Monday, October 7, 2024

ಶ್ರೀ ಬನಶಂಕರಿ ದೇವಸ್ಥಾನದಲ್ಲಿ ಅಮ್ಮನವರಿಗೆ ನವದುರ್ಗಿಯರ ವಿಶೇಷ ಅಲಂಕಾರ

ಭದ್ರಾವತಿ ನಗರದ ಹೊಸಸೇತುವೆ ರಸ್ತೆಯ ಭದ್ರಾ ನದಿ ದಡದಲ್ಲಿರುವ ಶ್ರೀ ಬನಶಂಕರಿ ದೇವಸ್ಥಾನದಲ್ಲಿ ಪ್ರತಿ ವರ್ಷ ನಾಡಹಬ್ಬ ದಸರಾ ಆಚರಣೆ ವಿಜೃಂಭಣೆಯಿಂದ ಆಚರಿಸಿಕೊಂಡು ಬರಲಾಗುತ್ತಿದ್ದು, ಸೋಮವಾರ ಮಹಾಕಾಳಿ ಅಲಂಕಾರ ಕೈಗೊಳ್ಳಲಾಗಿತ್ತು. 
    ಭದ್ರಾವತಿ : ನಗರದ ಹೊಸಸೇತುವೆ ರಸ್ತೆಯ ಭದ್ರಾ ನದಿ ದಡದಲ್ಲಿರುವ ಶ್ರೀ ಬನಶಂಕರಿ ದೇವಸ್ಥಾನದಲ್ಲಿ ಪ್ರತಿ ವರ್ಷ ನಾಡಹಬ್ಬ ದಸರಾ ಆಚರಣೆ ವಿಜೃಂಭಣೆಯಿಂದ ಆಚರಿಸಿಕೊಂಡು ಬರಲಾಗುತ್ತಿದ್ದು, ಸೋಮವಾರ ಅಮ್ಮನವರಿಗೆ ಮಹಾಕಾಳಿ ಅಲಂಕಾರ ಕೈಗೊಳ್ಳಲಾಗಿತ್ತು. 
    ಪ್ರತಿ ದಿನ ನವದುರ್ಗಿಯರ ವಿಶೇಷ ಅಲಂಕಾರ ಭಕ್ತರ ಕಣ್ಮನ ಸೆಳೆಯುತ್ತಿದೆ. ಸಂಜೆ ವಿಶೇಷ ಪೂಜೆ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗು ಅನ್ನಸಂತರ್ಪಣೆ ನೆರವೇರಿಸಿಕೊಂಡು ಬರಲಾಗುತ್ತಿದೆ. 
ದೇವಸ್ಥಾನ ಸೇವಾ ಸಮಿತಿ ಹಾಗು ದೇವಾಂಗ ಸಮಾಜದ ಪ್ರಮುಖರು, ನಗರದ ದಾನಿಗಳು, ಸೇವಾಕರ್ತರು ಹಾಗು ಗಣ್ಯರು ಸೇರಿದಂತೆ ನಗರದ ವಿವಿಧೆಡೆಗಳಿಂದ ಭಕ್ತರು ಆಗಮಿಸಿ ಅಮ್ಮನವರ ಅಲಂಕಾರ ಕಣ್ತುಂಬಿಕೊಳ್ಳುತ್ತಿದ್ದಾರೆ. 

ಗಾಂಜಾ ಸೇವೆನೆ : ಪ್ರಕರಣ ದಾಖಲು

 ಸಾಂದರ್ಬಿಕ  ಚಿತ್ರ
    ಭದ್ರಾವತಿ: ನಗರದ ತರೀಕೆರೆ ರಸ್ತೆ ಗಾಂಧಿ ವೃತ್ತದ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸಿ ಅನುಮಾನಸ್ಪದವಾಗಿ ವರ್ತಿಸುತ್ತಿದ್ದ ವ್ಯಕ್ತಿಯೋರ್ವನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 
    ಹಳೇನಗರ ಪೊಲೀಸ್ ಠಾಣೆ ಉಪ ನಿರೀಕ್ಷಕ ಕೆ. ಚಂದ್ರಶೇಖರ್‌ರವರು ಅ.೫ರಂದು ರಾತ್ರಿ ೭ರ ಸಮಯದಲ್ಲಿ ಗಸ್ತಿನಲ್ಲಿದ್ದಾಗ ಅನುಮಾನಸ್ಪದವಾಗಿ ವರ್ತಿಸುತ್ತಿದ್ದ ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆದು ಆತನನ್ನು ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 

ಮನೆಯ ಪಕ್ಕದ ಖಾಲಿ ಸೈಟ್‌ನಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು



    ಭದ್ರಾವತಿ: ಮನೆಯ ಪಕ್ಕದ ಖಾಲಿ ಸೈಟ್‌ನಲ್ಲಿ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನ ಕಳವು ಮಾಡಿರುವ ಘಟನೆ ನಗರಸಭೆ ವ್ಯಾಪ್ತಿಯ ಭದ್ರಾ ಕಾಲೋನಿ ಕಣಕಟ್ಟೆಯಲ್ಲಿ ನಡೆದಿದೆ. 
    ಸ್ಪ್ಲೆಂಡರ್ ದ್ವಿಚಕ್ರ ವಾಹನ ಮನೆಯ ಪಕ್ಕದ ಖಾಲಿ ಸೈಟ್‌ನಲ್ಲಿ ರಾತ್ರಿ ೧೦.೩೦ ಸಮಯದಲ್ಲಿ ನಿಲ್ಲಿಸಿದ್ದು, ಬೆಳಿಗ್ಗೆ ೪ ಗಂಟೆ ಸಮಯದಲ್ಲಿ ನೋಡಿದಾಗ ಸ್ಥಳದಲ್ಲಿ ಇಲ್ಲದಿರುವುದು ಕಂಡು ಬಂದಿದೆ. ಈ ಸಂಬಂಧ ಸಿ.ಎಲ್ ಶಿವಲಿಂಗಪ್ಪ ಎಂಬುವರು ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. 

ನಿರಂತರ ಅಭ್ಯಾಸದಿಂದ ಉತ್ತಮ ಸಾಧನೆ : ಮಹೇಶ್ವರಪ್ಪ

ಭದ್ರಾವತಿ ಹಳೇನಗರದ ಕನಕಮಂಪ ಮೈದಾನದಲ್ಲಿ ನಾಡಹಬ್ಬ ದಸರಾ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಕುಸ್ತಿ ಪಂದ್ಯಾವಳಿ ಉದ್ಘಾಟಿಸಿ 
ಭದ್ರಾವತಿ: ಯಾವುದಾದರೂ ಗುರಿ ಹೊಂದಿ ನಿರಂತರ  ತೊಡಗಿದಾಗ ಮಾತ್ರ ಭವಿಷ್ಯದಲ್ಲಿ ಉತ್ತಮ ಸ್ಥಾನ ಪಡೆಯಲು ಸಾಧ್ಯ. ಕುಸ್ತಿಪಟುಗಳು ವರ್ಷದ ಎಲ್ಲಾ ದಿನ ಅಭ್ಯಾಸದಲ್ಲಿ ತೊಡಗಿಸಿಕೊಳ್ಳಬೇಕು. ಯಾರು ಬೇಕಾದರೂ ನಿರಂತರ ಅಭ್ಯಾಸದಲ್ಲಿ ತೊಡಗಿಸಿಕೊಂಡಾಗ ಉತ್ತಮ ಪ್ರದರ್ಶನ ನೀಡಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳಲು ಸಾಧ್ಯ ಎಂದು ಹಿರಿಯ ಕುಸ್ತಿಪಟು ಮಹೇಶ್ವರಪ್ಪ ಹೇಳಿದರು. 
ಅವರು ಸೋಮವಾರ ಹಳೇನಗರದ ಕನಕಮಂಪ ಮೈದಾನದಲ್ಲಿ ನಾಡಹಬ್ಬ ದಸರಾ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಕುಸ್ತಿ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು. 
ಕುಸ್ತಿಪಟುಗಳು ದೈಹಿಕವಾಗಿ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಜೊತೆಗೆ ಏಕಾಗ್ರತೆ, ಸಾಮರಸ್ಯ ಬೆಳೆಸಿಕೊಳ್ಳಬಹುದಾಗಿದೆ. ಕುಸ್ತಿ ಕ್ರೀಡೆಗೆ ಹೆಚ್ಚಿನ ಮಹತ್ವವಿದ್ದು, ಅಲ್ಲದೆ ಕುಸ್ತಿಪಟುಗಳಿಗೆ ಸಮಾಜದಲ್ಲಿ ಒಳ್ಳೆಯ ಸ್ಥಾನಮಾನವಿದೆ ಎಂದರು. 
ನಗರಸಭೆ ಅಧ್ಯಕ್ಷ ಎಂ. ಮಣಿ ಎಎನ್‌ಎಸ್, ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್, ದಸರಾ ನಾಡಹಬ್ಬ ಕ್ರೀಡಾ ಸಮಿತಿ ಅಧ್ಯಕ್ಷ ಚನ್ನಪ್ಪ, ನಾಡಹಬ್ಬ ದಸರಾ ಆಚಣೆ ವಿವಿಧ ಸಮಿತಿಗಳ ಅಧ್ಯಕ್ಷರು, ಸದಸ್ಯರು, ನಗರಸಭೆ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ಪೌರ ಸೇವಾ ಕಾರ್ಮಿಕರ ಸೇವಾ ಸಂಘದ ಅಧ್ಯಕ್ಷ ಚೇತನ್ ಕುಮಾರ್, ಆಶ್ರಯ ಸಮಿತಿ ಅಧ್ಯಕ್ಷ ಗೋಪಾಲ್ ಸೇರಿದಂತೆ ಇನ್ನಿತರರು. ಉಪಸ್ಥಿತರಿದ್ದರು. 
ನಗರದ ಹಿರಿಯ ಕುಸ್ತಿ ಪಟುಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಸಮುದಾಯ ಸಂಘಟನಾ ಅಧಿಕಾರಿ ಸುಹಾಸಿನಿ ಸ್ವಾಗತಿಸಿದರು. 
 

ವಿಐಎಸ್‌ಎಲ್ ಕಾರ್ಖಾನೆ ತಾಮ್ರದ ವೈಂಡಿಂಗ್ ವೈರ್ ಕಳ್ಳತನ ಪ್ರಕರಣ : ಇಬ್ಬರ ಸೆರೆ

ನ್ಯೂಟೌನ್ ಪೊಲೀಸರ ಕಾರ್ಯಾಚರಣೆ, ೧,೩೬,೫೦೦ ಮೌಲ್ಯದ ಸ್ವತ್ತು ವಶ

ಭದ್ರಾವತಿ ನಗರದ ವಿಐಎಸ್‌ಎಲ್ ಕಾರ್ಖಾನೆಯಲ್ಲಿ ತಾಮ್ರದ ವೈಂಡಿಂಗ್ ವೈರ್ ಕಳ್ಳತನ ಮಾಡಿದ್ದ ಇಬ್ಬರು ಕಳ್ಳರನ್ನು ಬಂಧಿಸುವಲ್ಲಿ ನ್ಯೂಟೌನ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. 
   ಭದ್ರಾವತಿ: ನಗರದ ವಿಐಎಸ್‌ಎಲ್ ಕಾರ್ಖಾನೆಯಲ್ಲಿ ತಾಮ್ರದ ವೈಂಡಿಂಗ್ ವೈರ್ ಕಳ್ಳತನ ಮಾಡಿದ್ದ ಇಬ್ಬರು ಕಳ್ಳರನ್ನು ಬಂಧಿಸುವಲ್ಲಿ ನ್ಯೂಟೌನ್ ಠಾಣೆ  ಪೊಲೀಸರು ಯಶಸ್ವಿಯಾಗಿದ್ದಾರೆ. 
    ಹೊಸ ಕೋಡಿಹಳ್ಳಿ ಗ್ರಾಮ ದೇವರನರಸೀಪುರದ ನಿವಾಸಿ ವೆಂಕಟೇಶ ಅಲಿಯಾಸ್ ಬುಡ್ಡಾ(೨೯) ಹಾಗೂ ಎಕ್ಸಿನಾ ಕಾಲೋನಿ ನಿವಾಸಿ ಮುನೀರ್ ಜಾನ್ ಅಲಿಯಾಸ್ ತಿಕಲ(೩೬) ಇಬ್ಬರನ್ನು ಬಂಧಿಸಿ ಕಳ್ಳತನ ಮಾಡಲಾಗಿದ್ದ ತಾಮ್ರದ ತಂತಿ, ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನ ಮತ್ತು ಆಟೋ ಸೇರಿದಂತೆ ಒಟ್ಟು ೧,೩೬,೫೦೦ ರು. ಮೌಲ್ಯದ ಸ್ವತ್ತು ವಶಪಡಿಸಿಕೊಂಡಿದ್ದಾರೆ.
  ಪೊಲೀಸ್ ಉಪಾಧೀಕ್ಷಕ ಕೆ.ಆರ್ ನಾಗರಾಜು ಮಾರ್ಗದರ್ಶನದಲ್ಲಿ ನಗರ ವೃತ್ತ ನಿರೀಕ್ಷಕ ಶ್ರೀಶೈಲಕುಮಾರ್ ನೇತೃತ್ವದಲ್ಲಿ ನ್ಯೂಟೌನ್ ಪೊಲೀಸ್ ಠಾಣೆ ಉಪ ನಿರೀಕ್ಷಕ ಟಿ.ಪಿ ರಮೇಶ್, ಸಿಬ್ಬಂದಿಗಳಾದ ಮಂಜಪ್ಪ, ನವೀನ್ ಮತ್ತು ಪ್ರಸನ್ನರವರನ್ನೊಳಗೊಂಡ ತಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು.  
     ಸೆ. ೮ ರಂದು ರಾತ್ರಿ  ಕಾರ್ಖಾನೆಯ ಸೆಂಟ್ರಲ್ ಎಲೆಕ್ಟ್ರಿಕಲ್ ವರ್ಕ್ ಶಾಪ್‌ನಲ್ಲಿ ರಿಪೇರಿ ಮಾಡಲು ತಂದಿದ್ದ, ವೆಲ್ಡಿಂಗ್ ಮಷಿನ್‌ನಲ್ಲಿದ್ದ ೩೫,೦೦೦ ತಾಮ್ರದ ವೈಂಡಿಂಗ್‌ಗಳನ್ನು ಕಳವು ಮಾಡಲಾಗಿತ್ತು. ಈ ಸಂಬಂಧ ಕಾರ್ಖಾನೆಯ ಭದ್ರತಾ ವಿಭಾಗದ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದರು.

Sunday, October 6, 2024

ದಸರಾ ಅಡುಗೆ ಸ್ಪರ್ಧೆ : ಬಂಟರ ಮಹಿಳಾ ವೇದಿಕೆ ಮೊದಲ ಬಹುಮಾನ

ಭದ್ರಾವತಿಯಲ್ಲಿ ನಾಡಹಬ್ಬ ದಸರಾ ಅಂಗವಾಗಿ ಭಾನುವಾರ ನಗರದ ಬಂಟರ ಭವನದಲ್ಲಿ ಆಯೋಜಿಸಲಾಗಿದ್ದ ಬೆಂಕಿ ರಹಿತ ಅಡುಗೆ ಸ್ಪರ್ಧೆಯಲ್ಲಿ ಬಂಟರ ಮಹಿಳಾ ವೇದಿಕೆ ಮೊದಲ ಬಹುಮಾನ ಪಡೆದುಕೊಂಡಿತು. 
    ಭದ್ರಾವತಿ : ನಾಡಹಬ್ಬ ದಸರಾ ಅಂಗವಾಗಿ ಭಾನುವಾರ ನಗರದ ಬಂಟರ ಭವನದಲ್ಲಿ ಆಯೋಜಿಸಲಾಗಿದ್ದ ಬೆಂಕಿ ರಹಿತ ಅಡುಗೆ ಸ್ಪರ್ಧೆಯಲ್ಲಿ ಬಂಟರ ಮಹಿಳಾ ವೇದಿಕೆ ಮೊದಲ ಬಹುಮಾನ ಪಡೆದುಕೊಂಡಿತು. 
    ಪ್ರತಿವರ್ಷ ನಾಡಹಬ್ಬ ಅಂಗವಾಗಿ ಅಡುಗೆ ಸ್ಪರ್ಧೆ ಆಯೋಜಿಸಿಕೊಂಡು ಬರಲಾಗುತ್ತಿದ್ದು, ಈ ಬಾರಿ ಸ್ಪರ್ಧೆಯಲ್ಲಿ ಸುಮಾರು ೨೨ ಮಹಿಳಾ ತಂಡಗಳು ಪಾಲ್ಗೊಂಡಿದ್ದವು. ಈ ಪೈಕಿ ಮೊದಲ ಬಹುಮಾನ ಬಂಟರ ಮಹಿಳಾ ವೇದಿಕೆ, ೨ನೇ ಬಹುಮಾನ ಭೂತನಗುಡಿ ಸೂರ್ಯನಾರಾಯಣ ಸ್ವಸಹಾಯ ಸಂಘ ಹಾಗು ತೃತೀಯ ಬಹುಮಾನ ಸಿದ್ದರೂಢನಗರದ ಸಾಧನ ಯೋಗ ಕೇಂದ್ರ ಪಡೆದುಕೊಂಡಿತು. 
    ಮೊದಲ ಬಹುಮಾನ ೩ ಸಾವಿರ ರು. ನಗದು, ಪ್ರಶಸ್ತಿ ಪತ್ರ, ಎರಡನೇ ಬಹುಮಾನ ೨ ಸಾವಿರ ರು. ನಗದು, ಪ್ರಶಸ್ತಿ ಪತ್ರ ಹಾಗು ಮೂರನೇ ಬಹುಮಾನ ೧ ಸಾವಿರ ರು. ನಗದು, ಪ್ರಶಸ್ತಿ ಪತ್ರ ನೀಡಲಾಯಿತು. 
    ಸ್ಪರ್ಧೆಯನ್ನು ಬಿ.ಎಚ್ ರಸ್ತೆ ದುರ್ಗಾ ನರ್ಸಿಂಗ್ ಹೋಂ ತಜ್ಞ ವೈದ್ಯೆ ಡಾ. ಅಶಿತಾ ಉದ್ಘಾಟಿಸಿದರು. ನಗರಸಭೆ ಅಧ್ಯಕ್ಷ ಎಂ. ಮಣಿ ಎಎನ್‌ಎಸ್, ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್, ಹಿರಿಯ ಸದಸ್ಯ ಬಿ.ಕೆ ಮೋಹನ್, ಆಶ್ರಯ ಸಮಿತಿ ಅಧ್ಯಕ್ಷ ಗೋಪಾಲ್, ದಸರಾ ಆಚರಣೆ ವಿವಿಧ ಸಮಿತಿಗಳ ಅಧ್ಯಕ್ಷರು, ಸದಸ್ಯರು, ಸಮುದಾಯ ಸಂಘಟನಾ ಅಧಿಕಾರಿ ಸುಹಾಸಿನಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಜ್ಞಾನದೀಪಿಕಾ ಶಾಲೆಯ ಬಾಲಕಿಯರು ವಿಭಾಗಮಟ್ಟಕ್ಕೆ ಆಯ್ಕೆ


ಭದ್ರಾವತಿ ತಾಲೂಕಿನ ಯರೇಹಳ್ಳಿಯ ಜ್ಞಾನ ದೀಪಿಕಾ ಅನುದಾನಿತ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರು ಶನಿವಾರ ಜರುಗಿದ ೨೦೨೪-೨೫ನೇ ಸಾಲಿನ ಜಿಲ್ಲಾ ಮಟ್ಟದ ಕ್ರೀಡಾಕೂಟದ ೧೪ ವರ್ಷದೊಳಗಿನ ಖೋ-ಖೋ ಕ್ರೀಡೆಯಲ್ಲಿ ಪ್ರಥಮ ಸ್ಥಾನದೊಂದಿಗೆ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 
    ಭದ್ರಾವತಿ: ತಾಲೂಕಿನ ಯರೇಹಳ್ಳಿಯ ಜ್ಞಾನ ದೀಪಿಕಾ ಅನುದಾನಿತ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರು ಶನಿವಾರ ಜರುಗಿದ ೨೦೨೪-೨೫ನೇ ಸಾಲಿನ ಜಿಲ್ಲಾ ಮಟ್ಟದ ಕ್ರೀಡಾಕೂಟದ ೧೪ ವರ್ಷದೊಳಗಿನ ಖೋ-ಖೋ ಕ್ರೀಡೆಯಲ್ಲಿ ಪ್ರಥಮ ಸ್ಥಾನದೊಂದಿಗೆ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 
    ಸಿ. ಅರ್ಪಿತ ೧೦೦ ಮೀ. ಓಟದಲ್ಲಿ ಪ್ರಥಮ, ೬೦೦ ಮೀ. ತೃತೀಯ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದು, ಈ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಜಿಲ್ಲಾ ಉಪನಿರ್ದೇಶಕ(ಆಡಳಿತ) ಎಸ್.ಆರ್ ಮಂಜುನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿ ಮಂಜುಳಾ ರಾಜಶೇಖರ್. ಮುಖ್ಯ ಶಿಕ್ಷಕರು ಮತ್ತು ಸಹ ಶಿಕ್ಷಕರು, ತರಬೇತುದಾರ ಸುನಿಲ್ ರಾವ್ ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.