ಶುಕ್ರವಾರ, ಜುಲೈ 25, 2025

ಸರ್ಕಾರಿ ಡಿ' ದರ್ಜೆ ನೌಕರರ ಸಂಘದ ಅಧ್ಯಕ್ಷ ನಂಜುಂಡಸ್ವಾಮಿ ನಿಧನ


ನಂಜುಂಡಸ್ವಾಮಿ 
    ಭದ್ರಾವತಿ : ತಾಲೂಕು ಸಮಾಜ ಕಲ್ಯಾಣ ಇಲಾಖೆ ಡಿ' ದರ್ಜೆ ನೌಕರ, ನಗರದ ಬೊಮ್ಮನಕಟ್ಟೆ ನಿವಾಸಿ ನಂಜುಂಡಸ್ವಾಮಿ(೫೯) ಶುಕ್ರವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನ ಹೊಂದಿದರು. 
    ಇವರಿಗೆ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕಿ, ಪತ್ನಿ ನೀಲಮ್ಮ ಸೇರಿದಂತೆ ಪುತ್ರಿ ಹಾಗು ಇಬ್ಬರು ಪುತ್ರರಿದ್ದಾರೆ. ನಂಜುಂಡಸ್ವಾಮಿಯವರು ಕರ್ನಾಟಕ ರಾಜ್ಯ ಸರ್ಕಾರಿ ಡಿ' ದರ್ಜೆ ನೌಕರರ ಸಂಘದ ತಾಲೂಕು ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ಇವರ ಅಂತ್ಯಕ್ರಿಯೆ ಶನಿವಾರ ಬೆಳಗ್ಗೆ ೧೧ ಗಂಟೆಗೆ ಬೊಮ್ಮನಕಟ್ಟೆ ರುದ್ರಭೂಮಿಯಲ್ಲಿ ನಡೆಯಲಿದೆ. ಇವರ ನಿಧನಕ್ಕೆ ಡಿ' ದರ್ಜೆ ಸರ್ಕಾರಿ ನೌಕರರು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಗಣ್ಯರು ಸಂತಾಪ ಸೂಚಿಸಿದ್ದಾರೆ. 

ಜು.೨೭ರಂದು ಕುರುಬರ ಸಂಘಕ್ಕೆ ಚುನಾವಣೆ

    

    ಭದ್ರಾವತಿ: ಹಳೇನಗರ ಬಸವೇಶ್ವರ ವೃತ್ತದ ತಾಲೂಕು ಕುರುಬರ ಸಂಘದ ಕಾರ್ಯಕಾರಿ ಸಮಿತಿ ಚುನಾವಣೆ ಜು.೨೭ರ ಭಾನುವಾರ ಬೆಳಿಗ್ಗೆ ೯ ಗಂಟೆಯಿಂದ ೪ ಗಂಟೆವರೆಗೆ ನಡೆಯಲಿದೆ. 
    ಕಾರ್ಯಕಾರಿ ಸಮಿತಿ ೩ ವರ್ಷಗಳ ಅವಧಿಗೆ ಒಟ್ಟು ೧೫ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಹಳೇನಗರ ಬಸವೇಶ್ವರ ವೃತ್ತದ ಶ್ರೀ ಕನಕ ವಿದ್ಯಾಸಂಸ್ಥೆಯಲ್ಲಿ ಮತದಾನ ನಡೆಯಲಿದೆ. ಈಗಾಗಲೇ ಅಭ್ಯರ್ಥಿಗಳು ಪ್ರಚಾರ ಕಾರ್ಯದಲ್ಲಿ ತೊಡಗಿದ್ದು, ಈ ಹಿಂದಿನ ಚುನಾವಣೆಗಳಲ್ಲಿ ಮತದಾರರು ಹೆಚ್ಚಿನ ಉತ್ಸಾಹದಿಂದ ಮತದಾನದಲ್ಲಿ ಪಾಲ್ಗೊಂಡು ಗಮನ ಸೆಳೆದಿದ್ದರು. ಈ ಬಾರಿ ಸಹ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭರವಸೆ ಅಭ್ಯರ್ಥಿಗಳು ಹೊಂದಿದ್ದಾರೆ. 

`ಕರ್ನಾಟಕ ಸ್ಟಾರ್ ಸಿಂಗರ್ ಸೀಸನ್-೨' ಲಾಂಛನ, ಕರಪತ್ರ ಬಿಡುಗಡೆ

ಭದ್ರಾವತಿಯಲ್ಲಿ ಆಗಸ್ಟ್‌ನಲ್ಲಿ ನಡೆಯಲಿರುವ `ಕರ್ನಾಟಕ ಸ್ಟಾರ್ ಸಿಂಗರ್ ಸೀಸನ್-೨' ರಾಜ್ಯಮಟ್ಟದ ಚಲನಚಿತ್ರ ಗೀತೆಗಳ ಗಾಯನ ಸ್ಪರ್ಧೆ ಕಾರ್ಯಕ್ರಮದ ಲಾಂಛನ ಮತ್ತು ಕರಪತ್ರ ಸರ್ಕಾರದ ೫ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್ ಬಿಡುಗಡೆಗೊಳಿಸಿದರು. 
    ಭದ್ರಾವತಿ: ಯುವ ಗಾಯಕರನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕಳೆದ ಕೆಲವು ವರ್ಷಗಳಿಂದ ಶಿವಮೊಗ್ಗ ಜಿಲ್ಲಾ ಸಾಂಸ್ಕೃತಿಕ ಕಲಾವಿದರ ಸಂಘ(ಎಸ್‌ಡಿಸಿಎಎ)ದ ವತಿಯಿಂದ ಆಯೋಜಿಸಿಕೊಂಡು ಬರುತ್ತಿರುವ ರಾಜ್ಯಮಟ್ಟದ ಚಲನಚಿತ್ರ ಗೀತೆಗಳ ಗಾಯನ ಸ್ಪರ್ಧೆ `ಕರ್ನಾಟಕ ಸ್ಟಾರ್ ಸಿಂಗರ್' ಕಾರ್ಯಕ್ರಮ ಈ ಬಾರಿ ಸಹ ಆಯೋಜಿಸಲಾಗಿದೆ. 
    ಸಂಘದ ಅಧ್ಯಕ್ಷ, ಗಾಯಕ ಬಿ.ಎ ಮಂಜುನಾಥ್‌ರವರ ನೇತೃತ್ವದಲ್ಲಿ ಆಗಸ್ಟ್ ತಿಂಗಳಿನಲ್ಲಿ ಕಾರ್ಯಕ್ರಮ ನಡೆಯಲಿದ್ದು, ಈ ಸಂಬಂಧ ರೂಪಿಸಲಾಗಿರುವ `ಕರ್ನಾಟಕ ಸ್ಟಾರ್ ಸಿಂಗರ್ ಸೀಸನ್-೨' ರಾಜ್ಯಮಟ್ಟದ ಚಲನಚಿತ್ರ ಗೀತೆಗಳ ಗಾಯನ ಸ್ಪರ್ಧೆ  ಕಾರ್ಯಕ್ರಮದ ಲಾಂಛನ ಮತ್ತು ಕರಪತ್ರ ಸರ್ಕಾರದ ೫ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್ ಬಿಡುಗಡೆಗೊಳಿಸಿದರು. 
    ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಗೃಹ ಕಛೇರಿಯಲ್ಲಿ ಆಯೋಜಿಸಲಾಗಿದ್ದ ಲಾಂಛನ ಮತ್ತು ಕರಪತ್ರ ಬಿಡುಗಡೆ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಬಿ.ಎ ಮಂಜುನಾಥ್, ಪದಾಧಿಕಾರಿಗಳಾದ ವೈ.ಕೆ ಹನುಮಂತಯ್ಯ, ಚರಣ್ ಕವಾಡ್, ಪ್ರಶಾಂತ್, ಚಿದಾನಂದ್, ರಾಮು, ಬಾಬು, ದೇವರಾಜ್, ಮುರುಗೇಶ್ ಮತ್ತು ಸ್ಟಾರ್ ಮಂಜುನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಹೃದಯಾಘಾತಕ್ಕೆ ೩೪ ವರ್ಷದ ವ್ಯಕ್ತಿ ಬಲಿ

ದಿನೇಶ್ 
    ಭದ್ರಾವತಿ :  ಇತ್ತೀಚೆಗೆ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ತಾಲೂಕಿನ ಮತ್ತಿಘಟ್ಟ ಗ್ರಾಮದ ೩೪ ವರ್ಷ ವಯೋಮಾನದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 
    ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ದಿನೇಶ್ ಮೃತಪಟ್ಟಿದ್ದು, ರಾತ್ರಿ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಇವರನ್ನು ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಷ್ಟರಲ್ಲಾಗಲೇ ಸಾವನ್ನಪ್ಪಿದ್ದಾರೆ. ಇವರಿಗೆ ಮದುವೆಯಾಗಿದ್ದು, ಎರಡು ಚಿಕ್ಕ ಮಕ್ಕಳಿದ್ದಾರೆ. 
    ಇತ್ತೀಚೆಗೆ ಎಲ್ಲಾ ವಯೋಮಾನದವರು ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಎಲ್ಲೆಡೆ ಆತಂಕ ಎದುರಾಗಿದ್ದು, ಹೃದಯಾಘಾತಕ್ಕೆ ನಿಖರ ಕಾರಣಗಳು ತಿಳಿದು ಬರುತ್ತಿಲ್ಲ.

ಸಮಾಜದ ಸುಧಾರಣೆಯಲ್ಲಿ ತೊಡಗಿರುವ ಪತ್ರಕರ್ತರಿಗೆ ಇನ್ನೂ ಹೆಚ್ಚಿನ ಶಕ್ತಿ ತುಂಬಿ: ಬಿ.ಕೆ ಸಂಗಮೇಶ್ವರ

ಭದ್ರಾವತಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಪತ್ರಿಕಾ ಭವನ ಟ್ರಸ್ಟ್ ವತಿಯಿಂದ ಏರ್ಪಡಿಸಲಾಗಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು. 
    ಭದ್ರಾವತಿ: ಸಮಾಜದ ಸುಧಾರಣೆಯಲ್ಲಿ ಸದಾ ಕಾಲ ತೊಡಗಿಸಿಕೊಂಡಿರುವ ಪತ್ರಕರ್ತರ ಶ್ರಮ ಹೆಚ್ಚಿನದ್ದಾಗಿದ್ದು, ಸಮಾಜದ ಪ್ರತಿಯೊಬ್ಬರೂ ಇವರಿಗೆ ಇನ್ನೂ ಹೆಚ್ಚಿನ ಶಕ್ತಿ ತುಂಬಲು ಮುಂದಾಗಬೇಕೆಂದು ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ, ಶಾಸಕ ಬಿ.ಕೆ ಸಂಗಮೇಶ್ವರ್ ಕರೆನೀಡಿದರು.  
    ಅವರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಪತ್ರಿಕಾ ಭವನ ಟ್ರಸ್ಟ್ ವತಿಯಿಂದ ಏರ್ಪಡಿಸಲಾಗಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.  
    ಪತ್ರಿಕೆಗಳು ಆರಂಭವಾದಾಗಿನಿಂದಲೂ ಸಮಾಜಕ್ಕೆ ಉತ್ತಮ ಮೌಲ್ಯಗಳನ್ನು ನೀಡುವ ಜೊತೆಗೆ ಸಮಾಜದ ರಕ್ಷಣೆಯಲ್ಲಿ ತೊಡಗಿಸಿಕೊಂಡಿವೆ. ಈ ನಿಟ್ಟಿನಲ್ಲಿ ಪತ್ರಕರ್ತರ ಶ್ರಮ ಹೆಚ್ಚಿನದ್ದಾಗಿದೆ ಎಂದರು. 


ಭದ್ರಾವತಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಪತ್ರಿಕಾ ಭವನ ಟ್ರಸ್ಟ್ ವತಿಯಿಂದ ಏರ್ಪಡಿಸಲಾಗಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಉಷಾಮಹಿ ಪತ್ರಿಕೆ ಸಂಪಾದಕರಾದ ಶಾಂತಿ ಕಣ್ಣಪ್ಪ ದಂಪತಿ ೫೦ ವರ್ಷಗಳ ದಾಂಪತ್ಯ ಜೀವನ ಯಶಸ್ವಿಯಾಗಿ ಪೂರೈಸಿರುವ ಹಿನ್ನಲೆಯಲ್ಲಿ ಸಂಘದ ವತಿಯಿಂದ ಅವರಿಗೆ ಗೌರವ ಸಮರ್ಪಣೆ ಸಲ್ಲಿಸಲಾಯಿತು. 
    ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷರು, ಹಿರಿಯ ಪತ್ರಕರ್ತರಾದ ಕಣ್ಣಪ್ಪ ಮಾತನಾಡಿ, ಪತ್ರಕರ್ತರು ಆರ್ಥಿಕವಾಗಿ ಸಂಕಷ್ಟದಲ್ಲಿದ್ದು, ಸದಾ ಒತ್ತಡದಲ್ಲಿ ಕೆಲಸ ನಿರ್ವಹಿಸುತ್ತಿರುತ್ತಾರೆ. ಇದೀಗ ಸಂಕಷ್ಟದಲ್ಲಿರುವ ಪತ್ರಕರ್ತರ ಹಿತರಕ್ಷಣೆಗಾಗಿ ತಾಲೂಕು ಪತ್ರಕರ್ತರ ಸಂಘ ನಿಧಿ ಸ್ಥಾಪಿಸಿದೆ. ಈಗಾಗಲೇ ಮೂಲ ಧನ ಸಂಗ್ರಹಿಸಲಾಗಿದ್ದು, ಮುಂದಿನ ದಿನಗಳಲ್ಲಿ ಪತ್ರಕರ್ತರಿಗೆ ಪ್ರಯೋಜನಕಾರಿಯಾಗಲಿದೆ ಎಂದರು. 
ಜನಸಾಮಾನ್ಯರಿಗೆ ಕಡಿಮೆ ಬೆಲೆಯಲ್ಲಿ ಕಾರ್ಯಕ್ರಮ ಮಾಡಲು ಅನುಕೂಲವಾಗುವಂತೆ ಪತ್ರಿಕಾ ಭವನವನ್ನು ಜನಪ್ರತಿನಿಧಿಗಳು ಹಾಗು ಹಲವಾರು ದಾನಿಗಳಿಂದ ನಿರ್ಮಾಣ ಮಾಡಿದ್ದು, ಪತ್ರಿಕಾ ಭವನ ಜನಸ್ನೇಹಿಯಾಗಿ ಜನತೆಗೆ ಆನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕೆಲಸಮಾಡುತ್ತಿದೆ. ಜನಪ್ರತಿನಿಧಿಗಳು ಇನ್ನೂ ಹೆಚ್ಚಿನ ಸಹಕಾರ ನೀಡಬೇಕೆಂದು ಮನವಿ ಮಾಡಿದರು.  
       ಉಷಾಮಹಿ ಪತ್ರಿಕೆ ಸಂಪಾದಕರಾದ ಶಾಂತಿ ಕಣ್ಣಪ್ಪ ದಂಪತಿ ೫೦ ವರ್ಷಗಳ ದಾಂಪತ್ಯ ಜೀವನ ಯಶಸ್ವಿಯಾಗಿ ಪೂರೈಸಿರುವ ಹಿನ್ನಲೆಯಲ್ಲಿ ಸಂಘದ ವತಿಯಿಂದ ಅವರಿಗೆ ಗೌರವ ಸಮರ್ಪಣೆ ಸಲ್ಲಿಸಲಾಯಿತು. ಅಲ್ಲದೆ ಸುಮಾರು ೩೫ ವರ್ಷಗಳಿಂದ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಪತ್ರಕರ್ತ ಸುದರ್ಶನ್‌ರವರನ್ನು ಸನ್ಮಾನಿಸಿ ಗೌರವಿಸಲಾಯಿತು. 
  ವೇದಿಕೆಯಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಟಿ ಅರುಣ್, ಕಾರ್ಯದರ್ಶಿ ದೀಪಕ್ ಸಾಗರ್, ಪತ್ರಿಕಾಭವನ ಟ್ರಸ್ಟ್ ಕಾರ್ಯದರ್ಶಿ ಕೆ.ಎನ್ ಶ್ರೀಹರ್ಷ, ಬ್ಲಾಕ್ ಕಾಂಗ್ರೆಸ್ ಗ್ರಾಮಾಂತರ ಘಟಕದ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ, ಹಿರಿಯ ನಗರಸಭಾ ಸದಸ್ಯ ವಿ. ಕದಿರೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 


ಭದ್ರಾವತಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಪತ್ರಿಕಾ ಭವನ ಟ್ರಸ್ಟ್ ವತಿಯಿಂದ ಏರ್ಪಡಿಸಲಾಗಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ದೆ ಸುಮಾರು ೩೫ ವರ್ಷಗಳಿಂದ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಪತ್ರಕರ್ತ ಹಿರಿಯ ಪತ್ರಕರ್ತ ಸುದರ್ಶನ್‌ರವರನ್ನು ಸನ್ಮಾನಿಸಿ ಗೌರವಿಸಲಾಯಿತು. 
    ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ಆರ್ ಬದರಿನಾರಯಣ ಶ್ರೇಷ್ಠಿ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಸಂಘ-ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಪ್ರಮುಖರು ಪಾಲ್ಗೊಂಡಿದ್ದರು. ಪತ್ರಕರ್ತ ರಂಗನಾಥರಾವ್‌ರವರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.  ಹಿರಿಯ ಪತ್ರಕರ್ತರಾದ ಎಚ್.ಕೆ ಶಿವಶಂಕರ್, ಗಂಗಾನಾಯ್ಕ ಗೊಂದಿ, ಶೈಲೇಶ್ ಕೋಠಿ, ಸಯ್ಯದ್ ಖಾನ್, ಕೆ.ಎಸ್ ಸುಧೀಂದ್ರ, ಕೆ.ಆರ್ ಶಂಕರ್, ಕಿರಣ್ ಕುಮಾರ್, ಪ್ರಶಾಂತ್ ಸೇರಿದಂತೆ ಸಂಘದ ಸದಸ್ಯರು ಉಪಸ್ಥಿತರಿದ್ದರು. 
    ಪ್ರಧಾನ ಕಾರ್ಯದರ್ಶಿ ಬಸವರಾಜ್ ಸ್ವಾಗತಿಸಿ, ಕಾರ್ಯದರ್ಶಿ ಆರ್. ಫಿಲೋಮಿನಾ ನಿರೂಪಿಸಿ, ಕಾರ್ಯಕಾರಿ ಸಮಿತಿ ಸದಸ್ಯರಾದ ಸುಭಾಷ್ ರಾವ್ ಸಿಂಧ್ಯಾ ಪ್ರಸ್ತಾವಿಕ ನುಡಿಗಳನ್ನಾಡಿದರು. ಖಜಾಂಚಿ ಅನಂತಕುಮಾರ್ ವಂದಿಸಿದರು.

ಬುಧವಾರ, ಜುಲೈ 23, 2025

ಮುಂದಿನ ಚುನಾವಣೆಯಲ್ಲಿ ಪಕ್ಷದ ವರ್ಚಸ್ಸು, ಕಾರ್ಯಕರ್ತರು, ಅಭಿಮಾನಿ ಬಳಗದ ಶಕ್ತಿಯಿಂದ ಶಾರದ ಅಪ್ಪಾಜಿ ಗೆಲ್ಲಿಸಿಕೊಳ್ಳುತ್ತೇವೆ

ಜೆಡಿಎಸ್ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ 

ಭದ್ರಾವತಿ ನಗರದ ಬಿ.ಎಚ್ ರಸ್ತೆ, ಶ್ರೀ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಜೆಡಿಎಸ್ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿದರು. 
    ಭದ್ರಾವತಿ: ಕ್ಷೇತ್ರದಲ್ಲಿ ಮುಂದಿನ ೨೦೨೮ರ ಚುನಾವಣೆಯಲ್ಲಿ ಶಾರದ ಅಪ್ಪಾಜಿ ಗೆಲುವು ಖಚಿತ. ಇದು ಸಾಧ್ಯವಾಗದಿದ್ದಲ್ಲಿ ನನ್ನ ಜನ್ಮವಿರುವತನಕ ಈ ಕ್ಷೇತ್ರಕ್ಕೆ ತಲೆ ಹಾಕುವುದಿಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು. 
    ಅವರು ಬುಧವಾರ ನಗರದ ಬಿ.ಎಚ್ ರಸ್ತೆ, ಶ್ರೀ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕ್ಷೇತ್ರದಲ್ಲಿ ಮಾಜಿ ಶಾಸಕರಾದ ದಿವಂಗತ ಎಂ.ಜೆ ಅಪ್ಪಾಜಿಯವರ ಕೊಡುಗೆ ಅಪಾರವಾಗಿದೆ. ಅವರ ಅಭಿಮಾನ ಬಳಗ, ಪಕ್ಷದ ಕಾರ್ಯಕರ್ತರು ಇನ್ನೂ ಜೀವಂತವಾಗಿದ್ದಾರೆ. ಸೋಲಿನಿಂದ ಯಾರು ಸಹ ದೃತಿಗೆಡುವ ಅಗತ್ಯವಿಲ್ಲ. ಈ ಬಾರಿ ಶಾರದ ಅಪ್ಪಾಜಿಯವರು ಅಲ್ಪಮತಗಳ ಅಂತರದಿಂದ ಸೋಲು ಕಂಡಿದ್ದಾರೆ. ನಾನು, ನಮ್ಮ ತಂದೆ ಕೇಂದ್ರ ಸಚಿವರಾದ ಎಚ್.ಡಿ ಕುಮಾರಸ್ವಾಮಿ ಹಾಗು ನಮ್ಮ ತಾತ ಮಾಜಿ ಪ್ರಧಾನಿಗಳಾದ ಎಚ್.ಡಿ ದೇವೇಗೌಡರು ಮುಂದಿನ ಚುನಾವಣೆಯಲ್ಲಿ ಶಾರದ ಅಪ್ಪಾಜಿ ಅವರನ್ನು ಗೆಲ್ಲಿಸುತ್ತೇವೆ. ಒಂದು ವೇಳೆ ಇದು ಸಾಧ್ಯವಾಗದಿದ್ದಲ್ಲಿ ಈ ಕ್ಷೇತ್ರಕ್ಕೆ ನನ್ನ ಜನ್ಮವಿರುವತನಕ ತಲೆ ಹಾಕುವುದಿಲ್ಲ ಎಂದರು. 
    ಕ್ಷೇತ್ರದಲ್ಲಿನ ಕಾಂಗ್ರೆಸ್ ಶಾಸಕರು ಹಾಗು ಅವರ ಕುಟುಂಬ ವರ್ಗದರಿಂದ ನಿರಂತರವಾಗಿ ಪಕ್ಷದ ಮುಖಂಡರು, ಕಾರ್ಯಕರ್ತರ ಮೇಲೆ ದೌರ್ಜನ್ಯ, ದಬ್ಬಾಳಿಕೆ ನಡೆಯುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಧಿಕಾರ ಯಾರಿಗೂ ಶಾಶ್ವತವಲ್ಲ. ಇದನ್ನು ಅವರು ಅರ್ಥಮಾಡಿಕೊಂಡು ಸುಮ್ಮನಿರಬೇಕು. ಇಲ್ಲವಾದಲ್ಲಿ ಮುಂದಿನ ಚುನಾವಣೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಸಿಡಿದೆದ್ದು ಹೋರಾಟ ನಡೆಸಿದ್ದಲ್ಲಿ ಅಧಿಕಾರ ಕಳೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು. 
    ಕ್ಷೇತ್ರದಲ್ಲಿ ಇಸ್ಪೀಟ್, ಮಟ್ಕಾ, ಜೂಜಾಟ, ಗಾಂಜಾ ಸೇರಿದಂತೆ ಕಾನೂನುಬಾಹಿರ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಇದರಿಂದ ಯುವ ಜನರು ದಾರಿ ತಪ್ಪುತ್ತಿದ್ದಾರೆ. ಶಾಸಕರ ಆಡಳಿತದಲ್ಲಿ ಕುಟುಂಬ ವರ್ಗದವರು ಹಸ್ತಕ್ಷೇಪ ಮಾಡುತ್ತಿದ್ದಾರೆ. ಅಧಿಕಾರಿಗಳು, ಮಹಿಳೆಯರ ಮೇಲೆ ದೌರ್ಜನ್ಯ, ದಬ್ಬಾಳಿಕೆ ಹೆಚ್ಚಾಗುತ್ತಿವೆ. ಇವುಗಳಿಗೆ ಕಡಿವಾಣ ಹಾಕಲು ಪಕ್ಷದ ಮುಖಂಡರು, ಕಾರ್ಯಕರ್ತರು ಸದಸ್ಯತ್ವ ಹೆಚ್ಚಿಸುವ ಮೂಲಕ ಪಕ್ಷವನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಸಂಘಟಿಸುವ ಅಗತ್ಯವಿದೆ ಎಂದರು. 
    ಜೆಡಿಎಸ್ ಸದಸ್ಯತ್ವ ಅಭಿಯಾನದ ಕಾರ್ಯಕ್ರಮಕ್ಕೆ ಜನರು ಅಭೂತಪೂರ್ವ ಬೆಂಬಲ ನೀಡುತ್ತಿರುವುದು ಗಮನಿಸಿದರೆ, ಇದು ಮುಂದಿನ ಚುನಾವಣೆಯ ದಿಕ್ಸೂಚಿ ತೊರಿಸುತ್ತದೆ. ಬದಲಾವಣೆಯ ಗಾಳಿ ತೊರುತ್ತದೆ ಎಂದರು.
    ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಸಂಪರ್ಕ ನಿರಂತರವಾಗಿ ಇಟ್ಟುಕೊಳ್ಳುವ ನಿಮ್ಮ ಬಳಿಗೆ ನಾನು ಬಂದಿದ್ದೇನೆ. ಜನರ ಧ್ವನಿಯಾಗಿರುವ, ಪಕ್ಷ ಕಟ್ಟಲು ಶ್ರಮಿಸುವ ನಿಷ್ಟಾವಂತರನ್ನು ಗುರುತಿಸಿ ಕಾರ್ಯಕರ್ತರ ಸಮಕ್ಷಮ ತಾಪಂ, ಜಿಪಂ ಕ್ಷೇತ್ರಗಳಿಗೆ ಆಯ್ಕೆ ಮಾಡಲಾಗುತ್ತದೆ ಎಂದರು.
    ವೇದಿಕೆಯಲ್ಲಿ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ ಶಾರದ ಪೂರ್‍ಯಾನಾಯ್ಕ, ವಿಧಾನಪರಿಷತ್ ಸದಸ್ಯ ಎಸ್.ಎಲ್ ಬೋಜೇಗೌಡ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ, ಯುವ ಘಟಕದ ಜಿಲ್ಲಾಧ್ಯಕ್ಷ ಮಧು ಕುಮಾರ್, ಆರ್. ಕರುಣಾಮೂರ್ತಿ, ಎಂ.ಎ ಅಜಿತ್, ಟಿ. ಚಂದ್ರೇಗೌಡ, ತಿಮ್ಮೇಗೌಡ, ಮಧುಸೂದನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ವಿಐಎಸ್‌ಎಲ್ ಕಾರ್ಖಾನೆ ಮರುನಿರ್ಮಾಣ ಕುಮಾರಣ್ಣ ಶಪಥ : ನಿಖಿಲ್ ಕುಮಾರಸ್ವಾಮಿ

ಭದ್ರಾವತಿ ನಗರದ ಬಿ.ಎಚ್ ರಸ್ತೆ, ಶ್ರೀ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಜೆಡಿಎಸ್ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಉದ್ಘಾಟಿಸಿದರು. 
    ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ (ವಿಐಎಸ್‌ಎಲ್)ಯನ್ನು ಮರುನಿರ್ಮಾಣ ಮಾಡಲು ಕುಮಾರಣ್ಣ ಶಪಥ ಮಾಡಿದ್ದಾರೆ. ಇದರಲ್ಲಿ ಯಾವುದೇ ಸಂಶಯ ಬೇಡ. ಅತೀ ಶೀಘ್ರದಲ್ಲಿ  ಕಾರ್ಖಾನೆ ಮರುಸ್ಥಾಪನೆ ಆಗುತ್ತದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು. 
    ಅವರು ಬುಧವಾರ ನಗರದ ಬಿ.ಎಚ್ ರಸ್ತೆ, ಶ್ರೀ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಕುಮಾರಣ್ಣ ಕೇಂದ್ರದ ಸಚಿವರಾಗುತ್ತಿದ್ದಂತೆ ವಿಶೇಷ ಕಾಳಜಿ ವಹಿಸಿದ್ದಾರೆ. ನೂರಕ್ಕೆ ನೂರರಷ್ಟು ಇದಕ್ಕೆ ಮರು ಜೀವ ಕೊಡುತ್ತಾರೆ. ಜಿಲ್ಲೆಯ ಜನತೆಗೆ ಶಾಶ್ವತವಾಗಿ ಬದುಕು ಕಟ್ಟಿಕೊಳ್ಳುವುದಕ್ಕೆ ಈ ನಿರ್ಧಾರ ಮಾಡಿದ್ದಾರೆ ಎಂದರು.
    ಆಂಧ್ರ ಪ್ರದೇಶದ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ (ಆರ್‌ಎನ್‌ಐಎಲ್)/ ವೈಜಾಗ್ ಸ್ಟೀಲ್ ಕಂಪನಿ ಸಂಪೂರ್ಣವಾಗಿ ಮುಚ್ಚಲಾಗಿತ್ತು. ಕುಮಾರಣ್ಣ ಅವರ ದೃಢ ನಿರ್ಧಾರದಿಂದ ೧೧,೪೪೦ ಕೋ. ರು. ವೆಚ್ಚದಲ್ಲಿ ಮರುಜೀವ ನೀಡಿರುವುದು ನಮ್ಮ ಕಣ್ಮುಂದೆ ಇದೆ ಎಂದರು.
    ಇದೆ ರೀತಿ ವಿಐಎಸ್‌ಎಲ್ ಕಾರ್ಖಾನೆ ಸಹ ಮರುಜೀವ ಪಡೆಯಲಿದ್ದು, ಈಗಾಗಲೇ ಕಾರ್ಖಾನೆ ಮರುನಿರ್ಮಾಣ ಮಾಡುವ ಸಂಬಂಧ ವಿಸ್ತೃತ ಯೋಜನಾ ವರದಿ ಸಿದ್ಧವಾಗುತ್ತಿದೆ. ಇಡೀ ಕಾರ್ಖಾನೆಯನ್ನು ಹೊಸದಾಗಿ ಅತ್ಯಾಧುನಿಕವಾಗಿ ಮರುನಿರ್ಮಾಣ ಮಾಡಬೇಕೆಂದು ಕುಮಾರಣ್ಣ ಅವರು ಶಪಥ ಮಾಡಿದ್ದಾರೆ. ನಿಮ್ಮೆಲ್ಲರ ಸಹಕಾರದಿಂದ ಅತಿ ಶೀಘ್ರದಲ್ಲೇ ಪುನಶ್ಚೇತನ ಯೋಜನೆಯನ್ನು ಕಾರ್ಯರೂಪಕ್ಕೆ ತರಲಾಗುವುದು ಎಂದು ಒತ್ತಿ ಹೇಳಿದರು.