Wednesday, December 6, 2023

ವಿಐಎಸ್‌ಎಲ್ ಉಳಿಸಿಕೊಳ್ಳಲು ಕುಮಾರಸ್ವಾಮಿ ಭೇಟಿ ಮಾಡಿದ ಕಾರ್ಮಿಕ ನಿಯೋಗ

ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆ
       ಭದ್ರಾವತಿ: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಯವರನ್ನು ಕಾರ್ಮಿಕ ನಿಯೋಗ ಬುಧವಾರ ಭೇಟಿ ಮಾಡಿ ಕಾರ್ಖಾನೆ ಉಳಿಸಿಕೊಡುವಂತೆ ಮನವಿ ಮಾಡಿದೆ.
    ಕಳೆದ ಸುಮಾರು ೧೧ ತಿಂಗಳಿನಿಂದ ನಿರಂತರವಾಗಿ ಹೋರಾಟ ನಡೆಸುತ್ತಿರುವ ಗುತ್ತಿಗೆ ಕಾರ್ಮಿಕರು, ಕಾಯಂ ಹಾಗು ನಿವೃತ್ತ ಕಾರ್ಮಿಕರ ಸಹಕಾರದೊಂದಿಗೆ ಯುವ ಮುಖಂಡ ಎಂ.ಎ ಅಜಿತ್ ನೇತೃತ್ವದಲ್ಲಿ ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಕಾರ್ಖಾನೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಳಿ ತುರ್ತಾಗಿ ಚರ್ಚಿಸಬೇಕೆಂದು ಮನವಿ ಮಾಡಿದ್ದಾರೆ.  
    ಕುಮಾರಸ್ವಾಮಿಯವರು ಪ್ರತಿಕ್ರಿಯಿಸಿ ಈ ತಿಂಗಳ ಅಂತ್ಯದೊಳಗೆ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಲು ತೆರಳುತ್ತಿದ್ದೇನೆ. ಈ ಸಂದರ್ಭದಲ್ಲಿ ಕಾರ್ಖಾನೆಗೆ ಅವಶ್ಯವಿರುವ ಬಂಡವಾಳ ತೊಡಗಿಸುವಂತೆ ಮನವಿ ಮಾಡಲಾಗುವುದು. ಒಟ್ಟಾರೆ ಕಾರ್ಖಾನೆ ಉಳಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದ್ದಾರೆಂದು ಗುತ್ತಿಗೆ ಕಾರ್ಮಿಕರ ಸಂಘದ ಪ್ರಮುಖರಾದ ರಾಕೇಶ್ ತಿಳಿಸಿದ್ದಾರೆ.
    ಪ್ರಮುಖರಾದ ಮಧುಕುಮಾರ್, ರಮೇಶ್ ಹಾಗೂ ಗುತ್ತಿಗೆ ಕಾರ್ಮಿಕ ಸಂಘದ ಪದಾಧಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಅಂಬೇಡ್ಕರ್ ಅಕ್ಷರ, ಅರಿವು, ಆಚಾರಗಳ ಪರಿಶುದ್ಧತೆಯ ಪ್ರೇರಕ : ಸಾಹಿತಿ ಡಾ.ಅರ್ಜುನ ಗೋಳಸಂಗಿ

ಕುವೆಂಪು ವಿಶ್ವ ವಿದ್ಯಾಲಯದ ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದಿಂದ ಬುಧವಾರ ಬಸವ ಸಭಾಭವನದಲ್ಲಿ ಅಂಬೇಡ್ಕರ್ ೬೭ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಏರ್ಪಡಿಸಲಾಗಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ  ಕುಲಪತಿ ಪ್ರೊ.ಎಸ್. ವೆಂಕಟೇಶ್ ಉದ್ಘಾಟಿಸಿದರು.
    ಭದ್ರಾವತಿ: ದಾರಿ ತಪ್ಪಿರುವವರಿಗೆ ಹಾಗು ದಾರಿ ತಪ್ಪಿಸುತ್ತಿರುವವರಿಗೆ ಅಂಬೇಡ್ಕರ್ ವಿಚಾರಗಳು ಸರಿಯಾದ ಮಾರ್ಗದರ್ಶನ ನೀಡುತ್ತವೆ. ಅಕ್ಷರ, ಅರಿವು, ಆಚಾರಗಳನ್ನು ಪರಿಶುದ್ಧತೆಯಿಂದ ಸಂಪಾದಿಸಿಕೊಳ್ಳಲು ಪ್ರೇರಕರಾದವರು ಅಂಬೇಡ್ಕರ್. ಇಡೀ ಜಗತ್ತೇ ಅಚ್ಚರಿ ಪಡುವಂತಹ ಬೌದ್ಧಿಕ ಶಕ್ತಿಯನ್ನು ಅಂಬೇಡ್ಕರ್ ಅವರು ಸಂಪಾದಿಸಿದ್ದರು ಎಂದು ಸಾಹಿತಿ ಡಾ.ಅರ್ಜುನ ಗೋಳಸಂಗಿ ಹೇಳಿದರು.
    ಕುವೆಂಪು ವಿಶ್ವ ವಿದ್ಯಾಲಯದ ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದಿಂದ ಬುಧವಾರ ಬಸವ ಸಭಾಭವನದಲ್ಲಿ ಅಂಬೇಡ್ಕರ್ ೬೭ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಏರ್ಪಡಿಸಲಾಗಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ವ್ಯಕ್ತಿತ್ವ ಕುರಿತು ಮಾತನಾಡಿದರು.
    ಸಾವಿರಾರು ಸಂಕಟಗಳು ಬಂದರೂ ಸಹ ಸಹನೆ ಮೀರದೆ, ಸಾಧನೆಯ ಹಾದಿಯಲ್ಲಿ ಸಾಗಿದರು. ಅವರು ಭಾರತೀಯ ಸಾಮಾಜಿಕ ಅಸಮಾನತೆಯ ನಡುವೆಯೂ ಬೆಳೆದ ರೀತಿ ವಿಸ್ಮಯ. ಭಾರತೀಯ ಸಾಮಾಜಿಕ ವ್ಯವಸ್ಥೆಯ ನಾಡಿಮಿಡಿತವನ್ನು ಅರಿತು, ಮಾನವೀಯತೆಯ ಔಷಧಿಯನ್ನು ನೀಡಿದ ಸಾಮಾಜಿಕ ವೈದ್ಯರಿವರು. ಅಂಬೇಡ್ಕರ್ ಅವರದು ಛಲದ ವ್ಯಕ್ತಿತ್ವ ಎಂದರು.
    ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಕುಲಪತಿ ಪ್ರೊ.ಎಸ್.ವೆಂಕಟೇಶ್ ಮಾತನಾಡಿ, ಅಂಬೇಡ್ಕರ್ ಅವರ ಜೀವನ ಚರಿತ್ರೆ ಎಂದರೆ ವಿರೂಪಗೊಂಡಿರುವ ಭಾರತೀಯ ಸಾಮಾಜಿಕ ಸ್ವರೂಪವನ್ನು ಸುರೂಪಗೊಳಿಸುವ ಪ್ರಯತ್ನದ ಚರಿತ್ರೆ. ಅದು ಅನನ್ಯವಾದುದು,  ಸಂಶೋಧಕರು, ಸಂಸ್ಕೃತಿ ಚಿಂತಕರು, ಸಮಸಮಾಜದ ಕನಸುಗಾರರು ಆದ ಅಂಬೇಡ್ಕರರ ದೃಷ್ಟಿ ಧೋರಣೆಗಳನ್ನು ಸಮಗ್ರವಾಗಿ ಅಭ್ಯಸಿಸಿದಾಗ ಅವರ ವಿದ್ವತ್, ಬರವಣಿಗೆಯ ಶಕ್ತಿ, ಚಿಂತನೆಗಳ ಒಳನೋಟಗಳು ಅಚ್ಚರಿಗೊಳಿಸುತ್ತವೆ ಎಂದರು.
    ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಲೆಕ್ಕಪರಿಶೋಧನಾ ಇಲಾಖೆಯ ಜಂಟಿನಿರ್ದೇಶಕ ಕೆ.ಎಚ್ ಓಂಕಾರಪ್ಪ ಮಾತನಾಡಿ, ಅಂಬೇಡ್ಕರ್ ಅವರ ಜೀವನ ಮತ್ತು ಸಾಧನೆಗಳನ್ನು ಅರಿಯುವುದೆಂದರೆ ಮಾನವೀಯತೆಯನ್ನು ಅರಿತಂತೆ. ಅಂಬೇಡ್ಕರ್ ಅವರ ಜೀವನವೆಂದರೆ ಮನುಷ್ಯರಲ್ಲಿ ಪ್ರೀತಿ, ಕರುಣೆ, ಸಮಾನತೆ, ಸಂಬಂಧ ಸೌಜನ್ಯ, ಸತ್ ಚಿಂತನೆ, ಸತ್ ನುಡಿ, ಸತ್ ನಡೆಗಳನ್ನು ಬಿತ್ತಿ ಬೆಳೆಯುವಂಥದ್ದಾಗಿದೆ ಎಂದರು.
    ಅಧ್ಯಕ್ಷತೆ ವಹಿಸಿ ಮಾತನಾಡಿದ ಪರೀಕ್ಷಾಂಗ ಕುಲಸಚಿವ ಡಾ. ಎಸ್.ಎಂ ಗೋಪಿನಾಥ್, ನನ್ನ ಮಕ್ಕಳ ಶಾಲಾ ದಾಖಲೆಯಲ್ಲಿ ಜಾತಿಯ ಹೆಸರನ್ನೇ ಸೇರಿಸಿಲ್ಲ. ಅಂಬೇಡ್ಕರ್ ಅವರ ಆಶಯದಂತೆ ಜಾತ್ಯಾತೀತವಾಗಿ ಬಾಳಬೇಕು. ಮನುಕುಲದ ಉದ್ದಾರಕ್ಕೆ ನಮ್ಮದೇ ಆದ ಅನನ್ಯ ಸೇವೆಯನ್ನು ಮಾಡಬೇಕು. ಅಂಬೇಡ್ಕರ್ ಅವರದು ಆದರ್ಶ ಮತ್ತು ಅನುಪಮವಾದ ವ್ಯಕ್ತಿತ್ವವೆಂದರು.
    ಹಣಕಾಸು ಅಧಿಕಾರಿ ಜಿ. ಬಂಗಾರಪ್ಪ, ಕಲಾ ನಿಕಾಯದ ಡೀನರ್ ಪ್ರೊ. ಗುರುಲಿಂಗಯ್ಯ, ಡಾ. ಶಿವಾನಂದ ಕೆಳಗಿನಮನಿ, ಡಾ. ಅರ್ತೋಬನಾಯಕ, ಡಾ.ವಾಲ್ಮೀಕಿ, ಡಾ. ಚಂದ್ರಶೇಖರ್, ಪ್ರೊ. ನಾರಾಯಣ, ವಲಯ ಅರಣ್ಯಾಧಿಕಾರಿ ಆರ್.ಟಿ ಮಂಜುನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಡಾ. ಪುರುಷೋತ್ತಮ ಎಸ್.ವಿ ಪ್ರಾರ್ಥಿಸಿ, ಡಾ.ನವೀನಮಂಡಗದ್ದೆ ನಿರೂಪಿಸಿದರು. ಡಾ.ಬಿ.ಆರ್ ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ನೆಲ್ಲಿಕಟ್ಟೆ ಎಸ್.ಸಿದ್ದೇಶ್ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿ, ಡಾ.ರವಿನಾಯ್ಕ ವಂದಿಸಿದರು.

ಛಲವಾದಿಗಳ ಸಮಾಜದಿಂದ ಪರಿನಿರ್ವಾಣ ದಿನ ಆಚರಣೆ

ಭದ್ರಾವತಿ ನ್ಯೂಟೌನ್ ಜಯಶ್ರೀ ವೃತ್ತದ ಸಮೀಪದಲ್ಲಿರುವ ತಾಲೂಕು ಛಲವಾದಿಗಳ(ಪರಿಶಿಷ್ಟ ಜಾತಿ) ಸಮಾಜದ ವತಿಯಿಂದ ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಪರಿನಿರ್ವಾಣ ದಿನ ಆಚರಿಸಲಾಯಿತು. 
    ಭದ್ರಾವತಿ : ನಗರದ ನ್ಯೂಟೌನ್ ಜಯಶ್ರೀ ವೃತ್ತದ ಸಮೀಪದಲ್ಲಿರುವ ತಾಲೂಕು ಛಲವಾದಿಗಳ(ಪರಿಶಿಷ್ಟ ಜಾತಿ) ಸಮಾಜದ ವತಿಯಿಂದ ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಪರಿನಿರ್ವಾಣ ದಿನ ಆಚರಿಸಲಾಯಿತು.
    ಸಮಾಜದ ಅಧ್ಯಕ್ಷ ಚನ್ನಪ್ಪ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರ ಬದುಕು, ಸಾಧನೆ ಹಾಗು ಕೊಡುಗೆಗಳನ್ನು ಸ್ಮರಿಸಲಾಯಿತು.
    ಸಮಾಜದ ಪ್ರಮುಖರಾದ ಗೌರವಾಧ್ಯಕ್ಷ ಎಸ್.ಎಸ್ ಭೈರಪ್ಪ, ಪ್ರಧಾನ ಕಾರ್ಯದರ್ಶಿ ಎಚ್.ಎಂ ಮಹಾದೇವಯ್ಯ, ಮಾಜಿ ಅಧ್ಯಕ್ಷ ಬದರಿನಾರಾಯಣ, ಸಂಸ್ಥಾಪಕ ಡಿ. ನರಸಿಂಹಮೂರ್ತಿ, ಹುಚ್ಚಯ್ಯ, ಯು. ಮಹಾದೇವಪ್ಪ, ಎ. ತಿಪ್ಪೇಸ್ವಾಮಿ, ಮಾಯಮ್ಮ, ಕಮಲಕುಮಾರಿ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

Tuesday, December 5, 2023

ಎಚ್‌ವಿಐ ವೈರಸ್ ಕರ್ನಾಟಕ ೯ನೇ ಸ್ಥಾನ : ಡಾ. ವೀಣಾ ಭಟ್ ವಿಷಾದ

ಭದ್ರಾವತಿ ನ್ಯೂಟೌನ್ ಸೇಂಟ್ ಚಾರ್ಲ್ಸ್ ಕರುಣಾ ಸೇವಾ ಕೇಂದ್ರದಲ್ಲಿ ಏಡ್ಸ್ ದಿನಾಚರಣೆ ಪ್ರಯುಕ್ತ ಮಾಹಿತಿ ಕಾರ್ಯಗಾರ ಹಮ್ಮಿಕೊಳ್ಳಲಾಗಿತ್ತು.
    ಭದ್ರಾವತಿ :  ಎಚ್‌ಐವಿ ವೈರಸ್ ದೇಶದಲ್ಲಿ ಕರ್ನಾಟಕ ೯ನೇ ಸ್ಥಾನದಲ್ಲಿದ್ದು, ಇದು ವಿಷಾದನೀಯ ಸಂಗತಿಯಾಗಿದೆ ಎಂದು ನಗರದ ತರೀಕೆರೆ ರಸ್ತೆಯ ನಯನ ಆಸ್ಪತ್ರೆ ಸ್ತ್ರೀ ರೋಗ ಹಾಗು ಪ್ರಸೂತಿ ತಜ್ಞೆ ಡಾ. ವೀಣಾ ಭಟ್ ಹೇಳಿದರು.  
    ಅವರು ನ್ಯೂಟೌನ್ ಸೇಂಟ್ ಚಾರ್ಲ್ಸ್ ಕರುಣಾ ಸೇವಾ ಕೇಂದ್ರದಲ್ಲಿ ಏಡ್ಸ್ ದಿನಾಚರಣೆ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಮಾಹಿತಿ ಕಾರ್ಯಗಾರದಲ್ಲಿ ಪಾಲ್ಗೊಂಡು ಮಾತನಾಡಿದರು.
    ಎಚ್‌ಐವಿ ವೈರಸ್ ೪ ವಿಧದಲ್ಲಿ ನಮ್ಮ ಶರೀರ ಪ್ರವೇಶಿಸುತ್ತದೆ. ಸೋಂಕಿತ ವ್ಯಕ್ತಿಯೊಂದಿಗೆ ಅಸುರಕ್ಷಿತ ಲೈಂಗಿಕ ಸಂಭೋಗ, ಸೋಂಕಿತ ಸಿರಿಂಜ್ ಮತ್ತು ಸೂಜಿಗಳನ್ನು ಹಂಚಿಕೊಳ್ಳುವುದು, ಕಲುಷಿತ ರಕ್ತ ಮತ್ತು ರಕ್ತದ ಉತ್ಪನ್ನಗಳೊಂದಿಗೆ ವರ್ಗಾವಣೆ ಹಾಗು ಗರ್ಭಾವಸ್ಥೆಯಲ್ಲಿ ಸೋಂಕಿತ ತಾಯಿಯ ಮೂಲಕ ವೈರಸ್ ಶರೀರ ಪ್ರವೇಶಿಸುತ್ತದೆ ಎಂದರು.
    ತಾಯಿಯಿಂದ ಮಗುವಿಗೆ ಹೆಚ್ಚಾಗಿ ಶೇ.೩೦ರಷ್ಟು ಸೋಂಕು ಹರಡುವ ಸಾಧ್ಯತೆ ಇದ್ದು, ಈ ಹಿನ್ನಲೆಯಲ್ಲಿ ಮುಂಜಾಗ್ರತೆ ವಹಿಸುವುದರಿಂದ ಸೋಂಕು ಹರಡದಂತೆ ತಡೆಗಟ್ಟಬಹುದು. ಹೆಚ್‌ಐವಿ ಪೀಡಿತರಿಗೆ ಮತ್ತು ಮಕ್ಕಳಿಗೆ ಅನೇಕ ಉಚಿತ ಯೋಜನೆಗಳು ಜಾರಿಯಲ್ಲಿವೆ. ಇವುಗಳ ಸದುಪಯೋಗ ಪಡೆದುಕೊಳ್ಳಬೇಕೆಂದರು.
    ವಿಶ್ವ ಆರೋಗ್ಯ ಸಂಸ್ಥೆ ಮುಂಬರುವ ೫ ರಿಂದ ೬ ವರ್ಷಗಳಲ್ಲಿ ಎಚ್‌ಐವಿ ಪಿಡುಗನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಧ್ಯೇಯ ಹೊಂದಿದೆ. ಇದರ ನಿಟ್ಟಿನಲ್ಲಿ ಹೆಣ್ಣು ಮಕ್ಕಳು ಹಾಗೂ ಸಮುದಾಯಗಳು ಜಾಗೃತಿ ವಹಿಸಲು ಕರೆ ನೀಡಿದರು.
    ಕರುಣಾ ಸೇವಾ ಕೇಂದ್ರ ನಿರ್ದೇಶಕಿ ಸಿಸ್ಟರ್ ಹೆಲನ್ ಮೋರಸ್, ಸಿಸ್ಟರ್ ಪ್ರಭ, ಒಕ್ಕೂಟದ ಸದಸ್ಯರು, ಕಾರ್ಯಕರ್ತೆಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವಿಐಎಸ್‌ಎಲ್ ಕಾರ್ಖಾನೆ ನಿವೃತ್ತ ಉದ್ಯೋಗಿ ರೇವಣ್ಣರಿಗೆ ಗೌರವ ಡಾಕ್ಟರೇಟ್

ಉದ್ಯಮಿ, ಸಮಾಜ ಸೇವಕ ರೇವಣ್ಣ ಅವರಿಗೆ ಏಷ್ಯಾ ಇಂಟರ್‌ನ್ಯಾಷನಲ್ ಕಲ್ಟರ್ ಯೂನಿವರ್ಸಿಟಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.
ಭದ್ರಾವತಿ: ಉದ್ಯಮಿ, ಸಮಾಜ ಸೇವಕ ರೇವಣ್ಣ ಅವರಿಗೆ ಏಷ್ಯಾ ಇಂಟರ್‌ನ್ಯಾಷನಲ್ ಕಲ್ಟರ್ ಯೂನಿವರ್ಸಿಟಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.
ತಮಿಳುನಾಡು ಹೊಸೂರು ಕ್ಲಾರೆಸ್ಟ ಹೋಟೆಲ್‌ನಲ್ಲಿ ನಡೆದ ಪದವಿ ವಿತರಣಾ ಸಮಾರಂಭದಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿದೆ. ವಿಜಯನ್ ಆಕಾಡೆಮಿ ಸಂಸ್ಥಾಪಕ ಮತ್ತು ಮುಖ್ಯ ತರಬೇತಿದಾರ ಮಾಸ್ಟರ್ ವಿ. ಬಾಬು ವಿಜಯನ್, ಐಎನ್‌ಟಿಯುಸಿ ತಮಿಳುನಾಡು ಕಾರ್ಯಾಧ್ಯಕ್ಷ ಮಾಜಿ ಶಾಸಕ ಡಾ. ಕೆ.ಎ ಮನೋಕರಣ್, ಆಂಧ್ರ ಪ್ರದೇಶದ ನಿವೃತ್ತ ಸಹಾಯಕ ನ್ಯಾಯಾಧೀಶ ಡಾ. ಜೆ. ಹರಿದಾಸ್, ಚಿಕ್ಕಮ್ಯಾಗೆರಿ ಪುಣ್ಯಕ್ಷೇತ್ರ ಇಟಗಿ ಭೂ ಕೈಲಾಸ ಮೇಲುಗದ್ದಿಗೆ ಹಿರೇಮಠ ಸಂಸ್ಥಾನದ ಶ್ರೀ ಗುರುಶಾಂತವೀರ ಶಿವಾಚಾರ್ಯ ಸ್ವಾಮೀಜಿ, ಡಾ. ಎಂ. ರಾಜಗೋಪಾಲನ್, ಟಿ. ತ್ಯಾಗರಾಜು, ಮಂಜುಳ, ಶ್ರೀ ಬಸವ ಯೋಗಿ ಗುರೂಜಿ ಮತ್ತು ಡಾ. ರವಿಚಂದ್ರನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
ರೇವಣ್ಣ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಿವೃತ್ತ ನೌಕರರಾಗಿದ್ದು, ಅಲ್ಲದೆ ಹಿರಿಯ ವಾಲಿಬಾಲ್ ಕೀಡಾಪಟು. ಈ ಹಿಂದೆ ಕಾರ್ಮಿಕ ಸಂಘದಲ್ಲಿ ಖಜಾಂಚಿಯಾಗಿ ಸೇವೆ ಸಲ್ಲಿಸಿದ್ದರು. ಇವರು ನಿವೃತ್ತಿ ಹೊಂದಿದ ನಂತರ ಬೆಂಗಳೂರಿನಲ್ಲಿ ನೆಲೆಸಿದ್ದು, ವಿದೇಶದಲ್ಲಿ ನೆಲೆಸಿರುವ ಇವರ ಪುತ್ರರಾದ ಆರ್. ವಿನೋದ್‌ಕುಮಾರ್ ಜಯಕೀರ್ತಿ ಮತ್ತು ವಿನಯ್‌ಕುಮಾರ್ ಜಯಕೀರ್ತಿಯವರು ಆರಂಭಿಸಿರುವ ಸಾಫ್ಟ್‌ವೇರ್ ಕಂಪನಿಯ ಬೆಂಗಳೂರು ಶಾಖೆಯ ನಿರ್ದೇಶಕರಾಗಿದ್ದಾರೆ. ಕಂಪನಿ ವ್ಯವಹಾರದ ಜೊತೆಗೆ ಜಯಕೀರ್ತಿ ಚಾರಿಟಬಲ್ ಟ್ರಸ್ಟ್ ಮೂಲಕ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಇವರ ಸೇವೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿದೆ. 
  ಇವರು ಕೆ.ಆರ್ ಪೇಟೆ ತಾಲೂಕಿನ ಬೂಕನಕೆರೆ ಹೋಬಳಿಯ ಹಾಲೇಗೌಡರ ಸುಪುತ್ರ ರಾಗಿದ್ದಾರೆ. ಇವರನ್ನು ವಿಐಎಸ್‌ಎಲ್ ಕಾರ್ಖಾನೆ ನಿವೃತ್ತ, ಕಾಯಂ ಹಾಗು ಗುತ್ತಿಗೆ ಕಾರ್ಮಿಕರು ಹಾಗು ವಿವಿಧ ಸಂಘ-ಸಂಸ್ಥೆಗಳು, ಗಣ್ಯರು ಅಭಿನಂದಿಸಿದ್ದಾರೆ. 

Monday, December 4, 2023

ಮೋದಿ ಪ್ರಧಾನಿ ಆದ ನಂತರ ಭಾರತದ ಸಂಸ್ಕೃತಿ ಇಡೀ ವಿಶ್ವಕ್ಕೆ ಪರಿಚಯ : ಕೆ.ಎಸ್ ಈಶ್ವರಪ್ಪ

ದೇವಾಲಯ ಸಂವರ್ಧನಾ ಸಮಿತಿ-ಕರ್ನಾಟಕ ಹಾಗು ಬೆಂಗಳೂರಿನ ಸುಧರ್ಮ ಜಾಗೃತಿ ಟ್ರಸ್ಟ್ ವತಿಯಿಂದ ಭದ್ರಾವತಿ ಗೊಂದಿ ಗ್ರಾಮದ ಶ್ರೀ ಪಾಂಡುರಂಗ ಸಾಧಕಾಶ್ರಮದಲ್ಲಿ ಆಯೋಜಿಸಲಾಗಿದ್ದ ೧೬ ದಿನಗಳ ಧಾರ್ಮಿಕ ಶಿಬಿರದ ಸಮಾರೋಪ ಸಮಾರಂಭ ಮತ್ತು ದೀಕ್ಷಾಂತ ಕಾರ್ಯಕ್ರಮ ಸೋಮವಾರ ನಡೆಯಿತು.  ಚಿತ್ರದುರ್ಗ ಶ್ರೀ ಮಾದರ ಚೆನ್ನಯ್ಯ ಗುರುಪೀಠದ ಶ್ರೀ ಮಾದಾರ ಚೆನ್ನಯ್ಯ ಸ್ವಾಮೀಜಿ, ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ಸೇರಿದಂತೆ ಇನ್ನಿತರರು ಉಪಸ್ಥಿರಿದ್ದರು.
    ಭದ್ರಾವತಿ: ಮೋದಿಯವರು ಪ್ರಧಾನಿ ಆದ ನಂತರ ಭಾರತದ ಸಂಸ್ಕೃತಿ ಇಡೀ ವಿಶ್ವಕ್ಕೆ ಪರಿಚಯವಾಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ಹೇಳಿದರು.
    ದೇವಾಲಯ ಸಂವರ್ಧನಾ ಸಮಿತಿ-ಕರ್ನಾಟಕ ಹಾಗು ಬೆಂಗಳೂರಿನ ಸುಧರ್ಮ ಜಾಗೃತಿ ಟ್ರಸ್ಟ್ ವತಿಯಿಂದ ಗೊಂದಿ ಗ್ರಾಮದ ಶ್ರೀ ಪಾಂಡುರಂಗ ಸಾಧಕಾಶ್ರಮದಲ್ಲಿ ಆಯೋಜಿಸಲಾಗಿದ್ದ ೧೬ ದಿನಗಳ ಧಾರ್ಮಿಕ ಶಿಬಿರದ ಸಮಾರೋಪ ಸಮಾರಂಭ ಮತ್ತು ದೀಕ್ಷಾಂತ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.
    ಹೊರದೇಶಿಗರು ಶ್ರೀಮಂತರಾಗಿದ್ದರೂ ಶಿವರಾತ್ರಿಯಂದು ಭಾರತಕ್ಕೆ ಆಗಮಿಸಿ ನಮ್ಮ ಸಂಸ್ಕೃತಿ, ಆಚರಣೆಗಳನ್ನು ಅನುಸರಿಸುತ್ತಾರೆ. ಇದು ನಮ್ಮ ಸಂಸ್ಕೃತಿಗೆ ಇರುವ ಹಿರಿಮೆ. ಮಹಿಳೆಯರು ಮಕ್ಕಳನ್ನು ದೇವಾಲಯಗಳಿಗೆ ಕರೆತರುವ ಮೂಲಕ ಯುವಜನತೆಯಲ್ಲಿಯೂ ಧಾರ್ಮಿಕ ಭಾವನೆಗಳನ್ನು ಬೆಳೆಸಬೆಕು. ಮಕ್ಕಳಲ್ಲಿ ಧಾರ್ಮಿಕ ಭಾವನೆ ಬೆಳೆದಷ್ಟು ಮಕ್ಕಳು ಸಂಸ್ಕಾರವಂತರಾಗಲು ಸಾಧ್ಯ. ದೇಶಭಕ್ತಿ ಬೆಳೆಸುವಲ್ಲಿಯೂ ದೇವಾಲಯಗಳ ಪಾತ್ರ ಬಹಳಷ್ಟಿದೆ. ರಾಜ್ಯದ ೨.೫ ಲಕ್ಷ ಅರ್ಚಕರಲ್ಲಿ ಕೆಲವರು ಪಾಂಡಿತ್ಯಗಳಿಸಿದ್ದು, ಉಳಿದವರು ಸಹ ತರಬೇತಿ ಪಡೆಯುವುದು ಮುಖ್ಯ ಎಂದರು.
    ಚಿತ್ರದುರ್ಗ ಶ್ರೀ ಮಾದರ ಚೆನ್ನಯ್ಯ ಗುರುಪೀಠದ ಶ್ರೀ ಮಾದಾರ ಚೆನ್ನಯ್ಯ ಸ್ವಾಮೀಜಿ ದಿವ್ಯ ಸಾನ್ನಿಧ್ಯವಹಿಸಿ ಮಾತನಾಡಿ, ಬಸವಣ್ಣನವರು ದೇವರು ಮತ್ತು ದೇವಾಲಯಗಳನ್ನು ವಿರೋಧಿಸುತ್ತಿದ್ದರು ಎಂಬ ಕೆಲವರ ಹೇಳಿಕೆ ತಪ್ಪುಕಲ್ಪನೆ. ಬಸವಣ್ಣ ವಿರೋಧಿಸಿದ್ದು ಅರ್ಚಕರ ಕೆಲವು ತಪ್ಪುಗಳನ್ನು ಹೊರತು, ದೇವರು ಮತ್ತು ದೇವಾಲಯಗಳನ್ನಲ್ಲ ಎಂದರು.
    ಸಂಸ್ಕಾರವಂತರನ್ನು ಗೌರವಿಸುವ ದೇಶ ಭಾರತ. ಪಶುಪಕ್ಷಿಗಳು ಪ್ರತಿದಿನ ತಮ್ಮ ಕಾರ್ಯಗಳನ್ನು ನಿಗದಿತ ಸಮಯಕ್ಕೆ ಮಾಡುವ ಮೂಲಕ ಸಂಸ್ಕಾರ ಹೊಂದಿವೆ. ಆದ್ದರಿಂದ ಮನುಷ್ಯರಾದ ನಾವುಗಳು ಜೀವನದಲ್ಲಿ ಸಂಸ್ಕಾರ, ಶಿಸ್ತು, ಧಾರ್ಮಿಕತೆಯನ್ನು ಅಳವಡಿಸಿಕೊಂಡು ಉನ್ನತ ರೀತಿ ಬದುಕಬೇಕೆಂದು ಕರೆ ನೀಡಿದರು.
    ಭಾರತದಲ್ಲಿ ಮತಾಂತರಕ್ಕೆ ಜಾತಿ ತಾರತಮ್ಯವೇ ಕಾರಣ. ಅರ್ಚಕರು ಪ್ರಯತ್ನಸಿದರೆ ಮತಾಂತರ ತಡೆಯಬಹುದು. ಮತಾಂತರ ತಡೆಯುವಲ್ಲಿ ಅರ್ಚಕರ ಪಾತ್ರ ಬಹುಮುಖ್ಯವಾಗಿದೆ. ಕೆಲವು ಜನರಲ್ಲಿ ಶಿಸ್ತು ಕಲಿಸಬೇಕು, ಜಾತಿ ಹೆಸರಿನಲ್ಲಿ ದೂರವಿರಿಸಬಾರದು. ಇಂತಹ ಘಟನೆಗಳಿಂದಲೇ ಮತಾಂತರಗಳು ನಡೆಯುವುದು ಎಂದರು.
    ವೇದಿಕೆಯಲ್ಲಿ ಪಾಂಡುರಂಗ ಸಾಧಾಕಾಶ್ರಮದ ಮುಕ್ತಾನಂದ ಮಾಯಿ (ಮಾತಾಜಿ), ಶಿರಾಳಕೊಪ್ಪದ ಬಾಲಚಂದ್ರ ಶಾಸ್ತ್ರಿಗಳು, ಶಿಬಿರದ ಪ್ರಮುಖ್ ಜಯರಾಮ್ ಗೊಂದಿ, ದೇವಾಲಯ ಸಂವರ್ಧನಾ ಸಮಿತಿಯ ರಾಜ್ಯ ಸಂಯೋಜಕ್ ಮನೋಹರ ಮಠದ್ ಮತ್ತಿತರರಿದ್ದರು. ತರಬೇತಿ ಪಡೆದ ಅರ್ಚಕರಿಗೆ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು.

ವಾಹನ ಸವಾರರಿಗೆ ಪೂರ್ಣ ಪ್ರಮಾಣದ ಗುಣಮಟ್ಟದ ಹೆಲ್ಮೆಟ್ ಧರಿಸಲು ಜಾಗೃತಿ

ಉಪವಿಭಾಗದ ಪೊಲೀಸರೊಂದಿಗೆ ಜಿಲ್ಲಾ ರಕ್ಷಣಾಧಿಕಾರಿ ಭಾಗಿ

ಜಿಲ್ಲಾ ರಕ್ಷಣಾಧಿಕಾರಿ ಸೇರಿದಂತೆ ಭದ್ರಾವತಿ ನಗರದ ಉಪವಿಭಾಗದ ಪೊಲೀಸರು ಸೋಮವಾರ ವಾಹನ ಸವಾರರಿಗೆ ಪೂರ್ಣ ಪ್ರಮಾಣದ ಐಎಸ್‌ಐ ಪ್ರಮಾಣೀಕೃತ ಗುಣಮಟ್ಟದ ಹೆಲ್ಮೆಟ್ ಧರಿಸುವ ಮೂಲಕ ರಸ್ತೆ ಸಂಚಾರಿ ನಿಯಮಗಳನ್ನು ಪಾಲಿಸುವಂತೆ ಜಾಗೃತಿ ಮೂಡಿಸಿದರು.
    ಭದ್ರಾವತಿ: ಜಿಲ್ಲಾ ರಕ್ಷಣಾಧಿಕಾರಿ ಸೇರಿದಂತೆ ನಗರದ ಉಪವಿಭಾಗದ ಪೊಲೀಸರು ಸೋಮವಾರ ವಾಹನ ಸವಾರರಿಗೆ ಪೂರ್ಣ ಪ್ರಮಾಣದ ಐಎಸ್‌ಐ ಪ್ರಮಾಣೀಕೃತ ಗುಣಮಟ್ಟದ ಹೆಲ್ಮೆಟ್ ಧರಿಸುವ ಮೂಲಕ ರಸ್ತೆ ಸಂಚಾರಿ ನಿಯಮಗಳನ್ನು ಪಾಲಿಸುವಂತೆ ಜಾಗೃತಿ ಮೂಡಿಸಿದರು.
    ನಗರದ ಬಿ.ಎಚ್ ರಸ್ತೆ, ಅಂಬೇಡ್ಕರ್ ವೃತ್ತದಲ್ಲಿ ವಾಹನ ಸವಾರರಿಗೆ ತಿಳುವಳಿಕೆ ನೀಡಿದ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್ ಕುಮಾರ್, ವಾಹನ ಸವಾರರಿಗೆ ಈ ಹಿಂದೆ ಅರ್ಧ ಹೆಲ್ಮೆಟ್ ಧರಿಸದಂತೆ ಸೂಚನೆ ನೀಡಿದ್ದರೂ ಸಹ ಬಳಸುತ್ತಿರುವುದು ಸರಿಯಲ್ಲ. ನಿಯಮ ಪಾಲನೆ ಪ್ರತಿಯೊಬ್ಬರ ಜವಾಬ್ದಾರಿ ಎಂದರು.
    ಹೆಲ್ಮೆಟ್ ವಿಚಾರ ಕಾನೂನು ಕ್ರಮ ಮಾತ್ರವಲ್ಲ. ವಾಹನ ಸವಾರರ ಜವಾಬ್ದಾರಿ. ದಂಡ ಪಾವತಿಯಿಂದ ಸಮಸ್ಯೆ ಸಂಪೂರ್ಣ ನಿವಾರಣೆ ಅಸಾಧ್ಯ. ಜನರು ಸುರಕ್ಷತೆಯನ್ನು ತಮ್ಮ ಜವಾಬ್ದಾರಿ ಎಂದು ಭಾವಿಸಿದಾಗ ಮಾತ್ರ ಸುರಕ್ಷತೆ ಸಾಧ್ಯ ಎಂದು ಸಲಹೆ ನೀಡಿದರು.
    ಪೊಲೀಸ್ ಉಪಾಧೀಕ್ಷಕ ಕೆ.ಆರ್ ನಾಗರಾಜ್, ನಗರ ಪೊಲೀಸ್ ವೃತ್ತ ನಿರೀಕ್ಷಕ ಶ್ರೀಶೈಲ ಕುಮಾರ್, ವಿವಿಧ ಠಾಣೆಗಳ ಠಾಣಾಧಿಕಾರಿಗಳಾದ  ಶಾಂತಲ, ರಮೇಶ್, ಶರಣಪ್ಪ ಹಂಡ್ರಾಗಲ್, ಸಹಾಯಕ ಠಾಣಾಧಿಕಾರಿ ಎಂ. ರಾಜಪ್ಪ ಸೇರಿದಂತೆ ಹಲವು ಸಿಬ್ಬಂದಿಗಳು ಪಾಲ್ಗೊಂಡಿದ್ದರು.  
    ಇದಕ್ಕೂ ಮೊದಲು ನಗರದ ಪ್ರಮುಖ ವೃತ್ತಗಳಲ್ಲಿ ಕಾರ್ಯಾಚರಣೆ ನಡೆಸಿ ಅರ್ಧ ಹೆಲ್ಮೆಟ್ ಧರಿಸಿರುವ ದ್ವಿಚಕ್ರ ವಾಹನ ಸವಾರರಿಂದ ಹೆಲ್ಮೆಟ್‌ಗಳನ್ನು ವಶಪಡಿಸಿಕೊಳ್ಳಲಾಯಿತು.