Wednesday, January 17, 2024

ಕುಂಚ ಕಲಾವಿದ ಹಫೀಜ್ ಉರ್ ರಹಮಾನ್ ನಿಧನ

 ಭದ್ರಾವತಿ:  ತಾಲೂಕು ಕುಂಚ ಕಲಾವಿದರ ಸಂಘದ ಖಜಾಂಚಿ ಹಫೀಜ್ ಉರ್ ರಹಮಾನ್(51) ಗುರುವಾರ  ಬೆಳಗ್ಗೆ  ನಿಧನ  ಹೊಂದಿದರು.
    ಪತ್ನಿ, ಪುತ್ರಿ ಹಾಗೂ ಇಬ್ಬರು ಪುತ್ರರರು ಇದ್ದರು. ಕಳೆದ ಸುಮಾರು 2 ತಿಂಗಳಿನಿಂದ ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು.  ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ.
       ರಹಮಾನ್ ಅವರು ಜಮಾತೇ ಇಸ್ಲಾಂಮೀ ಹಿಂದ್ ಸಂಘಟನೆ ಸೇರಿದಂತೆ ಹಲವಾರು ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
       ಇವರ ನಿಧನಕ್ಕೆ ವಿವಿಧ ಸಂಘ-ಸಂಸ್ಥೆಗಳು ಸಂತಾಪ ಸೂಚಿಸಿವೆ.


ಜ.೧೯ರಂದು ಕ.ದ.ಸಂ.ಸ ಸುವರ್ಣ ಮಹೋತ್ಸವಕ್ಕೆ ಚಾಲನೆ : ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮಗಳು

ಪತ್ರಿಕಾಗೋಷ್ಠಿಯಲ್ಲಿ ಸಮಿತಿ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ ಮಾಹಿತಿ

ಭದ್ರಾವತಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ ಮಾತನಾಡಿದರು.
    ಭದ್ರಾವತಿ : ಪ್ರೊ. ಬಿ.ಕೃಷ್ಣಪ್ಪರವರು ೧೯೭೪-೭೫ರಲ್ಲಿ ನಗರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಘಟಿಸಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್‌ರವರ ಆಶಯಗಳನ್ನು ಮೂಲ ಉದ್ದೇಶವಾಗಿಟ್ಟುಕೊಂಡು ಚಳುವಳಿಯನ್ನು ಆರಂಭಿಸಿದರು.     ಪ್ರಸ್ತುತ ಸಮಿತಿ ೫೦ ವರ್ಷಗಳನ್ನು ಪೂರೈಸಿದ್ದು, ಈ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಸುವರ್ಣ ಮಹೋತ್ಸವ ಆಚರಣೆ ಹಮ್ಮಿಕೊಳ್ಳಲಾಗಿದೆ. ಜ.೧೯ರಂದು ಸುವರ್ಣ ಮಹೋತ್ಸವಕ್ಕೆ ನಗರದಲ್ಲಿ ಚಾಲನೆ ನೀಡಲಾಗುವುದು ಎಂದು ಸಮಿತಿ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ ತಿಳಿಸಿದರು.
    ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ದೇಶದಲ್ಲಿ ಆರ್‌ಎಸ್‌ಎಸ್ ಹೇಗೆ ತನ್ನದೇ ಆದ ಸೈದ್ಧಾಂತಿಕ ನೆಲಗಟ್ಟಿನಲ್ಲಿ ಬಲಿಷ್ಠವಾಗಿ ಬೆಳೆದು ನಿಂತಿದೆಯೋ, ಅದೇ ರೀತಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯಾದ್ಯಂತ ಎಲ್ಲಾ ೩೧ ಜಿಲ್ಲೆಗಳಲ್ಲಿ ಬೆಳೆದು ನಿಂತಿದೆ. ಪ್ರೊ. ಬಿ. ಕೃಷ್ಣಪ್ಪ ಅವರು ೧೯೭೪ರಲ್ಲಿ ವಿಐಎಸ್‌ಎಲ್ ಕಾರ್ಮಿಕನ ಜೊತೆ ನಡೆದ ಅಸ್ಪೃಶ್ಯತೆ ನಡವಳಿಕೆ ಖಂಡಿಸಿ ಕಾರ್ಮಿಕರನ್ನು ಸಂಘಟಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಚಳುವಳಿಗೆ ನಾಂದಿ ಹಾಡಿದರು ಎಂದರು.
    ಸಮಿತಿ ನಡೆಸಿದ ಹೋರಾಟದ ಫಲವಾಗಿ ಬಗರ್‌ಹುಕುಂ ಚಳುವಳಿ, ಬೆತ್ತಲೆ ಸೇವೆ ಪದ್ಧತಿ ನಿಷೇಧ, ಜಾತಿನಿಂದನೆ ಕಾಯಿದೆ, ಪಿಟಿಸಿಲ್ ಕಾಯಿದೆ ಸೇರಿದಂತೆ ಅನೆಕ ಕಾಯಿದೆಗಳು ಜಾರಿಗೆ ಬಂದಿವೆ ಎಂದರು.
    ಜಾತಿ, ವರ್ಗ, ಧರ್ಮಬೇದವಿಲ್ಲದೆ ಎಲ್ಲಾ ರೀತಿಯ ಶೋಷಿತ ಜನರ ಧ್ವನಿಯಾಗಿ ಜನ್ಮತಾಳಿದ ಸಂಘಟನೆಗೆ ಇದೀಗ ೫೦ ವರ್ಷ ತುಂಬುತ್ತಿದ್ದು, ಇದರ ಸವಿನೆನಪಿಗಾಗಿ ಚಳುವಳಿಯ ತವರು ನೆಲದಲ್ಲಿ ಸುವರ್ಣಮಹೋತ್ಸವಕ್ಕೆ ಚಾಲನೆ ನೀಡಲಾಗುತ್ತಿದೆ.  ಈ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ.
    ಸಮಿತಿ ಜಿಲ್ಲಾ ಸಂಚಾಲಕ ಚಿನ್ನಯ್ಯ ಮಾತನಾಡಿ, ಶೋಷಿತರ ಧ್ವನಿಯಾಗಿ ಜ. ೧೯ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ರಂಗಪ್ಪ ವೃತ್ತ, ಜೈಭೀಮ್ ನಗರದಿಂದ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.  ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತದವರೆಗೂ ಮೆರವಣಿಗೆ ಸಾಗಲಿದೆ. ನಂತರ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಪ್ರೊ. ಬಿ. ಕೃಷ್ಣಪ್ಪನವರ ಭಾವಚಿತ್ರಕ್ಕೆ ಗೌರವ ನಮನ ಸಲ್ಲಿಸಲಾಗುವುದು. ಕಾರ್ಯಕ್ರಮವನ್ನು ಶಾಕ ಬಿ.ಕೆ.ಸಂಗಮೆಶ್ವರ್ ಉದ್ಘಾಟಿಸಲಿದ್ದಾರೆ. ಪ್ರೊ. ಬಿ.ಕೃಷ್ಣಪ್ಪನವರು ಹುಟ್ಟುಹಾಕಿರುವ ಈ ಸಂಘಟನೆ ಯಾವುದೇ ಒಂದು ವರ್ಗ, ವ್ಯಕ್ತಿಗೆ ಸೇರಿದ ಸ್ವತ್ತಲ್ಲ.  ಈ ಕಾರ್ಯಕ್ರಮದ ಧ್ಯೇಯವಾಕ್ಯ ದಲಿತರ ಐಕ್ಯತೆ ಸಂಘರ್ಷ-ಆರದ ಶೋಷಿತರ ಹಣತೆ ಎಂಬ ಶೀರ್ಷಿಕೆಯನ್ನು ಹೊಂದಿದೆ. ಸುವರ್ಣ ಮಹೋತ್ಸವದ ಅಂಗವಾಗಿ ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಜ.೨೦ ತ್ತು ೨೧ರಂದು ಬಿಜಾಪುರ, ಆಲಮಟ್ಟಿ ಡ್ಯಾಂ, ಹರ್ಡೇಕರ್ ಮಂಜಪ್ಪ ಸ್ಮಾರಕ ಭವನದಲ್ಲಿ ಅಧ್ಯಯನ ಶಿಬಿರವನ್ನು ಏರ್ಪಡಿಸಲಾಗಿದೆ. ಅದೇ ರೀತಿ ಜಿಲ್ಲಾಮಟ್ಟದಲ್ಲಿ ಸಹ ಸಮಾವೇಶಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು.
      ಪತ್ರಿಕಾಗೋಷ್ಠಿಯಲ್ಲಿ ತಾಲೂಕು ಸಂಚಾಲಕ ಕೆ. ರಂಗನಾಥ, ಪ್ರಮುಖರಾದ ಕಾಣಿಕ್ ರಾಜ್, ಸಂದೀಪ, ಈಶ್ವರಪ್ಪ, ನರಸಿಂಹ, ಪ್ರಸನ್ನ ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಶ್ರೀ ಸಿದ್ದರಾಮೇಶ್ವರರು ಕೇವಲ ಒಂದು ಜಾತಿಗೆ ಸೀಮಿತವಾಗಿರದ ಸಮಾಜ ಸುಧಾರಕರು : ಡಾ. ಧನಂಜಯ

ಭದ್ರಾವತಿ ತಾಲೂಕು ಆಡಳಿತ ಮತ್ತು ಬೋವಿ ಜನಾಂಗದ ಅಭಿವೃದ್ಧಿ ಸಂಘ ವತಿಯಿಂದ ಬುಧವಾರ ತಾಲೂಕು ಪಂಚಾಯಿತಿ ಆವರಣದಲ್ಲಿ ಆಯೋಜಿಸಲಾಗಿದ್ದ ಶ್ರೀ ಶಿವಯೋಗಿ ಕಾಯಕಯೋಗಿ ಶ್ರೀ ಸಿದ್ದರಾಮೇಶ್ವರರ ಸಿದ್ದರಾಮೇಶ್ವರರ ೮೫೧ನೇ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಅವರನ್ನು ಸನ್ಮಾನಿಸಲಾಯಿತು.
    ಭದ್ರಾವತಿ: ಶ್ರೀ ಸಿದ್ದರಾಮೇಶ್ವರರು ಕೇವಲ ಭೋವಿ ಸಮಾಜಕ್ಕೆ ಮಾತ್ರ ಸೀಮಿತವಾಗಿಲ್ಲ. ಅವರು ಒಬ್ಬ ಸಮಾಜ ಸುಧಾರಕರಾಗಿದ್ದು, ಅವರ ಕಾಲಾವಧಿಯಲ್ಲಿ ಕೈಗೊಂಡಿರುವ ಜನಪರವಾದ ಕಾರ್ಯಗಳು ಇಂದಿಗೂ ಉಳಿದುಕೊಂಡಿವೆ ಎಂದು ಎನ್.ಆರ್ ಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿ ಪ್ರಾಂಶುಪಾಲ ಡಾ. ಧನಜಂಯ ಹೇಳಿದರು.  
    ತಾಲೂಕು ಆಡಳಿತ ಮತ್ತು ಬೋವಿ ಜನಾಂಗದ ಅಭಿವೃದ್ಧಿ ಸಂಘ ವತಿಯಿಂದ ಬುಧವಾರ ತಾಲೂಕು ಪಂಚಾಯಿತಿ ಆವರಣದಲ್ಲಿ ಆಯೋಜಿಸಲಾಗಿದ್ದ ಶ್ರೀ ಶಿವಯೋಗಿ ಕಾಯಕಯೋಗಿ ಶ್ರೀ ಸಿದ್ದರಾಮೇಶ್ವರರ ಸಿದ್ದರಾಮೇಶ್ವರರ ೮೫೧ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ಶ್ರೀ ಸಿದ್ದರಾಮೇಶ್ವರರು ೧೨ನೇ ಶತಮಾನದಲ್ಲಿ ಜಗಜ್ಯೋತಿ ಬಸವಣ್ಣನವರ ಅನುಭವ ಮಂಟಪದಲ್ಲಿನ ವಚನಗಾರರ ಪೈಕಿ ಒಬ್ಬರಾಗಿದ್ದರು. ಅವರು ಸಮಾಜದಲ್ಲಿ ಶೋಷಣೆಗೆ ಒಳಗಾಗಿದ್ದ ವಡ್ಡರ ಪರವಾಗಿ ತಮ್ಮ ನಿಲುವುಗಳನ್ನು ಸಮಾಜಕ್ಕೆ ತಿಳಿಯಪಡಿಸುವ ಜೊತೆಗೆ ಸಮಾಜದಲ್ಲಿನ ಎಲ್ಲಾ ಸಮುದಾಯಗಳಿಗೂ ಮಾರ್ಗದರ್ಶಕರಾಗಿದ್ದರು. ಅಲ್ಲದೆ ಅವರ ಅವಧಿಯಲ್ಲಿ ಹಲವಾರು ಜನಪರ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಸಮಜದ ಅಭಿವೃದ್ಧಿಗೆ ಮುನ್ನುಡಿ ಬರೆದಿದ್ದರು. ಅವರ ಆದರ್ಶತನ, ಚಿಂತನೆಗಳನ್ನು ಸ್ವಲ್ಪಮಟ್ಟಿಗಾದರೂ ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕಾಗಿದೆ. ಭೋವಿ ಜನಾಂಗದವರು ಸೇರಿದಂತೆ ಸಮಾಜದಲ್ಲಿ ಶೋಷಣೆಗೆ ಒಳಗಾಗಿರುವ ಎಲ್ಲಾ ಸಮುದಾಯಗಳು ಸಹ ಇಂದು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಮೂಲಕ ಅವರನ್ನುಶಿಕ್ಷಣವಂತರನ್ನಾಗಿಸಬೇಕಾಗಿದೆ ಎಂದರು.


ಭದ್ರಾವತಿಯಲ್ಲಿ ತಾಲೂಕು ಆಡಳಿತ ಮತ್ತು ಬೋವಿ ಜನಾಂಗದ ಅಭಿವೃದ್ಧಿ ಸಂಘ ವತಿಯಿಂದ ಬುಧವಾರ ತಾಲೂಕು ಪಂಚಾಯಿತಿ ಆವರಣದಲ್ಲಿ ಆಯೋಜಿಸಲಾಗಿದ್ದ ಶ್ರೀ ಶಿವಯೋಗಿ ಕಾಯಕಯೋಗಿ ಶ್ರೀ ಸಿದ್ದರಾಮೇಶ್ವರರ ಸಿದ್ದರಾಮೇಶ್ವರರ ೮೫೧ನೇ ಜಯಂತಿ ಕಾರ್ಯಕ್ರಮ ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.
    ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ ಸೇರಿದಂತೆ ಇನ್ನಿತರರು ಮಾತನಾಡಿ, ಸಮಾಜದಲ್ಲಿ ಎಲ್ಲರೂ ಸಮಾನರು ಎಂಬ ಸಂದೇಶವನ್ನು ೧೨ನೇ ಶತಮಾನದಲ್ಲಿಯೇ ವಚನಗಾರರು ತಿಳಿಸಿಕೊಟ್ಟಿದ್ದಾರೆ. ನಾವುಗಳು ಆದರ್ಶ ವ್ಯಕ್ತಿಗಳನ್ನು ಜಾತಿ, ಧರ್ಮ, ಪಂಥಗಳ ಆಧಾರದ ಮೇಲೆ ಗುರುತಿಸದೆ ಅವರ ಅದರ್ಶತನ ಮೈಗೂಡಿಸಿಕೊಳ್ಳಬೇಕು. ಆಗ ಮಾತ್ರ ಜಯಂತಿ ಕಾರ್ಯಕ್ರಮಗಳಿಗೆ ಅರ್ಥ ಬರುತ್ತದೆ ಎಂದರು.
    ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್, ಆದರ್ಶ ವ್ಯಕ್ತಿಗಳಿಗೆ ಅವಮಾನ ಮಾಡುವ ರೀತಿಯಲ್ಲಿ ಯಾವುದೇ ಕಾರ್ಯಕ್ರಮಗಳನ್ನು ಆಚರಿಸಬಾರದು. ಇದನ್ನು ಆಯಾ ಸಮಾಜದವರು ಹಾಗು ಕಾರ್ಯಕ್ರಮದ ಜವಾಬ್ದಾರಿ ವಹಿಸಿಕೊಳ್ಳುವ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯವರು ಅರ್ಥ ಮಾಡಿಕೊಳ್ಳಬೇಕು. ಆದರ್ಶ ವ್ಯಕ್ತಿಗಳ ಕಾರ್ಯಕ್ರಮಗಳಿಗೆ ಪ್ರತಿಯೊಬ್ಬರು ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ಆಗ ಮಾತ್ರ ಆ ಕಾರ್ಯಕ್ರಮಗಳು ಸಾರ್ಥಕಗೊಳ್ಳುತ್ತವೆ ಎಂದರು.
    ಶಾಸಕ ಬಿ. ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಮುಂದಿನ ದಿನಗಳಲ್ಲಿ ಈ ರೀತಿಯ ತಪ್ಪುಗಳಿಗೆ ಅವಕಾಶ ಮಾಡಿಕೊಡಬಾರದು. ಎಲ್ಲರೂ ಒಗ್ಗೂಡಬೇಕು. ಆದರ್ಶ ವ್ಯಕ್ತಿಗಳ ಜಯಂತಿಗಳನ್ನು ಆಚರಿಸುವ ಮೂಲಕ ಅವರ ಆದರ್ಶತನಗಳನ್ನು ಮೈಗೂಡಿಸಿಕೊಳ್ಳಬೇಕೆಂದರು.
    ಭೋವಿ ಜನಾಂಗದ ಅಭಿವೃದ್ಧಿ ಸಂಘದ ಅಧ್ಯಕ್ಷ ಶಿವಣ್ಣ ತಹಸೀಲ್ದಾರ್ ಕೆ.ಆರ್ ನಾಗರಾಜು, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಂ.  ಗಂಗಣ್ಣ, ನಗರಸಭೆ ಪೌರಾಯುಕ್ತ ಪ್ರಕಾಶ್ ಚನ್ನಪ್ಪನವರ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗೋಪಾಲಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪೃಥ್ವಿರಾಜ್, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಚಿನ್ನಯ್ಯ, ಮುಖಂಡರಾದ ಎಸ್. ಕುಮಾರ್, ಸುಕನ್ಯಾ ರಾಜ್, ಚೌಡಯ್ಯ, ತಮ್ಮಯ್ಯ, ಶಿವು ಪಾಟೀಲ್, ಜಲ್ಲಿ ರಾಮಣ್ಣ, ಕೃಷ್ಣ, ಸಿದ್ಧ ಭೋವಿ ವೈ. ಮಂಜುನಾಥ್, ನಾಗೇಶ, ವಿಠಲ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸ್ವಾಗತಿಸಿದರು. ಎಸ್.ಕೆ ಮೋಹನ್ ನಿರೂಪಿಸಿದರು. ಸುಮತಿ ಕಾರಂತ್ ತಂಡದಿಂದ ನಾಡಗೀತೆ, ಪ್ರಾರ್ಥನೆ  ನಡೆಯಿತು.

Tuesday, January 16, 2024

`ಭದ್ರಾವತಿಯ ಕರಾಳ ದಿನ' ಆಚರಣೆ : ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರಿಂದ ಪಂಚಿನ ಮೆರವಣಿಗೆ

ಸಂಸದ ಬಿ.ವೈ ರಾಘವೇಂದ್ರ ಕಾರ್ಖಾನೆ ಉಳಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಿ


ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನು ಶಾಶ್ವತವಾಗಿ ಮುಚ್ಚಲು ಕೇಂದ್ರ ಸರ್ಕಾರದ ಆದೇಶದ ಮೇರೆಗೆ ೧೬ ಜನವರಿ ೨೦೨೩ರಂದು ಉಕ್ಕು ಪ್ರಾಧಿಕಾರ ತೀರ್ಮಾನ ತೆಗೆದುಕೊಂಡಿತ್ತು. ಇದನ್ನು ವಿರೋಧಿಸಿ ವಿಐಎಸ್‌ಪಿ ಕಾಂಟ್ರಾಕ್ಟ್ ವರ್ಕರ್ಸ್ ಯೂನಿಯನ್ ವತಿಯಿಂದ  ನಿರಂತರವಾಗಿ ಹೋರಾಟ ನಡೆಸಿಕೊಂಡು ಬರಲಾಗುತ್ತಿದ್ದು, ಹೋರಾಟ ೧ ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ಮಂಗಳವಾರ `ಭದ್ರಾವತಿಯ ಕರಾಳ ದಿನ' ಆಚರಿಸಲಾಯಿತು. ಸಂಜೆ ನಡೆದ ಪಂಜಿನ ಮೆರವಣಿಗೆಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಪಾಲ್ಗೊಂಡಿದ್ದರು.
    ಭದ್ರಾವತಿ : ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಉಳಿಸುವ ನಿಟ್ಟಿನಲ್ಲಿ ಸಂಸದ ಬಿ.ವೈ ರಾಘವೇಂದ್ರ ಪ್ರಾಮಾಣಿಕವಾಗಿ ಪ್ರಯತ್ನಿಸಬೇಕೆಂದು ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಆಗ್ರಹಿಸಿದರು.
    ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನು ಶಾಶ್ವತವಾಗಿ ಮುಚ್ಚಲು ಕೇಂದ್ರ ಸರ್ಕಾರದ ಆದೇಶದ ಮೇರೆಗೆ ೧೬ ಜನವರಿ ೨೦೨೩ರಂದು ಉಕ್ಕು ಪ್ರಾಧಿಕಾರ ತೀರ್ಮಾನ ತೆಗೆದುಕೊಂಡಿತ್ತು. ಇದನ್ನು ವಿರೋಧಿಸಿ ವಿಐಎಸ್‌ಪಿ ಕಾಂಟ್ರಾಕ್ಟ್ ವರ್ಕರ್ಸ್ ಯೂನಿಯನ್ ವತಿಯಿಂದ  ನಿರಂತರವಾಗಿ ಹೋರಾಟ ನಡೆಸಿಕೊಂಡು ಬರಲಾಗುತ್ತಿದ್ದು, ಹೋರಾಟ ೧ ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ಮಂಗಳವಾರ `ಭದ್ರಾವತಿಯ ಕರಾಳ ದಿನ' ಆಚರಿಸಲಾಯಿತು. ಸಂಜೆ ನಡೆದ ಪಂಜಿನ ಮೆರವಣಿಗೆಯಲ್ಲಿ ಪಾಲ್ಗೊಂಡು ಮಾತನಾಡಿದ ಬಿ.ಕೆ ಸಂಗಮೇಶ್ವರ್ ಹಾಗು ಕಾಂಗ್ರೆಸ್ ಮುಖಂಡರು, ಬಿ.ವೈ ರಾಘವೇಂದ್ರ ಅವರು ಈಗಲೂ ಸುಳ್ಳು ಭರವಸೆಗಳನ್ನು ನೀಡುತ್ತಿದ್ದಾರೆ ಹೊರತು ಕಾರ್ಖಾನೆಯನ್ನು ಉಳಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿಲ್ಲ ಎಂದು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದರು.  


    ಸೋಮವಾರ ಶಿವಮೊಗ್ಗದಲ್ಲಿರುವ ಸಂಸದರ ನಿವಾಸಕ್ಕೆ ಬೈಕ್ ರ್‍ಯಾಲಿ ಕೈಗೊಂಡಿದ್ದ ಗುತ್ತಿಗೆ ಕಾರ್ಮಿಕರು `ಭದ್ರಾವತಿಯ ಕರಾಳ ದಿನ'ದ ಅಂಗವಾಗಿ ನಗರದ  ಹೊಸಸೇತುವೆ ರಸ್ತೆ, ರಂಗಪ್ಪ ವೃತ್ತ, ಮಾಧವಚಾರ್ ವೃತ್ತ, ಹಾಲಪ್ಪ ವೃತ್ತ ಹಾಗು ಅಂಬೇಡ್ಕರ್ ವೃತ್ತದವರೆಗೂ ಪಂಜಿನ ಮೆರವಣಿಗೆ ನಡೆಸಿದರು. ಪ್ರಮುಖ ವೃತ್ತಗಳಲ್ಲಿ ಮಾನವ ಸರಪಳಿ ನಿರ್ಮಿಸಿ ಕೇಂದ್ರ ಸರ್ಕಾರ ಹಾಗು ಉಕ್ಕು ಪ್ರಾಧಿಕಾರದ ಧೋರಣೆಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
    ಮೆರವಣಿಗೆಯಲ್ಲಿ ಪ್ರಮುಖರಾದ ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಎಸ್. ಕುಮಾರ್, ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ನೇತ್ರಾವತಿ, ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್, ಮುಖಂಡರಾದ ಎಚ್. ರವಿಕುಮಾರ್, ಅಭಿಲಾಷ್, ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ನೂರಾರು ಕಾರ್ಮಿಕರು ಪಾಲ್ಗೊಂಡಿದ್ದರು.  

ಲಯನ್ಸ್ ಸೇವಾ ಕಾರ್ಯ ಶ್ಲಾಘನೀಯ : ಬಿ. ಸಿದ್ದಬಸಪ್ಪ

ಭದ್ರಾವತಿ ಸರ್ಕಾರಿ ನೌಕರರ ಸಂಘ, ವಿಶ್ವೇಶ್ವರಾಯ ವಿದ್ಯಾಸಂಸ್ಥೆ, ಮಲ್ನಾಡ್ ಕಾನ್ಸರ್ ಆಸ್ಪತ್ರೆ, ಮೀನಾ ನರ್ಸಿಂಗ್ ಹೋಂ, ಲಯನ್ಸ್ ರಕ್ತ ನಿಧಿ ಇವರ ಸಹಯೋಗದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಯುವದಿನ, ಉಚಿತ ವೈದ್ಯಕೀಯ ತಪಾಸಣಾ ಶಿಬಿರ, ಕ್ಯಾನ್ಸರ್ ಜಾಗೃತಿ ಉಪನ್ಯಾಸ ಹಾಗೂ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಬಿ.ಎಲ್ ರಂಗಸ್ವಾಮಿ ಸ್ವಾಮಿ, ಬಿ. ಸಿದ್ದಬಸಪ್ಪ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.
    ಭದ್ರಾವತಿ: ಲಯನ್ಸ್ ಒಂದು ಸೇವಾಧಾರಿತ ಸಂಸ್ಥೆ, ತಮ್ಮ ಕಾರ್ಯದ ಒತ್ತಡದ ನಡುವೆಯೂ ಕೂಡ ಸಂಸ್ಥೆಯು ನೂರಾರು ಸೇವಾ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿದೆ. ಸ್ವಾಮಿ ವಿವೇಕಾನಂದ ಜಯಂತಿಯನ್ನು ರಕ್ತದಾನ ಹಾಗೂ ಆರೋಗ್ಯ ಶಿಬಿರ ಮೂಲಕ ನಡೆಸುತ್ತಿರುವುದು ಶ್ಲಾಘನೀಯ ಎಂದು ವಿಶ್ವೇಶ್ವರಾಯ ವಿದ್ಯಾ ಸಂಸ್ಥೆಯ ಅಧ್ಯಕ್ಷ ಬಿ.ಸಿದ್ದಬಸಪ್ಪ ಹೇಳಿದರು.
    ಸರ್ಕಾರಿ ನೌಕರರ ಸಂಘ, ವಿಶ್ವೇಶ್ವರಾಯ ವಿದ್ಯಾಸಂಸ್ಥೆ, ಮಲ್ನಾಡ್ ಕಾನ್ಸರ್ ಆಸ್ಪತ್ರೆ, ಮೀನಾ ನರ್ಸಿಂಗ್ ಹೋಂ, ಲಯನ್ಸ್ ರಕ್ತ ನಿಧಿ ಇವರ ಸಹಯೋಗದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಯುವದಿನ, ಉಚಿತ ವೈದ್ಯಕೀಯ ತಪಾಸಣಾ ಶಿಬಿರ, ಕ್ಯಾನ್ಸರ್ ಜಾಗೃತಿ ಉಪನ್ಯಾಸ ಹಾಗೂ ಸ್ವಯಂ ಪ್ರೇರಿತ ರಕ್ತದಾನ ಶಿಬಿರದ ಅಧ್ಯಕ್ಷತೆವಹಿಸಿ ಮಾತನಾಡಿದರು.
    ರಕ್ತದಾನ ಹಾಗು ಆರೋಗ್ಯ ಶಿಬಿರ ಜಾಗತಿಕ ಆದರ್ಶ ರೂಪಿ, ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರಿಗೆ ನಾವು ಸಲ್ಲಿಸುತ್ತಿರುವ ಗೌರವದ ಸಮರ್ಪಣೆಯಾಗಿದೆ ಎಂದು ತಿಳಿಸಲು ಹೆಮ್ಮೆಯಾಗಿದೆ. ಲಯನ್ಸ್ ಕ್ಲಬ್ ಮಾದರಿಯಲ್ಲಿ ಎಲ್ಲಾ ಸ್ವಯಂ ಸೇವಾ ಸಂಸ್ಥೆಗಳು ಸಾಮಾಜಿಕ ಸೇವಾ ಕಾರ್ಯಗಳನ್ನು ಕೈಗೊಂಡಲ್ಲಿ ಭಾರತ ದೇಶ ಆರೋಗ್ಯಪೂರ್ಣರಾಷ್ಟ್ರವಾಗುವುದರಲ್ಲಿ ಸಂಶಯವಿಲ್ಲ. ಆರೋಗ್ಯವೇ ಮಹಾಭಾಗ್ಯ, ರಕ್ತದಾನ ಮಹಾದಾನ ಎಂದು ಲಯನ್ಸ್ ಕ್ಲಬ್ ಸೇವೆಯನ್ನು ಪ್ರಶಂಸಿಸಿದರು.
    ಮಾಜಿ ಜಿಲ್ಲಾ ಗವರ್ನರ್ ದಿವಾಕರ್ ಶೆಟ್ಟಿ ಮಾತನಾಡಿ, ರಾಷ್ಟ್ರೀಯ ಯುವದಿನವನ್ನು ರಕ್ತದಾನ ಶಿಬಿರದ ಮೂಲಕ ಆಚರಿಸುತ್ತಿರುವುದು ಸಂತಸದ ವಿಷಯ ಎಂದರು.
    ವಿದ್ಯಾಸಂಸ್ಥೆ ಸಂಸ್ಥಾಪಕ ಬಿ.ಎಲ್ ರಂಗಸ್ವಾಮಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ ವೈದ್ಯರಾದ ಮೊಹಮ್ಮದ್ ಇಸ್ಮಾಯಿಲ್ ಶರೀಫ್ ಹಾಗೂ ಭರತ್ ಕ್ಯಾನ್ಸರ್ ತಡೆಗಟ್ಟುವ ಮಾರ್ಗೋಪಾಯಗಳು ಹಾಗೂ ಜೀವನ ಶೈಲಿ ಕುರಿತು ಪಿಪಿಟಿ ಮೂಲಕ ಜಾಗೃತಿ ಮೂಡಿಸಿದರು.
    ರಕ್ತನಿಧಿ ಅಧ್ಯಕ್ಷ ಮೌನೇಶ್, ರವಿಚಂದ್ರ ರಕ್ತದಾನ ಶಿಬಿರ ಹಾಗು ಮೀನಾ ನರ್ಸಿಂಗ್ ಹೋಂ ವೈದ್ಯರಾದ ಡಾ.ವರ್ಷಾ ಹಾಗೂ ಹಿತೇಶ್ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಸಿಕೊಟ್ಟರು.
    ಪ್ರಾಂತೀಯ ಅಧ್ಯಕ್ಷ ಎಲ್. ದೇವರಾಜ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಆಶಾ ಸ್ವಾಗತಿಸಿ, ಕಾರ್ಯದರ್ಶಿ ಎಂ. ದಿವಾಕರ್ ನಿರೂಪಿಸಿ, ಬಿ.ಎಸ್ ರಾಜೇಶ್ ವಂದಿಸಿದರು. ಶ್ರೀನಿವಾಸ್, ಎಸ್.ಕೆ ಮೋಹನ್, ನಾಗರಾಜ್, ಶ್ರೀನಿವಾಸ್, ಅಶೋಕ್, ರಾಜ್‌ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಮಾಜಿ ಸೈನಿಕರಿಂದ ಭಾರತೀಯ ಭೂ ಸೇನಾ ದಿನಾಚರಣೆ

ಭದ್ರಾವತಿಯಲ್ಲಿ ಭಾರತೀಯ ಭೂ ಸೇನಾ ದಿನಾಚರಣೆ ಅಂಗವಾಗಿ ತಾಲೂಕು ಮಾಜಿ ಸೈನಿಕರ ಸಂಘದ ವತಿಯಿಂದ ಸೋಮವಾರ ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್ ಜಾಥಾ ನಡೆಸಿ ದೇಶಕ್ಕಾಗಿ ಸೈನಿಕರು ಸಲ್ಲಿಸುತ್ತಿರುವ ಸೇವೆ ಹಾಗು ಅವರ ದೇಶಭಕ್ತಿ ಸ್ಮರಣೆಯೊಂದಿಗೆ ಸಂಭ್ರಮಿಸಲಾಯಿತು. ಅಲ್ಲದೆ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಒಳರೋಗಿಗಳಿಗೆ ಹಾಗು ನ್ಯೂಟೌನ್ ದಯಾಸಾಗರ್ ಟ್ರಸ್ಟ್‌ನಲ್ಲಿ ವಯೋವೃದ್ಧರು, ಅಶಕ್ತರಿಗೆ ಹಣ್ಣು ಹಂಪಲು ವಿತರಿಸಲಾಯಿತು.
    ಭದ್ರಾವತಿ: ಭಾರತೀಯ ಭೂ ಸೇನಾ ದಿನಾಚರಣೆ ಅಂಗವಾಗಿ ತಾಲೂಕು ಮಾಜಿ ಸೈನಿಕರ ಸಂಘದ ವತಿಯಿಂದ ಸೋಮವಾರ ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್ ಜಾಥಾ ನಡೆಸಿ ದೇಶಕ್ಕಾಗಿ ಸೈನಿಕರು ಸಲ್ಲಿಸುತ್ತಿರುವ ಸೇವೆ ಹಾಗು ಅವರ ದೇಶಭಕ್ತಿ ಸ್ಮರಣೆಯೊಂದಿಗೆ ಸಂಭ್ರಮಿಸಲಾಯಿತು. ಅಲ್ಲದೆ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಒಳರೋಗಿಗಳಿಗೆ ಹಾಗು ನ್ಯೂಟೌನ್ ದಯಾಸಾಗರ್ ಟ್ರಸ್ಟ್‌ನಲ್ಲಿ ವಯೋವೃದ್ಧರು, ಅಶಕ್ತರಿಗೆ ಹಣ್ಣು ಹಂಪಲು ವಿತರಿಸಲಾಯಿತು.
    ನಗರಸಭೆ ವಾಡ್ ನಂ.೨೯ರ ಸಿದ್ದಾಪುರದಲ್ಲಿರುವ ಮಾಜಿ ಸೈನಿಕರ ಸಂಘದ ಕಛೇರಿಯಿಂದ ಆರಂಭಗೊಂಡ ಬೈಕ್ ಜಾಥಾ ಜಯಶ್ರೀ ಮುಖ್ಯ ರಸ್ತೆ ಮೂಲಕ ಜಯಶ್ರೀ ವೃತ್ತ, ವಿಐಎಸ್‌ಎಲ್ ಕಾರ್ಖಾನೆ ಮುಂಭಾಗದಿಂದ ಡಬ್ಬಲ್ ರಸ್ತೆ ಮೂಲಕ ಬಿ.ಎಚ್ ರಸ್ತೆ, ಅಂಬೇಡ್ಕರ್ ವೃತ್ತ, ಹಾಲಪ್ಪ ವೃತ್ತ, ಮಾಧವಚಾರ್ ವೃತ್ತ ಹಾಗು ರಂಗಪ್ಪ ವೃತ್ತ ಮೂಲಕ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ತಲುಪಿತು.
    ಸಂಘದ ಅಧ್ಯಕ್ಷ ಸುಬೇದಾರ್ ಗುಲ್ಗುಲೆ, ಉಪಾಧ್ಯಕ್ಷ ಮಹೇಶ್‌ಕುಮಾರ್, ಪ್ರಧಾನ ಕಾರ್ಯದರ್ಶಿ ವೆಂಕಟಗಿರಿ, ಸಹಕಾರ್ಯದರ್ಶಿ ಹರೀಶ್, ಹಿರಿಯ ಮಾಜಿ ಸೈನಿಕರಾದ ಗೋವಿಂದಪ್ಪ,  ವಾಸುದೇವನ್, ಮುದುಗಲ ರಾಮರೆಡ್ಡಿ, ಕೃಷ್ಣೋಜಿರಾವ್, ಸುರೇಶ್, ಅಭಿಲಾಷ್, ಗಿರಿ, ಶ್ರೀಧರ, ಉಮೇಶ್, ರಮೇಶ್, ದಿನೇಶ್, ಶೇಷಾಚಲ, ಉದಯ್,  ಸ್ಥಳೀಯರಾದ ರಾಜಶೇಖರ್, ಈಶ್ವರ್ ರಾವ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

Monday, January 15, 2024

ಪಿಕಪ್ ವಾಹನ ಪಲ್ಟಿ : ೩ ಸಾವು

        ಭದ್ರಾವತಿ : ಅಡಕೆ ಕಾಯಿ ತುಂಬಿದ ಬುಲೇರೊ ಪಿಕಪ್ ವಾಹನ ಪಲ್ಟಿಯಾಗಿ ಬಿದ್ದು ೩ ಜನ ಸ್ಥಳದಲ್ಲಿಯೆ ಮೃತಪಟ್ಟಿದ್ದಾರೆ. ತಾಲೂಕಿನ ಹೊಳೆಹೊನ್ನೂರು ಪಟ್ಟಣ ಸಮೀಪದ ಚಂದನಕೆರೆಯ ನಿವಾಸಿಗಳಾದ ನಾಗರಾಜ (೪೭) ಮಂಜುನಾಥ (೪೦) ಗೌತಮ್ (೧೮) ಮೃತರು.
    ಶಿಕಾರಿಪುರ ಸಮೀಪದ ಅರಿಶಿನಗೆರೆಯ ಅಡಿಕೆ ತೋಟದಲ್ಲಿ ಅಡಕೆ ಕೊಯ್ಲು ಮುಗಿಸಿಕೊಂಡು ಚಂದನಕೆರೆಗೆ ವಾಪ್ಪಾಸಾಗುವಾಗ ಚಿನ್ನಿಕಟ್ಟೆ ಜೋಗದ ಬಳಿ ಶನಿವಾರ ಸಂಜೆ ಕಾಯಿ ತುಂಬಿದ ಬುಲೇರೊ ವಾಹನಕ್ಕೆ ಆಕಳೊಂದು ಅಡ್ಡ ಬಂದಿದೆ ಆಕಳು ತಪ್ಪಿಸುವ ಭರದಲ್ಲಿ ವಾಹನದ ಟೈಯರ್ ಹೊಡೆದು ಹೋಗಿ ವಾಹನ ಚಾಲಕನ ನಿಯಂತ್ರಣ ತಪ್ಪಿ ವಾಹನ ರಸ್ತೆಯಲ್ಲಿ ಪಲ್ಟಿಯಾಗಿದೆ.
    ಅಡಕೆ ಕೆಲಸಕ್ಕೆಂದು ಹೋದ ಮಂಜುನಾಥ್, ನಾಗರಾಜ್ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ ಗೌತಮ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ೭ ಜನ ಅಡಕೆ ತೋಟಕ್ಕೆ ಕಾಯಿ ತರಲು ಹೋಗಿದ್ದರು. ಬುಲೆರೊದ ಒಳಗೆ ಕುಳಿತಿದ ಮೂವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಂಭೀರವಾಗಿ ಗಾಯಗೊಂಡಿದ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಮನೆ ಮುಂಭಾಗ ಮೃತ ಸಂಬಂದಿಗಳ ಆಕ್ರಂದನ ಮುಗಿಲು ಮುಟ್ಟಿತ್ತು. ಶವಗಳ ಅಂತಿಮ ದರ್ಶನಕ್ಕೆ ಹೋದ ಅಕ್ಕಪಕ್ಕದ ಗ್ರಾಮಗಳ ಗ್ರಾಮಸ್ಥರಿಂದ ಗ್ರಾಮದಲ್ಲಿ ಜನ ಗಂಜುಳಿಯಿಂದ ತುಂಬಿಹೋಯಿತ್ತು.