Tuesday, October 22, 2024

ಇಆರ್‌ವಿ ಅಧಿಕಾರಿಗಳಿಂದ ಆತ್ಮಹತ್ಯೆಗೆ ಯತ್ನಿಸಿದ ವೃದ್ಧ ಮಹಿಳೆ ರಕ್ಷಣೆ

    ಭದ್ರಾವತಿ : ನಗರದ ಹೊಸಸೇತುವೆ ಬಳಿ ಕೌಟುಂಬಿಕ ಸಮಸ್ಯೆಯಿಂದ ಆತ್ಮಹತ್ಯೆಗೆ ಯತ್ನಿಸಿದ ವೃದ್ಧ ಮಹಿಳೆಯೊಬ್ಬರನ್ನು ಇಆರ್‌ವಿ ಅಧಿಕಾರಿಗಳು ರಕ್ಷಿಸಿರುವ ಘಟನೆ ೨ ದಿನಗಳ ಹಿಂದೆ ನಡೆದಿದೆ. 
    ಹೊಸಸೇತುವೆ ಬಳಿ ವೃದ್ಧ ಮಹಿಳೆಯೊಬ್ಬರು ಭದ್ರಾ ನದಿಯಲ್ಲಿ ನೀರಿನಲ್ಲಿ ಮುಳುಗಿ ಆತ್ಮಹತ್ಯೆಗೆ ಯತ್ನಿಸಿದ್ದು, ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಇಆರ್‌ವಿ ಅಧಿಕಾರಿಗಳಾದ ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆ ಸಿಬ್ಬಂದಿ ಬಿನೇಶ್ ಹಾಗು ಶಿವಮೊಗ್ಗ ಡಿಎಆರ್ ಸಿಬ್ಬಂದಿ ಚಾಲಕ ಶಿವಶರಣರವರು ಸ್ಥಳೀಯರ ನೆರವಿನೊಂದಿಗೆ ಮಹಿಳೆಯನ್ನು ರಕ್ಷಿಸಿದ್ದಾರೆ. ನಂತರ ಆತ್ಮಹತ್ಯೆಗೆ ಯತ್ನಿಸಲು ಕಾರಣ ತಿಳಿದು ಸಮಾಧಾನಪಡಿಸಿ ಕರೆ ತಂದಿದ್ದಾರೆ. ಬಿನೇಶ್ ಹಾಗು ಶಿವಶರಣರವರ ಕಾರ್ಯವನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್ ಪ್ರಶಂಸಿಸಿದೆ. 
 

ಭದ್ರಾವತಿ ನಗರದ ಹೊಸಸೇತುವೆ ಬಳಿ ಕೌಟುಂಬಿಕ ಸಮಸ್ಯೆಯಿಂದ ಆತ್ಮಹತ್ಯೆಗೆ ಯತ್ನಿಸಿದ ವೃದ್ಧ ಮಹಿಳೆಯೊಬ್ಬರನ್ನು ಇಆರ್‌ವಿ ಅಧಿಕಾರಿಗಳು ರಕ್ಷಿಸಿರುವ ಘಟನೆ ೨ ದಿನಗಳ ಹಿಂದೆ ನಡೆದಿದೆ. 

Monday, October 21, 2024

ಬೊಮ್ಮನಕಟ್ಟೆಯಲ್ಲಿ ಓ.ಸಿ, ಮಟ್ಕಾ ಜೂಜಾಟ : ಪ್ರಕರಣ ದಾಖಲು


    ಭದ್ರಾವತಿ : ಮಸೀದಿಯೊಂದರ ಮುಂದಿನ ರಸ್ತೆಯಲ್ಲಿ ಕಾನೂನು ಬಾಹಿರವಾಗಿ ಹಣ ಸಂಗ್ರಹಿಸಿ ಓ.ಸಿ, ಮಟ್ಕಾ ಜೂಜಾಟದಲ್ಲಿ ತೊಡಗಿದ್ದ ವ್ಯಕ್ತಿಯೋರ್ವನ ವಿರುದ್ಧ ಪ್ರಕರಣ ದಾಖಲಾಗಿದೆ. 
    ಪೇಪರ್‌ಟೌನ್ ಪೊಲೀಸ್ ಠಾಣೆ ಸಿಬ್ಬಂದಿ ಎಸ್.ಎಲ್ ಭರತ್ ಅ.೨೦ರಂದು ಗಸ್ತು ಕರ್ತವ್ಯದಲ್ಲಿದ್ದಾಗ ಖಚಿತ ಮಾಹಿತಿ ಮೇರೆಗೆ ಬೊಮ್ಮನಕಟ್ಟೆ ಕೂಬಾ ಮಸೀದಿ ಮುಂದಿನ ರಸ್ತೆಯಲ್ಲಿ ಪರಿಶೀಲನೆ ನಡೆಸಿದಾಗ ವ್ಯಕ್ತಿಯೋರ್ವ ಓ.ಸಿ, ಮಟ್ಕಾ ಜೂಜಾಟದಲ್ಲಿ ತೊಡಗಿರುವುದು ಕಂಡು ಬಂದಿದೆ. ಈ ಹಿನ್ನಲೆಯಲ್ಲಿ ನ್ಯಾಯಾಲಯದ ಅನುಮತಿ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಓ.ಸಿ, ಮಟ್ಕಾ ಜೂಜಾಟ : ಪ್ರಕರಣ ದಾಖಲು



ಭದ್ರಾವತಿ : ರಸ್ತೆ ಪಕ್ಕದಲ್ಲಿ ಓ.ಸಿ, ಮಟ್ಕಾ ಜೂಜಾಟದಲ್ಲಿ ತೊಡಗಿದ್ದ ವ್ಯಕ್ತಿಯೋರ್ವನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ನಡೆದಿದೆ.
ಹಳೇನಗರ ಪೊಲೀಸ್ ಠಾಣೆ ಸಿಬ್ಬಂದಿ ಪ್ರವೀಣ್‌ರವರು ಅ.೧೯ರಂದು ಗಸ್ತು ಕರ್ತವ್ಯದಲ್ಲಿದ್ದಾಗ ಸಂಜೆ ಖಚಿತ ಮಾಹಿತಿ ಮೇರೆಗೆ ನಗರದ ಗುಂಡಪ್ಪ ಶೆಡ್ ರಸ್ತೆ ಪಕ್ಕದಲ್ಲಿ ಪರಿಶೀಲನೆ ನಡೆಸಿದಾಗ ವ್ಯಕ್ತಿಯೋರ್ವ ಓ.ಸಿ, ಮಟ್ಕಾ ಜೂಜಾಟದಲ್ಲಿ ತೊಡಗಿರುವುದು ಕಂಡು ಬಂದಿದೆ. ಈ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 

ಮಾದಕ ವಸ್ತು ಗಾಂಜಾ ಸೇವನೆ : ಪ್ರಕರಣ ದಾಖಲು

    

    ಭದ್ರಾವತಿ : ಹೊಸಮನೆ ಸಂತೆ ಮೈದಾನ ಏರಿಯಾದಲ್ಲಿ ಮಾದಕ ವಸ್ತು ಸೇವನೆ ಮಾಡಿ ಅಮಲಿನಿಂದ ವರ್ತಿಸುತ್ತಿದ್ದ ವ್ಯಕ್ತಿಯೋರ್ವನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 
    ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆ ಸಿಬ್ಬಂದಿ ಹಣಮಂತ ಅಮಾತಿ ಅ.೧೯ರಂದು ಗಸ್ತು ಕರ್ತವ್ಯದಲ್ಲಿದ್ದಾಗ ವ್ಯಕ್ತಿಯೋರ್ವ ಅಮಲಿನಿಂದ ವರ್ತಿಸುತ್ತಿರುವುದು ಕಂಡು ಬಂದಿದ್ದು, ಈತ ಸಾರ್ವಜನಿಕರಿಗೆ ತೊಂದರೆ ನೀಡಬಹುದೆಂಬ ಅನುಮಾನದ ಮೇರೆಗೆ ವಶಕ್ಕೆ ಪಡೆದು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ತಪಾಸಣೆಗೊಳಪಡಿಸಲಾಗಿ ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಈತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಸಮಾಜ ಸೇವಾ ಕಾರ್ಯ ಮೂಲಕ ಸ್ವಾಸ್ಥ್ಯ ಸಮಾಜ ನಿರ್ಮಾಣ

ಆರ್‌ಎಸ್‌ಎಸ್ ಮೂಲ ಉದ್ದೇಶ : ಅರಳಿಹಳ್ಳಿ ಪ್ರಕಾಶ್ 


ಭದ್ರಾವತಿಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್)ದ ವತಿಯಿಂದ ವಿಜಯ ದಶಮಿ ಅಂಗವಾಗಿ ಪಥ ಸಂಚಲನ ನಡೆಯಿತು. 
    ಭದ್ರಾವತಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್) ಪ್ರಾರಂಭವಾದ ಅಂದಿನಿಂದ ಇಂದಿನವರೆಗೆ ಅನೇಕ ರೀತಿಯ ಹಲವಾರು ಸವಾಲು, ಸಮಸ್ಯೆಗಳನ್ನು ದಿಟ್ಟವಾಗಿ ಎದುರಿಸಿಕೊಂಡು ತನ್ನ ಸೇವಾ ಕಾರ್ಯದ ಮೂಲಕ ನಿರಂತರವಾಗಿ ವಿಸ್ತರಿಸಿ ಬೆಳೆದುಕೊಂಡು ಬಂದಿದೆ ಎಂದು ಸಂಘದ ವಿಭಾಗ ಶಾರೀರಿಕ್ ಪ್ರಮುಖ್ ಅರಳಿಹಳ್ಳಿ ಪ್ರಕಾಶ್ ಹೇಳಿದರು.
    ಅವರು ವಿಜಯ ದಶಮಿ ಅಂಗವಾಗಿ ನಗರದಲ್ಲಿ ಏರ್ಪಡಿಸಲಾಗಿದ್ದ ಪಥ ಸಂಚಲನದಲ್ಲಿ ಪಾಲ್ಗೊಂಡು ನಂತರ ಹಳೇನಗರದ ಶ್ರೀ ವೀರಶೈವ ಸಭಾ ಭವನದಲ್ಲಿ ಜರುಗಿದ ಸಂಘದ ಶತಮಾನೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.  
    ಸಂಘದ ಮೂಲ ಉದ್ದೆಶ ಸಮಾಜ ಸೇವಾ ಕಾರ್ಯ. ಅದಕ್ಕಾಗಿ ಶಾಖೆಯ ಮೂಲಕ ವ್ಯಕ್ತಿ ನಿರ್ಮಾಣ ಮಾಡುವ ಮೂಲಕ ರಾಷ್ಟ್ರ ನಿರ್ಮಾಣ ಮಾಡುವ ಕಾರ್ಯವನ್ನು ಮಾಡುತ್ತಿದೆ. ವ್ಯಕ್ತಿ ಉತ್ತಮ ವ್ಯಕ್ತಿಯಾದಾಗ ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ಉತ್ತಮ ವ್ಯಕ್ತಿಗಳನ್ನು ಸಮಾಜದಲ್ಲಿ ತಯಾರು ಮಾಡುತ್ತಿದೆ ಎಂದರು.
    ಸಂಘವು ಪ್ರಾರಂಭ ಆದ ಅಂದಿನಿಂದ ಇಂದಿನವರೆಗೆ ಸಮಾಜದ ಯಾವ ಕ್ಷೇತ್ರವನ್ನೂ ಬಿಡದೆ ಎಲ್ಲಾ ಕ್ಷೇತ್ರಗಳಲ್ಲೂ ತನ್ನ ಸೇವಾ ಚಟುವಟಿಕೆ ಕಾರ್ಯಗಳನ್ನು ಮಾಡುತ್ತಾ ಬಂದಿದೆ. ದೇಶಕ್ಕೆ ಸಂಕಷ್ಟ ಎದುರಾದಾಗ ಸಂಘವು ದೇಶದ ಬೆನ್ನೆಲುಬಾಗಿ ನಿಂತಿದೆ. ಅದು ಯಾವುದೇ ರೀತಿಯದ್ದಾಗಿರಬಹುದು ಪ್ರಕೃತಿವಿಕೋಪ, ನೆರೆಹಾವಳಿ, ಬರ, ಯುದ್ಧ ಸನ್ನಿವೇಶ ಇತ್ಯಾದಿಗಳು. ತುರ್ತು ಪರಿಸ್ಥಿತಿಯಲ್ಲಿ ಪ್ರಜಾಪ್ರಭುತ್ವದ ಉಳಿವಿಗಾಗಿ ಹೋರಾಟ ಮಾಡಿರುವುದನ್ನು ಸ್ಮರಿಸಿದರು.
    ಸಮಾಜದಲ್ಲಿ ಐದು ಪರಿವರ್ತನೆಗಳನ್ನು ತರಲು ಸಂಘ ಉದ್ದೇಶಿಸಿ ಅದರಂತೆ ಕಾರ್ಯೋನ್ಮುಖವಾಗುತ್ತಿದೆ. ಜಾತಿ ಮನೆಗಳು ಹೋಗಿ ಹಿಂದೂ ಮನೆಗಳಾಗಬೇಕು. ಎಲ್ಲ್ಲರ ಜೊತೆ ಸಮಾಜದಲ್ಲಿ ಸಾಮರಸ್ಯ ನಿರ್ಮಾಣ ಮಾಡಬೇಕು. ಸ್ವದೇಶಿ ಚಿಂತನೆಯನ್ನು ಅಳವಡಿಸಿಕೊಳ್ಳಬೇಕು ಹಾಗು ಅದನ್ನು ಅನುಷ್ಟಾನಕ್ಕೆ ತರಬೇಕು. ನಾಗರೀಕ ಶಿಷ್ಟಾಚಾರದೊಂದಿಗೆ ಸಂವಿಧಾನದ ನಿಯಮದಂತೆ ನಡೆದುಕೊಳ್ಳಬೇಕು. ಸಂಘದ ಕಾರ್ಯ ಚಟುವಟಿಕೆಗಳನ್ನು ಹಂತ ಹಂತವಾಗಿ ಹೆಚ್ಚುತ್ತಾ ವಿಸ್ತರಿಸಬೇಕು. ಅದಕ್ಕೆ ತಕ್ಕುದಾಗಿ ಸ್ವಯಂ ಸೇವಕರನ್ನು ತಯಾರು ಮಾಡಿ ಅವರ ಮೂಲಕ ಸಮಾಜದಲ್ಲಿ ನಾವು ಬಯಸಿದ ಬದಲಾವಣೆಯನ್ನು ತರಬೇಕು. ಇದು ಪ್ರತಿಯೊಬ್ಬ ಸ್ವಯಂ ಸೇವಕರ ಜವಾಬ್ದಾರಿ ಕರ್ತವ್ಯವಾಗಿದೆ ಎಂದರು. ನಗರ ಸಂಘ ಚಾಲಕ್ ಬಿ.ಎಚ್ ಶಿವಕುಮಾರ್ ಉಪಸ್ಥಿತಿರಿದ್ದರು.
    ಇದಕ್ಕೂ ಮೊದಲು ಹಳೇನಗರದ ಕಂಚಿನಬಾಗಿಲು ಕೋಟೆ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಆಕರ್ಷಕ ಗಣವೇಶಧಾರಿ ಸ್ವಯಂ ಸೇವಕರ ಪಥ ಸಂಚಲನ ಆರಂಭಗೊಂಡು ತಾಲೂಕು ಕಚೇರಿ ರಸ್ತೆ, ರಂಗಪ್ಪ ವೃತ್ತ, ಡಾ. ರಾಜ್‌ಕುಮಾರ್ ರಸ್ತೆ,  ಮಾಧವಾಚಾರ್ ವೃತ್ತ, ಎನ್‌ಎಸ್‌ಟಿ ರಸ್ತೆ, ವಾಸವಿ ಮಹಲ್ ರಸ್ತೆ, ಬಸವೇಶ್ವರ ವೃತ್ತ, ಕುಂಬಾರರ ಬೀದಿ, ಉಪ್ಪಾರ ಬೀದಿ, ಶ್ರೀ ಹಳದಮ್ಮ ದೇವಿ ಬೀದಿ, ನಂತರ ಹೊಸ ಸೇತುವೆ ರಸ್ತೆಯಲ್ಲಿ ಸಾಗಿ ಕಂಚಿನ ಬಾಗಿಲು ವೃತ್ತದ ಮೂಲಕ ಶ್ರೀ ವೀರಶೈವ ಸಭಾಭವನ ತಲುಪಿತು. 

ಶ್ರೀ ಅಂಗಾಳ ಪರಮೇಶ್ವರಿ, ಮುನೇಶ್ವರ ಸ್ವಾಮಿ ವಿಗ್ರಹಗಳ ಪ್ರತಿಷ್ಠಾಪನೆ

ಭದ್ರಾವತಿ ನಗರದ ಜನ್ನಾಪುರ ಗಣೇಶ್ ಕಾಲೋನಿ, ಹಾಲಪ್ಪ ಶೆಡ್‌ನಲ್ಲಿ ಶ್ರೀ ಅಂಗಾಳ ಪರಮೇಶ್ವರಿ ದೇವಸ್ಥಾನದಲ್ಲಿ ಅಮ್ಮನವರ ಹಾಗು ಮುನೇಶ್ವರ ಸ್ವಾಮಿಯ ವಿಗ್ರಹ ಪ್ರತಿಷ್ಠಾಪನೆ, ಕುಂಭಾಭಿಷೇಕ ಸೋಮವಾರ ವಿಜೃಂಭಣೆಯಿಂದ ಜರುಗಿತು.  
    ಭದ್ರಾವತಿ: ನಗರದ ಜನ್ನಾಪುರ ಗಣೇಶ್ ಕಾಲೋನಿ, ಹಾಲಪ್ಪ ಶೆಡ್‌ನಲ್ಲಿ ಶ್ರೀ ಅಂಗಾಳ ಪರಮೇಶ್ವರಿ ದೇವಸ್ಥಾನದಲ್ಲಿ ಅಮ್ಮನವರ ಹಾಗು ಮುನೇಶ್ವರ ಸ್ವಾಮಿಯ ವಿಗ್ರಹ ಪ್ರತಿಷ್ಠಾಪನೆ, ಕುಂಭಾಭಿಷೇಕ ಸೋಮವಾರ ವಿಜೃಂಭಣೆಯಿಂದ ಜರುಗಿತು.  
ಬೆಳಗಿನ ಜಾವ ಗಣಹೋಮ, ಆದಿವಾಸಿ ಹೋಮ, ಕಲಾ ಹೋಮ ನಡೆಯಲಿದ್ದು, ನಂತರ ಮಲ್ಲೇಶ್ವರ ಸಭಾಭವನ ಪಕ್ಕದ ಶ್ರೀ ಈಶ್ವರ ದೇವಾಲಯದಿಂದ ಗಂಗೆ ಪೂಜೆಯನ್ನು ೧೦೧ ಗಂಗೆ ತುಂಬಿದ ಕಲಶಗಳನ್ನು ಹೊತ್ತು ತಂದು ಅಮ್ಮನವರ ಹಾಗು ಮುನೇಶ್ವರ ಸ್ವಾಮಿಯವರ ವಿಗ್ರಹಗಳನ್ನು ಪ್ರತಿಷ್ಠಾಪಿಸಿ, ನಂತರ ಕಲಶದ ನೀರಿನಿಂದ ಅಭಿಷೇಕ ನಡೆಸಲಾಯಿತು.  ಅಮ್ಮನವರಿಗೂ ಹಾಗು ಮುನೇಶ್ವರ ಸ್ವಾಮಿಯವರಿಗೂ ಅಲಂಕಾರ ಮಾಡಿ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗದೊಂದಿಗೆ ದೇವಾಲಯ ಲೋಕಾರ್ಪಣೆಗೊಳಿಸಲಾಯಿತು. ಮಧ್ಯಾಹ್ನ ಅನ್ನಸಂತರ್ಪಣೆ ನೆರವೇರಿತು. 
ಕ್ರೇನ್ ಮೂಲಕ ಬೃಹತ್ ಹೂವಿನ ಹಾರ ಅರ್ಪಣೆ :
ವಿಗ್ರಹ ಪ್ರತಿಷ್ಠಾಪನೆ ನಂತರ ಬೃಹತ್ ಹೂವಿನ ಹಾರ ವ್ಯಾದಗಳೊಂದಿಗೆ ಕ್ರೇನ್ ಮೂಲಕ ಮೆರವಣಿಗೆಯಲ್ಲಿ ತಂದು ಅಮ್ಮನವರಿಗೆ ಮತ್ತು ಮುನೇಶ್ವರ ಸ್ವಾಮಿಯವರಿಗೆ ಅರ್ಪಿಸಲಾಯಿತು. ಮೆರವಣಿಗೆಯಲ್ಲಿ ವಯೋವೃದ್ಧರು, ಮಹಿಳೆಯರು, ಯುವಕರು, ಯುವತಿಯರು, ಮಕ್ಕಳು ಕುಣಿದು ಸಂಭ್ರಮಿಸಿದರು. 
ದೇವಸ್ಥಾನದ ಪ್ರಧಾನ ಅರ್ಚಕ ರಮೇಶ್ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. ದೇವಸ್ಥಾನದ ಪ್ರಮುಖರಾದ ಅಧ್ಯಕ್ಷ ವಿಕಾಸ್ ರಾಜ್, ಖಜಾಂಚಿ ಮೋಹನ್ ಕುಮಾರ್, ಕಾರ್ಯದರ್ಶಿ ಆಕಾಶ್, ಸಾಗರ್, ಕೇಶವ ಬಾಬು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್, ಜನ್ನಾಪುರ, ಗಣೇಶ್ ಕಾಲೋನಿ, ಹಾಲಪ್ಪ ಶೆಡ್ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳ ಭಕ್ತರು ಪಾಲ್ಗೊಂಡಿದ್ದರು.  
 

ಭದ್ರಾವತಿ ನಗರದ ಜನ್ನಾಪುರ ಗಣೇಶ್ ಕಾಲೋನಿ, ಹಾಲಪ್ಪ ಶೆಡ್‌ನಲ್ಲಿ ಶ್ರೀ ಅಂಗಾಳ ಪರಮೇಶ್ವರಿ ದೇವಸ್ಥಾನದಲ್ಲಿ ಅಮ್ಮನವರ ಹಾಗು ಮುನೇಶ್ವರ ಸ್ವಾಮಿಯ ವಿಗ್ರಹ ಪ್ರತಿಷ್ಠಾಪನೆ, ಕುಂಭಾಭಿಷೇಕ ಸೋಮವಾರ ವಿಜೃಂಭಣೆಯಿಂದ ಜರುಗಿತು.  ವಿಗ್ರಹ ಪ್ರತಿಷ್ಠಾಪನೆ ನಂತರ ಬೃಹತ್ ಹೂವಿನ ಹಾರ ವ್ಯಾದಗಳೊಂದಿಗೆ ಕ್ರೇನ್ ಮೂಲಕ ಮೆರವಣಿಗೆಯಲ್ಲಿ ತಂದು ಅಮ್ಮನವರಿಗೆ ಮತ್ತು ಮುನೇಶ್ವರ ಸ್ವಾಮಿಯವರಿಗೆ ಅರ್ಪಿಸಲಾಯಿತು.

Sunday, October 20, 2024

ಭಾರಿ ಮಳೆಯಿಂದ ಹಲವು ಸಮಸ್ಯೆ : ರೈತರಿಗೆ ಭತ್ತದ ಬೆಳೆ ಹಾನಿ, ತಗ್ಗು ಪ್ರದೇಶದ ನಿವಾಸಿಗಳಿಗೆ ನೀರು ನುಗ್ಗುವ ಆತಂಕ

ಭದ್ರಾ ಜಲಾಶಯದಿಂದ ನದಿಗೆ ನೀರು ಬಿಡುಗಡೆಗೊಳಿಸಿರುವ ಹಿನ್ನಲೆಯಲ್ಲಿ ಕೆಲವು ದಿನಗಳಿಂದ ನಗರದ ಹಳೇ ಸೇತುವೆ ಸಮೀಪದ ಭದ್ರಾ ನದಿಯಲ್ಲಿರುವ ಸಂಗಮೇಶ್ವರ ದೇವಸ್ಥಾನ ಮುಳುಗಡೆಗೊಂಡಿರುವುದು. 
    ಭದ್ರಾವತಿ: ಕಳೆದ ಕೆಲವು ದಿನಗಳಿಂದ ಕ್ಷೇತ್ರದಾದ್ಯಂತ ಪುನಃ ಮಳೆಯಾಗುತ್ತಿದ್ದು, ಇದರಿಂದ ಕೊಯ್ಲು ಹಂತಕ್ಕೆ ಬಂದಿರುವ ಭತ್ತದ ಬೆಳೆಗೆ ಒಂದೆಡೆ ಹಾನಿಯಾಗುವ ಭೀತಿ, ಮತ್ತೊಂದೆಡೆ ಅಡಕೆ ಒಣಗಿಸಲು ಬಿಸಿಲಿನ ಕೊರತೆ ಎದುರಾಗಿದೆ. 
    ಕ್ಷೇತ್ರದಾದ್ಯಂತ ಹೆಚ್ಚಿನ ಪ್ರಮಾಣದಲ್ಲಿ ಭತ್ತ ಬೆಳೆಯಲಾಗಿದ್ದು, ಈಗಾಗಲೇ ಭತ್ತದ ಬೆಳೆ ಕಾಳು ಕಟ್ಟಿ ಕಟಾವು ಹಂತ ತಲುಪಿದೆ. ಈ ಹಂತದಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಇದರಿಂದಾಗಿ ಬೆಳೆ ನೀರಿನಲ್ಲಿ ಕೊಚ್ಚಿಹೋಗಿ ನಾಶವಾಗುವ ಸ್ಥಿತಿ ನಿರ್ಮಾಣಗೊಂಡಿದೆ. ಮಳೆ ಇದೆ ರೀತಿ ಮುಂದುವರೆದಲ್ಲಿ ರೈತರಿಗೆ ಕೈಗೆ ಬಂದದ್ದು, ಬಾಯಿಗೆ ಸಿಗಲಿಲ್ಲ ಎಂಬಂತಾಗಲಿದೆ. 
    ಮತ್ತೊಂದೆಡೆ ಅಡಕೆ ತೋಟಗಳಲ್ಲಿ ಕಾಯಿ ಬಳಿತು ಕೊಯ್ಲು ನಡೆಯುತ್ತಿದ್ದು, ರೈತರಿಗೆ ಅಡಕೆ ಸುಲಿದು ಒಣಗಿಸಲು ಬಿಸಿಲಿನ ಕೊರತೆ ಎದುರಾಗಿದೆ. ಸದಾ ಮೋಡಕವಿದ ವಾತಾವರಣವಿದ್ದು, ಅಡಕೆ ಬೆಳೆಗಾರರಿಗೆ ಸಮಸ್ಯೆಯಾಗಿದೆ. ಅಲ್ಲದೆ ಮಳೆ ಇದೆ ರೀತಿ ಮುಂದುವರೆದಲ್ಲಿ ಬೆಳವಣಿಗೆ ಹಂತದಲ್ಲಿರುವ ಅಡಕೆ ದಪ್ಪವಾಗದೆ ಇಳುವರಿ ಕುಂಠಿತವಾಗುವ ಆತಂಕ ಎದುರಾಗಿದೆ. 
    ಬೀದಿ ಬದಿ ವ್ಯಾಪಾರಸ್ಥರಿಗೆ ತೊಂದರೆ: 
    ನಗರವ್ಯಾಪ್ತಿಯಲ್ಲಿ ಮಳೆಯಿಂದಾಗಿ ಬೀದಿಬದಿ ವ್ಯಾಪಾರಿಗಳು ಸಂಕಷ್ಟಕ್ಕೆ ಒಳಗಾಗಿದ್ದು, ದಿನದ ಕೂಲಿ ನಂಬಿ ಬದುಕುತ್ತಿರುವ ಬಹಳಷ್ಟು ಮಂದಿ ಬೀದಿಬದಿ ವ್ಯಾಪಾರಿಗಳು ಕೆಲವು ದಿನಗಳಿಂದ ವ್ಯಾಪಾರ ವಹಿವಾಟು ಇಲ್ಲದೆ ತೊಂದರೆ ಎದುರಿಸುತ್ತಿದ್ದಾರೆ. 
ಹೂ-ಹಣ್ಣು, ತರಕಾರಿ ಮಾರಾಟ ಮಾಡುವ ಹಾಗು ರಸ್ತೆ ಬದಿ ತಿಂಡಿ ತಿನುಸುಗಳನ್ನು ಮಾರಾಟ ಮಾಡುವ ವ್ಯಾಪಾರಸ್ಥರು ವಹಿವಾಟುವಿಲ್ಲದೆ ದಿನ ಕಳೆಯುವಂತಾಗಿದ್ದು, ಮಳೆ ಇಳಿಮುಖವಾಗುವುದನ್ನು ಎದುರು ನೋಡುತ್ತಿದ್ದಾರೆ. 
    ಹಾಳಾದ ರಸ್ತೆಗಳು: 
    ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ನಗರದ ಬಹುತೇಕ ರಸ್ತೆಗಳು ಹಾಳಾಗಿದ್ದು, ಅದರಲ್ಲೂ ಡಾಂಬರ್ ರಸ್ತೆಗಳು ಹಾಳಾಗಿರುವುದು ಪಾದಚಾರಿಗಳು ಹಾಗು ವಾಹನ ಸವಾರರಿಗೆ ತೊಂದರೆಯಾಗಿದೆ. ರಸ್ತೆಗಳಲ್ಲಿ ದೊಡ್ಡ ದೊಡ್ಡ ಗುಂಡಿಗಳು ಉಂಟಾಗಿದ್ದು, ವಾಹನಗಳು ಅಪಘಾತಗಳುಗೊಳ್ಳುವ ಸಾಧ್ಯತೆ ಹೆಚ್ಚಾಗಿವೆ. ಸಂಬಂಧಪಟ್ಟ ಇಲಾಖೆಯವರು ತಕ್ಷಣ ಎಚ್ಚೆತ್ತುಕೊಂಡು ತುರ್ತು ಕ್ರಮ ಕೈಗೊಳ್ಳಬೇಕಾಗಿದೆ.  
    ರಸ್ತೆ, ಚರಂಡಿಗಳಲ್ಲಿ ನಿಂತ ನೀರು: 
ನಗರಸಭೆ ವ್ಯಾಪ್ತಿಯ ಬಹುತೇಕ ಕಡೆ ರಸ್ತೆ ಹಾಗು ಚರಂಡಿ ಕಾಮಗಾರಿ ಸಮರ್ಪಕವಾಗಿ ನಿರ್ವಹಿಸದ ಹಿನ್ನಲೆಯಲ್ಲಿ ಮಳೆ ನೀರು ರಸ್ತೆ ಹಾಗು ಚರಂಡಿಗಳಲ್ಲಿ ಕಸಕಡ್ಡಿ ಕಟ್ಟಿಕೊಂಡು ನಿಂತುಕೊಳ್ಳುತ್ತಿದ್ದು, ಇದರಿಂದಾಗಿ ನಿವಾಸಿಗಳಿಗೆ ತೊಂದರೆಯಾಗುತ್ತಿದೆ. ಈ ಸಂಬಂಧ ಹಲವಾರು ಬಾರಿ ನಗರಸಭೆ ಆಡಳಿತಕ್ಕೆ ನಿವಾಸಿಗಳು ಅಗತ್ಯ ಕೈಗೊಳ್ಳುವಂತೆ ಮನವಿ ಮಾಡಿದ್ದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ಅಲ್ಲದೆ ವಾರ್ಡ್ ಸದಸ್ಯರುಗಳು ಸಾಮಾನ್ಯ ಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 
    ಭದ್ರಾ ನದಿಯಲ್ಲಿ ಮುಳುಗಿದ ಸಂಗಮೇಶ್ವರ :
ಭದ್ರಾ ಜಲಾಶಯದ ಸುತ್ತಮುತ್ತ ವ್ಯಾಪಕವಾಗಿ ಮಳೆಯಾಗುತ್ತಿರುವ ಈ ಹಿನ್ನಲೆಯಲ್ಲಿ ಕೆಲವು ದಿನಗಳಿಂದ ಜಲಾಶಯದಿಂದ ನದಿಗೆ ನೀರು ಬಿಡುಗಡೆಗೊಳಿಸಲಾಗಿದ್ದು, ಇದರಿಂದಾಗಿ ಹಳೇ ಸೇತುವೆ ಸಮೀಪ ಭದ್ರಾ ನದಿಯಲ್ಲಿರುವ ಶ್ರೀ ಸಂಗಮೇಶ್ವರ ದೇವಸ್ಥಾನ ನೀರಿನ ಪ್ರಮಾಣ ಹೆಚ್ಚಾದ ಕಾರಣ ಮುಳುಗಡೆಗೊಂಡಿದೆ. ನೀರಿನ ಪ್ರಮಾಣ ಮತ್ತಷ್ಟು ಹೆಚ್ಚಾದ್ದಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಆತಂಕ ನಿರ್ಮಾಣವಾಗಿದೆ.