Thursday, September 26, 2024

ಪ್ರಭಾಕರ ಬೀರಯ್ಯರಿಗೆ ಕಸಾಪ ಕಟ್ಟಡ ಸಮಿತಿಯಿಂದ ಸನ್ಮಾನ, ಗೌರವ

ಯೂನಿವರ್ಸಿಟಿ ಆಫ್ ಸೆಂಟ್ರಲ್ ಅಮೆರಿಕ ವಿಶ್ವವಿದ್ಯಾಲಯ ಭದ್ರಾವತಿ ನಗರದ ಜನ್ನಾಪುರ ನಿವಾಸಿ, ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳ ರಾಜ್ಯ ಸಂಯೋಜಕ ಡಿ. ಪ್ರಭಾಕರ ಬೀರಯ್ಯರವರಿಗೆ ಡಾಕ್ಟರ್ ಆಫ್ ಲೆಟರ್‍ಸ್-ಡಿ.ಲಿಟ್ ಗೌರವ ಪದವಿ ನೀಡಿದೆ. ಈ ಹಿನ್ನಲೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಟ್ಟಡ ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. 
    ಭದ್ರಾವತಿ: ಯೂನಿವರ್ಸಿಟಿ ಆಫ್ ಸೆಂಟ್ರಲ್ ಅಮೆರಿಕ ವಿಶ್ವವಿದ್ಯಾಲಯ ನಗರದ ಜನ್ನಾಪುರ ನಿವಾಸಿ, ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳ ರಾಜ್ಯ ಸಂಯೋಜಕ ಡಿ. ಪ್ರಭಾಕರ ಬೀರಯ್ಯರವರಿಗೆ ಡಾಕ್ಟರ್ ಆಫ್ ಲೆಟರ್‍ಸ್-ಡಿ.ಲಿಟ್ ಗೌರವ ಪದವಿ ನೀಡಿದೆ. ಈ ಹಿನ್ನಲೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಟ್ಟಡ ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. 
    ಸಮಿತಿ ಅಧ್ಯಕ್ಷರಾದ ಡಾ. ವಿಜಯಾದೇವಿ ನೇತೃತ್ವದಲ್ಲಿ ಪದಾಧಿಕಾರಿಗಳು ಹಾಗು ಸದಸ್ಯರು ಸನ್ಮಾನಿಸಿ ಗೌರವಿಸಿದರು. ಪ್ರಭಾಕರ ಬೀರಯ್ಯರವರು ಕಟ್ಟಡ ಸಮಿತಿ ಉಪಾಧ್ಯಕ್ಷರಾಗಿದ್ದು, ಅವರ ಬಹುಮುಖ ಸಾಮಾಜಿಕ ಸೇವೆಯನ್ನು ಗುರುತಿಸಿ ಗೌರವ ಡಿ ಲಿಟ್ ಪದವಿ ನೀಡಿರುವುದು ಹೆಮ್ಮೆಯ ವಿಷಯವಾಗಿದೆ. ಅಲ್ಲದೆ ಇದು ಸಮಿತಿಗೆ ಸಂದ ಗೌರವಾಗಿದ್ದು, ಪ್ರಭಾಕರ ಬೀರಯ್ಯರವರು ಮತ್ತಷ್ಟು ಸೇವಾ ಕಾರ್ಯಗಳನ್ನು ಕೈಗೊಳ್ಳಲು ಸ್ಪೂರ್ತಿ ನೀಡಿದೆ ಎಂದು ಸಂತಸ ವ್ಯಕ್ತಪಡಿಸಿದರು. 
      ಸನ್ಮಾನ ಸ್ವೀಕರಿಸಿದ ಪ್ರಭಾಕರ ಬೀರಯ್ಯರವರು ಅಭಿನಂದನಾ ನುಡಿಗಳನ್ನಾಡಿ, ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದರು. ಸಮಿತಿ ಪ್ರಮುಖರಾದ ಸಿ. ಜಯಪ್ಪ ಹೆಬ್ಬಳಗೆರೆ, ಕಸಾಪ ಕಾರ್ಯದರ್ಶಿ ಎಂ.ಈ  ಜಗದೀಶ್, ಮೋಹನ್ ಕುಮಾರ್, ಅಖಿಲ ಭಾರತ ವೀರಶೈವ ಲಿಂಗಾಯತ ಸಮಾಜದ ನಿರ್ದೇಶಕ ಬಿ.ಎಸ್ ಪ್ರಕಾಶ್, ಕರ್ನಾಟಕ ಸಾಹಿತ್ಯ ಸಾಂಸ್ಕೃತಿ ವೇದಿಕೆ ತಾಲೂಕು ಅಧ್ಯಕ್ಷೆ ಎಂ.ಎಸ್ ಸುಧಾಮಣಿ, ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯ ಪ್ರಮುಖರಾದ ಜಂಟಿ ಕಾರ್ಯದರ್ಶಿ ಸೌಮ್ಯ ಡಿ. ಪ್ರಭಾಕರ ಬೀರಯ್ಯ, ನಿರ್ದೇಶಕ ಜಿ. ಸುರೇಶ್, ಶಿಕ್ಷಣ ಸಂಯೋಜಕ ಪರಮೇಶ್ವರಪ್ಪ, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಯೋಜನೆ ಕಾಮಗಾರಿಗೆ ಗುದ್ದಲಿಗೆ ಪೂಜೆ ನೆರವೇರಿಸಿ, ಯೋಜನಾ ವರದಿಗೆ ಸೂಚನೆ ನೀಡಿ

ಜನಸ್ಪಂದನ ಸೇವಾ ಟ್ರಸ್ಟ್, ಸುವರ್ಣ ಮಹಿಳಾ ವೇದಿಕೆಯಿಂದ ಮುಖ್ಯ ಅಭಿಯಂತರ ಎಜಾಜ್ ಹುಸೇನ್ ಸಾಹೇಬ್ರಿಗೆ ಮನವಿ

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಭದ್ರಾವತಿ ತಾಲೂಕಿನ ಗ್ರಾಮೀಣ ಭಾಗದಲ್ಲಿ ಕಾಮಗಾರಿ ಕೈಗೊಳ್ಳಲು ಗುದ್ದಲಿ ಪೂಜೆ ಕೈಗೊಳ್ಳುವುದು ಹಾಗು ಭದ್ರಾ ನದಿಯಿಂದ ಪೈಪ್‌ಲೈನ್ ಮೂಲಕ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಅಗತ್ಯವಿರುವ ಕಾಮಗಾರಿಗೆ ಸಂಬಂಧಿಸಿದ ಸಂಪೂರ್ಣ ವಿವರಗಳನ್ನೊಳಗೊಂಡ ಯೋಜನಾ ವರದಿ(ಡಿಪಿಆರ್) ಸಲ್ಲಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸುವಂತೆ ಶ್ರೀ ಡಿ.ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್, ಸುವರ್ಣ ಮಹಿಳಾ ವೇದಿಕೆ ವತಿಯಿಂದ ಇಲಾಖೆಯ ಮುಖ್ಯ ಅಭಿಯಂತರ ಎಜಾಜ್ ಹುಸೇನ್ ಸಾಹೇಬ್ರಿಗೆ ಮನವಿ ಸಲ್ಲಿಸಲಾಗಿದೆ. 
    ಭದ್ರಾವತಿ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ತಾಲೂಕಿನ ಗ್ರಾಮೀಣ ಭಾಗದಲ್ಲಿ ಕಾಮಗಾರಿ ಕೈಗೊಳ್ಳಲು ಗುದ್ದಲಿ ಪೂಜೆ ಕೈಗೊಳ್ಳುವುದು ಹಾಗು ಭದ್ರಾ ನದಿಯಿಂದ ಪೈಪ್‌ಲೈನ್ ಮೂಲಕ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಅಗತ್ಯವಿರುವ ಕಾಮಗಾರಿಗೆ ಸಂಬಂಧಿಸಿದ ಸಂಪೂರ್ಣ ವಿವರಗಳನ್ನೊಳಗೊಂಡ ಯೋಜನಾ ವರದಿ(ಡಿಪಿಆರ್) ಸಲ್ಲಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸುವಂತೆ ಶ್ರೀ ಡಿ.ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್, ಸುವರ್ಣ ಮಹಿಳಾ ವೇದಿಕೆ ವತಿಯಿಂದ ಇಲಾಖೆಯ ಮುಖ್ಯ ಅಭಿಯಂತರ ಎಜಾಜ್ ಹುಸೇನ್ ಸಾಹೇಬ್ರಿಗೆ ಮನವಿ ಸಲ್ಲಿಸಲಾಗಿದೆ. 
    ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಉಂಬ್ಲೆಬೈಲು, ಕಲ್ಲಹಳ್ಳಿ, ತಡಸ, ದೊಣಬಘಟ್ಟ, ಸಿಂಗನಮನೆ, ಕೂಡ್ಲಿಗೆರೆ, ಬಿಳಿಕಿ, ಬಾರಂದೂರು, ಕಂಬದಾಳ್ ಹೊಸೂರು, ಗ್ರಾಮಪಂಚಾಯತಿ ವ್ಯಾಪ್ತಿಯ ಹಳ್ಳಿಗಳ ಗ್ರಾಮಸ್ಥರಿಗೆ ಪರಿಶುದ್ಧವಾದ ಕುಡಿಯುವ ನೀರನ್ನು ಸರಬರಾಜು ಮಾಡುವ ಯೋಜನೆಗಳ ಟೆಂಡರ್ ಪ್ರಕ್ರಿಯೆ ಈಗಾಗಲೇ ಮುಕ್ತಾಯಗೊಂಡಿದೆ. ಈ ಹಿನ್ನಲೆಯಲ್ಲಿ ಶಿಷ್ಟಾಚಾರ ಪಾಲನೆ (ಪ್ರೋಟೋಕಾಲ್) ಪ್ರಕಾರ ಗುದ್ದಲಿ ಪೂಜೆ ನೆರವೇರಿಸುವ ಕುರಿತು ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡುವಂತೆ ಕೋರಲಾಗಿದೆ. 
    ದೊಣಬಘಟ್ಟ, ಬಿಳಿಕಿ, ತಡಸ, ಕಾಗೆಕೋಡಮಗ್ಗಿ ಮತ್ತು ನಾಗತಿಬೆಳಗಲು ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಿಗೆ ಪರಿಶುದ್ಧವಾದ ಹಾಗೂ ಸಮರ್ಪಕವಾಗಿ ಕುಡಿಯುವ ನೀರನ್ನು ಸರಬರಾಜು ಮಾಡಲು ಪ್ರಸ್ತುತ ಕೆರೆಯ ನೀರಿನ ಸರಬರಾಜು ಬದಲಿಗೆ ನಗರಸಭೆ ವ್ಯಾಪ್ತಿಯ ಕಾಗದನಗರದ ಬಳಿ ಭದ್ರಾ ನದಿಯಿಂದ ನೀರನ್ನು ಪೈಪ್‌ಲೈನ್ ಮೂಲಕ ಒದಗಿಸಲು ಹಾಗೂ ಅವಶ್ಯಕವಿರುವ ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ಹೆಚ್ಚುವರಿ ಕುಡಿಯುವ ನೀರಿನ ಟ್ಯಾಂಕ್‌ಗಳ ನಿರ್ಮಾಣ ಮಾಡಲು ಸಂಪೂರ್ಣ ವಿವರಗಳನ್ನೊಳಗೊಂಡ ಯೋಜನಾ ವರದಿ(ಡಿಪಿಆರ್) ಸಲ್ಲಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸುವಂತೆ ಮನವಿ ಮಾಡಲಾಗಿದೆ. 
    ಶ್ರೀ ಡಿ.ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್ ಛೇರ್ಮನ್, ಮಾಜಿ ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್.ವೇಣುಗೋಪಾಲ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದ್ದು, ಈ ನಡುವೆ ಮುಖ್ಯ ಅಭಿಯಂತರ ಎಜಾಜ್ ಹುಸೇನ್ ಸಾಹೇಬ್ರ ಕಾರ್ಯವೈಖರಿ ಹಾಗು ಭದ್ರಾವತಿ ಹಾಗು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಯೋಜನೆಗಳನ್ನು ಅನುಷ್ಠಾನಕ್ಕೆ ತರುವಲ್ಲಿ ಹೆಚ್ಚಿನ ಶ್ರಮವಹಿಸಿರುವ ಹಿನ್ನಲೆಯಲ್ಲಿ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. 
    ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಬಿ.ವಿ ಗಿರಿನಾಯ್ಡು, ದೊಣಬಘಟ್ಟ ಗ್ರಾಮಪಂಚಾಯತಿ ಅಧ್ಯಕ್ಷರಾದ ನಜೀಬಾಸುಲ್ತಾನ್, ಉಪಾಧ್ಯಕ್ಷ ಜೋಹರ್‌ಬಾನು, ಮುಖಂಡರಾದ ಯೂನಸ್‌ಬೇಗ್, ಮಹಮ್ಮದ್ ಪಾರೂಕ್, ಖಾಸಿಂಸಾಬ್, ದೇವೇಂದ್ರಪ್ಪ ಮತ್ತು ಕಲ್ಲಹಳ್ಳಿ ಗ್ರಾಮಪಂಚಾಯತಿ ಸದಸ್ಯ ಧರ್ಮಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ದಾನಿಗಳ ಕೊಡುಗೆ ಮಕ್ಕಳ ಶಿಕ್ಷಣಕ್ಕೆ ದಾರಿ ದೀಪವಾಗಲಿ : ಸತ್ಯನಾರಾಯಣ

ಭದ್ರಾವತಿ ತಾಲೂಕಿನ ದೊಡ್ಡೇರಿ ಕ್ಲಸ್ಟರ್ ವ್ಯಾಪ್ತಿಯ ಗಂಗೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹೊಳೆ ಗಂಗೂರು ವೆಂಕಣ್ಣರವರು ದೇಣಿಗೆಯಾಗಿ ನೀಡಿದ ಸೌಂಡ್ ಸಿಸ್ಟಂ ಉಪವಿಭಾಗಾಧಿಕಾರಿ ಸತ್ಯನಾರಾಯಣ ಹಾಗು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸೇರಿದಂತೆ ಇನ್ನಿತರರು ಶಾಲೆಗೆ ಹಸ್ತಾಂತರಿಸಿದರು.  
    ಭದ್ರಾವತಿ: ಶಾಲೆಗಳಿಗೆ ದಾನವಾಗಿ ಪಡೆದ ವಸ್ತುಗಳು ಮಕ್ಕಳ ಕಲಿಕೆಗೆ ದಾರಿ ದೀಪವಾಗಬೇಕು. ಈ ನಿಟ್ಟಿನಲ್ಲಿ ಅವುಗಳ ಸದ್ಬಳಕೆಯಾಗಬೇಕೆಂದು ಉಪವಿಭಾಗಾಧಿಕಾರಿ ಸತ್ಯನಾರಾಯಣ ಹೇಳಿದರು. 
    ಅವರು ತಾಲೂಕಿನ ದೊಡ್ಡೇರಿ ಕ್ಲಸ್ಟರ್ ವ್ಯಾಪ್ತಿಯ ಗಂಗೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹೊಳೆ ಗಂಗೂರು ವೆಂಕಣ್ಣರವರು  ದೇಣಿಗೆಯಾಗಿ ನೀಡಿದ ಸೌಂಡ್ ಸಿಸ್ಟಂ ಶಾಲೆಗೆ ಹಸ್ತಾಂತರಿಸಿ ಹಾಗು ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿ ಮಾತನಾಡಿದರು. 
    ಮಕ್ಕಳು ಕಲಿಕೆಗೆ ಹೆಚ್ಚಿನ ಗಮನ ನೀಡುವ ಜೊತೆಗೆ ಶಿಕ್ಷಕರು ಹಾಗು ಪೋಷಕರ ಮಾರ್ಗದರ್ಶನದಲ್ಲಿ ಮುನ್ನಡೆಯಬೇಕು. ಭವಿಷ್ಯದ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕೆಂದರು. 
    ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಮಾತನಾಡಿ, ಪ್ರಸ್ತುತ ಮಕ್ಕಳ ಕಲಿಕೆ ಸರಳಗೊಳಿಸುವ ನಿಟ್ಟಿನಲ್ಲಿ ಇಲಾಖೆ ಹಲವಾರು ಯೋಜನೆಗಳನ್ನು ರೂಪಿಸಿಕೊಂಡಿದೆ. ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಅಲ್ಲದೆ ಶಿಕ್ಷಕರು ಕಲಿಕೆಗೆ ಎಲ್ಲಾ ರೀತಿಯ ಸಹಕಾರ ನೀಡುತ್ತಾರೆ. ಈ ಹಿನ್ನಲೆಯಲ್ಲಿ ಕಲಿಕೆ ಕಷ್ಟವಾಗಲಾರದು. ಮಕ್ಕಳು ಪೋಷಕರಿಗೆ ಹೊರೆಯಾಗದಂತೆ ನಡೆದುಕೊಳ್ಳಬೇಕು. ಉತ್ತಮ ಸಹವಾಸದೊಂದಿಗೆ ಮುಂದಿನ ಭವಿಷ್ಯ ರೂಪಿಸಿಕೊಳ್ಳುವ ಕಡೆ ಗಮನ ಹರಿಸಬೇಕೆಂದರು. 
    ಶಾಲೆಯ ಮುಖ್ಯ ಶಿಕ್ಷಕ ಮಂಜಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಿ, ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ಹಳೇಯ ವಿದ್ಯಾರ್ಥಿಗಳು, ದಾನಿಗಳು, ಸಂಘ-ಸಂಸ್ಥೆಗಳು ಸಹ ಕೈಜೋಡಿಸುತ್ತಿರುವ ಪರಿಣಾಮ ಸರ್ಕಾರಿ ಶಾಲೆಗಳು ಸಹ ಸಬಲೀಕರಣಗೊಳ್ಳುತ್ತಿವೆ. ಈ ನಡುವೆ ಸಮಾಜದಲ್ಲಿ ಸರ್ಕಾರಿ ಶಾಲೆಗಳ ಬಗ್ಗೆ ಒಲವು ಮೂಡಿಸುವ ಕಾರ್ಯ ಸಹ ನಡೆಯಬೇಕಾಗಿದೆ. ಈ ನಿಟ್ಟಿನಲ್ಲಿ ಶಾಲೆಗಳ ಶಿಕ್ಷಕರ ಪಾತ್ರ ಬಹುಮುಖ್ಯವಾಗಿದೆ ಎಂದರು. 
    ಕಾವ್ಯ ಪ್ರಾರ್ಥಿಸಿ, ಶಿಕ್ಷಕಿಯರಾದ ಸವಿತಾ ಸ್ವಾಗತಿಸಿ, ಫಾತೀಮಾಬೀ ನಿರೂಪಿಸಿದರು. ಶಿಕ್ಷಕ ಕಿರಣ್ ಸೇರಿದಂತೆ ಶಾಲೆಯ ಶಿಕ್ಷಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. 

Wednesday, September 25, 2024

ಬಿಜೆಪಿ ಒಬಿಸಿ ವತಿಯಿಂದ ಪಂಡಿತ್ ದೀನದಯಾಳ್ ಉಪಾಧ್ಯಾಯರ ಜನ್ಮದಿನ

ಭದ್ರಾವತಿ ತಾಲೂಕು ಬಿಜೆಪಿ ಮಂಡಲ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಅಪ್ರತಿಮ ಸಂಘಟಕ, ರಾಷ್ಟ್ರವಾದಿ ದಾರ್ಶನಿಕ, ಮಾರ್ಗದರ್ಶಕರಾದ ಪಂಡಿತ್ ದೀನದಯಾಳ್ ಉಪಾಧ್ಯಾಯರ ಜನ್ಮದಿನ ಆಚರಿಸಲಾಯಿತು. 
    ಭದ್ರಾವತಿ: ತಾಲೂಕು ಬಿಜೆಪಿ ಮಂಡಲ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಅಪ್ರತಿಮ ಸಂಘಟಕ, ರಾಷ್ಟ್ರವಾದಿ ದಾರ್ಶನಿಕ, ಮಾರ್ಗದರ್ಶಕರಾದ ಪಂಡಿತ್ ದೀನದಯಾಳ್ ಉಪಾಧ್ಯಾಯರ ಜನ್ಮದಿನ ಆಚರಿಸಲಾಯಿತು. 
    ಪಂಡಿತ್ ದೀನದಯಾಳ್ ಉಪಾಧ್ಯಾಯರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಸೂಚಿಸುವ ಮೂಲಕ ಬಿಜೆಪಿ ಸದಸ್ಯತ್ವ ಅಭಿಯಾನ ಸಭೆ ನಡೆಸಲಾಯಿತು. ಮಂಡಲ ಒಬಿಸಿ ಅಧ್ಯಕ್ಷ ರಾಜಶೇಖರ್ ಉಪ್ಪಾರ ಅಧ್ಯಕ್ಷತೆ ವಹಿಸಿದ್ದರು.
    ಮಂಡಲ ಅಧ್ಯಕ್ಷರಾದ ಧರ್ಮ ಪ್ರಸಾದ್ ಅವರು ಮಾತನಾಡಿ ದೀನ್ ದಯಾಳ್ ಉಪಾಧ್ಯಾಯ ಅವರ ಮಹತ್ವದ ಸಂದೇಶಗಳಾದ ಏಕಾತ್ಮ ಮಾನವದರ್ಶನ, ಅಂತ್ಯೋದಯದ ಅದ್ಭುತ ಪರಿಕಲ್ಪನೆ, ಸ್ವಂತಕ್ಕೆ ಸ್ವಲ್ಪ ಸಮಾಜಕ್ಕೆ ಸಮಸ್ತ ಎಂಬ ತತ್ವಗಳ ದೃಷ್ಟಿಕೋನವನ್ನು ಬೆಳೆಸಿಕೊಂಡು ಈ ತತ್ವಗಳನ್ನು ಉಸಿರಾಗಿಸಿಕೊಂಡ ಮಹಾತ್ಮರಿಗೆ ನಮಿಸಿದರು.   
    ಒಬಿಸಿ ಜಿಲ್ಲಾಧ್ಯಕ್ಷ ಎಂ.ಎನ್ ಸುಧಾಕರ್, ಅಭಿಯಾನದ ಜಿಲ್ಲಾ ಪ್ರಭಾರಿ ಭವಾನಿರಾವ್ ಮೋರೆ ಮಾತನಾಡಿ, ಪ್ರತಿಯೊಬ್ಬ ಕಾರ್ಯಕರ್ತ ಗರಿಷ್ಠ ೧೦೦ ಸದಸ್ಯತ್ವದ ಗುರಿ ಹೊಂದಬೇಕೆಂದು ವಿನಂತಿಸಿಕೊಂಡರು. 
    ಜಿಲ್ಲಾ ಒಬಿಸಿ ಉಪಾಧ್ಯಕ್ಷ ಪ್ರದೀಪ್ ಹೊನ್ನಪ್ಪ, ಕೆ.ಎನ್ ವಿಕಾಸ್, ಎಂ. ಪ್ರಭಾಕರ್, ಎನ್. ರಂಗನಾಥ್ ಹಾಗು ಮಂಡಲದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ನೂತನ ಪದಾಧಿಕಾರಿಗಳ ಆಯ್ಕೆ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

ಕುವೆಂಪು ಪ್ರವಾಸಿ ವಾಹನ ಚಾಲಕರ ಮತ್ತು ಮಾಲೀಕರ ಸಂಘ

ಭದ್ರಾವತಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಕುವೆಂಪು ಪ್ರವಾಸಿ ವಾಹನ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಮಾತನಾಡಿದರು. 
    ಭದ್ರಾವತಿ: ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್‌ನಿಲ್ದಾಣದ ಸಮೀಪದಲ್ಲಿರುವ ಕುವೆಂಪು ಪ್ರವಾಸಿ ವಾಹನ ಚಾಲಕರ ಮತ್ತು ಮಾಲೀಕರ ಸಂಘಕ್ಕೆ ನೂತನ ಪದಾಧಿಕಾರಿಗಳನ್ನು ಮಾಡಲಾಗಿದೆ ಎಂದು ಸಂಘದ ಅಧ್ಯಕ್ಷ ಮಹಮ್ಮದ್ ಪರ್ವೀಜ್ ತಿಳಿಸಿದರು. 
  ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹಲವಾರ ವರ್ಷಗಳಿಂದ ಸಂಘ ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸುತ್ತಿದೆ. ಇದೀಗ ಹೊಸದಾಗಿ ಪದಾಧಿಕಾರಿಗಳನ್ನು ಪುನರ್ ಆಯ್ಕೆ ಮಾಡಲಾಗಿದೆ. ಅದರಂತೆ ಅಧ್ಯಕ್ಷ ಮಹಮ್ಮದ್ ಪರ್ವೀಜ್, ಉಪಾಧ್ಯಕ್ಷರಾಗಿ ಬಸವರಾಜು, ಪ್ರಧಾನ ಕಾರ್ಯದರ್ಶಿಯಾಗಿ ಬಿ. ಜಗದೀಶ್, ಕಾರ್ಯದರ್ಶಿಯಾಗಿ ಶ್ರೀ ಕುಮಾರ್, ಖಜಾಂಚಿಯಾಗಿ ಮುಬಾರಕ್ ಹಾಗು ನಿರ್ದೇಶಕರಾಗಿ ಸಂತೋಷ್ ಕುಮಾರ್(ಬಾಬು), ಎ. ರಾಜಣ್ಣ, ನೇವಿಲ್ ಪೆರೆರಾ, ಅಬ್ದುಲ್ ರೆಹಮಾನ್, ವಾಸುದೇವ ಆಚಾರ್, ಮಹೇಶ್, ರಾಕೇಶ್, ಗೋವಿಂದ ಮತ್ತು ಎಸ್.ಎನ್ ಕಾಂತರಾಜುರವರು ಆಯ್ಕೆಯಾಗಿದ್ದಾರೆ ಎಂದರು. 
    ಪ್ರಸ್ತುತ ವಾಹನ ಚಾಲಕರು ಮತ್ತು ಮಾಲೀಕರು ಸಾಕಷ್ಟು ಸಂಕಷ್ಟ ಎದುರಿಸುತ್ತಿದ್ದಾರೆ. ಅದರಲ್ಲೂ ಆರ್ಥಿಕವಾಗಿ ಸಾಕಷ್ಟು ಸಮಸ್ಯೆಗಳು ಎದುರಾಗಿವೆ. ಸರ್ಕಾರ ವಾಹನಗಳ ತೆರಿಗೆ ವಿಮೆ ಮೊತ್ತ ಹೆಚ್ಚಿಸಿರುವುದು ಸರಿಯಲ್ಲ. ತಕ್ಷಣ ಹೆಚ್ಚಿಸಿರುವ ಮೊತ್ತ ಹಿಂಪಡೆಯಬೇಕು. ಯಾವುದೇ ವಸತಿ ಸೌಲಭ್ಯಗಳು ಇಲ್ಲದ ಕಾರಣ ವಸತಿ ಸೌಲಭ್ಯ ಕಲ್ಪಿಸಿಕೊಡಲು ಮುಂದಾಗಬೇಕು. ಹಲವಾರು ಬೇಡಿಕೆಗಳಿದ್ದು, ಇವುಗಳನ್ನು ಈಡೇರಿಸಿಕೊಡುವ ಮೂಲಕ ಹಿತಕಾಪಾಡುವಂತೆ ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಸಂಘದ ಪದಾಧಿಕಾರಿಗಳು, ನಿರ್ದೇಶಕರು ಉಪಸ್ಥಿತರಿದ್ದರು.   

ದಲಿತ ನೌಕರನ ವಿರುದ್ಧ ಸುಳ್ಳು ವರದಿ ನೀಡಿ ಕರ್ತವ್ಯದಿಂದ ಅಮಾನತು : ಖಂಡನೆ

ಉಪ ಅರಣ್ಯ ಸಂರಕ್ಷಣಾಧಿಕಾರಿ ಕಛೇರಿ ಮುಂಭಾಗ ಡಿಎಸ್‌ಎಸ್ ಪ್ರತಿಭಟನೆ 

ಭದ್ರಾವತಿ ಇಲ್ಲಿನ ಅರಣ್ಯ ವಿಭಾಗದ ಮಾವಿನಕೆರೆ ವಲಯದಲ್ಲಿ ಬೀಟ್ ಫಾರೆಸ್ಟ್ ದಲಿತ ನೌಕರನ ವಿರುದ್ಧ ಸುಳ್ಳು ವರದಿ ನೀಡಿ ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ ಎಂದು ಆರೋಪಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ನಗರದ ಬಿ.ಎಚ್ ರಸ್ತೆಯಲ್ಲಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಲಾಯಿತು. 
    ಭದ್ರಾವತಿ: ಇಲ್ಲಿನ ಅರಣ್ಯ ವಿಭಾಗದ ಮಾವಿನಕೆರೆ ವಲಯದಲ್ಲಿ ಬೀಟ್ ಫಾರೆಸ್ಟ್ ದಲಿತ ನೌಕರನ ವಿರುದ್ಧ ಸುಳ್ಳು ವರದಿ ನೀಡಿ ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ ಎಂದು ಆರೋಪಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ನಗರದ ಬಿ.ಎಚ್ ರಸ್ತೆಯಲ್ಲಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಲಾಯಿತು. 
    ಮಾವಿನಕೆರೆ ವಲಯದಲ್ಲಿ ಬೀಟ್ ಫಾರೆಸ್ಟ್ ದಲಿತ ನೌಕರ ರಾಮು ದೊಡ್ಮನೆ ಎಂಬುವರು ಕಳೆದ ಸುಮಾರು ೮ ವರ್ಷಗಳಿಂದ ಮಾವಿನಕೆರೆ ವಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರ ಮೇಲೆ ಯಾವುದೇ ಆರೋಪಗಳು ಇರುವುದಿಲ್ಲ. ವಲಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಜಗದೀಶ್‌ರವರಿಗೆ ಮೇಲಾಧಿಕಾರಿಗಳಿಂದ ತಾಲೂಕಿನ ಗುಡಮಘಟ್ಟ ಗ್ರಾಮದ ಸರ್ವೆ ನಂ.೪೩ರಲ್ಲಿ ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿ ರೈತರು ಅಕ್ರಮವಾಗಿ ಸಾಗುವಳಿ ಮಾಡಿರುವ ಕುರಿತು ಮಾಹಿತಿ ಬಂದಿದ್ದು, ಈ ಹಿನ್ನಲೆಯಲ್ಲಿ ಖುದ್ದಾಗಿ ಸ್ಥಳ ಪರಿಶೀಲನೆ ಮಾಡಿ ವರದಿ ಸಲ್ಲಿಸುವಂತೆ  ಸೂಚನೆ ಬಂದಿದೆ. ಈ ಹಿನ್ನಲೆಯಲ್ಲಿ ಜಗದೀಶ್‌ರವರು ರಾಮು ಅವರಿಗೆ ಗುಡಮಘಟ್ಟ ಗ್ರಾಮಕ್ಕೆ ತೆರಳಿ ಪರಿಶೀಲನೆ ನಡೆಸಿ ವರದಿ ನೀಡುವಂತೆ ಆದೇಶಿಸಿದ್ದಾರೆ ಎನ್ನಲಾಗಿದೆ. 
    ರಾಮುರವರು ಸ್ಥಳಕ್ಕೆ ತೆರಳಿ ಸರ್ವೆ ಕಾರ್ಯ ನಡೆಸಿ ಪ್ರಾಮಾಣಿಕವಾಗಿ ವರದಿ ಸಲ್ಲಿಸಿದ್ದಾರೆ. ಆದರೆ ಜಗದೀಶ್‌ರವರು ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಿ ಅರಣ್ಯ ಇಲಾಖೆ ಭೂಮಿಯನ್ನು ಕಂದಾಯ ಇಲಾಖೆ ಭೂಮಿ ಎಂಬುದಾಗಿ ಸುಳ್ಳು ವರದಿ ನೀಡಿದ್ದಾರೆಂದು ಹೇಳಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ. ಈ ಹಿನ್ನಲೆಯಲ್ಲಿ ರಾಮು ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ. ಜಗದೀಶ್‌ರವರು ತಮ್ಮ ಅಕ್ರಮಗಳನ್ನು ಮುಚ್ಚಿ ಹಾಕುವ ಉದ್ದೇಶದಿಂದ ಈ ರೀತಿ ಮಾಡಿದ್ದು, ಅಮಾನತು ಆದೇಶ ಪತ್ರ ಬಂದ ನಂತರ ಆರೋಗ್ಯ ನೆಪ ಹೇಳಿ ಜಗದೀಶ್‌ರವರು ಸುಮಾರು ೧೫ ದಿನ ಕರ್ತವ್ಯಕ್ಕೆ ರಜಾ ಸಲ್ಲಿಸಿದ್ದಾರೆಂದು ದಲಿತ ಮುಖಂಡರು ಆರೋಪಿಸಿದರು. 
    ತಕ್ಷಣ ರಾಮು ಅವರ ಮೇಲಿನ ಅಮಾನತು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಳ್ಳಬೇಕು. ತಕ್ಷಣ ರಾಮು ಅವರನ್ನು ಕರ್ತವ್ಯ ಸೇರ್ಪಡೆಮಾಡಿಕೊಳ್ಳಬೇಕು. ಜಗದೀಶ್‌ರವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. 
    ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಸತ್ಯ ಭದ್ರಾವತಿ ಮತ್ತು ಜಿಲ್ಲಾ ಸಂಚಾಲಕ ಚಿನ್ನಯ್ಯ ಪ್ರತಿಭಟನೆ ನೇತೃತ್ವ ವಹಿಸಿದ್ದರು. ಮುಖಂಡರಾದ ಸಿ. ಜಯಪ್ಪ ಹೆಬ್ಬಲಗೆರೆ, ಈಶ್ವರಪ್ಪ, ಮಣಿ ಜಿಂಕ್‌ಲೈನ್, ಪರಮೇಶ್ವರಪ್ಪ, ಎನ್. ಗೋವಿಂದ, ಸುಬ್ರಮಣಿ(ಕಬಡ್ಡಿ), ಈಶ್ವರಪ್ಪ(ನಗರಸಭೆ), ಸಂದೀಪ್, ಸುರೇಶ್(ಕೂಡ್ಲಿಗೆರೆ), ಎನ್. ಪ್ರಸನ್ನಕುಮಾರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. 
 

ಬಲಿಜ ಸಂಘದ ನೂತನ ತಾಲೂಕು ಅಧ್ಯಕ್ಷರಾಗಿ ಎಚ್.ಆರ್ ರಂಗನಾಥ್ ಆಯ್ಕೆ

ಭದ್ರಾವತಿ ತಾಲೂಕು ಬಲಿಜ ಸಂಘದ ನೂತನ ಅಧ್ಯಕ್ಷರಾಗಿ ಸಮಾಜದ ಹಿರಿಯ ಮುಖಂಡ ಎಚ್.ಆರ್ ರಂಗನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 
    ಭದ್ರಾವತಿ: ತಾಲೂಕು ಬಲಿಜ ಸಂಘದ ನೂತನ ಅಧ್ಯಕ್ಷರಾಗಿ ಸಮಾಜದ ಹಿರಿಯ ಮುಖಂಡ ಎಚ್.ಆರ್ ರಂಗನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 
    ಹಳೇನಗರದ ಬಸವೇಶ್ವರ ವೃತ್ತದಲ್ಲಿರುವ ಬಲಿಜ ಸಮುದಾಯ ಭವನದಲ್ಲಿ ಜರುಗಿದ ಸರ್ವ ಸದಸ್ಯರ ಸಭೆಯಲ್ಲಿ ರಂಗನಾಥ್‌ರವರು ಆಯ್ಕೆಯಾಗಿದ್ದಾರೆ. ರಂಗನಾಥ್‌ರವರು ಹಿರಿಯ ಕಬಡ್ಡಿ ಆಟಗಾರರಾಗಿದ್ದು, ಕೇಸರಿ ಪ್ರಶಸ್ತಿ ವಿಜೇತರಾಗಿದ್ದಾರೆ. ಇವರು ಹಲವಾರು ವರ್ಷಗಳಿಂದ ಸಂಘದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಈ ಹಿಂದೆ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. 
    ಸಭೆಯಲ್ಲಿ ಸಂಘದ ನಿಕಟಪೂರ್ವ ಅಧ್ಯಕ್ಷ ಸಂಜೀವ ಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಗೌರವಾಧ್ಯಕ್ಷ ಸುಬ್ರಮಣ್ಯ(ತಾತಯ್ಯ), ಉಪಾಧ್ಯಕ್ಷರಾದ ಜಂಗಮಪ್ಪ, ಶಕುಂತಲ, ಕಾರ್ಯದರ್ಶಿ ಟಿ. ರಮೇಶ್, ಖಜಾಂಚಿ ನರೇಂದ್ರ ಬಾಬು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.