Sunday, January 26, 2025

ರೈಲ್ವೆ ಮೇಲ್ಸೇತುವೆ ಕೆಳಭಾಗದಲ್ಲಿ ಮೊದಲ ಫುಡ್ ಕೋರ್ಟ್ ಉದ್ಘಾಟನೆ

ಭದ್ರಾವತಿ ನಗರಸಭೆ ವತಿಯಿಂದ ಬಹು ವರ್ಷಗಳ ಬೇಡಿಕೆಯಂತೆ ನಗರದ ಮಹಾತ್ಮಗಾಂಧಿ ರಸ್ತೆ (ಟಿ.ಕೆ ರಸ್ತೆ)ಯ ರೈಲ್ವೆ ಮೇಲ್ಸೇತುವೆ ಕೆಳಭಾಗದಲ್ಲಿ ಫುಡ್‌ಕೋರ್ಟ್ ನಿರ್ಮಿಸಲಾಗಿದ್ದು, ಜ.೨೬ ಗಣರಾಜ್ಯೋತ್ಸವದಂದು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು. 
    ಭದ್ರಾವತಿ: ನಗರಸಭೆ ವತಿಯಿಂದ ಬಹು ವರ್ಷಗಳ ಬೇಡಿಕೆಯಂತೆ ನಗರದ ಮಹಾತ್ಮಗಾಂಧಿ ರಸ್ತೆ (ಟಿ.ಕೆ ರಸ್ತೆ)ಯ ರೈಲ್ವೆ ಮೇಲ್ಸೇತುವೆ ಕೆಳಭಾಗದಲ್ಲಿ ಫುಡ್‌ಕೋರ್ಟ್ ನಿರ್ಮಿಸಲಾಗಿದ್ದು, ಜ.೨೬ ಗಣರಾಜ್ಯೋತ್ಸವದಂದು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು. 
    ವಾರ್ಡ್ ನಂ. ೧೩, ೧೬ ಮತ್ತು ೧೭ರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಬೀದಿಬದಿ ವ್ಯಾಪಾರಸ್ಥರಿಗೆ ಅನುಕೂಲವಾಗುವಂತೆ ನಗರಸಭೆ ಅನುದಾನದಲ್ಲಿ ಒಟ್ಟು ೯ ಲಕ್ಷ ರು. ವೆಚ್ಚದಲ್ಲಿ ಫುಡ್‌ಕೋರ್ಟ್ ನಿರ್ಮಿಸಲಾಗಿದ್ದು, ಪ್ರಸ್ತುತ ಬೇಡಿಕೆಯಂತೆ ಒಟ್ಟು ೨೮ ವ್ಯಾಪಾರಿಗಳಿಗೆ ಮಳಿಗೆಗಳನ್ನು ನಿರ್ಮಿಸಲಾಗಿದೆ. ಸದ್ಯಕ್ಕೆ ಪ್ಲಾಟ್ ಫಾರಂ, ಕುಡಿಯುವ ನೀರು, ವಿದ್ಯುತ್ ವ್ಯವಸ್ಥೆ  ಕಲ್ಪಿಸಲಾಗಿದೆ.  ಮುಂದಿನ ದಿನಗಳಲ್ಲಿ ಶೌಚಾಲಯ ಸಹ ನಿರ್ಮಾಣವಾಗಲಿದೆ.  
    ಇದು ನಗರಸಭೆ ವತಿಯಿಂದ ನಿರ್ಮಿಸಲಾಗಿರುವ ಮೊದಲ ಫುಡ್‌ಕೋರ್ಟ್ ಆಗಿದ್ದು, ಹಳೇನಗರದ ಬಸವೇಶ್ವರ ವೃತ್ತ ಹಾಗು ಜನ್ನಾಪುರ ವಾಣಿಜ್ಯ ರಸ್ತೆಯಲ್ಲಿ ಫುಡ್‌ಕೋರ್ಟ್‌ಗಳ ನಿರ್ಮಾಣಕ್ಕೆ ಸಿದ್ದತೆಗಳನ್ನು ಕೈಗೊಳ್ಳಲಾಗುತ್ತಿದೆ. 
    ನಗರಸಭೆ ಅಧ್ಯಕ್ಷ ಎಂ. ಮಣಿ ಎಎನ್‌ಎಸ್, ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್, ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್, ನಗರ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್ ಗೋಪಾಲ್, ಸೂಡಾ ಸದಸ್ಯ ಎಚ್. ರವಿಕುಮಾರ್  ಸೇರಿದಂತೆ ನಗರಸಭೆ ಚುನಾಯಿತ ಹಾಗು ನಾಮನಿರ್ದೇಶಿತ ಸದಸ್ಯರು ಉಪಸ್ಥಿತರಿದ್ದರು. 

ಮೆಸ್ಕಾಂ ಕಛೇರಿಯಲ್ಲಿ ೭೬ನೇ ಗಣರಾಜ್ಯೋತ್ಸವ ದಿನಾಚರಣೆ

ಭದ್ರಾವತಿ ನಗರದ ಜೆಪಿಎಸ್ ಕಾಲೋನಿ, ಮೆಸ್ಕಾಂ ಕಾರ್ಯ ಮತ್ತು ಪಾಲನಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್‌ರವರ ಕಛೇರಿ ವತಿಯಿಂದ ಆಯೋಜಿಸಲಾಗಿದ್ದ ೭೬ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್ ಬಿ.ಎಸ್ ಪ್ರಕಾಶ್ ಧ್ವಜಾರೋಹಣ ನೆರವೇರಿಸಿದರು.
    ಭದ್ರಾವತಿ: ನಗರದ ಜೆಪಿಎಸ್ ಕಾಲೋನಿ, ಮೆಸ್ಕಾಂ ಕಾರ್ಯ ಮತ್ತು ಪಾಲನಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್‌ರವರ ಕಛೇರಿ ವತಿಯಿಂದ ಆಯೋಜಿಸಲಾಗಿದ್ದ ೭೬ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್ ಬಿ.ಎಸ್ ಪ್ರಕಾಶ್ ಧ್ವಜಾರೋಹಣ ನೆರವೇರಿಸಿದರು. 
    ಭಾರತರತ್ನ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಮಹಾತ್ಮಗಾಂಧಿಜೀಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ ಸೂಚಿಸಲಾಯಿತು. ಧ್ವಜಾರೋಹಣದ ನಂತರ ಸಿಹಿ ಹಂಚಲಾಯಿತು. 
    ಲೆಕ್ಕಾಧಿಕಾರಿ ಅಶ್ವಿನಿಕುಮಾರ್, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಗಿರೀಶ್, ಹಿರಿಯ ಸಹಾಯಕಿ ನಾಗರತ್ನ ಸೇರಿದಂತೆ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು. 

ದೇಶದ ಸಂವಿಧಾನ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಿದೆ : ಪರುಸಪ್ಪ ಕುರುಬರ

ಭದ್ರಾವತಿ ಕನಕ ಮಂಟಪ ಮೈದಾನದಲ್ಲಿ ನಡೆದ ೭೬ ನೇ ಗಣರಾಜ್ಯೋತ್ಸವ ದಿನಾಚರಣೆ ಸಮಾರಂಭದಲ್ಲಿ ತಹಸೀಲ್ದಾರ್ ಪರುಸಪ್ಪ ಕುರುಬರ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಶಾಸಕ ಬಿ.ಕೆ ಸಂಗಮೇಶ್ವರ್, ಎ.ಕೆ ನಾಗೇಂದ್ರಪ್ಪ, ಬಿ. ಸಿದ್ದಬಸಪ್ಪ, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
    ಭದ್ರಾವತಿ; ಭಾರತ ದೇಶದ ಸಂವಿಧಾನ ಸರಳವಾದ ಬೃಹತ್ ಸಂವಿಧಾನವಾಗಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಿದೆ ಎಂದು ತಹಸೀಲ್ದಾರ್ ಪರುಸಪ್ಪ ಕುರುಬರ ಹೇಳಿದರು. 
    ಅವರು ಹಳೇನಗರದ ಕನಕಮಂಟಪ ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿವತಿಯಿಂದ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಮತ್ತು ನಗರಸಭೆ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ೭೬ನೇ ಗಣರಾಜ್ಯೋತ್ಸವ ದಿನಾಚರಣೆ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಸಂದೇಶ ವಾಚಿಸಿದರು. 
    ನಮ್ಮದು ಸಂಸದೀಯ ಸರ್ಕಾರ ಪದ್ದತಿ, ಗಣತಂತ್ರ ವ್ಯವಸ್ಥೆ, ಮೂಲಭೂತ ಹಕ್ಕುಗಳು ಹಾಗೂ ಕರ್ತವ್ಯಗಳು, ರಾಜ್ಯ ನಿರ್ದೇಶಕ ತತ್ವಗಳನ್ನು ಒಳಗೊಂಡಿದೆ. ನಮ್ಮ ದೇಶದ ಸಂವಿಧಾನ ಪ್ರಜೆಗಳಿಂದ ಪ್ರಜೆಗಳಿಗಾಗಿ ಪ್ರಜೆಗಳ ಏಳಿಗೆಗೆ ಇರುವ ಸಂವಿಧಾನವಾಗಿದೆ. ಅಸಮಾನತೆ ಹೋಗಲಾಡಿಸಿ ಎಲ್ಲರೂ ಸಮಾನರು ಎಂಬ ಭಾವನೆ ಮೂಡಿಸುತ್ತದೆ. ಬಿ.ಆರ್ ಅಂಬೇಡ್ಕರ್ ಹೇಳುವಂತೆ ಪ್ರಜಾಪ್ರಭುತ್ವ ಎಂದರೆ ಕೇವಲ ಆಡಳಿತ ವಿಧಾನವಲ್ಲ ಅದು ಜೊತೆಯಾಗಿ ಬದುಕುವ, ಮನುಷ್ಯರಿಗೆ ಘನತೆ ಗೌರವ ನೀಡುವ ಕ್ರಮದ ಆಶಯವಾಗಿದೆ ಎಂದರು.
    ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿದ ಶಾಸಕ ಬಿ.ಕೆ ಸಂಗಮೇಶ್ವರ್, ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರು ದೇಶಕ್ಕೆ ಸಂವಿಧಾನವನ್ನು ರೂಪಿಸಿ ಮೂಲಭೂತ ಹಕ್ಕು ಹಾಗೂ ಕರ್ತವ್ಯಗಳನ್ನು ನೀಡಿದ್ದಾರೆ. ಅವುಗಳಿಗೆ ಗೌರವ ಸಲ್ಲಿಸುವ ಜವಾಬ್ದಾರಿ ನಮ್ಮ ಮೇಲಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲಾ ಧರ್ಮದ, ಎಲ್ಲಾ ಜಾತಿ ಜನಾಂಗದ, ಎಲ್ಲಾ ಭಾಷೆಯ ಜನರು ಸಮಾನತೆ ಸಹಬಾಳ್ವೆಯಿಂದ ಬದುಕಬೇಕೆನ್ನುವುದು ಸಂವಿಧಾನದ ಆಶಯವಾಗಿದೆ. ಅದರಂತೆ ನಾವೆಲ್ಲರೂ ಯಾವುದೇ ತಾರತಮ್ಯ ಮಾಡದೆ ಸಮಾನತೆಯಿಂದ ಜೀವಿಸಬೇಕು ಎಂದರು.
    ತಾಲೂಕಿನ ಎಲ್ಲಾ ಸರ್ಕಾರಿ ಅಧಿಕಾರಿಗಳು ಸಂವಿಧಾನದ ಆಶಯದಂತೆ ಕರ್ತವ್ಯ ನಿರ್ವಹಿಸಬೇಕು. ಪ್ರತಿ ಪ್ರಜೆಗೂ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ತಾಲೂಕಿನಲ್ಲಿ ಅಭಿವೃದ್ದಿ ಕಾರ್ಯಗಳು ಸಾಕಷ್ಟು ನಡೆಯುತ್ತಿವೆ. ಮುಂದಿನ ೨ ವರ್ಷದ ಅವಧಿಯಲ್ಲಿ ಶೇ.೮೦ರಷ್ಟು ಪೂರ್ಣಪ್ರಮಾಣದಲ್ಲಿ ಕಾಮಗಾರಿ ಮುಗಿಯಲಿದೆ ಎಂದರು.
    ಸಮಾರಂಭದಲ್ಲಿ ಪೊಲೀಸ್, ಗೃಹರಕ್ಷಕ ದಳ, ವಿವಿಧ ಶಾಲಾ ಕಾಲೇಜುಗಳ ಎನ್.ಸಿ.ಸಿ, ಸ್ಕೌಟ್ಸ್-ಗೈಡ್ಸ್, ಬ್ಯಾಂಡ್‌ಸೆಟ್ ಸೇರಿದಂತೆ ವಿವಿಧ ತಂಡಗಳು  ಮಕ್ಕಳು ಪಥಸಂಚಲನದಲ್ಲಿ ಭಾಗವಹಿಸಿದ್ದವು. ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆ ಉಪ ನಿರೀಕ್ಷಕ ಕೃಷ್ಣಕುಮಾರ್ ಮಾನೆ ಪಥಸಂಚನದ ನೇತೃತ್ವದ ವಹಿಸಿದ್ದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಗಣ್ಯರನ್ನು ಸನ್ಮಾನಿಸಿ ಅಭಿನಂಧಿಸಲಾಯಿತು.
    ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಗಂಗಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ಪೊಲೀಸ್ ಉಪಾಧೀಕ್ಷಕ ಕೆ.ಆರ್ ನಾಗರಾಜು,   ಆರ್‌ಎಫ್ ಕಮಾಂಡೆಂಟ್ ಪ್ರದೀಪ್, ನಗರಸಭೆ ಅಧ್ಯಕ್ಷ ಎಂ. ಮಣಿ ಎಎನ್‌ಎಸ್, ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್, ನಗರ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್ ಗೋಪಾಲ್, ತಾಲೂಕು ಬಗರ್ ಹುಕುಂ ಸಮಿತಿ ಅಧ್ಯಕ್ಷ ಎಸ್. ಮಣಿಶೇಖರ್ ಸೇರಿದಂತೆ ನಗರಸಭೆ ಸದಸ್ಯರು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು  ಉಪಸ್ಥಿತರಿದ್ದರು. 

ಸಮಾನತೆ, ಒಗ್ಗಟ್ಟು ಸಂವಿಧಾನದ ಆಶಯ ಅರಿತುಕೊಳ್ಳಿ : ಬಿ.ಕೆ ಸಂಗಮೇಶ್ವರ್

ಭದ್ರಾವತಿ ನಗರದ ಬಿ.ಎಚ್ ರಸ್ತೆ ಅಂಡರ್ ಬ್ರಿಡ್ಜ್ ಬಳಿ ಅಂಬೇಡ್ಕರ್ ವೃತ್ತದಲ್ಲಿ ಹಳೇ ಪ್ರತಿಮೆ ಬದಲಿಸಿ ಹೊಸದಾಗಿ ಪ್ರತಿಷ್ಠಾಪಿಸಲಾಗಿರುವ ೧೨ ಅಡಿ ಎತ್ತರದ ಕಂಚಿನ ಪ್ರತಿಮೆ ಉದ್ಘಾಟನೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ವೇದಿಕೆ ಕಾರ್ಯಕ್ರಮ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು. 
    ಭದ್ರಾವತಿ:  ಧರ್ಮ, ಜಾತಿ, ಭಾಷೆ, ಬಡವ-ಶ್ರೀಮಂತ, ಲಿಂಗ ಬೇಧಭಾವವಿಲ್ಲದೆ ಸಮಾಜದಲ್ಲಿ ಪ್ರತಿಯೊಬ್ಬರನ್ನು ಸಮಾನವಾಗಿ ಕಾಣಬೇಕು. ಎಲ್ಲರೂ ಒಗ್ಗಟ್ಟಿನಿಂದ ಬಾಳಬೇಕೆಂಬ ಆಶಯದೊಂದಿಗೆ ಪ್ರಪಂಚದಲ್ಲಿಯೇ ಶ್ರೇಷ್ಠವಾದ ಸಂವಿಧಾನ ರಚಿಸಿದ ಮಹಾನ್ ವ್ಯಕ್ತಿ ಡಾ. ಬಿ.ಆರ್ ಅಂಬೇಡ್ಕರ್ ಎಂಬುದನ್ನು ನಾವೆಲ್ಲರೂ ಅರ್ಥಮಾಡಿಕೊಂಡು ಅವರ ಆಶಯದೊಂದಿಗೆ ಮುನ್ನಡೆಯಬೇಕೆಂದು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು. 
    ಅವರು ಭಾನುವಾರ ನಗರದ ಬಿ.ಎಚ್ ರಸ್ತೆ ಅಂಡರ್ ಬ್ರಿಡ್ಜ್ ಬಳಿ ಅಂಬೇಡ್ಕರ್ ವೃತ್ತದಲ್ಲಿ ಹಳೇ ಪ್ರತಿಮೆ ಬದಲಿಸಿ ಹೊಸದಾಗಿ ಪ್ರತಿಷ್ಠಾಪಿಸಲಾಗಿರುವ ೧೨ ಅಡಿ ಎತ್ತರದ ಕಂಚಿನ ಪ್ರತಿಮೆ ಉದ್ಘಾಟಿಸಿ ಮಾತನಾಡಿದರು. 
    ಮಹಾನ್ ವ್ಯಕ್ತಿ ಅಂಬೇಡ್ಕರ್‌ರವರ ಪ್ರತಿಮೆ ಉದ್ಘಾಟಿಸಿರುವುದು ಹೆಮ್ಮೆಯ ಸಂಗತಿಯಾಗಿದ್ದು, ಮುಂದಿನ ೩ ತಿಂಗಳಲ್ಲಿ ಅಂಬೇಡ್ಕರ್ ಭವನ ಕಾಮಗಾರಿ ಸಹ ಪೂರ್ಣಗೊಳಿಸಿ ಉದ್ಘಾಟಿಸುವುದಾಗಿ ಭರವಸೆ ನೀಡಿದರು. 
    ಮುಖಂಡ ಕೆ.ಎಲ್ ಅಶೋಕ್ ಮಾತನಾಡಿ, ಅಂಬೇಡ್ಕರ್‌ರವರ ಬದುಕು ತುಂಬಾ ಕಠಿಣವಾದ ಬದುಕು. ಅವರು ತಮ್ಮ ಬದುಕಿನಲ್ಲಿ ಅಸಮಾನತೆಯ ವಿರುದ್ಧ ಹೋರಾಟ ನಡೆಸಿ ಪ್ರಪಂಚದ ಎಲ್ಲಾ ರಾಷ್ಟ್ರಗಳ ಅಧ್ಯಯನ ನಡೆಸಿ ಶ್ರೇಷ್ಠ ಸಂವಿಧಾನ ನೀಡಿದ್ದಾರೆ. ಪ್ರತಿಮೆ ಸ್ಥಾಪನೆ ಸಾರ್ಥಕವಾಗಬೇಕಾದರೆ ಅವರ ಚಿಂತನೆ, ಆಶಯಗಳನ್ನು ನಾವುಗಳು ಜೀವನದಲ್ಲಿ ಅಳವಡಿಸಿಕೊಂಡು ಮುಂದೆ ಸಾಗಬೇಕು ಎಂದರು. 
    ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಿದರು. ನಗರಸಭೆ ಅಧ್ಯಕ್ಷ ಎಂ. ಮಣಿ ಎಎನ್‌ಎಸ್ ಅಧ್ಯಕ್ಷತೆ ವಹಿಸಿದ್ದರು.  ಪ್ರಮುಖರಾದ ತಹಸೀಲ್ದಾರ್ ಪರುಸಪ್ಪ ಕುರುಬರ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಗಂಗಣ್ಣ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ, ತಾಲೂಕು ಬಗರ್ ಹುಕುಂ ಸಮಿತಿ ಅಧ್ಯಕ್ಷ ಎಸ್. ಮಣಿಶೇಖರ್, ನಗರ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್ ಗೋಪಾಲ್, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್ ಸೇರಿದಂತೆ ನಗರಸಭೆ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ಪೌರಕಾರ್ಮಿಕರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ದಲಿತ ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
    ಭೌದ್ಧ ಬಿಕ್ಕು ಪಂತೆಜೀ ನಗರಸಭೆ ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್ ಸಂವಿಧಾನ ಪೀಠಿಕೆ ವಾಚಿಸಿದರು. ಬೌದ್ಧ ನಗರಸಭೆ ಸದಸ್ಯ ಚನ್ನಪ್ಪ ಸ್ವಾಗತಿಸಿದರು. ಭಿಕ್ಕು ಬಂತೇಜಿ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. 

Saturday, January 25, 2025

ಪೌರಕಾರ್ಮಿಕರ ವಸತಿ ಸಮುಚ್ಛಯಗಳ ಉದ್ಘಾಟನೆ

ಭದ್ರಾವತಿ: ರಂಗಪ್ಪ ವೃತ್ತದ ಜೈ ಭೀಮ್ ನಗರದಲ್ಲಿ ಪೌರಕಾರ್ಮಿಕರ ಗೃಹಭಾಗ್ಯ ಯೋಜನೆಯಡಿ ನಿರ್ಮಿಸಿರುವ ವಸತಿ ಸಮುಚ್ಛಯಗಳನ್ನು ಭಾನುವಾರ ಗಣರಾಜ್ಯೋತ್ಸವ ದಿನದಂದು ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
    ಭದ್ರಾವತಿ: ರಂಗಪ್ಪ ವೃತ್ತದ ಜೈ ಭೀಮ್ ನಗರದಲ್ಲಿ ಪೌರಕಾರ್ಮಿಕರ ಗೃಹಭಾಗ್ಯ ಯೋಜನೆಯಡಿ ನಿರ್ಮಿಸಿರುವ ವಸತಿ ಸಮುಚ್ಛಯಗಳನ್ನು ಭಾನುವಾರ ಗಣರಾಜ್ಯೋತ್ಸವ ದಿನದಂದು ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು. 
    ಆರ್.ಜಿ.ಆರ್.ಎಚ್.ಸಿ.ಎಲ್ ವತಿಯಿಂದ ಒಟ್ಟು ೫.೬೦ ಕೋಟಿ ರು. ವೆಚ್ಚದಲ್ಲಿ ಪೌರಕಾರ್ಮಿಕರ ಗೃಹಭಾಗ್ಯ ಯೋಜನೆಯಡಿ ವಸತಿ ಸಮುಚ್ಛಯಗಳನ್ನು ನಿರ್ಮಿಸಲಾಗಿದ್ದು, ಒಟ್ಟು ೭೪ ಪೌರಕಾರ್ಮಿಕರಿಗೆ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಹಿಂದೆ ನಗರಸಭೆ ಪೌರಾಯುಕ್ತರಾಗಿದ್ದ ಮನೋಹರ್‌ರವರ ಅವಧಿಯಲ್ಲಿಯೇ ವಸತಿ ಸಮುಚ್ಛಯಗಳು ನಿರ್ಮಾಣಗೊಂಡು ಪೂರ್ಣಗೊಂಡಿದ್ದವು. ಇದೀಗ ಪೌರಕಾರ್ಮಿಕರಿಗೆ ವಸತಿ ಗೃಹಗಳನ್ನು ಹಸ್ತಾಂತರಿಸಲಾಯಿತು. 
    ನಗರಸಭೆ ಅಧ್ಯಕ್ಷ ಎಂ. ಮಣಿ ಎಎನ್‌ಎಸ್, ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್, ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್, ನಗರ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್ ಗೋಪಾಲ್, ಸೂಡಾ ಸದಸ್ಯ ಎಚ್. ರವಿಕುಮಾರ್  ಸೇರಿದಂತೆ ನಗರಸಭೆ ಚುನಾಯಿತ ಹಾಗು ನಾಮನಿರ್ದೇಶಿತ ಸದಸ್ಯರು ಉಪಸ್ಥಿತರಿದ್ದರು. 

ಜ.೨೬ರಂದು ಮೊದಲ ಫುರ್ಟ್‌ಕೋರ್ಟ್ ಉದ್ಘಾಟನೆ


    ಭದ್ರಾವತಿ: ನಗರಸಭೆ ವತಿಯಿಂದ ಬಹು ವರ್ಷಗಳ ಬೇಡಿಕೆಯಂತೆ ನಗರದ ಮಹಾತ್ಮಗಾಂಧಿ ರಸ್ತೆ (ಟಿ.ಕೆ ರಸ್ತೆ)ಯ ರೈಲ್ವೆ ಮೇಲ್ಸೇತುವೆ ಕೆಳಭಾಗದಲ್ಲಿ ಫುಟ್‌ಕೋರ್ಟ್ ನಿರ್ಮಿಸಲಾಗಿದ್ದು, ಜ.೨೬ರಂದು ಬೆಳಿಗ್ಗೆ ೮.೨೦ಕ್ಕೆ ಇದರ ಉದ್ಘಾಟನೆ ನಡೆಯಲಿದೆ. 
    ವಾರ್ಡ್ ನಂ. ೧೩, ೧೬ ಮತ್ತು ೧೭ರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಬೀದಿಬದಿ ವ್ಯಾಪಾರಸ್ಥರಿಗೆ ಅನುಕೂಲವಾಗುವಂತೆ ನಗರಸಭೆ ಅನುದಾನದಲ್ಲಿ ಫುಟ್‌ಕೋರ್ಟ್ ನಿರ್ಮಿಸಲಾಗಿದ್ದು, ಪ್ರಸ್ತುತ ಬೇಡಿಕೆಯಂತೆ ಒಟ್ಟು ೨೬ ವ್ಯಾಪಾರಿಗಳಿಗೆ ಒಟ್ಟು ೧೬ ಮೀಟರ್ ಉದ್ದ ಹಾಗು ೮ ಮೀಟರ್ ಅಗಲ ವಿಸ್ತೀರ್ಣದಲ್ಲಿ ಫುಟ್‌ಕೋರ್ಟ್ ನಿರ್ಮಿಸಲಾಗಿದೆ. ಅಗತ್ಯವಿರುವ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಇದು ನಗರಸಭೆ ವತಿಯಿಂದ ನಿರ್ಮಿಸಲಾಗಿರುವ ಮೊದಲ ಫುಟ್‌ಕೋರ್ಟ್ ಆಗಿದ್ದು, ಹಳೇನಗರದ ಬಸವೇಶ್ವರ ವೃತ್ತ ಹಾಗು ಜನ್ನಾಪುರ ವಾಣಿಜ್ಯ ರಸ್ತೆಯಲ್ಲಿ ಫುಟ್‌ಕೋರ್ಟ್‌ಗಳ ನಿರ್ಮಾಣಕ್ಕೆ ಸಿದ್ದತೆಗಳನ್ನು ಕೈಗೊಳ್ಳಲಾಗುತ್ತಿದೆ. 

ಜ.೨೬ರಂದು ವಿಐಎಸ್‌ಎಲ್ ವತಿಯಿಂದ ಗಣರಾಜ್ಯೋತ್ಸವ


    ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ಜ.೨೬ರ ಭಾನುವಾರ ಬೆಳಿಗ್ಗೆ ೯ ಗಂಟೆಗೆ ೭೬ನೇ ಗಣ ರಾಜ್ಯೋತ್ಸವ ನಡೆಯಲಿದೆ. 
    ಪ್ರತಿ ವರ್ಷದಂತೆ ಈ ಬಾರಿ ಸಹ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ ದ್ವಜಾರೋಹಣ ನೆರವೇರಿಸಲಿದ್ದು, ಕಾರ್ಖಾನೆ ಭದ್ರತಾ ಪಡೆ ಸೇರಿದಂತೆ ವಿವಿಧ ಶಾಲಾ-ಕಾಲೇಜುಗಳ ತಂಡಗಳು ಪಥ ಸಂಚಲನದಲ್ಲಿ ಪಾಲ್ಗೊಳ್ಳಲಿವೆ. ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಸಾರ್ವಜನಿಕ ಸಂಪರ್ಕಾಧಿಕಾರಿ ಎಲ್. ಪ್ರವೀಣ್ ಕುಮಾರ್ ಕೋರಿದ್ದಾರೆ.