ಗುರುವಾರ, ಜುಲೈ 17, 2025

ಕೆಂಪೇಗೌಡ ಜಯಂತಿ: ರಸ ಪ್ರಶ್ನೆ-ಪ್ರಬಂಧ ಸ್ಪರ್ಧೆ

    ಭದ್ರಾವತಿ : ಶ್ರೀ ನಾಡಪ್ರಭು ಕೆಂಪೇಗೌಡರ ೫೧೬ನೇ ಜಯಂತಿ ಅಂಗವಾಗಿ ನ್ಯೂಟೌನ್ ಆದಿಚುಂಚನಗಿರಿ ವಿದ್ಯಾಸಂಸ್ಥೆ(ಎಸ್‌ಎವಿ)ಯಲ್ಲಿ ಜು.೨೨ರ ಮಂಗಳವಾರ ಬೆಳಗ್ಗೆ ೧೦.೩೦ಕ್ಕೆ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ರಸಪ್ರಶ್ನೆ, ಪ್ರಬಂಧ, ಆಶುಭಾಷಣ ಮತ್ತು ಚಿತ್ರ ಕಲೆ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.  
    ಜಿಲ್ಲಾಧಿಕಾರಿಗಳು ಮತ್ತು ಶಾಲಾ ಶಿಕ್ಷಣ ಇಲಾಖೆ ಜಿಲ್ಲಾ ಉಪನಿರ್ದೇಶಕರ ಸೂಚನೆಯಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ನೇತೃತ್ವದಲ್ಲಿ ಶ್ರೀ ನಾಡಪ್ರಭು ಕೆಂಪೇಗೌಡರಿಗೆ ಸಂಬಂಧಿಸಿದಂತೆ ಸ್ಪರ್ಧೆಗಳನ್ನು ಆಯೋಜಿಸಿಲಾಗಿದೆ. ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳ ತಲಾ ಇಬ್ಬರು ವಿದ್ಯಾರ್ಥಿಗಳಂತೆ ಭಾಗವಹಿಸಬಹುದಾಗಿದೆ. 

ವೈದ್ಯರು, ಸಿಬ್ಬಂದಿಗಳ ಗುರುತಿಸಿ ಪ್ರೋತ್ಸಾಹಿಸುವ ಕಾರ್ಯ ನಿರಂತರ : ಕೆ. ಸುಶೀಲಬಾಯಿ

ಭದ್ರಾವತಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡವರಿಗೆ ಬೀಳ್ಕೊಡುಗೆ, ಹೊಸದಾಗಿ ಆಗಮಿಸಿದವರಿಗೆ ಸ್ವಾಗತಿಸಿ ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ: ರೋಗಿಗಳ ಸೇವೆ ಸಲ್ಲಿಸುತ್ತಿರುವ ವೈದ್ಯರು ಮತ್ತು ವಿವಿಧ ಇಲಾಖೆಗಳ ನೌಕರರಿಗೆ ಸಂಘವು ಬೆನ್ನೆಲುಬಾಗಿ ನಿಂತು ಗುರುತಿಸುವ ಕಾರ್ಯ ಮಾಡುತ್ತಿದೆ ಎಂದು ಆರೋಗ್ಯ ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಸಂಘದ ಅಧ್ಯಕ್ಷೆ ಕೆ. ಸುಶೀಲಾಬಾಯಿ ಹೇಳಿದರು.
    ಅವರು ಹಳೇನಗರದ ಸಾರ್ವಜನಿಕ ಆಸ್ಪತ್ರೆಯ ತಾಲೂಕು ವೈದ್ಯಾಧಿಕಾರಿಗಳ ಕಚೇರಿ ಆವರಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಸಂಘದಿಂದ ರಾಷ್ಟ್ರೀಯ ವೈದ್ಯರ, ಶುಶ್ರೂಷಕರ, ಲಿಪಿಕ, ಪ್ರಯೋಗ ಶಾಲೆ, ತಾಂತ್ರಿಕ ಅಧಿಕಾರಿಗಳ, ಆರೋಗ್ಯ ನಿರೀಕ್ಷಕರ ಮತ್ತು ನೌಕರರ ದಿನಾಚರಣೆ ಹಾಗೂ ವರ್ಗಾವಣೆಗೊಂಡ ವೈದ್ಯ ಸಿಬ್ಬಂದಿಗಳಿಗೆ ಬೀಳ್ಕೊಡುಗೆ ಮತ್ತು ನೂತನವಾಗಿ ಆಗಮಿಸಿದವರಿಗೆ ಸ್ವಾಗತಿಸುವ ಕಾರ್ಯಕ್ರಮದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿ, ಆಸ್ಪತ್ರೆಯಲ್ಲಿ ಶ್ರಮಿಸುತ್ತಿರುವ ಸಿಬ್ಬಂದಿ, ನೌಕರರಿಗೆ ಉತ್ತೇಜನ ನೀಡುವ ಕಾರ್ಯ ಸಂಘ ಮುನ್ನಡೆಸಿಕೊಂಡು ಬರುತ್ತಿದೆ ಎಂದರು. 
    ಸಂಘದ ಗೌರವಾಧ್ಯಕ್ಷ, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯಾವುದೇ ಸಂಘ-ಸಂಸ್ಥೆಗಳಿಗೆ ಸಂಘಟನೆಯೇ ಶಕ್ತಿ ಎಂಬುದನ್ನು ಯಾರೂ ಮರೆಯಬಾರದು. ಸಂಘಟನೆ ಬಲವಾಗಿದ್ದರೆ ಎಂತಹ ಕ್ಲಿಷ್ಟ ಪರಿಸ್ಥಿತಿಯನ್ನೂ ನಿಭಾಯಿಸಬಹುದು. ಅಂತಹ ಕಾರ್ಯ ನಮ್ಮ ಸಂಘ ಮಾಡಿಕೊಂಡು ಬರುತ್ತಿದೆ. ಮುಂದೆಯೂ ಸಹ ಎಲ್ಲರ ಸಹಕಾರ ಮುಖ್ಯವಾಗಿದೆ ಎಂದರು. 
    ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಶಂಕರಪ್ಪ ಮಾತನಾಡಿ, ನೌಕರರು ಆರೋಗ್ಯ ರಕ್ಷಣೆಗೆ ಒತ್ತು ನೀಡಬೇಕು. ಜೊತೆಗೆ ಸಂಘದ ಕಾರ್ಯಕ್ರಮಗಳು ನಿರಂತರವಾಗಿ ಮುನ್ನಡೆಯುವ ಮೂಲಕ ನೌಕರರ ಹಿತರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದರು.  
     ಸಂಘದ ಪದಾಧಿಕಾರಿಗಳಾದ ಲೋಕೇಶ್, ಶ್ರೀನಿವಾಸ್ ಬಾಗೋಡಿ, ಡಾ. ಅಚ್ಚುತ್, ಡಾ. ಎಚ್.ಎಸ್ ಗಿರೀಶ್, ಇ.ಎ ಅಹಮದ್ ಖಾನ್, ಶೀಲಾಮೇರಿ, ನಾಗರತ್ನ, ಹರೀಶ್, ಪ್ರಶಾಂತ್, ಆನಂದಮೂರ್ತಿ, ಉಮೇಶ್, ನಾಗರಾಜ್, ಧನಂಜಯ್ ಕಟವಾಕರ್ ಸೇರಿದಂತೆ ವಿವಿಧ ವೃಂದದ ಪದಾಧಿಕಾರಿಗಳು, ನೌಕರರು ಉಪಸ್ಥಿತರಿದ್ದರು. 

ಕರಾಟೆ ಪಂದ್ಯಾವಳಿಯಲ್ಲಿ ಕಿಂಗ್ ಕಿಕ್ ಮೆಟೇರಿಯಲ್ ಆರ್ಟ್ಸ್ ಕ್ರೀಡಾಪಟುಗಳಿಗೆ ಬಹುಮಾನ

ಕಿಂಗ್ ಕಿಕ್ ಮೆಟೇರಿಯಲ್ ಆರ್ಟ್ಸ್ ಆಕಾಡೆಮಿ, ಬೆಂಗಳೂರು ವತಿಯಿಂದ ಆಯೋಜಿಸಲಾಗಿದ್ದ ೨೦ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್ ಪಂದ್ಯಾವಳಿಯಲ್ಲಿ ಭದ್ರಾವತಿ ನಗರದ ಕಿಂಗ್ ಕಿಕ್ ಮೆಟೇರಿಯಲ್ ಆರ್ಟ್ಸ್‌ನ ಕ್ರೀಡಾಪಟುಗಳು ಭಾಗವಹಿಸಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. 
    ಭದ್ರಾವತಿ : ಕಿಂಗ್ ಕಿಕ್ ಮೆಟೇರಿಯಲ್ ಆರ್ಟ್ಸ್ ಆಕಾಡೆಮಿ, ಬೆಂಗಳೂರು ವತಿಯಿಂದ ಆಯೋಜಿಸಲಾಗಿದ್ದ ೨೦ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್ ಪಂದ್ಯಾವಳಿಯಲ್ಲಿ ನಗರದ ಕಿಂಗ್ ಕಿಕ್ ಮೆಟೇರಿಯಲ್ ಆರ್ಟ್ಸ್‌ನ ಕ್ರೀಡಾಪಟುಗಳು ಭಾಗವಹಿಸಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. 
    ಕಿಂಗ್ ಕಿಕ್ ಮೆಟೇರಿಯಲ್ ಆರ್ಟ್ಸ್ ಅಧ್ಯಕ್ಷರಾದ ದೇವರಾಜ್ ನೇತೃತ್ವದಲ್ಲಿ ತರಬೇತಿದಾರರಾದ ಶಬರಿಷ್, ಮನ್ಸೂರ್, ಪ್ರೇಮ್ ಸಾಗರ್, ಪ್ರೇಮ್ ಕುಮಾರ್ ಮತ್ತು ಮನೋಜ್ ಕುಮಾರ್          ಮಾರ್ಗದರ್ಶನದಲ್ಲಿ ಸುಮಾರು ೩೫ ಕ್ರೀಡಾಪಟುಗಳು ಪಂದ್ಯಾವಳಿ ಭಾಗವಹಿಸಿದ್ದಾರೆ. 
    ಈ ಪೈಕಿ ೧೦ ಮೊದಲ ಬಹುಮಾನ, ೧೫ ದ್ವಿತೀಯ ಬಹುಮಾನ ಮತ್ತು ೫ ತೃತೀಯ ಬಹುಮಾನ ತಮ್ಮದಾಗಿಸಿಕೊಂಡು ಕೀರ್ತಿ ತಂದಿದ್ದಾರೆ. ಈ ಕ್ರೀಡಾಪಟುಗಳನ್ನು ಕಿಂಗ್ ಕಿಕ್ ಮೆಟೇರಿಯಲ್ ಆರ್ಟ್ಸ್ ಅಧ್ಯಕ್ಷರು ಮತ್ತು ನಗರದ ವಿವಿಧ ಸಂಘ-ಸಂಸ್ಥೆಗಳು, ಗಣ್ಯರು ಅಭಿನಂದಿಸಿದ್ದಾರೆ.   

ಜು.೧೮ರಂದು `ಭಾವಗೀತೆಗಳ ಗೀತಗಾಯನ' ಕಾರ್ಯಕ್ರಮ



    ಭದ್ರಾವತಿ : ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ದಿವಂಗತ ಡಾ. ಎಚ್.ಎಸ್ ವೆಂಕಟೇಶ್‌ಮೂರ್ತಿಯವರ ಸ್ಮರಣಾರ್ಥ ಜು.೧೮ರ ಶುಕ್ರವಾರ ಸಂಜೆ ೪.೩೦ಕ್ಕೆ ಹಳೇನಗರ ತಾಲೂಕು ಕಛೇರಿ ರಸ್ತೆಯಲ್ಲಿರುವ ಶ್ರೀ ವೀರಭದ್ರೇಶ್ವರ ಸಮುದಾಯ ಭವನದಲ್ಲಿ `ಭಾವಗೀತೆಗಳ ಗೀತಗಾಯನ' ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.  
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ತಾಲೂಕು ಅಧ್ಯಕ್ಷ ಎಚ್. ತಿಮ್ಮಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಜನ್ನಾಪುರ ಸಂಗೀತ ಶಿಕ್ಷಕಿ ಗಾಯಿತ್ರಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದು, ನಿವೃತ್ತ ಪ್ರಾಂಶುಪಾಲ ಡಾ. ಕೆ. ನಿತ್ಯಾನಂದ ಉಪನ್ಯಾಸ ನೀಡಲಿದ್ದಾರೆ. ಕನ್ನಡ ಸಾಹಿತ್ಯ, ಸಾಂಸ್ಕೃತಿಕ ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ, ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷ ಎಂ.ಆರ್ ರೇವಣಪ್ಪ ಉಪಸ್ಥಿತರಿರುವರು. 
ಸುಮತಿ ಕಾರಂತ್, ಕಮಲಾಕುಮಾರಿ, ಆರ್.ಜಿ ಭಾರ್ಗವಿ, ಎನ್.ಎಂ ಸುನಂದ, ಅನುಪಮ ಚನ್ನೇಶ್, ಎಚ್.ಸಿ ಸುನಂದ, ವಾಣಿಶ್ರೀ ನಾಗರಾಜ್, ಶ್ಯಾಮಲ, ಸುಚಿತ್ರ, ದಿವಾಕರ್, ಡಿ.ಆರ್ ಹರೀಶ್ ಮತ್ತು ರುದ್ರೇಶ್ ಸೇರಿದಂತೆ ಇನ್ನಿತರರು ಗಾಯನ ಪ್ರಸ್ತುತಪಡಿಸಲಿದ್ದಾರೆ.

ಸ್ತನ ಕ್ಯಾನ್ಸರ್ ಸೂಕ್ತ ಸಮಯದಲ್ಲಿ ಚಿಕಿತ್ಸೆ ಪಡೆದುಕೊಳ್ಳಿ : ಡಾ. ಅನುರಾಧ ಪಟೇಲ್

ಭದ್ರಾವತಿ ನ್ಯೂಟೌನ್ ರೋಟರಿ ಕ್ಲಬ್ ಸಭಾಂಗಣದಲ್ಲಿ ಗುರುವಾರ ರೋಟರಿ ಕ್ಲಬ್ ಸಹಯೋಗದೊಂದಿಗೆ ಶಿವಮೊಗ್ಗ ನಾರಾಯಣ ಹೃದಯಾಲಯ ವತಿಯಿಂದ ಸ್ತನ  ಕ್ಯಾನ್ಸರ್ ತಪಾಸಣಾ ಶಿಬಿರ ಏರ್ಪಡಿಸಲಾಗಿತ್ತು.  
    ಭದ್ರಾವತಿ: ಮಹಿಳೆಯರು ಸ್ತನ ಕ್ಯಾನ್ಸರ್ ಕುರಿತು ಆತಂಕಪಡುವ ಅಗತ್ಯವಿಲ್ಲ. ಅಲ್ಲದೆ ಯಾವುದೇ ರೀತಿ ಹಿಂಜರಿಕೆಗೆ ಒಳಗಾಗದೆ ಸೂಕ್ತ ಸಮಯದಲ್ಲಿ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯ ಕಾಪಾಡಿಕೊಳ್ಳುವಂತೆ ನಗರದ ಚುಂಚಾದ್ರಿ ಮಹಿಳಾ ವೇದಿಕೆ ಗೌರವಾಧ್ಯಕ್ಷೆ ಡಾ. ಅನುರಾಧ ಪಟೇಲ್ ಹೇಳಿದರು. 
    ನಗರದ ನ್ಯೂಟೌನ್ ರೋಟರಿ ಕ್ಲಬ್ ಸಭಾಂಗಣದಲ್ಲಿ ಗುರುವಾರ ರೋಟರಿ ಕ್ಲಬ್ ಸಹಯೋಗದೊಂದಿಗೆ ಶಿವಮೊಗ್ಗ ನಾರಾಯಣ ಹೃದಯಾಲಯ ವತಿಯಿಂದ ಏರ್ಪಡಿಸಲಾಗಿದ್ದ ಸ್ತನ  ಕ್ಯಾನ್ಸರ್ ತಪಾಸಣಾ ಶಿಬಿರದ ನೇತೃತ್ವವಹಿಸಿ ಮಾತನಾಡಿದರು. 
    ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇರಲಿ ಮಹಿಳೆಯರು ಮೊದಲು ತಮ್ಮ ಆರೋಗ್ಯಕ್ಕೆ ಹೆಚ್ಚಿನ ಗಮನ ನೀಡಬೇಕು. ಮಹಿಳೆಯರು ಆರೋಗ್ಯವಂತರಾಗಿದ್ದರೆ ಕುಟುಂಬ ನೆಮ್ಮೆದಿಯಿಂದ ಇರಲು ಸಾಧ್ಯ ಎಂದರು. 
    ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಅಧ್ಯಕ್ಷತೆ ವಹಿಸಿದ್ದರು. ತಜ್ಞ ವೈದ್ಯೆ ಡಾ. ಸ್ವಾತಿ ಸ್ತನ ಕ್ಯಾನ್ಸರ್ ಕುರಿತು ಮಾಹಿತಿ ನೀಡಿ, ಸೂಕ್ತ ಸಮಯದಲ್ಲಿ ಚಿಕಿತ್ಸೆ ಪಡೆದುಕೊಳ್ಳುವ ಮೂಲಕ ಗುಣಮುಖರಾಗುವಂತೆ ಕರೆ ನೀಡಿದರು.  ರೋಟರಿ ಕ್ಲಬ್ ಅಧ್ಯಕ್ಷ ಕೆ.ಎಚ್ ಶಿವಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. 
    ಕ್ಲಬ್ ಪ್ರಮುಖರಾದ ಕೂಡ್ಲಿಗೆರೆ ಹಾಲೇಶ್, ಶ್ರೀನಿವಾಸ್, ದುಷ್ಯಂತ್‌ರಾಜ್, ಗಿರೀಶ್ ಮತ್ತು ರೋಟರಿ ಕ್ಲಬ್ ಪದಾಧಿಕಾರಿಗಳು, ನಿರ್ದೇಶಕರು, ನಾರಾಯಣ ಹೃದಯಾಲಯ ಆಸ್ಪತ್ರೆ ಮಾರುಕಟ್ಟೆ ವಿಭಾಗದ ವ್ಯವಸ್ಥಾಪಕ ಗಣೇಶ್, ಶಿಬಿರದ ಸಂಯೋಜಕ ರವಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಬುಧವಾರ, ಜುಲೈ 16, 2025

ಭದ್ರಾ ನದಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ತಡೆಗೋಡೆ ನಿರ್ಮಾಣಕ್ಕೆ ೫೦ ಕೋ. ರು. ಅನುದಾನ

ಜಲಸಂಪನ್ಮೂಲ ಇಲಾಖೆಯಿಂದ ಆಡಳಿತಾತ್ಮಕ ಅನುಮೋದನೆ 

ಭದ್ರಾವತಿ ನಗರದ ಹೃದಯ ಭಾಗದಲ್ಲಿ ಹರಿಯುತ್ತಿರುವ ಭದ್ರಾ ನದಿ
    ಭದ್ರಾವತಿ: ನಗರದ ಹೃದಯ ಭಾಗದಲ್ಲಿ ಹರಿಯುತ್ತಿರುವ ಭದ್ರಾ ನದಿಯ ಎಡ ಮತ್ತು ಬಲ ದಂಡೆಗಳಲ್ಲಿ ಪ್ರವಾಹ ಪೀಡಿತ ಪ್ರದೇಶಗಳನ್ನು ರಕ್ಷಿಸಲು ತಡೆಗೋಡೆ ನಿರ್ಮಿಸಲು ೫೦ ಕೋ. ರು. ಅನುದಾನ ಬಿಡುಗಡೆಗೊಳಿಸಲಾಗಿದ್ದು, ಈ ಸಂಬಂಧ ಜಲಸಂಪನ್ಮೂಲ ಇಲಾಖೆ ವಿಶೇಷ ಕರ್ತವ್ಯಾಧಿಕಾರಿ ಕೆ. ಶುಭಾ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶ ಹೊರಡಿಸಿದ್ದಾರೆ. 
ಜು.೨ರ ಸಚಿವ ಸಂಪುಟ ಸಭೆಯ ನಿರ್ಣಯದಂತೆ ೫೦ ಕೋ.ರು. ಅಂದಾಜು ಮೊತ್ತದಲ್ಲಿ (೨೦೨೩-೨೪ನೇ ಸಾಲಿನ ಏಕರೂಪ ದರಪಟ್ಟಿಯನ್ವಯ) ತಡೆಗೋಡೆ ಕಾಮಗಾರಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
    ನಗರದ ಹೃದಯ ಭಾಗದಲ್ಲಿ ಭದ್ರಾ ನದಿ ೩ ಕಿ.ಮೀ ಹರಿಯುತ್ತಿದ್ದು, ಭದ್ರಾ ಜಲಾಶಯದಿಂದ ಹೆಚ್ಚುವರಿ ನೀರನ್ನು ನದಿಗೆ ಬಿಟ್ಟಾಗ ಹಲವಾರು ವರ್ಷಗಳಿಂದ ನದಿಯ ಎಡ ಮತ್ತು ಬಲ ಭಾಗದಲ್ಲಿರುವ ಅಂಬೇಡ್ಕರ್ ಕಾಲೋನಿ, ಗೌಳಿಗರ ಬೀದಿ, ಚಾಮೇಗೌಡ ಏರಿಯಾ, ಗುಂಡೂರಾವ್ ಶೆಡ್ ಮತ್ತು ಯಕಿನ್ಸಾ ಕಾಲೋನಿಗಳಲ್ಲಿ ವಾಸಿಸುತ್ತಿರುವ ಮನೆಗಳಿಗೆ ನೀರು ನುಗ್ಗಿ ಮನೆಗಳಿಗೆ ಹಾನಿ ಉಂಟಾಗುತ್ತಿದೆ. ಈ ಹಿನ್ನಲೆಯಲ್ಲಿ ನದಿಯ ಎರಡು ಬದಿಯಲ್ಲಿ ತಡೆಗೋಡೆ ನಿರ್ಮಿಸುವಂತೆ ಬಹಳ ವರ್ಷಗಳಿಂದ ಸರ್ಕಾರಕ್ಕೆ ಒತ್ತಾಯಿಸಲಾಗುತ್ತಿದೆ. ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರ ನಿರಂತರ ಪ್ರಯತ್ನದ ಫಲವಾಗಿ ಇದೀಗ ಬೇಡಿಕೆ ಈಡೇರಿದ್ದು, ಮಳೆಗಾಲ ಮುಕ್ತಾಯಗೊಂಡ ನಂತರ ಕಾಮಗಾರಿ ಆರಂಭಗೊಳ್ಳುವ ನಿರೀಕ್ಷೆ ಇದೆ. 
    ಗೌಳಿಗರ ಬೀದಿಯಲ್ಲಿ ೪೦೦ ಮೀ., ಚಾಮೇಗೌಡ ಏರಿಯಾದಲ್ಲಿ ೪೦೦ ಮೀ., ಯಕಿನ್ಸಾ ಕಾಲೋನಿಯಲ್ಲಿ ೧೨೫ ಮೀ. ಮತ್ತು ಗುಂಡೂರಾವ್ ಶೆಡ್‌ನಲ್ಲಿ ೧೯೦ ಮೀ. ಸೇರಿದಂತೆ ಒಟ್ಟು ೧೧೧೫ ಮೀ. ತಡೆಗೋಡೆ ನಿರ್ಮಿಸಲಾಗುತ್ತಿದೆ.  

ಹಳೇನಗರ ಪೊಲೀಸರಿಂದ ೧ ಕೆ.ಜಿ ೧೪೦ ಗ್ರಾಂ ಗಾಂಜಾ ವಶ

ಭದ್ರಾವತಿ ಹೊಳೆಹೊನ್ನೂರು ರಸ್ತೆ ಸೀಗೇಬಾಗಿ ಕ್ರಾಸ್ ಬಸ್ ನಿಲ್ದಾಣದ ಸಮೀಪ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ ೧ ಕೆ.ಜಿ ೧೪೦ ಗ್ರಾಂ. ತೂಕದ ಗಾಂಜಾ ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಳ್ಳುವಲ್ಲಿ ಹಳೇನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. 
    ಭದ್ರಾವತಿ : ಬಸ್ ನಿಲ್ದಾಣದ ಸಮೀಪ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ ೧ ಕೆ.ಜಿ ೧೪೦ ಗ್ರಾಂ. ತೂಕದ ಗಾಂಜಾ ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಳ್ಳುವಲ್ಲಿ ಹಳೇನಗರ ಠಾಣೆ ಪೊಲೀಸರು ಯಶಸ್ವಿಯಾಗಿರುವ ಘಟನೆ ನಡೆದಿದೆ. 
    ಹೊಳೆಹೊನ್ನೂರು ರಸ್ತೆ ಸೀಗೇಬಾಗಿ ಕ್ರಾಸ್ ಬಸ್ ನಿಲ್ದಾಣದ ಬಳಿ ಇಬ್ಬರು ಅಪರಿಚಿತ ವ್ಯಕ್ತಿಗಳು ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಠಾಣಾ ಉಪ ನಿರೀಕ್ಷಕ ಸುನೀಲ್ ಬಿ ತೇಲಿಯವರ ನೇತೃತ್ವದಲ್ಲಿ ಜು.೧೨ರಂದು ಮಧ್ಯಾಹ್ನ ದಾಳಿ ನಡೆಸಲಾಗಿದ್ದು, ಅಕ್ರಮವಾಗಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ ನಾಗರಾಜ್ ಮತ್ತು ಕಾರ್ತಿಕ್‌ರನ್ನು ಬಂಧಿಸಿ ಇವರಿಂದ ಸುಮಾರು ೨೦ ಸಾವಿರ ರು. ಮೌಲ್ಯದ ೧ ಕೆ.ಜಿ ೧೪೦ ಗ್ರಾಂ. ತೂಕದ ಗಾಂಜಾ ಮತ್ತು ಗಾಂಜಾ ಮಾರಾಟದಿಂದ ಬಂದ ರು.೧,೫೦೦ ನಗದು ಹಾಗು ಸುಮಾರು ೬೦ ಸಾವಿರ ರು. ಮೌಲ್ಯದ ದ್ವಿಚಕ್ರ ವಾಹನ ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 
    ಕಾರ್ಯಾಚರಣೆಯಲ್ಲಿ ನಗರಸಭೆ ಸಿಬ್ಬಂದಿಗಳಾದ ಆಶಾಲತಾ, ರವಿ, ಜಿಲ್ಲಾ ಸಹಾಯಕ ಡ್ರಗ್ ಕಂಟ್ರೋಲರ್ ಡಾ. ವೀರೇಶ್ ಬಾಬು,  ಪೊಲೀಸ್ ಸಿಬ್ಬಂದಿಗಳಾದ ಹಾಲಪ್ಪ, ಚಿನ್ನನಾಯ್ಕ, ಚಿಕ್ಕಪ್ಪ, ಮೌನೇಶ, ಪ್ರಪ್ಪೂಲ್, ರಾಘವೇಂದ್ರ, ಚಂದ್ರು, ವೀರನಗೌಡ, ಮಂಜುನಾಥ ಮತ್ತು ಶಬ್ಬಿರ್ ಪಾಲ್ಗೊಂಡ್ಡಿದ್ದರು.