Wednesday, October 25, 2023

ಅ.೨೮ರಂದು ವಾಲ್ಮೀಕಿ ಜಯಂತಿ

       ಭದ್ರಾವತಿ: ತಾಲೂಕು ಆಡಳಿತ, ತಾಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ನಗರಸಭೆ ಹಾಗು ಮಹರ್ಷಿ ವಾಲ್ಮೀಕಿ ನಾಯಕ ಸಮಾಜದ ವತಿಯಿಂದ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಅ.೨೮ರ ಶನಿವಾರ ೧೧ಗಂಟೆಗೆ ಹಳೇನಗರದ ವೀರಶೈವ ಸಭಾಭವನದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ  ಹಮ್ಮಿಕೊಳ್ಳಲಾಗಿದೆ.
    ಶಾಸಕ ಬಿ.ಕೆ.ಸಂಗಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದು, ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯನಾಯ್ಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ನಗರಸಭೆ ಅಧ್ಯಕ್ಷೆ ಶೃತಿ ಸಿ. ವಸಂತಕುಮಾರ್ ಕೆ.ಜಿ, ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್ ಕುಮಾರ್, ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ ಬಸವರಾಜ್ ಬಿ. ಆನೇಕೊಪ್ಪ ಸೇರಿದಂತೆ ಹಲವಾರು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
    ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷರು ಹಾಗು ಪದಾಧಿಕಾರಿಗಳು ಕೋರಿದ್ದಾರೆ.

ಸಿದ್ದಾರೂಢ ಮಠದಲ್ಲಿ ಶರನ್ನವರಾತ್ರಿ ಉತ್ಸವ : ಪ್ರವಚನ

ಶರನ್ನವರಾತ್ರಿ ಉತ್ಸವದ ಅಂಗವಾಗಿ ಭದ್ರಾವತಿ ಹುಡ್ಕೋ ಕಾಲೋನಿಯಲ್ಲಿರುವ ಸಿದ್ದಾರೂಢ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುಳ್ಳೂರು ಸುಕ್ಷೇತ್ರದ ಶ್ರೀ ಶಿವಯೋಗಿಶ್ವರ ಸಂಸ್ಥಾನ ಮಠದ ಶ್ರೀ ಸದ್ಗುರು ಬಸವಾನಂದ ಭಾರತಿ ಸ್ವಾಮೀಜಿಯವರು ಪಾಲ್ಗೊಂಡು ಪ್ರವಚನ ನೀಡಿದರು.
    ಭದ್ರಾವತಿ : ಶರನ್ನವರಾತ್ರಿ ಉತ್ಸವದ ಅಂಗವಾಗಿ ಹುಡ್ಕೋ ಕಾಲೋನಿಯಲ್ಲಿರುವ ಸಿದ್ದಾರೂಢ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುಳ್ಳೂರು ಸುಕ್ಷೇತ್ರದ ಶ್ರೀ ಶಿವಯೋಗಿಶ್ವರ ಸಂಸ್ಥಾನ ಮಠದ ಶ್ರೀ ಸದ್ಗುರು ಬಸವಾನಂದ ಭಾರತಿ ಸ್ವಾಮೀಜಿಯವರು ಪಾಲ್ಗೊಂಡು ಪ್ರವಚನ ನೀಡಿದರು.
    ಶ್ರೀಗಳು ಪ್ರತಿ ವರ್ಷ ಶರನ್ನವರಾತ್ರಿ ಉತ್ಸವದಂದು ಶ್ರೀ ಮಠಕ್ಕೆ ಆಗಮಿಸಿ ಭಕ್ತರಿಗೆ ಆಶೀರ್ವದಿಸುತ್ತಿದ್ದು, ೧೦ ದಿನಗಳ ಕಾಲ ನವದುರ್ಗೆಯರ ಆರಾಧನೆಯೊಂದಿಗೆ ಧಾರ್ಮಿಕ ಆಚರಣೆಗಳು ಜರುಗಿದವು. ಪ್ರತಿದಿನ ಭಕ್ತರಿಗೆ ದಾಸೋಹ ವ್ಯವಸ್ಥೆ ಕಲ್ಪಿಸಲಾಗಿತ್ತು. ಸುತ್ತಮುತ್ತಲಿನ ಭಕ್ತರು ಪಾಲ್ಗೊಂಡು ಉತ್ಸವ ಯಶಸ್ವಿಗೊಳಿಸಿದರು.

ಶ್ರೀ ವಿನಾಯಕ ಮೂರ್ತಿ ವಿಸರ್ಜನೆ : ಮೆರವಣಿಗೆ

ಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ, ಶ್ರೀ ಕರುಮಾರಿಯಮ್ಮ ದೇವಸ್ಥಾನದ ಬಳಿ ಪ್ರತಿಷ್ಠಾಪಿಸಲಾಗಿದ್ದ ಶ್ರೀ ವಿನಾಯಕ ಮೂರ್ತಿ ವಿಸರ್ಜನೆ ಬುಧವಾರ ನಡೆಯಿತು.
    ಭದ್ರಾವತಿ : ನಗರದ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ, ಶ್ರೀ ಕರುಮಾರಿಯಮ್ಮ ದೇವಸ್ಥಾನದ ಬಳಿ ಪ್ರತಿಷ್ಠಾಪಿಸಲಾಗಿದ್ದ ಶ್ರೀ ವಿನಾಯಕ ಮೂರ್ತಿ ವಿಸರ್ಜನೆ ಬುಧವಾರ ನಡೆಯಿತು.
    ಸ್ಥಳೀಯ ಕೆಲ ಯುವಕರು ಕಳೆದ ಕೆಲವು ವರ್ಷಗಳಿಂದ ಮೂರ್ತಿ ಪ್ರತಿಷ್ಠಾಪನೆ ಮಾಡುವ ಮೂಲಕ ವಿನಾಯಕ ಚತುರ್ಥಿ ಆಚರಿಸಿಕೊಂಡು ಬರುತ್ತಿದ್ದಾರೆ. ವಿಸರ್ಜನೆ ಅಂಗವಾಗಿ ನ್ಯೂಟೌನ್ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಯಿತು. ಯುವಕರೊಂದಿಗೆ ಸ್ಥಳೀಯ ನಿವಾಸಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಸಂಜೆ ಮೂರ್ತಿ ವಿಸರ್ಜಿಸಲಾಯಿತು.

ಬನ್ನಿ ಮುಡಿದ ತಹಸೀಲ್ದಾರ್ : ನಾಡಹಬ್ಬ ದಸರಾ ಸಂಪನ್ನ

ಭದ್ರಾವತಿ ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ನಾಡಹಬ್ಬ ದಸರಾ ಆಚರಣೆಗೆ ತಹಸೀಲ್ದಾರ್ ಕೆ.ಆರ್ ನಾಗರಾಜು ಮಂಗಳವಾರ ರಾತ್ರಿ ಬನ್ನಿ ಮುಡಿಯುವ(ಶಮಿ ಪೂಜೆ) ಮೂಲಕ ತೆರೆ ಎಳೆದರು.
    ಭದ್ರಾವತಿ: ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ನಾಡಹಬ್ಬ ದಸರಾ ಆಚರಣೆಗೆ ತಹಸೀಲ್ದಾರ್ ಕೆ.ಆರ್ ನಾಗರಾಜು ಮಂಗಳವಾರ ರಾತ್ರಿ ಬನ್ನಿ ಮುಡಿಯುವ(ಶಮಿ ಪೂಜೆ) ಮೂಲಕ ತೆರೆ ಎಳೆದರು.
    ಹಳೇನಗರದ ಕನಕಮಂಟಪ ಮೈದಾನದಲ್ಲಿ ಆಯೋಜಿಸಲಾಗಿದ್ದ ಬನ್ನಿ ಮುಡಿಯುವ ಕಾರ್ಯಕ್ರಮದಲ್ಲಿ ಪುರಾಣ ಪ್ರಸಿದ್ದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕರಾದ ಉ||ವೇ||ಬ್ರ||ವಿ|| ಎಸ್. ರಂಗನಾಥ ಶರ್ಮ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. ಕೊನೆಯಲ್ಲಿ ರಾವಣನ ಸಂಹಾರದೊಂದಿಗೆ ದಸರಾ ಆಚರಣೆಗೆ ತೆರೆ ಎಳೆಯಲಾಯಿತು. ನೆರೆದಿದ್ದ ಜನರು ಪರಿಸ್ಪರ ಬನ್ನಿ ಹಂಚಿಕೊಳ್ಳುವ ಮೂಲಕ ಹಬ್ಬದ ಶುಭಾಶಯ ಕೋರಿದರು.
    ಚಾಮುಂಡೇಶ್ವರಿ ದೇವಿ ಒಳಿತು ಮಾಡಲಿ : ಕೃತಜ್ಞತೆ
    ಇದಕ್ಕೂ ಮೊದಲು ಮಾತನಾಡಿದ ಶಾಸಕ ಬಿ.ಕೆ ಸಂಗಮೇಶ್ವರ್, ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯಗಳು ನಡೆಯುವಂತಾಗಲಿ. ಎಲ್ಲರಿಗೂ ತಾಯಿ ಚಾಮುಂಡೇಶ್ವರಿ ಒಳಿತು ಮಾಡಲಿ ಎಂದು ಪ್ರಾರ್ಥಿಸಿದರು.  ಪ್ರತಿ ವರ್ಷದಂತೆ ಈ ಬಾರಿ ಸಹ ವಿಜೃಂಭಣೆಯಿಂದ ನಾಡಹಬ್ಬ ದಸರಾ ಆಚರಣೆ ನಡೆದಿದ್ದು, ಯಶಸ್ವಿಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
    ನಗರಸಭೆ ಅಧ್ಯಕ್ಷೆ ಶೃತಿ ವಸಂತಕುಮಾರ್, ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಸುದೀಪ್ ಕುಮಾರ್, ಪೌರಾಯುಕ್ತ ಎಚ್.ಎಂ ಮನುಕುಮಾರ್, ದಸರಾ ಕ್ರೀಡಾ ಸಮಿತಿ ಅಧ್ಯಕ್ಷ ಚನ್ನಪ್ಪ ಹಾಗು ವಿವಿಧ ಸಮಿತಿಗಳ ಅಧ್ಯಕ್ಷರು, ಸದಸ್ಯರಾದ ಬಸವರಾಜ್, ಜಾರ್ಜ್, ಆರ್. ಮೋಹನ್ ಕುಮಾರ್, ಬಷೀರ್ ಅಹಮದ್, ವಿ. ಕದಿರೇಶ್, ಬಿ.ಟಿ ನಾಗರಾಜ್, ಬಿ.ಕೆ ಮೋಹನ್, ಅನುಸುಧಾ ಮೋಹನ್ ಪಳನಿ, ಲತಾ ಚಂದ್ರಶೇಖರ್, ಪ್ರೇಮ ಬದರಿನಾರಾಯಣ, ಶಶಿಕಲಾ ನಾರಾಯಣಪ್ಪ, ಗೀತಾ ರಾಜ್‌ಕುಮಾರ್, ಅನುಪಮ ಚನ್ನೇಶ್, ಕಾಂತರಾಜ್, ಕೋಟೇಶ್ವರರಾವ್, ಉದಯ್‌ಕುಮಾರ್, ರಿಯಾಜ್ ಅಹಮದ್, ಪಲ್ಲವಿ ದಿಲೀಪ್, ನಾಗರತ್ನ ಅನಿಲ್‌ಕುಮಾರ್, ಜಯಶೀಲ ಸುರೇಶ್, ಸವಿತಾ ಉಮೇಶ್, ರೇಖಾ ಪ್ರಕಾಶ್, ಮಂಜುಳ ಸುಬ್ಬಣ್ಣ, ಅನಿತಾ ಮಲ್ಲೇಶ್, ಆರ್. ಶ್ರೇಯಸ್(ಚಿಟ್ಟೆ), ಬಿ.ಎಂ ರವಿಕುಮಾರ್ ಹಾಗು ಅಧಿಕಾರಿಗಳಾದ ರಾಜ್‌ಕುಮಾರ್, ಪ್ರಭಾಕರ್, ಸುಹಾಸಿನಿ ಮತ್ತು ಪೌರಸೇವಾ ನೌಕರರ ಸೇವಾ ಸಂಘದ ಪದಾಧಿಕಾರಿಗಳು, ದಸರಾ ಉದ್ಘಾಟಕರು, ಸಮಾಜ ಸೇವಕರಾದ ಪಿ. ವೆಂಕಟರಮಣ ಶೇಟ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ, ರಾಜಕೀಯ ಪಕ್ಷಗಳ ಪ್ರಮುಖರು, ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳು, ನೌಕರರು ಸೇರಿದಂತೆ ಇನ್ನಿತರರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು

೪ನೇ ಏಷ್ಯನ್ ಪ್ಯಾರಾ ಗೇಮ್ಸ್ ಪಂದ್ಯಾವಳಿ : ಭಾರತ ತಂಡಕ್ಕೆ ೨ ಪದಕ

ಚೀನಾದ ಹಾಂಗಝೌನಲ್ಲಿ ಜರುಗಿದ ೪ನೇ ಏಷ್ಯನ್ ಪ್ಯಾರಾ ಗೇಮ್ಸ್ ಪಂದ್ಯಾವಳಿಯಲ್ಲಿ ಭಾರತ ತಂಡದ ಕ್ರೀಡಾಪಟುಗಳು ೧,೫೦೦ ಮೀಟರ್ ಓಟದಲ್ಲಿ ಚಿನ್ನ ಹಾಗು ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ.
    ಭದ್ರಾವತಿ : ಚೀನಾದ ಹಾಂಗಝೌನಲ್ಲಿ ಜರುಗಿದ ೪ನೇ ಏಷ್ಯನ್ ಪ್ಯಾರಾ ಗೇಮ್ಸ್ ಪಂದ್ಯಾವಳಿಯಲ್ಲಿ ಭಾರತ ತಂಡದ ಕ್ರೀಡಾಪಟುಗಳು ೧,೫೦೦ ಮೀಟರ್ ಓಟದಲ್ಲಿ ಚಿನ್ನ ಹಾಗು ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ.
    ರಕ್ಷಿತಾ ಚಿನ್ನ ಹಾಗು ಲಲಿತಾ ಬೆಳ್ಳಿ ಪದಕ ತಮ್ಮದಾಗಿಸಿಕೊಂಡು ದೇಶಕ್ಕೆ ಕೀರ್ತಿ ತಂದಿದ್ದಾರೆ. ತರಬೇತಿದಾರ ರಾಹುಲ್ .ಬಿ ಮತ್ತು ನಗರದ ಹೊಸಮನೆ ನಿವಾಸಿ ಸಾವಂತ್‌ರವರ ಪುತ್ರಿ, ಸಹಾಯಕ ತರಬೇತಿದಾರರಾದ ಸೌಮ್ಯ ಸಾವಂತ್ ಹಾಗು ಗೈಡ್ ರನ್ನರ್ ತಬ್ರೇಶ್ ಅವರೊಂದಿಗೆ ತಂಡ ಪಂದ್ಯಾವಳಿ ಪಾಲ್ಗೊಂಡಿತ್ತು. ವಿಜೇತ ಕ್ರೀಡಾಪಟುಗಳನ್ನು ನಗರದ ಗಣ್ಯರು, ಕ್ರೀಡಾಭಿಮಾನಿಗಳು ಅಭಿನಂದಿಸಿದ್ದಾರೆ.

Tuesday, October 24, 2023

ಮೈಸೂರು ದಸರಾ ನಾಡಹಬ್ಬ ಗೊಂಬೆ ಪ್ರದರ್ಶನ : ಜ್ಞಾನದ ಕೇಂದ್ರ

ಉಮೇಶ್ ಮತ್ತು ಕುಸುಮ ದಂಪತಿ ವಿಶಿಷ್ಟ ಕಾರ್ಯ

ಭದ್ರಾವತಿ ನ್ಯೂಕಾಲೋನಿ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ ಸಮೀಪದ ವಿಐಎಸ್‌ಎಲ್ ವಸತಿ ಗೃಹದಲ್ಲಿ ವಾಸವಾಗಿರುವ ಉಮೇಶ್ ಹಾಗು ಕುಸುಮ ದಂಪತಿ ಈ ಬಾರಿ ಸಹ ೧೦ ದಿನಗಳ ಕಾಲ ದಸರಾ ಗೊಂಬೆ ಪ್ರದರ್ಶನ ಏರ್ಪಡಿಸುವ ಮೂಲಕ ಗಮನ ಸೆಳೆದರು.     
    * ಅನಂತಕುಮಾರ್
     ಭದ್ರಾವತಿ: ವೈಭವದ ಮೈಸೂರು ದಸರಾ ನಾಡಹಬ್ಬ ಪರಂಪರೆ ಕೇವಲ ಗೊಂಬೆ ಪ್ರದರ್ಶನಕ್ಕೆ ಮಾತ್ರ ಸೀಮಿತವಾಗದೆ. ಹಲವು ವಿಶಿಷ್ಟತೆಯೊಂದಿಗೆ ಜ್ಞಾನ ತುಂಬುವ ಕೇಂದ್ರವನ್ನಾಗಿಸಿಕೊಳ್ಳುವ ಮೂಲಕ ನಗರದ ನಿವಾಸಿಗಳಾದ ಉಮೇಶ್ ಮತ್ತು ಕುಸುಮ ದಂಪತಿ ಜನರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.


ನಗರದ ನ್ಯೂಕಾಲೋನಿ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ ಸಮೀಪ ವಿಐಎಸ್‌ಎಲ್ ಕಾರ್ಖಾನೆ ವಸತಿ ಗೃಹದಲ್ಲಿ ವಾಸವಾಗಿರುವ ಖಾಸಗಿ ಕಂಪನಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಉಮೇಶ್ ಹಾಗು ನ್ಯಾಯಾಂಗ ಇಲಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕುಸುಮ ದಂಪತಿ ಕಳೆದ ಸುಮಾರು ೨೨ ವರ್ಷಗಳಿಂದ ಮೈಸೂರು ದಸರಾ ನಾಡಹಬ್ಬ ಪರಂಪರೆಯನ್ನು ಗೊಂಬೆ ಪ್ರದರ್ಶನದ ಮೂಲಕ ಉಕ್ಕಿನ ನಗರದ ಜನತೆಗೆ ಪರಿಚಯಿಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.
ಈ ಬಾರಿ ಸಹ ೧೦ ದಿನಗಳ ಕಾಲ ಪ್ರದರ್ಶನ ಕೈಗೊಳ್ಳಲಾಗಿತ್ತು. ವಿಶೇಷವಾಗಿ ಚಂದ್ರಯಾನ-೩ ಪ್ರದರ್ಶನಕ್ಕೆ ಮತ್ತಷ್ಟು ಮೆರಗು ನೀಡಿತ್ತು. ರಾಕೆಟ್ ಮೂಲಕ ಚಂದ್ರಯಾನ ಪ್ರಯಾಣ ವಿಸ್ಮಯಗೊಳಿಸುವಂತೆ ಕಂಡು ಬರುತ್ತಿತ್ತು. ಮತ್ತೊಂದು ವಿಶೇಷತೆ ಎಂದರೆ ಈಶ ಫೌಂಡೇಷನ್ ಧ್ಯಾನಾಸಕ್ತ ಜಗದೊಡೆಯ ಶಿವನ ವಿಗ್ರಹ ನೋಡುಗರ ಗಮನ ಸೆಳೆಯಿತು.

ತಾಯಿ ಮನೆಯಿಂದ ರೂಢಿಸಿಕೊಂಡು ಬಂದ ಭವ್ಯಪರಂಪರೆಯ ಈ ಆಚರಣೆಯನ್ನು ಅತ್ತೆಯ ಮನೆಯಲ್ಲೂ ಮುಂದುವರೆಸಿಕೊಂಡು ಹೋಗುತ್ತಿದ್ದೇನೆ. ಪ್ರತಿ ವರ್ಷ ವಿಭಿನ್ನತೆ ಕಾಯ್ದುಕೊಂಡು ಬರಲಾಗುತ್ತಿದೆ. ಈ ಗೊಂಬೆ ಪ್ರದರ್ಶನವನ್ನು ವೀಕ್ಷಿಸಲು ಪ್ರತಿ ವರ್ಷ ನೂರಾರು ಮಂದಿ ಆಗಮಿಸುತ್ತಿದ್ದು, ಮತ್ತಷ್ಟು ಸ್ಪೂರ್ತಿಯನ್ನುಂಟು ಮಾಡುತ್ತಿದೆ.
 - ಕುಸುಮ, ಭದ್ರಾವತಿ

     

    ವನ್ಯ ಜೀವಿ ತಾಣಗಳಾದ ಶಿವಮೊಗ್ಗ ತಾವರೆಕೊಪ್ಪ ಹುಲಿ ಮತ್ತು ಸಿಂಹ ಧಾಮ, ಸಕ್ರೆಬೈಲು ಆನೆ ಬಿಡಾರ, ಭದ್ರಾ ಅಭಯಾರಣ್ಯ, ಗುಡವಿ ಪಕ್ಷಿಧಾಮ, ಮತ್ಸ್ಯಧಾಮ ಹಾಗು ವಿಜಯನಗರ, ಚಾಮುಂಡಿ ಬೆಟ್ಟ, ಶ್ರೀ ಕ್ಷೇತ್ರ ಧರ್ಮಸ್ಥಳ, ಇಡಗುಂಜಿ, ಗಾಣಗಾಪುರ, ಗೋಕರ್ಣ ಸೇರಿದಂತೆ ಹಲವು ಪ್ರವಾಸಿ ತಾಣಗಳು ಹಾಗು ಧಾರ್ಮಿಕ ಕ್ಷೇತ್ರಗಳನ್ನು ಆಕರ್ಷಕವಾಗಿ ಅನಾವರಣಗೊಳಿಸಲಾಗಿತ್ತು. ಆಧುನಿಕ ಶೈಲಿಯ ಅಡುಗೆ ಮನೆ ಹಾಗು ಪ್ರಾಚಿನ ಕಾಲದ ಅಡುಗೆ ಮನೆ ಮತ್ತು ನಗರದ ಪದ್ಮನಿಲಯ ಹೋಟೆಲ್, ಪೂರ್ಣಪ್ರಜ್ಞ ವಿದ್ಯಾಸಂಸ್ಥೆ ಸಹ ಇಲ್ಲಿ ಕಂಡು ಬಂದವು.


    ಉಳಿದಂತೆ ತಾಯಿ ಶ್ರೀ ಚಾಮುಂಡೇಶ್ವರಿ ದೇವಿಯನ್ನೊಳಗೊಂಡಂತೆ ನವದುರ್ಗಿಯರು, ಶೃಂಗೇರಿ ಶಾರದಾಂಬೆ, ಆಚಾರ್ಯತ್ರಯರು, ದಶವತಾರ, ವಿಶ್ವರೂಪ, ಶ್ರೀ ತಿರುಪತಿ ವೆಂಕಟೇಶ್ವರ, ಸಪ್ತಋಷಿ, ಸಂಗೀತ ವಾದ್ಯಗಳು, ಬೆಣ್ಣೆಕೃಷ್ಣ, ಲಲಿತಾದೇವಿ ಅಷ್ಟ ಲಕ್ಷ್ಮಿಯರು, ತ್ರಿಶಕ್ತಿ, ಅನಂತಪದ್ಮನಾಭ, ರುಕ್ಮಿಣಿ ಪಾಂಡುರಂಗ, ಭಕ್ತೆ ಮೀರಾಬಾಯಿ, ಶಿರಡಿ ಸಾಯಿಬಾಬಾ, ಬಾಲಾಂಬಿಕೆ ಜೊತೆಗೆ ವಿಶೇಷವಾಗಿ ಸುಮಾರು ೧೦೦ ವರ್ಷ ಹಳೆಯದಾದ ಪಟ್ಟದ ಗೊಂಬೆ ಸಹ ಇದ್ದು, ಇವುಗಳ ನಡುವೆ ಸದಾ ಕಾಲ ನಮ್ಮೆಲ್ಲರನ್ನು ರಕ್ಷಿಸುತ್ತಿರುವ ವೀರಯೋಧರನ್ನು ಈ ದಂಪತಿ ಸ್ಮರಿಸಿರುವುದು ಮತ್ತೊಂದು ವಿಶೇಷವಾಗಿದೆ. ಸುತ್ತಮುತ್ತಲಿನ ನಿವಾಸಿಗಳು ಇವುಗಳನ್ನು ನೋಡಿ ಆನಂದಿಸುವ ಜೊತೆಗೆ ಕಣ್ತುಂಬಿ ಕೊಂಡರು.  



    ಉಮೇಶ್ ಅವರ ತಾಯಿ ನಾಗರತ್ನ ಅವರ ಮಾರ್ಗದರ್ಶನದಲ್ಲಿ ಮಕ್ಕಳಾದ ಸ್ಕಂದ ಭಾರದ್ವಾಜ್ ಮತ್ತು ಸ್ತುತಿ ಭಾರದ್ವಾಜ್ ಅವರ ಸಹಕಾರದೊಂದಿಗೆ ಈ ದಂಪತಿ ಬಿಡುವಿಲ್ಲದ ಕರ್ತವ್ಯದ ನಡುವೆಯೂ ಯಶಸ್ವಿಯಾಗಿ ಈ ಕಾರ್ಯವನ್ನು ಮುನ್ನೆಡೆಸಿಕೊಂಡು ಬರುತ್ತಿದ್ದಾರೆ. ಅಲ್ಲದೆ ಸುತ್ತಮುತ್ತಲಿನ ನಿವಾಸಿಗಳು ಪ್ರತಿ ವರ್ಷ ಇವರ ಮನೆಗೆ ಭೇಟಿ ನೀಡಿ ಗೊಂಬೆ ಪ್ರದರ್ಶನ ವೀಕ್ಷಿಸಿ ಕಣ್ತುಂಬಿಕೊಳ್ಳುತ್ತಿದ್ದಾರೆ.

ದಸರಾ ನಾಡಹಬ್ಬವಾಗಿದ್ದು, ನಮ್ಮ ನಾಡಿನ ಭವ್ಯ ಪರಂಪರೆ ಮುಂದಿನ ಪೀಳಿಗೆಗೂ ಉಳಿಯಬೇಕೆಂಬ ಆಶಯ ನಮ್ಮದಾಗಿದೆ. ಪ್ರತಿಮನೆಯಲ್ಲೂ ಹಬ್ಬ ಆಚರಿಸಬೇಕು. ಗೊಂಬೆ ಪ್ರದರ್ಶಿಸುವ ಸಂಪ್ರದಾಯ ನನ್ನ ಅಜ್ಜ-ಅಜ್ಜಿಯಿಂದ ಕಲಿತುಕೊಂಡಿದ್ದೇನೆ. ನನ್ನ ತಾಯಿ ನಾಗರತ್ನರವರ ಮಾರ್ಗದರ್ಶನದಲ್ಲಿ ಮುಂದುವರೆಸಿಕೊಂಡು ಹೋಗುವ ಮೂಲಕ ವಿಶಿಷ್ಟತೆ ಕಾಯ್ದುಕೊಂಡು ಬರಲಾಗುತ್ತಿದೆ. ಈ ಬಾರಿ ಚಂದ್ರಯಾನ-೩ ಅನಾವರಣಗೊಳಿಸಲಾಗಿತ್ತು. ಗೊಂಬೆ ಪ್ರದರ್ಶನ ವೀಕ್ಷಿಸಿದ ಎಲ್ಲರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.  
                                                                                                    - ಉಮೇಶ್, ಭದ್ರಾವತಿ
----------------------------------------------------------------------------------------------------------------------------



ಹಿರಿಯ ಪತ್ರಕರ್ತ ನಿಟ್ಟೂರು ಶ್ರೀರಾಮ್ ನಿಧನ

ನಿಟ್ಟೂರು ಶ್ರೀರಾಮ್      
    ಭದ್ರಾವತಿ: ನಗರದ ಲೋಯರ್ ಹುತ್ತಾ ನಿವಾಸಿ, ಹಿರಿಯ ಪತ್ರಕರ್ತ, ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಿವೃತ್ತ ಉದ್ಯೋಗಿ ನಿಟ್ಟೂರು ಶ್ರೀರಾಮ್ (೭೯) ಮಂಗಳವಾರ ಸಂಜೆ ನಿಧನರಾದರು.
  ಪತ್ನಿ ಮನೋನ್ಮಣಿ ಶ್ರೀರಾಮ್, ಇಬ್ಬರು ಸೋದರರು ಇದ್ದಾರೆ. ಕಳೆದ ಕೆಲವು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮೃತರು ೫ ದಶಕಗಳ ಕಾಲ ಪ್ರಜಾವಾಣಿ ಮತ್ತು ಡೆಕ್ಕನ್ ಹೆರಾಲ್ಡ್ ಪತ್ರಿಕೆ ಏಜೆಂಟರಾಗಿ, ಹಲವಾರು ಪತ್ರಿಕೆಗಳ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು. ಬುಧವಾರ ಬೆಳಗ್ಗೆ ಅಪ್ಪರ್ ಹುತ್ತಾ ಹಿಂದೂ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.
    ಸಂತಾಪ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎನ್ ಶ್ರೀಹರ್ಷ, ಮಾಜಿ ಅಧ್ಯಕ್ಷ ಎನ್.ಬಾಬು, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಕಣ್ಣಪ್ಪ, ಬಸವರಾಜ್, ಕೂಡ್ಲಿಗೆರೆ ಮಂಜುನಾಥ್, ಅನಂತಕುಮಾರ್, ಶಿವಶಂಕರ್, ಗಣೇಶ್‌ರಾವ್ ಸಿಂದ್ಯಾ, ಟಿ.ಎಸ್ ಆನಂದ್‌ಕುಮಾರ್, ಸುಭಾಷ್‌ರಾವ್ ಸಿಂದ್ಯಾ, ಸುಧೀಂದ್ರ, ಶಂಕರ್, ಸುದರ್ಶನ್, ಶೈಲೇಶ್ ಕೋಠಿ, ಸಯೀದ್ ಖಾನ್, ಕಿರಣ್, ಮಹಾಲಿಂಗಪ್ಪ ಸೇರಿದಂತೆ ಸಂತಾಪ ಸೂಚಿಸಿದರು.