Friday, January 19, 2024

ಪೆನ್ಸಿಲ್ ತುದಿಯಲ್ಲಿ ಭವ್ಯ ರಾಮಮಂದಿರ : ಕಲಾವಿದ ವರುಣ್ ಆಚಾರ್

ಭದ್ರಾವತಿಯಲ್ಲಿ ಸೂಕ್ಷ್ಮ ಕಲಾಕೃತಿ ಮಾದರಿಗಳ ತಯಾರಿಕೆ ಕಲಾವಿದ ಎಸ್. ವರುಣ್ ಆಚಾರ್ ಕೈಚಳಕದಲ್ಲಿ ತಯಾರಾಗಿರುವ ಆಕರ್ಷಕವಾದ ಅಯೋಧ್ಯೆ ಭವ್ಯ ರಾಮಮಂದಿರ ಕಲಾಕೃತಿ ಮಾದರಿ.
    ಭದ್ರಾವತಿ: ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ಲೋಕಾರ್ಪಣೆ ಹಾಗು ಪ್ರಭು ಶ್ರೀರಾಮ ಚಂದ್ರನ ಪ್ರಾಣ ಪ್ರತಿಷ್ಠಾಪನೆ ಹಿನ್ನಲೆಯಲ್ಲಿ ದೇಶಾದ್ಯಂತ ವಿಭಿನ್ನ ಧಾರ್ಮಿಕ ಆಚರಣೆಗಳು ಜರುಗುತ್ತಿದ್ದು, ಈ ನಡುವೆ ಕಲಾ ಸಾಧಕರು ಪ್ರಭು ಶ್ರೀರಾಮ ಚಂದ್ರನಿಗಾಗಿ ತಮ್ಮಲ್ಲಿನ ಪ್ರತಿಭೆಗಳನ್ನು ಅನಾವರಣಗೊಳಿಸಿ ಸಮರ್ಪಿಸುತ್ತಿದ್ದಾರೆ. ಈ ಸಾಲಿನಲ್ಲಿ ಹಳೇನಗರದ ಎನ್‌ಎಸ್‌ಟಿ ರಸ್ತೆ ನಿವಾಸಿ ಎಸ್. ವರುಣ್ ಆಚಾರ್ ಸಹ ಒಬ್ಬರಾಗಿದ್ದಾರೆ.
    ವರುಣ್ ಮೂಲತಃ ಸೂಕ್ಷ್ಮ ಕಲಾಕೃತಿ (ಮೈಕ್ರೋ ಆರ್ಟ್ಸ್) ಮಾದರಿ ತಯಾರಿಕೆ ಕಲಾವಿದರಾಗಿದ್ದು, ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ ಸಾಧಕರಾಗಿದ್ದಾರೆ. ಇದೀಗ ಪೆನ್ಸಿಲ್ ತುದಿಯಲ್ಲಿ ಆಯೋಧ್ಯೆ ಭವ್ಯ ರಾಮಮಂದಿರ ಮಾದರಿ ತಯಾರಿಕೆಯಲ್ಲಿ ಇವರ ಪ್ರತಿಭೆ ಅನಾವರಣಗೊಂಡಿದೆ. ೧.೯ ಸೆ.ಮೀ. ಅಳತೆಯ ಆಕರ್ಷಕವಾದ ಭವ್ಯ ರಾಮಮಂದಿರ ಮಾದರಿ ತಯಾರಿಸಲಾಗಿದ್ದು, ಮಂದಿರ, ಗೋಪುರಗಳು ಹಾಗು ಕೇಸರಿ ಧ್ವಜಕಂಬ ಒಳಗೊಂಡಿದೆ.  ಇದನ್ನು ತಯಾರಿಸಲು ಸುಮಾರು ೪ ಗಂಟೆ ಸಮಯ ವ್ಯಯ ಮಾಡಿದ್ದಾರೆ.
    ಪದವಿಧರರಾಗಿರುವ ವರುಣ್, ಸಿದ್ದರಾಜು-ಗಾಯಿತ್ರಿ ದಂಪತಿ ಪುತ್ರರಾಗಿದ್ದಾರೆ. ಖಾಸಗಿ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಬಿಡುವಿನ ಅವಧಿಯಲ್ಲಿ ಸೂಕ್ಷ್ಮ ಕಲಾಕೃತಿ ಮಾದರಿಗಳನ್ನು ತಯಾರಿಸುತ್ತಿದ್ದಾರೆ. ಸೀಮೆಸುಣ್ಣ, ಅಕ್ಕಿಕಾಳು, ಬೆಂಕಿಕಡ್ಡಿ, ಕಡಲೆ ಬೀಜ ಸೇರಿದಂತೆ ಇತ್ಯಾದಿ ವಸ್ತುಗಳಲ್ಲಿ ಸುಮಾರು ೩೦೦ಕ್ಕೂ ಹೆಚ್ಚು ಕಲಾಕೃತಿ ಮಾದರಿಗಳು ಇವರ ಕೈಚಳಕದಲ್ಲಿ ಅನಾವರಣಗೊಂಡಿವೆ.  

ಡಿಎಸ್‌ಎಸ್ ಸುವರ್ಣ ಮಹೋತ್ಸವಕ್ಕೆ ಚಾಲನೆ : ದಲಿತರ ಏಳಿಗೆಗಾಗಿ ಶ್ರಮಿಸದ ಧೀಮಂತ ವ್ಯಕ್ತಿ ಪ್ರೊ. ಬಿ. ಕೃಷ್ಣಪ್ಪ

ಅಂಬೇಡ್ಕರ್ ವೃತ್ತದಲ್ಲಿ ಆಯೋಜಿಸಲಾಗಿದ್ದ ಬಹಿರಂಗ ಸಭೆಯಲ್ಲಿ ಹಿರಿಯ ಮುಖಂಡ ಜಿ. ಮೂರ್ತಿ

ಪ್ರೊ. ಬಿ. ಕೃಷ್ಣಪ್ಪ ಅವರು ಸಂಘಟಿಸಿದ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಇದೀಗ ೫೦ ವರ್ಷಗಳನ್ನು ಪೂರೈಸಿರುವ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಸುವರ್ಣ ಮಹೋತ್ಸವ ಆಚರಣೆ ಹಮ್ಮಿಕೊಳ್ಳಲಾಗಿದ್ದು, ಶುಕ್ರವಾರ ಭದ್ರಾವತಿ ನಗರದಲ್ಲಿ ಚಾಲನೆ ನೀಡಲಾಯಿತು.

    ಭದ್ರಾವತಿ : ಪ್ರೊ. ಬಿ. ಕೃಷ್ಣಪ್ಪ ಅವರು ಸಂಘಟಿಸಿದ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಇದೀಗ ೫೦ ವರ್ಷಗಳನ್ನು ಪೂರೈಸಿರುವ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಸುವರ್ಣ ಮಹೋತ್ಸವ ಆಚರಣೆ ಹಮ್ಮಿಕೊಳ್ಳಲಾಗಿದ್ದು, ಶುಕ್ರವಾರ ನಗರದಲ್ಲಿ ಚಾಲನೆ ನೀಡಲಾಯಿತು.
    ಇದಕ್ಕೂ ಮೊದಲು ನಗರದ ರಂಗಪ್ಪ ವೃತ್ತ, ಜೈಭೀಮ್ ನಗರದಿಂದ ಕಲಾ ತಂಡಗಳೊಂದಿಗೆ  ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತದವರೆಗೂ ಮೆರವಣಿಗೆ ನಡೆಸಲಾಯಿತು. ನಂತರ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಪ್ರೊ. ಬಿ. ಕೃಷ್ಣಪ್ಪನವರ ಭಾವಚಿತ್ರಕ್ಕೆ ಗೌರವ ನಮನ ಸಲ್ಲಿಸಲಾಯಿತು. ಮೆರವಣಿಗೆಯಲ್ಲಿ ಸಮಿತಿ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.
    ನಂತರ ಅಂಬೇಡ್ಕರ್ ವೃತ್ತದಲ್ಲಿ ಆಯೋಜಿಸಲಾಗಿದ್ದ ಬಹಿರಂಗ ಸಭೆಗೆ ಚಾಲನೆ ನೀಡಿ ಮಾತನಾಡಿದ ದಲಿತ ಸಂಘರ್ಷ ಸಮಿತಿ ಹಿರಿಯ ಮುಖಂಡ ಜಿ.ಮೂರ್ತಿ, ಬಿ. ಕೃಷ್ಣಪ್ಪ ಅವರು ಸದಾ ಕಾಲ ದಲಿತರ ಪರವಾದ ಚಿಂತನೆಗಳನ್ನು ಹೊಂದುವ ಮೂಲಕ ಅವರ ಏಳಿಗೆಗಾಗಿ ಶ್ರಮಿಸಿದ ಧೀಮಂತ ವ್ಯಕ್ತಿ. ತಮ್ಮ ಸ್ವಂತ ಹಣದಲ್ಲಿಯೇ ಸಂಘಟನೆ ಕಟ್ಟುವ ಜೊತೆಗೆ ನಗರದ ವಿಐಎಸ್‌ಎಲ್ ಹಾಗು ಎಂಪಿಎಂ ಈ ಎರಡು ಅವಳಿ ಕಾರ್ಖಾನೆಗಳ ಕಾರ್ಮಿಕರು ನೀಡಿದ ತಲಾ ಎರಡು ರುಪಾಯಿ ಕೆಂಪು ನೋಟಿನ ಹಣದಲ್ಲಿ ಇಡೀ ರಾಜ್ಯಾದ್ಯಂತ ಸಂಘಟನೆ ವಿಸ್ತರಿಸಿದರು. ಆ ಮೂಲಕ ಹಲವು ಹೋರಾಟಗಳಲ್ಲಿ ಯಶಸ್ಸು ಸಾಧಿಸಿ ಶೋಷಿತರಿಗೆ ನ್ಯಾಯ ಒದಗಿಸಿಕೊಟ್ಟರು ಎಂದರು.
    ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಆಶಯ ಹಾಗು ಸಂವಿಧಾನದ ಆಧಾರದಲ್ಲಿ ದಲಿತ ಸಂಘರ್ಷ ಸಮಿತಿಯನ್ನು ಸ್ಥಾಪಿಸಲಾಗಿದೆ. ಇಂಥದೊಂದು ಸಂಘಟನೆವ ೫೦ ವರ್ಷಗಳನ್ನು ಪೂರೈಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು.


ಪ್ರೊ. ಬಿ. ಕೃಷ್ಣಪ್ಪ ಅವರು ಸಂಘಟಿಸಿದ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಇದೀಗ ೫೦ ವರ್ಷಗಳನ್ನು ಪೂರೈಸಿರುವ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಸುವರ್ಣ ಮಹೋತ್ಸವ ಆಚರಣೆ ಹಮ್ಮಿಕೊಳ್ಳಲಾಗಿದ್ದು, ಶುಕ್ರವಾರ ಭದ್ರಾವತಿ ನಗರದಲ್ಲಿ ಮೆರವಣಿಗೆ ನಡೆಸಲಾಯಿತು.
    ಅನೇಕ ಚಳವಳಿಗಳು ಆರಂಭಗೊಂಡು ಕೆಲಕಾಲದಲ್ಲಿಯೇ ನಶಿಸಿವೆ. ಆದರೆ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರ ನಡುವೆ ಹುಟ್ಟಿದ ಚಳವಳಿಯಾಗಿದ್ದರಿಂದ ಇಂದಿಗೂ ಜೀವಂತವಾಗಿದೆ. ಸಾಮಾಜಿಕ ಮಾಧ್ಯಮಗಳಿಲ್ಲದ ಕಾಲದಲ್ಲಿಯೂ ಸದೃಢವಾಗಿ ಬಲಗೊಂಡ ಸಂಘಟನೆ ದಲಿತ ಸಂಘರ್ಷ ಸಮಿತಿ ಎಂದರು.
    ಜಿಲ್ಲಾ ಸಂಚಾಲಕ ಚಿನ್ನಯ್ಯ ಮಾತನಾಡಿ, ದಲಿತ ಸಂಘರ್ಷ ಸಮಿತಿ ಅನೇಕ ಕಾಯ್ದೆಗಳು ರೂಪಿಸಲು ಕಾರಣವಾಗಿದೆ. ಅನೇಕ ಬಡವರ ಜಮೀನುಗಳನ್ನು ಉಳಿಸುವಲ್ಲಿ ಪ್ರಮುಖ ಪಾತ್ರವಹಿಸಿದೆ. ಪ್ರಸ್ತುತ ದಲಿತರು ಅನೇಕ ಸೌಲಭ್ಯಗಳನ್ನು ಪಡೆಯುವಲ್ಲಿ ಕದಸಂಸ ಪಾತ್ರ ಪ್ರಮುಖವಾಗಿದೆ ಎಂದರು.
    ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್, ನಗರಸಭೆ ಸದಸ್ಯ ಚನ್ನಪ್ಪ, ಮುಖಂಡರುಗಳಾದ ಈಶ್ವರಪ್ಪ, ಪ್ರಸನ್ನಕುಮಾರ್, ರಂಗನಾಥ್, ಕಾಣಿಕ್ ರಾಜ್, ಎಸ್. ಉಮಾ, ಶಾಂತಿ, ತಿಪ್ಪೇಸ್ವಾಮಿ, ಪರಮೇಶ್ವರಪ್ಪ, ಗಂಗಾಧರ್, ವಿ. ವಿನೋದ್, ಜಿಂಕ್‌ಲೈನ್ ಮಣಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವಿಐಎಸ್‌ಎಲ್ ೧೦೬ನೇ ಸಂಸ್ಥಾಪಕರ ದಿನಾಚರಣೆ : ಸರ್.ಎಂ.ವಿ ಪ್ರತಿಮೆಗೆ ಮಾಲಾರ್ಪಣೆ

ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ೧೦೬ನೇ ಸ್ಥಾಪನೆ ವರ್ಷದ ಅಂಗವಾಗಿ ಅತ್ಯುತ್ತಮ ಇಂಜಿನಿಯರ್, ರಾಜನೀತಿಜ್ಞ ಸರ್. ಮೋಕ್ಷ ಗುಂಡಂ ವಿಶ್ವೇಶ್ವರಾಯರವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಖಾನೆ ವತಿಯಿಂದ ಗೌರವ ಸಲ್ಲಿಸಲಾಯಿತು.
    ಭದ್ರಾವತಿ : ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ೧೦೬ನೇ ಸ್ಥಾಪನೆ ವರ್ಷದ ಅಂಗವಾಗಿ ಅತ್ಯುತ್ತಮ ಇಂಜಿನಿಯರ್, ರಾಜನೀತಿಜ್ಞ ಸರ್. ಮೋಕ್ಷ ಗುಂಡಂ ವಿಶ್ವೇಶ್ವರಾಯರವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಖಾನೆ ವತಿಯಿಂದ ಗೌರವ ಸಲ್ಲಿಸಲಾಯಿತು.
    ಕಾರ್ಖಾನೆ ಆವರಣದಲ್ಲಿರುವ ಪ್ರತಿಮೆಗೆ ಮುಖ್ಯ ಮಹಾಪ್ರಬಂಧಕರು (ಸ್ಥಾವರ) ಮತ್ತು ಪ್ರಭಾರಿ ಕಾರ್ಯಪಾಲಕ ನಿರ್ದೇಶಕ ಕೆ.ಎಸ್ ಸುರೇಶ್ ನೇತೃತ್ವದಲ್ಲಿ ಮಾಲಾರ್ಪಣೆ ಮಾಡಲಾಯಿತು.  
    ಕಾರ್ಮಿಕ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ, ಪ್ರಭಾರಿ ಅಧ್ಯಕ್ಷ ಎಂ.ಎಲ್ ಯೋಗೀಶ್, ಅಧಿಕಾರಿಗಳ ಸಂಘದ ಅಧ್ಯಕ್ಷ ಪಾರ್ಥಸಾರಥಿ ಮಿಶ್ರ, ಉಪಪ್ರಬಂಧಕ(ಸಿಬ್ಬಂದಿ) ಕೆ.ಎಸ್ ಶೋಭ ಸೇರಿದಂತೆ ಕಾರ್ಖಾನೆ ಅಧಿಕಾರಿಗಳು, ಕಾರ್ಮಿಕರು, ಗುತ್ತಿಗೆ ಕಾರ್ಮಿಕರು ಪಾಲ್ಗೊಂಡಿದ್ದರು.

Thursday, January 18, 2024

ಹಿರಿಯೂರು ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಎಚ್.ಬಿ ವಸಂತಕುಮಾರ್

ಭದ್ರಾವತಿ ತಾಲೂಕಿನ ಹಿರಿಯೂರು ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಎಚ್.ಬಿ ವಸಂತಕುಮಾರ್ ಹಾಗು ಉಪಾಧ್ಯಕ್ಷರಾಗಿ ನೇತ್ರಾವತಿ ಆಯ್ಕೆಯಾಗಿದ್ದಾರೆ.
    ಭದ್ರಾವತಿ: ತಾಲೂಕಿನ ಹಿರಿಯೂರು ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಎಚ್.ಬಿ ವಸಂತಕುಮಾರ್ ಹಾಗು ಉಪಾಧ್ಯಕ್ಷರಾಗಿ ನೇತ್ರಾವತಿ ಆಯ್ಕೆಯಾಗಿದ್ದಾರೆ.
    ಉಳಿದಂತೆ ಸದಸ್ಯರಾಗಿ ಎಚ್.ಎಂ ಲೋಕೇಶ್, ಎಚ್.ಪಿ ಚಂದ್ರಶೇಖರ್, ಎಚ್.ಎಸ್ ಕುಮಾರ್, ಎಚ್.ಆರ್ ಜಗದೀಶ್, ಎಚ್.ಎ ಶಿವಣ್ಣ, ಎಂ. ಶಿವಕುಮಾರ್, ಸತ್ಯನಾರಾಯಣರಾವ್ ಮತ್ತು ಮಂಜುಳ ಸೇರಿದಂತೆ ೮ ಮಂದಿ ಆಯ್ಕೆಯಾಗಿದ್ದಾರೆ.
    ನೂತನ ಅಧ್ಯಕ್ಷರು, ಉಪಾಧ್ಯಕ್ಷರು ಹಾಗು ಸದಸ್ಯರಿಗೆ ಹಿರಿಯೂರು ಗ್ರಾಮಸ್ಥರು, ಹಾಲು ಉತ್ಪಾದಕರು ಹಾಗು ವಿವಿಧ ಸಂಘ-ಸಂಸ್ಥೆಗಳು ಅಭಿನಂದಿಸಿವೆ.

ಜ.೨೨ರಂದು ನಗರಸಭೆ ಅಧ್ಯಕ್ಷರ ಚುನಾವಣೆ : ಲತಾ ಚಂದ್ರಶೇಖರ್ ಆಯ್ಕೆ ಬಹುತೇಕ ಖಚಿತ

ಲತಾ ಚಂದ್ರಶೇಖರ್
    ಭದ್ರಾವತಿ:  ನಗರಸಭೆ ಅಧ್ಯಕ್ಷರ ಚುನಾವಣೆ ಜ.೨೨ರಂದು ನಡೆಯಲಿದ್ದು, ಅಧ್ಯಕ್ಷರಾಗಿ ವಾರ್ಡ್ ನಂ. ೩೪ರ ಸದಸ್ಯೆ ಲತಾ ಚಂದ್ರಶೇಖರ್ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.
    ನಗರಸಭೆ ಆಧಿಕಾರದ ಗದ್ದುಗೆ ಹಿಡಿದಿರುವ ಕಾಂಗ್ರೆಸ್ ಮೀಸಲಾತಿ ಮೊದಲ ೩೦ ತಿಂಗಳ ಅವಧಿ ಒಪ್ಪಂದದಂತೆ ಹಂಚಿಕೆ ಮಾಡಿಕೊಂಡಿದ್ದು, ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಗಳನ್ನು ಶಾಸಕ ಬಿ.ಕೆ ಸಂಗಮೇಶ್ವರ್ ನಿರ್ದೇಶನದಂತೆ ಅರ್ಹ ಸದಸ್ಯರಿಗೆ ಬಿಡುಕೊಡಲಾಗುತ್ತಿದೆ. ಸಾಮಾನ್ಯ ಮಹಿಳಾ ಮೀಸಲು ಹೊಂದಿರುವ ಅಧ್ಯಕ್ಷ ಸ್ಥಾನ ಅಧಿಕಾರ ಈಗಾಗಲೇ ಗೀತಾ ರಾಜ್‌ಕುಮಾರ್, ಅನುಸುಧಾ ಮೋಹನ್ ಪಳನಿ ಮತ್ತು ಶೃತಿ ಸಿ. ವಸಂತಕುಮಾರ್ ಕೆ.ಸಿ ಒಟ್ಟು ೩ ಮಂದಿ ಸದಸ್ಯರು ಅನುಭವಿಸಿದ್ದಾರೆ. ಉಳಿದ ಅವಧಿಗೆ ವಾರ್ಡ್ ನಂ.೩೪ರ ಸದಸ್ಯೆ ಲತಾ ಚಂದ್ರಶೇಖರ್ ಅಧ್ಯಕ್ಷರಾಗುವುದು ಬಹುತೇಕ ಖಚಿತವಾಗಿದೆ.
    ಈ ಹಿಂದೆಯೇ ಅಧಿಕಾರ ಅನುಭವಿಸಬೇಕಾಗಿದ್ದ ಲತಾ ಚಂದ್ರಶೇಖರ್ ಅವರಿಗೆ ಮೀಸಲಾತಿ ಕೊನೆ ಅವಧಿ ಅಧಿಕಾರ ಬಿಟ್ಟುಕೊಡುವುದಾಗಿ ತೀರ್ಮಾನಿಸಲಾಗಿತ್ತು. ಅದರಂತೆ ಶೃತಿ ಸಿ. ವಸಂತಕುಮಾರ್ ಕೆ.ಸಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಈ ಹಿನ್ನಲೆಯಲ್ಲಿ ಉಪವಿಭಾಗಾಧಿಕಾರಿ ಸತ್ಯನಾರಾಯಣ ಅವರ ನೇತೃತ್ವದಲ್ಲಿ ಜ.೨೨ರಂದು ಚುನಾವಣೆ ನಡೆಯಲಿದೆ.
    ಪ್ರಸ್ತುತ ನಗರಸಭೆಯಲ್ಲಿ ೧೮ ಕಾಂಗ್ರೆಸ್, ೧೨ ಜೆಡಿಎಸ್, ೪ ಬಿಜೆಪಿ ಹಾಗು ೧ ಪಕ್ಷೇತರ ಸದಸ್ಯರಿದ್ದಾರೆ. ಲತಾ ಚಂದ್ರಶೇಖರ್‌ರವರು ಮೂಲತಃ ಹಿಂದೂಪರ ಸಂಘಟನೆಗಳಲ್ಲಿ ಗುರುತಿಸಿಕೊಂಡು ಮೊದಲ ಬಾರಿಗೆ ವಾರ್ಡ್ ನಂ.೩೪ರಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದಾರೆ.
    ಜ.೨೨ರಂದು ಬೆಳಿಗ್ಗೆ ೧೦ ಗಂಟೆಯಿಂದ ೧೧ ಗಂಟೆವರೆಗೆ ನಾಮಪತ್ರ ಸಲ್ಲಿಕೆ, ಮಧ್ಯಾಹ್ನ ೧.೧೫ ರಿಂದ ೧.೩೦ರವರೆಗೆ ನಾಮಪತ್ರ ಹಿಂಪಡೆಯಲು ಅವಕಾಶ. ೧.೩೦ರ ನಂತರ ಅಧ್ಯಕ್ಷ ಘೋಷಣೆ ನಡೆಯಲಿದೆ. ಈ ಸಂಬಂಧ ಜ.೧೦ರಂದು ಉಪವಿಭಾಗಾಧಿಕಾರಿ ಚುನಾವಣೆ ಸೂಚನೆ ಪತ್ರ ಹೊರಡಿಸಿದ್ದಾರೆ.

ದೇಹದಾರ್ಢ್ಯ ಪಟುವಿನ ಸಾವಿನ ಪ್ರಕರಣ ಮರುತನಿಖೆಗೆ ಆಗ್ರಹ

ಜಿಲ್ಲಾ ರಕ್ಷಣಾಧಿಕಾರಿಗಳ ಕಛೇರಿಗೆ ತೆರಳಿ ಪೋಷಕರಿಂದ ಮನವಿ

ಭದ್ರಾವತಿ ನಗರದ ಆಂಜನೇಯ ಅಗ್ರಹಾರ ಕೂಲಿಬ್ಲಾಕ್ ಶೆಡ್ ನಿವಾಸಿ, ರಾಷ್ಟ್ರಮಟ್ಟದ ದೇಹದಾರ್ಢ್ಯ ಪಟುವಿನ ಸಾವಿನ ಪ್ರಕರಣ ಮರುತನಿಖೆಗೆ ಆಗ್ರಹಿಸಿ ಪೋಷಕರು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿರುವ ಘಟನೆ ನಡೆದಿದೆ.
    ಭದ್ರಾವತಿ: ನಗರದ ಆಂಜನೇಯ ಅಗ್ರಹಾರ ಕೂಲಿಬ್ಲಾಕ್ ಶೆಡ್ ನಿವಾಸಿ, ರಾಷ್ಟ್ರಮಟ್ಟದ ದೇಹದಾರ್ಢ್ಯ ಪಟುವಿನ ಸಾವಿನ ಪ್ರಕರಣ ಮರುತನಿಖೆಗೆ ಆಗ್ರಹಿಸಿ ಪೋಷಕರು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿರುವ ಘಟನೆ ನಡೆದಿದೆ.
    ದೇಹದಾರ್ಢ್ಯ ಪಟು ರತಿಲ ಕುಮಾರ್ ಮೇ.೧೩, ೨೦೨೩ರಂದು ಸಾವನ್ನಪ್ಪಿದ್ದರು. ಇವರ ಮೃತದೇಹ ಸಿರಿಯೂರು ವೀರಾಪುರ ನಾಲೆಯಲ್ಲಿ ಪತ್ತೆಯಾಗಿತ್ತು. ಈ ಸಂಬಂಧ ಗ್ರಾಮಾಂತರ ಠಾಣೆ ಪೊಲೀಸರು ಯುಡಿಆರ್ ಪ್ರಕರಣ ದಾಖಲಿಸಿಕೊಂಡಿದ್ದರು.
    ಇದೀಗ ರತಿಲ ಕುಮಾರ್ ಅವರ ತಂದೆ ಇಂದ್ರೇಶ್ ಅವರು, ಅಂದು ಮದುವೆಗೆ ಹೋಗಿದ್ದ ರತಿಲ ಕುಮಾರ್‌ಗೆ ಬಾರ್ ಒಂದರಲ್ಲಿ ಕುಡಿಸಿ ಗಲಾಟೆ ಮಾಡಲಾಗಿತ್ತು. ನಂತರ ನಾಲೆಯ ಬಳಿ ಕರೆದುಕೊಂಡು ಹೋಗಿ ತಲೆಗೆ ಬಲವಾಗಿ ಹೊಡೆದು ನೀರಿಗೆ ತಳ್ಳಿ ಕೊಲೆ ಮಾಡಲಾಗಿದೆ. ಪೊಲೀಸರು ಯುಡಿಆರ್ ಪ್ರಕರಣವೆಂದು ದಾಖಲಿಸಿ ತನಿಖೆ ಸರಿಯಾಗಿ ನಡೆಸುತ್ತಿಲ್ಲ ಎಂದು ಆರೋಪಿಸಿದ್ದಾರೆ.
    ರತಿಲ ಕುಮಾರ್ ಸ್ನೇಹಿತರೊಂದಿಗೆ ಪೋಷಕರು ಜಿಲ್ಲಾ ರಕ್ಷಣಾಧಿಕಾರಿಗಳ ಕಛೇರಿಗೆ ತೆರಳಿ ಕಳೆದ ಸುಮಾರು ೮ ತಿಂಗಳಿನಿಂದ ನ್ಯಾಯಕ್ಕಾಗಿ ಅಲೆಯುತ್ತಿದ್ದು, ಈಗಾಗಲೇ ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ ಹಾಗು  ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಲಾಗಿದೆ. ಆದರೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಇದೀಗ ಮತ್ತೊಮ್ಮೆ ಮನವಿ ಸಲ್ಲಿಸುತ್ತಿದ್ದು, ಐಪಿಸಿ ಸೆಕ್ಷನ್ ೩೦೨ರಡಿ ಕೊಲೆ ಪ್ರಕರಣ ದಾಖಲಿಸಿ ಮರು ತನಿಖೆ ಕೈಗೊಳ್ಳುವಂತೆ ಎಎಸ್‌ಪಿ ಕರಿಯಪ್ಪರಿಗೆ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.
    ರತಿಲ ಕುಮಾರ್ ಸಹೋದರಿ ದೀಪ್ತಿ, ಸ್ನೇಹಿತರಾದ ಅಂತೋಣಿ ವಿಲ್ಸನ್, ಮಂಜುನಾಥ್, ಎಚ್. ರವಿಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Wednesday, January 17, 2024

ಕುಂಚ ಕಲಾವಿದ ಹಫೀಜ್ ಉರ್ ರಹಮಾನ್ ನಿಧನ

 ಭದ್ರಾವತಿ:  ತಾಲೂಕು ಕುಂಚ ಕಲಾವಿದರ ಸಂಘದ ಖಜಾಂಚಿ ಹಫೀಜ್ ಉರ್ ರಹಮಾನ್(51) ಗುರುವಾರ  ಬೆಳಗ್ಗೆ  ನಿಧನ  ಹೊಂದಿದರು.
    ಪತ್ನಿ, ಪುತ್ರಿ ಹಾಗೂ ಇಬ್ಬರು ಪುತ್ರರರು ಇದ್ದರು. ಕಳೆದ ಸುಮಾರು 2 ತಿಂಗಳಿನಿಂದ ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು.  ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ.
       ರಹಮಾನ್ ಅವರು ಜಮಾತೇ ಇಸ್ಲಾಂಮೀ ಹಿಂದ್ ಸಂಘಟನೆ ಸೇರಿದಂತೆ ಹಲವಾರು ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
       ಇವರ ನಿಧನಕ್ಕೆ ವಿವಿಧ ಸಂಘ-ಸಂಸ್ಥೆಗಳು ಸಂತಾಪ ಸೂಚಿಸಿವೆ.