Friday, July 11, 2025

ಪೋಡಿಮುಕ್ತ ಗ್ರಾಮ ಯೋಜನೆಗೆ ವೇಗ, ಇ-ಪೌತಿ ಖಾತೆ ವಿತರಣೆ, ದಾಖಲೆಗಳ ಡಿಜಿಟಲೀಕರಣ : ತಹಸೀಲ್ದಾರ್ ಪರುಸಪ್ಪ ಕುರುಬರ

ಭದ್ರಾವತಿ ತಹಸೀಲ್ದಾರ್ ಪರುಸಪ್ಪ ಕುರುಬರ 
    ಭದ್ರಾವತಿ : ತಾಲೂಕಿನಾದ್ಯಂತ ಸುಮಾರು ೮೦೦ ಪೋಡಿ ಖಾತೆ ಪ್ರಕರಣಗಳನ್ನು ಗುರುತಿಸಲಾಗಿದ್ದು, ಕೇವಲ ೬ ತಿಂಗಳಲ್ಲಿ ಈ ಪೈಕಿ ಸುಮಾರು ೩೦೦ಕ್ಕೂ ಹೆಚ್ಚು ಪ್ರಕರಣಗಳನ್ನು ಬಗೆಹರಿಸಿ ಪೋಡಿಮುಕ್ತ ಗ್ರಾಮಗಳಾಗಿ ಘೋಷಿಸಲಾಗಿದೆ. ಈ ಮೂಲಕ ಕಂದಾಯ ಸಚಿವರಾದ ಕೃಷ್ಣಭೈರೇಗೌಡರವರ ಮಹತ್ವಾಕಾಂಕ್ಷೆ ಯೋಜನೆಗಳಿಗೆ ತಾಲೂಕಿನಲ್ಲಿ ವೇಗ ನೀಡಲಾಗಿದೆ ಎಂದು ತಹಸೀಲ್ದಾರ್ ಪರುಸಪ್ಪ ಕುರುಬರ ತಿಳಿಸಿದರು. 
    ಅವರು ಶುಕ್ರವಾರ ಈ ಕುರಿತು ತಮ್ಮ ಕಛೇರಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿ, ಉಳಿದ ಪ್ರಕರಣಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಿ ತಾಲೂಕಿನಲ್ಲಿ ಯೋಜನೆ ಯಶಸ್ವಿಗೊಳಿಸಲಾಗುವುದು ಎಂದರು. 
    ಕಂದಾಯ ಇಲಾಖೆ ಅಗತ್ಯ ಇರುವ ಕಡೆಗಳಲ್ಲಿ ಅರಣ್ಯ ಇಲಾಖೆ ನೆರವು ಪಡೆಯಲಿದ್ದು, ಯಾವುದೇ ಕಾರಣಕ್ಕೂ ರೈತರಿಗೆ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು.  ಈ ಯೋಜನೆ ಅನುಷ್ಠಾನದಿಂದಾಗಿ ಕಚೇರಿಗಳಿಗೆ ವೃಥಾ ಅಲೆದಾಟ, ಮಧ್ಯವರ್ತಿಗಳ ಹಾವಳಿ ತಪ್ಪಲಿದ್ದು, ಬಹುವರ್ಷಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ದೊರೆಯಲಿದೆ ಎಂದರು.
    ಇ-ಪೌತಿ ಖಾತೆ ಆಂದೋಲನ:
    ರಾಜ್ಯ ಸರ್ಕಾರ ಇ-ಪೌತಿ ಆಂದೋಲನ ಜಾರಿಗೊಳಿಸಿದ್ದು, ಭದ್ರಾವತಿ ತಾಲೂಕಿನಲ್ಲಿ ಜಮೀನಿಗೆ ಸಂಬಂಧಪಟ್ಟಂತೆ ಸುಮಾರು ೭ ಸಾವಿರ ಪೌತಿ ಖಾತೆಗಳನ್ನು ಗುರುತಿಸಲಾಗಿದ್ದು, ಮನೆ-ಮನೆಗೆ ತೆರಳಿ ದಾಖಲೆ ಸಂಗ್ರಹಿಸಿ ವಾರಸುದಾರರಿಗೆ ಪೌತಿ ಖಾತೆಯನ್ನು ಮಾಡಿ ಕೊಡಲಾಗುವುದು, ರೈತ ಬಾಂಧವರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಕೋರಿದರು.
    ಭೂ ಸುರಕ್ಷಾ ಯೋಜನೆ
    ಸರ್ಕಾರಿ ಆಸ್ತಿಗಳನ್ನು ಗುರುತಿಸಿ ದಾಖಲಿಸುವ ಭೂ ಸುರಕ್ಷಾ ಯೋಜನೆ ಈಗಾಗಲೇ ಜಾರಿಯಾಗಿದ್ದು, ಮುಂದಿನ ದಿನಗಳಲ್ಲಿ ಕೆರೆ ಸೇರಿದಂತೆ ಸರ್ಕಾರಿ ಆಸ್ತಿಗಳ ಒತ್ತುವರಿ ತೆರವು ಕಾರ್ಯ ನಡೆಯಲಿದೆ ಎಂದರು.
    ದಾಖಲೆ ಡಿಜಿಟಲೀಕರಣ : 
    ತಾಲೂಕು ಕಚೇರಿಯ ಅಭಿಲೇಖಾಲಯದಲ್ಲಿರುವ ಎಲ್ಲಾ ರೀತಿಯ ದಾಖಲೆಗಳನ್ನು ಡಿಜಿಟಲೀಕರಣಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಕಳೆದ ೬ ತಿಂಗಳ ಅವಧಿಯಲ್ಲಿ ೯ ಲಕ್ಷ ಪುಟಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ. ಇನ್ನೂ ಸುಮಾರು ೮೦ ಲಕ್ಷ ಪುಟಗಳ ಡಿಜಿಟಲೀಕರಣ ಬಾಕಿ ಉಳಿದಿದೆ.  ಮುಂದಿನ ೨ ವರ್ಷಗಳ ಅವಧಿಯಲ್ಲಿ ಪೂರ್ಣಗೊಳ್ಳಲಿದೆ ಎಂದರು.
    ಗ್ರಾಮ ಲೆಕ್ಕಾಧಿಕಾರಿಗಳಿಗೆ ಕಛೇರಿ, ಲ್ಯಾಪ್‌ಟ್ಯಾಪ್ :  
    ತಾಲೂಕಿನಲ್ಲಿ ಒಟ್ಟು ೨೬ ಜನ ಗ್ರಾಮ ಲೆಕ್ಕಾಧಿಕಾರಿಗಳಿದ್ದು, ಈ ಪೈಕಿ ೨೧ ಜನರಿಗೆ ಈಗಾಗಲೇ ಲ್ಯಾಪ್‌ಟ್ಯಾಪ್ ವಿತರಿಸಲಾಗಿದೆ. ಸುಮಾರು ೧೫ ಜನರಿಗೆ ಆಯಾ ಭಾಗದ ಗ್ರಾಮ ಪಂಚಾಯಿತಿ ಹಾಗು ನಾಡಕಛೇರಿಗಳಲ್ಲಿ  ಕಛೇರಿ ವ್ಯವಸ್ಥೆ ಕಲ್ಪಿಸಲಾಗಿದೆ. ಇದರಿಂದಾಗಿ ಜನರು ನೇರವಾಗಿ ತಾಲೂಕು ಕಛೇರಿ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳನ್ನು ಸಂಪರ್ಕಿಸುವ ಮೂಲಕ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ ಎಂದರು. 
    ಗ್ರೇಡ್-೨ ತಹಸೀಲ್ದಾರ್ ಮಂಜಾನಾಯ್ಕ ಉಪಸ್ಥಿತರಿದ್ದರು.

ಭದ್ರೆ ಭರ್ತಿಗೆ ೧೦ ಅಡಿ ಬಾಕಿ ಇರುವಾಗಲೇ ನದಿಗೆ ನೀರು

ವೈಭವ ಕಣ್ತುಬ್ಬಿಕೊಳ್ಳಲು ಜಲಾಶಯದ ಬಳಿ ಜನಸಾಗರ, ನದಿಪಾತ್ರದ ಜನರಿಗೆ ಎಚ್ಚರಿಕೆ 

ಭದ್ರಾವತಿ ತಾಲೂಕಿನ ಜೀವನದಿ ಭದ್ರಾ ನದಿ ಜಲಾಶಯ ಭರ್ತಿಯಾಗಲು ಇನ್ನೂ ೧೦ ಅಡಿ ಬಾಕಿ ಉಳಿದಿದ್ದು, ಈ ನಡುವೆ ಶುಕ್ರವಾರ ಸಂಜೆಯಿಂದ ಸುಮಾರು ೩,೫೦೦ ಕ್ಯೂಸೆಕ್ ನೀರು ನದಿಗೆ ಬಿಡಲಾಗುತ್ತಿದೆ. 
    ಭದ್ರಾವತಿ: ತಾಲೂಕಿನ ಜೀವನದಿ ಭದ್ರಾ ನದಿ ಜಲಾಶಯ ಭರ್ತಿಯಾಗಲು ಇನ್ನೂ ೧೦ ಅಡಿ ಬಾಕಿ ಉಳಿದಿದ್ದು, ಈ ನಡುವೆ ಶುಕ್ರವಾರ ಸಂಜೆಯಿಂದ ಸುಮಾರು ೩,೫೦೦ ಕ್ಯೂಸೆಕ್ ನೀರು ನದಿಗೆ ಬಿಡಲಾಗುತ್ತಿದೆ. 
    ೧೮೬ ಅಡಿ ಸಾಮಥ್ಯದ ಜಲಾಶಯದಲ್ಲಿ ಪ್ರಸ್ತುತ ೧೭೪.೭ ಅಡಿ ನೀರು ಸಂಗ್ರಹವಾಗಿದೆ. ಸುಮಾರು ೧೨ ಸಾವಿರ ಕ್ಯೂಸೆಕ್ ನೀರು ಒಳಹರಿವಿದ್ದು, ೩,೫೦೦ ಕ್ಯೂಸೆಕ್ ನೀರಿನಲ್ಲಿ ೧,೩೦೦ ಕ್ಯೂಸೆಕ್ ನೀರನ್ನು ೪ ಕ್ರಸ್ಟ್ ಗೇಟ್‌ಗಳ ಮೂಲಕ ಹಾಗು ಉಳಿದ ೨,೨೦೦ ಕ್ಯೂಸೆಕ್ ನೀರು ರಿವರ್ ಬೆಡ್ ಮೂಲಕ ನದಿಗೆ ಬಿಡಲಾಗುತ್ತಿದೆ. ಕಳೆದ ವರ್ಷ ಇದೆ ದಿನ ೧೩೬ ಅಡಿ ನೀರು ಸಂಗ್ರಹವಾಗಿತ್ತು. 
    ಜಲಾಶಯದ ವೈಭವ ಕಣ್ತುಬ್ಬಿಕೊಳ್ಳಲು ಹರಿದು ಬರುತ್ತಿರುವ ಜನಸಾಗರ :
    ಜಲಾಶಯದಿಂದ ನದಿಗೆ ನೀರು ಹರಿಸಿದಾಗ ಹಾಲ್ನೊರೆಯಂತೆ ಧುಮುಕುವ ನೀರಿನ ವೈಭವ ಕಣ್ತುಬ್ಬಿಕೊಳ್ಳಲು ಪ್ರತಿ ವರ್ಷ ಜಲಾಶಯದ ಬಳಿ ಜನಸಾಗರ ಹರಿದು ಬರುತ್ತಿದ್ದು, ಈ ಬಾರಿ ಸಹ ಜನರು ಜಲಾಶಯದ ಬಳಿ ನೀರಿನ ವೈಭವ ಕಣ್ತುಬ್ಬಿಕೊಂಡು ಸಂಭ್ರಮಿಸಿದರು. ಅಲ್ಲದೆ ಕೆಲವರು ತಮ್ಮ ಮೊಬೈಲ್‌ಗಳಲ್ಲಿ ದೃಶ್ಯ ಸೆರೆ ಹಿಡಿದುಕೊಂಡರೇ, ಮತ್ತೆ ಕೆಲವರು ಸೆಲ್ಪಿ ಕ್ಲಿಕ್ಕಿಸಿಕೊಂಡರು, ಇನ್ನೂ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಜಲಾಶಯದ ವೈಭವ ಹಂಚಿಕೊಂಡು ಸಂಭ್ರಮಿಸಿದರು. 
    ನದಿಪಾತ್ರದ ನಿವಾಸಿಗಳಿಗೆ ಎಚ್ಚರಿಕೆ : 
    ಭದ್ರಾ ಜಲಾಶಯದ ವ್ಯಾಪ್ತಿಯಲ್ಲಿ ವ್ಯಾಪಾಕ ಮಳೆಯಾಗುತ್ತಿದ್ದು, ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿದೆ. ಜಲಾಶಯದ ಸುರಕ್ಷತೆ ಹಿನ್ನಲೆಯಲ್ಲಿ ನದಿಗೆ ನೀರನ್ನು ಹೊರಬಿಡಲಾಗುತ್ತಿದೆ. ನದಿಪಾತ್ರದ ನಿವಾಸಿಗಳು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಹಾಗು ನದಿಪಾತ್ರದಲ್ಲಿ ಯಾರು ಸಹ ತಿರುಗಾಡುವುದಾಗಲಿ, ಬಟ್ಟೆ ಒಗೆಯುವುದಾಗಲಿ, ಪಾತ್ರೆ ತೊಳೆಯುವುದಾಗಲಿ, ಜಾನುವಾರುಗಳನ್ನು ಮೇಯಿಸುವುದಾಗಲಿ ಮಾಡಬಾರದು. ನದಿಪಾತ್ರದಲ್ಲಿ ಸಂಚಾರ ನಿಷೇಧಿಸಲಾಗಿದೆ ಎಂದು ಎಚ್ಚರಿಸಲಾಗಿದೆ. 
    ತಾಲೂಕು ಆಡಳಿತದಿಂದ ಪ್ರವಾಹ ಎದುರಿಸಲು ಸಿದ್ದತೆ: 
    ಪ್ರತಿ ವರ್ಷ ಮಳೆಗಾಲದಲ್ಲಿ ಭದ್ರಾ ಜಲಾಶಯದಿಂದ ನದಿಗೆ ನೀರು ಬಿಡುವ ಸಂದರ್ಭದಲ್ಲಿ ಪ್ರವಾಹ ಉಂಟಾಗಿ ನಗರದ ಹೃದಯ ಭಾಗದಲ್ಲಿರುವ ತಗ್ಗು ಪ್ರದೇಶಗಳಿಗೆ ಹಾಗು ಹೊಳೆಹೊನ್ನೂರು ಭಾಗದಲ್ಲಿನ ತಗ್ಗು ಪ್ರದೇಶಗಳಿಗೆ ನೀರು ನುಗ್ಗುತ್ತಿದೆ. ಇದರಿಂದಾಗಿ ಪ್ರತಿ ವರ್ಷ ತಗ್ಗು ಪ್ರದೇಶದ ನಿವಾಸಿಗಳನ್ನು ಗಂಜಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗುತ್ತಿದೆ. 
ಈ ಬಾರಿ ಸಹ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾದ್ದಲ್ಲಿ ಸಮಸ್ಯೆ ಎದುರಾಗಲಿದ್ದು, ಈ ಹಿನ್ನಲೆಯಲ್ಲಿ ಈಗಾಗಲೇ ತಾಲೂಕು ಆಡಳಿತ ನಗರಸಭೆ ಹಾಗು ತಾಲೂಕು ಪಂಚಾಯಿತಿ ಸಹಯೋಗದೊಂದಿಗೆ ಪ್ರವಾಹ ಎದುರಿಸಲು ಸಿದ್ದತೆಗಳನ್ನು ಕೈಗೊಂಡಿದೆ. ಈ ಕುರಿತು ತಹಸೀಲ್ದಾರ್ ಪರುಸಪ್ಪ ಕುರುಬರ ಶುಕ್ರವಾರ ಮಾಹಿತಿ ನೀಡಿ, ತಗ್ಗು ಪ್ರದೇಶದ ನಿವಾಸಿಗಳು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮನವಿ ಮಾಡಿದ್ದಾರೆ. 
 

ಜಿ.ಪಂ. ಮಾಜಿ ಅಧ್ಯಕ್ಷ ಅತ್ತಿಗುಂದ ಚಂದ್ರಶೇಖರಯ್ಯ ನಿಧನ

ಅತ್ತಿಗುಂದ ಚಂದ್ರಶೇಖರಯ್ಯ 
    ಭದ್ರಾವತಿ : ತಾಲೂಕಿನ ಅರಳಿಹಳ್ಳಿ ಗ್ರಾಮದ ನಿವಾಸಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಅತ್ತಿಗುಂದ ಚಂದ್ರಶೇಖರಯ್ಯ(೭೩) ಶುಕ್ರವಾರ ಬೆಳಿಗ್ಗೆ ನಿಧನ ಹೊಂದಿದರು. 
    ಪತ್ನಿ, ಪುತ್ರಿ ಹಾಗು ಇಬ್ಬರು ಪುತ್ರರು ಇದ್ದಾರೆ. ಇವರ ಅಂತ್ಯಕ್ರಿಯೆ ಸಂಜೆ ಅರಳಿಹಳ್ಳಿ ಗ್ರಾಮದಲ್ಲಿರುವ ಅವರ ತೋಟದಲ್ಲಿ ನೆರವೇರಿತು. ಚಂದ್ರಶೇಖರಯ್ಯರವರು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ಬಂಗಾರಪ್ಪನವರ ಅಭಿಮಾನಿಯಾಗಿದ್ದು, ಅವರ ಮಾರ್ಗದರ್ಶನದಲ್ಲಿ ರಾಜಕೀಯ ಆರಂಭಿಸಿದ್ದರು. ಜಿಲ್ಲಾ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿ ಆಯ್ಕೆಯಾಗುವ ಮೂಲಕ ಒಂದೇ ಅವಧಿಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ಅಲಂಕರಿಸಿದ್ದರು. ಬಂಗಾರಪ್ಪನವರು ಸೇರ್ಪಡೆಗೊಂಡ ಪಕ್ಷಗಳಿಗೆ ಇವರು ಸಹ ಸೇರ್ಪಡೆಗೊಳ್ಳುತ್ತಿದ್ದರು. ಬಂಗಾರಪ್ಪನವರ ನಿಧನದ ನಂತರ ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದರು. 
    ಇವರ ನಿಧನಕ್ಕೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ, ಬಗರ್ ಹುಕುಂ ಸಮಿತಿ ತಾಲೂಕು ಅಧ್ಯಕ್ಷ ಎಸ್. ಮಣಿಶೇಖರ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್, ಮೆಸ್ಕಾಂ ಸಲಹಾ ಸಮಿತಿ ತಾಲೂಕು ಅಧ್ಯಕ್ಷ ಬಸವಂತಪ್ಪ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ ಸೇರಿದಂತೆ ಇನ್ನಿತರ ಗಣ್ಯರು ಸಂತಾಪ ಸೂಚಿಸಿದ್ದಾರೆ. 

Thursday, July 10, 2025

ತಾಲೂಕು ಕಛೇರಿ, ನಗರಸಭೆಯಲ್ಲಿ ಶಿವಶರಣ, ವಚನಕಾರ ಹಡಪದ ಅಪ್ಪಣ್ಣ ಜನ್ಮದಿನ ಆಚರಣೆ

ಭದ್ರಾವತಿ ತಾಲೂಕು ದಂಡಾಧಿಕಾರಿ, ತಹಸೀಲ್ದಾರ್‌ರವರ ಕಛೇರಿಯಲ್ಲಿ  ಶಿವಶರಣ, ವಚನಕಾರ ಹಡಪದ ಅಪ್ಪಣ್ಣರವರ ಜನ್ಮದಿನ ಆಚರಿಸಲಾಯಿತು. 
    ಭದ್ರಾವತಿ: ತಾಲೂಕು ದಂಡಾಧಿಕಾರಿ, ತಹಸೀಲ್ದಾರ್‌ರವರ ಕಛೇರಿ ಹಾಗು ನಗರಸಭೆ ಕಛೇರಿಯಲ್ಲಿ ಗುರುವಾರ ಶಿವಶರಣ, ವಚನಕಾರ ಹಡಪದ ಅಪ್ಪಣ್ಣರವರ ಜನ್ಮದಿನ ಆಚರಿಸಲಾಯಿತು. 
    ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಡೆದ ಕಾರ್ಯಕ್ರಮದಲ್ಲಿ ತಹಸೀಲ್ದಾರ್-೨ ಮಂಜಾನಾಯ್ಕರವರು ಹಡಪದ ಅಪ್ಪಣ್ಣರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಸ್ಮರಿಸುವ ಮೂಲಕ ಜನ್ಮದಿನ ಆಚರಿಸಲಾಯಿತು.
ಉಪ ತಹಸೀಲ್ದಾರ್ ರಾಜ್ ಅರಸ್, ಸಮಾಜದ ಅಧ್ಯಕ್ಷ ಲಕ್ಷ್ಮೀಪತಿ, ಸಮಾಜ ಬಾಂಧವರು ಮತ್ತು ತಾಲೂಕು ಕಛೇರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ವರ್ಗದವರು ಪಾಲ್ಗೊಂಡಿದ್ದರು. 


ಭದ್ರಾವತಿ ನಗರಸಭೆ ಕಛೇರಿಯಲ್ಲಿ ಗುರುವಾರ ಶಿವಶರಣ, ವಚನಕಾರ ಹಡಪದ ಅಪ್ಪಣ್ಣರವರ ಜನ್ಮದಿನ ಆಚರಿಸಲಾಯಿತು. 
    ನಗರಸಭೆ ಕಛೇರಿ: 
    ನಗರಸಭೆ ಕಛೇರಿಯಲ್ಲಿ ಆಯೋಜಿಸಲಾಗಿದ್ದ ಶಿವಶರಣ, ವಚನಕಾರ ಹಡಪದ ಅಪ್ಪಣ್ಣರವರ ಜನ್ಮದಿನ ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜ್‌ಕುಮಾರ್ ಹಡಪದ ಅಪ್ಪಣ್ಣನವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಸ್ಮರಿಸಿದರು. 
    ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್ ಹಡಪದ ಅಪ್ಪಣ್ಣನವರ ಕುರಿತು ಮಾತನಾಡಿದರು. ನಗರಸಭೆ ಸದಸ್ಯರು, ಅಭಿಯಂತರ ಶಿವಪ್ರಸಾದ್, ಪರಿಸರ ಅಭಿಯಂತರ ಪ್ರಭಾಕರ್, ಕಂದಾಯಾಧಿಕಾರಿ ರಮೇಶ್, ಲೆಕ್ಕಾಧಿಕಾರಿ ಗಿರಿಧರ್ ಮತ್ತು ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು. 

ಸಾಹಿತ್ಯ ಭವನಕ್ಕೆ ಒಂದು ತಿಂಗಳ ಗೌರವ ಧನ ನೀಡಿ ಕನ್ನಡ ಸೇವೆಗೆ ಕೈಜೋಡಿಸಿ : ಮನವಿ

ಭದ್ರಾವತಿ ಕನ್ನಡ ಭವನಕ್ಕಾಗಿ ನಗರಸಭೆಯ ಸದಸ್ಯರ ಒಂದು ತಿಂಗಳ ಗೌರವ ಧನ ನೀಡುವಂತೆ ಕಟ್ಟಡ ಸಮಿತಿ ಅಧ್ಯಕ್ಷೆ ಡಾ: ವಿಜಯಾ ದೇವಿ ಮತ್ತಿತರರು ನಗರಸಭಾ ಸದಸ್ಯ ಬಿ.ಕೆ.ಮೋಹನ್ ಮತ್ತು ಪೌರಾಯುಕ್ತ ಪ್ರಕಾಶ್ ಎಂ.ಚೆನ್ನಪ್ಪ ನವರ್ ಅವರಿಗೆ ಮನವಿ ಸಲ್ಲಿಸಿದರು. 
    ಭದ್ರಾವತಿ : ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ನೂತನ ಕನ್ನಡ ಸಾಹಿತ್ಯ ಭವನಕ್ಕೆ ನಗರಸಭೆ ಸದಸ್ಯರು ತಮ್ಮ ಒಂದು ತಿಂಗಳ ಗೌರವಧನ ನೀಡುವಂತೆ ಗುರುವಾರ ಭವನ ನಿರ್ಮಾಣ ಸಮಿತಿ ಅಧ್ಯಕ್ಷೆ, ಎಮೆರಿಟಸ್ ಪ್ರಾಧ್ಯಾಪಕಿ ಡಾ. ವಿಜಯದೇವಿ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. 
    ಮನವಿ ಸಲ್ಲಿಸಿದ ನಂತರ ಮಾತನಾಡಿದ ಡಾ. ವಿಜಯದೇವಿ, ಸುಮಾರು ೩೦ ವರ್ಷಗಳ ಹಿಂದೆ ಅಂದಿನ ಪುರಸಭೆ ವತಿಯಿಂದ ಸಿದ್ದಾಪುರ ಎನ್‌ಟಿಬಿ ಬಡಾವಣೆಯಲ್ಲಿ ನೀಡಿರುವ ನಿವೇಶನದಲ್ಲಿ ಇದೀಗ ನೂತನ ಭವನ ನಿರ್ಮಾಣಗೊಳ್ಳುತ್ತಿದೆ. ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರು ಭವನ ನಿರ್ಮಾಣಕ್ಕೆ ಹೆಚ್ಚಿನ ಸಹಕಾರ ನೀಡುತ್ತಿದ್ದು, ಸುಸಜ್ಜಿತವಾದ ಭವನ ನಿರ್ಮಿಸುವ ಗುರಿ ಹೊಂದಿದ್ದಾರೆ. ಈ ಹಿಂದೆ ಶಾಸಕರು ಸಭೆ ನಡೆಸಿ ನಗರಸಭೆ ಸದಸ್ಯರು ತಮ್ಮ ಒಂದು ತಿಂಗಳ ಗೌರವಧನ ಭವನ ನಿರ್ಮಾಣಕ್ಕೆ ನೀಡುವಂತೆ ಮನವಿ ಮಾಡಿದ್ದರು. ಸದಸ್ಯರು ತಮ್ಮ ಒಂದು ತಿಂಗಳ ಗೌರವಧನ ನೀಡುವ ಮೂಲಕ ಕನ್ನಡ ಸೇವೆಗೆ ಕೈಜೋಡಿಸಬೇಕೆಂದರು. 
    ಹಿರಿಯ ಸದಸ್ಯ  ಬಿ.ಕೆ.ಮೋಹನ್ ಮಾತನಾಡಿ, ನುಡಿದಂತೆ ನಡೆಯುವ ಶಾಸಕರು ಹಾಗು ಕುಟುಂಬ ವರ್ಗದವರು ಕನ್ನಡ ಸೇವೆಗಾಗಿ ಸದಾ ಸಿದ್ದವಾಗಿದ್ದೇವೆ. ನಗರಸಭೆ ಎಲ್ಲಾ ಸದಸ್ಯರು ತಮ್ಮ ಒಂದು ತಿಂಗಳ ಗೌರವಧನ ನೀಡುವ ವಿಶ್ವಾಸವಿದೆ ಎಂದರು. 
    ಪೌರಾಯುಕ್ತ ಪ್ರಕಾಶ್ ಎಂ.ಚನ್ನಪ್ಪನವರ್ ಮತ್ತು ಬಿ.ಕೆ ಮೋಹನ್ ಮನವಿ ಸ್ವೀಕರಿಸಿದರು. ನಗರಸಭೆ ಸದಸ್ಯರಾದ ಶೃತಿ ವಸಂತ ಕುಮಾರ್,  ಬಷೀರ್ ಆಹಮದ್, ಕಟ್ಟಡ ಸಮಿತಿ ಕಾರ್ಯದರ್ಶಿ ಎಸ್.ಎಂ.ಸುಧಾಮಣಿ ಕೃತಜ್ಞತೆ ಸಲ್ಲಿಸಿದರು. ಪರಿಷತ್ ಪ್ರಮುಖರಾದ ನಾಗೋಜಿರಾವ್, ಪ್ರಕಾಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಮುಂಗಾರು ಮಳೆಯಿಂದ ನಗರಸಭೆ ವಾರ್ಡ್‌ಗಳಲ್ಲಿ ಸಮಸ್ಯೆಗಳು ಉಲ್ಬಣ

ಹಾಜರಿರಬೇಕಿದ್ದ ಅಧಿಕಾರಿಗಳೇ ಇಲ್ಲದ ಕಾರಣ ಸಾಮಾನ್ಯಸಭೆ ಮುಂದೂಡಿಕೆ  

ಭದ್ರಾವತಿ ನಗರಸಭೆ ಸಾಮಾನ್ಯ ಸಭೆ ಗುರುವಾರ ಪ್ರಮುಖ ಅಧಿಕಾರಿಗಳು ಸಭೆಗೆ ಬಾರದ ಹಿನ್ನಲೆಯಲ್ಲಿ ಮುಂದೂಡಿಕೆಯಾಗಿದ್ದು, ಸಭೆ ಆರಂಭಗೊಳ್ಳುವ ಮೊದಲು ಸದಸ್ಯರು ಕೆಲವು ವಿಚಾರಗಳ ಕುರಿತು ಚರ್ಚಿಸಿದರು.
    ಭದ್ರಾವತಿ: ಮುಂಗಾರು ಮಳೆಯಿಂದ ನಗರಸಭೆ ವ್ಯಾಪ್ತಿಯಲ್ಲಿ ಸಾಕಷ್ಟು ಸಮಸ್ಯೆಗಳು ಎದುರಾಗಿದ್ದು, ಪ್ರಮುಖ ರಸ್ತೆಗಳು, ಚರಂಡಿಗಳು ಹಾಳಾಗಿದ್ದು, ಅಲ್ಲದೆ ಮನೆಗಳು ಶಿಥಿಲಗೊಂಡು ಹಾನಿಗೊಳಗಾಗಿವೆ. ವಾರ್ಡ್‌ಗಳಲ್ಲಿ ಸಮಸ್ಯೆಗಳು ಉಲ್ಬಣಗೊಳ್ಳುತ್ತಿದ್ದು, ಸದಸ್ಯರು ನಿವಾಸಿಗಳ ಹಿಡಿ ಶಾಪಕ್ಕೆ ಗುರಿಯಾಗುತ್ತಿದ್ದಾರೆ. ಮುಂಗಾರು ಮಳೆ  ಆರಂಭಗೊಂಡ ನಂತರ ನಡೆಯುತ್ತಿರುವ ಮೊದಲ ಸಾಮಾನ್ಯ ಸಭೆಗೆ ಹಾಜರಿರಬೇಕಿದ್ದ ತಹಸೀಲ್ದಾರ್ ಸೇರಿದಂತೆ ಪ್ರಮುಖ ಇಲಾಖೆಗಳ ಹಿರಿಯ ಅಧಿಕಾರಿಗಳೇ ಇಲ್ಲದಿರುವುದು ಗುರುವಾರ ನಡೆದ ನಗರಸಭೆ ಸಾಮಾನ್ಯ ಸಭೆಯಲ್ಲಿ ಸದಸ್ಯರ ಆಕ್ರೋಶಕ್ಕೆ ಕಾರಣವಾಯಿತು. ಅಲ್ಲದೆ ಇದೆ ಕಾರಣಕ್ಕೆ ಸಭೆ ಮುಂದೂಡುವಂತಾಯಿತು. 
    ನಗರಸಭೆ ಸಭಾಂಗಣದಲ್ಲಿ ಬೆಳಿಗ್ಗೆ ಅಧ್ಯಕ್ಷೆ ಜೆ.ಸಿ ಗೀತಾ ರಾಜಕುಮಾರ್ ಅಧ್ಯಕ್ಷತೆಯಲ್ಲಿ ಆರಂಭಗೊಂಡ ಸಭೆಯಲ್ಲಿ ಮಾತನಾಡಿದ ಹಿರಿಯ ಸದಸ್ಯ ಬಿ.ಕೆ ಮೋಹನ್, ೨೮ ಸರ್ಕಾರಿ ಇಲಾಖೆಗಳಿಗೆ ಸಾಮಾನ್ಯಸಭೆಗೆ ಆಗಮಿಸುವಂತೆ ತಿಳುವಳಿಕೆ ಪತ್ರ ತಲುಪಿಸಲಾಗಿದ್ದರೂ ಸಹ ಪ್ರಮುಖ ಇಲಾಖೆಗಳ ಜವಾಬ್ದಾರಿ ಸ್ಥಾನ ಹೊಂದಿರುವ ಹಿರಿಯ ಅಧಿಕಾರಿಗಳು ಗೈರು ಹಾಜರಾಗಿರುವುದು ವಿಪರ್ಯಾಸದ ಸಂಗತಿಯಾಗಿದೆ. ಅಲ್ಲದೆ ಕೆಲವು ಕಚೇರಿಯ ಅಧಿಕಾರಿಗಳು ಸಭೆಗೆ ಪ್ರತಿ ಬಾರಿಯೂ ಆಗಮಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಸಭೆ ಮುಂದೂಡುವಂತೆ ಆಗ್ರಹಿಸಿದರು. 
    ನಗರದ ಪ್ರಮುಖ ರಸ್ತೆಗಳು ಗುಂಡಿಗಳಾಗಿದ್ದು, ವಾಹನ ಸವಾರರು ಹಾಗೂ ಪಾದಚಾರಿಗಳ ಸಂಚಾರಕ್ಕೆ ಅಡಚಣೆಯಾಗುತ್ತಿದೆ. ಜನ ಹಿಡಿ ಶಾಪ ಹಾಕುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸಮಸ್ಯೆ ಪರಿಹರಿಸಬೇಕಾದ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಸಭೆಗೆ ಗೈರು ಹಾಜರಾಗಿದ್ದಾರೆ. ಇದೀಗ ಸಭೆ ನಡೆಸುವುದು ಬೇಡ. ಅಧಿಕಾರಿಗಳು ಬರಲಿ ಎಂದು ಬಿ.ಕೆ ಮೋಹನ್ ಪಟ್ಟು ಹಿಡಿದಾಗ ಆಯುಕ್ತರು ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ನಗರಸಭೆ ಸಭೆಗೆ ಆಗಮಿಸುತ್ತಿಲ್ಲ ಎಂದು ಆರೋಪಿಸಿ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿರುವುದಾಗಿ ತಿಳಿಸಿದರು.
    ತಾಲೂಕಿನಾದ್ಯಂತ ಹೆಚ್ಚಿನ ಮಳೆ ಸುರಿಯುತ್ತಿರುವ ಕಾರಣ ನದಿ ಪಾತ್ರದ ಮನೆಗಳು ಸೇರಿದಂತೆ ನಗರಸಭೆ ವ್ಯಾಪ್ತಿಯ ಅನೇಕ ಮನೆಗಳಿಗೆ ಹಾನಿಯಾಗುತ್ತಿದೆ.  ಆದರೆ ಇದಕ್ಕೆ ಪರಿಹಾರ ಸೂಚಿಸಬೇಕಾಗಿರುವ ತಹಶೀಲ್ದಾರ್‌ರವರು ಸಭೆಗೆ ಗೈರು ಹಾಜರಾಗಿರುವ ಕಾರಣ ಮಾಹಿತಿಯನ್ನು ಯಾರ ಬಳಿ ಪಡೆಯಬೇಕು ಎಂದು ಚನ್ನಪ್ಪ ಹಾಗೂ ಟಿಪ್ಪುಸುಲ್ತಾನ್ ಸೇರಿದಂತೆ ಹಲವು ಸದಸ್ಯರು ಪ್ರಶ್ನಿಸಿದರು. ಅಲ್ಲದೆ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಇದುವರೆಗೂ ಯಾವುದೇ ಸಬೆsಗಳಿಗೆ ಹಾಜರಾಗದೆ ನಿರ್ಲಕ್ಷ್ಯ ತಾಳಿರುವುದನ್ನು ತೀವ್ರವಾಗಿ ಖಂಡಿಸಿದರು. 
    ತಹಶೀಲ್ದಾರ್, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(ಹೈವೇ)ದ ಇಂಜಿನಿಯರ್ ಸೇರಿದಂತೆ ಗೈರು ಹಾಜರಾಗಿರುವ ಪ್ರಮುಖ ಇಲಾಖೆಗಳ ಅಧಿಕಾರಿಗಳನ್ನು ಸಭೆಗೆ ಕರೆಸಬೇಕು. ಅಧಿಕಾರಿಗಳು ಬರುವವರೆಗೂ ಸಾಮಾನ್ಯ ಸಭೆಯನ್ನು ಮುಂದೂಡಬೇಕೆಂದು ಆಡಳಿತ ಪಕ್ಷದವರು ಸೇರಿದಂತೆ ಪಕ್ಷಭೇದ ಮರೆತು ಎಲ್ಲಾ ಸದಸ್ಯರು ಆಗ್ರಹಿಸಿ ಸಭೆಯಿಂದ ಹೊರ ನಡೆದರು.
    ಸಭೆ ಆರಂಭಕ್ಕೂ ಮೊದಲು ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಸ್ಮಶಾನದ ಜಾಗವನ್ನು ಪಡೆದಾಗ ರಸ್ತೆ ಒತ್ತುವರಿ ಸಂದರ್ಭದಲ್ಲಿ ಸ್ಮಶಾನದ ಜಾಗದಲ್ಲಿದ್ದ ಗೇಟ್ ತೆರವುಗೊಳಿಸಲಾಗಿದ್ದು,  ಆದರೆ ಇದುವರೆಗೂ ಗೇಟ್ ಅಳವಡಿಸಿದ ಕಾರಣ ಸ್ಮಶಾನವು ಆಕ್ರಮ ದಂಧೆಗಳ ತಾಣವಾಗುತ್ತಿದೆ ಎಂದು ಸದಸ್ಯ ಉದಯ್ ಕುಮಾರ್ ಆರೋಪಿಸಿ, ಕೂಡಲೇ ಗೇಟ್ ಅಳವಡಿಸಿ ಸಮಸ್ಯೆಯನ್ನು ಸರಿಪಡಿಸಿ ಕೊಡಬೇಕೆಂದು ಒತ್ತಾಯಿಸಿದರು.
ನಗರದ ರುದ್ರಭೂಮಿ ಕಾವಲುಗಾರರ ಬಗ್ಗೆ ವಿಷಯ ಸ್ತಾಪಿಸಿ ಸದಸ್ಯ ಬಿ.ಕೆ ಮೋಹನ್ ಮಾತನಾಡಿ, ಸ್ಮಶಾನಗಳಲ್ಲಿ ಕಳ್ಳತನಗಳು ಆಗುತ್ತಿವೆ. ಅದನ್ನು ತಡೆಗಟ್ಟಲು ನಗರಸಭೆಯಿಂದ ಯಾವುದೇ  ಕ್ರಮ  ಕೈಗೊಂಡಿಲ್ಲ ಎಂದು ಆರೋಪಿಸಿದರು. ಕಾವಲುಗಾರರಿಗೆ ವೇತನ ನೀಡಲು ಯಾವ ಸದಸ್ಯರ ವಿರೋದsವಿಲ್ಲ. ಆದರೆ ಸ್ಮಶಾನದಲ್ಲಿನ ಕಳ್ಳತನ ಎಲ್ಲಾ ಸದಸ್ಯರಿಗೂ ಬೇಸರವಿದೆ ಎಂದರು. 
ಪರಿಸರ ಅಭಿಯಂತರ ಪ್ರಭಾಕರ್ ಮಾತನಾಡಿ, ರಾತ್ರಿಯಲ್ಲಿ ಶವ ಸುಡುವ ಪ್ಲೇಟ್‌ಗಳನ್ನು ಕಳ್ಳತನ ಮಾಡುತ್ತಿದ್ದಾರೆ ಎಂದು ಸಭೆಗೆ ತಿಳಿಸಿದರು. ಕೂಡಲೇ ನಗರಸಭೆ ವ್ಯಾಪ್ತಿಯ ಎಲ್ಲಾ ರುದ್ರಭೂಮಿಗಳಲ್ಲಿ ಸಿ.ಸಿ ಕ್ಯಾಮರಗಳನ್ನು ಅಳವಡಿಸಿ ಎಂದು ಬಿ.ಕೆ ಮೋಹನ್ ಸಲಹೆ ವ್ಯಕ್ತಪಡಿಸಿದರು. 
ಉಪಾಧ್ಯಕ್ಷ ಎಂ. ಮಣಿ ಎಎನ್‌ಎಸ್,  ಸ್ಥಾಯಿಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ಪೊಲೀಸ್ ನಗರವೃತ್ತ ನಿರೀಕ್ಷಕ ಶ್ರೀಶೈಲ ಕುಮಾರ್ ಉಪಸ್ಥಿತರಿದ್ದರು.

ನಗರದ ವಿವಿಧೆಡೆ ವಿಜೃಂಭಣೆಯಿಂದ ಜರುಗಿದ ಗುರುಪೂರ್ಣಿಮೆ

ಭದ್ರಾವತಿ ನ್ಯೂಟೌನ್ ಶ್ರೀ ಶಿವ ಸಾಯಿ ಕೃಪಾ ಧಾಮದ ಶಿರಡಿ ಸಾಯಿ ಬಾಬಾರವರ ಮಂದಿರದಲ್ಲಿ ಗುರುಪೂರ್ಣಿಮೆ ಅಂಗವಾಗಿ ಶಿರಡಿ ಸಾಯಿ ಬಾಬಾರವರಿಗೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು. ಬೆಳಿಗ್ಗೆ ೭ ರಿಂದ ಭಕ್ತರಿಗೆ ದರ್ಶನ ಹಾಗು ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು. 
    ಭದ್ರಾವತಿ: ಅಷಾಢ ಮಾಸದ ಪ್ರಮುಖ ಆಚರಣೆಗಳಲ್ಲಿ ಒಂದಾದ ಗುರುಪೂರ್ಣಿಮೆ ಗುರುವಾರ ನಗರದ ವಿವಿಧೆಡೆ ವಿಜೃಂಭಣೆಯಿಂದ ಜರುಗಿತು.  
    ನ್ಯೂಟೌನ್ ಶ್ರೀ ಶಿವ ಸಾಯಿ ಕೃಪಾ ಧಾಮದ ಶಿರಡಿ ಸಾಯಿ ಬಾಬಾರವರ ಮಂದಿರದಲ್ಲಿ ಗುರುಪೂರ್ಣಿಮೆ ಅಂಗವಾಗಿ ಶಿರಡಿ ಸಾಯಿ ಬಾಬಾರವರಿಗೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು. ಬೆಳಿಗ್ಗೆ ೭ ರಿಂದ ಭಕ್ತರಿಗೆ ದರ್ಶನ ಹಾಗು ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು. 
    ಅಲ್ಲದೆ ಶ್ರೀ ಶಿವ ಸಾಯಿ ಕೃಪಾ ಧಾಮದಲ್ಲಿರುವ ಎಲ್ಲಾ ದೇವರುಗಳಿಗೂ ಅಲಂಕಾರದೊಂದಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಶ್ರೀ ಸತ್ಯ ಸಾಯಿ ಸೇವಾ ಕ್ಷೇತ್ರದಲ್ಲಿ ಬೆಳಿಗ್ಗೆ ಓಂಕಾರ, ಸುಪ್ರಭಾತ, ನಗರ ಸಂಕೀರ್ತನೆ, ಬಾಲವಿಕಾಸ ಮಕ್ಕಳಿಂದ ಗುರುಪಾದ ಪೂಜೆ, ಶ್ರೀ ಸಾಯಿ ಸತ್ಯನಾರಾಯಣ ಪೂಜೆ, ಮಧ್ಯಾಹ್ನ ಮಹಾಮಂಗಳಾರತಿ, ಮಹಾನಾರಾಯಣ ಸೇವೆ, ಸಂಜೆ ವೇದಪಠಣ, ಶ್ರೀ ಸಾಯಿ ಪಾದುಕ ಅಷ್ಟೋತ್ತರ ಪಠಣ, ಭಜನೆ, ಚಿಂತನೆ ಮತ್ತು  ಮಹಾಮಂಗಳಾರತಿ, ಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆ ನೆರವೇರಿದವು. 


ಭದ್ರಾವತಿ ನ್ಯೂಟೌನ್ ಶ್ರೀ ಸತ್ಯ ಸಾಯಿ ಸೇವಾ ಕ್ಷೇತ್ರದಲ್ಲಿ ಬೆಳಿಗ್ಗೆ ಓಂಕಾರ, ಸುಪ್ರಭಾತ, ನಗರ ಸಂಕೀರ್ತನೆ, ಬಾಲವಿಕಾಸ ಮಕ್ಕಳಿಂದ ಗುರುಪಾದ ಪೂಜೆ, ಶ್ರೀ ಸಾಯಿ ಸತ್ಯನಾರಾಯಣ ಪೂಜೆ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು. 
    ನ್ಯೂಟೌನ್, ಸುರಗಿತೋಪು, ಕಾಗದನಗರ, ಜೆಪಿಎಸ್ ಕಾಲೋನಿ, ವಿದ್ಯಾಮಂದಿರ, ಹುಡ್ಕೋಕಾಲೋನಿ, ಬಾಲಭಾರತಿ, ಆಂಜನೇಯ ಅಗ್ರಹಾರ, ವಿದ್ಯಾಮಂದಿರ, ಗಣೇಶ್ ಕಾಲೋನಿ, ಜನ್ನಾಪುರ, ಹುತ್ತಾ ಕಾಲೋನಿ ಸೇರಿದಂತೆ ವಿವಿಧೆಡೆಗಳಿಂದ ಭಕ್ತರು ಆಗಮಿಸಿದ್ದರು. 
    ರಾಘವೇಂದ್ರ ಸ್ವಾಮಿಗಳವರ ಮಠದಲ್ಲಿ ಗುರುಪೂರ್ಣಿಮೆ: 
    ಹಳೇನಗರದ ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠದ ಗುರುಪೂರ್ಣಿಮೆ ವಿಜೃಂಭಣೆಯಿಂದ ಜರುಗಿತು. ರಾಯರ ಬೃಂದಾವನಕ್ಕೆ ವಿಶೇಷ ಅಲಂಕಾರ, ಅಭಿಷೇಕ, ವಿಶೇಷ ಪೂಜೆ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು. 


ಭದ್ರಾವತಿ ಹಳೇನಗರದ ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠದ ಗುರುಪೂರ್ಣಿಮೆ ವಿಜೃಂಭಣೆಯಿಂದ ಜರುಗಿತು. ರಾಯರ ಬೃಂದಾವನಕ್ಕೆ ವಿಶೇಷ ಅಲಂಕಾರ, ಅಭಿಷೇಕ, ವಿಶೇಷ ಪೂಜೆ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು. 
    ಶ್ರೀ ಗುರುರಾಜ ಸೇವಾ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರು, ಮಠದ ಪ್ರಧಾನ ಅರ್ಚಕರು, ಸೇವಾಕರ್ತರು ಉಪಸ್ಥಿತರಿದ್ದರು. ಸಿದ್ಧಾರೂಢನಗರ, ಹಳೇನಗರ, ಹೊಸಮನೆ ಸೇರಿದಂತೆ ನಗರದ ವಿವಿಧೆಡೆಗಳಿಂದ ಭಕ್ತರು ಪಾಲ್ಗೊಂಡಿದ್ದರು.