಷಿತ್ ಕುಮಾರ್ ಕಾರ್ಯಕ್ರಮ ನಿರೂಪಿಸಿ, ಶಾರದ ಮತ್ತು ಸಂಗಡಿಗರು ಪ್ರಾರ್ಥಿಸಿದರು. ಅಶ್ವತ್  ವಂದಿಸಿದರು. ಸುಮಾರು 75ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಅಧ್ಯಾಪಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.  

ರೌಡಿಶೀಟರ್‌ ಮುಜ್ಜು ಹತ್ಯೆ

ಭದ್ರಾವತಿ ನಗರಸಭೆ ವ್ಯಾಪ್ತಿಯ ಬೊಮ್ಮನಕಟ್ಟೆಯಲ್ಲಿ ಹತ್ಯೆಯಾದ ರೌಡಿಶೀಟರ್‌ ಮುಜ್ಜು ಅಲಿಯಾಸ್‌ ಮುಜಾಯಿದ್ದೀನ್‌. 

    ಭದ್ರಾವತಿ, ಜು. ೨೧ : ನಗರಸಭೆ ವ್ಯಾಪ್ತಿಯ ಬೊಮ್ಮನಕಟ್ಟೆಯಲ್ಲಿ ರೌಡಿಶೀಟರ್‌ ಓರ್ವನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 

ಮುಜ್ಜು ಅಲಿಯಾಸ್‌ ಮುಜಾಯಿದ್ದೀನ್(32)  ಹತ್ಯೆಯಾಗಿದ್ದು, ಈತನ ವಿರುದ್ಧ ಕೊಲೆ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿದ್ದವು.   ಈತನಿಗೆ ಇಬ್ಬರು ಪತ್ನಿಯರಿದ್ದು, ಗುರುವಾರ ಮಧ್ಯ ರಾತ್ರಿ ಈತನ ಎರಡನೇ ಪತ್ನಿ ಮನೆ ಮುಂಭಾಗದಲ್ಲಿಯೇ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ. 

ಸ್ಥಳಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್‌ಕುಮಾರ್‌, ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್‌ಕುಮಾರ್‌ ಭೂಮರೆಡ್ಡಿ, ಹಿರಿಯ ಪೊಲೀಸ್‌ ಅಧೀಕ್ಷಕ ಜಿತೇಂದ್ರಕುಮಾರ್‌ ದಯಾಮ ಹಾಗು ಪೇಪರ್‌ಟೌನ್‌ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

ಶಿವಮೊಗ್ಗ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಮೃತದೇಹದ ಶವ ಪರೀಕ್ಷೆ ನಡೆಸಲಾಗಿದ್ದು, ಪೇಪರ್‌ಟೌನ್‌ ಪೊಲೀಸ್‌ ಠಾಣೆಯಲ್ಲಿ ಈ ಸಂಬಂಧ ಹತ್ಯೆಗೊಳಗಾಗಿರುವ ಮುಜಾಯಿದ್ದೀನ್‌ ಸಹೋದರ(ತಮ್ಮ) ದೂರು ದಾಖಲಿಸಿದ್ದು, ಪೊಲೀಸರು ಮುಂದಿನ ಕ್ರಮ ಕೈ ಗೊಂಡಿದ್ದಾರೆ. ಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. 


Thursday, July 20, 2023

೧೨೫ಕ್ಕೆ ೧೨೫ ಅಂಕಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ, ಅಭಿನಂದನೆ

ಜು.೨೪ರೊಳಗಾಗಿ ಮಾಹಿತಿ ನೀಡಲು ಕಸಾಪ ಮನವಿ 


    ಭದ್ರಾವತಿ, ಜು. ೨೦ : ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಕನ್ನಡ ಪ್ರಥಮ ಭಾಷೆಯಲ್ಲಿ ೧೨೫ಕ್ಕೆ ೧೨೫ ಅಂಕ ಪಡೆದಿರುವ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಅಭಿನಂದಿಸಲು ತೀರ್ಮಾನಿಸಲಾಗಿದೆ.
ಈ ಹಿನ್ನಲೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳು ಮಾಹಿತಿ ನೀಡುವಂತೆ ಕೋರಲಾಗಿದೆ.
    ಅಂಕಪಟ್ಟಿಯ ನಕಲು ಪ್ರತಿ ಹಾಗು ಒಂದು ಭಾವಚಿತ್ರ ಪರಿಷತ್ತಿನ ಸಂಘಟನಾ ಕಾರ್ಯದರ್ಶಿಗಳಾದ ಡಿ. ನಾಗೋಜಿರಾವ್‌, ಮೊ: ೯೪೪೮೩೩೭೪೨೨ ಮತ್ತು ಬಿ. ಪ್ರಕಾಶ್‌, ಮೊ: ೯೯೪೪೧೬೨೬೭೭ ಸಂಖ್ಯೆಗೆ ಜು.೨೪ರೊಳಗಾಗಿ ವ್ಯಾಟ್ಸಫ್‌ ಮಾಡಿ ಮಾಹಿತಿ ನೀಡುವಂತೆ ಕಾರ್ಯದರ್ಶಿ ಎಚ್. ತಿಮ್ಮಪ್ಪ ಮನವಿ ಮಾಡಿದ್ದಾರೆ. 

ಅಪ್ರಾಪ್ತ ವಯಸ್ಸಿನ ಪುತ್ರನಿಂದ ದ್ವಿಚಕ್ರ ವಾಹನ ಚಾಲನೆ

೨೫ ಸಾವಿರ ರು. ದಂಡ ಕಟ್ಟಿದ ತಂದೆ..!


    ಭದ್ರಾವತಿ, ಜು. ೨೦: ಅಪ್ರಾಪ್ತ ವಯಸ್ಸಿನ ಪುತ್ರನಿಗೆ ದ್ವಿಚಕ್ರ ವಾಹನ ಚಾಲನೆ ಮಾಡಲು ನೀಡಿದ್ದ  ತಂದೆಯೊಬ್ಬರಿಗೆ ಬರೋಬ್ಬರಿ ೨೫ ಸಾವಿರ ರು. ದಂಡ ವಿಧಿಸಿರುವ ಘಟನೆ ನಡೆದಿದೆ.
    ಜನ್ನಾಪುರ ನಿವಾಸಿ ಶ್ರೀಕಾಂತ್(೪೫) ಎಂಬುವರು ತಮ್ಮ ೧೬ ವರ್ಷದ ಪುತ್ರನಿಗೆ ದ್ವಿಚಕ್ರ ವಾಹನ ಚಾಲನೆ ಮಾಡಲು ನೀಡಿದ್ದರು. ನ್ಯೂಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ಹುತ್ತಾ ಕಾಲೋನಿ ಬಳಿ, ಠಾಣಾಧಿಕಾರಿ ರಮೇಶ್ ರವರು ವಾಹನ ತಪಾಸಣಾ ಕಾರ್ಯ ನಡೆಸುತ್ತಿದ್ದಾಗ ಸಿಕ್ಕಿ ಬಿದ್ದಿದ್ದು,  ವಾಹನ ಚಾಲನಾ ಪರವಾನಿಗೆ ಇಲ್ಲದಿರುವುದು ಹಾಗು ಆತ ಅಪ್ರಾಪ್ತ ವಯಸ್ಸಿನವನಾಗಿರುವುದು ಬೆಳಕಿಗೆ ಬಂದಿದೆ.
    ಈ ಹಿನ್ನೆಲೆಯಲ್ಲಿ ಸಂಚಾರಿ ನಿಯಮಗಳಿಗೆ ವಿರುದ್ಧವಾಗಿ, ಅಪ್ರಾಪ್ತ ಪುತ್ರನಿಗೆ ಬೈಕ್ ಚಾಲನೆ ಮಾಡಲು ಅವಕಾಶ ನೀಡಿದ ತಂದೆಯ ವಿರುದ್ದ ನ್ಯೂಟೌನ್ ಠಾಣೆಯಲ್ಲಿ ಲಘು ಪ್ರಕರಣ ದಾಖಲಿಸಲಾಗಿತ್ತು. ತದನಂತರ ಪ್ರಕರಣದ ಕುರಿತಂತೆ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
    ಪ್ರಕರಣದ ವಿಚಾರಣೆ ನಡೆಸಿದ ನಗರದ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರು ಶ್ರೀಕಾಂತ್‌ರವರಿಗೆ ೨೫ ಸಾವಿರ ರೂ. ದಂಢ ವಿಧಿಸಿ ಆದೇಶ ಹೊರಡಿಸಿದ್ದಾರೆ.